Connect with us

ನೆಲದನಿ

ಅಯೋಧ್ಯೆ ತೀರ್ಪು : ಗೆದ್ದಿದ್ದು ಧರ್ಮವಲ್ಲ, ಸೋತಿದ್ದು ಅನ್ಯಾಯವಲ್ಲ..!

Published

on

  • ಡಾ.ಕೆ.ಎ.ಓಬಳೇಶ್

    ಭಾರತದ ನೆಲದಲ್ಲಿ ಸನಾತನವಾದಿಗಳ ಅಸಮಾನತೆಯ ಸಿದ್ಧಾಂತಕ್ಕೆ ಧಕ್ಕೆಯಾದಾಗಲೆಲ್ಲ ತನ್ನ ಅಸ್ತಿತ್ವದ ಉಳಿವಿಗಾಗಿ ಒಂದಿಲ್ಲೊಂದು ತಂತ್ರಗಳನ್ನು ರೂಪಿಸುತ್ತಲೇ ಬಂದಿದ್ದಾರೆ. ಇಂತಹ ತಂತ್ರಗಾರಿಯನ್ನು ಹುಡುಕುತ್ತ ಹೋದರೆ ಪುರಾಣಗಳ ಕಾಲದಿಂದಲೇ ಇದರ ಕುರುಹುಗಳು ದೊರೆಯುತ್ತವೆ. ಇದಕ್ಕೆ ಪೂಕರವಾಗಿ ನಿರ್ಮಾಣವಾಗಿದ್ದೆ ಬಾಬರಿ ಮಸಿದಿಯ ದ್ವಂಸ ಪ್ರಕರಣ. ಈ ಬಾಬರಿ ಮಸಿದಿ ಪ್ರಕರಣ ಇವರಿಗೆ ಒಂದು ನೆಪ ಮಾತ್ರ. ವಾಸ್ತವವಾಗಿ ಇವರಿಗೆ ರಾಮನ ಮೇಲೆ ಎಳ್ಳಷ್ಟು ಕಾಳಜಿ ಇಲ್ಲ.

ಆದರೆ ಇವರಿಗೆ ಬೇಕಾಗಿರುವುದು ಅಸಮಾನತೆಯ ವರ್ಣಾಶ್ರಮದ ಬೇರುಗಳು. ಸನಾತನವಾದದ ಈ ಅಸಮಾನತೆಯ ಬೇರುಗಳು ಬ್ರಿಟಿಷರಿಂದ ಸ್ವಾತಂತ್ರ್ಯ ಲಭಿಸುವವರೆಗೂ ಭದ್ರವಾಗಿದ್ದವು. ಈ ನಡುವೆ ಬುದ್ಧನ ಕಾಲದಿಂದಲೂ ಈ ವರ್ಣಾಶ್ರಮದ ಬೇರುಗಳಿಗೆ ಧಕ್ಕೆಯಾದಗಲೆಲ್ಲ ಏನೆಲ್ಲಾ ತಂತ್ರಗಳನ್ನು ಮಾಡಿ, ಬಣ್ಣ ಬದಲಾಯಿಸಿಕೊಂಡು ತಮ್ಮ ಅಸ್ತಿತ್ವವನ್ನು ಕಾಪಾಡಿಕೊಂಡು ಬಂದಿದ್ದಾರೆ ಎಂಬುದಕ್ಕೆ ಚರಿತ್ರೆಯಲ್ಲಿ ಸಾಕಷ್ಟು ನಿದರ್ಶನಗಳು ಕಂಡುಬರುತ್ತವೆ.

ಆದರೆ ಅದನ್ನು ಇಲ್ಲಿ ಚರ್ಚಿಸುವುದಕ್ಕೆ ಅವಕಾಶವಿಲ್ಲ. ಆದರೆ ಭಾರತದ ನೆಲದಲ್ಲಿ ವೈದಿಕತೆಯ ವಿರುದ್ಧ ಸಮರ ಸಾರಿದ ಎಲ್ಲ ಅವೈದಿಕ ಶ್ರಮಣಧಾರೆಗಳನ್ನು ಸನಾತನವಾದಿಗಳುವೈದಿಕೀಕರಣಗೊಳಿಸಿರುವುದು ಮಾತ್ರ ಸತ್ಯ. ಇದಕ್ಕೆ ನಿದರ್ಶನವಾಗಿ ಸಮಾನತೆಯ ಜೀವಪರ ಮೌಲ್ಯಗಳನ್ನು ಎತ್ತಿಹಿಡಿದ ಬುದ್ಧ, ಬಸವಣ್ಣನಂತಹ ದಾರ್ಶನಿಕರು ಇಂದು ದೇವರಾಗಿ ಪೂಜೆಗೊಳ್ಳುತ್ತಿದ್ದಾರೆ. ಆದರೆ ಈ ಎಲ್ಲಾ ದಾರ್ಶನಿಕರ ಜೀವಪರ ನಿಲುವುಗಳನ್ನು ತಿಂದು ಜೀರ್ಣಿಸಿಕೊಂಡಿದ್ದ ಸನಾತನವಾದಿಗಳಿಗೆ ನುಂಗಲಾರದ ತುತ್ತಾಗಿದ್ದು ಮಾತ್ರ ಬಾಬಾಸಾಹೇಬ್ ಅಂಬೇಡ್ಕರ್ ನೀಡಿದ ಅತ್ಯಮೂಲ್ಯವಾದ ಸಂವಿಧಾನ.

ಭಾರತವನ್ನು ಬ್ರಿಟಿಷರ ದಾಸ್ಯದಿಂದ ಬಿಡಿಸಿಕೊಂಡು ಮತ್ತೇ ಮನುವಾದಿ ಭಾರತವನ್ನು ನಿರ್ಮಿಸಬೇಕು ಎಂಬುದು ಸನಾತನವಾದಿಗಳ ಆಶಯವಾಗಿತ್ತು. ಆದರೆ ಬಾಬಾಸಾಹೇಬ ಕನಸ್ಸಿನ ಪ್ರಬುದ್ಧ ಭಾರತವು ಮನುವಾದಿಗಳಿಗೆ ಸಹಿಸದ ತುತ್ತಾಗಿತ್ತು. ಅಷ್ಟೇ ಅಲ್ಲದೇ ಶತ ಶತಮಾನಗಳಿಂದ ಕಾಪಾಡಿಕೊಂಡು ಬಂದಿದ್ದ ತಮ್ಮ ಅಸಮಾನತೆಯ ಗೊಡ್ಡು ಸಂಪ್ರದಾಯಗಳಿಗೆ ಬಾಬಾಸಾಹೇಬರು ತಿಲಾಂಜಲಿಯನ್ನು ಇಟ್ಟು ಸಮಾನತೆ ನಾಡಿಗಾಗಿ ಶ್ರಮಿಸಿದರು.

ಸಂವಿಧಾನದ ಜಾರಿಯಿಂದ ತಮಗೆ ಅಸ್ತಿತ್ವವಿಲ್ಲವೆಂದು ತಿಳಿದ ಮನುವಾದಿಗಳು ಕೋಮುವಾದವನ್ನು ಹುಟ್ಟಿಹಾಕುವ ಮೂಲಕ ಸಾಮಾನ್ಯ ಜನರನ್ನು ತಮ್ಮತ್ತ ಸೆಳೆಯುವ ಪ್ರಯತ್ನಕ್ಕೆ ಮುಂದಾದರು. ಹಿಂದೂ-ಮುಸಲ್ಮಾನ್-ಕ್ರೈಸ್ತರಲ್ಲಿ ವಿಷಬೀಜ ಬಿತ್ತುವ ತಂತ್ರಗಳಿಗೆ ಮುಂದಾದರು. ಇಂತಹ ಸಂದರ್ಭದಲ್ಲಿ ಇವರಿಗೆ ಸಿಕ್ಕಿದ್ದೆ ಬಾಬರಿ ಮಸಿದಿ. ತಮ್ಮದಲ್ಲದ ಜಾಗದಲ್ಲಿ ರಾತ್ರೋರಾತ್ರಿ ರಾಮನ ವಿಗ್ರಹ ಸ್ಥಾಪನೆ ಮಾಡಿದ ಸನಾತನವಾದಿಗಳು ಒಂದಿಲ್ಲ ಒಂದು ರೀತಿಯಲ್ಲಿ ಗಲಭೆಗಳನ್ನು ಸೃಷ್ಟಿಸುತ್ತಲೆ ಬಂದರು.

ಕೊನೆಗೆ ರಾಮ ಇದೇ ಜಾಗದಲ್ಲಿ ಜನ್ಮತಳೆದಿದ್ದ, ಈ ಹಿಂದೆ ಇಲ್ಲಿ ರಾಮ ಮಂದಿರವಿತ್ತು. ಬಾಬರ್ ಅದನ್ನು ದ್ವಂಸ ಮಾಡಿ ಮಸಿದಿ ನಿರ್ಮಾಣ ಮಾಡಿದ್ದಾನೆ ಎಂಬ ಕಟ್ಟುಕಥೆಗಳು ನಿರ್ಮಾಣವಾದವು. ನಂತರ ಕೋಮುವಾದಿಗಳ ತಂತ್ರಕ್ಕೆ ಬಲಿಯಾಗಿ ಮಸಿದಿಯು ನೆಲಸಮವಾಯಿತು. ಅಂದಿನಿಂದ ಇಂದಿನವರೆಗೂ ಒಂದಿಲ್ಲ ಒಂದು ರೀತಿಯಲ್ಲಿ ಕೋಮುಗಲಭೆಗಳು ನಡೆಯುತ್ತಲೆ ಇದ್ದವು. ಕೋರ್ಟಿನಲ್ಲಿ ಯಾರ ಪರವಾಗಿಯೂ ಯಾರ ವಿರುದ್ಧವಾಗಿಯೂ ತೀರ್ಪು ನೀಡಲಾಗದ ನ್ಯಾಯಾಲಯವು ಈ ಪ್ರಕರಣವನ್ನು ಮುಂದೂಡುತ್ತಲೆ ಬರಲಾಗಿತ್ತು. ನ್ಯಾಯಾಲಯವು ಹೀಗೆ ಸಮಯವನ್ನು ಮುಂದೂಡುವುದಕ್ಕೆ ಕಾರಣವು ಇತ್ತು.

ಸನಾತನವಾದಿಗಳು ಹುಸಿ ದೇಶಭಕ್ತಿ ಹಾಗೂ ದೇಶಪ್ರೇಮದ ಅಡಿಯಲ್ಲಿ ಸೃಷ್ಟಿಸಿದ ಈ ಪ್ರಕರಣವನ್ನೇ ತನ್ನ ಬಂಡವಾಳ ಮಾಡಿಕೊಂಡ ಸಂಘಪರಿವಾರದ ರಾಜಕೀಯ ಮುಖವಾದ ಬಿ.ಜೆ.ಪಿ ಸರ್ಕಾರವು ತನ್ನ ರಾಜಕೀಯ ವೈಭೋಗಕ್ಕೆ ಈ ಪ್ರಕರಣವನ್ನು ಬಳಸಿಕೊಂಡಿತು. ಈ ಪ್ರಕರಣವನ್ನು ಬಿ.ಜೆಪಿ ಸರ್ಕಾರವು ಎಷ್ಟರ ಮಟ್ಟಿಗೆ ಬಳಸಿಕೊಂಡಿತು ಎಂದರೆ ದೇಶದ ಆರ್ಥಿಕತೆ ಬೆತ್ತಲಾಗಿ, ನಿರುದ್ಯೋಗ ಗಗನ ಮುಟ್ಟಿದರೂ, ಜಿ.ಎಸ್ಟಿಯಂತಹ ತೆರಿಗೆಗಳು ಸಾಮಾನ್ಯ ಜನರು ತಿನ್ನುವ ಅನ್ನವನ್ನು ಕಸಿದುಕೊಂಡರು ಜನರು ಮಾತ್ರ ಮೋದಿಗೆ ಜೈಕಾರ ಹಾಕುವುದು ತಪ್ಪಲಿಲ್ಲ.

ಇದಕ್ಕೆ ಕಾರಣ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಮ ಮಂದಿರವನ್ನು ಕಟ್ಟುತ್ತದೆ ಎಂಬ ಆಶಾ ಭಾವನೆಯಾಗಿತ್ತು. ಆದರೆ ಮೋದಿ ಸರ್ಕಾರ ಇದನ್ನೇ ಬಂಡವಾಳ ಮಾಡಿಕೊಂಡು ಎರಡನೇ ಭಾರಿ ಅಧಿಕಾರ ಹಿಡಿಯುವ ಸಂದರ್ಭಕ್ಕಾಗಲೇ ಭಾರತೀಯರನ್ನು ಬೆತ್ತಲೆಗೊಳಿಸಿಯಾಗಿತ್ತು. ಈ ಸಂದರ್ಭದಲ್ಲಿ ಜನರು ತಮ್ಮ ಸರ್ಕಾರವನ್ನು ವಿರೋಧಿಸದಂತೆ ಬಾಯಿ ಮುಚ್ಚಿಸುವ ತಂತ್ರವಾಗಿ ಅಯೋಧ್ಯ ತೀರ್ಪು ಹಿಂದುಗಳ ಪರವಾಗಿ ಬರುವಂತೆ ನೋಡಿಕೊಂಡರು.

ಆದರೆ ಸರ್ವೋಚ್ಚ ನ್ಯಾಯಾಲಯ ನೀಡಿದೆ ಎನ್ನುವ ಕಾರಣಕ್ಕಾಗಿ ಎಲ್ಲರೂ ಈ ತೀರ್ಪಿಗೆ ತಲೆಭಾಗಿದರೇ ಹೊರತು, ಇದಕ್ಕೆ ಬಹುತೇಕ ಬುದ್ಧಿಜೀವಿಗಳು ಅಸಮಾಧಾನವನ್ನು ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಹಲವಾರು ನಿವೃತ್ತ ನ್ಯಾಯಾಧೀಶರು ಕೂಡ ಈ ತೀರ್ಪಿನ ಬಗ್ಗೆ ಸಂವಿಧಾನಿಕ ಚೌಕಟ್ಟಿನಲ್ಲಿ ವಿರೋಧವನ್ನು ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರಮುಖ ಕಾರಣವೆಂದರೆ ಧರ್ಮದ ಹೆಸರಿನ ಮೇಲೆ ಹೊರಬಂದ ತೀರ್ಪಿನಲ್ಲಿ ನಿಜವಾದ ಧರ್ಮ ಸೋತಿತ್ತು. ಅಧರ್ಮ ತಲೆ ಎತ್ತಿ ನಿಂತಿತ್ತು.

ಚರಿತ್ರೆಯ ಪುಟಗಳಲ್ಲಿ ಒಬ್ಬ ರಾಜ ತನ್ನ ಧರ್ಮದ ಸಂಕೇತವಾಗಿ ನಿರ್ಮಾಣ ಮಾಡಿದ ಧಾರ್ಮಿಕ ಕೇಂದ್ರವು ನಮ್ಮ ಕಣ್ಣ ಮುಂದೆಯೇ ಇದೆ. ಆದರೆ ಇದನ್ನು ಕೆಡವಿರುವುದು ಅಕ್ಷಮ್ಯ ಅಪರಾಧ ಎನ್ನುವುದು ಕೂಡ ನ್ಯಾಯಾಲಯಕ್ಕೆ ಸ್ಪಷ್ಟವಾಗಿ ಗೊತ್ತಿದೆ. ಹೀಗಿದ್ದರೂ ತನ್ನ ತೀರ್ಪಿನಲ್ಲಿ ಮಸಿದಿಯನ್ನು ಕೆಡವಿದ್ದು ಅಪರಾಧ ಎಂದು ಬಿಂಬಿಸಿದರೂ ಕೂಡ, ತೀರ್ಪು ಬಂದಿದ್ದು ಕಟ್ಟು ಕಥೆಯನ್ನು ಕಟ್ಟಿದವರ ಪರವಾಗಿಯೇ.

ನ್ಯಾಯಲಯ ನೀಡಿದ ಈ ತೀರ್ಪು ನಿಜವಾದ ನ್ಯಾಯಧರ್ಮಕ್ಕೆ ಮಾಡಿದ ಅಪಚಾರದಂತಿದೆ.ಅಯೋಧ್ಯೆಯಲ್ಲಿ ಮಸಿದೆ ಇತ್ತು ಎಂಬುದು ನಮ್ಮ ಕಣ್ಣ ಮುಂದಿನ ಸತ್ಯ. ಆದರೆ ಅಲ್ಲಿ ರಾಮಜನ್ಮ ತಳೆದಿದ್ದ ಎಂಬುದು ಕೇವಲ ಕಟ್ಟು ಕಥೆಯಾಗಿದೆ. ನ್ಯಾಯಾಲಯಕ್ಕೆ ಕಟ್ಟುಕಥೆಗಳು ಸಾಕ್ಷ್ಯಗಳಾಗಲು ಸಾಧ್ಯವೇ ಇಲ್ಲ. ಆದರೆ ರಾಜಕೀಯ ಪ್ರೇರಿತವಾದ ಕಾರಣದಿಂದಾಗಿ ಚರಿತ್ರೆಯ ಕುರುಹುಗಳನ್ನು ಕಡೆಗಣಿಸಿ, ದಂತಕಥೆಗೆ ನ್ಯಾಯ ಕಲ್ಪಿಸಿದ್ದು ಮಾತ್ರ ಅನ್ಯಾಯಕ್ಕೆ ಸಿಕ್ಕ ಜಯ ಎಂಬುದರಲ್ಲಿ ಎರಡು ಮಾತಿಲ್ಲ.

ಹಿಂದೂಗಳ ಪರವಾದ ತೀರ್ಪು ಬಂದಾಯ್ತು ನಿಜ. ಆದರೆ ಹಿಂದೂಧರ್ಮದಲ್ಲಿ ಮನೆ ಮಾಡಿಕೊಂಡಿದ್ದ ಎಲ್ಲಾ ಅನಿಷ್ಟಗಳು ರಾಮಮಂದಿರ ನಿರ್ಮಾಣದಿಂದ ದೂರವಾಗುತ್ತವೆ ಎಂದು ಆಶಾಭಾವನೆಯನ್ನು ತಳೆಯೊಣವೇ ಹಾಗಾದರೆ..! ಇಲ್ಲ, ನಿಜವಾದ ಸಮಸ್ಯೆಗಳು ಎದುರಾಗುವುದೇ ಇಲ್ಲಿ.

ಹಿಂದುತ್ವವನ್ನು ಕಾಪಾಡುತ್ತೇವೆ ಎಂದು ಹೇಳುತ್ತಲೇ ರಾಜಕಿಯ ಚುಕ್ಕಾಣಿ ಹಿಡಿದಿರುವ ಪಕ್ಷವು ದೇಶವನ್ನೇ ದಿವಾಳಿತನಕ್ಕೆ ತಳ್ಳುತ್ತಿದೆ.ದೀನ ದಲಿತರು ಧರ್ಮದ ಹೆಸರಿನಲ್ಲಿ ಬಲಿ ಪಶುಗಳಾಗುತ್ತಿದ್ದಾರೆ. ದೀನ ದಲಿತರ ಹೆಣ್ಣುಮಕ್ಕಳಿಗೆ ಅಭದ್ರತೆ ಎದ್ದು ಕಾಡುತ್ತಿದೆ. ನಿರುದ್ಯೋಗ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿವೆ. ಇದಕ್ಕೆ ಕಾಶ್ಮೀರವೇ ಜ್ವಲಂತ ಸಾಕ್ಷಿಯಾಗಿದೆ.

ಇಷ್ಟೆಲ್ಲ ಸಂಕಷ್ಟದ ನಡುವೆಯೂ ಮೋದಿಯ ಜೈಕಾರ ಜ್ವಾಲೆ ಮಾತ್ರ ಮುಗಿಲು ಮುಟ್ಟುತ್ತಿದೆ. ಆ ಜ್ವಾಲೆ ಮುಂದೆ ಕೂಗುವವರು ಹಿಂದೆ ತಮ್ಮನ್ನು ಸುಡುತ್ತದೆ ಎಂಬ ಅರಿವಿಲ್ಲದೆ ನಿಂತಿದ್ದಾರೆ. ಮುಂದೊಂದು ದಿನ ಈ ಪರಿಸ್ಥಿತಿಯು ಸಾಮಾನ್ಯ ಜನರನ್ನು ಯಾವ ಹಂತಕ್ಕೆ ತೆಗೆದುಕೊಂಡು ಹೋಗುತ್ತದೆಯೋ ಗೊತ್ತಿಲ್ಲ. ಆದರೆ ಒಂದಂತು ಸತ್ಯ, ಸರ್ವರು ಸಮಾನರೆಂದು ಸಾರಿದ ಭಾರತದ ಸಂವಿಧಾನದ ಆಶಯಗಳನ್ನು ಒಂದೊಂದಾಗಿಯೇ ಸಡಿಲಗೊಳಿಸುವ ಕಾರ್ಯವಂತೂ ನಿಧಾನವಾಗಿ ಸಾಗುತ್ತಲೆ ಇದೆ.

ಇದಕ್ಕೆ ದಮನಿತ ಸಮುದಾಯದ ಪ್ರಬಲರೂ ಬೆಂಬಲವಾಗಿ ನಿಂತಿರುವುದು ಮತ್ತೊಂದು ದುರಂತವಾಗಿದೆ. ಈ ಎಲ್ಲರದ ನಡುವೆ ಧರ್ಮ ಸೋತು, ಅಧರ್ಮ ತಾಂಡವವಾಡುತ್ತಿದೆ. ಮುಂದೊಂದು ಇಂತಹ ಅಪಾಯಕಾರಿ ತೀರ್ಪು ಭಾರತೀಯರೆಲ್ಲರನ್ನು ಸಮಾನವಾಗಿ ಕಾಣುವಂತಹ ಸಂವಿಧಾನವನ್ನೇ ಬಲಿ ತೆಗೆದುಕೊಳ್ಳುವ ಸಂದರ್ಭ ನಮ್ಮ ಮುಂದಿದೆ. ಇದಕ್ಕೆ ನಿದರ್ಶನವಾಗಿ ಅಯೋಧ್ಯೆ ತೀರ್ಪು ನಮ್ಮ ಮುಂದಿದೆ.

ಯಾರು ಕಂಡಿರದ, ನೋಡಿರದ ಕಾಲದಲ್ಲಿ ರಾಮ ಜನಿಸಿದ ಎಂಬ ಕಟ್ಟುಕಥೆಗೆ ಮಹತ್ವ ನೀಡಿ, ನಮ್ಮ ಕಣ್ಣ ಮುಂದೆ ನಡೆದ ಮಸಿದಿಯನ್ನು ಮುಚ್ಚಿ ಹಾಕಲಾಯಿತು. ಮುಂದೊಂದು ದಿನ ಇದೇ ಪ್ರಕರಣವನ್ನು ಕೇಂದ್ರವಾಗಿಟ್ಟುಕೊಂಡು ಬಾಬಾಸಾಹೇನ್ ಅಂಬೇಡ್ಕರ್ ಅವರು ಮನುವಾದವನ್ನು ತುಳಿದು ಸಂವಿಧಾನ ರಚಿಸಿದ್ದಾರೆ.

ಇದರಿಂದ ಹಿಂದುಗಳಿಗೆ ಮತ್ತು ಹಿಂದುತ್ವದ ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ ನಮಗೆ ಸಂವಿಧಾನ ಬೇಡ ಮನುವಾದ ಬೇಕು ಎಂಬ ವಾದವು ನ್ಯಾಯಾಲಯದ ಮೆಟ್ಟಲೇರಿದರೂ ಆಶ್ಚರ್ಯಪಡಬೇಕಿಲ್ಲ. ಆಗ ದೇಶದ ಚುಕ್ಕಾಣಿಯು ಇಂತಹ ಕೋಮುವಾದಗಳ ಕೈಯಲ್ಲಿದ್ದರೆ ನ್ಯಾಯಾಲಯದ ತೀರ್ಪು ಯಾವುದರ ಪರವಾಗಿ ಬರುತ್ತದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕವಿತೆ | ನೆನಪು

Published

on

ಕವಿ | ರುದ್ರಪ್ಪ ಹನಗವಾಡಿ
  • ರುದ್ರಪ್ಪ ಹನಗವಾಡಿ

ಅಪ್ಪನನ್ನು ಒಪ್ಪ ಮಾಡಿ
ವರ್ಷಗಳೇ ಕಳೆದವು ಮುವ್ವತ್ತೇಳು
ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ
ಅರಸರ ಮೀಸಲಾತಿ
ಬಸವಲಿಂಗಪ್ಪನವರ ಬೂಸಾ ಖ್ಯಾತಿ
ಮಲ ಹೊತ್ತು
ಮಲಗಿದ್ದ ಕಾಲಕ್ಕೆ
ಚುರುಕು ಮುಟ್ಟಿಸಿದ ಕಾಲ

ಹರೆಯದ ನನಗೆ
ಕಾಲೇಜ ಮೇಷ್ಟರ ಕೆಲಸ
ಸೂಟು ಬೂಟಿನ ವೇಷ
ಆ ಮೇಲೆ ಅಮಲದಾರಿಕೆ
ಎಲ್ಲ ನಡೆದಾಗಲೇ ಅವ್ವನನ್ನು
ಆಸ್ಪತ್ರೆಗೆ ಸೇರಿಸಿದ್ದು
ಕಾಲ ಕಳೆದು ಕೊಂಡು
ಕೋಲ ಹಿಡಿದದ್ದು
ನಿನ್ನೆ ಮೊನ್ನೆಯಂತೆ
ಬಾಲ್ಯವಿನ್ನು ಉಂಟೆಂಬಂತೆ
ಭಾವಿಸುವಾಗಲೇ ಅವ್ವನ ಸಾವು

ಅದರೊಟ್ಟಿಗೆ ಕಾಯದಾಯಾಸ ತೀರಿಸಲು
ಬಂದರೆ ಬೆಂಗಳೂರಿಗೆ
ರೌಡಿಗಳ ಕಾಟ
ಅಂಬೇಡ್ಕರ್ ಪಟದ ಕೆಳಗೆ
ದೌರ್ಜನ್ಯದ ದಂಡು

ಅಮಾಯಕರಿಗೆ ಗುಂಡು
ಕಂಡುಂಡ ಹಾದಿಯ ಗುಡಿಸಲುಗಳಲ್ಲೀಗ
ಮುಗಿಲು ಮುಟ್ಟೋ ಮಹಲುಗಳು
ಅಂತಲ್ಲಿ
ದೇಶ ವಿದೇಶಗಳ
ಅಹವಾಲುಗಳು
ಅವಿವೇಕಗಳು
ನೋಡ ನೋಡುತ್ತಿದ್ದಂತೆ
ಉಸಿರು ಬಿಗಿಹಿಡಿದ ಜನರ ಒಳಗೆ
ಒಳಪದರಗಳೊಳಗೆ ಕನಸ ಬಿತ್ತಿ
ಹಸಿರ ಹೊನ್ನು ಬಾಚಲು ಹವಣಿಸಿದ
ಬಿಳಿ ಜನರ ಆಟ
ಅರ್ಥವಾಗುವುದೇ ಎಲ್ಲ
ಗೋಣ ನೀಡುವರೆ
ಹೂತಿಟ್ಟ ಗೂಟಕ್ಕೆ ?

( ಚಿಂತಕ ರುದ್ರಪ್ಪ ಹನಗವಾಡಿ ಅವರ ‘ಊರು – ಬಳಗ’ ಕವನ ಸಂಕಲನದಿಂದ ‘ ನೆನಪು ‘ ಕವಿತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕೃತಿಯನ್ನು ಫ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ 2013 ರಲ್ಲಿ ಪ್ರಕಿಸಿದೆ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ; ಒಂದು ಚಿಂತನೆ

Published

on

  • ಮಹಾಂತೇಶ್.ಬಿ.ನಿಟ್ಟೂರು, ದಾವಣಗೆರೆ

ನಿಜ ಶರಣ ಶ್ರೀ ಅಂಬಿಗರ ಚೌಡಯ್ಯನವರ ಜೀವಿತ ಕಾಲ 12 ನೇ ಶತಮಾನದ ಬಸವಾದಿ ಶರಣರ ಕಾಲದಲ್ಲೇ ಇತ್ತು ಎಂಬುದು ಇತಿಹಾಸಕಾರರ ಸಂಶೋಧನೆಯಿಂದ ತಿಳಿದು ಬರುತ್ತದೆ. ಅವರ ಹುಟ್ಟೂರು ಹಾವೇರಿ ಜಿಲ್ಲೆಯ ಆಗಿನ ಶಿವಪುರ, ಈಗಿನ ಚೌಡಯ್ಯದಾನಪುರ. ಅವರ ತಂದೆಯ ಹೆಸರು ಶ್ರೀ ವಿರೂಪಾಕ್ಷ, ತಾಯಿಯ ಹೆಸರು ಪಂಪಾಂಭಿಕೆ, ಹೆಂಡತಿಯ ಹೆಸರು ಸುಲೋಚನಾ ಹಾಗೂ ಮಗನ ಹೆಸರು ಪುರವಂತ.

ಅಂಬಿಗ ವೃತ್ತಿಯ ಚೌಡಯ್ಯನವರು ಅಲ್ಲಮ ಪ್ರಭು ಮತ್ತು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಇದ್ದ ಒಬ್ಬ ಕ್ರಾಂತಿಕಾರಿ, ದಿಟ್ಟ, ನೇರ, ನಿಷ್ಠುರ ನುಡಿಯ ವಚನಕಾರ. ಕಲ್ಯಾಣ ಕ್ರಾಂತಿಯ ನಂತರ ಇವರು ತಮ್ಮ ವಚನಗಳ ಗಂಟನ್ನು ಹೊತ್ತು ಉಳವಿಗೆ ನಂತರ ತಮ್ಮ ಗ್ರಾಮವಾದ ತುಂಗಭದ್ರಾ ನದಿಯ ದಡದ ಮೇಲಿರುವ ಶಿವಪುರಕ್ಕೆ ಬಂದು ದೋಣಿ ನಡೆಸುವ ವೃತ್ತಿಯಲ್ಲಿ ನಿರತರಾಗಿ ವಚನ ರಚನೆ ಮಾಡಿರುವುದು ತಿಳಿದು ಬರುತ್ತದೆ.

ಚೌಡಯ್ಯನವರು ತಮ್ಮ ಜೀವಿತಾವಧಿಯಲ್ಲಿ ಅನೇಕ ಪವಾಡಗಳನ್ನು ಮಾಡಿರುತ್ತಾರೆ. ಗಿಡಮೂಲಿಕೆ ಔಷಧಿಗಳಿಂದ ಕ್ಷಯ ರೋಗ, ಕುಷ್ಠರೋಗ ಗುಣಪಡಿಸುವುದು, ಹಾವು ಕಚ್ಚಿದವರನ್ನು

ಬದುಕಿಸುವುದು ಇತ್ಯಾದಿ..

ಒಮ್ಮೆ ಗುತ್ತಲದ ಅರಸನು ಬೇಟೆಗಾಗಿ ಈ ಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ, ಆತನ ಸೇನಾಧಿಪತಿಯು ಹಾವು ಕಚ್ಚಿ ಮೃತಪಟ್ಟನು. ಇದರಿಂದಾಗಿ ಅರಸನಿಗೆ ಅತೀವ ದುಃಖವುಂಟಾಗಿ ರೋಧಿಸತೊಡಗಿದನು. ಆಗ ಆತನ ಸೈನಿಕನೊಬ್ಬನು ಶ್ರೀ ಚೌಡಯ್ಯನವರ ಪವಾಡಗಳ ಬಗ್ಗೆ ವಿವರಿಸಿ ಹೇಳಲಾಗಿ, ಅರಸನು ತನ್ನ ಮೃತ ಸೇನಾಧಿಪತಿಯ ಶರೀರವನ್ನು ಚೌಡಯ್ಯನವರಲ್ಲಿಗೆ ತಂದು ಆತನನ್ನು ಬದುಕಿಸುವಂತೆ ಕೇಳಿಕೊಂಡರು, ಆಗ ಚೌಡಯ್ಯನವರು ಸೇನಾಧಿಪತಿಯನ್ನು ಬದುಕಿಸುತ್ತಾರೆ. ಇದರಿಂದ ಸಂತುಷ್ಟನಾದ ಅರಸನು ಶಿವಪುರದ ಸುತ್ತಲಿನ ಪೂರ್ವ – ಪಶ್ಚಿಮಕ್ಕೆ 14 ಮೈಲು ಹಾಗೂ ಉತ್ತರ – ದಕ್ಷಿಣಕ್ಕೆ 7 ಮೈಲು ಸುತ್ತಳತೆಯ ಭೂಮಿಯನ್ನು ಚೌಡಯ್ಯನವರಿಗೆ ದಾನವಾಗಿ ನೀಡಿದನು.

ಆದರೆ ಚೌಡಯ್ಯನರು ವೈರಾಗ್ಯಶಾಲಿಯು, ಲೌಕಿಕದಲ್ಲಿ ನಿರಾಸಕ್ತಿ ಹೊಂದಿದವರು ಆಗಿದ್ದರಿಂದ, ಅರಸನು ಕೊಡಮಾಡಿದ್ದ ಸಂಪೂರ್ಣ ಜಮೀನನ್ನು ತನ್ನ ಗುರುಗಳಾದ ಶ್ರೀ ಶಿವದೇವರಿಗೆ ದಾನವಾಗಿ ನೀಡಿದರು ಎಂಬ ಉಲ್ಲೇಖವಿದೆ. ಅಂದಿನಿಂದ ಶಿವಪುರ ಗ್ರಾಮಕ್ಕೆ ‘ಚೌಡಯ್ಯದಾನಪುರ’ ಎಂದು ಹೆಸರು ಬರುತ್ತದೆ. ಮುಂದೆ ಚೌಡಯ್ಯನರು ಅಲ್ಲಿ ದೇಹ ತ್ಯಾಗ ಮಾಡಿದ್ದರಿಂದ ತುಂಗಭದ್ರಾ ನದಿಯ ದಡದಲ್ಲಿ ಈಗಲೂ ಚೌಡಯ್ಯನವರ ಸಮಾಧಿ ಗದ್ದುಗೆ ಇದೆ.

ಭ್ರಮಾಲೋಕದಲ್ಲಿ ವಿಹರಿಸುತ್ತಾ ಕುಳಿತ, ಆಡಂಬರದಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಮಂದಿಯ ಕಪಾಳಕ್ಕೆ ಹೊಡೆದು ಎಚ್ಚರಿಸುವಂತಿವೆ ಚೌಡಯ್ಯನವರ ವಚನಗಳು. ಧಾರ್ಮಿಕ ಮೂಢನಂಬಿಕೆ ಬಿತ್ತುವವರಿಗೆ, ಸ್ವಾರ್ಥಿಗಳಾಗಿ ಬದುಕುವವರಿಗೆ, ಮುಖವಾಡ ಹಾಕಿ ಮಂಕು ಬೂದಿ ಎರಚುವವರಿಗೆ ಸಿಂಹ ಸ್ವಪ್ನದಂತೆ ಬೆಚ್ಚಿ ಬೀಳಿಸುತ್ತವೆ ನಿಜ ಶರಣ ಅಂಬಿಗರ ಚೌಡಯ್ಯನವರ ವಚನಗಳು. ಇದಕ್ಕೆ ತಾತ್ಪೂರ್ತಿಕವಾಗಿ ಕೆಲವು ವಚನಗಳು ಈ ಕೆಳಗಿನಂತಿವೆ;

“ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು/ನಂಬಿದರೆ ಒಂದೇ ಹುಟ್ಟಲಿ/ಕಡೆಯ ಹಾಯಿಸುವೆನೆಂದಾತನಂಬಿಗರ/ಚೌಡಯ್ಯ ನಿಜಶರಣನು”

ಈ ಮೇಲಿನ ವಚನ ಶ್ರೀ ಅಂಬಿಗರ ಚೌಡಯ್ಯನವರ ಸ್ವಾಭಿಮಾನ, ಧೈರ್ಯ, ನೇರ, ನಿರ್ಭಿಡೆಯ ವ್ಯಕ್ತಿತ್ವದ ಪ್ರತೀಕವಾಗಿದೆ.

ಹನ್ನೆರಡನೇ ಶತಮಾನದ ಸಂದರ್ಭದಲ್ಲಿ ಜಾತಿ ಮತ್ತು ವರ್ಗ ವ್ಯವಸ್ಥೆ ಎಷ್ಟರಮಟ್ಟಿಗಿತ್ತು ಎಂಬುದನ್ನು ಈ ವಚನ ಸೂಚಿಸುತ್ತದೆ. ಅಂತಹ ವಿಚಿತ್ರ, ವಿಕ್ಷಿಪ್ತ ಸನ್ನಿವೇಶದಲ್ಲಿ ಬಸವಾದಿ ಶರಣರು ಜಾತೀಯತೆ, ವರ್ಗ – ವರ್ಣ ವ್ಯವಸ್ಥೆಯ ವಿರುದ್ಧ ಬೃಹತ್ ಚಳುವಳಿಯನ್ನು ಕೈಗೊಂಡಾಗ ಅಂಬಿಗರ ಚೌಡಯ್ಯನವರ ಸತ್ಯನಿಷ್ಠೆ, ಪ್ರಾಮಾಣಿಕತೆಯ ವಚನಗಳು ಪ್ರಖರವಾಗಿ ಕಾಣಿಸುತ್ತವೆ. ಕೆಲವು ಢೋಂಗಿ ಭಕ್ತರಿಗೆ, ಕಪಟ ಸನ್ಯಾಸಿಗಳಿಗೆ ತನ್ನ ಖಾರವಾದ ವಚನಗಳ ಮೂಲಕ ಚುರುಕು ಮುಟ್ಟಿಸುತ್ತಾರೆ.

ಆಡಂಬರ ಮತ್ತು ದುರಾಸೆಯ ಜನರ ಮನಸ್ಥಿತಿ ಕಂಡು ಕೆಂಡಾಮಂಡಲವಾಗಿ ಪ್ರಸ್ತುತ ಪಡಿಸಿದ ಒಂದು ವಚನ ಇಂತಿದೆ;

“ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಕಾಳೋಗರನ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹಾರುವ ಪಕ್ಷಿಯನು/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೆಬ್ಬುಲಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೊಯ್ವ ಹೆಮ್ಮಾರಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಬರುವ ಉರಿ ಬಾಣವನು/ಇಂತೆಲ್ಲವನು ಒಂದೇ ಮಂತ್ರದಲ್ಲಿ ನಿಲ್ಲಿಸಬಹುದು;/ಲೋಭವೆಂಬ ಗ್ರಹಣ ಹಿಡಿದವರ ಏತರಿಂದಲೂ/ನಿಲ್ಲಿಸಲಾಗದು/ಈ ಲೋಭಕ್ಕೆ ದಾರಿದ್ರ್ಯವೇ ಔಷಧವು;/ಹೇಳಿದರೆ ಕೇಳರು, ತಾವು ತಿಳಿಯರು/ಶಾಸ್ತ್ರವ ನೋಡರು, ಭಕ್ತಿಯ ಹಿಡಿಯರು/ಇಂತಹ ಗೊಡ್ಡು ಮೂಳ ಹೊಲೆಯರಿಗೆ/ಕರ್ಮವೆಂಬ ಶರದ್ಧಿಯಲ್ಲಿ ಬಿದ್ದು ಹೊರಳಾಡುವುದೇ/ಸತ್ಯವೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು”

ಸಂಸಾರದ ಜಂಜಾಟದಲ್ಲಿ ಬಿದ್ದು ಒದ್ದಾಡುತ್ತಾ ಶಿವನನ್ನು ಮರೆತು ಹತ್ತು ಹಲವು ಚಿಂತೆಯಲ್ಲಿ ಮುಳುಗಿರುವ ಶವ ಮುಖದ ಜನರ ಸ್ಥಿತಿ-ಗತಿಯನ್ನು ಅರ್ಥಗರ್ಭಿತವಾಗಿ ಸಾದರಪಡಿಸುವ ಒಂದು ವಚನ ಇಂತಿದೆ;

“ಬಡತನಕೆ ಉಂಬುವ ಚಿಂತೆ/ಉಣಲಾದಡೆ ಉಡುವ ಚಿಂತೆ/ಉಡಲಾದಡೆ ಇಡುವ ಚಿಂತೆ/ಇಡಲಾದಡೆ ಹೆಂಡಿರ ಚಿಂತೆ/ಹೆಂಡಿರಾದರೆ ಮಕ್ಕಳ ಚಿಂತೆ/ಮಕ್ಕಳಾದಡೆ ಬದುಕಿನ ಚಿಂತೆ/ಬದುಕಾದಡೆ ಕೇಡಿನ ಚಿಂತೆ/ಕೇಡಾದಡೆ ಮರಣದ ಚಿಂತೆ/ಇಂತೀ ಹಲವು ಚಿಂತೆಯಲ್ಲಿಪ್ಪವರ ಕಂಡೆನು/ಶಿವನ ಚಿಂತೆಯಲ್ಲಿದ್ದಾತರೊಬ್ಬರನೂ ಕಾಣೆನೆಂದಾತ/ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು!”

ಸಮಯದ ಸದ್ಬಳಕೆ ಮಾಡಿಕೊಂಡು ಕಾಯಕ ಮಾಡುತ್ತಾ ಶಿವಭಕ್ತರಾಗಿ, ಜೀವನ ಪಾವನವಾಗಿಸುವಂತೆ ಕರೆ ನೀಡುವ ಒಂದು ವಚನ ಇಂತಿದೆ;

“ಗಾಳಿ ಬಿಟ್ಟಾಗ ತೂರಿಕೊಳ್ಳಿರಯ್ಯ/ಗಾಳಿ ನಿಮ್ಮ ಅಧೀನವಲ್ಲ ಕಂಡಯ್ಯ/ನಾಳೆ ತೂರಿಹೆನೆಂದಡಿಲ್ಲ ಕಂಡಯ್ಯ/ಶಿವಶರಣೆ ಎಂಬುದೊಂದು ಗಾಳಿ ಬಿಟ್ಟಲ್ಲಿ/ಬೇಗ ತೂರೆಂದನಂಬಿಗರ ಚೌಡಯ್ಯ”

ಕಾವಿ ಬಟ್ಟೆ ತೊಟ್ಟು, ಭಿಕ್ಷೆಗಾಗಿ ಜೋಳಿಗೆ ಹಾಕಿದವರೆಲ್ಲರೂ ಜಂಗಮರು, ಗುರುಗಳಾಗಲಾರರು ಎಂಬುದನ್ನು ವಿಡಂಬಿಸುವ ಒಂದು ವಚನ ಇಂತಿದೆ;

“ಕಂಥೆ ತೊಟ್ಟವ ಗುರುವಲ್ಲ/ಕಾವಿ ಹೊದ್ದವ ಜಂಗಮನಲ್ಲ/ಶೀಲ ಕಟ್ಟಿದವ ಶಿವಭಕ್ತನಲ್ಲ/ನೀರು ತೀರ್ಥವಲ್ಲ/ಕೂಳು ಪ್ರಸಾದವಲ್ಲ/ಹೌದೆಂಬವನ ಬಾಯ ಮೇಲೆ/ಅರ್ಧ ಮಣದ ಪಾದರಕ್ಷೆಯ ತೆಗೆದುಕೊಂಡು/ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ/ಟೊಕ ಟೊಕನೆ ಹೊಡೆ ಎಂದಾತ/ನಮ್ಮ ಅಂಬಿಗರ ಚೌಡಯ್ಯ”

ಹೀಗೆ ಬಸವಾದಿ ಶರಣರ ಸಮಾಜ ಸುಧಾರಣಾ ಚಳವಳಿಯಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಮುಡುಪಾಗಿಟ್ಟ ಶ್ರೀ ಅಂಬಿಗರ ಚೌಡಯ್ಯನವರು ತಮ್ಮ ಬದುಕಿನ ನೀತಿಯಿಂದ, ನಿಷ್ಠೆಯಿಂದ, ತೀಕ್ಷ್ಣ ಖಂಡನೆಯ ಬಂಡಾಯ ವಚನಗಳಿಂದ ಗಮನ ಸೆಳೆದು, ಅವರು ರಚಿಸಿದ ವಚನಗಳಿಗೆ ತಮ್ಮ ಹೆಸರನ್ನೇ ಅಂಕಿತವನ್ನಾಗಿಟ್ಟಿರುವದು ವಿಶೇಷವಾಗಿದೆ. ಸಮಾಜದ ಕೊಳೆಯನ್ನು ತೊಳೆಯುವ ನಿಟ್ಟಿನಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ಎದ್ದು ಕಾಣುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

Published

on

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.

ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.

ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.

ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.

ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.

ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.

ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.

ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.

ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending