ದಿನದ ಸುದ್ದಿ
ಅಪೌಷ್ಟಿಕ ಮಕ್ಕಳನ್ನು ಎನ್ಆರ್ಸಿಗೆ ದಾಖಲಿಸದಿದ್ದರೆ ಶಿಸ್ತಿನ ಕ್ರಮ : ಡಿಸಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಎನ್ಆರ್ಸಿ ಕೇಂದ್ರಗಳಿಗೆ ದಾಖಲು ಮಾಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಸಿಡಿಪಿಓ, ಅಧೀಕ್ಷಕರು ಮತ್ತು ವಿಷಯ ನಿರ್ವಾಹಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.
ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳಾದ ಪೋಷಣ್ ಅಭಿಯಾನ ಯೋಜನೆ, ಕಿರುಸಾಲ ಯೋಜನೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ಜಿಲ್ಲಾ ಮಟ್ಟದ ಸಮನ್ವಯ ಸಭೆ, ಬಾಲ್ಯ ವಿವಾಹ ನಿಷೇಧ ಯೋಜನೆ, ಸ್ವಾಧಾರ ಯೋಜನೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ತೀವ್ರ ಮತ್ತು ಸಾಧಾರಣ ಸೇರಿದಂತೆ ಒಟ್ಟು 225 ಅಪೌಷ್ಟಿಕ ಮಕ್ಕಳನ್ನು ಗುರುತಿಸಲಾಗಿದೆ. ಯಾವುದೇ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದೆಂದು ಸರ್ಕಾರ ಜಿಲ್ಲಾಸ್ಪತ್ರೆಯಲ್ಲಿ ಎನ್ಆರ್ಸಿ(ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ತೆರೆದಿದೆ. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಇದೊಂದು ವರದಾನವಾಗಿದ್ದು, ಮಕ್ಕಳನ್ನು ಎನ್ಆರ್ಸಿಗೆ ದಾಖಲಿಸಬೇಕು. ತಾಲ್ಲೂಕುಗಳಲ್ಲಿ ಸಿಡಿಪಿಓ ಗಳು, ಅಧೀಕ್ಷಕರು, ವಿಷಯ ನಿರ್ವಾಹಕರು ಈ ಬಗ್ಗೆ ಗಮನ ಹರಿಸಿ, ಪೋಷಕರ ಮನವೊಲಿಸಿ ಈ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಬೇಕು ಎಂದರು.
ತಾಲ್ಲೂಕುಗಳ ಸಿಡಿಪಿಓ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರತಿಕ್ರಿಯಿಸಿ ಪೋಷಕರು ತಮ್ಮ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಲು ಒಪ್ಪುತ್ತಿಲ್ಲ. ಏನಾದರೊಂದು ಕಾರಣ ಹೇಳುತ್ತಾರೆಂದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಸರ್ಕಾರ ಎಷ್ಟೆಲ್ಲಾ ಹಣ ಖರ್ಚು ಮಾಡಿ ಸಿಆರ್ಸಿ ತೆರೆದಿದೆ. ಇದೊಂದು ಮುಖ್ಯವಾದ ಯೋಜನೆಯಾಗಿದ್ದು, ಹೇಗಾದರೂ ಪೋಷಕರ ಮನವೊಲಿಸಿ ಮಕ್ಕಳನ್ನು ಎನ್ಆರ್ಸಿ ದಾಖಲಿಸಿ, ಮಕ್ಕಳನ್ನು ಅಪೌಷ್ಟಿಕತೆಯಿಂದ ಹೊರತರಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಪೋಷಣ್ ಅಭಿವಯಾನ ಯೋಜನೆಯಡಿ 0 ಯಿಂದ 6 ವರ್ಷಗಳವರೆಗಿನ ಮಕ್ಕಳು, ಕಿಶೋರಿಯರು, ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಟಿಕತಾ ಮಟ್ಟವನ್ನು ಸುಧಾರಿಸಲು ಸಮುದಾಯ ಆಧಾರಿತ ಚಟುವಟಿಕೆಗಳ ಮೂಲಕ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಪೋಷಣ್ ಅಭಿಯಾನ್ ಅಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮುಖಾಮುಖಿ ಸಂವಾದ ಮಾಡಲು ಇ-ಐಎಲ್ಎ(ಇನ್ಕ್ರಿಮೆಂಟಲ್ ಲರ್ನಿಂಗ್ ಅಪ್ರೋಚ್) ಮಾಡ್ಯೂಲ್ಗಳನ್ನು ಅಭಿವೃದ್ದಿ ಪಡಿಸಿ ತರಬೇತಿ ನೀಡಲಾಗಿದೆ. ಜೊತೆಗೆ ಈ ಯೋಜನೆಯಡಿ ಸುಪೋಷಣಾ ದಿವಸ್, ಅನ್ನಪ್ರಾಶನ ದಿವಸ್, ತೀವ್ರ ಮತ್ತು ಸಾಧಾರಣ ಅಪೌಷ್ಟಕ ಮಕ್ಕಳು ಗುರುತಿಸುವಿಕೆ, ರಕ್ತಹೀನತೆ ಜಾಗೃತಿ ಸಭೆ, ಎದೆಹಾಲಿನ ಮಹತ್ವ, ಜಂತುಹುಳು ನಿವಾರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ವಿವರಣೆ ನೀಡಿದರು.
ಮಾದರಿ ಪೌಷ್ಟಿಕ ಕೈತೋಟ ನಿರ್ಮಿಸಲು ಸೂಚನೆ
ಅಂಗನವಾಡಿ ಕೇಂದ್ರದಲ್ಲಿ ‘ಪೌಷ್ಟಿಕ ಕೈತೋಟ’ ಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ತಾಲ್ಲೂಕಿನಲ್ಲಿ 5 ರಿಂದ 10 ಉತ್ತಮವಾದ ಪೌಷ್ಟಿಕ ಕೈತೋಟಗಳನ್ನು ನಿರ್ಮಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಹಾಗೂ ಪೋಷಣ್ ಅಭಿಯಾನದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ, ಪಂಚಾಯತ್ರಾಜ್, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ಆಹಾರ ಇಲಾಖೆಗಳು ತಮ್ಮ ಪಾತ್ರವನ್ನು ಸಕ್ರಿಯವಾಗಿ ನಿರ್ವಹಿಸುವ ಮೂಲಕ ಯೋಜನೆಯ ಯಶಸ್ಸಿಗೆ ಸಹಕರಿಸಬೇಕೆಂದರು.
ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಅಂಗನವಾಡಿ ಕೇಂದ್ರಗಳ ಆವರಣದಲ್ಲಿ ಪೌಷ್ಟಿಕ ಕೈತೋಟ ನಿರ್ಮಿಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ವಿಜಯಕುಮಾರ್ ಮಾತನಾಡಿ, 2020-21 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 62 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದ್ದು, ಈ ಪೈಕಿ 61 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಒಂದು ಬಾಲ್ಯ ವಿವಾಹ ನಡೆದಿದ್ದು ಎಫ್ಐಆರ್ ದಾಖಲಿಸಲಾಗಿದೆ ಎಂದರು.
ಬಾಲ್ಯ ವಿವಾಹ ತಡೆ ತಂಡ ಸಕ್ರಿಯವಾಗಿ ಕೆಲಸ ಮಾಡಬೇಕು
ಡಿಸಿ ಮಾತನಾಡಿ, ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ ಬಾಲ್ಯ ವಿವಾಹ ಸಂಖ್ಯೆ ಹೆಚ್ಚಿದೆ. ಕೋವಿಡ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಆರಂಭವಾಗಿಲ್ಲವೆಂದು ಎಷ್ಟೋ ಪೋಷಕರು ತಮ್ಮ ಮಕ್ಕಳನ್ನು ಮದುವೆ ಮಾಡುತ್ತಿದ್ದಾರೆ. ಆದ ಕಾರಣ ಬಾಲ್ಯ ವಿವಾಹ ತಡೆ ತಂಡ ಆದಷ್ಟು ಸಕ್ರಿಯವಾಗಿ ಕೆಲಸ ಮಾಡಬೇಕು. ಮುಖ್ಯವಾಗಿ ಪಿಡಿಓಗಳು, ಶಾಲಾ ಮುಖ್ಯಸ್ಥರು ಬಾಲ್ಯ ವಿವಾಹ ತಡೆಗೆ ಸಹಕರಿಸಬೇಕು. ಸಿಡಿಪಿಓ ಗ್ರಾಮ ಲೆಕ್ಕಿಗರು, ಆರ್ಐ, ಪೊಲೀಸ್ ಇಲಾಖೆಯವರು, ಎನ್ಜಿಓ ಸೇರಿದಂತೆ ತಂಡದ ಎಲ್ಲ ಸದಸ್ಯರು ಬಾಲ್ಯ ವಿವಾಹ ತಡೆಗೆ ಶ್ರಮಿಸಬೆಕೆಂದರು.
ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, 2020-21 ನೇ ಸಾಲಿನಲ್ಲಿ ಜಗಳೂರಿನಲ್ಲಿ 6, ದಾವಣಗೆರೆಯಲ್ಲಿ 18, ಹೊನ್ನಾಳಿಯಲ್ಲಿ 15, ಚನ್ನಗಿರಿಯಲ್ಲಿ 14 ಮತ್ತು ಹರಿಹರದಲ್ಲಿ 9 ಪ್ರಕರಣ ದಾಖಲಾಗಿದೆ. ಮುಂದುವರೆದ ತಾಲ್ಲೂಕುಗಳಲ್ಲೇ ಹೆಚ್ಚಾಗಿ ಪ್ರಕರಣ ದಾಖಲಾಗಿದ್ದು, ಬಾಲ್ಯ ವಿವಾಹ ತಡೆಗೆ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ತಂಡ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.
ಬಾಲ್ಯ ವಿವಾಹ ತಡೆಗೆ ಜನನ ದಿನಾಂಕ ನೀಡುವಲ್ಲಿ ಪಾಮೇನಳ್ಳಿ ಶಾಲಾ ಮುಖ್ಯೋಪಾಧ್ಯಾಯರು ಸಹಕರಿಸಲಿಲ್ಲವೆಂದು ಮಕ್ಕಳ ಸಹಾಯವಾಣಿಯವರು ತಿಳಿಸಿದ್ದು, ಇನ್ನು ಮುಂದೆ ಹಾಗೆ ಅಸಹಕರಾರ ತೋರಿದವರ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಾಡಿಗೆ ಕಟ್ಟಡ ಬೇಡ
ಜಿಲ್ಲೆಯಲ್ಲಿ ಒಟ್ಟು 1721 ಅಂಗನವಾಡಿ ಕಟ್ಟಡಗಳಿದ್ದು ನಗರದಲ್ಲೇ 375 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಖಾಸಗಿ ಕಟ್ಟಡದಲ್ಲಿ ಅಂಗನವಾಡಿ ನಡೆಸುವುದು ಬೇಡ. ಸರ್ಕಾರಿ ಜಮೀನು ನೀಡಲಾಗುವುದು. ಎಸ್ಸಿಪಿ/ಟಿಎಸ್ಪಿ ಮತ್ತು ಇತರೆ ಯೋಜನೆಗಳಡಿ ಕಟ್ಟಡಗಳನ್ನು ನಿರ್ಮಿಸಬೇಕು.
ಹಾಗೂ ಶಾಲೆಗಳ ಹೆಚ್ಚುವರಿ ಕಟ್ಟಡವನ್ನು ಅಂಗನವಾಡಿ ಕಟ್ಟಡವಾಗಿ ಬಳಕೆ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಇನ್ನು ಮುಂದೆ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಬಾರದು. ಆದಷ್ಟು ಶೀಘ್ರದಲ್ಲೇ ಜಾಗ ಗುರಿತಿಸಿ ಸ್ವಂತ ಕಟ್ಟಡಗಳನ್ನು ಹೊಂದಬೇಕೆಂದು ಸೂಚನೆ ನೀಡಿದ ಅವರು ತಾವು, ಸಿಇಓ ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡುವುದಾಗಿ ತಿಳಿಸಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ರಡಿ 2020-21 ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ 7, ಜಗಳೂರು 8, ಹರಿಹರ 5, ಹೊನ್ನಾಳಿ 4 ಮತ್ತು ಚನ್ನಗಿರಿ 3 ಸೇರಿದಂತೆ ಒಟ್ಟು 27 ಪ್ರಕರಣ ದಾಖಲಾಗಿದ್ದು, 02 ಪ್ರಕರಣಗಳ ಕೌಟುಂಬಿಕ್ ಘಟನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.ಸಂರಕ್ಷಣಾಧಿಕಾರಿಗಳು 15 ಪ್ರಕರಣಗಳನ್ನು ಆಪ್ತಸಮಾಲೋಚನೆ ಮೂಲಕ ಇತ್ಯರ್ಥಪಡಿಸಿದ್ದು, 10 ಪ್ರಕರಣಗಳು ಆಪ್ತಸಮಾಲೋಚನೆ ಹಂತದಲ್ಲಿದೆ ಎಂದರು.
ಸ್ವಾಧಾರ ಯೋಜನೆಯಡಿ ನಗರದಲ್ಲಿ ಜಾಗೃತಿ ಮಹಿಳಾ ಸಂಘ ಮತ್ತು ಶುಭೋದಯ ಸ್ವಯಂ ಸೇವಾ ಸಂಸ್ಥೆಗಳು ಸ್ವಾಧಾರ ಗೃಹ ನಡೆಸುತ್ತಿದ್ದು, ಶೋಷಣೆಗೆ, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮಕ್ಕಳು 6 ರಿಂದ 1 ವರ್ಷದವರೆಗೆ ತಾತ್ಕಾಲಿಕ ಆಶ್ರಯ ಜೊತೆಗೆ ಪುನರ್ವಸತಿಗಾಗಿ ಕೌಶಲ್ಯ ತರಬೇತಿ ಪಡೆಯುತ್ತಿದ್ದಾರೆ.
ಜಾಗೃತಿ ಮಹಿಳಾ ಸಂಘದಲ್ಲಿ ಪ್ರಸಕ್ತ ಸಾಲಿನ ಡಿಸೆಂಬರ್ ಅಂತ್ಯದವರೆಗೆ 46 ಮಹಿಳೆಯರು ಮಹಿಳೆಯರು 9ಮಕ್ಕಳು ದಾಖಲಾಗಿದ್ದು, ಈ ಪೈಕಿ 17 ಜನರನ್ನು ಪತಿ ಮತ್ತು ಪೋಷಕರ ವಶಕ್ಕೆ ನೀಡಿದ್ದು, 8 ಜನರು ಸ್ವಾವಲಂಬಿಗಳಾಗಿ ಹಾಗೂ ಒಬ್ಬರು ಮದುವೆಯಾಗಿ ಹಾಗೂ 08 ಮಕ್ಕಳು ಪೋಷಕರ ವಶಕ್ಕೆ ವಹಿಸಿ ಸಂಸ್ಥೆಯಿಂದ ಬಿಡುಗಡೆ ಹೊಂದಿರುತ್ತಾರೆ, ಶುಭೋದಯ ಸ್ವಯಂ ಸೇವಾ ಸಂಸ್ಥೆಯಲ್ಲಿ ಒಟ್ಟು 49 ಮಹಿಳೆಯರು ಮತ್ತು 9 ಮಕ್ಕಳು ದಾಖಲಾಗಿದ್ದು ಈ ಪೈಕಿ 23 ಮಹಿಳೆಯರು ಪತಿ ಮತ್ತು ಪೋಷಕರ ವಶಕ್ಕೆ 07 ಜನ ಸ್ವಾವಲಂಬಿಗಳಾಗಿ ಹಾಗೂ 03 ಮಕ್ಕಳ ತಾಯಿತಯ ವಶಕ್ಕೆ ವಹಿಸಿ ಬಿಡುಗಡೆ ಹೊಂದಿರುತ್ತಾರೆ. ಪುನರ್ವಸತಿಗಾಗಿ ಟೈಲರಿಂಗ್, ಬ್ಯುಟೀಷಿಯನ್, ಬ್ಯಾಗ್ ತಯಾರಿಕೆ, ಎಂಬ್ರಾಯಡರಿ, ಇತರೆ ತರಬೇತಿ ನೀಡಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಎಸ್ಪಿಯರೊಂದಿಗೆ ಸ್ವಾಧಾರ ಗೃಹಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ಬಾಲ್ಯ ವಿವಾಹ ತಡೆಗೆ ಸಂಬಂಧಿಸಿದ ಕೈಪಿಡಿಯನ್ನು ಜಿಲ್ಲಾಧಿಕಾರಿ, ಜಿ.ಪಂ ಸಿಇಓ ಸೇರಿದಂತೆ ಅಧಿಕಾರಿಗಳು ಬಿಡುಗಡೆ ಮಾಡಿದರು.
ಸಭೆಯಲ್ಲಿ ಡಿವೈಎಸ್ಪಿ ಬಿ.ಎಸ್.ಬಸವರಾಜ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ಸಿ.ಬಸವರಾಜಯ್ಯ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಲೋಕೇಶ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್ ರೇಷ್ಮಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸುಶೃತ ಡಿ.ಶಾಸ್ತ್ರಿ, ಶಿಕ್ಷಣ ಇಲಾಖೆ ಇಓ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂರಕ್ಷಣಾಧಿಕಾರಿಗಳಾದ ಪೂರ್ಣಿಮಾ, ಸುಶೀಲಮ್ಮ, ಮಕ್ಕಳ ಸಹಾಯವಾಣಿಯ ಕೊಟ್ರೇಶ್, ವಿವಿಧ ಎನ್ಜಿಓ ಗಳ ಪದಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243