ದಿನದ ಸುದ್ದಿ
ದಾವಣಗೆರೆ | ಪ್ರತಿ ತಾಲೂಕಿನಲ್ಲಿ ಗೋಶಾಲೆ ತೆರೆಯಿರಿ : ಎಸ್.ಆರ್. ಉಮಾಶಂಕರ್
ಸುದ್ದಿದಿನ,ದಾವಣಗೆರೆ : ಬರಪೀಡಿತ ತಾಲೂಕುಗಳೆಂದು ಗುರುತಿಸಿರುವ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರೆಯಲು ಹೈಕೋರ್ಟ್ ಆದೇಶಿಸಿದ್ದು, ಅದರಂತೆ ಜಿಲ್ಲೆಯ ಜಗಳೂರು ತಾಲೂಕು ಹೊರತುಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಿ ಒಂದೊಂದು ಗೋಶಾಲೆ ತೆರೆಯುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಆಯೋಜಿಸಿಲಾಗಿದ್ದ ಬರ ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಗಳೂರು ತಾಲ್ಲೂಕಿನಲ್ಲಿ ಈಗಾಗಲೇ ಗೋಶಾಲೆ ತೆರೆಯಲಾಗಿದೆ. ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗದೆ, ಇತರೆ ತಾಲೂಕಗಳಲ್ಲಿ ಮೇವಿನ ಕೊರತೆಯಾಗಿರಬಹುದು. ಅಧಿಕಾರಿಗಳು ನೇರವಾಗಿ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಮೇವಿನ ಕೊರೆತಯ ಬಗ್ಗೆ ಮಾಹಿತಿ ಪಡೆದು ಮೇವು ಒದಗಿಸುವ ಕಾರ್ಯ ಮಾಡಬೇಕು ಎಂದರು.
ಹೈಕೋರ್ಟ್ ಆದೇಶದಂತೆ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆಗಳನ್ನು ತೆರೆದು, ಎರಡು ಲೋಡ್ಗಳಷ್ಟು ಮೇವು ಸ್ಟಾಕ್ ಮಾಡಬೇಕು. ಎರಡು ವಾರಗಳ ಕಾಲ ಕಾಯಿರಿ. ರೈತರು ಗೋಶಾಲೆಗೆ ಬಂದು ಮೇವು ತೆಗೆದುಕೊಂಡು ಹೋದರೆ ಸರಿ ಇಲ್ಲವಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ. ಗೋಶಾಲೆ ಅವಶ್ಯಕತೆ ಇಲ್ಲದಿದ್ದಲ್ಲಿ ಮುಚ್ಚುವ ಕೆಲಸ ಮಾಡಬೇಕು ಎಂದರು.
ಜಗಳೂರು ತಾಲೂಕಿನ ತಹಶೀಲ್ದಾರ್ ತಿಮ್ಮಣ್ಣ ಮಾತನಾಡಿ, ತಾಲೂಕಿನಲ್ಲಿ ಮೇವಿನ ಕೊರತೆ ಹೆಚ್ಚಿರುವ ಮೂರು ಪ್ರದೇಶಗಳಲ್ಲಿ ಗೋಶಾಲೆ ತೆರೆಯಲಾಗಿದೆ. ಇನ್ನುಳಿದ ಎರಡು ಕಡೆಗಳಲ್ಲಿ ಮೇವಿನಬ್ಯಾಂಕ್ ತೆರೆದು ಮೇವಿನ ಕೊರತೆಯನ್ನು ನೀಗಿಸಲಾಗುತ್ತಿದೆ. ಬಳ್ಳಾರಿ, ಕೊಪ್ಪಳ, ರಾಯದುರ್ಗ ಪ್ರದೇಶಗಳಿಂದ ಸಜ್ಜೆ, ಮೆಕ್ಕೆಜೋಳ ಸಪ್ಪೆಯ ಹಸಿ ಮೇವನ್ನು ಪೂರೈಸಲಾಗುತ್ತಿದೆ. ತಾಲೂಕಿನಲ್ಲಿ ಮುಂದಿನ 08 ವಾರಗಳಿಗೆ ಆಗುವಷ್ಟು ಮೇವಿದ್ದು, ಮಳೆ ಬಂದು ಅಲ್ಲಲ್ಲಿ ಮೇವು ಚಿಗುರುತ್ತಿರುವ ಪರಿಣಾಮ ಮುಂದಿನ ದಿನಗಳಲ್ಲಿ ಮೇವಿನ ಕೊರತೆ ಆಗುವ ಸಂಭವವಿಲ್ಲ ಎಂದರು.
ಅಗತ್ಯವಿದ್ದರೆ ಜಗಳೂರು ತಾಲೂಕಿನಲ್ಲಿ ಇನ್ನೊಂದು ಮೇವಿನ ಬ್ಯಾಂಕ್ ತೆರೆದು ರೈತರಿಗೆ ಮೇವು ನೀಡಿ. ಅನುದಾನಕ್ಕಂತೂ ಕೊರತೆಯಿಲ್ಲ. ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರಯಲು ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು. ಮುಂಜಾಗ್ರತ ಕ್ರಮವಾಗಿ ಒಂದು ಅಥವಾ ಎರಡು ಟನ್ಗಳಷ್ಟು ಮೇವು ಸಂಗ್ರಹಿಸಿ ಎರಡು ಸಿಬ್ಬಂದಿಗಳನ್ನು ನಿಯೋಜಿಸಿ ರೈತರು ಬಂದರೆ ಮೇವು ನೀಡಿ. ರೈತರು ಬಾರದಿದ್ದಲ್ಲಿ ಜಿಲ್ಲಾಡಳಿತ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದರು.
ಪ್ರತಿ ತಾಲೂಕಿನ ಇಓ ಮತ್ತು ತಹಶೀಲ್ದಾರ್ಗಳು ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಮೇವಿನ ಕೊರೆತೆ-ಲಭ್ಯತೆ ಕುರಿತು ಪರಿಶೀಲಿಸಿ. ಮೇವು ಬೇಕು ಎನ್ನುವ ರೈತರ ಹೆಸರು ನೊಂದಾಯಿಸಿಕೊಂಡು ಮೊಬೈಲ್ಬ್ಯಾಂಕ್ ಮೂಲಕ ಮೇವು ಒದಗಿಸಿ. ಅಲ್ಲದೇ ಅಲ್ಲಿಯ ರೈತರೊಂದಿಗೆ ಮಿನಿಕಿಟ್ನ ಮಾಹಿತಿ ನೀಡಿ, ಮಿನಿಕಿಟ್ಗಳನ್ನು ವಿತರಿಸಿ. ಮುಂದಿನ ದಿನಗಳಲ್ಲಿ ಅಲ್ಲಿನ ರೈತರಿಂದಲೇ ಮೇವು ಖರೀದಿಸುವ ವ್ಯವಸ್ಥೆ ಮಾಡಿಕೊಳ್ಳಿ. ಇದರಿಂದ ಹಣವು ಉಳಿತಾಯವಾಗಲಿದೆ ಎಂದು ಉಮಾಶಂಕರ್ ಸಲಹೆ ನೀಡಿದರು.
ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಬಿ ಮುದುಗಲ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಯ ಮಳೆಗಿಂತ ಶೇ.34 ರಷ್ಟು ಮಳೆ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ನೀರಾವರಿ ಪ್ರದೇಶದಲ್ಲಿ ಶೇ.5 ಹಾಗೂ ಬೆದ್ದಲು ಪ್ರದೇಶದಲ್ಲಿ ಶೇ.86 ರಷ್ಟು ಬಿತ್ತನೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯು ಮುಸುಕಿನ ಜೋಳ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಯಾಗಿದೆ ನಂತರ ಭತ್ತ, ತೋಟಗಾರಿಕೆಯಲ್ಲಿ ತೆಂಗು ಮತ್ತು ಅಡಿಕೆ ಹೆಚ್ಚಿನ ಬಿತ್ತನೆಯಾಗಿದೆ. ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
ಬೆಳೆವಿಮೆ ಯೋಜನೆಯಡಿ ಈ ಬಾರಿ ಜಿಲ್ಲೆಯಲ್ಲಿ 28 ಸಾವಿರ ರೈತರು ನೊಂದಾಯಿಸಿದ್ದಾರೆ. ಹಿಂದಿನ ವರ್ಷಗಳ ಬೆಳೆವಿಮೆಯ ಮಾಹಿತಿ ಹಾಗೂ ಬಾಕಿ ಹಣದ ಮಾಹಿತಿ ಮತ್ತು ಕಿಸಾನ್ ಸಮ್ಮಾನ್ ಯೋಜನೆ ಕುರಿತು ಮಾಹಿತಿಯನ್ನು ಸಭೆಯಲ್ಲಿ ತಿಳಿಸಿದರು.
ನಗರ ಪ್ರದೇಶಗಳ ಕುಡಿಯುವ ನೀರು ಸರಬರಾಜು ಕುರಿತು ಮಾಹಿತಿ ನೀಡಿದ ಡಿ.ಯು.ಡಿ.ಸಿಯ ಯೋಜನಾ ನಿರ್ದೇಶಕಿ ನಜ್ಮಾ, ನಗರ ಪ್ರದೇಶಗಳಲ್ಲಿ ಎಲ್ಲಿಯೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿಲ್ಲ. ಸದ್ಯಕ್ಕೆ ದಾವಣಗೆರೆ ನಗರದಲ್ಲಿ 41 ವಾರ್ಡ್ಗಳಿಗೆ ವಾರಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನುಳಿದ ಪ್ರದೇಶಗಳಲ್ಲಿ 5 ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ನೀರಿನ ಹಾಹಾಕಾರವಂತೂ ಇಲ್ಲ ಎಂದರು.
ಜಗಳೂರು ತಾಲೂಕಿನಲ್ಲಿ ಇಂದಿಗೂ 77 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕವೇ ನೀರು ಸರಬರಾಜು ಮಾಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಪ್ರದೇಶಗಳಲ್ಲಿ ಚಾನೆಲ್ಗಳಿಗೆ ಭದ್ರಾ ಜಲಾಶಯದ ನೀರು ಬಿಡದ ಪರಿಣಾಮ 27 ಪ್ರದೇಶಗಳಲ್ಲಿ (ಅಣಜಿ, ಆನಗೋಡು, ಮಾಯಕೊಂಡ ಇತರೆ ಪ್ರದೇಶಗಳಲ್ಲಿ) ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತಿತ್ತು. ಕೆಲವು ಪ್ರದೇಶಗಳಲ್ಲಿ ಬೋರ್ವೆಲ್ ಕೊರಸಲಾಗಿದ್ದು, ನೀರು ಸಿಕ್ಕಿದ ತಕ್ಷಣ ಪೈಪ್ಲೈನ್ ಮೂಲಕ ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದರು.
ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದ ಬಿಲ್ ಪಾವತಿಯಾಗಿದೆ. ಕೆಲವು ಜಿ.ಪಿ.ಎಸ್ ಸರಿಯಾಗಿ ಇಲ್ಲದಿರುವ ಕಡೆ ಹಣ ಮಂಜೂರು ಮಾಡಿಲ್ಲ. ಈಗಾಗಲೇ ಜಿಲ್ಲಾಡಳಿತ ತಂಡದಿಂದ ಪರಿಶೀಲನೆ ನಡೆಸಿದ್ದು ಮತ್ತೋಮ್ಮೆ ಪುನಃ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ತಿಮ್ಮಣ್ಣ ತಿಳಿಸಿದರು.
ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ಕೇಳಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಂಚಣಿ ಅದಾಲತ್ ನಡೆಸಿ ಸರ್ಕಾರಿ ಯೋಜನೆಗಳ ಮಾಹಿತಿ ಮತ್ತು ಸೌಲಭ್ಯವನ್ನು ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಜಗಳೂರು ತಾಲೂಕಿನಲ್ಲಿ ಗ್ರಾಮಭೇಟಿ ಕಾರ್ಯಕ್ರಮದ ಮೂಲಕ ಅಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಮೂಲಕ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಅವಹಾಲು ಸ್ವೀಕರಿಸಿ ಅವುಗಳಿಗೆ ಪರಿಹಾರವನ್ನು ವಾರದಲ್ಲಿಯೇ ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಅಂದಿನ ದಿನಕ್ಕೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ಹೆಚ್ಚಿನ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲಾಯಿತು. ಮುಂದಿನ ದಿನಗಳಲ್ಲಿ ಇನ್ನುಳಿದ ತಾಲೂಕುಗಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಜಲಶಕ್ತಿ ಮತ್ತು ಜಲಾಮೃತ ಕಾರ್ಯಕ್ರಮಗಳಡಿಯಲ್ಲಿ ಶಾಲೆ, ಹಾಸ್ಟೆಲ್ ಹಾಗೂ ಸಾರ್ವಜನಿಕರಿಗೆ ಹೆಚ್ಚು ಅರಿವು ಮೂಡಿಸಿ ಜಿಲ್ಲೆಯ ಹಸಿರೀಕರಣಕ್ಕೆ ಒತ್ತು ನೀಡಿ. ಜಲಾಮೃತ ಕಾರ್ಯಕ್ರಮದಡಿಯಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಶಾಲೆಗೆ 5000 ಅನುದಾನ ನೀಡಲಿದ್ದು, ಈ ಅನುದಾನದಲ್ಲಿ ಕಿಚನ್ಗಾರ್ಡ್ನ್ನು ನಿರ್ಮಿಸಿ ಅಲ್ಲಿನ ಮಕ್ಕಳಿಗೆ ಅನುಕೂಲವಾಗುವಂತೆ ಪಪ್ಪಾಯ, ನುಗ್ಗೆಕಾಯಿ, ಸಫೋಟ, ಮಾವು, ಹುಣಸೆ, ನೇರಳೆ ಮರಗಳನ್ನು ಬೆಳೆಯಬೇಕು. ಈ ಕುರಿತು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು ಎಂದು ಡಿ.ಡಿ.ಪಿ.ಐ ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಹಿಂದಿನ ದಿನಗಳಲ್ಲಿ ಬರ ನಿರ್ವಹಣೆಯನ್ನು ನಿರ್ವಹಿಸಿದ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಇನ್ನು ಉತ್ತಮವಾಗಿ ಮತ್ತು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸಭೆಯಲಿದ್ದ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ಸ್ಮಾರ್ಟ್ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ಷರೀಫ್, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಜಿಲ್ಲಾ ಸಂಖ್ಯಾಧಿಕಾರಿ ರಾಜೇಶ್ವರಿ ಸೇರಿದಂತೆ ವಿವಿಧ ತಾಲೂಕಿನ ತಹಶೀಲ್ದಾರ್ಗಳು ಇತರೆ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243