ಅಂತರಂಗ
ಲಕ್ಷ್ಮಿನಾರಾಯಣ ಭಟ್ಟರಿಗೊಂದು ಭಾವ ನಮನ
- ನಾಗರಾಜ ಸಿರಿಗೆರೆ,ಕನ್ನಡ ಅದ್ಯಾಪಕರು,ದಾವಣಗೆರೆ
ನಮಸ್ಕಾರ ಸರ್,
ತಮಗೆ ನೆನಪಿದೆಯ ಸರ್, ಅದು 90ರ ದಶಕ. ನಮ್ಮೂರಿನಲ್ಲಿ ಮೈಸೂರು ಮಲ್ಲಿಗೆಯ ಕವಿ ನರಸಿಂಹಸ್ವಾಮಿಯವರಿಗೆ ಅಭಿನಂದನಾ ಸಮಾರಂಭ. ಅಭಿನಂದನಾ ಭಾಷಣ ಮಾಡಲು ತಮ್ಮನ್ನು ಆಹ್ವಾನಿಸಲು ಮನೆಗೆ ಬಂದಿದ್ದೆ. ಆಗ ತಮ್ಮ ಮಗನ ಮದುವೆ ಸಂಭ್ರಮದಲ್ಲಿದ್ದೀರಿ. ಹಾಗಾಗಿ ತಾವು ಬಾರದೆ, ಮತ್ತೋರ್ವ ಕವಿ ವ್ಯಾಸರಾಯರನ್ನು ಒಪ್ಪಿಸಿ, ಕಳುಹಿಸಿಕೊಟ್ಟಿದ್ದಿರಿ.
ಅಲ್ಲಿಂದ ನನಗೆ ತಮ್ಮೊಡನೆ ಒಂದಿಷ್ಟು ನೇರವಾದ ಒಡನಾಟ ಬೆಳೆದಿತ್ತು. ಅದಕ್ಕೂ ಮೊದಲು ತಮ್ಮ ಭಾವಗೀತೆಗಳ ಮೂಲಕ, ವಿಶೇಷವಾಗಿ `ಭಾವ ಸಂಗಮ”ದ ಮಾಧುರ್ಯದ ಗುಂಗು ತಲೆತುಂಬಿತ್ತು. ಅಲ್ಲಿರುವ ಮಾಸ್ತಿ, ಕುವೆಂಪು, ಅಡಿಗ, ಡಿವಿಜಿಯವರ ಗೀತೆಗಳು ನನ್ನನ್ನು ಭಾವಪರವಶ ಮಾಡಿದ್ದು ಸುಳ್ಳಲ್ಲ. ಒಂದೊಂದು ಗೀತೆಯೂ ಅಮರ ಮಧುರ. ಆಗಿನ್ನು ನಾನು ಬಿ ಎ ತರಗತಿಯ ವಿದ್ಯಾರ್ಥಿ. ತಾವು ಹೊರತಂದ `ಸಮ್ಮಿಲನ’ ಧ್ವನಿ ಸುರಳಿಯ ಪರಿಚಯ ಪತ್ರಿಕೆಯಲ್ಲಿ ಓದಿದ್ದೆ.
ಅದನ್ನು ಖರೀದಿಸಲು ದಾವಣಗೆರೆಯ ಕ್ಯಾಸೆಟ್ ಅಂಗಡಿಗಳನ್ನೆಲ್ಲ ಸುಡು ಬಿಸಿಲಲ್ಲಿ ತಿರುಗಿದ್ದೆ. ಗಾಂಧಿ ಸರ್ಕಲ್ ಮೂಲೆಯ ಕ್ಯಾಸೆಟ್ ಅಂಗಡಿ ಮಾಲಿಕ ನನ್ನ ಕುತೂಹಲ, ಆಸಕ್ತಿಯನ್ನು ಅರಿತು ಆ ಕ್ಯಾಸೆಟ್ಟನ್ನು ನನಗಾಗಿ ತರಿಸಿಕೊಟ್ಟಿದ್ದ. ಅದರಲ್ಲಿ ಕನ್ನಡದ ಹೆಸರಾಂತ ಹತ್ತು ಜನ ಕವಿಗಳ ಕವಿತಾ ವಾಚನ ಅದ್ಬುತ. ಅದರಲ್ಲಿ ಸ್ವತಃ ಪುತಿನ, ಅಡಿಗ, ನರಸಿಂಹಸ್ವಾಮಿಯವರು ತಮ್ಮ ವೃದ್ಧಾಪ್ಯದಲ್ಲೂ ಒಂದೊಂದು ಕವನವನ್ನು ವಾಚಿಸಿದ್ದರು, ತಾವೂ ಸೇರಿದಂತೆ ಜಿ ಎಸ್ ಎಸ್, ಕಂಬಾರ, ನಿಸಾರ್, ಬಿ ಆರ್ ಎಲ್, ಎಚ್ ಎಸ್ ವಿ, ಸಿದ್ಧಲಿಂಗಯ್ಯನವರ ಎರಡೆರಡು ಕವಿತೆಗಳ ವಾಚನದ ಅಪೂರ್ವ ಸಂಗ್ರಹ ಅದು.
ಆ ಧ್ವನಿ ಸುರಳಿಯನ್ನು ನಾನು ನೂರಾರು ಸಲ ಕೇಳಿ, ಆ ಕವಿತೆಗಳೆಲ್ಲ ಬಾಯಿಪಾಠವಾಗಿದ್ದವು. ನಿಮ್ಮನ್ನು ಭೇಟಿಯಾದಾಗಲೆಲ್ಲ ಇದರ ಮುಂದುವರಿದ ಭಾಗವಾಗಿ, ಬೇಂದ್ರೆ, ಕುವೆಂಪು, ಮಾಸ್ತಿ, ಡಿವಿಜಿ, ರಾಜರತ್ನಂ ಮುಂತಾದ ಹಿರಿಯ ತಲೆಮಾರಿನ ಕವಿಗಳ ಧ್ವನಿ ಸಂಗ್ರಹವನ್ನು ಹೊರತನ್ನಿ ಎಂದು ಒತ್ತಾಯಿಸುತ್ತಿದ್ದೆ. ಈ ದಿಗ್ಗಜರ ಕವನ ವಾಚನದ ಶೈಲಿ ಕೇಳಬೇಕೆಂಬ ಹಂಬಲ. (ಆಗ ಈಗಿನಂತೆ ಗೂಗಲ್ ಯೂಟ್ಯೂಬ್ ಗಳು ಇಲ್ಲದ ಕಾಲ).
ಇದನ್ನೂ ಓದಿ |ಕವಿತೆ | ಬೆಳಕು ಕತ್ತಲ ನಡುವೆ
ಆದರೆ ಈ ದಿಗ್ಗಜರ ಕವಿತೆಗಳ ವಾಚನದ ಧ್ವನಿಮುದ್ರಣದ ಹಕ್ಕುಗಳನ್ನು ಆಕಾಶವಾಣಿಯಿಂದ ಪಡೆಯುವುದು ಅಷ್ಟು ಸುಲಭವಿರಲಿಲ್ಲ. ಆದರೆ ತಾವು ಹೇಳಿದ ತಾಂತ್ರಿಕ ಕಾರಣಗಳಿಗಿಂತಲೂ ವ್ಯಾವಹಾರಿಕ ಕಾರಣಗಳು ಹೆಚ್ಚಾಗಿದ್ದವು. ಧ್ವನಿಸುರಳಿಗಳ ಕಾಲ ಮುಗಿದು ಸಿಡಿಗಳ ಕಾಲ ಬಂದಾಗ ತಮ್ಮನ್ನು ಭೇಟಿ ಮಾಡಿ, `ಸಮ್ಮಿಲನ’ ಕ್ಯಾಸೆಟ್ಟನ್ನು ಸಿಡಿಗೆ ಪರಿವರ್ತಿಸಲು ಕೇಳಿಕೊಂಡೆ. ಈಗಲೂ ತಾಂತ್ರಿಕ ಕಾರಣಗಳಿಗಿಂತಲೂ ವ್ಯಾವಹಾರಿಕ ಕಾರಣಗಳೇ ಇದ್ದವು.
ತಾವು ಸಾಹಿತ್ಯ ಅಕಾಡಮಿ ಸದಸ್ಯರಾದಾಗ ಕವಿಗಳ ಕವನ ವಾಚನದ ಧ್ವನಿ ಸುರಳಿಗಳನ್ನು ಹೊರತರುವ ಯೋಜನೆಯನ್ನು ಪ್ರಸ್ತಾಪಿಸಿದಾಗ ಬಹುಸಂಖ್ಯಾತ ಸದಸ್ಯರು `ಇದೊಂದು ವ್ಯಾವಹಾರಿಕ ಯೋಜನೆ’ ಎಂದು ನಿಮ್ಮನ್ನು ಗೇಲಿ ಮಾಡಿದವರುಂಟು. ಆದರೆ ನಮ್ಮಂತಹ ಕಾವ್ಯ ಕುತೂಹಲಿಗಳಿಗೆ, ಶಾಲೆಯಲ್ಲಿ ಪಾಠ ಮಾಡುವ ಕನ್ನಡ ಮೇಷ್ಟ್ರುಗಳಿಗೆ ಆ ಧ್ವನಿ ಸುರುಳಿಯ ಮಹತ್ವ, ಅದು ಎಷ್ಟು ಉಪಯೋಗ ಎಂಬುದು ಅಕಾಡಮಿಕ್ ಬುದ್ಧಿಜೀವಿಗಳಿಗೆ ತಿಳಿಯದೆ ಹೋಯಿತು. (ಆದರೆ ಇತ್ತೀಚಿನ ದಿನಗಳಲ್ಲಿ ಅಕಾಡಮಿಯಿಂದ ಕವಿಗಳ ಕಾವ್ಯ ವಾಚನದ ಯೋಜನೆ ಜಾರಿಗೆ ಬಂದು, ಒಂದಿಷ್ಟು ಕವಿಗಳ ಸಿಡಿಗಳು ಹೊರಬಂದವು.
ಆದರೆ ಅವು ಜನಪ್ರಿಯವಾಗಲಿಲ್ಲ. ಅದಕ್ಕೆ ಕಾರಣ 20-30 ವರ್ಷಗಳ ಹಿಂದಿನ ಕಾವು ಸಾಹಿತ್ಯಕ ವಾತಾವರಣ ಈಗ ಇಲ್ಲದೆ ಇರುವುದು) ಸರ್ ತಮ್ಮದು ಬಹುಮುಖ ಪ್ರತಿಭೆ. ಆಬಾಲ ವೃದ್ಧರಾದಿಯಾಗಿ ತಮ್ಮ ಸಾಹಿತ್ಯ ಅಚ್ಚುಮೆಚ್ಚು. `ಬಾಳ ಒಳ್ಳೇರು ನಮ್ಮ ಮಿಸ್, ಏನ್ ಕೇಳಿದರೂ ಎಸ್ಸೆಸ್, ನಗ್ತ ನಗ್ತಾ ಮಾತಾಡ್ತಾರೆ, ಸ್ಕೂಲಿಗೆಲ್ಲಾ ಫೇಮಸ್’… ಎಂಬ ಬಾಲಾಭಾಷೆಯ ನರ್ಸರಿ ಮಕ್ಕಳ ಶಿಶುಗೀತೆಯಿಂದ ಹಿಡಿದು ಶೂದ್ರಕನ ಮೃಚ್ಛಕಟಿಕದವರೆಗೆ ತಮ್ಮ ಸಾಹಿತ್ಯದ ಹರವು.
ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆ, ಸಾಹಿತ್ಯದಲ್ಲಿ ಅಪಾರ ಒಲವು. ಹಾಗಾಗಿ ಕುಮಾರವ್ಯಾಸ-ಕಾಳಿದಾಸ-ಶರೀಫರಿಂದ ಏಟ್ಸ್, ಇಲಿಯೆಟ್, ಶೇಕ್ಸ್ ಫಿಯರ್ ತನಕ ತಮ್ಮ ಬರಹದ ಜಾಡು. ಕನ್ನಡಿಗರ ಪಾಲಿಗೆ ಅಜ್ಞಾತವಾಸದಲ್ಲಿದ್ದ ಶರೀಫ್ ಸಾಹೇಬರನ್ನು ಮತ್ತು ಅವರ ತತ್ತ್ವಪದಗಳನ್ನು ಮೊದಲ ಸಲ ಹೊರ ಜಗತ್ತಿಗೆ ಪರಿಚಯಿಸಿದ ಕೀರ್ತಿ ತಮ್ಮದು.
ಕನ್ನಡದಲ್ಲಿ ನವ್ಯ ಪರಂಪರೆ ವಿಜೃಂಭಿಸುತ್ತಿದ್ದ ಕಾಲದಲ್ಲಿ ಗೇಯ ಪದ್ಯಗಳನ್ನು ಬರೆದು ಸುಗಮ ಸಂಗೀತ ಲೋಕಕ್ಕೆ ನೀಡಿದ ಕಾಣಿಕೆ ಅನನ್ಯ. `ನಿಂತ ನೀರ ಕಲಕಬೇಡಿ’ , ಎಲ್ಲಿ ಜಾರಿತೋ ಮನವು, ಯಾರು ಜೀವವೆ ಯಾರು ಬಂದವರು, ನಡೆದಿದೆ ಪೂಜಾರತಿ, ಬಾರೆ ನನ್ನ ದೀಪಿಕಾ ಮಧುರ ಕಾವ್ಯ ರೂಪಕ, ಈ ಭಾನುಈ ಚುಕ್ಕಿ ಈ ಹೂವು, ಮಲಗು ಮಲಗೆನ್ನ ಮರಿಯೇ, ಬನ್ನಿ ಭಾವಗಳೆ ಬನ್ನಿ ….. ಹೀಗೆ ಒಂದೇ ಎರಡೇ ನಿಮ್ಮ ಜನಪ್ರಿಯ ಭಾವಗೀತೆಗಳು.
ಬಹಳ ಮುಖ್ಯವಾಗಿ ಹೇಳಲೇಬೇಕಾದ ಸಂಗತಿಯೆಂದರೆ, ತಮ್ಮ `ಸಾಹಿತ್ಯ ರತ್ನ ಸಂಪುಟ’ ಕುರಿತು. ಈ ಸಂಪುಟದಲ್ಲಿರುವ ಮೂವತ್ತೈದಕ್ಕೂ ಹೆಚ್ಚು ಹೊಸಗನ್ನಡ ಸಾಹಿತಿಗಳ ವ್ಯಕ್ತಿಚಿತ್ರಣಗಳ ಶೈಲಿ ಅಪೂರ್ವವಾದುದು. ಸಾಹಿತಿಗಳ ಬಗ್ಗೆ ಸ್ವಾರಸ್ಯಕರವಾದ ಅಪಾರ ಮಾಹಿತಿಗಳನ್ನೊಳಗೊಂಡ ಕೃತಿಕರಂಡ ಇದು.
ಪ್ರತಿ ಸಾಹಿತಿಯ ವ್ಯಕ್ತಿಚಿತ್ರಣದ ಕೊನೆಗೆ ತಾವೇ ಬರೆದ ಅಥವಾ ಇತರೆಯವರು ಬರೆದ ಕವಿತೆಯನ್ನು ದಾಖಲಿಸಿದ್ದೀರಿ. ಆಮೂಲಕ ವ್ಯಕ್ತಿಚಿತ್ರ ಬರಹಕ್ಕೊಂದು ಸುವರ್ಣ ಚೌಕಟ್ಟಿನ ಹೊಸತನವನ್ನು ತೋರಿದ್ದೀರಿ. ಮತ್ತೊಂದು ಸಂಗತಿಯೆಂದರೆ, `ಕನ್ನಡ ಸಾಹಿತ್ಯ ಚರಿತ್ರೆ’ಯನ್ನು ಸಿಡಿ ರೂಪದಲ್ಲಿ ಹೊರತಂದಿರುವುದು. ಇದನ್ನು ಪ್ರಯಾಣ ಮಾಡುವಾಗಲು ಕೇಳುತ್ತಾ, ಕನ್ನಡ ಸಾಹಿತ್ಯದ ಸೊಬಗನ್ನು ಆಸ್ವಾದಿಸಬಹುದು.
ಮರೆತೇ ಹೋಗಿದ್ದ ಇನ್ನಂದು ಸಂಗತಿ: ಹೊಸಗನ್ನಡದ ಮುಂಗೋಳಿ ಎನಿಸಿದ್ದ ಮುದ್ದಣನ ಪತ್ನಿ ಕಮಲಾಬಾಯಿಯವರನ್ನು ತಾವು ಕಂಡಿರುವುದು. ಮುದ್ದಣ-ಮನೋರಮೆ ಕನ್ನಡಿಗರ ಪಾಲಿನ ಅನನ್ಯ ಸರಸ ದಂಪತಿಗಳು. ಆತ ಕ್ಷಯ ರೋಗಕ್ಕೆ ಬಲಿಯಾಗಿ ತನ್ನ 31ನೆಯ ವಯಸ್ಸಿನಲ್ಲಿ (1870-1901) ಇಹಲೋಕ ತ್ಯಜಿಸಿದವನು. ಆದರೆ ಆ ವಯಸ್ಸಿಗೆ ಅಮೂಲ್ಯ ಕಾಣಿಕೆಯನ್ನು ಕನ್ನಡಿಗರಿಗೆ ನೀಡಿರುವುದನ್ನು ಮರೆಯಲಾಗದು. `ಪದ್ಯಂ ವದ್ಯ ಗದ್ಯಂ ಹೃದ್ಯಂ’ ಎಂಬ ನಾಣ್ಣುಡಿ ಕೊಟ್ಟು ಗದ್ಯದ ಆಪ್ತತೆ ಬಗ್ಗೆ ಹೇಳಿದ ಮುದ್ದಣ ಹೊಸ ತಲೆಮಾರಿಗೆ ಕೃತಿಗಳ ಮೂಲಕ ಮಾತ್ರ ಪರಿಚಿತ.
ಆದರೆ ತಾವು ಬಾಲಕರಾಗಿದ್ದಾಗ ಶಿವಮೊಗ್ಗದ ತಮ್ಮ ಮನೆಯ ಹತ್ತಿರ ಮುದ್ದಣನ ಸಂಬಂಧಿಕರ ಮನೆ ಇದ್ದುದರ ಬಗ್ಗೆ ಒಂದು ಲೇಖನದಲ್ಲಿ ಬರೆದಿದ್ದಿರಿ. ಮತ್ತು ಆ ಮನೆಯಲ್ಲಿ ಇದ್ದ ಮುದುಕಿಯನ್ನು ಕುರಿತು ಪ್ರಸ್ತಾಪಿಸಿ, ಆ ಮುದುಕಿಯೇ ಮುದ್ದಣನ ಮಡದಿ ಕಮಲಾಬಾಯಿ ಎಂಬುದನ್ನು ಪತ್ತೆಮಾಡಿ ಉಲ್ಲೇಖಿಸಿದ್ದಿರಿ. ನಿಜಕ್ಕೂ ಇದೊಂದು ಸೋಜಿಗದ ಸಂಗತಿಯಲ್ಲವೇ?
ಹೀಗೆ ತಮ್ಮ ಕನ್ನಡ ಸೇವೆಯ ಬಗ್ಗೆ ಹೇಳುತ್ತಾ ಹೋದರೆ ಪುಟಗಳು ಮೀರಿ ಹೊತ್ತಿಗೆಯಾಗಬಲ್ಲದು. ಅದರೂ ಕೊನೆಯಲ್ಲಿ ಹೇಳಲೇಬೇಕಾದ ಸಂಗತಿ ಎಂದರೆ, ತಮ್ಮ ಅಗಲಿಕೆಯ ಹಿಂದಿನ ದಿನವೆ (ಶುಕ್ರವಾರ, ಮಾರ್ಚ್ ಆರು) ನಾನು ಎಂಟನೆಯ ತರಗತಿ ಮಕ್ಕಳಿಗೆ ತಮ್ಮ ಪರಿಚಯ ಮಾಡಿದ್ದೆ. ತಮ್ಮ `ಸಾಹಿತ್ಯ ರತ್ನ ಸಂಪುಟ’ದಿಂದ ಆಯ್ದ ಡಿವಿಜಿಯವರನ್ನು ಕುರಿತ ` ಸಾರ್ಥಕ ಬದುಕಿನ ಸಾಧಕ’ ಎಂಬ ಪಾಠ ಬೋಧನೆಯ ಸಂದರ್ಭ.
ಹಳ್ಳಿಗಾಡಿನ ಮಕ್ಕಳಿಗೆ ಕವಿಗಳನ್ನು, ಲೇಖಕರನ್ನು ಪರಿಚಯಿಸಬೇಕೆಂದರೆ ಮಕ್ಕಳ ಬೌದ್ಧಿಕ ಮಟ್ಟಕ್ಕೆ ತಕ್ಕಂತೆ ಇರಬೇಕು. ಹಾಗಾಗಿ `ಬಾಳ ಒಳ್ಳೇರು ನಮ್ಮ ಮಿಸ್, ಏನ್ ಕೇಳಿದರೂ ಎಸ್ಸೆಸ್, ನಗ್ತ ನಗ್ತಾ ಮಾತಾಡ್ತಾರೆ, ಸ್ಕೂಲಿಗೆಲ್ಲಾ ಫೇಮಸ್…ಎಂಬ ಶಿಶುಗೀತೆ ಹೇಳಿ, ತಮ್ಮೊಂದಿಗೆ ನಾನು ತೆಗೆಸಿಕೊಂಡಿರುವ ಭಾವಚಿತ್ರವನ್ನು ತೋರಿಸಿದಾಗ ಆ ಮಕ್ಕಳ ಮುಖಗಳಲ್ಲಿ ಅರಳಿದ ಮಂದಹಾಸ ಅವರ್ಣನೀಯ.
ಲಕ್ಷ್ಮಿನಾರಾಯಣ ಭಟ್ ಸರ್, ತಾವು ಒಂದೂವರೆ ವರ್ಷದವರಿದ್ದಾಗಲೇ ತಮ್ಮ ತಂದೆ ತೀರಿದ್ದರು.
ಮುಂದೆ ತಾಯಿಯ ಆಶ್ರಯದಲ್ಲಿ ಬೆಳೆದು, ಮೈಸೂರಿನಲ್ಲಿ ವಾರಾನ್ನದ ವಿದ್ಯಾರ್ಥಿಯಾಗಿ ವಿದ್ಯೆ ಸಂಪಾದಿಸಿದಿರಿ. ಮುಂದೆ ಕನ್ನಡ ಸಾರಸ್ವತ ಲೋಕದಲ್ಲಿ ಮಾಸದ ಹೆಜ್ಜೆ ಗುರುತು ಮೂಡಿಸಿದ ಸಾಧಕರಾಗಿದ್ದೀರಿ. ಯಾರು ಏನೇ ಹೇಳಲಿ, ತಮ್ಮನ್ನು ಕ್ಯಾಸೆಟ್ ಕವಿ ಎಂದು ಗೇಲಿ ಮಾಡಲಿ! ಆದರೆ ತಾವು ಕನ್ನಡಿಗರಿಗೆ ಭಾವಗೀತೆಯ ಗುಂಜಾರವದ ಹುಚ್ಚ್ವನ್ನು ಹಚ್ಚಿಸಿದ್ದು ಮಾತ್ರ ಕರೆ. ಗುರು ಗೋವಿಂದ ಮತ್ತು ಶರೀಫರ ಭಾವೈಕ್ಯದ ತೇರಿಗೆ ಮಿಣೆ ಹಚ್ಚಿ ನಾಡ ತುಂಬ ಎಳೆದಿರಿ. ತಮ್ಮೀ ಕನ್ನಡದ ಕಲಿತನಕೆ ಶರಣು ಶರಣು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಅಂತರಂಗ
ಮರೆಯಾದ ಅಪೂರ್ವ ಚಿತ್ರಕಲಾ ಪ್ರತಿಭೆ ‘ಶೋಭಾ ಕರಣಿಕ್’
- ಡಾ.ಎನ್.ಕೆ.ಪದ್ಮನಾಭ, ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ
ಅವರು ಬಿಡಿಸುತ್ತಿದ್ದ ರೇಖೆಗಳು ನಮ್ಮ ದೇಶೀ ಸಂಸ್ಕೃತಿಯ ವಕ್ತಾರಿಕೆಯ ಪಾತ್ರ ನಿರ್ವಹಿಸುತ್ತಿದ್ದವು. ಕನ್ನಡದ್ದೇ ಆದ ಕಲಾತ್ಮಕ ಪರಂಪರೆಯನ್ನು ಸೂಕ್ಷ್ಮವಾಗಿ ಗ್ರಹಿಸಿದ್ದ ಅವರ ಚಿತ್ರಗಳು ಜೀವಂತಿಕೆಯ ಗುಣಲಕ್ಷಣದೊಂದಿಗೆ ಕಂಗೊಳಿಸುತ್ತಿದ್ದವು.
ಸಾಂಪ್ರದಾಯಿಕ ಚಿತ್ರಶೈಲಿಯನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ ಮಣಿಸಿ ಪರಂಪರೆಯೊಳಗೇ ಅಡಗಿದ್ದ ಮೌಲಿಕ ಮಾದರಿಗಳನ್ನು ಮನಗಾಣಿಸುವ ಶ್ರದ್ಧೆಯೊಂದಿಗೇ ಅವರು ಚಿತ್ರವಿನ್ಯಾಸ ರೂಪಿಸುತ್ತಿದ್ದರು. ಇನ್ಸ್ಟಾಗ್ರಾಮ್, ಫೇಸ್ಬುಕ್ ಮತ್ತಿತರ ಮಾಧ್ಯಮಗಳ ಮೂಲಕ ತಮ್ಮ ಚಿತ್ರಗಳನ್ನು ಕಾಣಿಸುತ್ತಿದ್ದರು. ಪರಂಪರೆ ಮತ್ತು ವರ್ತಮಾನವನ್ನು ಬೆಸೆದು ಹೊಸ ಬಗೆಯ ಚಿತ್ರಪ್ರಯೋಗಗಳನ್ನು ನಡೆಸುವ ಹುಮ್ಮಸ್ಸಿನೊಂದಿಗೆ ಚಿತ್ರಕಲಾಯಾನ ಮುಂದುವರೆಸಿದ್ದರು. ಅವರ ಹೆಸರು ಶೋಭಾ ಕರಣಿಕ್.
ಇತ್ತೀಚೆಗಷ್ಟೇ ಅವರ ಚಿತ್ರಕಲಾಯಾನ ನಿಂತಿತು. ಅವರ ನಿಧನವು ವಿನೂತನವಾದ ಪ್ರಯೋಗಶೀಲ ಚಿತ್ರಕಲಾ ಸಾಧ್ಯತೆಗಳನ್ನು ತಡೆದು ನಿಲ್ಲಿಸಿತು. ಪುರಾಣದ ಕಥನ ಪ್ರಸಂಗಗಳಲ್ಲಿ ಉಲ್ಲೇಖಿತ ದೇವರು-ದೇವತೆಗಳ ಅಸ್ಮಿತೆ ಮತ್ತು ದೇಸೀ ಸಂಸ್ಕೃತಿಯನ್ನು ಬಿಂಬಿಸುವ ವಿನ್ಯಾಸಗಳನ್ನು ಸಮನ್ವಯಗೊಳಿಸಿ ಚಿತ್ರಕಲೆಗೆ ಹೊಸ ಆಯಾಮ ತಂದುಕೊಟ್ಟ ಪ್ರತಿಭೆಯಾಗಿ ಶೋಭಾ ಕರಣಿಕ್ ಅವರದ್ದು ವಿಶೇಷ ವ್ಯಕ್ತಿತ್ವವಾಗಿತ್ತು. ಮ್ಯೂರಲ್ ಪೇಂಟಿಂಗ್ನಲ್ಲಿ ಅವರಿಗಿದ್ದ ಪರಿಣತಿ, ಉತ್ತರ ಕನ್ನಡದ ಕಾವಿ ಕಲೆಯ ಕುರಿತಾದ ವಿಸ್ತೃತ ಜ್ಞಾನವು ಚಿತ್ರಕಲೆಯನ್ನು ಉನ್ನತೀಕರಿಸುವುದಕ್ಕೆ ಅವರಿಗೆ ನೆರವಾಗಿತ್ತು.
ಕಲೆಯ ಜೊತೆಗಿನ ಅನುಸಂಧಾನದ ಕ್ಷಣಗಳು ಅಪೂರ್ವ. ಒಂದು ನಿರ್ದಿಷ್ಟ ನಿರ್ಣಾಯಕ ಸಂದರ್ಭ, ಸಮಯದಲ್ಲಿ ಕಲೆಯೊಂದು ವ್ಯಕ್ತಿತ್ವವನ್ನು ಪ್ರಭಾವಿಸಿ ಸೃಜನಶೀಲತೆಯ ಹಸಿವನ್ನು ನೆಲೆಗೊಳಿಸುವುದಕ್ಕೆ ಪ್ರೇರಣೆಯಾಗುತ್ತದೆ. ಕಲೆಯ ಪ್ರಭಾವ ಎರಡು ಬಗೆಯದ್ದು. ಸಹೃದಯರನ್ನು ತನ್ನ ಕಲಾತ್ಮಕ ಮಾದರಿಗಳಿಂದ ಸೆಳೆದು ಅವರೊಳಗೆ ವಿಶೇಷ ಅನುಭೂತಿ ಧಾರೆ ಎರೆಯುವಂಥದ್ದು ಒಂದು ಬಗೆಯಾದರೆ ಹೀಗೆ ಸೆಳೆದುಕೊಂಡು ಮತ್ತೆ ಮತ್ತೆ ಪ್ರಭಾವಿಸುತ್ತಾ ಸಹೃದಯರನ್ನೇ ಕಲಾವಿದರನ್ನಾಗಿಸುವ ಸಾಧ್ಯತೆ ಮತ್ತೊಂದು ತೆರನಾದದ್ದು.
ಈ ಕಾರಣಕ್ಕಾಗಿಯೇ ಕಲಾತ್ಮಕ ಸಂಭವನೀಯತೆಯು ಅನನ್ಯವೆನ್ನಿಸಿಕೊಂಡಿದೆ. ಇಂಥ ಅನನ್ಯತೆಯೊಂದಿಗೇ ಶೋಭಾ ಕರಣಿಕ್ ಗುರುತಿಸಿಕೊಂಡಿದ್ದರು. ಅವರು ಓದಿದ್ದು ತಾಂತ್ರಿಕ ವಿಜ್ಞಾನ. ಆದರೆ, ಅವರ ನಿಜದ ಪ್ರತಿಭೆ ಅಭಿವ್ಯಕ್ತವಾದದ್ದು ಚಿತ್ರಕಲೆಯ ಮೂಲಕ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರಿಸರದಲ್ಲಿ ಬೆಳೆದ ಶೋಭಾ ಕರಣಿಕ್ ಮೊದಲಿನಿಂದಲೂ ದೇಶೀ ಕಲೆಯ ಕುರಿತು ವಿಶೇಷ ಆಸಕ್ತಿಯನ್ನು ಬೆಳೆಸಿಕೊಂಡು ಬಂದಿದ್ದರು. ಹೈಸ್ಕೂಲ್ ಓದುತ್ತಿರುವಾಗಲೇ ಕಾವಿಕಲೆಯ ವಿನ್ಯಾಸ ಅವರನ್ನು ಸೆಳೆದಿತ್ತು. ಇವುಗಳನ್ನು ಮತ್ತೆ ಮತ್ತೆ ನೋಡುತ್ತಾ ಹೋದಂತೆಲ್ಲಾ ಕಾವಿ ಕಲೆಯ ಕುರಿತ ಆಕರ್ಷಣೆ ಕಲಿಕೆಯ ಹಂಬಲವಾಗಿ ಮಾರ್ಪಟ್ಟಿತು. ಉತ್ತರ ಕನ್ನಡದ ಟೆಂಪಲ್ ರ್ಟ್ ಪ್ರಕಾರದ ಭಾಗವಾಗಿ ಕಾವಿ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ ಅವರು ರಚಿಸಿದ್ದ ತರಹೇವಾರಿ ವಿನ್ಯಾಸಗಳು ವಿವಿಧ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮಗಳಲ್ಲಿ ಗಮನ ಸೆಳೆದಿದ್ದವು.
ಕಾವಿ ಕಲೆಯೂ ಸೇರಿದಂತೆ ನಮ್ಮ ಸಾಂಪ್ರದಾಯಿಕ ಕಲೆಗಳು ಈ ಹಿಂದಿನ ಕಾಲದ ತಲೆಮಾರನ್ನಷ್ಟೇ ಪ್ರಭಾವಿಸಿದ್ದಲ್ಲದೇ ನಂತರದ ಹೊಸ ಪೀಳಿಗೆಯನ್ನೂ ಆಕರ್ಷಿಸುವ ಗುಣ ಹೊಂದಿವೆ. ಮೂಲ ಅಂತಃಸತ್ವಕ್ಕೆ ಧಕ್ಕೆಯೊದಗದ ಹಾಗೆ ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಈ ಸಾಂಪ್ರದಾಯಿಕ ಚಿತ್ರಕಲಾ ವಿನ್ಯಾಸಗಳನ್ನು ಮರುರೂಪಿಸಬಹುದು. ಹೊಸ ಕಾಲದಲ್ಲಿ ಅವುಗಳ ಮಹತ್ವವನ್ನು ಮನಗಾಣಿಸಬಹುದು ಎಂಬುದು ಅವರ ಆಶಯವಾಗಿತ್ತು.
ಕಲೆಯೊಂದು ಒಂದು ಕಾಲದಿಂದ ಮತ್ತೊಂದು ಕಾಲಕ್ಕೆ ದಾಟಿಕೊಳ್ಳುವಾಗ ಪಲ್ಲಟಗಳು ಸಹಜ. ಈ ಪಲ್ಲಟಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಇಂತಹ ಕಲೆಗಳಿಗೆ ಹೊಸಕಾಲದಲ್ಲೂ ಜೀವಂತಿಕೆಯನ್ನು ತಂದುಕೊಡುವ ಪ್ರಯತ್ನದ ಅಗತ್ಯವನ್ನು ಮನಗಾಣಿಸುವುದಕ್ಕಾಗಿಯೇ ಶೋಭಾ ಕರಣಿಕ್ ಅವರು ಚಿತ್ರಕಲಾ ರಚನೆಯ ವೈವಿಧ್ಯಮಯ ಪ್ರಯೋಗಗಳಲ್ಲಿ ತೊಡಗಿಸಿಕೊಂಡಿದ್ದರು.
ಅವರ ನಿಧನದಿಂದ ಈ ಪ್ರಯೋಗಶೀಲ ಹೆಜ್ಜೆಗಳು ನಿಂತಂತಾಗಿವೆ. ಆದರೆ, ಅವರು ಪರಂಪರೆ ಮತ್ತು ವರ್ತಮಾನವನ್ನು ಸಮನ್ವಯಗೊಳಿಸಿ ಸಾಬೀತುಪಡಿಸಿದ ಅಪೂರ್ವ ಚಿತ್ರಕಲಾ ಪ್ರಯೋಗಶೀಲತೆಯ ಜೀವಂತಿಕೆ ಹೊಸ ಪೀಳಿಗೆಗೆ ಸದಾ ಸ್ಫೂರ್ತಿಯ ಸೆಲೆಯಾಗಿರುತ್ತದೆ. ಅವರ ಹೆಸರಿನ ಇನಸ್ಟಾಗ್ರಾಂನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳು ಇಂಥ ಸ್ಫೂರ್ತಿಯ ಪ್ರಭೆಯನ್ನು ದಾಟಿಸುತ್ತಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಅಂತರಂಗ
ಹೊಸತನದ ಹೊಸ್ತಿಲಲ್ಲಿ..!
- ಮೀನಾಕ್ಷಿ .ಬಿ, ಎಂ. ಎ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ದಾವಣಗೆರೆ ವಿಶ್ವವಿದ್ಯಾಲಯ
ಹೊಸವರ್ಷ ವೆಂಬುದು ಪ್ರತಿಯೊಬ್ಬರ ಬಾಳಲ್ಲಿ ವರ್ಷಕ್ಕೊಮ್ಮೆ ಬರುವ ಹೊಸದಿನಗಳ ಆಗಮನ ಯಾಕೆಂದರೆ ಹೊಸತನವನ್ನು ತರುತ್ತಾ ಇರುವ ಹೊಸವರ್ಷ ಕೂಡ ಒಂದು ಜೀವನದ ಭರವಸೆ, ನಿರೀಕ್ಷೆ ಕನಸುಗಳ ಬಂಡಿಯ ಮೇಲೆ ಸಾಗುವ ಪ್ರಯಾಣ ನಮ್ಮ ಜೀವನ.
ವ್ಯಕ್ತಿಯ ನಂಬಿಕೆಯ ಆಧಾರದ ಮೇಲೆಯೇ ಜೀವನ ಸಾಗುಸುತ್ತಿರುವುದು.ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿಯೂ ಕೂಡ ಕಷ್ಟ -ಸುಖ ದುಃಖದ ಸಂಗತಿಗಳು ಇದ್ದೆ ಇರುತ್ತದೆ. ಕೆಲವೊಂದು ಬಾರಿ ಹತಾಶೆಯನ್ನು ಹೊಂದಿ ಜೀವನದಲ್ಲಿ ಜಿಗುಪ್ಸೆ ಒಂದು ಕೆಟ್ಟ ನಿರ್ಧಾರಕ್ಕೆ ಮನಸ್ಸು ದಾರಿ ಮಾಡಿಕೊಡುತ್ತದೆ. ಹಾಗೆಯೇ ಕಷ್ಟ ಇದ್ದಲ್ಲಿ ಸುಖವಿರುವುದುಂಟು ಅನ್ನುವ ಹಾಗೇ ಇವತ್ತಲ್ಲ ನಾಳೆ ಒಳ್ಳೆಯ ದಿನಗಳು ನಮ್ಮ ಜೀವನದಲ್ಲಿ ಬರಬಹುದೆಂಬ ಭರವಸೆ,ಆತ್ಮವಿಶ್ವಾಸವನ್ನು ಇಟ್ಟುಕೊಂಡು ಜೀವನ ನಡೆಸುತ್ತಲೇ ಇದ್ದೇವೆ.
ಈ ವರ್ಷ ಒಳ್ಳೆಯದಾಗಿಲ್ಲ ಅಂದರೆ ಏನು ಮುಂದಿನ ವರ್ಷ ಆದರೂ ನನ್ನ ಬದುಕು ಬದಲಾಗಬಹುದು ಎಂಬ ಹೊಸತನವನ್ನು ನಮ್ಮಲ್ಲಿ ಭರವಸೆ,ನಂಬಿಕೆಯ ಬೇರಿನೊಂದಿಗೆ ಬೆರೆಸಿಕೊಂಡು ಬದುಕಬೇಕು.ನಾಳೆಯ ದಿನಗಳ ಮೇಲಿನ ಅನಿರೀಕ್ಷಿತ ತೀರಿವಿನಿಂದಾಗುವ ಬದುಕಿನಲ್ಲಾಗುವ ಬದಲಾವಣೆ ಹೊಸತನದ ಚಾಪನ್ನು ಮೂಡಿಸುತ್ತದೆ.
ಎಂಥ ಹತಾಶ ಮನಸ್ಥಿತಿಯವರಲ್ಲೂ ಹೊಸವರ್ಷ ಭರವಸೆಯ ಅಭಯ ಹಸ್ತವನ್ನು ಚಾಚುತ್ತದೆ. ಅದೆಲ್ಲಿಂದಲೇ ಆತ್ಮ ವಿಶ್ವಾಸದ ಬೆಳಕಿನ ಕಿಡಿಯೊಂದು ಕಾಣಿಸಿಕೊಳ್ಳುತ್ತದೆ.
ಹೊಸವರ್ಷವೆಂಬುದು ಕೇವಲ ಸಂಭ್ರಮದ ಕಾಲ ಮಾತ್ರವಲ್ಲ. ಕಳೆದ ದಿನಗಳತ್ತ ಹಿಂತಿರುಗಿ ನೋಡುವ ಸಮಯ ಕೂಡ ಹಿಂದಿನ ದಿನಗಳ ಪುಟಗಳನ್ನು ತೆಗೆದು ನೋಡಿದರೆ. ಉತ್ಸಾಹದ ಗಳಿಗೆಗಳು ಮುಂದಿನ ಕೆಲಸಗಳಿಗೆ ಚೈತನ್ಯ, ಉತ್ಸಾಹ ನೀಡಬಲ್ಲದು.ನಮ್ಮ ದಿಕ್ಕಿಲ್ಲದ ದಾರಿಗೆ ಖಚಿತ ದಿಕ್ಕು ದಾರಿಯನ್ನು ತೋರಬಲ್ಲದು.
ಜೀವನದ ಪ್ರಯಾಣಕ್ಕೆ ಒಂದು ನಿಲ್ದಾಣವಾಗಿದೆ. ನಾವು ಕಾಣುವ ಕನಸಗಳು ಕನಸಾಗಿಯೇ ಉಳಿದಿದೆ ಯಾಕೆಂದರೆ ನಮ್ಮಲ್ಲಿನ ಬೇಜವಾಬ್ದಾರಿ, ನಿರ್ಲಕ್ಷತನ ಆಮೇಲೆ ಮಾಡಿದರೆ ಆಯ್ತು ಅನ್ನೋ ಮನೋಭಾವನೆ ಯಾವುದರ ಬಗ್ಗೆಯೂ ಆಸಕ್ತಿ ಕೊಡದೆ ಇರೋದು ಎಲ್ಲವು ನಮ್ಮ ಕನಸಿನ ಜೀವನ ರೂಪಿಸಿಕೊಳ್ಳುವಲ್ಲಿ ಸಫಲರಾಗದೆ ಉಳಿಯಲು ಕಾರಣ.
ಮೊದಲು ಆತ್ಮವಿಶ್ವಾಸ ಬೇಕು ನಾನು ಈ ಕೆಲಸವನ್ನು ಮಾಡುವೆ ಎಂಬ ಒಂದು ನಿರ್ಧಿಷ್ಟ ಗುರಿ ಇರಬೇಕು ಅಂಗಿದ್ರೆ ಅಷ್ಟೇ ಜೀವನದ ಪಯಣದ ಹಾದಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಇಲ್ಲವಾದಲ್ಲಿ ಸೋಲನ್ನು ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಮುಂದಿನ ದಿನಗಳ ಆಗಮನದೊಂದಿಗೆ ನಾವು ಕಂಡ ಕನಸನ್ನು ಈಡೇರಿಸಿಕೊಳ್ಳುವ ಸತತ ಪ್ರಯತ್ನದೊಂದಿಗೆ ಬರುವ ದಿನವನ್ನು ಸ್ವಾಗತಿಸಿಕೊಳ್ಳೋಣ.
ಎಲ್ಲರ ಬಾಳಲಿ ಹರುಷ ,ಸಂತೋಷ ಮನೆಮಾಡಲಿ ಎಂದು ಆಶಿಸುತ್ತಾ ಎಲ್ಲರಿಗೂ ಹೊಸವರ್ಷದ ಶುಭಾಶಯಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಅಂತರಂಗ
ಕಾಮರೂಪದ ಪ್ರಭಾಕರ
- ಪ್ರೊ.ರಹಮತ್ ತರೀಕೆರೆ
ನಾನು ಕೋಲಾರಕ್ಕೆ ಹೋದಾಗೆಲ್ಲ ಎರಡು ಜಾಗಗಳಿಗೆ ತಪ್ಪದೆ ಭೇಟಿ ಕೊಡುತ್ತೇನೆ. ಒಂದು-ಕೆ.ರಾಮಯ್ಯ ಮತ್ತವರ ಸಂಗಾತಿಗಳು ಸೇರಿ ತೇರುಹಳ್ಳಿ ಬೆಟ್ಟದ ಮೇಲೆ ಕಟ್ಟಿರುವ `ಆದಿಮ’ಕ್ಕೆ; ಇನ್ನೊಂದು-`ಕಾಮರೂಪಿ’ ಎಂಬ ಹೆಸರಲ್ಲಿ ಬರೆಯುತ್ತಿದ್ದ ಕನ್ನಡ ಲೇಖಕ ಡಾ. ಎಂ.ಎಸ್. ಪ್ರಭಾಕರ ಅವರಿರುವ ಕಠಾರಿಪಾಳ್ಯದ ಮನೆಗೆ. 50ರ ದಶಕದ ಕೊನೆಯಲ್ಲಿ ಕರ್ನಾಟಕ ಬಿಟ್ಟುಹೋದ ಪ್ರಭಾಕರ, ‘ಹಿಂದೂ’ ಪತ್ರಿಕೆಯ ವರದಿಗಾರರಾಗಿ ಆಫ್ರಿಕಾ ಅಮೇರಿಕ ಬಾಂಗ್ಲಾದೇಶ ಈಶಾನ್ಯ ಭಾರತವನ್ನೆಲ್ಲ ಅಲೆದಾಡಿ, ಕಡೆಗೆ ಕಾಮರೂಪದಲ್ಲಿ (ಅಸ್ಸಾಮಿನ ಪುರಾತನ ಹೆಸರಿದು) ನೆಲೆಸಿಬಿಟ್ಟರು.
`ಕಾಮರೂಪ’ ಶಬ್ದಕ್ಕೆ ಬಯಸಿದ ರೂಪಧಾರಣೆ ಮಾಡುವ ಮಾಯಾವಿ ವಿದ್ಯೆ ಎಂಬರ್ಥವೂ ಇದೆ. ಎಂಬತ್ತರ ಪ್ರಾಯದಲ್ಲಿ ಕರ್ನಾಟಕಕ್ಕೆ ಮರಳಿ ಬಂದಿರುವ ಪ್ರಭಾಕರ ಅವರು, ತಾವು ಹುಟ್ಟಿಬೆಳೆದ ಮನೆಯಲ್ಲಿ ಬಿಡಾರ ಹೂಡಿದ್ದಾರೆ. ಹಿರೀಕರು ಕಟ್ಟಿದ ದೊಡ್ಡಮನೆ. ಮನೆಯೊಳಗೊಂದೇ ಜೀವ; ಮನೆ ತುಂಬ ಪುಸ್ತಕದ ರಾಶಿ (ಹೆಚ್ಚಿನವು ಇಂಗ್ಲೀಶ್ ಬಂಗಾಳಿ ಅಸ್ಸಾಮಿ). ನಟ್ಟನಡುವಿರುವ ಹಾಲಿನ ಮೂಲೆಯಲ್ಲಿ ಬೀದಿಗೆ ಬೆನ್ನುಕೊಟ್ಟಂತೆ ಕೂತು, ಲ್ಯಾಪ್ಟಾಪಿನಲ್ಲಿ ಬರೆಯುತ್ತ, ವೆಬ್ಸೈಟುಗಳನ್ನು ಜಾಲಾಡುತ್ತ, ಬ್ಲಾಗುಗಳನ್ನೋದುತ್ತ ಪ್ರಭಾಕರ ಕುಳಿತಿರುತ್ತಾರೆ.
ಅವರ ಮನಗೆ ಹೋದಾಗಲೆಲ್ಲ ನನಗೆ ರಾಗಿಮುದ್ದೆ ಸೊಪ್ಪಿನ ಸಾರಿನ ಊಟ ಸಿಗುತ್ತದೆ. ಅವರು ಉಣ್ಣುವುದೊಂದು ಅಪೂರ್ವ ದೃಶ್ಯ. ತಣಿಗೆಯ ನಡುವೆ ಹದವಾಗಿ ಬೆಂದು ಕಂಪು ಬೀರುವ ಗೋಂದಿನಂತಹ ಕೆಂಗಪ್ಪು ಬಣ್ಣದ ಬಿಸಿಮುದ್ದೆಯನ್ನಿಟ್ಟು, ಅದರ ತಲೆಯ ಮೇಲೆ ಶಿಖರವನ್ನು ಹಿಮವು ಅಲಂಕರಿಸುವಂತೆ ಬೆಣ್ಣೆಯ ಚೂರನ್ನಿಡುತ್ತಾರೆ; ಬೆಣ್ಣೆಯು ಮುದ್ದೆ ಕಾವಿಗೆ ಕರಗಿ ಇಡೀ ಚೆಂಡನ್ನು ಆವರಿಸಿ ಅಭಿಷೇಕ ಮಾಡಿಸಿಕೊಂಡ ಮೂರುತಿಯಂತೆ ಥಳಥಳ ಹೊಳೆಯುತ್ತದೆ. ಆಗ ಘಮಿಸುವ ಮುದ್ದೆಯನ್ನು ಚೆನ್ನಾಗಿ ಮಿದ್ದು, ಒಂದು ಬದಿಯಿಂದ ಇಷ್ಟಿಷ್ಟೇ ಮುರಿದು ತುತ್ತು ಮಾಡಿ, ಸೊಪ್ಪಿನ ಗಟ್ಟಿಸಾರಲ್ಲಿ ಹೊರಳಾಡಿಸಿ ಗುಕ್ಕನೆ ನುಂಗಿ ಕಣ್ಮುಚ್ಚಿ ಕೊಳ್ಳುತ್ತಾರೆ. ತರುವಾಯ ಶ್ರೀಯುತರು ಜ್ಞಾನೋದಯವಾದ ಸಿದ್ಧನಂತೆ ಅವರ ಮುಖದಲ್ಲಿ ಪರಮಾನಂದದ ಒಂದು ಕಳೆ ಆವಿರ್ಭವಿಸುತ್ತದೆ. ಇದನ್ನೆಲ್ಲ ಕಾಣುವಾಗ, ಲೋಕವನ್ನೆಲ್ಲ ಸುತ್ತಾಡಿರುವ ಇವರು ಕೋಲಾರಕ್ಕೆ ಮುದ್ದೆಸುಖಕ್ಕಾಗಿಯೆ ಬಂದರೇನೊ ಎಂದು ಶಂಕೆ ಬರುತ್ತದೆ. ಪ್ರಭಾಕರ ಅವರಿಗೆ ಆಧುನಿಕ ಕನ್ನಡ ಸಾಹಿತ್ಯದ ಮೇಲೆ ಅನೇಕ ದೂರುಗಳಿವೆ. ಅವುಗಳಲ್ಲಿ ಆಹಾರ ತಯಾರಿಕೆ ಮತ್ತು ಸೇವನೆ ಕುರಿತು ಅದರಲ್ಲಿ ವಿವರಗಳೇ ಇಲ್ಲ ಎಂಬುದೂ ಒಂದು.
ಕನ್ನಡದ ಅತಿಹಿರಿಯ ಮತ್ತು ಹೆಚ್ಚು ಬರೆಯದ ಲೇಖಕರಲ್ಲಿ ಪ್ರಭಾಕರ ಅವರೂ ಒಬ್ಬರು. ನಾನು ಅವರ ‘ಕುದುರೆಮೊಟ್ಟೆ’ ಕಾದಂಬರಿಯನ್ನೂ ‘ಒಂದು ತೊಲ ಪುನುಗು ಮತ್ತು ಇತರ ಕತೆಗಳು’ ಸಂಕಲನವನ್ನೂ ಓದಿದ್ದೆ. ಇವುಗಳಲ್ಲಿ ‘ಕುದುರೆ ಮೊಟ್ಟೆ’ ಈಗಲೂ ಪ್ರಿಯವಾದ ಪುಸ್ತಕ. ಅದರಲ್ಲಿರುವ ಕೆಲವು ಪಾತ್ರಗಳು ಕೊಂಚ ವಿಕ್ಷಿಪ್ತವಾಗಿವೆ; ಅಲ್ಲಿನ ಬಾಳಿನ ಸನ್ನಿವೇಶಗಳೂ ಅನಿರೀಕ್ಷಿತವಾಗಿವೆ. ಆದರೆ ಎಲ್ಲಿಯೂ ಹುಸಿ ಅನಿಸದಂತೆ, ಒಂದೇ ಶಬ್ದ ಅಪವ್ಯಯವಾಗದಂತೆ ಅದನ್ನು ಬರೆಯಲಾಗಿದೆ. ಪಾತ್ರಗಳನ್ನು ತಮ್ಮ ಸಿದ್ಧಾಂತಕ್ಕೆ ತಕ್ಕಂತೆ ಮಣಿಸಿ ಕೈಗೊಂಬೆಯಂತೆ ಆಡಿಸುತ್ತ, ಕೆಲವನ್ನು ಮುದ್ದಾಮಾಗಿ ದುರುಳಗೊಳಿಸಿ ಕಲೆಯ ಜಾಣಮುಸುಕಿನಲ್ಲಿ ಅಡಗಿಸುತ್ತ, ಕೆಲವು ಕಾದಂಬರಿಗಳು ಕನ್ನಡದಲ್ಲಿ ಪ್ರಕಟವಾಗುತ್ತಿವೆ. ಇಂತಹ ಹೊತ್ತಲ್ಲಿ ಅರ್ಧ ಶತಮಾನದ ಹಿಂದೆ ಪ್ರಕಟವಾದ ಈ ಕಾದಂಬರಿ, ಬಾಳನ್ನು ಕುರಿತು ತೋರುವ ಕಕ್ಕುಲಾತಿ ಕಂಡು ಖುಶಿಯಾಗುತ್ತದೆ. ಕತೆಗಾರರಿಗೆ ತಾವು ಸೃಷ್ಟಿಸುವ ಕೆಲವು ಪಾತ್ರಗಳ ಮೇಲೆ ಕೊಂಚ ಭಾವ ಪಕ್ಷಪಾತವಿರುತ್ತದೆ. ಆದರೆ ತಾವು ಸೃಜಿಸುವ ಎಲ್ಲ ಪಾತ್ರಗಳನ್ನು ತಾಯಿಯಂತೆ ನೋಡುವುದು ಬರೆಹದ ನೈತಿಕತೆ. ಈ ಸಂಗತಿ ಕುವೆಂಪು ಮತ್ತು ಟಾಲ್ ಸ್ಟಾಯ್ ಕಾದಂಬರಿ ಓದಿದವರಿಗೆ ಗೊತ್ತಿದೆ.
ಕಾಮವನ್ನು ಇಟ್ಟುಕೊಂಡು ಜೀವನದ ಸತ್ಯಗಳನ್ನು ಶೋಧಿಸುವ ವಿಷಯದಲ್ಲಿ ಕಾಮರೂಪಿಯವರು, ಒಬ್ಬ ಟಿಪಿಕಲ್ ನವ್ಯಲೇಖಕರೇ. ಆದರೆ ನವ್ಯದ ಕೆಲವು ಲೇಖಕರಲ್ಲಿ ಕಾಣುವಂತೆ, ಅದಕ್ಕವರು ಅನಗತ್ಯ ಪ್ರಾಮುಖ್ಯ ಕೊಡುವುದಿಲ್ಲ. ಅದನ್ನು ಚಪ್ಪರಿಸುವುದಿಲ್ಲ. ವೈಭವೀಕರಿಸುವುದಿಲ್ಲ. ಬದಲಿಗೆ, ಮನುಷ್ಯರಾದವರು ಜೀವನದ ಇಕ್ಕಟ್ಟುಗಳಲ್ಲಿ ಸಿಲುಕಿ ಅನಿವಾರ್ಯವಾಗಿ ವರ್ತಿಸುವ ಪರಿಯನ್ನು ತಣ್ಣಗೆ ವ್ಯಂಗ್ಯವಾಗಿ ಚಿತ್ರಿಸುತ್ತಾ ಹೋಗುತ್ತಾರೆ. ಸತ್ಯಕ್ಕಿರುವ ಹಲವು ಮುಖಗಳನ್ನು ಹಿಡಿಯುವಂತಹ ಕುರುಸೋವಾನ ‘ರಶೋಮನ್’ ಸಿನಿಮಾ ನೆನಪಿಸುವ ಈ ಕಾದಂಬರಿ, ಮತ್ತೆಮತ್ತೆ ಓದಬೇಕು ಎನಿಸುವಷ್ಟು ತಾಜಾ ಆಗಿದೆ. ‘ಉಪಪತ್ತಿಯೋಗ’ ಎಂಬುದನ್ನು ಬಿಟ್ಟರೆ, ಉಳಿದಂತೆ ವ್ಯಕ್ತಿವಾದವನ್ನು ಅತಿಯಾಗಿ ಬಿಂಬಿಸುವ ತಂತ್ರದ ಬಿಗಿತದಲ್ಲಿರುವ ಅವರ ಕತೆಗಳು ಅಷ್ಟು ಆಪ್ತವೆನಿಸಿಲ್ಲ.
ನನಗೆ ಪ್ರಭಾಕರ್ ಕುರಿತು ಆಸಕ್ತಿ ಮೂಡಿಸಿದವರು ಮಾರ್ಕ್ಸ್ವಾದಿ ಚಿಂತಕ ಕೆ.ರಾಘವೇಂದ್ರರಾವ್ ಅವರು. ಅಮೆರಿಕೆಯ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿದ್ದ ಎ.ಕೆ.ರಾಮಾನುಜನರ ಹೊಂದಾಣಿಕೆಯ ಗುಣವನ್ನು ಕಟುವಾಗಿ ವಿಮರ್ಶಿಸುತ್ತ, ಅಲ್ಲಿನ ಶೈಕ್ಷಣಿಕ ಕ್ಷೇತ್ರದಲ್ಲಿರುವ ಬಿಳಿಯರ ಯಜಮಾನಿಕೆಗೆ ಬಾಗದೆ ಹೊರಬಂದ ಪ್ರಭಾಕರ ಅವರ ದಿಟ್ಟ ಸ್ವಭಾವವನ್ನು ಅವರು ತಮ್ಮ ಸಂದರ್ಶನದಲ್ಲಿ ಪ್ರಸ್ತಾಪಿಸಿದ್ದರು. ಪ್ರಭಾಕರ ಅವರನ್ನು ಭೇಟಿಯಾಗಬೇಕು ಎಂದು ಅನಿಸುತ್ತಿತ್ತು. ಅದರಲ್ಲೂ ಭಾರತದ ಶಾಕ್ತಪೀಠಗಳಲ್ಲಿ ಮುಖ್ಯವಾಗಿರುವ ಅಸ್ಸಾಮಿನ ಕಾಮಾಖ್ಯಕ್ಕೆ ಹೋಗಲು ಯತ್ನಿಸುತ್ತಿದ್ದ ನಾನು, ಅಲ್ಲೇ ಸಮೀಪದ ಗೌಹಾತಿಯಲ್ಲಿರುವ ಅವರನ್ನು ಕಾಣಲು ಹವಣಿಕೆ ಮಾಡಿಕೊಂಡಿದ್ದೆ. ಆದರೆ ಸಾರ್ವಜನಿಕ ವ್ಯಕ್ತಿಯಾಗಲು ನಿರಾಕರಿಸಿ ಅಜ್ಞಾತವಾಗಿಯೇ ಬಾಳುವ ಅವರು ಸುಲಭವಾಗಿ ಸಿಗುತ್ತಿರಲಿಲ್ಲ.
ನನ್ನ ತವಕವನ್ನರಿತಿದ್ದ ಕೆ.ರಾಮಯ್ಯ, ‘ಪ್ರಭಾಕರ್ ಕರ್ನಾಟಕಕ್ಕೆ ಬಂದಿದ್ದಾರೆ. ಬನ್ನಿ’ ಎಂದು ಅವರ ಮನೆಗೆ ಕರೆದುಕೊಂಡು ಹೋದರು. ಮಧ್ಯಾಹ್ನದ ಸುಡುಹೊತ್ತು. ಪ್ರಭಾಕರ ಪ್ರೀತಿಯಿಂದ ಬರಮಾಡಿಕೊಂಡು ನೊರೆ ತುಂಬಿದ ಒಗರು ಬೀರಿನ ಮಗ್ಗನ್ನು ಕೈಗೆ ಕೊಟ್ಟು, ಕಾಮಾಖ್ಯದ ಬಗ್ಗೆಯೂ ತಂತ್ರ ಪಂಥದ ಬಗ್ಗೆಯೂ ಇರುವ ಕೃತಿಗಳನ್ನು ತೋರಿಸುತ್ತ, ಗಂಟೆಗಟ್ಟಳೆ ಮಾತಾಡಿದರು. ಅರಿವಿನ ಕಿಡಿಗಳು ಹಾರುವ ಅದೊಂದು ವಿದ್ವತ್ಪೂರ್ಣ ಹರಟೆ.
ನಾನು ಅವರಲ್ಲಿ ಶಿಷ್ಯವೃತ್ತಿ ಸ್ವೀಕರಿಸಿ ಹಲವಾರು ಸಲ ಕೋಲಾರಕ್ಕೆ ಹೋಗಿ ಬಂದಿದ್ದೇನೆ. ಅವರ ಮಾತುಕತೆಗಳಲ್ಲಿ ನನಗೆ ಮುಖ್ಯವಾಗಿ ಕಂಡಿದ್ದು, ಜಾತ್ಯತೀತವಾದ ಮನಸ್ಸು; ಸಣ್ಣಪುಟ್ಟ ಸಂಗತಿಗಳ ಮೇಲೂ ಕಾಳಜಿಯಿಂದ ಸೂಕ್ಷ್ಮವಾಗಿ ಚಿಂತಿಸುವ ಮಾನವೀಯತೆ; ಗತಕಾಲದ ಬಗ್ಗೆ ಹಳಹಳಿಕೆಯಿಲ್ಲದೆ ವರ್ತಮಾನದ ಸಮಸ್ಯೆಗಳನ್ನು ಕುರಿತು ಚಿಂತಿಸುವ ಪ್ರಖರವೂ ನಿಷ್ಠುರವೂ ಆದ ರಾಜಕೀಯ ಪ್ರಜ್ಞೆ. ಸಾರ್ವಜನಿಕ ಬದುಕಿನಲ್ಲಿ ಜಾತಿಪದ್ಧತಿ ಎಲ್ಲೆಮೀರಿ ನಿರತವಾಗಿರುವ ಕುರಿತ ಹೇವರಿಕೆ. ಹಿರಿಯ ಲೇಖಕರಲ್ಲಿ ಸಾಮಾನ್ಯವಾಗಿ ಎರಡು ಸ್ವಭಾವಗಳಿರುತ್ತವೆ. ಒಂದು- ಕಳೆದುಹೋದ ಕಾಲದ ಬಗ್ಗೆ ಭಾವುಕ ಮರುಕಳಿಕೆ. ಎರಡು-ವರ್ತಮಾನದ ಸಾಮಾಜಿಕ ರಾಜಕೀಯ ವೈರುಧ್ಯಗಳನ್ನು ಉದಾರವಾಗಿ ನೋಡುತ್ತ, ಚಿಂತನೆಯ ಮೊನಚನ್ನು ಕಳೆದುಕೊಳ್ಳುವುದು. ಆದರೆ ಆತ್ಮಕ್ಕೆ ಸದಾ ಬೆಂಕಿ ಹತ್ತಿಸಿಕೊಂಡಂತೆ ಉರಿಯುವ ಕೆಲವರಿದ್ದಾರೆ. ಕೋಚೆ, ಕುಸುಮಾಕರ ದೇವರಗೆಣ್ಣೂರ, ಎಂ.ಡಿ. ನಂಜುಂಡಸ್ವಾಮಿ, ನೀಲಗಂಗಯ್ಯ ಪೂಜಾರ, ಕೆ.ರಾಘವೇಂದ್ರರಾವ್, ಅಬ್ಬಿಗೇರಿ ವಿರೂಪಾಕ್ಷಪ್ಪ, ಸಾರಾ ಅಬೂಬಕರ್, ಕಾಮರೂಪಿ ಪ್ರಭಾಕರ-ಇವರೆಲ್ಲ ಇಂತಹವರು. ಈ ಹಿರಿಯರ ಜತೆ ಮಾತಾಡುವಾಗ ಇವರ ಹಠಮಾರಿತನ, ಜಗಳಗಂಟಿತನ, ಆದರ್ಶವಾದ, ನೈತಿಕ ಪ್ರಜ್ಞೆ ಹಾಗೂ ಭಿನ್ನಮತ ಇಷ್ಟವಾಗುತ್ತದೆ.
ಕರ್ನಾಟಕದಿಂದ ಬಹುಕಾಲ ದೂರವಿದ್ದ ಕಾರಣದಿಂದ ಏರ್ಪಟ್ಟಿರುವ ಅಪರಿಚಿತತೆಯಿಂದಲೊ ಅಥವಾ ಕರ್ನಾಟಕದ ಒಳಗೇ ಇದ್ದೂಇದ್ದೂ ನಮಗೆ ಕಾಣದಂತಾಗಿರುವ ವೈರುಧ್ಯಗಳು ‘ಹೊರಗಿನಿಂದ’ ಬಂದಿರುವ ಅವರಿಗೆ ಒಡೆದು ಕಾಣುತ್ತಿರುವುದರಿಂದಲೊ, ಪ್ರಭಾಕರ ಕರ್ನಾಟಕದ ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ವೈರುಧ್ಯಗಳ ಬಗ್ಗೆ ತೀಕ್ಷ್ಣವಾದ ಟಿಪ್ಪಣಿ ಮಾಡುತ್ತಿರುತ್ತಾರೆ; ಕನ್ನಡಿಗರ ಸ್ವಭಾವದಲ್ಲೇ ವ್ಯಕ್ತಿನಿಷ್ಠೆಗಾಗಿ ವಿಮರ್ಶೆಯ ನಿಷ್ಠುರತೆ ಬಿಟ್ಟುಕೊಡುವ, ಸಜ್ಜನಿಕೆಯ ಭಾಷೆಯಲ್ಲಿ ವಾಸ್ತವವನ್ನು ಅಡಗಿಸುವ ಪ್ರವೃತ್ತಿಯಿದೆ ಎಂದು ಹೇಳುತ್ತಿರುತ್ತಾರೆ. ಸಂಘಟಕರೊಬ್ಬರು ಕಾರ್ಯಕ್ರಮವೊಂದಕ್ಕೆ ಕರೆಸಿಕೊಂಡು ಪರಿಚಯ ಭಾಷಣದಲ್ಲಿ ತಮ್ಮನ್ನು ಅತಿಯಾಗಿ ಹೊಗಳಿದ್ದನ್ನು ನೆನೆಯುತ್ತ ಅವರೊಮ್ಮೆ ಹೇಳಿದರು: “ಏನ್ ಸ್ವಾಮಿ ಕನ್ನಡಿಗರು? ಎಷ್ಟು ಉದಾರತೆ! ನನ್ನ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ನಾನು ಎಲ್ಲ ಸೇರಿದರೆ ನೂರೈವತ್ತು ಪುಟಗಳನ್ನೂ ಬರೆದಿಲ್ಲ. ಕನ್ನಡಕ್ಕೆ ದೊಡ್ಡ ಕೊಡುಗೆಯನ್ನು ಕೊಟ್ಟಿಲ್ಲ. ಆದರೂ ವಾಚಾಮಗೋಚರ ಹೊಗಳಿಬಿಟ್ಟರು. ಕರ್ನಾಟಕದಲ್ಲಿ ಮಾತಿಗೆ ಬೆಲೆಯೇ ಇದ್ದಂತಿಲ್ಲ.’’
ಇದನ್ನು ಕೇಳುವಾಗ ಈಚೆಗೆ ಕಲ್ಕತ್ತಾದಲ್ಲಿ ನಾನು ಕಂಡ, ಹಿರಿಯ ಲೇಖಕ ರುದ್ರಪ್ರತಾಪ ಸೇನರ ಸನ್ಮಾನ ಕಾರ್ಯಕ್ರಮ ನೆನಪಾಯಿತು. ಸೇನರಿಗೆ 75ವರ್ಷ ತುಂಬಿದ ನೆಪದಲ್ಲಿ ಇರಿಸಿಕೊಂಡಿದ್ದ ಆ ಕಾರ್ಯಕ್ರಮ ಎಷ್ಟು ವಿಮರ್ಶಾತ್ಮಕವಾಗಿತ್ತು ಎಂದರೆ, ಅವರ ಶಿಷ್ಯರು ತಮ್ಮ ಗುರುವಿನ ಜತೆ ಕೋರ್ಟ್ಮಾರ್ಶಲ್ ನಡೆಸುವವರ ಹಾಗೆ ಪ್ರಶ್ನೆ ಕೇಳುತ್ತಿದ್ದರು. ಸೇನರು ಆ ಕಟುತರ ಪ್ರಶ್ನೆಗಳಿಗೆಲ್ಲ ಪ್ರಾಮಾಣಿಕವಾಗಿ ದ್ವಂದ್ವವಿಲ್ಲದೆ ಉತ್ತರಿಸುತ್ತಿದ್ದರು. ಹಿರಿಯರ ತಲೆಗೆ ಅಭಿನಂದನ ಗ್ರಂಥಗಳ ಸರಮಾಲೆಯನ್ನು ತಂದು ಕಟ್ಟಿ, ಎಗ್ಗಿಲದೆ ಹೊಗಳಿ ವೈಭವೀಕರಿಸುವ ಪದ್ಧತಿಯಿರುವ ಕರ್ನಾಟಕದಲ್ಲಿ, ಈ ಪರಿಯ ನಿಷ್ಠುರತೆ ಕಲ್ಪಿಸಿಕೊಳ್ಳುವುದೇ ಕಷ್ಟ.
ತೋರುಗಾಣಿಕೆಯನ್ನು ಸದಾ ನಿರಾಕರಿಸುವ ಪ್ರಭಾಕರ ಅವರಲ್ಲಿ, ಅವರ ಖಂಡಿತವಾದಿ ನಿಲುವಿಗೆ ಅಷ್ಟೊಂದು ತಾಳೆಯಾಗದ ಇನ್ನೊಂದು ಮುಖವಿದೆ. ಅದೆಂದರೆ, ಜೀವನಪ್ರೀತಿಯ ಸಂಕೇತದಂತಿರುವ ತಮಾಶೆ ಮತ್ತು ಪೋಲಿತನ. ಈ ತಮಾಶೆಯ ಗುಣ ಅದ್ಭುತ ನಾಟಕೀಯ ಶೈಲಿಯಾಗಿ ಅವರ ಕಥೆ ಕಾದಂಬರಿಗಳಲ್ಲೆಲ್ಲ ಆವರಿಸಿಕೊಂಡಿದೆ. ತಮಗೆ ಪಾಠ ಹೇಳಿದ ಗುರುಗಳ ವೈಯಕ್ತಿಕ ಬದುಕಿನಲ್ಲಿದ್ದ ಸನಾತನವಾದ ಮತ್ತು ತರಗತಿಗಳಲ್ಲಿ ಕನ್ನಡ ಬಳಸದ ಅವರ ಇಂಗ್ಲಿಷಿನ ವ್ಯಾಮೋಹ ಕುರಿತಂತೆ, ಅವರಲ್ಲಿ ಸ್ವಾರಸ್ಯಕರ ಮಾಹಿತಿಗಳಿವೆ. ಪ್ರಭಾಕರ ಅವರು ಆಪ್ತರ ಎದುರು ತಾವು ಬರೆದಿರುವ ಅಪ್ರಕಟಿತ ಪೋಲಿ ಪದ್ಯಗಳನ್ನು ವಾಚಿಸುವುದುಂಟು. ಬಹುಶಃ ಇದು ಅವರ ಗೆಳೆಯರಾಗಿದ್ದ ಎಚ್.ಎಸ್. ಬಿಳಿಗಿರಿಯವರ ಸಹವಾಸ ಫಲವಿರಬೇಕು.
ಒಂದೇ ವ್ಯಕ್ತಿತ್ವದಲ್ಲಿ ಒಟ್ಟಿಗೇ ಇರಲು ಕಷ್ಟವೆನಿಸಬಹುದಾದ ಇನ್ನೂ ಅನೇಕ ಸಂಗತಿಗಳು ಅವರಲ್ಲಿ ಸಹಜವಾಗಿ ನಿರಾಳವಾಗಿ ಇವೆ. ಉದಾ.ಗೆ, ಬಹುಭಾಷಿಕರಾದ ಅವರ ಮನೆಮಾತು ತಮಿಳುಗನ್ನಡ; ಬರವಣಿಗೆ ಕನ್ನಡ ಮತ್ತು ಇಂಗ್ಲೀಶಿನಲ್ಲಿ; ಸಂಸ್ಕೃತ ಅಸ್ಸಾಮಿ ಬಂಗಾಳಿ ಭಾಷೆಗಳಲ್ಲಿ ದೊಡ್ಡ ವಿದ್ವತ್ತು. (ಅವರ ಅಸ್ಸಾಮಿ ಬಂಗಾಳಿ ತಿಳಿವಳಿಕೆಯಿಂದ ಕನ್ನಡಕ್ಕೆ ಪ್ರಯೋಜನವಿನ್ನೂ ಆಗಿಲ್ಲ). ಪಂಪ ಅವರ ಇಷ್ಟದ ಕವಿ. ಮೂಲತಃ ಇಂಗ್ಲೀಶ್ ಸಾಹಿತ್ಯದ ವಿದ್ಯಾರ್ಥಿಯಾದರೂ ಸಾಹಿತ್ಯಕ್ಕಿಂತ ಹೆಚ್ಚಾಗಿ ಅಂತರಾಷ್ಟ್ರೀಯ ರಾಷ್ಟ್ರೀಯ ರಾಜಕಾರಣದ ಮೇಲೆ ಹೆಚ್ಚು ಬರೆವಣಿಗೆ. ಅದರಲ್ಲೂ ಈಶಾನ್ಯ ಭಾರತದ ರಾಜಕಾರಣ ಭಾಷೆ ಧರ್ಮ ಸಂಸ್ಕೃತಿ ಕುರಿತ ಅವರ ತಿಳಿವಳಿಕೆ ಅಪರೂಪದ್ದು. ಇವನ್ನೆಲ್ಲ ಒಟ್ಟಿಗೆ ಹೇಗೆ ಕಲ್ಪಿಸಿಕೊಳ್ಳುವುದು? ಪ್ರಭಾಕರ ತಮ್ಮ ಕಾದಂಬರಿಯ ಒಂದು ಪಾತ್ರದ ಹಾಗೇ ಬದುಕಿದ್ದಾರೆ.
ಅವರು ಈಚೆಗೆ ಮಾತಾಡುತ್ತ ಕೊಂಚ ದಣಿದ ದನಿಯಲ್ಲಿ “ಸ್ವಾಮಿ, ಕರ್ನಾಟಕ ನನಗೆ ಸಾಕಾಗಿದೆ. ಗೌಹಾಟಿಗೆ ಹೋಗಬೇಕು ಅನಿಸುತ್ತಿದೆ’ ಎಂದು ಗೊಣಗಿದರು. “ಹೋಗಿ. ಆದರೆ ಮತ್ತೆಬನ್ನಿ’’ ಎಂದೆ. ಅವರಲ್ಲಿ ಕೋಲಾರ-ಗೌಹಾತಿಗಳ ನಡುವೆ ವಿಚಿತ್ರವಾದ ಆಕರ್ಷಣೆ ವಿಕರ್ಷಣೆಯಿದೆ. ಇದು ಬಹುಕಾಲ ಬೇರೆಡೆ ಬೆಳೆದ ಮರ ತನ್ನ ಮೂಲನೆಲಕ್ಕೆ ಬಂದು ನಾಟಿಗೊಂಡರೆ ಬೇರೂರುವ ಕಷ್ಟ. ಮರಳಿ ಹುಟ್ಟಿದೂರಿಗೆ ಬರುವಿಕೆ ಬಾಲ್ಯದ ನೆನಪುಗಳನ್ನು ಎಚ್ಚರಿಸಿ ಸುಖ ಕೊಡುತ್ತದೆ; ಆದರೆ ಹೊಚ್ಚ ಹೊಸತೆೆನಿಸುವಷ್ಟು ಬದಲಾಗಿರುವ ಪರಿಸರವು, ಕಾಡುವ ಏಕಾಂಗಿತನವನ್ನೂ ತಂದಿಡುತ್ತದೆ. ಯಾರ ಮರುಕವನ್ನೂ ಬಯಸದೆ ಏಕಾಂತದಲ್ಲಿ ಘನತೆಯಿಂದ ಕೊನೆಯ ದಿನಗಳನ್ನು ಕಳೆಯ ಬಯಸುವ ಇಂತಹ ಹಠಮಾರಿ ಜೀವಗಳು, ಒಳಗೇ ಮೃದ್ವಂಗಿಗಳಾಗಿ ಆಪ್ತಸಂಗಾತಕ್ಕೆ ಹಾತೊರೆಯುತ್ತಿರುತ್ತವೆ.
ಆ ಸಂಗಾತದ ಸ್ವರೂಪ ಎಂತಹುದು ಎಂದು ಸ್ಪಷ್ಟವಾಗುವುದಿಲ್ಲ. ನಾನು ‘ಕಾಮರೂಪಕ್ಕೆ ಯಾವಾಗ ಹೋಗುತ್ತೀರಿ’ ಎಂದು ಕೇಳಿದೆ: ‘ಆದಿಮದ 50ನೇ ಬೆಳುದಿಂಗಳ ಕಾರ್ಯಕ್ರಮ ಮುಗಿಸಿಕೊಂಡು’ ಎಂದರು.
ಪ್ರತಿಯೊಬ್ಬರಿಗೂ ಬಾಳಿನಲ್ಲಿ ಬಹುರೂಪಧಾರಣೆ ಮಾಡಬೇಕಾದ ಒತ್ತಡಗಳು ಎದುರಾಗಬಹುದು. ಆದರೆ ಈ ರೂಪಧಾರಣೆಗೆ ಕಾರಣ, ನಮ್ಮ ಇಚ್ಛಾನಿಚ್ಛೆಗಳು ಮಾತ್ರವಲ್ಲ, ಬಾಳಿನ ಅನೂಹ್ಯ ಒತ್ತಡಗಳು ಸಹ. ಈ ಒತ್ತಡಗಳು ಬರೆಹ ಇಲ್ಲವೇ ಮಾತಿನ ವ್ಯಾಖ್ಯಾನಕ್ಕೆ ಕೆಲವೊಮ್ಮೆ ನಿಲುಕುವಂತೆ ಇರುವುದಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಕವಿತೆ | ನೆನಪು