ರಾಜಕೀಯ
99% ಭಾರತೀಯರು V/S 1% ಕೋಮುವಾದಿಗಳು
- 8.1.2020ರಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಬೆಂಗಳೂರಿನಲ್ಲಿ ಕೇಂದ್ರದ ಜನವಿರೋಧಿ ಪೌರತ್ವ ಕಾಯ್ದೆ[CAA, NRC, NPR] ಕುರಿತು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರಸಂಕಿರಣದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ ಇಲ್ಲಿದೆ.
–ದೇವನೂರ ಮಹಾದೇವ
ಭಾರತ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲ, ಸಂವಿಧಾನದ ಮೌಲ್ಯಗಳಿಗೆ ಧಕ್ಕೆ ಬಂದಾಗಲೆಲ್ಲ, ಭಾರತ ತನ್ನ ಅಂತಃಸತ್ವದ ಭವ್ಯತೆಯನ್ನು ಬೆಳಗುತ್ತದೆ ಎಂದು ಕಾಣುತ್ತದೆ. ಆ ಬೆಳಗುವಿಕೆ ಇಂದು ನಿಚ್ಚಳವಾಗಿ ಕಾಣುತ್ತಿದೆ. ಹೃದಯ, ಮಿದುಳು, ಹೊಟ್ಟೆ ತುಂಬ ಗಣಿ ಲೂಟಿ ದುಡ್ಡನ್ನೆ ತುಂಬಿಕೊಂಡ ಮದದ ಸೋಮಶೇಖರರೆಡ್ಡಿ ಎಂಬ ಬಿಜೆಪಿ ಶಾಸಕ ಸಿಎಎ ಮತ್ತು ಎನ್ಆರ್ಸಿ ವಿರೋಧಿಸುವವರಿಗೆ ‘ನೀವು 20% ಇದ್ದೀರಿ, ನಾವು 80% ಇದ್ದೇವೆ.
ಜೋಕೆ’ ಎಂದು ಹೇಳಿದ್ದಕ್ಕೆ ಭವ್ಯ ಎಂಬ ತರುಣಿ ಹೇಳುವುದು ಹೀಗೆ- “ರೆಡ್ಡಿ, ನೆನಪಿರಲಿ, ಸಿಎಎ ಮತ್ತು ಎನ್ಆರ್ಸಿ ವಿರೋಧಿಸುವ ನಾವು ಭಾರತೀಯರು 99% ಇದ್ದೇವೆ. ನೀವು ಕೋಮುವಾದಿಗಳು 1% ಇದ್ದಿರಿ” ಈ ಮಾತಲ್ಲಿ ಭಾರತದ ಭವ್ಯತೆ ಪ್ರಕಾಶಗೊಳ್ಳುತ್ತದೆ. ಇಂದು ಸಂಘರ್ಷ ನಡೆಯುತ್ತಿರುವುದು 99% We the people of India V/s 1% ಕೋಮುವಾದಿ ಗ್ಯಾಂಗ್ ನಡುವೆ.
ಹೀಗೆ ಭವ್ಯ ಥರಾನೇ ಉನ್ನತ ಅಧಿಕಾರಿಗಳಾಗಿದ್ದ ಸಸಿಕಾಂತ್ ಸೆಂಥಿಲ್ ಹಾಗೂ ಕಣ್ಣನ್ ಗೋಪಿನಾಥ್ ನಡೆನುಡಿ ನೋಡಿದಾಗಲೂ ಭಾರತಕ್ಕೆ ಭವಿಷ್ಯವಿದೆ ಅನ್ನಿಸುತ್ತದೆ. ಎಲ್ಲಕ್ಕಿಂತ ಸಂವಿಧಾನದ ಮೌಲ್ಯಕ್ಕೆ ಬಿಲ ತೋಡಿ ತಿಂದು ಹಾಕುತ್ತಿದ್ದ ಇಲಿ ಹೆಗ್ಗಣಗಳ ವಿರುದ್ಧವಾಗಿ ವಿದ್ಯಾರ್ಥಿ ಯುವಜನರ ಸ್ಫೋಟ ಕಂಡಾಗ ಈ ವಿದ್ಯಾರ್ಥಿ ಯುವಜನರ ನಾಯಕತ್ವಕ್ಕೆ ಭಾರತವನ್ನು ಕಾಪಾಡುವ ಶಕ್ತಿ ಇದೆ ಎಂದು ಅನ್ನಿಸುತ್ತದೆ.
ಇಂದು ದೇಶದ ತುಂಬಾ ಸಿಎಎ, ಎನ್ಆರ್ಸಿ ಎನ್ಪಿಆರ್ ಬಗ್ಗೆ ಭೀತಿ ತುಂಬಿದೆ. ಎಷ್ಟೆಂದರೆ ಇತ್ತೀಚೆಗೆ ಚಾಮರಾಜನಗರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಆರೋಗ್ಯ ಮಾಹಿತಿಗಳನ್ನು ಸಂಗ್ರಹಿಸಲು ಬಂದಾಗ ಅಲ್ಲಿನ ಜನರು ಆ ಗಣತಿಯು ಸಿಎಎ, ಎನ್ಆರ್ಸಿ, ಎನ್ಪಿಆರ್ ಬಲೆ ಇರಬೇಕೆಂದು ಭಾವಿಸಿ ಆ ಗಣತಿ ಫಾರಂಗಳನ್ನು ಹರಿದೆಸೆದು ಹಿಂದಕ್ಕೆ ಕಳಿಸಿದ್ದಾರೆ. ಅಷ್ಟೊಂದು ಭೀತಿ ಹರಡಿದೆ.
ಈಗ, ನನ್ನ ಹುಟ್ಟಿದ ದಿನಾಂಕ ಕೇಳಿದರೆ ನನ್ನ ಅವ್ವ ಹೇಳಿದಂತೆ-ಅದು ಸೋಮವಾರ ಸಂಜೆ ರೈಲು ಕವಲಂದೆ ಸ್ಟೇಷನ್ನಲ್ಲಿ ನಿಂತು ಹೊರಡುವ ಸಮಯವಂತೆ. ಹೀಗಿರುವಾಗ ದಿನಾಂಕ ಹೇಗೆ ಹೇಳಲಿ? ನನ್ನ ಮೊಮ್ಮಗಳಿಗೆ ನನಗೆ ಬರ್ತ್ಡೇ ಇಲ್ಲ ಎಂದು ತಿಳಿದು ಅವಳು ಬೇಜಾರು ಮಾಡಿಕೊಂಡು ‘ನನ್ನ ಹುಟ್ಟಿದ ದಿನವೇ ನಿನ್ನ ಹುಟ್ಟಿದ ದಿನ’ ಎಂದು ನನಗೆ ಸಮಾಧಾನ ಮಾಡಿದ್ದಾಳೆ! ನನಗೇ ಹೀಗಿರುವಾಗ, ಇನ್ನು ನಮ್ಮ ಅಪ್ಪನ ಹುಟ್ಟಿದ ದಿನಾಂಕ ಕೇಳಿದರೆ ಏನು ಹೇಳಲಿ? ಇರುವುದನ್ನು ಹೇಳಿದರೆ ನಾನು ಅನುಮಾನಾಸ್ಪದ [Doughtful] ವ್ಯಕ್ತಿಯಾಗುತ್ತೇನೆ.
ಏನು ಹೇಳಲಿ? ಮೋದಿಯವರ ಅಪ್ಪ ಹುಟ್ಟುವ ಐದು ವರ್ಷಕ್ಕೆ ಮೊದಲು ಎನ್ನಲೆ? ಅಥವಾ ಅಮಿತ್ಷಾರ ಅಪ್ಪ ಹುಟ್ಟುವ 20 ವರ್ಷಕ್ಕೆ ಮೊದಲು ಎನ್ನಲೆ? ಬಹುಶಃ ನನ್ನ ಮೂಲ ಇರುವುದು ಹರಪ್ಪ-ಮಹೆಂಜೋದಾರೋದಲ್ಲಿ. ಅದು ಇಂದು ಪಾಕಿಸ್ತಾನದಲ್ಲಿದೆ ಏನು ಮಾಡಲಿ? ಈಗ ಮೊದಲು ಎನ್ಪಿಆರ್ ಬಲೆ ಹಾಕುತ್ತಾರೆ. ಇದರ ಆಧಾರದ ಮೇಲೆ ಎನ್ಆರ್ಸಿ ಆವರಿಸಿ ಅನುಮಾನಾಸ್ಪದ [Doughtful] ಮಾಡುತ್ತಾರೆ. ಆಮೇಲೆ ಈ ಅನುಮಾನಾಸ್ಪದ ‘ಡಿ’ ಗೆ ಸಿಎಎ[ಕಾ] ಯಮಪಾಶ ಹಾಕುತ್ತಾರೆ. ಇದನ್ನೇ ಐತಿಹಾಸಿಕ ಎನ್ನುತ್ತಿದ್ದಾರೆ.
ಇಂತಹವುಗಳನ್ನೆಲ್ಲಾ ಮಾಡಲು ಹೊರಟವರು ಹೇಗೆ ಮಣ್ಣು ಮುಕ್ಕಿದರು ಎಂದು ನಾವು ಅಕ್ಕಪಕ್ಕ ನೋಡಿಯಾದರೂ ಕಲಿಯಬೇಕಾಗಿದೆ. ಪತ್ರಕರ್ತ ಕೆ.ಎಸ್.ದಕ್ಷಿಣಾಮೂರ್ತಿಯವರು ತಮ್ಮ ಲೇಖನವೊಂದರಲ್ಲಿ ಹೇಗೆ ಕೆಲವು ದೇಶಗಳು ತಂತಮ್ಮ ದೇಶದ ರಾಜಧರ್ಮ ಹಾಗೂ ಸಂವಿಧಾನದಲ್ಲಿ ಹಸ್ತಕ್ಷೇಪ ಮಾಡಲು ಹೋಗಿ ಏನೆಲ್ಲಾ ದುರಂತಕ್ಕೆ ತುತ್ತಾದವು ಎಂಬುದನ್ನು ವಿವರಿಸುತ್ತಾರೆ.
1956ರಲ್ಲಿ ಶ್ರೀಲಂಕಾ ‘ಸಿಂಹಳದವರಿಗೆ ಮಾತ್ರ’ ಎಂದು ಮಾಡಲು ಹೋಗಿ ಎಲ್ಟಿಟಿಇ ಹುಟ್ಟಿಗೆ ಕಾರಣವಾಯ್ತು. ಧ್ವಂಸ, ಹಿಂಸೆ, ಸಾವು, ನೋವು ರಾಜೀವ್ಗಾಂಧಿಯವರನ್ನು ಬಲಿ ತೆಗೆದುಕೊಂಡಿತು. ರುವಾಂಡಾದಲ್ಲಿ ಅಲ್ಪಸಂಖ್ಯಾತ ಟುಟ್ಸಿ ಮತ್ತು ಬಹುಸಂಖ್ಯಾತ ಹುಟುಗಳ ಮಧ್ಯೆ ಸರ್ಕಾರವೇ ಬತ್ತಿ ಇಟ್ಟಿತು. ಐ.ಡಿ ಕಾರ್ಡ್ ಕಡ್ಡಾಯ ಮಾಡುತ್ತದೆ. ಕೇವಲ ನೂರು ದಿನಗಳಲ್ಲಿ 8 ಲಕ್ಷ ಜನ ಹತರಾಗುತ್ತಾರೆ.
ಸಾಯುವಾಗ ಒಂದೇ ಗುಂಪಿನವರು ಸಾಯುವುದಿಲ್ಲ. ಅಮಾಯಕರು ಹೆಚ್ಚು ಸಾಯುತ್ತಾರೆ. ಇದನ್ನೀಗ ಭಾರತ ಸರ್ಕಾರ ಮಾಡಲು ಹೊರಟಿದೆ. ಪಾಕಿಸ್ಥಾನದಲ್ಲಿ ಕೂಡ ಉರ್ದು ಭಾಷೆ ಮತ್ತು ಲಿಪಿಯನ್ನು ಬೆಂಗಾಲಿ ಮುಸ್ಲಿಮರ ಮೇಲೆ ಹೇರಲು ಹೋಗಿ ಇಡೀ ರಾಷ್ಟ್ರವೇ ಹೋಳಾಯ್ತು.
ಯುಗೊಸ್ಲಾವಿಯದಲ್ಲಿ ಎಂದೋ ಮುಚ್ಚಿಹೋಗಿದ್ದ ಜನಾಂಗೀಯ/ ಧಾರ್ಮಿಕ ಬಿರುಕನ್ನು ಮತ್ತೆ ಕೆದಕಲು ಹೋಗಿ ಕ್ರಿಶ್ಚಿಯನ್ರ ವಿರುದ್ಧ ಮುಸ್ಲಿಮರು, ಸರ್ಬರ ವಿರುದ್ಧ ಬೊಸ್ನಿಯನ್ನರು, ಕ್ರೊವೇಷಿಯನ್ನರ ವಿರುದ್ಧ ಸರ್ಬರು ಪರಸ್ಪರ ಶತ್ರುಗಳಾಗಿ ಈಗಲೂ ಅಲ್ಲಿ ಹಿಂಸೆ ತಾಂಡವವಾಡುತ್ತಿದೆ.
ಈ ರೀತಿಯಾಗುವುದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೇ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ.
ನನ್ನ ಪೌರತ್ವದ ಬಗ್ಗೆ ಅನುಮಾನವಿರಬಹುದು ಆದರೆ ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿರುವುದರಲ್ಲಿ ಅನುಮಾನವೇ ಇಲ್ಲ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಇದನ್ನೆಲ್ಲಾ ಪ್ರಶ್ನಿಸಬೇಕಾದ ಸಂಸತ್ನಲ್ಲಿ ಅಪರಾಧಿಗಳು, ಕೋಟ್ಯಾಧಿಪತಿಗಳು ಹೆಚ್ಚಾಗಿದ್ದು ಸಂಸತ್ನಿಂದ ಏನನ್ನೂ ನಿರೀಕ್ಷಿಸಲಾಗದು ಎನ್ನುವಂತಾಗಿದೆ. ಹಾಗೂ ರಾಜಕೀಯ ಪಕ್ಷಗಳ ಸ್ಥಿತಿಗತಿಯೂ ದಯನೀಯವಾಗಿದೆ.
ಕಮ್ಯುನಿಸ್ಟರು ಸ್ಥಗಿತವಾಗಿದ್ದಾರೆ. ಆಮ್ಆದ್ಮಿ, ಸ್ವರಾಜ್ಇಂಡಿಯಾದಂತಹ ಪ್ರಯೋಗಶೀಲ ಪಕ್ಷಗಳು ವ್ಯಾಪಕವಾಗುತ್ತಿಲ್ಲ. ಮೋದಿಶಾ ಆಡಳಿತವು ಕಾಂಗ್ರೆಸ್ ಮತ್ತು ಇನ್ನಿತರ ಪಕ್ಷಗಳನ್ನು ತೆವಳುವಂತೆ ಮಾಡಿಬಿಟ್ಟಿದೆ. ವಿಪರ್ಯಾಸವೆಂದರೆ ಈ ಮೋದಿಶಾ ಆಡಳಿತವು ಕಾಂಗ್ರೆಸ್ ಮತ್ತು ಇನ್ನಿತರ ಪಕ್ಷಗಳನ್ನು ತೆವಳುವಂತೆ ಮಾಡಿಬಿಟ್ಟಿವೆ.
ವಿಪರ್ಯಾಸವೆಂದರೆ ಈ ಮೊದಿಶಾ ಆಡಳಿತವು ಸ್ವತಃ ತನ್ನ ಪಕ್ಷ ಬಿಜೆಪಿಯನ್ನೇ ಧ್ವಂಸ ಮಾಡಿಬಿಟ್ಟಿದೆ. ಅತಿ ದೊಡ್ಡ ಪಕ್ಷ ಎನಿಸಿಕೊಂಡಿರುವ ಬಿಜೆಪಿಗೆ ಒಂದು ರಾಜಕೀಯ ಪಕ್ಷಕ್ಕೆ ಇರಬೇಕಾದ ಯಾವ ಚಹರೆಯೂ ಇಂದು ಉಳಿದಿಲ್ಲ. ಜೀವ ಇಲ್ಲದ ಸತ್ತ ದೇಹದಂತೆ ಇದೆ. ಬಿಜೆಪಿ ಪಕ್ಷದ ಹೆಸರಿನಲ್ಲಿ ಮೋದಿ-ಶಾ ಗ್ಯಾಂಗ್ ಆಡಳಿತ ನಡೆಸುತ್ತಿದೆ.
ಈ ಸಂದರ್ಭದಲ್ಲಿ ಡಾ. ಅಂಬೇಡ್ಕರ್ ಅವರು ಸಂವಿಧಾನದ ಸಭೆಯಲ್ಲಿ, ಜಾತಿ ಮತ ಭೇದದ ಕಾರಣವಾಗಿ ಭಾರತವು ಹೇಗೆ ಗುಲಾಮಗಿರಿಗೆ ತುತ್ತಾಯಿತು ಎಂಬ ಸಂಗತಿಗಳನ್ನು ವಿವರಿಸಿ ಹೇಳುತ್ತ ನೀಡುವ ಎಚ್ಚರಿಕೆಯನ್ನು ನಾವಿಂದು ಕೇಳಿಸಿಕೊಳ್ಳಬೇಕಾಗಿದೆ- “ಚರಿತ್ರೆ ಮತ್ತೆ ಮರುಕಳಿಸುತ್ತದೆಯೇ? ಈ ಯೋಚನೆ ನನ್ನಲ್ಲಿ ಆತಂಕ ಮೂಡಿಸುತ್ತದೆ.
ನಮಗೆ ಈಗಾಗಲೇ ಇದ್ದ ಹಳೆಯ ಶತ್ರುಗಳಾದ ಜಾತಿ, ಧರ್ಮಗಳ ಜೊತೆಗೆ ವಿಭಿನ್ನ ಮತ್ತು ವಿರೋಧೀ ರಾಜಕೀಯ ಸಿದ್ಧಾಂತಗಳ ಹಲವು ರಾಜಕೀಯ ಪಕ್ಷಗಳೂ ಸೇರಿಕೊಳ್ಳುತ್ತವೆ. ಈ ವಾಸ್ತವ ಅರಿವಾದ ಕೂಡಲೆ ನನ್ನ ಆತಂಕ ಇನ್ನೂ ತೀವ್ರವಾಗುತ್ತದೆ. ಭಾರತೀಯರು ದೇಶವನ್ನು ತಮ್ಮ ಮತಧರ್ಮಗಳಿಗಿಂತ ಮುಖ್ಯವೆಂದು ಭಾವಿಸುತ್ತಾರೆಯೋ ಅಥವಾ ಅವರಿಗೆ ತಮ್ಮ ದೇಶಕ್ಕಿಂತ ತಮ್ಮ ಮತಧರ್ಮಗಳೇ ಹೆಚ್ಚು ಮುಖ್ಯವಾಗುತ್ತದೋ? ನನಗೆ ಗೊತ್ತಾಗುತ್ತಿಲ್ಲ. ಆದರೆ ಇಷ್ಟಂತೂ ಖಚಿತ.
ರಾಜಕೀಯ ಪಕ್ಷಗಳು ಜಾತಿಧರ್ಮವನ್ನೇ ದೇಶಕ್ಕಿಂತ ಮುಖ್ಯ ಎಂದು ಭಾವಿಸಿದರೆ ನಮ್ಮ ಸ್ವಾತಂತ್ರ್ಯಕ್ಕೆ ಎರಡನೇ ಬಾರಿ ಗಂಡಾಂತರ ಬಂದಂತೆ. ಹಾಗೇನಾದರೂ ಆದರೆ ಬಹುಶಃ ಸ್ವಾತಂತ್ರ್ಯ ಅನ್ನುವುದು ನಮಗೆ ಮತ್ತೆ ಸಿಗುವುದಿಲ್ಲ. ಅದನ್ನು ಶಾಶ್ವತವಾಗಿ ಕಳೆದುಕೊಂಡುಬಿಡುತ್ತೇವೆ. ಇದರ ವಿರುದ್ಧ ನಾವೆಲ್ಲರೂ ಅಚಲವಾಗಿ ನಿಲ್ಲಬೇಕು. ನಮ್ಮಲ್ಲಿ ಕೊನೆಯ ಹನಿ ರಕ್ತ ಇರುವವರೆಗೆ ನಮ್ಮ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ದೃಢಸಂಕಲ್ಪ ಮಾಡಬೇಕು.”
ಈ ಕಾಲ ಈಗ ಬಂದಿದೆ. ಭಾರತದ ಪೌರತ್ವ ನಿರ್ಧಾರಕ್ಕೆ ಮತಧರ್ಮಗಳನ್ನೂ ಪರಿಗಣಿಸಿ ಸಂವಿಧಾನದ ಮೌಲ್ಯಕ್ಕೆ ಬಿಲ ತೋಡಿ ತಂತಾನೇ ಸಂವಿಧಾನದ ಆಸೆಗಳು ಕುಸಿಯುವಂತೆ ಮಾಡಲಾಗುತ್ತಿದೆ. ಹೌದು, ಇಂದು ಭಾರತ ಎರಡನೆ ಸ್ವಾತಂತ್ರ್ಯ ಹೋರಾಟಕ್ಕಾಗಿ ಯಾಚಿಸುತ್ತಿದೆ.
ಕೊನೆಯದಾಗಿ, ಇಷ್ಟಿದ್ದೂ ಹೀಗಿದ್ದೂ ಆದರೂ ಮೋದಿಯವರಿಗೆ ಒಂದು ಪ್ರಾರ್ಥನೆ ಮಾಡುವೆ. ನಿಮ್ಮ ಕಣ್ಗಳ ಕೆಳಗೆ ನಡೆದ ಜೆಎನ್ಯು ಘಟನೆಯನ್ನು ನೋಡಿ ತತ್ತರಿಸಿ ಹೋದೆ. ಗುಂಪು ಥಳಿತ ನೋಡಿದಾಗಲು ಈ ದೇಶದಲ್ಲಿ ರಾಜನಿಲ್ಲ (ರೂಲರ್ ಇಲ್ಲ), ಅರಾಜಕತೆ ಇದೆ ಅನ್ನಿಸುತ್ತದೆ. ಪೊಲೀಸ್ ವ್ಯವಸ್ಥೆ ಕಳಂಕಿತವಾಗಿ ಬಿಟ್ಟಿತು.
ಇನ್ನು ಮಿಲ್ಟ್ರಿಕತೆ ಏನೋ ಗೊತ್ತಿಲ್ಲ. ಇದು ಪ್ರಧಾನಿಯ ಬುಡವನ್ನೆ ಬುಡಮೇಲು ಮಾಡುತ್ತದೆ. ಮಾಂತ್ರಿಕರು ಭೂತ ಪಿಶಾಚಿಗಳನ್ನು ವಶಪಡಿಸಿಕೊಂಡು ಒಂದು ಬಾಟಲ್ನಲ್ಲಿ ಕೂಡಿ ಭದ್ರವಾಗಿ ಮುಚ್ಚಳ ಹಾಕಿ ಇಟ್ಟುಕೊಂಡಿರುತ್ತಾರಂತೆ. ಅವರೇನಾರು ರಾಗದ್ವೇಷಕ್ಕೆ ಒಳಗಾಗಿ ಮುಚ್ಚಳ ತೆಗೆದು ಪಿಶಾಚಿಗಳನ್ನು ತನ್ನ ಹಗೆ ಮೇಲೆ ಛೂ ಬಿಟ್ಟರೆ ಅವು ಎಲ್ಲವನ್ನೂ ತಿಂದು ಹಾಕಿ ಕೊನೆಗೆ ವಶಪಡಿಸಿಕೊಂಡಿರುವ ಮಾಂತ್ರಿಕನ ಬಳಿಗೆ ಬಂದು ಮಾಂತ್ರಿಕನನ್ನೇ ತಿಂದು ಹಾಕುತ್ತವಂತೆ.
ಒಬ್ಬ ರೂಲರ್ Negative ಆದಾಗ ಇದು ಆಗುತ್ತಾ ಬಂದಿದೆ. ಇಂಥವರಿಗೆ ಅವರ ಪಕ್ಕದಲ್ಲಿ ಇರುವವರೇ ಮೃತ್ಯು ಆಗುತ್ತಾರೆ. ತಾವು ಗುಹೆಯಲ್ಲಿ ಧ್ಯಾನ ಮಾಡುತ್ತಿರುವುದನ್ನು ಟಿವಿಯಲ್ಲಿ ನೋಡಿದ್ದರಿಂದ ಇದನ್ನು ಹೇಳಬೇಕಾಯ್ತು, ಕ್ಷಮೆ ಇರಲಿ. ತಮ್ಮ ಧ್ಯಾನವು ರಾಗದ್ವೇಷ ಇಲ್ಲದ ಮನಸ್ಸನ್ನು ಪಡೆಯುವಂತಾಗುವುದಕ್ಕೆ ಕಾರಣವಾಗಿ ಅದರಿಂದ ಆರ್ಥಿಕ ಚೇತರಿಕೆ, ಬೆಲೆ ಏರಿಕೆಯ ನಿಯಂತ್ರಣ, ಉದ್ಯೋಗ ಹೆಚ್ಚಳಕ್ಕೆ ಕಾರಣವಾದರೆ ದೇಶಕ್ಕೆ ಒಳ್ಳೆಯದು, ತಮಗೂ ಕೂಡ. ನಮಸ್ಕಾರ.
ಕೃಪೆ : ನಮ್ಮ ಬನವಾಸಿ.ಕಾಂ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ಚುನಾವಣಾ ಆಯೋಗ ಸಮಾವೇಶ
ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.
ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.
ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243