ದಿನದ ಸುದ್ದಿ
ಅರಣ್ಯ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು : ಅರಣ್ಯ ಮಂತ್ರಿಗಳಿಗೆ ಬೃಂದಾ ಕಾರಟ್ ಪತ್ರ
ಇದು ಕೇಂದ್ರೀಕರಣ, ವ್ಯಾಪಾರೀಕರಣ, ಖಾಸಗೀಕರಣ ಮತ್ತು ಅಪರಾಧೀಕರಣದ ನೀಲನಕ್ಷೆ
ಅರಣ್ಯ ಕಾಯ್ದೆ, 1927ಕ್ಕೆ ಸರಕಾರ ಸೂಚಿಸಿರುವ ಕರಡು ತಿದ್ದುಪಡಿಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅವನ್ನು ಹಿಂತೆದುಕೊಳ್ಳಬೇಕು. ಅದರ ಬದಲಿಗೆ, ಈ ಕಾಯ್ದೆಯನ್ನು ಅರಣ್ಯ ಹಕ್ಕುಗಳ ಕಾಯ್ದೆ ಮತ್ತು ಬುಡಕಟ್ಟು ಸಮುದಾಯಗಳು ಎದುರಿಸುತ್ತಿರುವ ಚಾರಿತ್ರಿಕ ಅನ್ಯಾಯಗಳನ್ನು, ಈಗ ಒಂದೆಡೆಯಲ್ಲಿ ಅಭಿವೃದ್ಧಿಯ ಹೆಸರಲ್ಲಿ, ಮತ್ತೊಂದೆಡೆಯಲ್ಲಿ ಸಂರಕ್ಷಣೆಯ ಹೆಸರಲ್ಲಿ ಆಧುನಿಕ ಸ್ವರೂಪಗಳಲ್ಲಿ ಎಸಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಲು ಯತ್ನಿಸಿರುವ ಇತರ ಕಾಯ್ದೆಗಳಿಗೆ ಸರಿಹೊಂದುವ ರೀತಿಯಲ್ಲಿ ತರುವುದೇ ಅರಣ್ಯ ಸಂರಕ್ಷಣೆಯ ಹಿತರಕ್ಷಣೆಯ ದೃಷ್ಟಿಯಿಂದ ಉತ್ತಮ ಎಂದು ಸಿಪಿಐ(ಎಂ) ಪೊಲಿಟ್ಬ್ಯುರೊ ಸದಸ್ಯರಾದ ಬೃಂದಾ ಕಾರಟ್ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಿ ಪ್ರಕಾಶ ಜಾವ್ಡೇಕರ್ ಅವರಿಗೆ ಜುಲೈ 9 ರಂದು ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಮಂತ್ರಾಲಯ ಚರ್ಚೆಗೆ ಬಿಡುಗಡೆ ಮಾಡಿರುವುದು ಅರಣ್ಯ ಕಾಯ್ದೆ, 1927ಕ್ಕೆ ತಿದ್ದುಪಡಿಗಳ ಮೊದಲ ಕರಡನ್ನು ಮಾತ್ರವಾದರೂ, ಲೋಕಸಭೆಯಲ್ಲಿ ಜೂನ್ 28ರಂದು ಪ್ರಕಾಶ್ ಜಾವ್ಡೇಕರ್ ಈ ಕುರಿತು ಸಲ್ಲಿಸಿರುವ ಲಿಖಿತ ಹೇಳಿಕೆ ಬಹಳಷ್ಟು ದಾರಿ ತಪ್ಪಿಸುವಂತದ್ದು. “ನೀವು ತಿದ್ದುಪಡಿಗಳನ್ನು ಸಮರ್ಥಿಸಿ ಕೊಂಡಿದ್ದೀರಿ. ಈ ಕಾಯ್ದೆಯಲ್ಲಿರುವ ಅತ್ಯಂತ ದಮನಕಾರಿ ಕ್ರಮಗಳನ್ನು ಅಷ್ಟೇನೂ ಮುಖ್ಯವಲ್ಲ ಎಂದು ಬದಿಗೆ ಸರಿಸುವ ಪ್ರಯತ್ನ ಮಾಡಿದ್ದೀರಿ, ಅದರಲ್ಲೂ ಬುಡಕಟ್ಟು ಸಮುದಾಯಗಳ ಹಕ್ಕುಗಳನ್ನು ದಮನಮಾಡುತ್ತಿರುವುದನ್ನು ಉಪೇಕ್ಷಿಸಿದ್ದೀರಿ. ಆದ್ದರಿಂದ ಈ ತಿದ್ದುಪಡಿಗಳ ಬಗ್ಗೆ ಹೆಚ್ಚು ವಿವರವಾದ ವಿಮರ್ಶೆಯನ್ನು ತಮಗೆ ಕೊಡುವುದು ಅಗತ್ಯ ಎಂದು ನನಗನಿಸಿದೆ. ಇದು ಸಂಸತ್ತಿಗೆ ಒಂದು ಹೆಚ್ಚು ಸರಿಯಾದ ಚಿತ್ರವನ್ನು ಕೊಡಲು ನೆರವಾಗಬಹುದು” ಎಂದು ಈ ಪತ್ರವನ್ನು ಬರೆದಿರುವುದಕ್ಕೆ ಕಾರಣವನ್ನು ತಿಳಿಸುತ್ತ ಬೃಂದಾ ಕಾರಟ್ ಹೇಳಿದ್ದಾರೆ.
1927ರ ಅರಣ್ಯ ಕಾಯ್ದೆ ಬ್ರಿಟಿಶ್ ವಸಾಹತುಶಾಹಿಗಳಿಗೆ ಭಾರತದ ಅರಣ್ಯಗಳ ಮೇಲೆ ಅವರ ಸರಕಾರದ ಒಡೆತನವನ್ನು ಸ್ಥಾಪಿಸುವ ಒಂದು ಸಾಧನವಾಗಿತ್ತು. ಈ ಕಾಯ್ದೆಯ ಮೂಲಕ ಅವರು ಬುಡಕಟ್ಟು ಸಮುದಾಯಗಳು ಅತಿಕ್ರಮಣಕಾರರು ಎಂದು ಸಾರಿದರು. ಈ ಸಮುದಾಯಗಳ ವಿರುದ್ಧ ಚಾರಿತ್ರಿಕ ಅನ್ಯಾಯಗಳಿಗೆ ಈ ಮೂಲಕ ಕಾನೂನಿನ ಮಂಜೂರಾತಿಯನ್ನು ಪಡೆಯಲಾಯಿತು. ಈಗ ಸೂಚಿಸಿರುವ ತಿದ್ದುಪಡಿಗಳು, ಕೆಲವು ಸಂಪೂರ್ಣ ಹೊಸದಾದ ವಿಭಾಗಗಳನ್ನೂ ಹೊಂದಿದ್ದು, ಈ 91 ಅಂಶಗಳು ಅರಣ್ಯ ಸಂರಕ್ಷಣೆಯನ್ನು ಮಿಲಿಟರೀಕರಿಸಿ ಬ್ರಿಟಿಶರನ್ನೂ ಮೀರಿಸಿವೆ, ಅವರು ಧೈರ್ಯಸಾಲದೆ ಮಾಡದಿರುವುದನ್ನೂ ಮಾಡ ಹೊರಟಿದೆ.
ಈ ತಿದ್ದುಪಡಿಗಳು ಬುಡಕಟ್ಟು ಬದುಕಿನ ಪ್ರತಿಯೊಂದು ಆಯಾಮವನ್ನೂ ಅಪರಾಧೀಕರಿಸಿವೆ, ಅರಣ್ಯ ಅಧಿಕಾರಶಾಹಿಗೆ ವಾರಂಟ್ ನೀಡದೆಯೇ ಬಂಧಿಸುವ, ಕಾನೂನು ಜಾರಿಗೊಳಿಸಲು ಶಸ್ತ್ರಾಸ್ತ್ರಗಳ ಬಳಕೆಗೂ ಲಂಗುಲಗಾಮಿಲ್ಲದ ಅಧಿಕಾರಗಳನ್ನು ಕೊಟ್ಟಿದೆ. ಪ್ರಸ್ತಾವಿತ ರಾಷ್ಟ್ರೀಯ ಅರಣ್ಯ ಮಂಡಳಿಯಲ್ಲಿ ಸೇನಾಪಡೆಗಳ ಮುಖ್ಯಸ್ಥರನ್ನು ಒಬ್ಬ ಸದಸ್ಯರಾಗಿ ಸೂಚಿಸಿರುವುದು ಈ ದಮನಕಾರೀ ನಿಲುವಿನ ಸಂಕೇತವಾಗಿದೆ. ಬಹುಶಃ ಭಾರತದ ಸೇನಾಧಿಪತಿಗಳು ಈಗ ದೇಶದ ಗಡಿಗಳ ಬದಲು ಅರಣ್ಯಗಳನ್ನು ರಕ್ಷಿಸುವುದು ಹೇಗೆ ಎಂಬ ಚರ್ಚೆಗೆ ಸಮಯ ಕೊಡಬೇಕಾಗಿದೆ ಎಂದು ಈ ಬಗ್ಗೆ ಬರೆಯುತ್ತ ಬೃಂದಾ ಅವರು ಗೇಲಿ ಮಾಡಿದ್ದಾರೆ.
ಇನ್ನೊಂದೆಡೆಯಲ್ಲಿ, ಅರಣ್ಯಗಳ ನಿರ್ವಹಣೆಗೆ, ಸಂರಕ್ಷಣೆಗೆ, ಕಾಯ್ದುಕೊಳ್ಳಲಿಕ್ಕೆ ಮತ್ತು ಬುಡಕಟ್ಟು ಹಕ್ಕುಗಳಿಗೆ ಎಷ್ಟೊಂದು ಅನಿವಾರ್ಯವಾದ ಗ್ರಾಮಸಭೆಗಳ, ಅದರಲ್ಲೂ ಬುಡಕಟ್ಟು ಪ್ರದೇಶಗಳಲ್ಲಿನ ಗ್ರಾಮಸಭೆಗಳ ಪಾತ್ರವನ್ನು ಅಳಿಸಿ ಬಿಡಲಾಗಿದೆ ಎಂಬುದನ್ನು ಎತ್ತಿ ತೋರುತ್ತ ಬೃಂದಾ ಕಾರಟ್ ಈ ತಿದ್ದುಪಡಿಗಳು ಕೇಂದ್ರೀಕರಣ, ವ್ಯಾಪಾರೀಕರಣ ಮತ್ತು ಅಪರಾಧೀಕರಣದ ಒಂದು ನೀಲನಕ್ಷೆ ಎಂದು ಟೀಕಿಸಿದ್ದಾರೆ. ಅರಣ್ಯ ಸಂರಕ್ಷಣೆ ಈ ತಿದ್ದುಪಡಿಗಳ ಘೋಷಿತ ಗುರಿ.
ಆದರೆ ಇವು ಆ ಗುರಿಸಾಧನೆಗೆ ನೆರವಾಗುವುದಿಲ್ಲ. ತದ್ವಿರುದ್ಧವಾಗಿ, ಇವು ಅರಣ್ಯ ಹಕ್ಕುಗಳ ಕಾಯ್ದೆಯಲ್ಲಿ, 2006ರಲ್ಲಿ ತಿದ್ದುಪಡಿಗೊಂಡ ವನ್ಯ ಪ್ರಾಣಿಗಳ ರಕ್ಷಣಾ ಕಾಯ್ದೆಯಲ್ಲಿ, ಪರಿಶಿಷ್ಟ ಪ್ರದೇಶಗಳಿಗೆ ಪಂಚಾಯತ್ ವಿಸ್ತರಣೆ ಕಾಯ್ದೆ(ಪಿಎಇಎಸ್ಎಎ), ಭೂಸ್ವಾಧೀನ ಮತ್ತು ಮರುವಸತಿ ಕಾಯ್ದೆ,2013ರಲ್ಲಿ ಮಾತ್ರವಲ್ಲ, ಸಂವಿಧಾನದ ಶೆಡ್ಯೂಲ್ 5 ಮತ್ತು 6ರಲ್ಲಿ ಮಾನ್ಯ ಮಾಡಿರುವ ಬುಡಕಟ್ಟುಗಳು ಮತ್ತು ಇತರ ಪಾರಂಪರಿಕ ಅರಣ್ಯವಾಸಿಗಳ ಈಗಿರುವ ಹಕ್ಕುಗಳನ್ನು ಅಳಿಸಿ ಹಾಕುತ್ತವೆ.
ಮೇಲೆ ಹೇಳಿದಂತೆ, ಈ ತಿದ್ದುಪಡಿಗಳು ಹೇಗೆ ಕೇಂದ್ರೀಕರಣ, ವ್ಯಾಪಾರೀಕರಣ ಮತ್ತು ಅಪರಾಧೀಕರಣದ ನೀಲನಕ್ಷೆ ಎಂಬುದಕ್ಕೆ ವಿವರಗಳನ್ನೂ ಈ ಪತ್ರ ಒಳಗೊಂಡಿದೆ. ಇನ್ನೂ ಗಮನಾರ್ಹ ಸಂಗತಿಯೆಂದರೆ, ಬುಡಕಟ್ಟು ಜನಗಳ ಹಕ್ಕುಗಳ ಪ್ರಶ್ನೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ ಎಂಬುದನ್ನು ಪ್ರಕಾಶ ಜಾವ್ಡೇಕರ್ ಅವರಿಗೆ ಬೃಂದಾ ಕಾರಟ್ ಈ ಪತ್ರದಲ್ಲಿ ನೆನಪಿಸಬೇಕಾಗಿ ಬಂದಿದೆ.
“ಆದ್ದರಿಂದ ಈ ತಿದ್ದುಪಡಿಗಳು, ಒಟ್ಟಿನಲ್ಲಿ, ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ ಮತ್ತು ನಿರ್ದಿಷ್ಟವಾಗಿ ಬುಡಕಟ್ಟು ಜನಗಳ ಹಕ್ಕುಗಳನ್ನು, ಒಟ್ಟಾರೆಯಾಗಿ ಪಾರಂಪರಿಕ ಅರಣ್ಯವಾಸಿಗಳ ಹಕ್ಕುಗಳನ್ನು ರಕ್ಷಿಸುವ ಕಾನೂನು ಚೌಕಟ್ಟಿಗೆ ವ್ಯತಿರಿಕ್ತವಾಗಿವೆ. ಅಲ್ಲದೆ, ಬುಡಕಟ್ಟು ಹಕ್ಕುಗಳು ತಮ್ಮ ಮಂತ್ರಾಲಯದ ಕಾರ್ಯವ್ಯಾಪ್ತಿಗೆ ಸೇರಿದ್ದಲ್ಲ, ಅವು ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವ್ಯಾಪ್ತಿಗೆ ಸೇರಿದವುಗಳು. ಆದರೂ ಈ ತಿದ್ದುಪಡಿಗಳ ಮೂಲಕ ತಮ್ಮ ಮಂತ್ರಾಲಯ ಬುಡಕಟ್ಟು ಹಕ್ಕುಗಳಿಗೆ ಸಂಬಂಧಪಟ್ಟ ಎಲ್ಲ ಶಾಸನಗಳನ್ನು ಮೀರಿ ನಿಲ್ಲಲು, ಅವನ್ನೆಲ್ಲ ಈ ಪ್ರಸ್ತಾವಿತ ಕಾಯ್ದೆಗೆ ಅಧೀನಗೊಳಿಸಲು ಪ್ರಯತ್ನಿಸುತ್ತಿದೆ. ಇದು ಯಾವುದೇ ರೀತಿಯಲ್ಲಿ ಒಪ್ಪತಕ್ಕಂತದ್ದಲ್ಲ” ಎಂದು ಬೃಂದಾ ಕಾರಟ್ ಪ್ರಕಾಶ ಜಾವ್ಡೇಕರ್ ಅವರಿಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.
( ಈ ವಾರದ ಜನಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243