Connect with us

ದಿನದ ಸುದ್ದಿ

ಕುಡಿಯುವ ನೀರಿನ ಅವಶ್ಯಕತೆ ಹಾಗೂ ನೈಜ ಪರಿಸರವಾಗಿ ಉಳಿಸಲು ಕುಂದವಾಡ ಕೆರೆ ಅಭಿವೃದ್ಧಿ : ಸಂಸದ ಜಿ.ಎಂ. ಸಿದ್ದೇಶ್ವರ

Published

on

ಸುದ್ದಿದಿನ,ದಾವಣಗೆರೆ : ಕುಂದವಾಡ ಕೆರೆಯು ದಾವಣಗೆರೆ ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಸ್ಮಾರ್ಟ್ ಸಿಟಿ ಯೋಜನೆಯಡಿ ಜನರಿಗೆ ಅಗತ್ಯ ಕುಡಿಯುವ ನೀರು ಪೂರೈಸಲು ಹಾಗೂ ಕೆರೆಯ ಸುತ್ತಮುತ್ತಲ ಪ್ರದೇಶದಲ್ಲಿ ಪರಿಸರವನ್ನು ಜೀವವೈವಿಧ್ಯಗಳ ವಿಕಸನಕ್ಕೆ ಅನುಕೂಲವಾಗುವಂತೆ ನೈಜ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ವಾಸ್ತವಾಂಶಗಳನ್ನು ಸಾರ್ವಜನಿಕರಿಗೆ ತಲುಪುವ ದಿಸೆಯಲ್ಲಿ ಜನಜಾಗೃತಿ ಮೂಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಸಿಟಿ ಲೆವೆಲ್ ಅಡೈಸರಿ ಫೋರಂ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಅವರು ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿ, ಕೆರೆಯು ದಾವಣಗೆರೆ ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಬೇಸಿಗೆಯಲ್ಲಿ ಕೆರೆ ಏರಿ ಮೇಲಿನ ಕಳೆ, ಗಿಡಗಂಟೆ ಇತ್ಯಾದಿಗಳ ಕೊಳೆಯುವಿಕೆಯಿಂದ ನೀರು ಹಸಿರುಗಟ್ಟಿ ಕುಡಿಯಲು ಯೋಗವಾಗದ ರೀತಿ ಪರಿವರ್ತನೆಯಾಗುತ್ತದೆ, ನೀರು ಕಲುಷಿತಗೊಳ್ಳುವುದರಿಂದ ಕೆರೆಯಲ್ಲಿನ ಮೀನುಗಳು, ಜೀವವೈವಿಧ್ಯಗಳು ಸಾಯುತ್ತವೆ. ಇದನ್ನು ಈ ಹಿಂದೆಯೂ ಗಮನಿಸಲಾಗಿದೆ.

ಕೆರೆಯ ಏರಿಯಲ್ಲಿನ ನೀರು ಬಸಿಯುವಿಕೆ, ಹಾಳಾಗಿರುವ ಏರಿ ಮೇಲಿನ ಕಲ್ಲುಹೊದಿಕೆ ಮುಂತಾದ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಕೆರೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದ್ದು, ಒಂದೂವರೆ ವರ್ಷದ ಹಿಂದೆಯೇ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ. ಸಾರ್ವಜನಿಕರ ಅನುಕೂಲಕ್ಕೆ ಏರಿಯ ಮೇಲೆ ವಿದ್ಯುತ್ ದೀಪ ಅಳವಡಿಕೆ, ಹೂವಿನ ಗಿಡಗಳನ್ನು ಹಾಕುವುದು, ಕಲ್ಲು ಬೆಂಚು ಅಳವಡಿಕೆ, ವಾಕಿಂಗ್ ಪಾತ್, ಸೈಕಲ್ ಟ್ರಾಕ್ ನಿರ್ಮಾಣ ಮಾಡಲಾಗುತ್ತಿದೆ. ಕೆರೆಯ ಒಳಗೆ ಸಾರ್ವಜನಿಕರು ಹಾಗೂ ಪ್ರಾಣಿಗಳು ಹೋಗದಂತೆ ಚೈನ್ ಲಿಂಕ್ ತಂತಿ ಬೇಲಿ ಅಳವಡಿಸಲು ಉದ್ದೇಶಿಸಲಾಗಿದೆ.

ಈ ಕೆರೆಗೆ ಯಾವುದೇ ಮಳೆ ನೀರಿನ ಒಳಹರಿವು ಇಲ್ಲದಿರುವುದರಿಂದ, ತುಂಗಭದ್ರಾ ನದಿ ಮತ್ತು ಭದ್ರಾ ಕಾಉವೆ ಮೂಲಕ ಹರಿಸಿ ತುಂಬಿಸಲಾಗುತ್ತಿದೆ. ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯ ವಿಷಯವಾಗಿರುವುದರಿಂದ, ಕೆರೆಯಲ್ಲಿ ಸ್ವಚ್ಛ ಪರಿಸರ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಸತ್ಯಾಂಶಗಳ ಬಗ್ಗೆ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಜಿ.ಎಂ. ಸಿದ್ದೇಶ್ವರ ಅವರು, ವಾಸ್ತವ ಸಂಗತಿಗಳನ್ನು ಅರಿಯದೆ, ಕುಂದವಾಡ ಕೆರೆ ಅಭಿವೃದ್ಧಿ ಯೋಜನೆಯು ಪರಿಸರ ವಿರೋಧಿಯೆಂದು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕುಂದವಾಡ ಕೆರೆ ಪ್ರಸ್ತುತ ಕೇವಲ ಕೆರೆ ಮಾತ್ರವಲ್ಲದೆ, ನಗರಕ್ಕೆ ಕುಡಿಯುವ ನೀರಿಗೆ ಆಧಾರವಾಗಿರುವ ಪ್ರಮುಖ ನೀರು ಸಂಗ್ರಹಗಾರವಾಗಿದೆ. ಅಧಿಕಾರಿಗಳು ಕುಂದವಾಡ ಕೆರೆ ಅಭಿವೃದ್ಧಿಯ ಉದ್ದೇಶ ಕುರಿತ ವಾಸ್ತವ ಅಂಶಗಳನ್ನು ಸರಿಯಾದ ರೀತಿಯಲ್ಲಿ ಪ್ರಚುರಪಡಿಸಿದಲ್ಲಿ, ಯೋಜನೆ ಅಭಿವೃದ್ಧಿ ಕುರಿತಂತೆ ಇರುವ ತಪ್ಪು ಅಭಿಪ್ರಾಯಗಳು ದೂರವಾಗಲು ಸಾಧ್ಯ, ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳು ಜನಜಾಗೃತಿ ಮೂಡಿಸಿ ಎಂದು ಸೂಚನೆ ನೀಡಿದರು.

ಚರಂಡಿ, ರಾಜಕಾಲುವೆ ನಿರ್ಮಾಣಕ್ಕೆ ಅಡ್ಡಿ

ನಗರದಲ್ಲಿ ಮಳೆ ಹೆಚ್ಚು ಬಂದಾಗ, ನೀರು ಸರಾಗವಾಗಿ ಹರಿಯದೆ, ತಗ್ಗು ಪ್ರದೇಶಗಳಿಗೆ ನುಗ್ಗಿ, ತೊಂದರೆ ಉಂಟಾಗುವುದನ್ನು ತಪ್ಪಿಸಲು ರಾಜ ಕಾಲುವೆ ಹಾಗೂ ಚರಂಡಿಗಳ ನಿರ್ಮಾಣವಾಗುತ್ತಿದ್ದು ಶೇ. 50 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ನಗರದಲ್ಲಿನ ರಾಜ ಕಾಲುವೆ (ಮುಖ್ಯ ಚರಂಡಿ) ಮಾರ್ಗಕ್ಕೆ ಹಲವೆಡೆ ಅನುಮೋದಿತ ಬಡಾವಣೆಯಲ್ಲಿ ಸೂಕ್ತ ಸ್ಥಳಾವಕಾಶ ಇಲ್ಲದಿರುವುದರಿಂದ ತೊಂದರೆ ಉಂಟಾಗಿದೆ.

ಅಲ್ಲದೆ ನಗರದ ಹಳೆಯ ಭಾಗದಲ್ಲಿ ಚರಂಡಿ ಹಾಗೂ ರಸ್ತೆಯಲ್ಲಿ ನೀರಿನ ತೊಟ್ಟಿ, ಶೌಚಾಲಯ, ಮೆಟ್ಟಿಲುಗಳು, ಸ್ಟೇರ್‍ಕೇಸ್, ಸ್ಟೋರ್‍ರೂಂ ಇತ್ಯಾದಿಗಳನ್ನು ಅನಧಿಕೃತವಾಗಿ ಕಟ್ಟಿಕೊಂಡಿರುವುದನ್ನು ಗಮನಿಸಲಾಗಿದ್ದು, ಕಾಮಗಾರಿಗಳಿಗೆ ತೀವ್ರ ತೊಂದರೆಯಾಗಿದೆ. ಮಹಾನಗರಪಾಲಿಕೆಯಿಂದ ತೆರವು ಮಾಡಿಕೊಟ್ಟಲ್ಲಿ, ಚರಂಡಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ರವೀಂದ್ರ ಮಲ್ಲಾಪುರ ಹೇಳಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರತಿಕ್ರಿಯಿಸಿ, ಮಹಾನಗರಪಾಲಿಕೆ ಆಯುಕ್ತರು ಕೂಡಲೆ ಅಂತಹ ಒತ್ತುವರಿಯನ್ನು ತೆರವುಗೊಳಿಸಿ, ಚರಂಡಿ ನಿರ್ಮಾಣ ಕಾರ್ಯಕ್ಕೆ ಅನುವು ಮಾಡಿಕೊಡಬೇಕು. ಇದರಲ್ಲಿ ಯಾವುದೇ ಪ್ರಭಾವಗಳಿಗೆ ಮಣಿಯದೆ, ತುರ್ತಾಗಿ ತೆರವುಗೊಳಿಸುವಂತೆ ನಿರ್ದೇಶನ ನೀಡಿದರು.

ಇ-ಟಾಯ್ಲೆಟ್ ಸಮರ್ಪಕ ನಿರ್ವಹಣೆ

ನಗರ ವ್ಯಾಪ್ತಿಯಲ್ಲಿ ಈಗಾಗಲೆ 1 ಮತ್ತು 2 ನೇ ಹಂತದಲ್ಲಿ ಒಟ್ಟು 29 ಇ-ಟಾಯ್ಲೆಟ್‍ಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗಿದ್ದು, ಇನ್ನೂ 17 ನಿರ್ಮಾಣವಾಗಬೇಕಿದೆ. ಆದರೆ ಹಲವೆಡೆ ಇ-ಟಾಯ್ಲೆಟ್‍ಗಳ ಅಸಮರ್ಪಕ ನಿರ್ವಹಣೆಯಿಂದ ಹಾಳಾಗಿದ್ದು, ದೂರುಗಳು ಕೇಳಿಬರುತ್ತಿವೆ ಎಂದು ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯ ರವೀಂದ್ರ ಮಲ್ಲಾಪುರ ಉತ್ತರಿಸಿ, ಇ-ಟಾಯ್ಲೆಟ್‍ಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಸದುದ್ದೇಶದಿಂದ ನಿರ್ಮಿಸಿದ್ದು, ಕೆಲವು ಕಿಡಿಗೇಡಿಗಳು ಕಾಯಿನ್ ಬಾಕ್ಸ್‍ನಲ್ಲಿ ಕಬ್ಬಿಣದ ತುಂಡು, ಕಟ್ಟಿಗೆ ತುಂಡುಗಳನ್ನು ಹಾಕಿ ಹಾಳು ಮಾಡುತ್ತಿದ್ದಾರೆ. ನಗರದಲ್ಲಿ ಎಲ್ಲ 46 ಇ-ಟಾಯ್ಲೆಟ್‍ಗಳನ್ನು ನಿರ್ಮಾಣ ಮಾಡಿ, ನಿರ್ವಹಣೆಗಾಗಿ ಮಹಾನಗರಪಾಲಿಕೆಗೆ ಹಸ್ತಾಂತರ ಮಾಡಲಾಗುವುದು.

ರಸ್ತೆ ಸುರಕ್ಷತೆಗಾಗಿ ನಗರದಲ್ಲಿ ಹಾಕಿರುವ ಫ್ಲೆಕ್ಸಿಬಲ್ ಮೀಡಿಯನ್, ಮಾರ್ಕರ್, ಸೋಲಾರ್ ಬ್ಲಿಂಕರ್ಸ್‍ಗಳನ್ನು ದುಷ್ಕರ್ಮಿಗಳು ಕತ್ತರಿಸಿ, ಕಳುವು ಮಾಡಿಕೊಂಡು, ತಮ್ಮ ವಾಹನಗಳಿಗೆ ಅಳವಡಿಸಿರುವುದು ಕಂಡುಬಂದಿದ್ದು, ಅಂತಹ ವಾಹನಗಳ ಫೋಟೋ ಸಹಿತ ನಗರದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸ್ ಅಧಿಕಾರಿಗಳು ಇನ್ನೂ ಕ್ರಮ ಕೈಗೊಂಡಿಲ್ಲ ಎಂದರು.

ಸಭೆಯ ಮಧ್ಯದಲ್ಲಿಯೇ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ ಸಂಸದರು, ಇದುವರೆಗೂ ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕೂಡಲೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು ಕಾನೂನು ರೀತ್ಯ ಕ್ರಮ ಜರುಗಿಸುವಂತೆ ತಾಕೀತು ಮಾಡಿದರು.

ಸಭೆಯಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮಹಾನಗರಪಾಲಿಕೆ ಮಹಾಪೌರ ಅಜಯ್‍ಕುಮಾರ್, ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ಸಿಟಿ ಲೆವೆಲ್ ಅಡೈಸರಿ ಫೋರಂ ಸದಸ್ಯರು, ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು, ಇಂಜಿನಿಯರ್‍ಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending