Connect with us

ಅಂತರಂಗ

ಅರಿಮೆಯ ಅರಿವಿರಲಿ-56 : ಸಸಿಗವಚ ಮತ್ತು ಶಿಶುಗವಚ

Published

on

Art by David Roberts
  • ಯೋಗೇಶ್ ಮಾಸ್ಟರ್

ದೇಶಸೇವೆ ಎನ್ನುವುದಾದರೆ, ರಾಷ್ಟ್ರನಿರ್ಮಾಣ ಎನ್ನುವುದಾದರೆ, ನಾಗರಿಕ ಸಮಾಜ ಸಂರಚನೆ ಎನ್ನುವುದಾದರೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸುವುದು. ಈ ದಿಕ್ಕಿನಲ್ಲಿ ಶಿಕ್ಷಕರಿಗೆ ಒಂದು ಅಪೂರ್ವವಾದ ಅವಕಾಶವಿದೆ. ನಾಗರಿಕ ಸಮಾಜದ, ಸದೃಢ ರಾಷ್ಟ್ರದ ನಿರ್ಮಾಣದ ಪ್ರಕ್ರಿಯೆಯು ಶಿಕ್ಷಕರಿಂದ ಪ್ರತಿದಿನವೂ ಸದಾ ಆಗುತ್ತಿರುತ್ತದೆ.

ಮಗುವೊಂದರ ಮಗುತನವನ್ನು ಜತನ ಮಾಡುವುದು ಎಂದರೆ ಸಸಿಯೊಂದು ನಾನಾ ದಾಳಿಗೆ ಸಿಕ್ಕು ನಾಶವಾಗದಂತೆ ನೋಡಿಕೊಳ್ಳಲು ಸಸಿಗವಚವನ್ನು ನಿರ್ಮಿಸಿದಂತೆ. ಬೃಹತ್ ವೃಕ್ಷವಾಗಿ ಬೆಳೆದುನಿಲ್ಲುವ ಸಾಧ್ಯತೆ ಇರುವ ಸಸಿಯನ್ನು ಯಾವುದೋ ಪಶುವು ಮೇಯದಂತೆ ನೋಡಿಕೊಳ್ಳಬೇಕು, ಗಾಳಿಗೆ, ಮಳೆಗೆ ಸಿಕ್ಕಿ ಬೀಳದಂತೆ ನೋಡಿಕೊಳ್ಳಬೇಕು, ದಾರಿಹೋಕರು, ತುಂಟ ಮಕ್ಕಳು ಎಲೆಗಳನ್ನು ತರಿಯದಂತೆ, ಚಿಗುರುಗಳನ್ನು ಚಿವುಟದಂತೆ ನೋಡಿಕೊಳ್ಳಬೇಕು. ಅದಕ್ಕಾಗಿಯೇ ಒಂದು ಒಳ್ಳೆಯ ಟ್ರೀ ಗಾರ್ಡ್ ಮಾಡಬೇಕು. ಈ ಟ್ರೀಗಾರ್ಡನ್ನು ಸಸಿಗವಚವೆನ್ನುತ್ತೇನೆ.

ಮರದ ಸಸಿ ರೂಪದ ಎಳೆವೆಯ ದಿನಗಳಲ್ಲಿ ಈ ಸಸಿಗವಚ ಬೇಕು. ಒಮ್ಮೆ ಬೇರುಬಿಟ್ಟ ಮೇಲೆ, ಗಟ್ಟಿಯಾಗಿ ನಿಂತ ಮೇಲೆ, ಬೃಹತ್ ವೃಕ್ಷವಾದ ಮೇಲೆ ಅದಕ್ಕೆ ಈ ಸಸಿಗವಚದ ಅಗತ್ಯವಿರುವುದಿಲ್ಲ. ಅಂತೆಯೇ ಮಗುವಿನ ಮಗುತನದ ಜೋಪಾನ ಮಾಡುವ ಹೊಣೆಗಾರಿಕೆ ಪೋಷಕರಿಗೆ, ಶಿಕ್ಷಕರಿಗೆ ಮತ್ತು ಸಮಾಜದ ಯಾವುದೇ ಸದಸ್ಯರಿಗೆ ಇರುವುದು.

ಸಾಧಾರಣ ಮನಸ್ಥಿತಿಯ ಮಕ್ಕಳ ಜೊತೆಜೊತೆಗೆ ಶರೀರದಲ್ಲಿ ನ್ಯೂನ್ಯತೆ ಇರುವಂತಹ ಮಕ್ಕಳು, ಬುದ್ಧಿಮತ್ತೆಯಲ್ಲಿ ಕೊರತೆಯುಳ್ಳವರು, ಮೊಂಡರು, ಹಟಮಾರಿಗಳು, ಪುಕ್ಕಲರು, ಸುಳ್ಳರು, ಮಳ್ಳರು, ದೌರ್ಜನ್ಯಕ್ಕೊಳಗಾಗಿರುವವರು, ಕ್ರೂರಿಗಳು, ದುಷ್ಕರ್ಮಿಗಳು; ಹೀಗೆ ನಾನಾ ಬಗೆಯ ಮಕ್ಕಳೂ ಇರುತ್ತಾರೆ. ಇಂತಹ ಹಲವಾರು ಮನಸ್ಥಿತಿಯ ಅಥವಾ ಮಾನಸಿಕ ಸಮಸ್ಯೆ ಇರುವವರನ್ನು ಅತ್ಯುತ್ತಮ ಪ್ರಜೆಗಳನ್ನಾಗಿ ಅಥವಾ ಪ್ರಖ್ಯಾತ ವಿಜ್ಞಾನಿಯನ್ನಾಗಿ ಅಥವಾ ಜನಪ್ರಿಯ ಮಹಾತ್ಮನನ್ನಾಗಿ ಅಥವಾ ಮಹಾನ್ ಸಂತರನ್ನಾಗಿ ರೂಪಿಸುವ ಕೆಲಸವಲ್ಲ ನಾವು ಶಿಕ್ಷಕರಿಂದ ಅಪೇಕ್ಷಿಸುವುದು.

ನಮ್ಮ ಸಮಾಜವು ಮಹಾತ್ಮರ, ಪ್ರಖ್ಯಾತರ ರೇಸ್ ಟ್ರ್ಯಾಕ್ ಆಗುವುದೇನೂ ಬೇಕಾಗಿಲ್ಲ. ಸಮಾಜದಲ್ಲಿರುವವರೆಲ್ಲಾ ಇಂದು ಮತ್ತು ನಾಳೆ ನೆಮ್ಮದಿಯಿಂದ ಬಾಳಲು ಪೂರಕವಾದ ವಾತಾವರಣವು ನಿರ್ಮಾಣವಾಗಬೇಕು. ಅದಕ್ಕೆ ಎಲ್ಲರಲ್ಲಿ ಇರಬೇಕಾಗಿರುವುದು ಸಹಕಾರದ ಧೋರಣೆ. ಅಷ್ಟರಮಟ್ಟಿಗೆ ಮಾತ್ರ ಕುಟುಂಬದಲ್ಲಿ ಪೆÇೀಷಕರು ಮತ್ತು ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಯೋಚಿಸಬೇಕಾಗಿರುವುದು ಮತ್ತು ಯೋಜಿಸಬೇಕಾಗಿರುವುದು. ಇನ್ನುಳಿದ ಕಿರೀಟಕ್ಕೆ ಗರಿಗಳನ್ನು ಏರಿಸಿಕೊಳ್ಳುವುದು ಬಿಡುವುದು ಅವರ ಬಾಳ್ದಾರಿಯಲ್ಲಿನ ಸಂಭವಗಳಿಗೆ ಬಿಟ್ಟಿದ್ದು.

ಶಿಶುಪೋಷಣೆ ಎಂಬ ತಪಸ್ಸು

ಅದರಲ್ಲೂ ವಿಶೇಷವಾಗಿ ಶಿಕ್ಷಕರಿಗೆ ತಮ್ಮ ತರಗತಿಗಳಲ್ಲಿ ಕೆಲಸ ಮಾಡುವುದೆಂದರದು ತಪಸ್ಸು. ಸದಾ ಧ್ಯಾನನಿರತರಾಗಿರುವಂತೆ. ಜೊತೆಜೊತೆಗೆ ಹಲವು ಮಾದರಿಗಳ ಜೀವಗಳನ್ನು ಸಾಕ್ಷೀಕರಿಸುವಂತಹ ಸಾಕ್ಷಿಪ್ರಜ್ಞೆಯಾಗಿರಬೇಕು. ಮಕ್ಕಳಿದ್ದರೆ ವಾತಾವರಣವು ಸಹಜ ಜೀವಂತಿಕೆಯಿಂದಲೂ, ಲವಲವಿಕೆಯಿಂದಲೂ ತುಂಬಿರುತ್ತದೆ. ಅರಳುತ್ತಿರುವ ಮೊಗ್ಗುಗಳಂತಿರುವ ಆ ಮಕ್ಕಳ ಸುಗಂಧವನ್ನು ಆಘ್ರಾಣಿಸಿಕೊಂಡು, ಅವರ ಮಧುರ ಸಾಮಿಪ್ಯವನ್ನು ಆಸ್ವಾದಿಸಿಕೊಂಡು ಇರಲಾರದಂತಹ ಪರಿಸ್ಥಿತಿಯು ಶಿಕ್ಷಕರಿಗೆ ಸಾಮಾನ್ಯ.

ಮಕ್ಕಳನ್ನು ಗದರಿಸಬೇಕು, ಅವರ ಜಗಳ ಬಿಡಿಸಬೇಕು, ಕಲಿಸುವುದನ್ನು ಕಲಿಯದಿದ್ದರೆ ಬೇರೆಬೇರೆ ಮಾರ್ಗಗಳನ್ನು ಹುಡುಗಬೇಕು, ಅವರನ್ನು ಕ್ರಮದಲ್ಲಿಡಬೇಕು, ಎಚ್ಚರಿಸಬೇಕು, ಬುದ್ಧಿವಾದ ಹೇಳಬೇಕು, ನಿರ್ದೇಶನಗಳನ್ನು ನೀಡಬೇಕು; ಹೀಗೆ ಒಂದೆರಡರಲ್ಲದ ಹಲವು ಕ್ರಿಯೆಗಳನ್ನು ತಮ್ಮ ಅಧಿಕಾರವನ್ನು ಬಳಸಿಕೊಂಡು ಮಾಡುತ್ತಿರಲೇಬೇಕು. ಅವರೆಲ್ಲಾ ತುಂಟತನಗಳನ್ನು, ಚೇಷ್ಟೆಗಳನ್ನು ಶಿಶುಸಹಜವೆಂದು ಬಿಟ್ಟು ನೋಡಿಕೊಂಡಿರಲಾಗುವುದಿಲ್ಲ.

ಶಿಕ್ಷಕರಿಗೆ ಅವರ ಮೇಲಿನ ಅಧಿಕಾರಗಳಿಂದ ಒತ್ತಡವಿರುತ್ತವೆ. ಶಿಕ್ಷಕರು ಮಾಡಲೇಬೇಕಾದ ಕೆಲಸಗಳ ನಿರೀಕ್ಷೆಗಳಿರುತ್ತವೆ. ಏನೇ ಆಗಲಿ ವಿವಿಧ ರೀತಿಯಲ್ಲಿ ವರ್ತಿಸುವ ಮಕ್ಕಳನ್ನು ಕ್ರಮಕ್ಕೆ ತರಲು ಅಥವಾ ಸರಿದಾರಿಗೆ ತರಲು, ಕನಿಷ್ಟಪಕ್ಷ ಅವರ ಮಿತಿಮೀರಿದ ವರ್ತನೆಗಳನ್ನು ತಹಬಂದಿಗೆ ತರಲು ಅವರ ಸಮಸ್ಯೆಯ ಮೂಲದ ಬಗ್ಗೆ ತಿಳುವಳಿಕೆ ಶಿಕ್ಷಕರಿಗೆ ಇರಬೇಕು.

ಒಂದು ಮಗುವು ಕಲಿಕೆಯಲ್ಲಿ ಹಿಂದುಳಿದಿರಲು, ಬಳಲಿದಂತೆ ಕಾಣುತ್ತಿರಲು, ಕಣ್ಣುಗಳಲ್ಲಿ ಗುಳಿ ಬಿದ್ದಿರಲು, ಹಲಗೆಯ ಮೇಲೆ ಬರೆದಿರುವುದನ್ನು ದೂರದಿಂದ ಕಾಣದಿರಲು, ಕರೆದರೆ ಸರಿಯಾಗಿ ಸ್ಪಂದಿಸದಿರಲು, ಬೆರಳುಗಳಿಗೆ ಸೀಸದ ಕಡ್ಡಿಯನ್ನು ಸರಿಯಾಗಿ ಹಿಡಿಯಲು ಸಾಧ್ಯವಿಲ್ಲದಿರಲು, ತಲೆಗೂದಲಲ್ಲಿ ಹೇನು ಬಿದ್ದಿರಲು, ಒರಟಾಗಿ ನಡೆದುಕೊಳ್ಳಲು, ಪುಕ್ಕಲನಾಗಿರಲು, ಮುಖೇಡಿಯಾಗಿರಲು, ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿರಲು, ಬಿಸಿಲಲ್ಲಿ ತಲೆ ಸುತ್ತಿ ಬೀಳಲು; ಹೀಗೆ ನಾನಾ ತರಹದ ಸಮಸ್ಯೆಗಳಿಗೆಲ್ಲಾ ಮನೆಯವರ ಅರಿವಿಗೆ ಬರದಂತಹ ಹಲವು ಕಾರಣಗಳಿರುತ್ತವೆ.

ಆ ಕಾರಣಗಳು ಪೌಷ್ಟಿಕಾಂಶದ ಕೊರತೆ ಇರಬಹುದು, ಮಾನಸಿಕ ಸಮಸ್ಯೆ ಇರಬಹುದು, ನರದೌರ್ಬಲ್ಯವಿರಬಹುದು, ಕೌಟುಂಬಿಕ ಸಮಸ್ಯೆ ಇರಬಹುದು, ಮಗುವಿನ ಮನೆಯ ಆರ್ಥಿಕ ಸಮಸ್ಯೆ ಇರಬಹುದು, ಕುಟುಂಬಗಳಲ್ಲಿ ಸಂಘರ್ಷ ಅಥವಾ ಒಡಕು ಇರಬಹುದು, ತಂದೆ ಇಲ್ಲದ ಮಗುವೋ ಅಥವಾ ತಾಯಿ ಇಲ್ಲದ ಮಗುವೋ ಇರಬಹುದು, ಮನೋರೋಗವಿರಬಹುದು, ಖಾಯಿಲೆ ಇರಬಹುದು, ಅನುವಂಶೀಯವಾಗಿರುವ ಮಾನಸಿಕ ಅಥವಾ ಶಾರೀರಿಕ ಸಮಸ್ಯೆ ಸಮಸ್ಯೆ ಇರಬಹುದು, ಆಪ್ತ ಸಂಬಂಧಗಳ ಕೊರತೆ ಇರಬಹುದು; ಏನೋ ಅಂತೂ ಒಂದು ಬಗೆಯ ಕಾರಣವಂತೂ ಮಗುವಿನ ಕ್ರಿಯೆ, ಪ್ರತಿಕ್ರಿಯೆಗಳಲ್ಲಿ, ವರ್ತನೆಗಳಲ್ಲಿ ಕಾಣುತ್ತಿರುತ್ತದೆ.

ಶಿಕ್ಷಕರಿಗೆ ವೈದ್ಯಕೀಯವಾಗಲಿ, ಮನೋವಿಜ್ಞಾನವಾಗಲಿ, ಸಮಾಜ ವಿಜ್ಞಾನವಾಗಲಿ; ಎಲ್ಲದರ ಮೂಲತತ್ವಗಳಂತೂ ಗೊತ್ತಿರಲೇ ಬೇಕು. ಅದರಲ್ಲೂ ಮಕ್ಕಳಿಗೆ ಸಂಬಂಧಿಸಿರುವಷ್ಟು ಸಾಮಾನ್ಯ ತಿಳುವಳಿಕೆಯಂತೂ ತಿಳಿದಿರಬೇಕು. ಇದರ ಜೊತೆಗೆ ಅವರಿಗೆ ಖಂಡಿತವಾಗಿ ತಿಳಿದಿರಲೇ ಬೇಕಾದ ವಿಷಯವೆಂದರೆ ಮಕ್ಕಳ ಮಾನಸಿಕ ಸ್ಥಿತಿಯನ್ನು ವಿಶ್ಲೇಷಣೆಯನ್ನು ಮಾಡುವ ಕ್ರಮ.

ಒಂದು ವೇಳೆ ಮಗುವಿಗೆ ಶಾರೀರಿಕ ಸಮಸ್ಯೆ ಅಥವಾ ನರದೌರ್ಬಲ್ಯದಂತಹ ಸಮಸ್ಯೆಗಳಿದ್ದರೆ ಪೆÇೀಷಕರಿಗೆ ವಿಷಯ ತಿಳಿಸಿ, ಅವರು ಮತ್ತು ಶಿಕ್ಷಕರು ಒಟ್ಟಾಗಿ ಅದರ ಪರಿಹಾರಕ್ಕಾಗಿ ಕೆಲವು ಮಾರ್ಗಗಳನ್ನು ಕಂಡುಕೊಳ್ಳಬಹುದು. ಆದರೆ ಕೌಟುಂಬಿಕ ಸಮಸ್ಯೆಗಳಿದ್ದರೆ, ಒಡಕು ಕುಟುಂಬಗಳಿದ್ದರೆ, ಆರ್ಥಿಕ ಸಮಸ್ಯೆ ಅಥವಾ ಒಂಟಿ ಪೋಷಕರಾಗಿದ್ದರೆ, ಅಂತಹ ಮಕ್ಕಳ ಪೋಷಕರ ಸ್ಥಿತಿಗತಿಗಳನ್ನು ಶಿಕ್ಷಕರಿಗೆ ಸರಿ ಮಾಡಲು ಆಗುವುದಿಲ್ಲ. ಹಾಗೆ ಮಾಡಲು ಹೋಗುವುದು ಅಪ್ರಾಯೋಗಿಕ ಮತ್ತು ಅವಾಸ್ತವದ ಯೋಚನೆ.

ಆದರೆ, ಮನೆಯಲ್ಲಿ ಮಗುವು ಯಾವುದೇ ಸ್ಥಿತಿಯನ್ನು ಎದುರಿಸುತ್ತಿರಲಿ, ಮಗುವು ತನ್ನ ಸ್ವತಂತ್ರ ಅಸ್ತಿತ್ವಕ್ಕೆ ಬೇಕಾದ ಮಾನಸಿಕ ಸ್ಥೈರ್ಯ, ಸಾಮಾಜಿಕ ಧೈರ್ಯ ಮತ್ತು ಭೌದ್ಧಿಕ ಸಾಮರ್ಥ್ಯವನ್ನು ಪಡೆದುಕೊಂಡು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಂತು ಬದುಕು ನಡೆಸಲು ಶಕ್ತನಾಗಿಸಲು ಖಂಡಿತವಾಗಿ ಸಾಧ್ಯ. ಅದಕ್ಕೆ ಬೇಕಾದ ಎಲ್ಲಾ ಮಾನಸಿಕ ಮತ್ತು ಬೌದ್ಧಿಕ ತರಬೇತಿಗಳನ್ನು ನೀಡುತ್ತಾ ಭಾವನಾತ್ಮಕವಾಗಿ ಸಶಕ್ತನಾಗಿಸಲು ಪ್ರೀತಿಯ ಅನುಭವನ್ನು ಆ ಮಗುವಿಗೆ ನೀಡಬೇಕು. ಇದು ಸಾಧ್ಯ. ಶಿಕ್ಷಕರೊಬ್ಬರು ತಮ್ಮ ಸಂಪರ್ಕಕ್ಕೆ ಬರುವ ಒಂದೊಂದು ಮಗುವಿಗೂ ತಮ್ಮ ಪ್ರೀತಿಯನ್ನು ಮತ್ತು ಬದುಕಿನ ಬಗ್ಗೆ ಆಸಕ್ತಿಯನ್ನು ಹೊಂದುವಂತಹ ಪ್ರೇರಣೆಯನ್ನು ನೀಡಲು ಸಾಧ್ಯ.

ಶಿಕ್ಷಕರೆಂಬ ಊರುಗೋಲು

ನಿಜವಾಗಿಯೂ ನಿರ್ಲಕ್ಷಿತ ಮಕ್ಕಳಿಗೆ ಶಿಕ್ಷಕರು ಅತ್ಯಂತ ಬೇಕಾಗಿರುವಂತಹ ಊರುಗೋಲು, ದಾರಿದೀಪ ಮತ್ತು ಸಸಿಗವಚ (ಟ್ರೀಗಾರ್ಡ್). ಇಂದು ಮತ್ತು ನಾಳಿನ ನೆಮ್ಮದಿಯ ಸಮಾಜವನ್ನು ಬಯಸುವವಾರೇ ಆಗಲಿ ಸಸಿಗವಚದಂತೆ ಶಿಶುಗವಚವಾಗಬೇಕು.

ನಮ್ಮ ಮನೆಯ, ನೆರೆಹೊರೆಯ, ಸಮಾಜದ, ಜಗತ್ತಿನ ಪ್ರತಿಯೊಂದು ಮಗುವಿನ ಮಗುತನ ಜತನವಾಗಿರಬೇಕು. ನೈಸರ್ಗಿಕ ಸಂಪನ್ಮೂಲಗಳನ್ನು ಕಾಪಾಡುವುದು ಹೇಗೆ ಒಂದು ಸಂಕಲಿತ ಹೊಣೆಗಾರಿಕೆಯೋ, ರಾಷ್ಟ್ರದ ಪ್ರಗತಿಯ ಹೊಣೆಗಾರಿಕೆ ಹೇಗೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆಯೋ ಅದೇ ರೀತಿ ಮಗುತನವನ್ನು ಜೋಪಾನ ಮಾಡುವುದೂ ಕೂಡಾ ಪ್ರತಿಯೊಬ್ಬನ ಅತ್ಯುನ್ನತ ಕರ್ತವ್ಯವಾಗಿರುತ್ತದೆ. ಭೂಮಿಯನ್ನು ಸಂರಕ್ಷಿಸುವಲ್ಲಿ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆಯು ಒಬ್ಬರಿಗೆ ಎಷ್ಟರ ಮಟ್ಟಿಗಿನ ಜವಾಬ್ದಾರಿಯಾಗಿರುತ್ತದೆಯೋ, ಮಾನವ ಸಮಾಜದ ಬಾಳ್ವೆಗೆ ಮಗುತನದ ಜತನ ಅಷ್ಟೇ ಗಂಭೀರವಾದ ಜವಾಬ್ದಾರಿಯಾಗಿರುತ್ತದೆ.

ಮಗುತನದ ಜತನಕ್ಕೆ ಶಿಶುಗವಚ

ಮಗುತನದ ಜತನವು ಸಾಮಾನ್ಯ ಕೆಲಸವಲ್ಲ. ಅದು ಸಾಮರ್ಥ್ಯ ಮತ್ತು ಶ್ರದ್ಧೆಯನ್ನು ಬೇಡುವ ಸಾಹಸದ ಕಾರ್ಯ. ಏಕೆಂದರೆ ಮಗುವು ಈ ಮಗುತನದ ಜತನದ ತಪಸ್ಸಿಗೆ ಬದ್ಧವಾಗಿರುವ, ಶಿಶುಗವಚವಾಗಲು ಕಂಕಣ ತೊಟ್ಟಿರುವ ಕೆಲವರ ಕೈಗಳಲ್ಲಿ ಮಾತ್ರ ಹಾದುಹೋಗುವುದಲ್ಲ. ಮಗುವಿನ ಮೇಲೆ ನಾನಾ ರೀತಿಗಳಿಂದ ಪ್ರಭಾವ ಬೀರುವಂತವರು, ತಿಳಿದೋ, ತಿಳಿಯದೆಯೋ ಮಗುವೆಂಬ ಮೆದು ಜೇಡಿಮಣ್ಣಿನ ಮುದ್ದೆಯನ್ನು ತಮ್ಮ ಆಶಯಕ್ಕೆ ತಕ್ಕಂತೆ, ಅರಿವಿಗೆ ತಕ್ಕಂತೆ ರೂಪುಗೊಳಿಸಲು ತಮ್ಮ ಕೈಗಳನ್ನು ಬಳಕೆ ಮಾಡುತ್ತಿರುತ್ತಾರೆ. ಈ ಎಲ್ಲಾ ಪಾಶಗಳಿಂದ ಮಗುವನ್ನು ವಿಮೋಚನಗೊಳಿಸಿಕೊಂಡು ಜಾಣ್ಮೆಯಿಂದ ಮತ್ತು ಎಚ್ಚರಿಕೆಯಿಂದ ಮಗುತನವನ್ನು ಜತನಗೊಳಿಸುವ ಶಿಶುಗವಚಗಳು ನಾವಾಗಬೇಕು.

ಮಕ್ಕಳು ತಮ್ಮ ಪ್ರಭಾವ ಮತ್ತು ಸೆಳೆತಗಳಿಂದ ರೂಪುಗೊಂಡಂತೆ ತಮ್ಮ ವ್ಯಕ್ತಿತ್ವವನ್ನು ಪ್ರದರ್ಶಿಸುತ್ತಿರುತ್ತಾರೆ. ಅವುಗಳಿಗೆಲ್ಲಾ ಶಿಕ್ಷಕರಾದವರು ಅಥವಾ ಶಿಶುಗವಚಗಳು ಪ್ರತಿಕ್ರಿಯಿಸಬಾರದು. ಮಕ್ಕಳಿಗೂ ದೊಡ್ಡವರಿಗಿದ್ದಂತೆ ಪೂರ್ವಾಗ್ರಹಗಳಿರುತ್ತವೆ. ಸಾಂಪ್ರದಾಯಕ ನಡವಳಿಕೆಗಳು ರೂಢಿಯಾಗಿರುತ್ತವೆ. ನಮ್ಮ ನಿರ್ದೇಶನಗಳನ್ನು ಒಮ್ಮಿಂದೊಮ್ಮೆಲೇ ಸ್ವೀಕರಿಸುವುದಿಲ್ಲ. ನಮ್ಮನ್ನು ಅನುಮಾನಿಸುತ್ತಾರೆ. ಅವರ ವಿಕರ್ಷಣ ವರ್ತನೆಗಳು ನಮ್ಮನ್ನು ಅಪಮಾನಿಸುತ್ತವೆ. ಆದರೆ ತಮ್ಮ ಶಿಶುಗವಚದ ಗುಣಮಟ್ಟವನ್ನು ಕಾಯ್ದುಕೊಳ್ಳುವ ಯಾವುದೇ ಹಿರಿಯರು ತಮ್ಮ ಸಾಮರ್ಥ್ಯವು ಮಗುವಿನ ವಿಕರ್ಷಣದಿಂದ ವಿಚಲಿತವಾಗದಂತೆ ಕಾಯ್ದುಕೊಳ್ಳುತ್ತಾರೆ.

ಅದೇ ಬಹಳ ಮುಖ್ಯ. ಬಹಳಷ್ಟು ಜನ ಪೋಷಕರು, ಶಿಕ್ಷಕರು ಮತ್ತು ಶಿಶುಸಂಬಂಧಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ವಿಫಲರಾಗುವುದು ಇಲ್ಲಿಯೇ. ತಮ್ಮ ಮಾತು ಕೃತಿಗಳಿಗೆ ಆಕರ್ಷಕವಾಗುವ ಮಕ್ಕಳನ್ನು ಆನಂದದಿಂದ ಅಪ್ಪಿಕೊಳ್ಳುತ್ತಾರೆ. ಆದರೆ ತಮ್ಮಿಂದ ವಿಕರ್ಷಣವಾಗುವ ಮಕ್ಕಳನ್ನು ಬಿಟ್ಟುಬಿಡುತ್ತಾರೆ. ಅವರು ನಮ್ಮ ಮಾತು ಕೇಳುವುದಿಲ್ಲ. ಅವರಿಗೆ ಎಷ್ಟು ಹೇಳಿದರೂ ಅಷ್ಟೇ. ಅವರಿಗೆ ಏನು ಮಾಡಿದರೇನು ಲಾಭ? ಇತ್ಯಾದಿ ಜಿಗುಪ್ಸೆಯ ಆಲೋಚನೆಗಳೊಂದಿಗೆ ಅಂತಹ ಮಕ್ಕಳಿಂದ ವಿಮುಖರಾಗಿಬಿಡುತ್ತಾರೆ.

ಶಿಕ್ಷಣ ಸಂಸ್ಥೆಗಳಿಗೆ ಉತ್ತಮ ಫಲಿತಾಂಶ ಮತ್ತು ಸಂಸ್ಥೆಯ ಕೀರ್ತಿ ಮಾತ್ರ ನಿರೀಕ್ಷೆಯ ವಸ್ತುಗಳಾಗಿರಬಹುದು. ಆದರೆ, ಶಿಕ್ಷಕರು ನಿರೀಕ್ಷಿಸಬೇಕಾಗಿರುವುದು ಅಭೌತಿಕವಾದ ವಿಷಯಗಳನ್ನು. ಜೀವಂತಿಕೆಯ ವಿಷಯಗಳನ್ನು. ತಾತ್ವಿಕ ಮತ್ತು ಭಾವನಾತ್ಮಕವಾಗಿರುವ ವಿಷಯಗಳನ್ನು. ತತ್ವ ಮತ್ತು ಭಾವುಕತೆಗಳಿಂದ ಶಿಕ್ಷಕರು ಹೊರತಾದ ಕ್ಷಣದಲ್ಲಿಯೇ ಅವನು ಅಥವಾ ಅವಳು ಶಿಕ್ಷಣವೃತ್ತಿಯ ನೈತಿಕ ಮೌಲ್ಯವನ್ನು ಕಳೆದುಕೊಂಡರೆಂದೇ ಅರ್ಥ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಮರೆಯಾದ ಅಪೂರ್ವ ಚಿತ್ರಕಲಾ ಪ್ರತಿಭೆ ‘ಶೋಭಾ ಕರಣಿಕ್’

Published

on

ಶೋಭಾ ಕರಣಿಕ್
  • ಡಾ.ಎನ್.ಕೆ.ಪದ್ಮನಾಭ, ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ

ವರು ಬಿಡಿಸುತ್ತಿದ್ದ ರೇಖೆಗಳು ನಮ್ಮ ದೇಶೀ ಸಂಸ್ಕೃತಿಯ ವಕ್ತಾರಿಕೆಯ ಪಾತ್ರ ನಿರ್ವಹಿಸುತ್ತಿದ್ದವು. ಕನ್ನಡದ್ದೇ ಆದ ಕಲಾತ್ಮಕ ಪರಂಪರೆಯನ್ನು ಸೂಕ್ಷ್ಮವಾಗಿ ಗ್ರಹಿಸಿದ್ದ ಅವರ ಚಿತ್ರಗಳು ಜೀವಂತಿಕೆಯ ಗುಣಲಕ್ಷಣದೊಂದಿಗೆ ಕಂಗೊಳಿಸುತ್ತಿದ್ದವು.

ಸಾಂಪ್ರದಾಯಿಕ ಚಿತ್ರಶೈಲಿಯನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ ಮಣಿಸಿ ಪರಂಪರೆಯೊಳಗೇ ಅಡಗಿದ್ದ ಮೌಲಿಕ ಮಾದರಿಗಳನ್ನು ಮನಗಾಣಿಸುವ ಶ್ರದ್ಧೆಯೊಂದಿಗೇ ಅವರು ಚಿತ್ರವಿನ್ಯಾಸ ರೂಪಿಸುತ್ತಿದ್ದರು. ಇನ್ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಮಾಧ್ಯಮಗಳ ಮೂಲಕ ತಮ್ಮ ಚಿತ್ರಗಳನ್ನು ಕಾಣಿಸುತ್ತಿದ್ದರು. ಪರಂಪರೆ ಮತ್ತು ವರ್ತಮಾನವನ್ನು ಬೆಸೆದು ಹೊಸ ಬಗೆಯ ಚಿತ್ರಪ್ರಯೋಗಗಳನ್ನು ನಡೆಸುವ ಹುಮ್ಮಸ್ಸಿನೊಂದಿಗೆ ಚಿತ್ರಕಲಾಯಾನ ಮುಂದುವರೆಸಿದ್ದರು. ಅವರ ಹೆಸರು ಶೋಭಾ ಕರಣಿಕ್.

ಇತ್ತೀಚೆಗಷ್ಟೇ ಅವರ ಚಿತ್ರಕಲಾಯಾನ ನಿಂತಿತು. ಅವರ ನಿಧನವು ವಿನೂತನವಾದ ಪ್ರಯೋಗಶೀಲ ಚಿತ್ರಕಲಾ ಸಾಧ್ಯತೆಗಳನ್ನು ತಡೆದು ನಿಲ್ಲಿಸಿತು. ಪುರಾಣದ ಕಥನ ಪ್ರಸಂಗಗಳಲ್ಲಿ ಉಲ್ಲೇಖಿತ ದೇವರು-ದೇವತೆಗಳ ಅಸ್ಮಿತೆ ಮತ್ತು ದೇಸೀ ಸಂಸ್ಕೃತಿಯನ್ನು ಬಿಂಬಿಸುವ ವಿನ್ಯಾಸಗಳನ್ನು ಸಮನ್ವಯಗೊಳಿಸಿ ಚಿತ್ರಕಲೆಗೆ ಹೊಸ ಆಯಾಮ ತಂದುಕೊಟ್ಟ ಪ್ರತಿಭೆಯಾಗಿ ಶೋಭಾ ಕರಣಿಕ್ ಅವರದ್ದು ವಿಶೇಷ ವ್ಯಕ್ತಿತ್ವವಾಗಿತ್ತು. ಮ್ಯೂರಲ್ ಪೇಂಟಿಂಗ್‌ನಲ್ಲಿ ಅವರಿಗಿದ್ದ ಪರಿಣತಿ, ಉತ್ತರ ಕನ್ನಡದ ಕಾವಿ ಕಲೆಯ ಕುರಿತಾದ ವಿಸ್ತೃತ ಜ್ಞಾನವು ಚಿತ್ರಕಲೆಯನ್ನು ಉನ್ನತೀಕರಿಸುವುದಕ್ಕೆ ಅವರಿಗೆ ನೆರವಾಗಿತ್ತು.

ಕಲೆಯ ಜೊತೆಗಿನ ಅನುಸಂಧಾನದ ಕ್ಷಣಗಳು ಅಪೂರ್ವ. ಒಂದು ನಿರ್ದಿಷ್ಟ ನಿರ್ಣಾಯಕ ಸಂದರ್ಭ, ಸಮಯದಲ್ಲಿ ಕಲೆಯೊಂದು ವ್ಯಕ್ತಿತ್ವವನ್ನು ಪ್ರಭಾವಿಸಿ ಸೃಜನಶೀಲತೆಯ ಹಸಿವನ್ನು ನೆಲೆಗೊಳಿಸುವುದಕ್ಕೆ ಪ್ರೇರಣೆಯಾಗುತ್ತದೆ. ಕಲೆಯ ಪ್ರಭಾವ ಎರಡು ಬಗೆಯದ್ದು. ಸಹೃದಯರನ್ನು ತನ್ನ ಕಲಾತ್ಮಕ ಮಾದರಿಗಳಿಂದ ಸೆಳೆದು ಅವರೊಳಗೆ ವಿಶೇಷ ಅನುಭೂತಿ ಧಾರೆ ಎರೆಯುವಂಥದ್ದು ಒಂದು ಬಗೆಯಾದರೆ ಹೀಗೆ ಸೆಳೆದುಕೊಂಡು ಮತ್ತೆ ಮತ್ತೆ ಪ್ರಭಾವಿಸುತ್ತಾ ಸಹೃದಯರನ್ನೇ ಕಲಾವಿದರನ್ನಾಗಿಸುವ ಸಾಧ್ಯತೆ ಮತ್ತೊಂದು ತೆರನಾದದ್ದು.

ಈ ಕಾರಣಕ್ಕಾಗಿಯೇ ಕಲಾತ್ಮಕ ಸಂಭವನೀಯತೆಯು ಅನನ್ಯವೆನ್ನಿಸಿಕೊಂಡಿದೆ. ಇಂಥ ಅನನ್ಯತೆಯೊಂದಿಗೇ ಶೋಭಾ ಕರಣಿಕ್ ಗುರುತಿಸಿಕೊಂಡಿದ್ದರು. ಅವರು ಓದಿದ್ದು ತಾಂತ್ರಿಕ ವಿಜ್ಞಾನ. ಆದರೆ, ಅವರ ನಿಜದ ಪ್ರತಿಭೆ ಅಭಿವ್ಯಕ್ತವಾದದ್ದು ಚಿತ್ರಕಲೆಯ ಮೂಲಕ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರಿಸರದಲ್ಲಿ ಬೆಳೆದ ಶೋಭಾ ಕರಣಿಕ್ ಮೊದಲಿನಿಂದಲೂ ದೇಶೀ ಕಲೆಯ ಕುರಿತು ವಿಶೇಷ ಆಸಕ್ತಿಯನ್ನು ಬೆಳೆಸಿಕೊಂಡು ಬಂದಿದ್ದರು. ಹೈಸ್ಕೂಲ್ ಓದುತ್ತಿರುವಾಗಲೇ ಕಾವಿಕಲೆಯ ವಿನ್ಯಾಸ ಅವರನ್ನು ಸೆಳೆದಿತ್ತು. ಇವುಗಳನ್ನು ಮತ್ತೆ ಮತ್ತೆ ನೋಡುತ್ತಾ ಹೋದಂತೆಲ್ಲಾ ಕಾವಿ ಕಲೆಯ ಕುರಿತ ಆಕರ್ಷಣೆ ಕಲಿಕೆಯ ಹಂಬಲವಾಗಿ ಮಾರ್ಪಟ್ಟಿತು. ಉತ್ತರ ಕನ್ನಡದ ಟೆಂಪಲ್ ರ‍್ಟ್ ಪ್ರಕಾರದ ಭಾಗವಾಗಿ ಕಾವಿ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ ಅವರು ರಚಿಸಿದ್ದ ತರಹೇವಾರಿ ವಿನ್ಯಾಸಗಳು ವಿವಿಧ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮಗಳಲ್ಲಿ ಗಮನ ಸೆಳೆದಿದ್ದವು.

ಕಾವಿ ಕಲೆಯೂ ಸೇರಿದಂತೆ ನಮ್ಮ ಸಾಂಪ್ರದಾಯಿಕ ಕಲೆಗಳು ಈ ಹಿಂದಿನ ಕಾಲದ ತಲೆಮಾರನ್ನಷ್ಟೇ ಪ್ರಭಾವಿಸಿದ್ದಲ್ಲದೇ ನಂತರದ ಹೊಸ ಪೀಳಿಗೆಯನ್ನೂ ಆಕರ್ಷಿಸುವ ಗುಣ ಹೊಂದಿವೆ. ಮೂಲ ಅಂತಃಸತ್ವಕ್ಕೆ ಧಕ್ಕೆಯೊದಗದ ಹಾಗೆ ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಈ ಸಾಂಪ್ರದಾಯಿಕ ಚಿತ್ರಕಲಾ ವಿನ್ಯಾಸಗಳನ್ನು ಮರುರೂಪಿಸಬಹುದು. ಹೊಸ ಕಾಲದಲ್ಲಿ ಅವುಗಳ ಮಹತ್ವವನ್ನು ಮನಗಾಣಿಸಬಹುದು ಎಂಬುದು ಅವರ ಆಶಯವಾಗಿತ್ತು.

ಕಲೆಯೊಂದು ಒಂದು ಕಾಲದಿಂದ ಮತ್ತೊಂದು ಕಾಲಕ್ಕೆ ದಾಟಿಕೊಳ್ಳುವಾಗ ಪಲ್ಲಟಗಳು ಸಹಜ. ಈ ಪಲ್ಲಟಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಇಂತಹ ಕಲೆಗಳಿಗೆ ಹೊಸಕಾಲದಲ್ಲೂ ಜೀವಂತಿಕೆಯನ್ನು ತಂದುಕೊಡುವ ಪ್ರಯತ್ನದ ಅಗತ್ಯವನ್ನು ಮನಗಾಣಿಸುವುದಕ್ಕಾಗಿಯೇ ಶೋಭಾ ಕರಣಿಕ್ ಅವರು ಚಿತ್ರಕಲಾ ರಚನೆಯ ವೈವಿಧ್ಯಮಯ ಪ್ರಯೋಗಗಳಲ್ಲಿ ತೊಡಗಿಸಿಕೊಂಡಿದ್ದರು.

ಅವರ ನಿಧನದಿಂದ ಈ ಪ್ರಯೋಗಶೀಲ ಹೆಜ್ಜೆಗಳು ನಿಂತಂತಾಗಿವೆ. ಆದರೆ, ಅವರು ಪರಂಪರೆ ಮತ್ತು ವರ್ತಮಾನವನ್ನು ಸಮನ್ವಯಗೊಳಿಸಿ ಸಾಬೀತುಪಡಿಸಿದ ಅಪೂರ್ವ ಚಿತ್ರಕಲಾ ಪ್ರಯೋಗಶೀಲತೆಯ ಜೀವಂತಿಕೆ ಹೊಸ ಪೀಳಿಗೆಗೆ ಸದಾ ಸ್ಫೂರ್ತಿಯ ಸೆಲೆಯಾಗಿರುತ್ತದೆ. ಅವರ ಹೆಸರಿನ ಇನಸ್ಟಾಗ್ರಾಂನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳು ಇಂಥ ಸ್ಫೂರ್ತಿಯ ಪ್ರಭೆಯನ್ನು ದಾಟಿಸುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಹೊಸತನದ ಹೊಸ್ತಿಲಲ್ಲಿ..!

Published

on

ಬರಹ : ಮೀನಾಕ್ಷಿ. ಬಿ
  • ಮೀನಾಕ್ಷಿ .ಬಿ, ಎಂ. ಎ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ದಾವಣಗೆರೆ ವಿಶ್ವವಿದ್ಯಾಲಯ

ಹೊಸವರ್ಷ ವೆಂಬುದು ಪ್ರತಿಯೊಬ್ಬರ ಬಾಳಲ್ಲಿ ವರ್ಷಕ್ಕೊಮ್ಮೆ ಬರುವ ಹೊಸದಿನಗಳ ಆಗಮನ ಯಾಕೆಂದರೆ ಹೊಸತನವನ್ನು ತರುತ್ತಾ ಇರುವ ಹೊಸವರ್ಷ ಕೂಡ ಒಂದು ಜೀವನದ ಭರವಸೆ, ನಿರೀಕ್ಷೆ ಕನಸುಗಳ ಬಂಡಿಯ ಮೇಲೆ ಸಾಗುವ ಪ್ರಯಾಣ ನಮ್ಮ ಜೀವನ.

ವ್ಯಕ್ತಿಯ ನಂಬಿಕೆಯ ಆಧಾರದ ಮೇಲೆಯೇ ಜೀವನ ಸಾಗುಸುತ್ತಿರುವುದು.ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿಯೂ ಕೂಡ ಕಷ್ಟ -ಸುಖ ದುಃಖದ ಸಂಗತಿಗಳು ಇದ್ದೆ ಇರುತ್ತದೆ. ಕೆಲವೊಂದು ಬಾರಿ ಹತಾಶೆಯನ್ನು ಹೊಂದಿ ಜೀವನದಲ್ಲಿ ಜಿಗುಪ್ಸೆ ಒಂದು ಕೆಟ್ಟ ನಿರ್ಧಾರಕ್ಕೆ ಮನಸ್ಸು ದಾರಿ ಮಾಡಿಕೊಡುತ್ತದೆ. ಹಾಗೆಯೇ ಕಷ್ಟ ಇದ್ದಲ್ಲಿ ಸುಖವಿರುವುದುಂಟು ಅನ್ನುವ ಹಾಗೇ ಇವತ್ತಲ್ಲ ನಾಳೆ ಒಳ್ಳೆಯ ದಿನಗಳು ನಮ್ಮ ಜೀವನದಲ್ಲಿ ಬರಬಹುದೆಂಬ ಭರವಸೆ,ಆತ್ಮವಿಶ್ವಾಸವನ್ನು ಇಟ್ಟುಕೊಂಡು ಜೀವನ ನಡೆಸುತ್ತಲೇ ಇದ್ದೇವೆ.

ಈ ವರ್ಷ ಒಳ್ಳೆಯದಾಗಿಲ್ಲ ಅಂದರೆ ಏನು ಮುಂದಿನ ವರ್ಷ ಆದರೂ ನನ್ನ ಬದುಕು ಬದಲಾಗಬಹುದು ಎಂಬ ಹೊಸತನವನ್ನು ನಮ್ಮಲ್ಲಿ ಭರವಸೆ,ನಂಬಿಕೆಯ ಬೇರಿನೊಂದಿಗೆ ಬೆರೆಸಿಕೊಂಡು ಬದುಕಬೇಕು.ನಾಳೆಯ ದಿನಗಳ ಮೇಲಿನ ಅನಿರೀಕ್ಷಿತ ತೀರಿವಿನಿಂದಾಗುವ ಬದುಕಿನಲ್ಲಾಗುವ ಬದಲಾವಣೆ ಹೊಸತನದ ಚಾಪನ್ನು ಮೂಡಿಸುತ್ತದೆ.
ಎಂಥ ಹತಾಶ ಮನಸ್ಥಿತಿಯವರಲ್ಲೂ ಹೊಸವರ್ಷ ಭರವಸೆಯ ಅಭಯ ಹಸ್ತವನ್ನು ಚಾಚುತ್ತದೆ. ಅದೆಲ್ಲಿಂದಲೇ ಆತ್ಮ ವಿಶ್ವಾಸದ ಬೆಳಕಿನ ಕಿಡಿಯೊಂದು ಕಾಣಿಸಿಕೊಳ್ಳುತ್ತದೆ.

ಹೊಸವರ್ಷವೆಂಬುದು ಕೇವಲ ಸಂಭ್ರಮದ ಕಾಲ ಮಾತ್ರವಲ್ಲ. ಕಳೆದ ದಿನಗಳತ್ತ ಹಿಂತಿರುಗಿ ನೋಡುವ ಸಮಯ ಕೂಡ ಹಿಂದಿನ ದಿನಗಳ ಪುಟಗಳನ್ನು ತೆಗೆದು ನೋಡಿದರೆ. ಉತ್ಸಾಹದ ಗಳಿಗೆಗಳು ಮುಂದಿನ ಕೆಲಸಗಳಿಗೆ ಚೈತನ್ಯ, ಉತ್ಸಾಹ ನೀಡಬಲ್ಲದು.ನಮ್ಮ ದಿಕ್ಕಿಲ್ಲದ ದಾರಿಗೆ ಖಚಿತ ದಿಕ್ಕು ದಾರಿಯನ್ನು ತೋರಬಲ್ಲದು.

ಜೀವನದ ಪ್ರಯಾಣಕ್ಕೆ ಒಂದು ನಿಲ್ದಾಣವಾಗಿದೆ. ನಾವು ಕಾಣುವ ಕನಸಗಳು ಕನಸಾಗಿಯೇ ಉಳಿದಿದೆ ಯಾಕೆಂದರೆ ನಮ್ಮಲ್ಲಿನ ಬೇಜವಾಬ್ದಾರಿ, ನಿರ್ಲಕ್ಷತನ ಆಮೇಲೆ ಮಾಡಿದರೆ ಆಯ್ತು ಅನ್ನೋ ಮನೋಭಾವನೆ ಯಾವುದರ ಬಗ್ಗೆಯೂ ಆಸಕ್ತಿ ಕೊಡದೆ ಇರೋದು ಎಲ್ಲವು ನಮ್ಮ ಕನಸಿನ ಜೀವನ ರೂಪಿಸಿಕೊಳ್ಳುವಲ್ಲಿ ಸಫಲರಾಗದೆ ಉಳಿಯಲು ಕಾರಣ.

ಮೊದಲು ಆತ್ಮವಿಶ್ವಾಸ ಬೇಕು ನಾನು ಈ ಕೆಲಸವನ್ನು ಮಾಡುವೆ ಎಂಬ ಒಂದು ನಿರ್ಧಿಷ್ಟ ಗುರಿ ಇರಬೇಕು ಅಂಗಿದ್ರೆ ಅಷ್ಟೇ ಜೀವನದ ಪಯಣದ ಹಾದಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಇಲ್ಲವಾದಲ್ಲಿ ಸೋಲನ್ನು ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಮುಂದಿನ ದಿನಗಳ ಆಗಮನದೊಂದಿಗೆ ನಾವು ಕಂಡ ಕನಸನ್ನು ಈಡೇರಿಸಿಕೊಳ್ಳುವ ಸತತ ಪ್ರಯತ್ನದೊಂದಿಗೆ ಬರುವ ದಿನವನ್ನು ಸ್ವಾಗತಿಸಿಕೊಳ್ಳೋಣ.
ಎಲ್ಲರ ಬಾಳಲಿ ಹರುಷ ,ಸಂತೋಷ ಮನೆಮಾಡಲಿ ಎಂದು ಆಶಿಸುತ್ತಾ ಎಲ್ಲರಿಗೂ ಹೊಸವರ್ಷದ ಶುಭಾಶಯಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕಾಮರೂಪದ ಪ್ರಭಾಕರ

Published

on

  • ಪ್ರೊ.ರಹಮತ್ ತರೀಕೆರೆ

ನಾನು ಕೋಲಾರಕ್ಕೆ ಹೋದಾಗೆಲ್ಲ ಎರಡು ಜಾಗಗಳಿಗೆ ತಪ್ಪದೆ ಭೇಟಿ ಕೊಡುತ್ತೇನೆ. ಒಂದು-ಕೆ.ರಾಮಯ್ಯ ಮತ್ತವರ ಸಂಗಾತಿಗಳು ಸೇರಿ ತೇರುಹಳ್ಳಿ ಬೆಟ್ಟದ ಮೇಲೆ ಕಟ್ಟಿರುವ `ಆದಿಮ’ಕ್ಕೆ; ಇನ್ನೊಂದು-`ಕಾಮರೂಪಿ’ ಎಂಬ ಹೆಸರಲ್ಲಿ ಬರೆಯುತ್ತಿದ್ದ ಕನ್ನಡ ಲೇಖಕ ಡಾ. ಎಂ.ಎಸ್. ಪ್ರಭಾಕರ ಅವರಿರುವ ಕಠಾರಿಪಾಳ್ಯದ ಮನೆಗೆ. 50ರ ದಶಕದ ಕೊನೆಯಲ್ಲಿ ಕರ್ನಾಟಕ ಬಿಟ್ಟುಹೋದ ಪ್ರಭಾಕರ, ‘ಹಿಂದೂ’ ಪತ್ರಿಕೆಯ ವರದಿಗಾರರಾಗಿ ಆಫ್ರಿಕಾ ಅಮೇರಿಕ ಬಾಂಗ್ಲಾದೇಶ ಈಶಾನ್ಯ ಭಾರತವನ್ನೆಲ್ಲ ಅಲೆದಾಡಿ, ಕಡೆಗೆ ಕಾಮರೂಪದಲ್ಲಿ (ಅಸ್ಸಾಮಿನ ಪುರಾತನ ಹೆಸರಿದು) ನೆಲೆಸಿಬಿಟ್ಟರು.

`ಕಾಮರೂಪ’ ಶಬ್ದಕ್ಕೆ ಬಯಸಿದ ರೂಪಧಾರಣೆ ಮಾಡುವ ಮಾಯಾವಿ ವಿದ್ಯೆ ಎಂಬರ್ಥವೂ ಇದೆ. ಎಂಬತ್ತರ ಪ್ರಾಯದಲ್ಲಿ ಕರ್ನಾಟಕಕ್ಕೆ ಮರಳಿ ಬಂದಿರುವ ಪ್ರಭಾಕರ ಅವರು, ತಾವು ಹುಟ್ಟಿಬೆಳೆದ ಮನೆಯಲ್ಲಿ ಬಿಡಾರ ಹೂಡಿದ್ದಾರೆ. ಹಿರೀಕರು ಕಟ್ಟಿದ ದೊಡ್ಡಮನೆ. ಮನೆಯೊಳಗೊಂದೇ ಜೀವ; ಮನೆ ತುಂಬ ಪುಸ್ತಕದ ರಾಶಿ (ಹೆಚ್ಚಿನವು ಇಂಗ್ಲೀಶ್ ಬಂಗಾಳಿ ಅಸ್ಸಾಮಿ). ನಟ್ಟನಡುವಿರುವ ಹಾಲಿನ ಮೂಲೆಯಲ್ಲಿ ಬೀದಿಗೆ ಬೆನ್ನುಕೊಟ್ಟಂತೆ ಕೂತು, ಲ್ಯಾಪ್‌ಟಾಪಿನಲ್ಲಿ ಬರೆಯುತ್ತ, ವೆಬ್‌ಸೈಟುಗಳನ್ನು ಜಾಲಾಡುತ್ತ, ಬ್ಲಾಗುಗಳನ್ನೋದುತ್ತ ಪ್ರಭಾಕರ ಕುಳಿತಿರುತ್ತಾರೆ.

ಅವರ ಮನಗೆ ಹೋದಾಗಲೆಲ್ಲ ನನಗೆ ರಾಗಿಮುದ್ದೆ ಸೊಪ್ಪಿನ ಸಾರಿನ ಊಟ ಸಿಗುತ್ತದೆ. ಅವರು ಉಣ್ಣುವುದೊಂದು ಅಪೂರ್ವ ದೃಶ್ಯ. ತಣಿಗೆಯ ನಡುವೆ ಹದವಾಗಿ ಬೆಂದು ಕಂಪು ಬೀರುವ ಗೋಂದಿನಂತಹ ಕೆಂಗಪ್ಪು ಬಣ್ಣದ ಬಿಸಿಮುದ್ದೆಯನ್ನಿಟ್ಟು, ಅದರ ತಲೆಯ ಮೇಲೆ ಶಿಖರವನ್ನು ಹಿಮವು ಅಲಂಕರಿಸುವಂತೆ ಬೆಣ್ಣೆಯ ಚೂರನ್ನಿಡುತ್ತಾರೆ; ಬೆಣ್ಣೆಯು ಮುದ್ದೆ ಕಾವಿಗೆ ಕರಗಿ ಇಡೀ ಚೆಂಡನ್ನು ಆವರಿಸಿ ಅಭಿಷೇಕ ಮಾಡಿಸಿಕೊಂಡ ಮೂರುತಿಯಂತೆ ಥಳಥಳ ಹೊಳೆಯುತ್ತದೆ. ಆಗ ಘಮಿಸುವ ಮುದ್ದೆಯನ್ನು ಚೆನ್ನಾಗಿ ಮಿದ್ದು, ಒಂದು ಬದಿಯಿಂದ ಇಷ್ಟಿಷ್ಟೇ ಮುರಿದು ತುತ್ತು ಮಾಡಿ, ಸೊಪ್ಪಿನ ಗಟ್ಟಿಸಾರಲ್ಲಿ ಹೊರಳಾಡಿಸಿ ಗುಕ್ಕನೆ ನುಂಗಿ ಕಣ್ಮುಚ್ಚಿ ಕೊಳ್ಳುತ್ತಾರೆ. ತರುವಾಯ ಶ್ರೀಯುತರು ಜ್ಞಾನೋದಯವಾದ ಸಿದ್ಧನಂತೆ ಅವರ ಮುಖದಲ್ಲಿ ಪರಮಾನಂದದ ಒಂದು ಕಳೆ ಆವಿರ್ಭವಿಸುತ್ತದೆ. ಇದನ್ನೆಲ್ಲ ಕಾಣುವಾಗ, ಲೋಕವನ್ನೆಲ್ಲ ಸುತ್ತಾಡಿರುವ ಇವರು ಕೋಲಾರಕ್ಕೆ ಮುದ್ದೆಸುಖಕ್ಕಾಗಿಯೆ ಬಂದರೇನೊ ಎಂದು ಶಂಕೆ ಬರುತ್ತದೆ. ಪ್ರಭಾಕರ ಅವರಿಗೆ ಆಧುನಿಕ ಕನ್ನಡ ಸಾಹಿತ್ಯದ ಮೇಲೆ ಅನೇಕ ದೂರುಗಳಿವೆ. ಅವುಗಳಲ್ಲಿ ಆಹಾರ ತಯಾರಿಕೆ ಮತ್ತು ಸೇವನೆ ಕುರಿತು ಅದರಲ್ಲಿ ವಿವರಗಳೇ ಇಲ್ಲ ಎಂಬುದೂ ಒಂದು.

ಕನ್ನಡದ ಅತಿಹಿರಿಯ ಮತ್ತು ಹೆಚ್ಚು ಬರೆಯದ ಲೇಖಕರಲ್ಲಿ ಪ್ರಭಾಕರ ಅವರೂ ಒಬ್ಬರು. ನಾನು ಅವರ ‘ಕುದುರೆಮೊಟ್ಟೆ’ ಕಾದಂಬರಿಯನ್ನೂ ‘ಒಂದು ತೊಲ ಪುನುಗು ಮತ್ತು ಇತರ ಕತೆಗಳು’ ಸಂಕಲನವನ್ನೂ ಓದಿದ್ದೆ. ಇವುಗಳಲ್ಲಿ ‘ಕುದುರೆ ಮೊಟ್ಟೆ’ ಈಗಲೂ ಪ್ರಿಯವಾದ ಪುಸ್ತಕ. ಅದರಲ್ಲಿರುವ ಕೆಲವು ಪಾತ್ರಗಳು ಕೊಂಚ ವಿಕ್ಷಿಪ್ತವಾಗಿವೆ; ಅಲ್ಲಿನ ಬಾಳಿನ ಸನ್ನಿವೇಶಗಳೂ ಅನಿರೀಕ್ಷಿತವಾಗಿವೆ. ಆದರೆ ಎಲ್ಲಿಯೂ ಹುಸಿ ಅನಿಸದಂತೆ, ಒಂದೇ ಶಬ್ದ ಅಪವ್ಯಯವಾಗದಂತೆ ಅದನ್ನು ಬರೆಯಲಾಗಿದೆ. ಪಾತ್ರಗಳನ್ನು ತಮ್ಮ ಸಿದ್ಧಾಂತಕ್ಕೆ ತಕ್ಕಂತೆ ಮಣಿಸಿ ಕೈಗೊಂಬೆಯಂತೆ ಆಡಿಸುತ್ತ, ಕೆಲವನ್ನು ಮುದ್ದಾಮಾಗಿ ದುರುಳಗೊಳಿಸಿ ಕಲೆಯ ಜಾಣಮುಸುಕಿನಲ್ಲಿ ಅಡಗಿಸುತ್ತ, ಕೆಲವು ಕಾದಂಬರಿಗಳು ಕನ್ನಡದಲ್ಲಿ ಪ್ರಕಟವಾಗುತ್ತಿವೆ. ಇಂತಹ ಹೊತ್ತಲ್ಲಿ ಅರ್ಧ ಶತಮಾನದ ಹಿಂದೆ ಪ್ರಕಟವಾದ ಈ ಕಾದಂಬರಿ, ಬಾಳನ್ನು ಕುರಿತು ತೋರುವ ಕಕ್ಕುಲಾತಿ ಕಂಡು ಖುಶಿಯಾಗುತ್ತದೆ. ಕತೆಗಾರರಿಗೆ ತಾವು ಸೃಷ್ಟಿಸುವ ಕೆಲವು ಪಾತ್ರಗಳ ಮೇಲೆ ಕೊಂಚ ಭಾವ ಪಕ್ಷಪಾತವಿರುತ್ತದೆ. ಆದರೆ ತಾವು ಸೃಜಿಸುವ ಎಲ್ಲ ಪಾತ್ರಗಳನ್ನು ತಾಯಿಯಂತೆ ನೋಡುವುದು ಬರೆಹದ ನೈತಿಕತೆ. ಈ ಸಂಗತಿ ಕುವೆಂಪು ಮತ್ತು ಟಾಲ್ ಸ್ಟಾಯ್ ಕಾದಂಬರಿ ಓದಿದವರಿಗೆ ಗೊತ್ತಿದೆ.

ಕಾಮವನ್ನು ಇಟ್ಟುಕೊಂಡು ಜೀವನದ ಸತ್ಯಗಳನ್ನು ಶೋಧಿಸುವ ವಿಷಯದಲ್ಲಿ ಕಾಮರೂಪಿಯವರು, ಒಬ್ಬ ಟಿಪಿಕಲ್ ನವ್ಯಲೇಖಕರೇ. ಆದರೆ ನವ್ಯದ ಕೆಲವು ಲೇಖಕರಲ್ಲಿ ಕಾಣುವಂತೆ, ಅದಕ್ಕವರು ಅನಗತ್ಯ ಪ್ರಾಮುಖ್ಯ ಕೊಡುವುದಿಲ್ಲ. ಅದನ್ನು ಚಪ್ಪರಿಸುವುದಿಲ್ಲ. ವೈಭವೀಕರಿಸುವುದಿಲ್ಲ. ಬದಲಿಗೆ, ಮನುಷ್ಯರಾದವರು ಜೀವನದ ಇಕ್ಕಟ್ಟುಗಳಲ್ಲಿ ಸಿಲುಕಿ ಅನಿವಾರ್ಯವಾಗಿ ವರ್ತಿಸುವ ಪರಿಯನ್ನು ತಣ್ಣಗೆ ವ್ಯಂಗ್ಯವಾಗಿ ಚಿತ್ರಿಸುತ್ತಾ ಹೋಗುತ್ತಾರೆ. ಸತ್ಯಕ್ಕಿರುವ ಹಲವು ಮುಖಗಳನ್ನು ಹಿಡಿಯುವಂತಹ ಕುರುಸೋವಾನ ‘ರಶೋಮನ್’ ಸಿನಿಮಾ ನೆನಪಿಸುವ ಈ ಕಾದಂಬರಿ, ಮತ್ತೆಮತ್ತೆ ಓದಬೇಕು ಎನಿಸುವಷ್ಟು ತಾಜಾ ಆಗಿದೆ. ‘ಉಪಪತ್ತಿಯೋಗ’ ಎಂಬುದನ್ನು ಬಿಟ್ಟರೆ, ಉಳಿದಂತೆ ವ್ಯಕ್ತಿವಾದವನ್ನು ಅತಿಯಾಗಿ ಬಿಂಬಿಸುವ ತಂತ್ರದ ಬಿಗಿತದಲ್ಲಿರುವ ಅವರ ಕತೆಗಳು ಅಷ್ಟು ಆಪ್ತವೆನಿಸಿಲ್ಲ.

ನನಗೆ ಪ್ರಭಾಕರ್ ಕುರಿತು ಆಸಕ್ತಿ ಮೂಡಿಸಿದವರು ಮಾರ್ಕ್ಸ್‌ವಾದಿ ಚಿಂತಕ ಕೆ.ರಾಘವೇಂದ್ರರಾವ್ ಅವರು. ಅಮೆರಿಕೆಯ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿದ್ದ ಎ.ಕೆ.ರಾಮಾನುಜನರ ಹೊಂದಾಣಿಕೆಯ ಗುಣವನ್ನು ಕಟುವಾಗಿ ವಿಮರ್ಶಿಸುತ್ತ, ಅಲ್ಲಿನ ಶೈಕ್ಷಣಿಕ ಕ್ಷೇತ್ರದಲ್ಲಿರುವ ಬಿಳಿಯರ ಯಜಮಾನಿಕೆಗೆ ಬಾಗದೆ ಹೊರಬಂದ ಪ್ರಭಾಕರ ಅವರ ದಿಟ್ಟ ಸ್ವಭಾವವನ್ನು ಅವರು ತಮ್ಮ ಸಂದರ್ಶನದಲ್ಲಿ ಪ್ರಸ್ತಾಪಿಸಿದ್ದರು. ಪ್ರಭಾಕರ ಅವರನ್ನು ಭೇಟಿಯಾಗಬೇಕು ಎಂದು ಅನಿಸುತ್ತಿತ್ತು. ಅದರಲ್ಲೂ ಭಾರತದ ಶಾಕ್ತಪೀಠಗಳಲ್ಲಿ ಮುಖ್ಯವಾಗಿರುವ ಅಸ್ಸಾಮಿನ ಕಾಮಾಖ್ಯಕ್ಕೆ ಹೋಗಲು ಯತ್ನಿಸುತ್ತಿದ್ದ ನಾನು, ಅಲ್ಲೇ ಸಮೀಪದ ಗೌಹಾತಿಯಲ್ಲಿರುವ ಅವರನ್ನು ಕಾಣಲು ಹವಣಿಕೆ ಮಾಡಿಕೊಂಡಿದ್ದೆ. ಆದರೆ ಸಾರ್ವಜನಿಕ ವ್ಯಕ್ತಿಯಾಗಲು ನಿರಾಕರಿಸಿ ಅಜ್ಞಾತವಾಗಿಯೇ ಬಾಳುವ ಅವರು ಸುಲಭವಾಗಿ ಸಿಗುತ್ತಿರಲಿಲ್ಲ.

ನನ್ನ ತವಕವನ್ನರಿತಿದ್ದ ಕೆ.ರಾಮಯ್ಯ, ‘ಪ್ರಭಾಕರ್ ಕರ್ನಾಟಕಕ್ಕೆ ಬಂದಿದ್ದಾರೆ. ಬನ್ನಿ’ ಎಂದು ಅವರ ಮನೆಗೆ ಕರೆದುಕೊಂಡು ಹೋದರು. ಮಧ್ಯಾಹ್ನದ ಸುಡುಹೊತ್ತು. ಪ್ರಭಾಕರ ಪ್ರೀತಿಯಿಂದ ಬರಮಾಡಿಕೊಂಡು ನೊರೆ ತುಂಬಿದ ಒಗರು ಬೀರಿನ ಮಗ್ಗನ್ನು ಕೈಗೆ ಕೊಟ್ಟು, ಕಾಮಾಖ್ಯದ ಬಗ್ಗೆಯೂ ತಂತ್ರ ಪಂಥದ ಬಗ್ಗೆಯೂ ಇರುವ ಕೃತಿಗಳನ್ನು ತೋರಿಸುತ್ತ, ಗಂಟೆಗಟ್ಟಳೆ ಮಾತಾಡಿದರು. ಅರಿವಿನ ಕಿಡಿಗಳು ಹಾರುವ ಅದೊಂದು ವಿದ್ವತ್‌ಪೂರ್ಣ ಹರಟೆ.

ನಾನು ಅವರಲ್ಲಿ ಶಿಷ್ಯವೃತ್ತಿ ಸ್ವೀಕರಿಸಿ ಹಲವಾರು ಸಲ ಕೋಲಾರಕ್ಕೆ ಹೋಗಿ ಬಂದಿದ್ದೇನೆ. ಅವರ ಮಾತುಕತೆಗಳಲ್ಲಿ ನನಗೆ ಮುಖ್ಯವಾಗಿ ಕಂಡಿದ್ದು, ಜಾತ್ಯತೀತವಾದ ಮನಸ್ಸು; ಸಣ್ಣಪುಟ್ಟ ಸಂಗತಿಗಳ ಮೇಲೂ ಕಾಳಜಿಯಿಂದ ಸೂಕ್ಷ್ಮವಾಗಿ ಚಿಂತಿಸುವ ಮಾನವೀಯತೆ; ಗತಕಾಲದ ಬಗ್ಗೆ ಹಳಹಳಿಕೆಯಿಲ್ಲದೆ ವರ್ತಮಾನದ ಸಮಸ್ಯೆಗಳನ್ನು ಕುರಿತು ಚಿಂತಿಸುವ ಪ್ರಖರವೂ ನಿಷ್ಠುರವೂ ಆದ ರಾಜಕೀಯ ಪ್ರಜ್ಞೆ. ಸಾರ್ವಜನಿಕ ಬದುಕಿನಲ್ಲಿ ಜಾತಿಪದ್ಧತಿ ಎಲ್ಲೆಮೀರಿ ನಿರತವಾಗಿರುವ ಕುರಿತ ಹೇವರಿಕೆ. ಹಿರಿಯ ಲೇಖಕರಲ್ಲಿ ಸಾಮಾನ್ಯವಾಗಿ ಎರಡು ಸ್ವಭಾವಗಳಿರುತ್ತವೆ. ಒಂದು- ಕಳೆದುಹೋದ ಕಾಲದ ಬಗ್ಗೆ ಭಾವುಕ ಮರುಕಳಿಕೆ. ಎರಡು-ವರ್ತಮಾನದ ಸಾಮಾಜಿಕ ರಾಜಕೀಯ ವೈರುಧ್ಯಗಳನ್ನು ಉದಾರವಾಗಿ ನೋಡುತ್ತ, ಚಿಂತನೆಯ ಮೊನಚನ್ನು ಕಳೆದುಕೊಳ್ಳುವುದು. ಆದರೆ ಆತ್ಮಕ್ಕೆ ಸದಾ ಬೆಂಕಿ ಹತ್ತಿಸಿಕೊಂಡಂತೆ ಉರಿಯುವ ಕೆಲವರಿದ್ದಾರೆ. ಕೋಚೆ, ಕುಸುಮಾಕರ ದೇವರಗೆಣ್ಣೂರ, ಎಂ.ಡಿ. ನಂಜುಂಡಸ್ವಾಮಿ, ನೀಲಗಂಗಯ್ಯ ಪೂಜಾರ, ಕೆ.ರಾಘವೇಂದ್ರರಾವ್, ಅಬ್ಬಿಗೇರಿ ವಿರೂಪಾಕ್ಷಪ್ಪ, ಸಾರಾ ಅಬೂಬಕರ್, ಕಾಮರೂಪಿ ಪ್ರಭಾಕರ-ಇವರೆಲ್ಲ ಇಂತಹವರು. ಈ ಹಿರಿಯರ ಜತೆ ಮಾತಾಡುವಾಗ ಇವರ ಹಠಮಾರಿತನ, ಜಗಳಗಂಟಿತನ, ಆದರ್ಶವಾದ, ನೈತಿಕ ಪ್ರಜ್ಞೆ ಹಾಗೂ ಭಿನ್ನಮತ ಇಷ್ಟವಾಗುತ್ತದೆ.

ಕರ್ನಾಟಕದಿಂದ ಬಹುಕಾಲ ದೂರವಿದ್ದ ಕಾರಣದಿಂದ ಏರ್ಪಟ್ಟಿರುವ ಅಪರಿಚಿತತೆಯಿಂದಲೊ ಅಥವಾ ಕರ್ನಾಟಕದ ಒಳಗೇ ಇದ್ದೂಇದ್ದೂ ನಮಗೆ ಕಾಣದಂತಾಗಿರುವ ವೈರುಧ್ಯಗಳು ‘ಹೊರಗಿನಿಂದ’ ಬಂದಿರುವ ಅವರಿಗೆ ಒಡೆದು ಕಾಣುತ್ತಿರುವುದರಿಂದಲೊ, ಪ್ರಭಾಕರ ಕರ್ನಾಟಕದ ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ವೈರುಧ್ಯಗಳ ಬಗ್ಗೆ ತೀಕ್ಷ್ಣವಾದ ಟಿಪ್ಪಣಿ ಮಾಡುತ್ತಿರುತ್ತಾರೆ; ಕನ್ನಡಿಗರ ಸ್ವಭಾವದಲ್ಲೇ ವ್ಯಕ್ತಿನಿಷ್ಠೆಗಾಗಿ ವಿಮರ್ಶೆಯ ನಿಷ್ಠುರತೆ ಬಿಟ್ಟುಕೊಡುವ, ಸಜ್ಜನಿಕೆಯ ಭಾಷೆಯಲ್ಲಿ ವಾಸ್ತವವನ್ನು ಅಡಗಿಸುವ ಪ್ರವೃತ್ತಿಯಿದೆ ಎಂದು ಹೇಳುತ್ತಿರುತ್ತಾರೆ. ಸಂಘಟಕರೊಬ್ಬರು ಕಾರ್ಯಕ್ರಮವೊಂದಕ್ಕೆ ಕರೆಸಿಕೊಂಡು ಪರಿಚಯ ಭಾಷಣದಲ್ಲಿ ತಮ್ಮನ್ನು ಅತಿಯಾಗಿ ಹೊಗಳಿದ್ದನ್ನು ನೆನೆಯುತ್ತ ಅವರೊಮ್ಮೆ ಹೇಳಿದರು: “ಏನ್ ಸ್ವಾಮಿ ಕನ್ನಡಿಗರು? ಎಷ್ಟು ಉದಾರತೆ! ನನ್ನ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ನಾನು ಎಲ್ಲ ಸೇರಿದರೆ ನೂರೈವತ್ತು ಪುಟಗಳನ್ನೂ ಬರೆದಿಲ್ಲ. ಕನ್ನಡಕ್ಕೆ ದೊಡ್ಡ ಕೊಡುಗೆಯನ್ನು ಕೊಟ್ಟಿಲ್ಲ. ಆದರೂ ವಾಚಾಮಗೋಚರ ಹೊಗಳಿಬಿಟ್ಟರು. ಕರ್ನಾಟಕದಲ್ಲಿ ಮಾತಿಗೆ ಬೆಲೆಯೇ ಇದ್ದಂತಿಲ್ಲ.’’

ಇದನ್ನು ಕೇಳುವಾಗ ಈಚೆಗೆ ಕಲ್ಕತ್ತಾದಲ್ಲಿ ನಾನು ಕಂಡ, ಹಿರಿಯ ಲೇಖಕ ರುದ್ರಪ್ರತಾಪ ಸೇನರ ಸನ್ಮಾನ ಕಾರ್ಯಕ್ರಮ ನೆನಪಾಯಿತು. ಸೇನರಿಗೆ 75ವರ್ಷ ತುಂಬಿದ ನೆಪದಲ್ಲಿ ಇರಿಸಿಕೊಂಡಿದ್ದ ಆ ಕಾರ್ಯಕ್ರಮ ಎಷ್ಟು ವಿಮರ್ಶಾತ್ಮಕವಾಗಿತ್ತು ಎಂದರೆ, ಅವರ ಶಿಷ್ಯರು ತಮ್ಮ ಗುರುವಿನ ಜತೆ ಕೋರ್ಟ್ಮಾರ್ಶಲ್ ನಡೆಸುವವರ ಹಾಗೆ ಪ್ರಶ್ನೆ ಕೇಳುತ್ತಿದ್ದರು. ಸೇನರು ಆ ಕಟುತರ ಪ್ರಶ್ನೆಗಳಿಗೆಲ್ಲ ಪ್ರಾಮಾಣಿಕವಾಗಿ ದ್ವಂದ್ವವಿಲ್ಲದೆ ಉತ್ತರಿಸುತ್ತಿದ್ದರು. ಹಿರಿಯರ ತಲೆಗೆ ಅಭಿನಂದನ ಗ್ರಂಥಗಳ ಸರಮಾಲೆಯನ್ನು ತಂದು ಕಟ್ಟಿ, ಎಗ್ಗಿಲದೆ ಹೊಗಳಿ ವೈಭವೀಕರಿಸುವ ಪದ್ಧತಿಯಿರುವ ಕರ್ನಾಟಕದಲ್ಲಿ, ಈ ಪರಿಯ ನಿಷ್ಠುರತೆ ಕಲ್ಪಿಸಿಕೊಳ್ಳುವುದೇ ಕಷ್ಟ.

ತೋರುಗಾಣಿಕೆಯನ್ನು ಸದಾ ನಿರಾಕರಿಸುವ ಪ್ರಭಾಕರ ಅವರಲ್ಲಿ, ಅವರ ಖಂಡಿತವಾದಿ ನಿಲುವಿಗೆ ಅಷ್ಟೊಂದು ತಾಳೆಯಾಗದ ಇನ್ನೊಂದು ಮುಖವಿದೆ. ಅದೆಂದರೆ, ಜೀವನಪ್ರೀತಿಯ ಸಂಕೇತದಂತಿರುವ ತಮಾಶೆ ಮತ್ತು ಪೋಲಿತನ. ಈ ತಮಾಶೆಯ ಗುಣ ಅದ್ಭುತ ನಾಟಕೀಯ ಶೈಲಿಯಾಗಿ ಅವರ ಕಥೆ ಕಾದಂಬರಿಗಳಲ್ಲೆಲ್ಲ ಆವರಿಸಿಕೊಂಡಿದೆ. ತಮಗೆ ಪಾಠ ಹೇಳಿದ ಗುರುಗಳ ವೈಯಕ್ತಿಕ ಬದುಕಿನಲ್ಲಿದ್ದ ಸನಾತನವಾದ ಮತ್ತು ತರಗತಿಗಳಲ್ಲಿ ಕನ್ನಡ ಬಳಸದ ಅವರ ಇಂಗ್ಲಿಷಿನ ವ್ಯಾಮೋಹ ಕುರಿತಂತೆ, ಅವರಲ್ಲಿ ಸ್ವಾರಸ್ಯಕರ ಮಾಹಿತಿಗಳಿವೆ. ಪ್ರಭಾಕರ ಅವರು ಆಪ್ತರ ಎದುರು ತಾವು ಬರೆದಿರುವ ಅಪ್ರಕಟಿತ ಪೋಲಿ ಪದ್ಯಗಳನ್ನು ವಾಚಿಸುವುದುಂಟು. ಬಹುಶಃ ಇದು ಅವರ ಗೆಳೆಯರಾಗಿದ್ದ ಎಚ್.ಎಸ್. ಬಿಳಿಗಿರಿಯವರ ಸಹವಾಸ ಫಲವಿರಬೇಕು.

ಒಂದೇ ವ್ಯಕ್ತಿತ್ವದಲ್ಲಿ ಒಟ್ಟಿಗೇ ಇರಲು ಕಷ್ಟವೆನಿಸಬಹುದಾದ ಇನ್ನೂ ಅನೇಕ ಸಂಗತಿಗಳು ಅವರಲ್ಲಿ ಸಹಜವಾಗಿ ನಿರಾಳವಾಗಿ ಇವೆ. ಉದಾ.ಗೆ, ಬಹುಭಾಷಿಕರಾದ ಅವರ ಮನೆಮಾತು ತಮಿಳುಗನ್ನಡ; ಬರವಣಿಗೆ ಕನ್ನಡ ಮತ್ತು ಇಂಗ್ಲೀಶಿನಲ್ಲಿ; ಸಂಸ್ಕೃತ ಅಸ್ಸಾಮಿ ಬಂಗಾಳಿ ಭಾಷೆಗಳಲ್ಲಿ ದೊಡ್ಡ ವಿದ್ವತ್ತು. (ಅವರ ಅಸ್ಸಾಮಿ ಬಂಗಾಳಿ ತಿಳಿವಳಿಕೆಯಿಂದ ಕನ್ನಡಕ್ಕೆ ಪ್ರಯೋಜನವಿನ್ನೂ ಆಗಿಲ್ಲ). ಪಂಪ ಅವರ ಇಷ್ಟದ ಕವಿ. ಮೂಲತಃ ಇಂಗ್ಲೀಶ್ ಸಾಹಿತ್ಯದ ವಿದ್ಯಾರ್ಥಿಯಾದರೂ ಸಾಹಿತ್ಯಕ್ಕಿಂತ ಹೆಚ್ಚಾಗಿ ಅಂತರಾಷ್ಟ್ರೀಯ ರಾಷ್ಟ್ರೀಯ ರಾಜಕಾರಣದ ಮೇಲೆ ಹೆಚ್ಚು ಬರೆವಣಿಗೆ. ಅದರಲ್ಲೂ ಈಶಾನ್ಯ ಭಾರತದ ರಾಜಕಾರಣ ಭಾಷೆ ಧರ್ಮ ಸಂಸ್ಕೃತಿ ಕುರಿತ ಅವರ ತಿಳಿವಳಿಕೆ ಅಪರೂಪದ್ದು. ಇವನ್ನೆಲ್ಲ ಒಟ್ಟಿಗೆ ಹೇಗೆ ಕಲ್ಪಿಸಿಕೊಳ್ಳುವುದು? ಪ್ರಭಾಕರ ತಮ್ಮ ಕಾದಂಬರಿಯ ಒಂದು ಪಾತ್ರದ ಹಾಗೇ ಬದುಕಿದ್ದಾರೆ.

ಅವರು ಈಚೆಗೆ ಮಾತಾಡುತ್ತ ಕೊಂಚ ದಣಿದ ದನಿಯಲ್ಲಿ “ಸ್ವಾಮಿ, ಕರ್ನಾಟಕ ನನಗೆ ಸಾಕಾಗಿದೆ. ಗೌಹಾಟಿಗೆ ಹೋಗಬೇಕು ಅನಿಸುತ್ತಿದೆ’ ಎಂದು ಗೊಣಗಿದರು. “ಹೋಗಿ. ಆದರೆ ಮತ್ತೆಬನ್ನಿ’’ ಎಂದೆ. ಅವರಲ್ಲಿ ಕೋಲಾರ-ಗೌಹಾತಿಗಳ ನಡುವೆ ವಿಚಿತ್ರವಾದ ಆಕರ್ಷಣೆ ವಿಕರ್ಷಣೆಯಿದೆ. ಇದು ಬಹುಕಾಲ ಬೇರೆಡೆ ಬೆಳೆದ ಮರ ತನ್ನ ಮೂಲನೆಲಕ್ಕೆ ಬಂದು ನಾಟಿಗೊಂಡರೆ ಬೇರೂರುವ ಕಷ್ಟ. ಮರಳಿ ಹುಟ್ಟಿದೂರಿಗೆ ಬರುವಿಕೆ ಬಾಲ್ಯದ ನೆನಪುಗಳನ್ನು ಎಚ್ಚರಿಸಿ ಸುಖ ಕೊಡುತ್ತದೆ; ಆದರೆ ಹೊಚ್ಚ ಹೊಸತೆೆನಿಸುವಷ್ಟು ಬದಲಾಗಿರುವ ಪರಿಸರವು, ಕಾಡುವ ಏಕಾಂಗಿತನವನ್ನೂ ತಂದಿಡುತ್ತದೆ. ಯಾರ ಮರುಕವನ್ನೂ ಬಯಸದೆ ಏಕಾಂತದಲ್ಲಿ ಘನತೆಯಿಂದ ಕೊನೆಯ ದಿನಗಳನ್ನು ಕಳೆಯ ಬಯಸುವ ಇಂತಹ ಹಠಮಾರಿ ಜೀವಗಳು, ಒಳಗೇ ಮೃದ್ವಂಗಿಗಳಾಗಿ ಆಪ್ತಸಂಗಾತಕ್ಕೆ ಹಾತೊರೆಯುತ್ತಿರುತ್ತವೆ.

ಆ ಸಂಗಾತದ ಸ್ವರೂಪ ಎಂತಹುದು ಎಂದು ಸ್ಪಷ್ಟವಾಗುವುದಿಲ್ಲ. ನಾನು ‘ಕಾಮರೂಪಕ್ಕೆ ಯಾವಾಗ ಹೋಗುತ್ತೀರಿ’ ಎಂದು ಕೇಳಿದೆ: ‘ಆದಿಮದ 50ನೇ ಬೆಳುದಿಂಗಳ ಕಾರ್ಯಕ್ರಮ ಮುಗಿಸಿಕೊಂಡು’ ಎಂದರು.
ಪ್ರತಿಯೊಬ್ಬರಿಗೂ ಬಾಳಿನಲ್ಲಿ ಬಹುರೂಪಧಾರಣೆ ಮಾಡಬೇಕಾದ ಒತ್ತಡಗಳು ಎದುರಾಗಬಹುದು. ಆದರೆ ಈ ರೂಪಧಾರಣೆಗೆ ಕಾರಣ, ನಮ್ಮ ಇಚ್ಛಾನಿಚ್ಛೆಗಳು ಮಾತ್ರವಲ್ಲ, ಬಾಳಿನ ಅನೂಹ್ಯ ಒತ್ತಡಗಳು ಸಹ. ಈ ಒತ್ತಡಗಳು ಬರೆಹ ಇಲ್ಲವೇ ಮಾತಿನ ವ್ಯಾಖ್ಯಾನಕ್ಕೆ ಕೆಲವೊಮ್ಮೆ ನಿಲುಕುವಂತೆ ಇರುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending