Connect with us

ನೆಲದನಿ

ಕೋಟೆ ನಾಡಿನಲ್ಲೊಂದು ಬಂಡಾಯ ದನಿ: ಡಾ.ಸಿ.ಶಿವಲಿಂಗಪ್ಪ ಮೀರಾಸಾಬಿಹಳ್ಳಿ

Published

on

  • ಡಾ.ಕೆ.ಎ.ಓಬಳೇಶ್

ಮಾನವನ ಬದುಕಿನ ಚಾರಿತ್ರಿಕ ಹಿನ್ನೆಲೆಯನ್ನು ಸೂಕ್ಷ್ಮವಾಗಿ ಗಮನಿಸುತ್ತ ಬಂದರೆ ಪ್ರತಿಯೊಬ್ಬ ವ್ಯಕ್ತಿಯು ಒಂದಿಲ್ಲೊಂದು ಕಾರಣಕ್ಕಾಗಿ ಪ್ರತಿಭಟನೆ ಮತ್ತು ಹೋರಾಟಗಳನ್ನು ಮುಂದುವರೆಸಿಕೊಂಡು ಬಂದಿದ್ದಾನೆ. ಈ ಪ್ರತಿಭಟನೆ ಮತ್ತು ಹೋರಾಟಗಳ ಸ್ವರೂಪ ಭಿನ್ನವಾಗಿರಬಹುದು. ಆದರೆ ಇವೆಲ್ಲ ಬಂಡಾಯ ಕೇಂದ್ರಿತವಾದವುಗಳೆ.

ಭಾರತದಂತಹ ಬಹುತ್ವದ ನಾಡಿನಲ್ಲಿ ಬಂಡಾಯವು ನಿರಂತರವಾದ ಪ್ರಕ್ರಿಯೆಯಾಗಿದೆ. ಇಲ್ಲಿನ ಅಸಮಾನತೆ, ಲಿಂಗತಾರತಮ್ಯ, ಅಸ್ಪೃಶ್ಯತೆಯಂತಹ ಅಮಾನವೀಯ ಆಚರಣೆಗಳ ವಿರುದ್ಧ ಹಲವಾರು ದಾರ್ಶನಿಕರು, ಚಿಂತಕರು ಹಾಗೂ ಪ್ರಗತಿಪರರು ನಿರಂತರವಾದ ಬಂಡಾಯದ ಮೂಲಕವಾಗಿ ಹೋರಾಟಗಳನ್ನು ಮುನ್ನಡೆಸಿಕೊಂಡು ಬಂದಿದ್ದಾರೆ. ಕರ್ನಾಟಕದಲ್ಲಿ ಎಪ್ಪತ್ತರ ದಶಕದ ವೇಳೆಗೆ ತಳಸಮುದಾಯದಿಂದ ಬಂದ ಶಿಕ್ಷಿತ ಸಮುದಾಯವು ಇಂತಹ ಸಾಮಾಜಿಕ ಅಸಮಾನತೆಯ ವಿರುದ್ಧ ಚಳವಳಿಯನ್ನು ರೂಪಿಸುವ ಮೂಲಕ ಸಮಸಮಾಜಕ್ಕಾಗಿ ತುಡಿಯುತ್ತ ಬಂದಿದ್ದಾರೆ.

ಈ ಸಂದರ್ಭದಲ್ಲಿಯೇ ಬಂಡಾಯ ಸಾಹಿತ್ಯ ಸಂಘಟನೆ ಜನ್ಮತಳೆದು ‘ಖಡ್ಗವಾಗಲಿ ಕಾವ್ಯ ಜನರ ನೋವಿಗೆ ಮಿಡಿವ ಪ್ರಾಣಮಿತ್ರ’ ಎಂಬ ಘೋಷವಾಕ್ಯದ ಮೂಲಕ ಸಮತೆಯ ಭಾರತಕ್ಕಾಗಿ ಮಿಡಿದಿದೆ. ಎಂಬತ್ತರ ದಶಕದ ವೇಳೆಗೆ ಜನ್ಮತಳೆದ ಬಂಡಾಯ ಸಾಹಿತ್ಯ ಮತ್ತು ಚಳವಳಿಯನ್ನು ಮುನ್ನಡೆಸುವಲ್ಲಿ ಕರ್ನಾಟಕದ ಮೂಲೆ ಮೂಲೆಯಿಂದಲೂ ಪ್ರಜ್ಞಾವಂತ ಮನಸ್ಸುಗಳು ಶ್ರಮಿಸಿವೆ. ಇಂತಹ ಪ್ರಜ್ಞಾವಂತ ಮನಸ್ಸುಗಳಲ್ಲಿ ಕೋಟೆನಾಡಿನ ಪ್ರೊ.ಸಿ.ಶಿವಲಿಂಗಪ್ಪನವರು ಒಬ್ಬರಾಗಿದ್ದಾರೆ.

ಶ್ರೀಯುತ ಸಿ.ಶಿವಲಿಂಗಪ್ಪನವರು1955 ರಲ್ಲಿ ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ಮೀರಾಸಾಬಿಹಳ್ಳಿಯಲ್ಲಿ ಶ್ರೀ ಚಿಕ್ಕೀರಪ್ಪ ಮತ್ತು ಶ್ರೀಮತಿ ಹನುಮಕ್ಕ ದಂಪತಿಗಳ ಹಿರಿಯ ಮಗನಾಗಿ ಜನಿಸಿದರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮವಾದ ಮೀರಾಸಾಬಿಹಳ್ಳಿಯಲ್ಲಿ, ಪ್ರೌಢ, ಪದವಿಪೂರ್ವ ಶಿಕ್ಷಣವನ್ನು ಚಳ್ಳಕೆರೆ ಮತ್ತು ಚಿತ್ರದುರ್ಗದಲ್ಲಿ, ಪದವಿ ಶಿಕ್ಷಣವನ್ನು ಚಳ್ಳಕೆರೆಯಲ್ಲಿ ಪೂರೈಸಿದರು.

ಪದವಿಪೂರ್ವ ಶಿಕ್ಷಣದಲ್ಲಿ ವಿಜ್ಞಾನ ವಿಷಯವನ್ನು ಆಯ್ದುಕೊಂಡು ಅಧ್ಯಯನ ಪೂರೈಸಿದ ನಂತರ ಮನೆಯಲ್ಲಿನ ಒತ್ತಡದ ಕಾರಣದಿಂದ ಒಂದು ವರ್ಷ ಶಿಕ್ಷಣವು ಮೊಟಕುಗೊಂಡಿತು. ನಂತರ ಪದವಿಯಲ್ಲಿ ಐಚ್ಚಿಕ ಕನ್ನಡವನ್ನು ಆಯ್ದುಕೊಂಡು ಅಧ್ಯಯನಕ್ಕೆ ಮುಂದಾದರು. ಓದಿನಲ್ಲಿ ವಿಶಿಷ್ಟವಾದ ಆಸಕ್ತಿಯನ್ನು ಹೊಂದಿದ್ದ ಇವರು ಪದವಿ ಹಂತದಲ್ಲಿಯೇ ಸಾಹಿತ್ಯದ ಅಭಿರುಚಿಯನ್ನು ಮೈಗೂಡಿಸಿಕೊಂಡಿದ್ದರು. ಇದರೊಂದಿಗೆ ಬಾಲ್ಯದ ದಿನಗಳಿಂದಲೂ ಗ್ರಾಮೀಣ ಪರಿಸರದಲ್ಲಿ ಬೆಳೆದ ಇವರು ಹಲವಾರು ಜನಪದ ಕಲೆಗಳನ್ನು ರೂಢಿಸಿಕೊಂಡಿದ್ದರು.

ಪದವಿ ಶಿಕ್ಷಣ ಪಡೆಯುವ ಹಂತಕ್ಕಾಗಲೇ ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸುವ ಮೂಲಕ ಜನಪದ ಕಲೆಯಲ್ಲಿ ವಿಶಿಷ್ಟವಾದ ಅಭಿರುಚಿಯನ್ನು ಬೆಳೆಸಿಕೊಂಡಿದ್ದರು. ಪದವಿಯಲ್ಲಿ ಐಚ್ಚಿಕ ಕನ್ನಡವನ್ನು ಆಯ್ದುಕೊಂಡ ಕಾರಣದಿಂದಾಗಿ ತಮ್ಮ ಸುತ್ತಮುತ್ತಲಿನ ಜನಜೀವನ ಹಾಗೂ ಪ್ರಾಕೃತಿಕ ಪರಿಸರವನ್ನು ಆಪ್ತವಾಗಿ ಕಾಣುವ ಮತ್ತು ಇದು ನಮ್ಮದೆಂದು ಅರಿಯುವ ಸಂವೇದನೆ ಮೂಡಿತ್ತು.

ಗುರುಗಳಾದ ಮೀರಾಸಾಬಿಹಳ್ಳಿ ಶಿವಣ್ಣ, ಬಿ.ಪಿ.ವೀರೇಂದ್ರಕುಮಾರ್ ಹಾಗೂ ಬಿ.ಬಿ.ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಬೆಳೆದು, ಪಠ್ಯ ಮತ್ತು ಪಠ್ಯೇತರ ಚಟುವಟಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು.

ಪದವಿ ಹಂತದಲ್ಲಿ ಮೂಡಿದ ಸಾಹಿತ್ಯದ ಅಭಿರುಚಿಯಿಂದಾಗಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಮುಂದಾದರು. ಈ ಸಂದರ್ಭದಲ್ಲಿ ತನ್ನ ತವರು ಜಿಲ್ಲೆಯ ಒಡನಾಡಿಗಳಾದ ಪ್ರಹ್ಲಾದ್ ಅಗಸನಕಟ್ಟೆ, ಜಿ.ಎನ್.ಮಲ್ಲಿಕಾರ್ಜುನಪ್ಪ ಅವರೊಂದಿಗೆ ಆಪ್ತವಾದ ಒಡನಾಟ ಬೆಳೆಯಿತು. ಇವರ ಒಡನಾಟ ಮತ್ತಷ್ಟು ಗಟ್ಟಿಯಾಗಲು ಎಲ್ಲರ ಸಮಾನವಾದ ಬಡತನದ ಬದುಕು, ಸಂವೇದನೆ ಹಾಗೂ ಸಾಹಿತ್ಯಾಭಿರುಚಿಗಳು ಪ್ರಮುಖ ಕಾರಣವಾಗಿದ್ದವು.

ಇವರ ಒಡನಾಟದಿಂದಾಗಿ ಸಿ.ಶಿವಲಿಂಗಪ್ಪನವರಿಗೆ ಸಾಹಿತ್ಯದಲ್ಲಿ ಮತ್ತಷ್ಟು ಒಲವು ಮೂಡಿತು. ಪ್ರಹ್ಲಾದ್ ಅಗಸನಕಟ್ಟೆಯವರು ಅತ್ಯುತ್ತಮ ಕತೆಗಾರರಾಗಿದ್ದು, ಜಿ.ಎನ್.ಮಲ್ಲಿಕಾರ್ಜುನಪ್ಪನವರು ಸಾಹಿತ್ಯದ ಅಭಿರುಚಿಯನ್ನು ಹೊಂದಿದವರಾಗಿದ್ದರು. ಸ್ನಾತಕೋತ್ತರ ಅಧ್ಯಯನ ಮಾಡುವ ಹಂತದಲ್ಲಿಯೇ ಕನ್ನಡದ ಪ್ರಸಿದ್ಧ ಸಾಹಿತಿಗಳಾದ ಯು.ಆರ್.ಅನಂತಮೂರ್ತಿ, ದೇವನೂರು ಮಹಾದೇವ ಹಾಗೂ ಇತರೆ ಸಾಹಿತಿಗಳ ಸಂದರ್ಶನ, ಅವರೊಂದಿಗೆ ಸಾಹಿತ್ಯ ಮತ್ತು ಸಾಮಾಜಿಕ ಕಟ್ಟುಪಾಡುಗಳ ಕುರಿತು ಚರ್ಚೆಯಲ್ಲಿ ತಲ್ಲೀನರಾಗುತ್ತಿದ್ದರು.

ಇದೇ ಸಂದರ್ಭದಲ್ಲಿ ಆಗ ತಾನೇ ಸಮಸಮಾಜದ ಕನಸೊತ್ತು ಜನ್ಮತಳೆದಿದ್ದ ಲಂಕೇಶ್ ಪತ್ರಿಕೆಯ ಒಡನಾಟವನ್ನು ಬೆಳೆಸಿಕೊಂಡರು. ಹೀಗೆ ಆಪ್ತ ಸ್ನೇಹಿತರು ಹಾಗೂ ಕನ್ನಡದ ಹೆಸರಾಂತ ಸಾಹಿತಿಗಳ ಒಡನಾಟದಿಂದಾಗಿ ಇವರಿಗೆ ಸಾಹಿತ್ಯದಲ್ಲಿ ವಿಶೇಷವಾದ ಆಸಕ್ತಿ ಮೈಗೂಡಿತು. ಹಾಗೆಯೇ ಸಮಸಮಾಜದ ಆಶಯಗಳೊಂದಿಗೆ ಪಿ.ಲಂಕೇಶ್ ಅವರ ನೇತೃತ್ವದಲ್ಲಿ ಆರಂಭವಾದ ‘ಪ್ರಗತಿರಂಗ’ ಪಕ್ಷದ ಚಟುವಟಿಕೆಗಳಲ್ಲಿ ಒಲವುಳ್ಳ ಹಿನ್ನೆಯಲ್ಲಿ ಸ್ವಗ್ರಾಮವಾದ ಮೀರಸಾಬಿಹಳ್ಳಿಯಲ್ಲಿ ಸಮಾರಂಭವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಪಿ.ಲಂಕೇಶ್ ಅವರು ಆಗಮಿಸಿರುತ್ತಾರೆ.

ಶ್ರೀಯುತರು ಸ್ನಾತಕೋತ್ತರ ಪದವಿ ಪಡೆದ ನಂತರ 1981ರಲ್ಲಿ ಮೊದಲ ಬಾರಿಗೆ ತಾವು ಶಿಕ್ಷಣ ಪಡೆದ ಚಳ್ಳಕೆರೆ ಪ್ರಥಮ ದರ್ಜೆ ಕಾಲೇಜಿನಿಂದಲೇ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ಹೀಗೆ ಚಳ್ಳಕೆರೆಯಿಂದ ಆರಂಭವಾದ ವೃತ್ತಿ ಜೀವನವು ಚಿತ್ರದುರ್ಗ, ಸಕಲೇಶಪುರ, ಪರಶುರಾಮಪುರ, ಹೊನ್ನಾಳಿ, ಹಿರಿಯೂರುಗಳಲ್ಲಿ ಮುಂದುವರೆಯಿತು. ಸುಮಾರು 35 ವರ್ಷಗಳ ನಿರಂತರವಾದ ಬೋಧನೆಯೊಂದಿಗೆ ಪ್ರಾಂಶುಪಾಲರಾಗಿ 2015ರಲ್ಲಿ ವೃತ್ತಿಯಿಂದ ನಿವೃತ್ತಿ ಹೊಂದಿರುತ್ತಾರೆ. ತಮ್ಮ ವೃತ್ತಿ ಜೀವನದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರುಗಳಾಗಿದ್ದವರು.

ಇವರು ವಿದ್ಯಾರ್ಥಿಗಳನ್ನು ಕೇವಲ ಪಠ್ಯಕ್ಕೆ ಮಾತ್ರ ಸೀಮಿತಗೊಳಿಸದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಕ್ರಿಯಾಶೀಲರಾಗುವಂತೆ ಮುನ್ನಡೆಸಿಕೊಂಡು ಬಂದಿರುತ್ತಾರೆ. ಹಾಗೆಯೇ ವಿದ್ಯಾರ್ಥಿಗಳಲ್ಲಿ ವೈಚಾರಿಕತೆ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ಬಂಡಾಯ ಪ್ರಜ್ಞೆ ಮೂಡಿಸುವಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿರುತ್ತಾರೆ.

ಕಾಲೇಜಿನಲ್ಲಿ ನಡೆಸುವ ಪ್ರತಿಯೊಂದು ಕಾರ್ಯಕ್ರಮಗಳನ್ನು ಪ್ರಾರ್ಥನೆಯ ಮೂಲಕವೇ ಆರಂಭಿಸುವ ಸಾಂಪ್ರದಾಯಿಕ ಮಾದರಿಯನ್ನು ಬದಲಾಯಿಸಿ ‘ಬದುಕಿನ ಗೀತೆ’ಗಳ ಮೂಲಕ ಕಾರ್ಯಕ್ರಮವನ್ನು ಆರಂಭಿಸುವಲ್ಲಿ ಮಹತ್ವದ ಪಾತ್ರವಹಿಸಿರುತ್ತಾರೆ. ಹಾಗೆಯೇ ತಮ್ಮ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಭಾವೇದಿಕೆ ಭಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರವಹಿಸಿರುತ್ತಾರೆ.

ಬಾಲ್ಯದ ದಿನಗಳಿಂದಲೂ ಬಡತನದ ಕಹಿಯುಂಡು ಬೆಳೆದ ಶ್ರೀಯುತ ಸಿ.ಶಿವಲಿಂಗಪ್ಪನವರು ಸಾಮಾಜಿಕ ಅಸಮಾನತೆಯ ವಿರುದ್ಧ ವೈಚಾರಿಕ ದೃಷ್ಟಿಕೋನ ಬೆಳೆಸಿಕೊಂಡವರು. ಕುವೆಂಪು ಹಾಗೂ ಎಡಪಂಥಿಯ ಧೋರಣೆಯುಳ್ಳ ದಲಿತ-ಬಂಡಾಯ ಸಾಹಿತ್ಯ, ಚಳವಳಿಗಳ ಸಂಘಟನಾತ್ಮಕ ನಾಯಕತ್ವ ವಹಿಸಿಕೊಂಡಿದ್ದ ಬರಗೂರು ರಾಮಚಂದ್ರಪ್ಪನವರ ವೈಚಾರಿಕ ಚಿಂತನೆಗಳಿಂದ ಪ್ರಭಾವಿತರಾದ ಇವರು, ಬಂಡಾಯ ಚಳವಳಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ದುಡಿಯುತ್ತ ಬಂದಿದ್ದಾರೆ.

ಚಿತ್ರದುರ್ಗ ಜಿಲ್ಲಾ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿ, ಜಿಲ್ಲೆಯಾದ್ಯಂತ ಬಂಡಾಯದ ಪ್ರಜ್ಞೆಯನ್ನು ಪಸರಿಸುವಲ್ಲಿ ಇವರು ತೋರಿದ ಕ್ರಿಯಾಶೀಲತೆ ವಿಶಿಷ್ಟವಾಗಿದೆ. ತಾವು ಪಡೆದ ಶಿಕ್ಷಣ, ಸಾಹಿತ್ಯದ ಒಡನಾಟದಿಂದ ಪಡೆದುಕೊಂಡ ಸಂವೇದನೆ ಹಾಗೂ ಬಂಡಾಯ ಚಳವಳಿಯ ಪ್ರಭಾವದಿಂದ ಪಡೆದುಕೊಂಡ ವೈಚಾರಿಕ ಪ್ರಜ್ಞೆಯನ್ನು ಸ್ವತಃ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು, ಪ್ರಯೋಗಕ್ಕೂ ಒಳಪಡಿಸಿರುತ್ತಾರೆ.

1985ರಲ್ಲಿ ಇವರು ತಮ್ಮ ವಿವಾಹ ಸಂದರ್ಭದಲ್ಲಿ ಯಾವುದೇ ಪೌರೋಹಿತ್ಯ, ವರದಕ್ಷಿಣೆ, ಆಡಂಬರವಿಲ್ಲದೆ, ಕುವೆಂಪು ಅವರ ಮಂತ್ರ ಮಾಂಗಲ್ಯ ಮತ್ತು ತಾವೇ ಬರೆದ ಬರಹವನ್ನು ವಾಚನ ಮಾಡುವ ಮೂಲಕ ದಾಂಪತ್ಯದ ಬದುಕಿಗೆ ಕಾಲಿಟ್ಟಿದ್ದಾರೆ.
ಶ್ರೀಯುತ ಸಿ.ಶಿವಲಿಂಗಪ್ಪನವರು ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಸಂಚಾಲಕರಾಗಿ ಹಲವಾರು ಮಹತ್ತರವಾದ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.

1990ರಲ್ಲಿ ಚಳ್ಳಕೆರೆಯಲ್ಲಿ ರಾಜ್ಯಮಟ್ಟದ ಬಂಡಾಯ ಸಾಹಿತ್ಯ ಸಮಾವೇಶವನ್ನು ಗುಡಿಹಳ್ಳಿ ನಾಗರಾಜ್, ಎಂ.ಜಯಣ್ಣ, ಎಲ್.ರಮೇಶ್, ಸಿ.ಎಂ.ಮಹಾದೇವ, ಸಿ.ವಿ.ಪಾಟೀಲ್ ಇವರೊಂದಿಗೆ ಆಯೋಜಿಸುವಲ್ಲಿ ಮಹತ್ವದ ಪಾತ್ರವಹಿಸಿರುತ್ತಾರೆ. ಹಾಗೆಯೇ ಹಲವಾರು ಬಂಡಾಯ ಸಾಹಿತಿಗಳನ್ನು ಚಳ್ಳಕೆರೆ ಆಹ್ವಾನಿಸುವ ಮೂಲಕ ರಾಜ್ಯಕ್ಕೆ ಮಾದರಿಯಾದ ನೆಲೆಯಲ್ಲಿ ಬಿ.ಬಿ.ಪಾಟೀಲ್, ಮೀರಾಸಾಬಿಹಳ್ಳಿ ಶಿವಣ್ಣ, ಸಿ.ವೈ.ಶಿವರುದ್ರಪ್ಪ, ಪಿ.ಆರ್.ವೀರಭದ್ರ ನಾಯಕ, ಹೆಚ್.ಎಸ್.ಸಯ್ಯದ್ ಮುಂತಾದ ಸಂಗಾತಿಗಳೊಂದಿಗೆ ಇಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.

ಇವುಗಳಲ್ಲಿ ‘ಬರಗೂರು ರಾಮಚಂದ್ರಪ್ಪನವರ ಬದುಕು-ಬರಹ’ ಎಂಬ ವಿಚಾರ ಗೋಷ್ಠಿಗಳಿಂದ ಆರಂಭಗೊಂಡು, ಬಿ.ಟಿ.ಲಲಿತಾನಾಯಕ್, ಸಾರಾ ಅಬೂಬಕರ್, ಕಾಳೇಗೌಡ ನಾಗವಾರ, ಚಂದ್ರಶೇಖರ್ ಪಾಟೀಲ್ ಮುಂತಾದ ಬಂಡಾಯ ಸಾಹಿತಿಗಳ ತಾತ್ವಿಕ ಧೋರಣೆಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ವಿಶಿಷ್ಟ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ.

ಇವರು ಬಂಡಾಯ ಸಾಹಿತ್ಯ ಸಂಘಟನೆಗೆ ಮಾತ್ರ ಸೀಮಿತವಾಗದೆ, ಹಲವಾರು ದಲಿತ-ಬಂಡಾಯ ಚಳವಳಿ ಮತ್ತು ಹೋರಾಟಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವುಗಳಲ್ಲಿ ಬೆಂಡಿಗೆರೆ ಪ್ರಕರಣ, ಅನಸೂಯಮ್ಮನ ಪ್ರಕರಣ ಹಾಗೂ ಹಲವಾರು ಜೀವಪರ ಹೋರಾಟಗಳಲ್ಲಿ ತಮ್ಮ ಸಹಭಾಗಿತ್ವವನ್ನು ವ್ಯಕ್ತಪಡಿಸಿರುತ್ತಾರೆ.

ಮೈಸೂರು ವಿಶ್ವವಿದ್ಯಾಲಯ, ಮಾನಸ ಗಂಗೋತ್ರಿಯಲ್ಲಿ ಅಧ್ಯಯನ ಮಾಡುವ ಸಂದರ್ಭದಲ್ಲಿಯೇ ಚಿತ್ರದುರ್ಗ ಭಾಗದ ವಿದ್ಯಾರ್ಥಿಗಳೆಲ್ಲ ಸೇರಿಕೊಂಡು ಸ್ಥಾಪಿಸಿಕೊಂಡಿದ್ದ ‘ಮದಕರಿ ಬಳಗ’ದ ಚುನಾವಣೆಗೆ ಸ್ಪರ್ಧಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಹೀಗೆ ಸಂಘಟನೆ ಮತ್ತು ಹೋರಾಟದ ಹವ್ಯಾಸವನ್ನು ರೂಢಿಸಿಕೊಂಡು ಬಂದ ಶ್ರೀಯುತರು ದಲಿತ-ಬಂಡಾಯ ನೆಲೆಯ ಸಂಘಟನೆ, ಚಳವಳಿ ಹಾಗೂ ಹೋರಾಟಗಳ ಮುಖಾಂತರ ಅಸಮಾನತೆ, ಅನ್ಯಾಯ, ದೌರ್ಜನ್ಯದ ವಿರುದ್ಧ ದನಿ ಎತ್ತಿದವರಾಗಿದ್ದಾರೆ.

ನಂತರದ ದಿನಮಾನಗಳಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸೆನೆಟ್ ಚುನಾವಣೆಗೆ ಸ್ಪರ್ಧಿಸಿ ಅತ್ಯಧಿಕ ಮತಗಳಿಂದ ಜಯಶೀಲರಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವಾರು ವಿಶಿಷ್ಟ ಯೋಜನೆಗಳನ್ನು ಅನುಷ್ಠಾನಗೊಳಿಸಿರುತ್ತಾರೆ. ಹಾಗೆಯೇ ಕುವೆಂಪು ವಿಶ್ವವಿದ್ಯಾಲಯ ಕನ್ನಡ ಅಧ್ಯಾಪಕರ ಸಂಘಕ್ಕೆ ಎರಡು ಬಾರಿ ಅಧ್ಯಕ್ಷರಾಗಿ ಹಲವಾರು ಮಹತ್ವದ ಕಾರ್ಯಯೋಜನೆಗಳನ್ನು ರೂಪಿಸಿದ್ದಾರೆ.

ಅಧ್ಯಾಪಕರ ಹಿತಕ್ಕಾಗಿ ಸಂವಿಧಾನಬದ್ಧ ನೆಲೆಯಲ್ಲಿ ಹಲವಾರು ಶಾಂತಿಯುತ ಹೋರಾಟ ಮತ್ತು ಪ್ರತಿಭಟನೆಗಳನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುತ್ತಾರೆ. ಹಾಗೆಯೇ ವಿದ್ಯಾರ್ಥಿಗಳು ಹಾಗೂ ಕನ್ನಡ ಅಧ್ಯಾಪಕರ ಅಭಿರುಚಿಗೆ ತಕ್ಕಂತೆ ಕನ್ನಡ ಭಾಷಾ ಮತ್ತು ಐಚ್ಛಿಕ ಪಠ್ಯಗಳನ್ನು ರೂಪಿಸುವಲ್ಲಿ ಇವರು ತೋರಿದ ಕಾಳಜಿ ಅನನ್ಯವಾದದು.

ಶ್ರೀಯುತರು ಬಾಲ್ಯದ ದಿನಗಳಿಂದಲೇ ರಂಗಕಲೆಗಳಲ್ಲಿ ವಿಶೇಷವಾದ ಆಸಕ್ತಿಯನ್ನು ಮೈಗೂಡಿಸಿಕೊಂಡವರು. ಹೈಸ್ಕೂಲ್ ಹಂತದಲ್ಲಿಯೇ ಮೊದಲ ಬಾರಿಗೆ ‘ಅಣ್ಣ-ತಂಗಿ’ ಎಂಬ ಸಾಮಾಜಿಕ ನಾಟಕದಲ್ಲಿ ತಂಗಿಯ ಪಾತ್ರ ನಿರ್ವಹಿಸುವ ಮೂಲಕ ಪ್ರೇಕ್ಷಕರ ಮನಸೂರೆಗೊಂಡಿದ್ದರು. ಇವರ ಈ ಹವ್ಯಾಸವು ನಿರಂತರವಾಗಿ ಮುಂದುವರೆದುಕೊಂಡು ಬಂದಿತ್ತು. ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಅಧ್ಯಯನ ಮಾಡುವ ಸಂದರ್ಭದಲ್ಲಿ ಪ್ರತಿಯೊಂದು ಕಾರ್ಯಕ್ರಮಗಳಲ್ಲಿಯೂ ಇವರು ನಾಟಕ ಹಾಗೂ ಏಕಪಾತ್ರಾಭಿನಯವನ್ನು ಪ್ರದರ್ಶಿಸುವ ಮೂಲಕ ತಮ್ಮೊಳಗೆ ಅಂತರ್ಗತವಾಗಿದ್ದ ಕಲೆಯನ್ನು ಅಭಿವ್ಯಕ್ತಿಸುತ್ತ ಬಂದವರು.

ಇವರ ಆಂತರ್ಯದಲ್ಲಿ ಮನೆ ಮಾಡಿಕೊಂಡಿದ್ದ ನಟನ ಕಲೆಯು ಇವರನ್ನು ಸಿನಿಮಾ ಕ್ಷೇತ್ರದತ್ತ ಸೆಳೆಯುತಿತ್ತು. ಮಾನಸ ಗಂಗೋತ್ರಿಯಲ್ಲಿ ಅಧ್ಯಯನ ಮಾಡುವ ಸಂದರ್ಭದಲ್ಲಿ ತಮ್ಮ ಸ್ನೇಹಿತರಾದ ಮೆದೆಹಳ್ಳಿ ಶಿವಕುಮಾರ್ ಅವರೊಂದಿಗೆ ಒಮ್ಮೆ ಹೆಸರಾಂತ ಸಿನಿಮಾ ನಿರ್ಮಾಪಕರಾದ ಎಂ.ಪಿ.ಶಂಕರ್ ಅವರನ್ನು ಭೇಟಿ ಮಾಡಿ, ತಮಗೂ ಒಂದು ಅವಕಾಶ ನೀಡುವಂತೆ ವಿನಂತಿಸಿಕೊಂಡಿದ್ದರು. ಆಗ ಎಂ.ಪಿ.ಶಂಕರ್ ಅವರು ಅಲ್ಲಿಯೇ ಇದ್ದ ಉದಯೋನ್ಮುಖ ಸಿನಿಮಾ ನಟರನ್ನು ತೋರಿಸಿ, ಇವರ ಸಂಭಾವನೆ ಕೇವಲ ಒಂದು ಸಾವಿರ ಮಾತ್ರ.

ನೀವು ಇಲ್ಲಿ ಬಂದು ಜೀವನ ಕಟ್ಟಿಕೊಳ್ಳುವುದು ತುಂಬಾ ಕಷ್ಟ ಎಂದು ಬುದ್ಧಿಮಾತು ಹೇಳಿ ಕಳುಹಿಸಿದ್ದರು. ಅಂದಿನಿಂದ ಸಿನಿಮಾ ಜಗತ್ತಿನಿಂದ ದೂರ ಉಳಿದು ವಿದ್ಯಾಭ್ಯಾಸದ ಕಡೆ ತಮ್ಮ ಗಮನವನ್ನು ಕೇಂದ್ರೀಕರಿಸಿ, ಮುಂದೆ ಅಧ್ಯಾಪಕ ವೃತ್ತಿಯಲ್ಲಿಯೇ ಬದುಕನ್ನು ಕಟ್ಟಿಕೊಂಡರು. ಈ ನಡುವೆ ಬರಗೂರು ಮೇಷ್ಟುç ಅವರೊಂದಿಗಿನ ಒಡನಾಟದಿಂದಾಗಿ ಬಂಡಾಯ ಸಾಹಿತ್ಯ ಮತ್ತು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹೀಗಾಗಿ ಇವರ ಬಹುದಿನ ಆಸೆಯನ್ನು ಬರಗೂರು ಮೇಷ್ಟ್ರು ಪೂರೈಸಿದಂತಾಯಿತು.

ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದಲ್ಲಿ ಮೂಡಿಬಂದ ‘ತಾಯಿ’ ಸಿನಿಮಾದಲ್ಲಿ ಮೊದಲ ಬಾರಿಗೆ ಚಿಕ್ಕ ಪಾತ್ರವನ್ನು ನಿರ್ವಹಿಸುವ ಮೂಲಕ ಇವರ ಬಹುದಿನದ ಕನಸು ಈಡೇರಿದಂತಾಯಿತು. ನಂತರ ‘ಶಬರಿ’ ಚಿತ್ರದಲ್ಲಿ ರಾಜಕಾರಣಿಯಾಗಿ, ‘ಜನಪದ’ ಚಿತ್ರದಲ್ಲಿ ಕಲಾವಿದರಾಗಿ, ‘ಭೂತಾಯಿ’ ಚಿತ್ರದಲ್ಲಿ ಎ.ಸಿ.ಪಿ ಅಧಿಕಾರಿಯಾಗಿ ಪಾತ್ರನಿರ್ವಹಿಸಿದ್ದಾರೆ. ಹೀಗೆ ತಮ್ಮ ಆಂತರ್ಯದೊಳಗೆ ಬಹುದಿನಗಳಿಂದ ನೆಲೆಯೂರಿದ್ದ ಸಿನಿಮಾ ಎಂಬ ಮಾಯಲೋಕದ ಕನಸು ಬರಗೂರು ಮೇಷ್ಟ್ರು ಮೂಲಕ ನೆರವೇರಿತು.

ಈ ಮೂಲಕ ಕನ್ನಡದ ಹೆಸರಾಂತ ನಟರಾದ ಕುಮಾರ್ ಗೋವಿಂದ್, ಶ್ರೀನಿವಾಸ್‌ಮೂರ್ತಿ, ಕಿಶೋರ್, ಸುಧಾರಾಣಿ, ರಾಧಿಕಾ, ಅನುಶ್ರೀ ಮುಂತಾದ ನಟರೊಂದಿಗೆ ಬಣ್ಣದ ಲೋಕದ ಅನುಭವವನ್ನು ಪಡೆದುಕೊಂಡರು.
ಶ್ರೀಯುತ ಸಿ.ಶಿವಲಿಂಗಪ್ಪನವರು ತಮ್ಮ ಪದವಿ ಶಿಕ್ಷಣದ ಹಂತದಿಂದಲೂ ಸಾಹಿತ್ಯಲ್ಲಿ ವಿಶೇಷವಾದ ಆಸಕ್ತಿಯನ್ನು ಬೆಳೆಸಿಕೊಂಡವರು. ಇಲ್ಲಿನ ಗುರುಗಳಾದ ಬಿ.ಬಿ.ಪಾಟೀಲ್, ಮೀರಾಸಾಬಿಹಳ್ಳಿ ಶಿವಣ್ಣ ಹಾಗೂ ಬಿ.ಪಿ.ವೀರೇಂದ್ರಕುಮಾರ್ ಅವರಂತಹ ಸಾಹಿತ್ಯಾಸಕ್ತ ಅಧ್ಯಾಪಕರ ತತ್ವ-ಸಿದ್ಧಾಂತಗಳಿಂದ ಪ್ರಭಾವಿತರಾಗಿ ಪದವಿ ಹಂತದಲ್ಲಿಯೇ ಕವಿತೆಗಳನ್ನು ಬರೆಯುವ ಹವ್ಯಾಸವನ್ನು ರೂಢಿಸಿಕೊಂಡವರು.

ನಂತರ ಸ್ನಾತಕೋತ್ತರ ಪದವಿಯ ಅಧ್ಯಯನದ ಸಂದರ್ಭದಲ್ಲಿ ನಾಡಿನ ಹಲವಾರು ಸಾಹಿತಿಗಳು ಮತ್ತು ಆಪ್ತ ಸ್ನೇಹಿತರ ಒಡನಾಟದಿಂದಾಗಿ ಇದು ಮತ್ತಷ್ಟು ಗಟ್ಟಿಕೊಂಡು ಸಾಹಿತ್ಯ ಕೃತಿಗಳ ವಿಮರ್ಶೆ ಮತ್ತು ತಮ್ಮ ಸುತ್ತಮುತ್ತಲಿನ ವಿದ್ಯಮಾನಗಳ ಕುರಿತು ಲೇಖನ ಬರೆಯುವ ಹವ್ಯಾಸವನ್ನು ರೂಢಿಸಿಕೊಂಡರು. 1988ರ ಸುಮಾರಿಗೆ ನಾಡಿನಲ್ಲಿ ಬರಗಾಲ ಬಂದು ಜನಜೀವನ ತುಂಬ ಸಂಕಷ್ಟಕ್ಕೆ ಒಳಗಾಗಿತ್ತು.

ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಬರಗಾಲದ ತಲ್ಲಣಗಳನ್ನು ಅಭಿವ್ಯಕ್ತಿಸುವ ನೆಲೆಯಲ್ಲಿ ನಾಡಿನ ವಿವಿಧ ಭಾಗದ ಸಾಹಿತಿಗಳಿಂದ ಕವಿತೆಗಳನ್ನು ಸಂಪಾದಿಸಿ ‘ಬರ’ ಎಂಬ ಕವನ ಸಂಕಲನವನ್ನು ಕನ್ನಡ ಸಾರಸ್ವತ ಲೋಕಕ್ಕೆ ಸಮರ್ಪಿಸಿದ್ದಾರೆ. ಇದರಲ್ಲಿ ಕನ್ನಡ ನಾಡಿನ ಹೆಸರಾಂತ ಮೂವತ್ತೊಂಭತ್ತು ಪ್ರಗತಿಪರ ಚಿಂತಕರ ಕವಿತೆಗಳನ್ನು ಸಂಗ್ರಹಿಸಲಾಗಿದೆ. ‘ಬರ’ ಎಂಬುದು ವಿಶೇಷವಾಗಿ ಶೋಷಿತರ ಬದುಕಿಗೆ ಅತ್ಯಂತ ಅಪಾಯಕಾರಿಯಾದದ್ದು. ಶ್ರಮಿಕನ ಬದುಕನ್ನು ತಿಂದು ಹಾಕುವ ಮಹಾಮಾರಿಯಾದ ಬರವನ್ನು ಕುರಿತು ಪ್ರಗತಿಪರ ಚಿಂತಕರು ವ್ಯಕ್ತಪಡಿಸಿರುವ ಜೀವಪರ ಆಶಯಗಳು ಇಲ್ಲಿನ ಕವಿತೆಗಳ ಮೂಲಕ ಅಭಿವ್ಯಕ್ತವಾಗಿವೆ.

ಈ ಕಾರಣದಿಂದಾಗಿ ಈ ಕವನ ಸಂಕಲನವು ಮೌಲ್ಯಯುತವಾಗಿದೆ. ನಂತರ 1998ರಲ್ಲಿ ‘ಆಷಾಡದ ಮುಗಿಲು’ ಎಂಬ ಕವನ ಸಂಕಲನವನ್ನು ಪ್ರಕಟಿಸಿರುತ್ತಾರೆ. ಇದು ಶಿವಲಿಂಗಪ್ಪನವರ ಸ್ವರಚಿತ ಕವನ ಸಂಕಲನವಾಗಿದೆ. ಇದರಲ್ಲಿ ಒಟ್ಟು ಮೂವತೈದು ಕವನಗಳಿವೆ. ಇಲ್ಲಿನ ಬಹುತೇಕ ಕವಿತೆಗಳು ಬಂಡಾಯದ ಸೈದ್ಧಾಂತಿಕತೆಯಿಂದ ಕೂಡಿವೆ. ಇದರಲ್ಲಿ ವಿಶೇಷವಾಗಿ ‘ಕಾಲ ಹಂಡಿ’ ಎಂಬ ಕವಿತೆಯು ಸದಾ ಹಸಿವಿಗಾಗಿ ಪರಿತಪಿಸುವ ಬಿಹಾರದ ಕಾಲ ಹಂಡಿಯ ಕುರಿತಾಗಿ ಜೀವಪರ ನಿಲುವುಗಳನ್ನು ವ್ಯಕ್ತಪಡಿಸುತ್ತದೆ.

‘ಬಿರುಗಾಳಿ’ ಎಂಬ ಕವಿತೆಯು ಪಶ್ಚಿಮ ಬಂಗಾಳದಲ್ಲಿ ಅಪ್ಪಳಿಸಿದ ಬಿರುಗಾಳಿಗೆ ತತ್ತರಿಸಿದ ಜೀವಗಳ ಕುರಿತು ಮಿಡಿಯುತ್ತದೆ. ಹಾಗೆಯೇ ‘ತಿಪಟೂರಿನ ಶಶಿಕಲಾ’ ಎಂಬ ಕವಿತೆಯು ಗಂಡನ ಕ್ರೌರ್ಯಕ್ಕೆ ಬೆಂದು ಬಲಿಯಾದ ಶಶಿಕಲಾ ಎಂಬ ಮಹಿಳೆಯ ಸಂವೇದನೆಗಳನ್ನು ಜೀವಪರ ನೆಲೆಯಲ್ಲಿ ಪ್ರತಿಪಾದಿಸುತ್ತದೆ. ಬಂಡಾಯದ ಗರಡಿಯೊಳಗೆ ಪಳಗಿದ ಲೇಖಕರು ತಮ್ಮ ಕವಿತೆಗಳ ಮೂಲಕ ತಮ್ಮ ಬಂಡಾಯದ ಧೋರಣೆಗಳನ್ನು ಅಭಿವ್ಯಕ್ತಿಸಿದ್ದಾರೆ. 2009ರಲ್ಲಿ ‘ಸಹಸ್ಪಂದನ’ ಎಂಬ ವಿಮರ್ಶಾ ಲೇಖನ ಸಂಕಲನವನ್ನು ಪ್ರಕಟಿಸಿದ್ದಾರೆ. ಇದರಲ್ಲಿ ಒಟ್ಟು ಹನ್ನೆರಡು ಲೇಖನಗಳಿದ್ದು, ಇವುಗಳು ಚಿತ್ರದುರ್ಗ ಜಿಲ್ಲೆಯ ಪ್ರಾಚೀನತೆ, ಕನ್ನಡ ಸಾಹಿತ್ಯ ಹಾಗೂ ವೈಚಾರಿಕ ಚಿಂತನೆಗಳಿಂದ ಕೂಡಿವೆ. 2020ರಲ್ಲಿ ‘ಒಳದನಿ’ ಎಂಬ ಲೇಖನಗಳ ಸಂಕಲನ ಕೃತಿಯನ್ನು ಪ್ರಕಟಿಸಿರುತ್ತಾರೆ.

ಪ್ರಸ್ತುತ ಕೃತಿಯಲ್ಲಿ ಒಟ್ಟು ಇಪ್ಪತ್ತು ಲೇಖನಗಳಿದ್ದು, ಜಾನಪದ, ಸಮಕಾಲೀನ ವಿದ್ಯಮಾನ, ವೈಚಾರಿಕ ಚಿಂತನೆ ಹಾಗೂ ರೇಡಿಯೊ ಭಾಷಣಗಳಿಂದ ಕೂಡಿದ ಲೇಖನಗಳು ಇಲ್ಲಿ ವಿಶೇಷವಾಗಿವೆ. ಜಾನಪದ ವಿಷಯದಲ್ಲಿ ವಿಶೇಷವಾದ ಆಸಕ್ತಿಯನ್ನು ಹೊಂದಿರುವ ಇವರು ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಶ್ರೀಕಂಠ ಕೂಡಿಗೆ ಅವರ ಮಾರ್ಗದರ್ಶನದಲ್ಲಿ ‘ಕುಂಚಟಿಗ ಸಾಂಸ್ಕೃತಿಕ ವೀರರು- ಒಂದು ಜಾನಪದೀಯ ಅಧ್ಯಯನ’ ಎಂಬ ಮಹಾಪ್ರಬಂಧವನ್ನು ಸಲ್ಲಿಸಿ2006 ರಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿರುತ್ತಾರೆ.

ಶ್ರೀಯುತರ ಸಾಹಿತ್ಯ ಸೇವೆ ಹಾಗೂ ಸಮಸಮಾಜಕ್ಕಾಗಿ ಸಂಘಟನೆ ಮತ್ತು ಚಳವಳಿಗಳ ಮೂಲಕ ಅಭಿವ್ಯಕ್ತಿಸಿದ ಹೋರಾಟವನ್ನು ಗುರುತಿಸಿ ಹಲವಾರು ಪ್ರಶಸ್ತಿ, ಪುರಸ್ಕಾರ, ಗೌರವಗಳು ಇವರ ಮುಡಿಗೇರಿವೆ. ಅವುಗಳೆಂದರೆ; 2010ರಲ್ಲಿ ಚಿತ್ರದುರ್ಗ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, 2018ರಲ್ಲಿ ರಾಜ್ಯಮಟ್ಟದ ‘ಕನಕ ಪ್ರಶಸ್ತಿ’ ಪ್ರಮುಖವಾಗಿವೆ. ಹಾಗೆಯೇ ಇವರ ಸಾಹಿತ್ಯ ಸೇವೆಗಾಗಿ2013ರಲ್ಲಿ ನಡೆದ ಚಳ್ಳಕೆರೆ ತಾಲ್ಲೂಕಿನ ‘ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಗೌರವ’ ಲಭಿಸಿದೆ.

ಹೀಗೆ ಹಲವಾರು ಸಾಹಿತ್ಯ ಮತ್ತು ಸಂಘಟನಾತ್ಮಕ ಚಟುವಟಿಕೆಗಳ ಮೂಲಕ ಸದಾ ಕ್ರಿಯಾಶೀಲರಾದ ಶ್ರೀಯುತರು ಸಮತ ಭಾರತಕ್ಕಾಗಿ ಬಂಡಾಯದ ನೆಲೆಯಲ್ಲಿ ಹೋರಾಟವನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಇಂದು ವೃತ್ತಿ ಬದುಕಿನಿಂದ ನಿವೃತ್ತಿ ಪಡೆದುಕೊಂಡರು ಕೂಡ ತಮ್ಮ ಕ್ರಿಯಾಶೀಲ ಚಟುವಟಿಕೆಗಳನ್ನು ನಿಲ್ಲಿಸದೆ, ಸಮಾನ ಮನಸ್ಕರೊಂದಿಗೆ ಬೆರೆತು ಮೊದಲಿಗಿಂತಲೂ ಚುರುಕಾಗಿ ಸಾಹಿತ್ಯ ಮತ್ತು ಸಂಘಟನಾತ್ಮಕ ಕಾರ್ಯಗಳಲ್ಲಿ ತಲ್ಲೀನರಾಗಿದ್ದಾರೆ. ಶ್ರೀಯುತರಿಂದ ಯುವ ಸಮುದಾಯವನ್ನು ಜಾಗೃತಗೊಳಿಸುವಂತಹ ಬಂಡಾಯದ ದನಿ ಮತ್ತಷ್ಟು ಗಟ್ಟಿಯಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇವೆ.

-ಡಾ.ಕೆ.ಎ.ಓಬಳೇಶ್ ಮೊ: 9591420216

ಸುದ್ದಿದಿನ|ವಾಟ್ಸಾಪ್|9980346243

ದಿನದ ಸುದ್ದಿ

ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ; ಒಂದು ಚಿಂತನೆ

Published

on

  • ಮಹಾಂತೇಶ್.ಬಿ.ನಿಟ್ಟೂರು, ದಾವಣಗೆರೆ

ನಿಜ ಶರಣ ಶ್ರೀ ಅಂಬಿಗರ ಚೌಡಯ್ಯನವರ ಜೀವಿತ ಕಾಲ 12 ನೇ ಶತಮಾನದ ಬಸವಾದಿ ಶರಣರ ಕಾಲದಲ್ಲೇ ಇತ್ತು ಎಂಬುದು ಇತಿಹಾಸಕಾರರ ಸಂಶೋಧನೆಯಿಂದ ತಿಳಿದು ಬರುತ್ತದೆ. ಅವರ ಹುಟ್ಟೂರು ಹಾವೇರಿ ಜಿಲ್ಲೆಯ ಆಗಿನ ಶಿವಪುರ, ಈಗಿನ ಚೌಡಯ್ಯದಾನಪುರ. ಅವರ ತಂದೆಯ ಹೆಸರು ಶ್ರೀ ವಿರೂಪಾಕ್ಷ, ತಾಯಿಯ ಹೆಸರು ಪಂಪಾಂಭಿಕೆ, ಹೆಂಡತಿಯ ಹೆಸರು ಸುಲೋಚನಾ ಹಾಗೂ ಮಗನ ಹೆಸರು ಪುರವಂತ.

ಅಂಬಿಗ ವೃತ್ತಿಯ ಚೌಡಯ್ಯನವರು ಅಲ್ಲಮ ಪ್ರಭು ಮತ್ತು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಇದ್ದ ಒಬ್ಬ ಕ್ರಾಂತಿಕಾರಿ, ದಿಟ್ಟ, ನೇರ, ನಿಷ್ಠುರ ನುಡಿಯ ವಚನಕಾರ. ಕಲ್ಯಾಣ ಕ್ರಾಂತಿಯ ನಂತರ ಇವರು ತಮ್ಮ ವಚನಗಳ ಗಂಟನ್ನು ಹೊತ್ತು ಉಳವಿಗೆ ನಂತರ ತಮ್ಮ ಗ್ರಾಮವಾದ ತುಂಗಭದ್ರಾ ನದಿಯ ದಡದ ಮೇಲಿರುವ ಶಿವಪುರಕ್ಕೆ ಬಂದು ದೋಣಿ ನಡೆಸುವ ವೃತ್ತಿಯಲ್ಲಿ ನಿರತರಾಗಿ ವಚನ ರಚನೆ ಮಾಡಿರುವುದು ತಿಳಿದು ಬರುತ್ತದೆ.

ಚೌಡಯ್ಯನವರು ತಮ್ಮ ಜೀವಿತಾವಧಿಯಲ್ಲಿ ಅನೇಕ ಪವಾಡಗಳನ್ನು ಮಾಡಿರುತ್ತಾರೆ. ಗಿಡಮೂಲಿಕೆ ಔಷಧಿಗಳಿಂದ ಕ್ಷಯ ರೋಗ, ಕುಷ್ಠರೋಗ ಗುಣಪಡಿಸುವುದು, ಹಾವು ಕಚ್ಚಿದವರನ್ನು

ಬದುಕಿಸುವುದು ಇತ್ಯಾದಿ..

ಒಮ್ಮೆ ಗುತ್ತಲದ ಅರಸನು ಬೇಟೆಗಾಗಿ ಈ ಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ, ಆತನ ಸೇನಾಧಿಪತಿಯು ಹಾವು ಕಚ್ಚಿ ಮೃತಪಟ್ಟನು. ಇದರಿಂದಾಗಿ ಅರಸನಿಗೆ ಅತೀವ ದುಃಖವುಂಟಾಗಿ ರೋಧಿಸತೊಡಗಿದನು. ಆಗ ಆತನ ಸೈನಿಕನೊಬ್ಬನು ಶ್ರೀ ಚೌಡಯ್ಯನವರ ಪವಾಡಗಳ ಬಗ್ಗೆ ವಿವರಿಸಿ ಹೇಳಲಾಗಿ, ಅರಸನು ತನ್ನ ಮೃತ ಸೇನಾಧಿಪತಿಯ ಶರೀರವನ್ನು ಚೌಡಯ್ಯನವರಲ್ಲಿಗೆ ತಂದು ಆತನನ್ನು ಬದುಕಿಸುವಂತೆ ಕೇಳಿಕೊಂಡರು, ಆಗ ಚೌಡಯ್ಯನವರು ಸೇನಾಧಿಪತಿಯನ್ನು ಬದುಕಿಸುತ್ತಾರೆ. ಇದರಿಂದ ಸಂತುಷ್ಟನಾದ ಅರಸನು ಶಿವಪುರದ ಸುತ್ತಲಿನ ಪೂರ್ವ – ಪಶ್ಚಿಮಕ್ಕೆ 14 ಮೈಲು ಹಾಗೂ ಉತ್ತರ – ದಕ್ಷಿಣಕ್ಕೆ 7 ಮೈಲು ಸುತ್ತಳತೆಯ ಭೂಮಿಯನ್ನು ಚೌಡಯ್ಯನವರಿಗೆ ದಾನವಾಗಿ ನೀಡಿದನು.

ಆದರೆ ಚೌಡಯ್ಯನರು ವೈರಾಗ್ಯಶಾಲಿಯು, ಲೌಕಿಕದಲ್ಲಿ ನಿರಾಸಕ್ತಿ ಹೊಂದಿದವರು ಆಗಿದ್ದರಿಂದ, ಅರಸನು ಕೊಡಮಾಡಿದ್ದ ಸಂಪೂರ್ಣ ಜಮೀನನ್ನು ತನ್ನ ಗುರುಗಳಾದ ಶ್ರೀ ಶಿವದೇವರಿಗೆ ದಾನವಾಗಿ ನೀಡಿದರು ಎಂಬ ಉಲ್ಲೇಖವಿದೆ. ಅಂದಿನಿಂದ ಶಿವಪುರ ಗ್ರಾಮಕ್ಕೆ ‘ಚೌಡಯ್ಯದಾನಪುರ’ ಎಂದು ಹೆಸರು ಬರುತ್ತದೆ. ಮುಂದೆ ಚೌಡಯ್ಯನರು ಅಲ್ಲಿ ದೇಹ ತ್ಯಾಗ ಮಾಡಿದ್ದರಿಂದ ತುಂಗಭದ್ರಾ ನದಿಯ ದಡದಲ್ಲಿ ಈಗಲೂ ಚೌಡಯ್ಯನವರ ಸಮಾಧಿ ಗದ್ದುಗೆ ಇದೆ.

ಭ್ರಮಾಲೋಕದಲ್ಲಿ ವಿಹರಿಸುತ್ತಾ ಕುಳಿತ, ಆಡಂಬರದಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಮಂದಿಯ ಕಪಾಳಕ್ಕೆ ಹೊಡೆದು ಎಚ್ಚರಿಸುವಂತಿವೆ ಚೌಡಯ್ಯನವರ ವಚನಗಳು. ಧಾರ್ಮಿಕ ಮೂಢನಂಬಿಕೆ ಬಿತ್ತುವವರಿಗೆ, ಸ್ವಾರ್ಥಿಗಳಾಗಿ ಬದುಕುವವರಿಗೆ, ಮುಖವಾಡ ಹಾಕಿ ಮಂಕು ಬೂದಿ ಎರಚುವವರಿಗೆ ಸಿಂಹ ಸ್ವಪ್ನದಂತೆ ಬೆಚ್ಚಿ ಬೀಳಿಸುತ್ತವೆ ನಿಜ ಶರಣ ಅಂಬಿಗರ ಚೌಡಯ್ಯನವರ ವಚನಗಳು. ಇದಕ್ಕೆ ತಾತ್ಪೂರ್ತಿಕವಾಗಿ ಕೆಲವು ವಚನಗಳು ಈ ಕೆಳಗಿನಂತಿವೆ;

“ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು/ನಂಬಿದರೆ ಒಂದೇ ಹುಟ್ಟಲಿ/ಕಡೆಯ ಹಾಯಿಸುವೆನೆಂದಾತನಂಬಿಗರ/ಚೌಡಯ್ಯ ನಿಜಶರಣನು”

ಈ ಮೇಲಿನ ವಚನ ಶ್ರೀ ಅಂಬಿಗರ ಚೌಡಯ್ಯನವರ ಸ್ವಾಭಿಮಾನ, ಧೈರ್ಯ, ನೇರ, ನಿರ್ಭಿಡೆಯ ವ್ಯಕ್ತಿತ್ವದ ಪ್ರತೀಕವಾಗಿದೆ.

ಹನ್ನೆರಡನೇ ಶತಮಾನದ ಸಂದರ್ಭದಲ್ಲಿ ಜಾತಿ ಮತ್ತು ವರ್ಗ ವ್ಯವಸ್ಥೆ ಎಷ್ಟರಮಟ್ಟಿಗಿತ್ತು ಎಂಬುದನ್ನು ಈ ವಚನ ಸೂಚಿಸುತ್ತದೆ. ಅಂತಹ ವಿಚಿತ್ರ, ವಿಕ್ಷಿಪ್ತ ಸನ್ನಿವೇಶದಲ್ಲಿ ಬಸವಾದಿ ಶರಣರು ಜಾತೀಯತೆ, ವರ್ಗ – ವರ್ಣ ವ್ಯವಸ್ಥೆಯ ವಿರುದ್ಧ ಬೃಹತ್ ಚಳುವಳಿಯನ್ನು ಕೈಗೊಂಡಾಗ ಅಂಬಿಗರ ಚೌಡಯ್ಯನವರ ಸತ್ಯನಿಷ್ಠೆ, ಪ್ರಾಮಾಣಿಕತೆಯ ವಚನಗಳು ಪ್ರಖರವಾಗಿ ಕಾಣಿಸುತ್ತವೆ. ಕೆಲವು ಢೋಂಗಿ ಭಕ್ತರಿಗೆ, ಕಪಟ ಸನ್ಯಾಸಿಗಳಿಗೆ ತನ್ನ ಖಾರವಾದ ವಚನಗಳ ಮೂಲಕ ಚುರುಕು ಮುಟ್ಟಿಸುತ್ತಾರೆ.

ಆಡಂಬರ ಮತ್ತು ದುರಾಸೆಯ ಜನರ ಮನಸ್ಥಿತಿ ಕಂಡು ಕೆಂಡಾಮಂಡಲವಾಗಿ ಪ್ರಸ್ತುತ ಪಡಿಸಿದ ಒಂದು ವಚನ ಇಂತಿದೆ;

“ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಕಾಳೋಗರನ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹಾರುವ ಪಕ್ಷಿಯನು/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೆಬ್ಬುಲಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೊಯ್ವ ಹೆಮ್ಮಾರಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಬರುವ ಉರಿ ಬಾಣವನು/ಇಂತೆಲ್ಲವನು ಒಂದೇ ಮಂತ್ರದಲ್ಲಿ ನಿಲ್ಲಿಸಬಹುದು;/ಲೋಭವೆಂಬ ಗ್ರಹಣ ಹಿಡಿದವರ ಏತರಿಂದಲೂ/ನಿಲ್ಲಿಸಲಾಗದು/ಈ ಲೋಭಕ್ಕೆ ದಾರಿದ್ರ್ಯವೇ ಔಷಧವು;/ಹೇಳಿದರೆ ಕೇಳರು, ತಾವು ತಿಳಿಯರು/ಶಾಸ್ತ್ರವ ನೋಡರು, ಭಕ್ತಿಯ ಹಿಡಿಯರು/ಇಂತಹ ಗೊಡ್ಡು ಮೂಳ ಹೊಲೆಯರಿಗೆ/ಕರ್ಮವೆಂಬ ಶರದ್ಧಿಯಲ್ಲಿ ಬಿದ್ದು ಹೊರಳಾಡುವುದೇ/ಸತ್ಯವೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು”

ಸಂಸಾರದ ಜಂಜಾಟದಲ್ಲಿ ಬಿದ್ದು ಒದ್ದಾಡುತ್ತಾ ಶಿವನನ್ನು ಮರೆತು ಹತ್ತು ಹಲವು ಚಿಂತೆಯಲ್ಲಿ ಮುಳುಗಿರುವ ಶವ ಮುಖದ ಜನರ ಸ್ಥಿತಿ-ಗತಿಯನ್ನು ಅರ್ಥಗರ್ಭಿತವಾಗಿ ಸಾದರಪಡಿಸುವ ಒಂದು ವಚನ ಇಂತಿದೆ;

“ಬಡತನಕೆ ಉಂಬುವ ಚಿಂತೆ/ಉಣಲಾದಡೆ ಉಡುವ ಚಿಂತೆ/ಉಡಲಾದಡೆ ಇಡುವ ಚಿಂತೆ/ಇಡಲಾದಡೆ ಹೆಂಡಿರ ಚಿಂತೆ/ಹೆಂಡಿರಾದರೆ ಮಕ್ಕಳ ಚಿಂತೆ/ಮಕ್ಕಳಾದಡೆ ಬದುಕಿನ ಚಿಂತೆ/ಬದುಕಾದಡೆ ಕೇಡಿನ ಚಿಂತೆ/ಕೇಡಾದಡೆ ಮರಣದ ಚಿಂತೆ/ಇಂತೀ ಹಲವು ಚಿಂತೆಯಲ್ಲಿಪ್ಪವರ ಕಂಡೆನು/ಶಿವನ ಚಿಂತೆಯಲ್ಲಿದ್ದಾತರೊಬ್ಬರನೂ ಕಾಣೆನೆಂದಾತ/ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು!”

ಸಮಯದ ಸದ್ಬಳಕೆ ಮಾಡಿಕೊಂಡು ಕಾಯಕ ಮಾಡುತ್ತಾ ಶಿವಭಕ್ತರಾಗಿ, ಜೀವನ ಪಾವನವಾಗಿಸುವಂತೆ ಕರೆ ನೀಡುವ ಒಂದು ವಚನ ಇಂತಿದೆ;

“ಗಾಳಿ ಬಿಟ್ಟಾಗ ತೂರಿಕೊಳ್ಳಿರಯ್ಯ/ಗಾಳಿ ನಿಮ್ಮ ಅಧೀನವಲ್ಲ ಕಂಡಯ್ಯ/ನಾಳೆ ತೂರಿಹೆನೆಂದಡಿಲ್ಲ ಕಂಡಯ್ಯ/ಶಿವಶರಣೆ ಎಂಬುದೊಂದು ಗಾಳಿ ಬಿಟ್ಟಲ್ಲಿ/ಬೇಗ ತೂರೆಂದನಂಬಿಗರ ಚೌಡಯ್ಯ”

ಕಾವಿ ಬಟ್ಟೆ ತೊಟ್ಟು, ಭಿಕ್ಷೆಗಾಗಿ ಜೋಳಿಗೆ ಹಾಕಿದವರೆಲ್ಲರೂ ಜಂಗಮರು, ಗುರುಗಳಾಗಲಾರರು ಎಂಬುದನ್ನು ವಿಡಂಬಿಸುವ ಒಂದು ವಚನ ಇಂತಿದೆ;

“ಕಂಥೆ ತೊಟ್ಟವ ಗುರುವಲ್ಲ/ಕಾವಿ ಹೊದ್ದವ ಜಂಗಮನಲ್ಲ/ಶೀಲ ಕಟ್ಟಿದವ ಶಿವಭಕ್ತನಲ್ಲ/ನೀರು ತೀರ್ಥವಲ್ಲ/ಕೂಳು ಪ್ರಸಾದವಲ್ಲ/ಹೌದೆಂಬವನ ಬಾಯ ಮೇಲೆ/ಅರ್ಧ ಮಣದ ಪಾದರಕ್ಷೆಯ ತೆಗೆದುಕೊಂಡು/ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ/ಟೊಕ ಟೊಕನೆ ಹೊಡೆ ಎಂದಾತ/ನಮ್ಮ ಅಂಬಿಗರ ಚೌಡಯ್ಯ”

ಹೀಗೆ ಬಸವಾದಿ ಶರಣರ ಸಮಾಜ ಸುಧಾರಣಾ ಚಳವಳಿಯಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಮುಡುಪಾಗಿಟ್ಟ ಶ್ರೀ ಅಂಬಿಗರ ಚೌಡಯ್ಯನವರು ತಮ್ಮ ಬದುಕಿನ ನೀತಿಯಿಂದ, ನಿಷ್ಠೆಯಿಂದ, ತೀಕ್ಷ್ಣ ಖಂಡನೆಯ ಬಂಡಾಯ ವಚನಗಳಿಂದ ಗಮನ ಸೆಳೆದು, ಅವರು ರಚಿಸಿದ ವಚನಗಳಿಗೆ ತಮ್ಮ ಹೆಸರನ್ನೇ ಅಂಕಿತವನ್ನಾಗಿಟ್ಟಿರುವದು ವಿಶೇಷವಾಗಿದೆ. ಸಮಾಜದ ಕೊಳೆಯನ್ನು ತೊಳೆಯುವ ನಿಟ್ಟಿನಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ಎದ್ದು ಕಾಣುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

Published

on

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.

ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.

ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.

ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.

ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.

ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.

ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.

ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.

ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನೆಲದನಿ

ಮ್ಯಾಸ ನಾಯಕ ಬುಡಕಟ್ಟಿನಲ್ಲಿ ದೂಲಿ ಹಬ್ಬದ ಆಚರಣೆ

Published

on

  • ಡಾ. ಸಿ ಬಿ ಅನ್ನಪೂರ್ಣ ಜೋಗೇಶ್‌, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ.

ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ. ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ.

ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು.

ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ. ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ.

ಪ್ರಕೃತಿಯ ವಿಶಿಷ್ಟ್ಯತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತನ್ನನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಲೇಖಕರು : ಡಾ. ಸಿ ಬಿ ಅನ್ನಪೂರ್ಣ ಜೋಗೇಶ್‌, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ.

ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ. ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.

ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ. ಮ್ಯಾಸ ಭಾಷೆಯಲ್ಲಿ ಇದನ್ನು ‘ದೂಲಿ ಪಂಡುವ’ ಎಂದು ಕರೆಯಲಾಗುತ್ತದೆ.

ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು
ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ. ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ.

ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ. ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ. ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ.

ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಗೆಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ. ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ.

ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ.ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ.

ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿAದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬAಧ ಮುಖ್ಯವಾಗಿರುತ್ತದೆ.ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending