Connect with us

ದಿನದ ಸುದ್ದಿ

ಹುಟ್ಟು ಹಬ್ಬ | “ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ದೌರ್ಜನ್ಯದ ವಿರುದ್ಧ ಸಿಡಿದೆದ್ದರೆ ನೀನು ನನ್ನ ಸಂಗಾತಿ”..! : ಚೆ ಗುವೆರಾ

Published

on

  • ಶಿವಸ್ವಾಮಿ, ಯುವಚಿಂತಕರು

ನಾನು ಎಂದಿಗೂ ಸೋತು ಮನೆಗೆ ಹಿಂತಿರುಗುವುದಿಲ್ಲ, ಸೋಲಿಗಿಂತ ಸಾವನ್ನೆ ಹೆಚ್ಚು ಇಷ್ಟಪಡುತ್ತೇನೆ”. ಎಂದು ನಿರಂತರವಾಗಿ ಹೋರಾಡುತ್ತಲೇ ತನ್ನ ವಿರೋಧಿಗಳಿಗೆ ಸಿಂಹಸ್ವಪ್ನವಾಗಿ ಎಂದಿಗೂ ಸೋಲನ್ನು ಒಪ್ಪಿಕೊಳ್ಳದೆ ತನ್ನನ್ನು ತಾನೇ ಸಾವಿಗೆ ಅರ್ಪಿಸಿಕೊಂಡ ಮಹಾನ್ ಕ್ರಾಂತಿಕಾರಿ, ಮಾನವತಾವಾದಿ, ಗೆರಿಲ್ಲಾ ಯುದ್ಧ ತಂತ್ರದ ನಿಪುಣ, ವೈದ್ಯ, ಬರಹಗಾರ, ಬುದ್ಧಿಜೀವಿ ಹಾಗೂ ಕ್ಯೂಬಾ ಕ್ರಾಂತಿಯ ಪ್ರಮುಖ ನೇತಾರ ಅರ್ನೆಸ್ಟೋ ಚೆಗುವಾರ.

ಚೆಗುವಾರ ಹುಟ್ಟಿದ್ದು ಜೂನ್ 14, 1928ರಂದು ಲಿಂಚ್ ಮತ್ತು ಸೀಲಿಯಾ ಡ ಲಾ ಸೆರ್ನ್ ಎಂಬ ಸ್ಪ್ಯಾನಿಷ್ ಮತ್ತು ಐರಿಷ್ ದಂಪತಿಗಳ ಮಗನಾಗಿ ಅರ್ಜೆಂಟೀನಾದ ರೊಸಾರಿಯೋ ಪಟ್ಟಣದಲ್ಲಿ ಜನಿಸಿದನು.ಚೆಗುವರ ಚಿಕ್ಕಂದಿನಿಂದಲೇ ಶೋಷಿತ ಬಡವರ, ಶ್ರಮಿಕರ ಬಗ್ಗೆ ಅಪಾರವಾದ ಕಾಳಜಿ ಮತ್ತು ಪ್ರೀತಿಯನ್ನು ಬೆಳೆಸಿಕೊಂಡು ಎಡಪಂಥೀಯವಾದದ ಬಗ್ಗೆ ಒಲವು ಹೊಂದಿದ್ದ ಕುಟುಂಬದಲ್ಲಿ ಹುಟ್ಟಿಬೆಳೆದ ಅವನಿಗೆ ಚಿಕ್ಕಂದಿನಿಂದಲೇ ರಾಜಕೀಯ ದೃಷ್ಟಿಕೋನಗಳ ಬಗೆಗೆ ಪರಿಚಯವಾಗಿ ಗಣತಂತ್ರವಾದಿಗಳ ಪ್ರಬಲ ಸಮರ್ಥಕರಾಗಿದ್ದ ತಂದೆಯ ಪ್ರಭಾವ ಚೆಗುವಾರನ ಮೇಲೆ ಸಹಜವಾಗಿಯೇ ಬೀರಿತು.

19 ನೇಯ ವಯಸ್ಸಿನಲ್ಲಿಯೇ ವೈದ್ಯಕೀಯ ವೃತ್ತಿ ಕಲಿಕೆಗಾಗಿ ವಿಶ್ವವಿದ್ಯಾನಿಲಯಕ್ಕೆ ಪ್ರವೇಶಾತಿ ಪಡೆದು ಮತ್ತೆ ಒಂದು ವರ್ಷ ರಜೆ ಪಡೆದು ತನ್ನ ಮಿತ್ರ ಅಲ್ಬಟ್ರೋ ಗ್ರೆನಾಡೇ ಜೊತೆ ಸೇರಿ ಮೋಟಾರ್ ಸೈಕಲ್ ಮೂಲಕ ದಕ್ಷಿಣ ಅಮೇರಿಕಾ ಪ್ರವಾಸ ಮಾಡುತ್ತಾನೆ ತಾನೊಬ್ಬ ಕ್ರಾಂತಿಕಾರಿಯಾಗಲು ಈ ಪ್ರವಾಸದ ಅನುಭವಗಳೇ ಕಾರಣವೆಂದು ಅವನೇ ಬರೆದುಕೊಂಡಿದ್ದಾನೆ.

ದಕ್ಷಿಣ ಅಮೆರಿಕಾದ ಆಂಡೀಸ್ ಪರ್ವತದ ಮಾಚು ಪಿಚುವಿಗೆ ಹೋಗುವ ದಾರಿಯಲ್ಲಿ ಶ್ರೀಮಂತ ಭೂ ಮಾಲೀಕರಿಂದ ತುಂಡು ತುಂಡು ಭೂಮಿಗಳನ್ನು ಪಡೆದು ಕೃಷಿ ಮಾಡುತಿದ್ದ ರೈತಾಪಿ ಜನರ ಕಡುಬಡತನದ ಹೀನಾಯ ಬದುಕಿನ ಸ್ಥಿತಿಯನ್ನು ಹತ್ತಿರದಿಂದ ಕಂಡು ನಾನು ಈ ಜನರಿಗೆ ಏನಾದರೂ ಸಹಾಯ ಮಾಡಬೇಕೆಂದರೆ ನನ್ನ ವೈದ್ಯಕೀಯ ಅಭ್ಯಾಸವನ್ನು ಬಿಟ್ಟು ಸಶಸ್ತ್ರ ಹೋರಾಟದ ಮೂಲಕ ರಾಜಕೀಯ ರಂಗವನ್ನು ಪ್ರವೇಶಿಸಬೇಕೆಂದು ಮನವರಿಕೆಯಾಯಿತು ಎಂದು ತನ್ನ ಮೋಟಾರ್ ಸೈಕಲ್ ಡೈರಿಯಲ್ಲಿ ಬರೆದುಕೊಳ್ಳುತ್ತಾನೆ.

ಮೋಟಾರ್ ಸೈಕಲ್ ಪ್ರವಾಸ ಚೆಗುವಾರನ ಕ್ರಾಂತಿಕಾರಿ ಬದುಕಿನ ಒಂದು ದೊಡ್ಡ ತಿರುವು ಪ್ರವಾಸದ ಜೊತೆಗಾರ ಅಲ್ಬಟ್ರೋ ಗ್ರಾನಡಾಸ್ ಚೆಗುವಾರನ ಕುರಿತು ಹೇಳುತ್ತಾ…ಟೆಟೆ (ಚೇ ನನ್ನನ್ನು ಪ್ರೀತಿಯಿಂದ ಕರೆಯುತಿದ್ದ ಹೆಸರು )ನನ್ನು ನಾನು ಮೊದಲು ಭೇಟಿಯಾಗಿದ್ದು 1941 ರಲ್ಲಿ ನನ್ನ ಸಹೋದರ ಥಾಮಸ್ ಮೂಲಕ ನನಗಾಗ 13 ವರ್ಷ ನಮ್ಮಿಬ್ಬರನ್ನು ಒಟ್ಟಿಗೆ ಕೂಡಿಸಿದ ವಿಷಯವೆಂದರೆ ‘ಓದುವ ಅಭಿರುಚಿ ಮತ್ತು ನಿಸರ್ಗ ಪ್ರೇಮ’ ಚೇ…ಮನೆಗೆ ಪ್ರತಿದಿನ ಭೇಟಿ ನೀಡಿದಾಗಲೂ ನನ್ನನ್ನು ಆಕರ್ಷಿಸಿದ್ದ ಅಲ್ಲಿನ ಅಪಾರವಾದ ಗ್ರಂಥಭಂಡಾರವನ್ನು ನನ್ನದೆಂಬಂತೆ ಬಳಸುಕೊಳ್ಳುತಿದ್ದೆ.

ನಾವು ಎಷ್ಟೋ ರಾತ್ರಿಗಳನ್ನ ಚೆರ್ಚೆಗಳಲ್ಲಿ ಕಳೆದಿದ್ದೇವೆ, ಒಮ್ಮೆ ವಿದ್ಯಾರ್ಥಿ ಚಳುವಳಿಯಲ್ಲಿ ನನ್ನ ಬಂಧನವಾಯಿತು ಆಗ ನನ್ನ ಸಹೋದರ ಥಾಮಸ್ ಜೊತೆ ಚೆಗುವಾರ ನನ್ನ ನೋಡಲು ಪೊಲೀಸ್ ಠಾಣೆಗೆ ಬಂದಿದ್ದ ನಾನು ಅವನ ಜೊತೆ ಮಾತನಾಡುತ್ತಾ ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಕರೆತರುವಂತೆ ನಾನು ಅವನಿಗೆ ಹೇಳಿದೆ, ಅದಕ್ಕೆ ಅವನು ಹೇಳಿದ ಮಾತು ಬೀದಿಗಿಳಿಯಿರಿ ಎಂದು ಹೇಳುತಿದ್ದೀರಲ್ಲ!ಪೊಲೀಸರೆಲ್ಲ ನಮ್ಮ ಮೇಲೆ ದೊಣ್ಣೆಗಳಿಂದ ಸರಿಯಾಗಿ ಬಾರಿಸಲಿ ಅಂತಲೋ! ಅದೆಲ್ಲ ಆಗುವುದಿಲ್ಲ,ನನಗೆ ಪಿಸ್ತೂಲು ಕೊಟ್ಟರೆ ಮಾತ್ರ ನಾನು ಬೀದಿಗಿಳಿಯುತ್ತೇನೆ ಎಂದಿದ್ದ ಅದೆಷ್ಟೋ ! ನೆನಪುಗಳು ನನ್ನೊಂದಿಗಿವೆ.

ಚೆಗುವಾರ 1953 ರಲ್ಲಿ ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಮತ್ತೆ ಪ್ರವಾಸ ಹೊರಟು ಗ್ವಾಟಮಾಲಕ್ಕೆ ಬರುತ್ತಾನೆ ಅಲ್ಲಿ ಯುದ್ಧದಲ್ಲಿ ಮುಳುಗಿದ ದೇಶವೊಂದರ ಅನುಭವ ದೊರೆಯುತ್ತದೆ, ನಂತರ 1954 ರಲ್ಲಿ ಅರ್ಬೆನ್ಜ್ ರ ಸಮಾಜವಾದಿ ಸರ್ಕಾರದ ವಿರುದ್ಧ CIA ಪ್ರೇರಿತ ಕ್ಷಿಪ್ರ ಕ್ರಾಂತಿಯನ್ನು ಕಣ್ಣಾರೆ ಕಂಡು ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗಳನ್ನು ರೂಪಿಸಲು ಲ್ಯಾಟಿನ್ ಅಮೆರಿಕಾದಂತಹ ಯಾವುದೇ ಸರ್ಕಾರವನ್ನು ಅಮೆರಿಕಾದಂತ ಸಾಮ್ರಾಜ್ಯ ಷಾಹಿ ದೇಶ ವಿರೋಧಿಸುತ್ತದೆ ಮತ್ತು ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಯಥಾಸ್ಥಿಯಾಗಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಚೆಗುವಾರ ಸೂಕ್ಷ್ಮವಾಗಿ ಗ್ರಹಿಸಿದರು.

ಇಂತಹ ಸ್ಥಿತಿಯನ್ನು ಸರಿಪಡಿಸಲು ‘ಸಶಸ್ತ್ರ ಹೋರಾಟದ ಬುಲೆಟ್ ಕ್ರಾಂತಿಯೊಂದೇ ಮದ್ದು‘ಚೆಗುವಾರ ಯೋಚಿಸುತ್ತಾನೆ ನಂತರ ಗ್ವಾಟೆಮಾಲಾದಿಂದ ಹೊರಬಂದು ಚೆಗುವಾರ ಫಿಡೆಲ್ ಕ್ಯಾಸ್ಟ್ರೋರೊಂದಿಗೆ ಜೊತೆಯಾಗಿ ಕ್ಯೂಬಾದ ಸರ್ವಾಧಿಕಾರಿ ಜನರಲ್ ಪುಲ್ಗೆನ್ಸಿಯೋ ಬಟಿಸ್ಟಾ ರ ವಿರುದ್ಧ ಸೇನಾ ದಂಡಾಯಾತ್ರೆ ಕೈಗೊಳ್ಳುವ ಯೋಜನೆ ರೂಪಿಸಿ, 1956 ರಲ್ಲಿ ಚೆಗುವಾರ ಮತ್ತು ಕ್ಯಾಸ್ಟ್ರೊ ಒಂದಾಗಿ ಹಲವು ಹೋರಾಟಗಾರರೊಂದಿಗೆ ಜನರಲ್ ಬಟಿಸ್ಟಾ ನ ಸರ್ಕಾರವನ್ನು ಕಿತ್ತೊಗೆಯಲು ಕ್ಯೂಬಾಕ್ಕೆ ಬಂದು ಸಿಯೆರಾ ಮತ್ತು ಮೈ ಸ್ಟ್ರಾ ಪರ್ವತಗಳಲ್ಲಿ ಅಡಗಿಕೊಳ್ಳುತ್ತಾರೆ.

ಇದರ ಅರಿವಾಗಿ ಎಚ್ಚೆತ್ತ ಬಟಿಸ್ಟಾ ಸರ್ಕಾರ ಹೆಚೆಚ್ಚು ಸೈನಿಕ ಪಡೆಗಳನ್ನು ಸಜ್ಜುಗೊಳಿಸಿ ಚೆಗುವಾರ ಮತ್ತು ಕ್ಯಾಸ್ಟ್ರೋ ನೇತೃತ್ವದ ಕ್ರಾಂತಿಕಾರಿಗಳನ್ನು ಸದೆಬಡಿಯಲು 10 ಸಾವಿರ ಸೈನಿಕ ಪಡೆಗಳನ್ನು ನಿಯೋಜಿಸುತ್ತಾನೆ ಕ್ರಾಂತಿಕಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲೇಂದೆ ಸರ್ಕಾರಿ ಸೈನಿಕರು ಸಾಮಾನ್ಯ ಜನರನ್ನು ವಿಚಾರಣೆಗೆಂದೇ ಎಳೆದೊಯ್ಯುತ್ತಿದ್ದರು. ಜೊತೆಗೆ ಅಮಾಯಕರಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಮಕ್ಕಳನ್ನೂ ಒಳಗೊಂಡಂತೆ ಶಂಕಿತರನ್ನು ಸಾರ್ವಜನಿಕವಾಗಿ ಕೊಲೆಗೈದು ಅವರ ಶವಗಳನ್ನು ಬೀದಿಗಳಲ್ಲಿ ಸಾರ್ವಜನಿಕವಾಗಿ ನೇತು ಹಾಕುತ್ತಿದ್ದರು.

ಅಂದರೆ ಸಾಮಾನ್ಯ ಜನರು ಕ್ರಾಂತಿಕಾರಿಗಳ ಜೊತೆ ಸೇರದಂತೆ ಎಚ್ಚರಿಕೆ ನೀಡುವುದು ಮತ್ತು ಭಯ ಹುಟ್ಟಿಸುವುದು ಇದರ ಉದ್ದೇಶವಾಗಿತ್ತು. ಸರ್ವಾಧಿಕಾರಿ ಬಟಿಸ್ಟಾನ ಈ ವರ್ತನೆಗಳಿಂದ ಗೆರಿಲ್ಲಾ ಹೋರಾಟಗಾರರಿಗೆ ಬೆಂಬಲ ಇನ್ನಷ್ಟು ಹೆಚ್ಚಾಗುತ್ತಲೇ ಹೋಯಿತು. ಉದಾಹರಣೆ ವಕೀಲರು, ವಾಸ್ತುಶಿಲ್ಪಿಗಳು, ವೈದ್ಯರು, ಆಕೌಟೆಂಟ್‍ಗಳು ಸಾಮಾಜಿಕಕರ್ತರು ಮುಂತಾದ ಸುಮಾರು 45 ಸಂಘಟನೆಗಳು ಜುಲೈ 26ರ ಚಳುವಳಿಗೆ ಬೆಂಬಲ ಘೋಷಿಸಿದವು. ಅಮೇರಿಕಾ ಸರ್ವಾಧಿಕಾರಿ ಬಟಿಸ್ಟಾಗೆ, ವಿಮಾನ, ಹಡಗು, ಟ್ಯಾಂಕ್ ಮತ್ತಿತರ ಶಸ್ತ್ರಾಸ್ತ್ರಗಳನ್ನು ಒದಗಿಸಿತು.

‘ನಾಪಾಂಬಾಂಬಿ’ನಂತಹ ವಿನಾಶಕಾರಿ ಅಸ್ತ್ರಗಳು ಇದ್ದಾಗಲೂ ಬಟಿಸ್ಟಾನಿಂದ ಗೆರಿಲ್ಲಾ ಹೋರಾಟಗಾರರನ್ನು ಸೋಲಿಸಲು ಸಾಧ್ಯವಾಗಲಿಲ್ಲ. 1958 ಮಾರ್ಚ್ ಚುನಾವಣೆಗಳನ್ನು ಸರ್ವಾಧಿಕಾರಿ ಬಟಿಸ್ಟಾ ವಿರುದ್ಧ ಕ್ಯೂಬಾ ಜನತೆ ಬಹಿಷ್ಕರಿಸಿತು. ರಾಜಧಾನಿ ಹವಾನದಲ್ಲಿ 75% ಚುನಾವಣಾ ಬಹಿಷ್ಕಾರ ಇದ್ದರೆ ಸ್ಯಾಂಟಿಯಾಗೋ ನಗರದಲ್ಲಿ ಶೇ 98% ರಷ್ಟು ಬಹಿಷ್ಕಾರಗಳು ನಡೆದವು. ಇದೇ ಸಂದರ್ಭದಲ್ಲಿ ಕ್ರಾಂತಿಕಾರಿಗಳು ಬಟಿಷ್ಟಾನನನ್ನು ನೇರವಾಗಿ ಸೋಲಿಸಲು ಮುಖ್ಯ ನಗರಗಳಿಗೆ ಬಂದರು.

ಆದರೆ ಸರ್ವಾಧಿಕಾರಿ ಬಟಿಷ್ಟಾ ಅಮೆರಿಕಾದೊಂದಿಗೆ ಸಮಾಲೋಚಿಸಿ ದೇಶಬಿಟ್ಟು ಪಲಾಯನ ಮಾಡಿದ. 1958 ಡಿಸೆಂಬರ್ 31ರಂದು ಬಟಿಸ್ಟಾ ದುರಾಡಳಿತವನ್ನು ಪತನ ಮಾಡಲಾಯಿತು. 1959ರ ಜನವರಿಯಲ್ಲಿ ರಾಜಧಾನಿ ಹವಾನ ನಗರವನ್ನು ಪ್ರವೇಶಿಸಿ ಅಧಿಕಾರವನ್ನು ವಶಕ್ಕೆ ತೆಗೆದುಕೊಂಡ ಮೊಟ್ಟ ಮೊದಲ ಬಂಡಾಯಗಾರ ಪಿಡಲ್ ಕ್ಯಾಸ್ಟ್ರೋ ಜೊತೆ ಚೆಗುವಾರ ಕೂಡ ಇದ್ದರು. ಚೆಗುವಾರ ಮತ್ತು ಕ್ಯಾಸ್ಟ್ರೋ ಕ್ಯೂಬಾದ ಹೊಸ ನಾಯಕರಾದರು.

ಸರ್ಕಾರದ ನೇತೃತ್ವವನ್ನು ಕ್ಯಾಸ್ಟ್ರೋ ವಹಿಸಿಕೊಂಡರು. ಮುಂದೆ ಪಿಡಲ್ ಕ್ಯಾಸ್ಟ್ರೊ ಸರ್ಕಾರದಲ್ಲಿ ಚೆಗುವಾರ ಕೃಷಿ ಮಂತ್ರಿಯಾಗಿ ಕ್ರಾಂತಿಕಾರಿ ಸುಧಾರಣೆಗಳನ್ನು ತಂದರು. ಭೂಸುಧಾರಣೆಯೊಂದಿಗೆ ಚೆಗುವಾರ ಕೇಂದ್ರೀಕರಿಸಿದ ಮತ್ತೊಂದು ಪ್ರಧಾನ ಕ್ಷೇತ್ರವೆಂದರೆ ‘ಶಿಕ್ಷಣಕ್ಷೇತ್ರ’ ಅವರು ರಾಷ್ಟ್ರೀಯ ಸಾಕ್ಷರತೆಗಾಗಿ ಹೆಚ್ಚು ಹೊತ್ತುಕೊಟ್ಟರು. ಅವರ ಒತ್ತಾಸೆಯಂತೆ ಕ್ಯೂಬಾ ಸಕಾರವೂ 1961ನೇ ವರ್ಷವನ್ನು ಶಿಕ್ಷಣ ವರ್ಷವೆಂದು ಘೋಷಿಸಿತು.

ಇದರ ಸಲುವಾಗಿ ಹಳ್ಳಿಗಾಡುಗಳಲ್ಲಿ ಬಹುತೇಕ ಅಕ್ಷರಸ್ಥರಿಗೆ ಓದುಬರಹ ಕಲಿಸಲು ಸಾಕ್ಷರತ ಆಂದೋಲವನ್ನು ಕೈಗೊಳ್ಳಲಾಯಿತು. ಈ ಆಂದೋಲನ ಮುಗಿಯುವ ವೇಳೆಗೆ 7 ಲಕ್ಷಕ್ಕೂ ಹೆಚ್ಚು ಮಂದಿಗೆ ಓದು ಬರಹ ಕಲಿಸಲಾಯಿತು. ಇಂತಹ ಕ್ರಾಂತಿಕಾರ ಕೆಲಸದಿಂದ ದೇಶದ ಸಾಕ್ಷರತೆ ಶೇ 96 ಕ್ಕೆ ಏರಿಕೆಯಾಯಿತು. ಆನಂತರ ಅವರು 1965ರಲ್ಲಿ ಕ್ಯೂಬಾವನ್ನು ಬಿಟ್ಟು ಹೊರಟು ತೃತೀಯ ಜಗತ್ತಿನ ಕ್ರಾಂತಿಗಳಿಗೆ ಬೆಂಬಲವಾಗಿ ಅವರು ತನ್ನ ಸುತ್ತಾಟವನ್ನು ಮುಂದುವರಿಸಿದರು. ಅದರ ಭಾಗವಾಗಿಯೇ ಅವರು ಬೊಲಿವಿಯದಲ್ಲಿ ಗೆರಿಲ್ಲಾ ಯೋಧರನ್ನು ಸಂಘಟಿಸಲು ಯತ್ನಿಸಿದರು.

ಆದರೆ ಬೊವಿಲಿಯಾದಲ್ಲಿ ಚೆಗುವಾರಗೆ ಸಾಮಾನ್ಯ ಜನರ ನೆರವು ಸಿಗಲಿಲ್ಲಾ ಕ್ರಾಂತಿಕಾರಿಗಳ ಜೊತೆ ಸೇರಲು ಸಾಮಾನ್ಯಜನ ಎದುರುತ್ತಿದ್ದರು. ಆದರೂ ಎದೆಗುಂದದೆ ಚೆಗುವಾರ ತನ್ನ ಹೋರಾಟವನ್ನು ಮುಂದುವರಿಸಿದರು. ಆದರೆ ಅಮೆರಿಕಾದ CIA ನೆರವಿನಿಂದ ಬೊಲಿವಿಯಾ ಪಡೆಗಳು ಗೆರಿಲ್ಲಾ ಹೋರಾಟಗಾರರನ್ನು ಪತ್ತೆಹಚ್ಚಿ ಹಲವು ಗೆರಿಲ್ಲಾ ಯೋಧರನ್ನು ಕೊಂದು ಚೆಗುವಾರನನ್ನು 1967 ಅಕ್ಟೋಬರ್ 8ರಂದು ಸೆರೆಹಿಡಿದರು.

ನಂತರ ಹಿಗುಎರಾ ಎಂಬ ಗ್ರಾಮದ ಶಾಲೆಯಲ್ಲಿ ಕೂಡಿಹಾಕಿ ಮಾರನೆ ದಿನ ಅಕ್ಟೋಬರ್ 9 ರಂದು ಮಧ್ಯಾಹ್ನ 1.30ರ ಸುಮಾರಿಗೆ ಅಮೆರಿಕಾದ CIA ಅಧಿಕಾರಿಗಳ ಸಮ್ಮುಖದಲ್ಲಿ ಸಿಐಎ ರೇಂಜರ್ಗಳು ತೀರ ಸಮೀಪದಿಂದ ಗುಂಡಿಟ್ಟು ಚೆಗುವಾರನನ್ನು ಹತ್ಯೆಗೈಯುತ್ತಾರೆ. ನಂತರ ಅವನ ಮುಖವನ್ನು ಪಡಿಯಚ್ಚು ತೆಗೆದು ಅವನ ದೇಹವನ್ನು ಹತ್ತಿರದಿಂದ ಫೊಟೋ ತೆಗೆಯಲಾಯಿತು. ಮತ್ತು ಅವನ ಕೈಗಳನ್ನು ಮುಂಗೈಬಳಿ ಕತ್ತರಿಸಿ ಅವನ್ನು ಆಲ್ಕೊಹಾಲಿನಲ್ಲಿ ರಕ್ಷಿಸಿಟ್ಟರು. ಕಾರಣ ನಾವು ಕೊಂದ ವ್ಯಕ್ತಿ ಚೆಗೆವಾರ ಎಂಬುದರ ಋಜುವಾತುವಿಗಾಗಿ ಅವರ ಹಾಗೆ ಮಾಡಿದರು.

ಚೆ ಗುವೆರಾ ಸತ್ತ ಸುದ್ದಿ ತಿಳಿದು ಜಗತ್ತಿನಾದ್ಯಂತ ಅವನ ಸಂಗಾತಿಗಳು ಶೋಕತಪ್ತರಾದರು. ಈಗ ಚೆ ಕೈಗಳನ್ನು ಕ್ಯೂಬಾ ರಕ್ಷಿಸಿಟ್ಟಿದೆ. ಮತ್ತು ಇವು ವಿಮೋಚನೆಗಾಗಿ ಹೋರಾಟದಲ್ಲಿ ಅಸ್ತ್ರಗಳನ್ನು ಹಿಡಿದ ಕೈಗಳೂ, ತಮ್ಮ ಗಮನಾರ್ಹ ಚಿಂತನೆಗಳನ್ನು ಬರೆದು ಹಂಚಿದ ಕೈಗಳು, ಕಬ್ಬಿನ ಪ್ಲಾಂಟೇಷನ್‍ಗಳಲ್ಲಿ, ಬಂದರುಕಟ್ಟೆಗಳ ಮುಂತಾದ ನಿರ್ಮಾಣದ ಸ್ಥಳಗಳಲ್ಲಿ ಕೆಲಸ ಮಾಡಲು ಬಳಸಿದ ಕೈಗಳು ಎಂದು ಕ್ಯಾಸ್ಟ್ರೊ ಉದ್ಘರಿಸುತ್ತಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಅಮೇರಿಕಾದಂತ ದುಷ್ಟಶಕ್ತಿಗಳು ಚೆ ನ ದೇಹವನ್ನು ಮಾತ್ರ ಹತ್ಯೆ ಮಾಡಿರಬಹುದು.

ಆದರೆ ಚೆಗುವಾರ ಹಂಚಿದ ಕ್ರಾಂತಿಕಾರಿ ಆಲೋಚನೆಗಳನ್ನು ನಿಯಂತ್ರಿಸಲು ಅಥವಾ ಹತ್ಯೆ ಮಾಡಲು ಸಾಧ್ಯವಿಲ್ಲಾ ! ಚೆಗೆವಾರ ಶೋಷಿತ ಜನತೆಗೆ ತಮ್ಮ ಬದುಕನ್ನು ಅರ್ಪಿಸಿಕೊಂಡವರು. ಆಗಾಗಿ ಅವಕಾಶವಂಚಿತ ಸಮುದಾಯಗಳಿಗೆ ಚೆಗುವಾರ ಎಂದೆಂದಿಗೂ ಸ್ಫೂರ್ತಿಯಾಗಿರುತ್ತಾರೆ ಅನ್ನುವುದರಲ್ಲಿ ಯಾವ ಅನುಮಾವೂ ಇಲ್ಲ.

ಐರಿಶ್ ಬಂಡಾಯಗಾರರ ರಕ್ತ ನನ್ನ ಮಗನ ಧಮನಿಗಳಲ್ಲಿ ಹರಿಯುತ್ತಿತ್ತು ಎಂಬುದನ್ನು ನಾವು ಮೊಟ್ಟ ಮೊದಲು ಗಮನಿಸೇಕಾದ ವಿಚಾರ’ ಎಂದು ಚೆಗುವಾರನ ಮರಣದ ನಂತರ ಅವರ ತಂದೆ ಪ್ರತಿಕ್ರಿಯಿಸಿದ ಹಾಗೆ, ಚೆ… ಇಲ್ಲವಾಗಿ ಹಲವು ವರ್ಷಗಳು ಕಳೆದಿದ್ದರೂ ಅವನು ತನ್ನ ವಿಚಾರ, ಆಲೋಚನೆಗಳ, ಮಾನವೀಯವಾದ ವ್ಯಕ್ತಿತ್ವಗಳ ಮೂಲಕ ದಬ್ಬಾಳಿಕೆ, ಶೋಷಣೆ ಅನ್ಯಾಯಗಳ ವಿರುದ್ಧಾ ಇಂದಿಗೂ ಸಿಡಿದೇಳುವ ಕ್ರಾಂತಿಯ ಕಿಡಿಯಾಗಿ ತನ್ನ ನಂತರದ ತಲೆಮಾರಿಗೆ ಸ್ಫೂರ್ತಿಯ ಚಿಲುಮೆಯಾಗಿ ಸದಾ ಜೊತೆಯಾಗುತ್ತಲೇ ಇರುತ್ತಾನೆ.

ನಮ್ಮ ನಡುವೆ ಇರುವ ವಿದ್ಯಾವಂತ ಬುದ್ಧಿವಂತ ರೆನಿಸಿಕೊಂಡವರು, ನಾವು ಶ್ರೇಷ್ಠ ಉಳಿದವರು ಕನಿಷ್ಠವೆಂದು ಜಾತಿ ಧರ್ಮ ದೇವರುಗಳ ಹೆಸರಿನಲ್ಲಿ ಭಯ ಹುಟ್ಟಿಸಿ ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯವೆಸಗುತಿದ್ದರು ಇಲ್ಲಿನ ಸರ್ಕಾರಗಳು ಮತ್ತು ಜನಸಾಮಾನ್ಯರು ಅದರ ವಿರುದ್ಧ ಸಿಡಿದೇಳುವುದಿರಲಿ, ಕೊನೆ ಪಕ್ಷ ವಿರೋಧ ವ್ಯಕ್ತ ಪಡಿಸದೆ ಜಾಣ ಕುರುಡರಂತೆ ಮೌನವಹಿಸುತ್ತಿರುವುದು ದುರಂತವೇ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending