ದಿನದ ಸುದ್ದಿ
ದಾವಣಗೆರೆ | ಲಾಕ್ಡೌನ್ ಜಿಲ್ಲೆಗೆ ಹೋಗುವುದು ಮತ್ತು ಬರುವುದು ಬೇಡ ; ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್ : ಜಿಲ್ಲಾಧಿಕಾರಿ
ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಯುಗಾದಿ ಹಬ್ಬವನ್ನು ತಾವು ಸದ್ಯ ಇರುವ ಸ್ಥಳದಲ್ಲೇ ಆಚರಿಸಬೇಕು. ಅನಗತ್ಯವಾಗಿ ಪರವೂರಿಗೆ, ನೆಂಟರ ಊರು ಎಂದು ತೆರಳಬಾರದು ಹಾಗೂ ಬೇರೆ ಜಿಲ್ಲೆಗಳಿಂದ ಸಹ ಯಾರೂ ದಾವಣಗೆರೆ ಜಿಲ್ಲೆಗೆ ಆಗಮಿಸಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಾರ್ವಜನಿಕರಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್ ನಿಯಂತ್ರಣ ಮತ್ತು ತಡೆ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಿದ್ದು ಲಾಕ್ಡೌನ್ ಆಗಿರುವ ಒಂಭತ್ತು ಜಿಲ್ಲೆಗಳ ನಾಗರೀಕರು ದಾವಣಗೆರೆ ಜಿಲ್ಲೆಗೆ ಹಬ್ಬ ಅಥವಾ ಇತರೆ ಕಾರಣಗಳಿಗೆ ಬರಬಾರದು ಎಂಬುದು ಎಸ್ಪಿ, ಸಿಇಓ ಹಾಗೂ ನಮ್ಮೆಲ್ಲರ ಒಕ್ಕೊರಲ ಮನವಿಯಾಗಿದೆ ಎಂದರು.
ಚೆಕ್ಪೋಸ್ಟ್ ಮೂಲಕ ನಿಗಾವಣೆ
ದಾವಣಗೆರೆ ಜಿಲ್ಲೆಗೆ ಲಾಕ್ಡೌನ್ ಆಗಿರುವ ಒಂಭತ್ತು ಜಿಲ್ಲೆಗಳಿಂದ ಬರುವ ವಾಹನಗಳನ್ನು ತಪಾಸಣೆ ಮಾಡಲಾಗುವುದು. ಇದಕ್ಕಾಗಿ ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಚೆಕ್ಪೋಸ್ಟ್ಗಳನ್ನು ಆರಂಭಿಸಲಾಗುವುದು. ಜಿಲ್ಲೆಗೆ ಬೇರೆ ಬೇರೆ ಊರುಗಳಿಂದ ಬರುವ ವಾಹನಗಳಲ್ಲಿನ ಜನರನ್ನು ತಪಾಸಣೆ(ಸ್ಕ್ರೀನಿಂಗ್) ಮಾಡಲಾಗುವುದು.
ಅವರಿಗೆ ಯಾವುದೇ ಸೋಂಕು ಇರುವುದು ಕಂಡು ಬಂದರೆ ಅಂತಹವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ನಿಗಾವಣೆಗೆ ಇರಿಸಲಾಗುವುದು. ಚೆಕ್ಪೋಸ್ಟ್ಗಳಲ್ಲಿ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.
ಬಸ್ ಓಡಾಟ ರದ್ದು
ಲಾಕ್ಡೌನ್ ಆಗಿರುವ 9 ಜಿಲ್ಲೆಗಳಿಂದ ಓಡಾಡುವ ಖಾಸಗಿ ಬಸ್ಗಳನ್ನು ಸಹ ನಿಲ್ಲಿಸಲಾಗುವು. ಹಾಗೂ ಜಿಲ್ಲೆಯಿಂದ ಸಹ ಈ 9 ಜಿಲ್ಲೆಗಳಿಗೆ ಯಾವುದೇ ಬಸ್ಗಳು ಓಡಾಡಬಾರದಂತೆ ಕೆಎಸ್ಆರ್ಟಿಸಿ, ಆರ್ಟಿಓ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.
ಎಲ್ಲ ಅಧಿಕಾರಿಗಳ ಮೊದಲ ಆದ್ಯತೆ ಕೊರೊನಾ ನಿಯಂತ್ರಣ
ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿ ಕೆಲಸಕ್ಕಿಂತ ಮುಖ್ಯವಾಗಿ ಮೊದಲನೇ ಆದ್ಯತೆಯಾಗಿ ಕೊರೊನಾ ವೈರಸ್ ನಿಯಂತ್ರಣದ ಕಾರ್ಯಗಳಲ್ಲಿ ಭಾಗಯಾಗಬೇಕು.
ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್
ಮೆಡಿಕಲ್ ಶಾಪ್, ಹಾಲು, ತರಕಾರಿ, ದಿನಸಿ ಅಂಗಡಿಗಳು, ಆಸ್ಪತ್ರೆಗಳು, ಪೆಟ್ರೋಲ್ ಬಂಕ್, ಕುಡಿಯುವ ನೀರಿನ ವ್ಯವಸ್ಥೆ, ಅಂಚೆ ಸೇವೆ, ಆಹಾರ, ಅಗ್ನಿಶಾಮಕ, ವಿದ್ಯುತ್ ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವಾಣಿಜ್ಯ ಸೇವೆಗಳನ್ನು ಈ ಕ್ಷಣದಿಂದ ಸ್ಥಗಿತಗೊಳಿಸಲು ಆದೇಶಿಸಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್, ಬಂಗಾರದ ಅಂಗಡಿ, ಬಟ್ಟೆ, ಪಾತ್ರೆ ಅಂಡಿಗಳು, ಹಾರ್ಡ್ವೇರ್ ಶಾಪ್ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದರು.
ಆಹಾರ ಪಾರ್ಸೆಲ್ಗೆ ಅವಕಾಶ
ಹೋಟೆಲ್, ಕ್ಯಾಂಟಿನ್ಗಳಲ್ಲಿ ಕುಳಿತು ಊಟ ಮಾಡಲು ಅವಕಾಶ ಇಲ್ಲ. ಬದಲಾಗಿ ಪಾರ್ಸೆಲ್ ತೆಗೆದುಕೊಂಡು ಹೋಗಬಹುದು.
ಸುಳ್ಳುಸುದ್ದಿ ಹರಡಿದವರಿಗೆ ಕಠಿಣ ಕ್ರಮ
ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಆದರೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇದೆ ಎಂದು ಸುಳ್ಳುಸುದ್ದಿ ಹರಡುತ್ತಿದ್ದಾರೆಂಬ ವಿಷಯ ನನ್ನ ಗಮನಕ್ಕೆ ಬಂದಿದ್ದು, ಇಂತಹ ಸುಳ್ಳು ಸುದ್ದಿ ಹರಡಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎಸ್ಪಿ ಹನುಮಂತರಾಯ ಮಾತನಾಡಿ, ಪಾಲಿಕೆ, ಆರ್ಟಿಓ, ಕೆಎಸ್ಆರ್ಟಿಸಿ ಹಾಗೂ ಸಿಜಿ ಆಸ್ಪತ್ರೆಯ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆಗೆ ಅನುಕೂಲವಾಗುವಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ನೀಡಲಾಗುವುದು.
ವಿದೇಶಕ್ಕೆ ಹೋಗಿ ಬಂದು ಮನೆಯಲ್ಲಿ ಪ್ರತ್ಯೇಕವಾಗಿ ಅವಲೋಕನ ಅವಧಿಯಲ್ಲಿ ಇರಿಸಲಾಗಿರುವ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಪ್ರತಿ ದಿನ ನೀಡಬೇಕು. ನಮ್ಮ ನಿಯೋಜಿತ ಸಿಬ್ಬಂದಿಗಳು ಅಂತವರನ್ನು ಮನೆಯಲ್ಲೇ ಇರುವಂತೆ ನಿಗಾ ವಹಿಸುವರು. ಹಾಗೂ ಅವರ ಮನೆ ಮುಂದೆ ಕೊರೊನಾ ವೈರಸ್ ಜಾಗೃತಿ ಬಗ್ಗೆ ಭಿತ್ತಿಚಿತ್ರ ಅಂಟಿಸಲಾಗುವುದು. ಅವರು ಹೊರಗೆ ಹೋಗುವುದರಿಂದ ತೊಂದರೆ ಆಗುವ ಹಿನ್ನೆಲೆಯಲ್ಲಿ ವಿದೇಶಕ್ಕೆ ಹೋಗಿ ಬಂದವರು ಕಡ್ಡಾಯವಾಗಿ ಅವಲೋಕನ ಅವಧಿಯನ್ನು ಪೂರ್ಣಗೊಳಿಸಬೇಕು ಎಂದರು.
ಜಿಲ್ಲಾಧಿಕಾರಿಗಳು, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಆರೋಗ್ಯ, ಕಂದಾಯ, ಸ್ಥಳೀಯ ಸಂಸ್ಥೆಗಳು, ಪಾಲಿಕೆ, ಆರ್ಟಿಓ, ಕೆಎಸ್ಆರ್ಟಿಸಿ ಸೇರಿದಂತೆ ನಿಗಾವಣೆಗಾಗಿ ನಿಯೋಜಿಸಲಾಗಿರುವ 6 ತಂಡಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ದಾಖಲಾತಿಗಳನ್ನು ನಿಖರವಾಗಿ ನಿರ್ವಹಿಸಬೇಕು ಎಂದರು.
ಲಾಕ್ಡೌನ್ ಬಗ್ಗೆ ಚಿಂತನೆ
ದಾವಣಗೆರೆ ಜಿಲ್ಲೆಯು ಸರ್ಕಾರ ಲಾಕ್ಡೌನ್ ಮಾಡಿರುವ ಜಿಲ್ಲೆಗಳಿಗೆ ಗಡಿಯಾಗಿರುವುದರ ಹಿನ್ನೆಲೆ ಹಾಗೂ ಸಾರ್ವಜನಿಕರು ಇಂದು ನಡೆದ ಫೋನ್ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ವರದಿಯಾಗುವವರೆಗೆ ಕಾಯದೇ ಮುನ್ನೆಚ್ಚರಿಕಾ ಕ್ರಮವಾಗಿ ಇಂದಿನಿಂದಲೇ ಲಾಕ್ಡೌನ್ ಮಾಡಬೇಕೆಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದಿನಿಂದಲೇ ಲಾಕ್ಡೌನ್ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದ ಅವರು, ಲಾಕ್ಡೌನ್ ಮಾಡುವವರೆಗೆ ಕಾಯದೇ ವ್ಯಾಪಾರಸ್ಥರು, ವಾಣಿಜ್ಯ ಅಂಗಡಿಗಳ ಮಾಲೀಕರು ಸ್ವಯಂ ಬಂಧ್ ಮಾಡಬೇಕೆಂದರು.
ವಾರ್ಡುವಾರು ಕೈತೊಳೆಯುವ ಪಾಯಿಂಟ್
ಕೊರೊನಾ ಸೋಂಕು ಮುನ್ನೆಚ್ಚರಿಕೆ ಕ್ರಮವಾಗಿ ನಗರದ 45 ವಾರ್ಡುಗಳು ಸೇರಿದಂತೆ ಇತರೆ ಸ್ಥಳೀಐ ಸಂಸ್ಥೆಗಳು ಸೇರಿ ಒಟ್ಟು 158 ಪಾಯಿಂಟ್ಗಳಲ್ಲಿ ಸ್ಯಾನಿಟೈಸರ್/ಸಾಬೂನಿನಿಂದ ‘ಕೈ ತೊಳೆಯುವ ಕೇಂದ್ರ’ ಗಳನ್ನು ಮೊದಲನೇ ಹಂತದಲ್ಲಿ 15 ದಿನಗಳ ಕಾಲ ತೆರೆಯಲಾಗುವುದು. ಇಲ್ಲಿ ಸಾರ್ವಜನಿಕರು ಆಗಾಗ ಕೈ ತೊಳೆಯುವ ಮೂಲಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬಹುದು ಎಂದರು.
ಎಟಿಎಂ ಸ್ಯಾನಿಟೈಸರ್ ಕಡ್ಡಾಯ
ಎಲ್ಲ ಎಟಿಎಂ ಗಳಲ್ಲಿ ಸ್ಯಾನಿಟೈಸರ್ಗಳನ್ನು ಕಡ್ಡಾಯವಾಗಿ ಇಡಬೇಕು. ಸ್ಯಾನಿಟೈಸರ್ ಇಡದೇ ಇರುವ ಎಟಿಎಂನ ಬ್ಯಾಂಕುಗಳಿಗೆ ನೋಟಿಸ್ ನೀಡಲಾಗುವುದು.
ಎನ್-95 ಅವಶ್ಯಕತೆ ಇಲ್ಲ
ಚಿಗಟೇರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಡಿಕಲ್ ವಿದ್ಯಾರ್ಥಿಗಳು ಇದುವರೆಗೂ ಎನ್-95 ಮಾಸ್ಕ್ ಲಭ್ಯವಾಗಿಲ್ಲ ಹಾಗಾಗಿ ಕರ್ತವ್ಯ ನಿರ್ವಹಿಸಲು ಕಷ್ಟ ಎಂದು ದೂರಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಕರ್ತವ್ಯ ನಿರ್ವಹಿಸಲು ಎನ್-95 ಮಾಸ್ಕ್ ಬೇಕೆಂದಿಲ್ಲ. ಬದಲಾಗಿ ಟ್ರಿಪಲ್ ಲೇಯರ್ ಮಾಸ್ಕ್ ಸಾಕು.
ಸರ್ಕಾರದ ಆದೇಶದ ಅನ್ವಯ ಎಲ್ಲೆಡೆಯೂ ಎನ್-95 ಮಾಸ್ಕ್ ಅವಶ್ಯಕವಲ್ಲ. ಬದಲಾಗಿ ಐಸಿಯು ಹಾಗೂ ಐಸೋಲೇಷನ್ ವಾರ್ಡ್ಗಳಲ್ಲಿ ಅದರ ಅವಶ್ಯಕತೆ ಇದೆಯಷ್ಟೇ. ವಿದ್ಯಾರ್ಥಿಗಳಿಗೆ ಈ ಕುರಿತು ಯಾವುದೇ ಆತಂಕ ಬೇಡ. ಇದನ್ನು ಅರಿತು ಕರ್ತವ್ಯ ನಿರ್ವಹಿಸುವುದರೊಂದಿಗೆ ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ಅದರಂತೆ ಅವಶ್ಯಕವಾಗಿರುವ ಸ್ಯಾನಿಟೈಸರ್ ಮತ್ತು ಮಾಸ್ಕ್ಗಳ ಕೊರತೆ ಬರದಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.ತಾಲ್ಲೂಕುಗಳಿಂದ ಬರುವ ಖಾಸಗಿ ಬಸ್ಗಳಲ್ಲಿ ಯದ್ವಾತದ್ವ ಜನರನ್ನು ತುಂಬಿಸುವುದು ಸೂಕ್ತವಲ್ಲ. ಈ ಬಗ್ಗೆ ಆರ್ಟಿಓ ಕ್ರಮ ವಹಿಸಬೇಕೆಂದರು ಹೇಳಿದರು.
ಬಸ್ ವ್ಯವಸ್ಥೆ ಇಲ್ಲದ ಕಡೆ ಆಟೋದವರು ಸಾರ್ವಜನಿಕರಿಂದ ದುಪ್ಪಟ್ಟು ಹಣ ಕೇಳುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ಈಗಲೇ ನಿಲ್ಲಿಸಬೇಕೆಂದು ಸೂಚಿಸಿದರು.
ಪೊಲೀಸ್ ಇಲಾಖೆಯ ಸಹಾಯ ಪಡೆದು ಪಾಲಿಕೆಯ ಆರೋಗ್ಯ ನಿರೀಕ್ಷಕರು, ಅಂಗಡಿ, ಬಾರ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಮಳಿಗೆಗಳನ್ನು ಎಲ್ಲೆಡೆ ಮುಚ್ಚಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಎಲ್ಲ ಕ್ವಾರಿಗಳನ್ನು ಸಹ ಇಂದಿನಿಂದಲೇ ಬಂದ್ ಮಾಡಬೇಕು ಎಂದು ಸೂಚಿಸಿದರು.
ಹಕ್ಕಿಜ್ವರ
ಜಿಲ್ಲಾಧಿಕಾರಿಗಳು, ಎಲ್ಲ ಕೋಳಿ ಫಾರಂಗಳನ್ನು ಸ್ವಚ್ಚಗೊಳಿಸುವ ಕೆಲಸ ಆಗಬೇಕು. ಸ್ವಚ್ಚತೆ ಮಾಡಿಸದೇ ಇರುವ ಫಾರ್ಮ್ಗಳನ್ನು ಶಾಶ್ವತವಾಗಿ ನಿಲ್ಲಿಸಲಾಗುವುದು ಎಂದರು.
ಸಭೆಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕರಿ ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಕೆಎಸ್ಆರ್ಟಿಸಿ ಡಿಸಿ ಸಿದ್ದೇಶ್, ಆರ್ಟಿಓ ಎನ್.ಜೆ.ಬಣಕಾರ್, ಡಿಹೆಚ್ಓ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243