Connect with us

ದಿನದ ಸುದ್ದಿ

ರಾಜ್ಯ ಸರಕಾರಿ ನೌಕರರಿಗೆ 2022 ಕ್ಕೆ ಪರಿಷ್ಕೃತ ವೇತನ ಕೊಡಿಸಲು ಹಾಗೂ ಎಪಿಎಸ್ ರದ್ದುಗೊಳಿಸಲು ಬದ್ಧ; ಅಗತ್ಯಬಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ: ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ

Published

on

ಸುದ್ದಿದಿನ,ಧಾರವಾಡ : ಕರ್ನಾಟಕ ರಾಜ್ಯ ಸರಕಾರದಿಂದ 2022 ರ ಆರಂಭದಲ್ಲಿ ವೇತನ ಆಯೋಗದ ಶಿಫಾರಸ್ಸು ಅನ್ವಯ ರಾಜ್ಯ ಸರಕಾರಿ ನೌಕರರಿಗೆ ಪರಿಷ್ಕೃತ ವೇತನ ಜಾರಿಗೊಳಿಸಲು ಮತ್ತು ನೂತನ ಪಿಂಚಣಿ (ಎನ್.ಪಿ.ಎಸ್) ಯೋಜನೆ ರದ್ದುಗೊಳಿಸಲು ಸರಕಾರದ ಮೇಲೆ ಒತ್ತಡ ಹೇರಿ ಕ್ರಮಜರುಗಿಸಲು ರಾಜ್ಯ ಸರಕಾರಿ ನೌಕರರ ಸಂಘ ಬದ್ದವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಅವರು ಇಂದು ಮಧ್ಯಾಹ್ನ ರಾಜ್ಯ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕವು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಟ ಅಂಕ ಪಡೆದಿರುವ ಜಿಲ್ಲೆಯ ಸರಕಾರಿ ನೌಕರ ಮಕ್ಕಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ 2020-21 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ, ಮಾತನಾಡಿದರು.

ರಾಜ್ಯ ಸರಕಾರಿ ನೌಕರರ ವೇತನ ತಾರತಮ್ಯ ಹೊಗಲಾಡಿಸಲು ವೇತನ ಆಯೋಗ ಪರಿಷ್ಕೃತ ವೇತನ ನೀಡಲು ಶಿಪಾರಸ್ಸು ಮಾಡಿದೆ. ಕೇಂದ್ರ ಹಾಗೂ ಇತರೆ ರಾಜ್ಯಗಳ ಸರಕಾರಿ ನೌಕರರು ಪಡೆಯುತ್ತಿರುವ ವೇತನಕ್ಕಿಂತ ನಮ್ಮ ರಾಜ್ಯ ಸರಕಾರಿ ನೌಕರರಿಗೆ ಕಡಿಮೆ ವೇತನವಿದೆ.

ಪರಿಷ್ಕೃತ ವೇತನ ಜಾರಿಗೊಳಿಸಲು ಸರಕಾರಕ್ಕೆ ಸಂಘದಿಂದ ಹಲವು ಬಾರಿ ಮನವಿ ಸಲ್ಲಿಸಿ, ಒತ್ತಾಯಿಸಲಾಗಿದೆ. ಸರಕಾರ ಪರೀಶಿಲಿಸಿ, ಜಾರಿಗೊಳಿಸುವ ಭರವಸೆ ನೀಡುತ್ತಾ ಬರುತ್ತಿದೆ. ಆದ್ದರಿಂದ ಸಂಘವು ವೇತನ ಆಯೋಗದ ಶಿಫಾರಸುಗಳನ್ನು ಮತ್ತು ಕೇಂದ್ರ ಹಾಗೂ ಇತರೆ ರಾಜ್ಯಗಳ ಸರಕಾರಿ ನೌಕರರ ವೇತನ ಕುರಿತು ಅಧ್ಯಯನ ಮಾಡಿ ವರದಿಸಲ್ಲಿಸಲು ತಜ್ಞರ ಸಮಿತಿ ರಚಿಸಿದ್ದು, ಸದ್ಯದಲ್ಲೆ ಆ ಸಮಿತಿ ವರದಿ ನೀಡಲಿದೆ.

ರಾಜ್ಯ ಸರಕಾರ ಬರುವ 2022 ರ ಆರಂಭದಲ್ಲಿ ಪರಿಷ್ಕೃತ ವೇತನ ನೀಡದಿದ್ದಲ್ಲಿ ರಾಜ್ಯದಾದ್ಯಂತ ಸಂಘವು ಉಗ್ರ ಹೋರಾಟ ಮಾಡಲು ನಿರ್ಧರಿಸಿದೆ. ಈ ಕುರಿತು ಬರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಿ, ಹೋರಾಟದ ರೂಪುರೇμÉಗಳನ್ನು ನಿರ್ಧರಿಸಲಾಗುತ್ತಿದೆ ಎಂದು ಅವರು ಹೇಳಿದರು.

ತಮ್ಮ ಅಧ್ಯಕ್ಷತೆಯಲ್ಲಿ ರಾಜ್ಯ ನೌಕರರ ಸಂಘವು ಸಲ್ಲಿಸಿದ್ದ ಬಹುತೇಕ ಬೇಡಿಕೆಗಳನ್ನು ಯಾವುದೇ ಹೊರಾಟಗಳಿಗೆ ಆಸ್ಪದವಿಲ್ಲದಂತೆ ರಾಜ್ಯ ಸರಕಾರವು ಸಕಾರಾತ್ಮಕವಾಗಿ ಸ್ಪಂದಿಸಿ, ಈಡೆರಿಸಿದೆ.ಕೋವಿಡ್‍ದಂತ ವಿಷಮ ಪರಿಸ್ಥಿತಿಯಲ್ಲಿಯೂ ಯಾವುದೇ ರೀತಿಯಲ್ಲಿ ವೇತನ ಕಡಿತಗೊಳಿಸದೆ ನೌಕರರ ವಿಶ್ವಾಸ ಗಳಿಸಿದೆ. ಆರೋಗ್ಯ ಯೋಜನೆ, ಹೆಣ್ಣುಮಕ್ಕಳಿಗೆ 6 ತಿಂಗಳ ವೇತನ ಸಹಿತ ರಜೆ, ಬಾಕಿ ಉಳಿದಿದ್ದ ಅರಿಯರ್ಸ್ ಹಣ ಬಿಡುಗಡೆ, ಗಳಿಕೆ ರಜೆ ನಗದೀಕರಣಕ್ಕೆ ಅವಕಾಶ, ಕೋವಿಡ್ ನಿಂದ ಉಂಟಾದ ನೌಕರನ ಸಾವಿಗೆ ಪರಿಹಾರಧನ ಹೀಗೆ ಹತ್ತು ಹಲವು ಯೋಜನೆಗಳನ್ನು ರಾಜ್ಯ ಸರಕಾರಿ ನೌಕರರ ಹಿತಾಸಕ್ತಿ ಕಾಪಾಡಲು ರಾಜ್ಯ ಸರಕಾರದಿಂದ ಸಂಘವು ಜಾರಿಗೊಳಿಸಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರ ಜಾರಿಗೊಳಿಸಿರುವ ನೂತನ ಪಿಂಚಣಿ ಯೋಜನೆ (ಎನ್.ಪಿ.ಎಸ್)ಯು ತಾರತಮ್ಯದಿಂದ ಕೂಡಿದ್ದು, ಇದರಿಂದಾಗಿ 2006 ರಿಂದ ನೇಮಕವಾದ ಎಲ್ಲ ನೌಕರಿಗೆ ಅನ್ಯಾಯವಾಗುತ್ತದೆ. ಎನ್.ಪಿ.ಎಸ್. ರದ್ದುಗೊಳಿಸುವುದು ನಮ್ಮ ನೌಕರರ ಬಹುದಿನಗಳ ಬೇಡಿಕೆಯಾಗಿದ್ದು, ಸಂಘವು ಈ ಕುರಿತು ಉಗ್ರ ಹೋರಾಟ ಮಾಡಲು ಸಿದ್ದತೆ ನಡೆಸಿದೆ ಎಂದು ಸಿ.ಎಸ್.ಷಡಾಕ್ಷರಿ ಹೇಳಿದರು.

ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟವ ಕಾರ್ಯದಲ್ಲಿ ತೊಡಗಿದ್ದ ನಮ್ಮ ಅನೇಕ ಸರಕಾರಿ ನೌಕರರರು ತಮ್ಮ ಪ್ರಾಣ ಕಳೆದುಕೊಂಡುದ್ದಾರೆ. ಅನೇಕ ಅಧಿಕಾರಿ, ಸಿಬ್ಬಂದಿಗಳು ರಾತ್ರಿ,ಹಗಲು ಎನ್ನದೆ ಕೋವಿಡ್ ನಿಯಂತ್ರಣಕ್ಕಾಗಿ ಕರ್ತವ್ಯ ನಿರ್ವಹಿಸಿದ್ದರಿಂದ ಅದು ನಿಯಂತ್ರಣವಾಗಿದೆ. ಸರಕಾರದ ಆದೇಶ, ಯೋಜನೆಗಳನ್ಬು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಸರಕಾರದ ಬಗ್ಗೆ ಸಾರ್ವಜನಿಕರಲ್ಲಿ ಉತ್ತಮ ಭಾವನೆ, ಗೌರವ ಮೂಡಿಸುತ್ತಾರೆ. ಆದ್ದರಿಂದ ಸರಕಾರಗಳು ನೌಕರರ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ವಿಶ್ವಾಸ ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಸಿದರು.

ಮುಖ್ಯ ಅತಿಥಿಗಳಾಗಿದ್ದ ಶಾಸಕ ಅಮೃತ ದೇಸಾಯಿ ಅವರು ಮಾತನಾಡಿ, ಕಾರ್ಯಾಂಗ ಮತ್ತು ಶಾಸಕಾಂಗ ಎರಡು ಎತ್ತುಗಳಿದ್ದಂತೆ. ಅವುಗಳು ಜೊತೆಯಾಗಿ, ಹಿತವಾಗಿ ಕೂಡಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ತಮ್ಮ ಶಾಸಕತ್ವ ಅವಧಿಯಲ್ಲಿ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಶ್ರಮಿಸಿ, ಸರಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದ್ದಾರೆ. ಅವರ ಕಾರ್ಯದಿಂದ ಸರಕಾರ ಮತ್ತು ತಮ್ಮ ಬಗ್ಗೆ ಜನರಲ್ಲಿ ವಿಶ್ವಾಸ, ಗೌರವ ಇನ್ನಷ್ಟು ಹೆಚ್ಚಿದೆ. ನಾನು ಜನತೆಯ ಪರವಾಗಿ ಎಲ್ಲ ಸರಕಾರಿ ನೌಕರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಪ್ರೇರಣಾ ನುಡಿಗಳನ್ನಾಡಿದ ಉಪವಿಭಾಗಾಧಿಕಾರಿ ಡಾ.ಗೋಪಶಲ ಕೃಷ್ಣ ಬಿ., ಸಾಧನೆಗೆ ಛಲ ಬೇಕು. ವಿದ್ಯಾರ್ಥಿಗಳು ಸ್ವಯಂ ನಿಯಂತ್ರಣ, ಓದಿನ ಬಗ್ಗೆ ಆಸಕ್ತಿ, ವಿಷಯಗಳನ್ನು ತಿಳಿಯುವ ಕುತೂಹಲ ಮತ್ತು ಆಳವಾದ ಅಧ್ಯಯನ ಅಳವಡಿಸಿಕೊಳ್ಳಬೇಕು. ಆಶಾಭಾವನೆಯಿಂದ ಕಷ್ಟಪಟ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿದರೆ ಎಲ್ಲವೂ ಸಾಧ್ಯ. ಪ್ರಾಮಾಣಿಕವಾಗಿ ಓದಿ ಪ್ರಯತ್ನ ಪಡುವವರಿಗೆ ಐಎಎಸ್, ಐಪಿಎಸ್, ಕೆಎಎಸ್ ಯಾವುದು ಕಷ್ಟವಲ್ಲ. ತಮಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಬೆಳೆಯಬೇಕು ಎಂದು ಅವರು ಹೇಳಿದರು.

ಎಐಪಿಟಿಎಪ್ ಉಪಾಧ್ಯಕ್ಷ ಬಸವರಾಜ ಗುರಿಕಾರ ಅವರು ಮಾತನಾಡಿ, ಸಂಘದ ಬೆಳವಣಿಗೆ, ಕಾರ್ಯಚಟುವಟಿಕೆ ಮತ್ತು ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ಘಟಕದ ಖಜಾಂಚಿ ಶ್ರೀನಿವಾಸ ಆರ್, ರುದ್ರಪ್ಪ, ಮತ್ತು ಜಿಲ್ಲಾ ಖಜಾಂಚಿ ರಾಜಶೇಖರ ಬಾಣದ, ನೌಕರ ಭವನದ ಕಾರ್ಯದರ್ಶಿ ಗಿರೀಶ ಚೌಡಕಿ, ವಿವಿಧ ತಾಲೂಕಾ ಅಧ್ಯಕ್ಷರಾದ ಪ್ರಹ್ಲಾದ ಗೆಜ್ಜಿ, ವಿ.ಎಪ್.ಚುಳಕಿ, ಎ.ಬಿ.ಕೊಪ್ಪದ, ಎಸ್.ಎನ್.ಅರಳಿಕಟ್ಟಿ, ಆರ್.ಎಮ್.ಹೊಲ್ತಿಕೋಟಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.

ಸಂಘದ ಕಾರ್ಯದರ್ಶಿ ಮಂಜುನಾಥ ಯಡಳ್ಳಿ ಅವರು ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳನ್ನು ಮತ್ತು ಸಂಘದ ಉಪಾಧ್ಯಕ್ಷ ಎಪ್.ವಿ.ಮಂಜಣ್ಣವರ ಅವರು ಪಿಯುಸಿ ಪರೀಕೆಯ ಸಾಧಕ ವಿದ್ಯಾರ್ಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಅವರ ಸಾಧನೆಯನ್ನು ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಿದರು.

ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನಕಾರ್ಯದರ್ಶಿ ಎಸ್.ಜಿ.ಸುಬ್ಬಾಪುರಮಠ ಸ್ವಾಗತಿಸಿದರು. ಗೌರವಉಪಾಧ್ಯಕ್ಷ ಆರ್.ಬಿ.ಲಿಂಗದಾಳ ಹಾಗೂ ಶಾಂತಾ ಶೀಲವಂತರ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಪರಿಷತ್ ಸದಸ್ಯ ದೇವಿದಾಸ ಶಾಂತಿಕರ ವಂದಿಸಿದರು.ಕಾರ್ಯಕ್ರಮದಲ್ಲಿ ರಾಜ್ಯ,ಜಿಲ್ಲಾ ಮತ್ಯು ತಾಲೂಕಾ ಘಟಕಗಳ ಪದಾಧಿಕಾರಿಗಳು, ಸರಕಾರಿ ನೌಕರರು, ಸಾಧಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending