Connect with us

ದಿನದ ಸುದ್ದಿ

ಅಂಬೇಡ್ಕರ್‌ : ಅಂತಿಮ ಯಾತ್ರೆಯ ಆರ್ದ್ರ ಚಿತ್ರಗಳು

Published

on

  • ಎನ್‌.ಆರ್‌. ಶಿವರಾಂ

ಡಿಸೆಂಬರ್‌ 4, 1956ನೇ ಇಸವಿ. ಡಾ. ಅಂಬೇಡ್ಕರ್‌ ಅವರು ರಾಜ್ಯಸಭೆಯ ಕಲಾಪಗಳಲ್ಲಿ ಭಾಗವಹಿಸಿದ್ದರು. ಮರುದಿನ ಮನೆಯಲ್ಲೇ ಉಳಿದುಕೊಂಡು ಬರವಣಿಗೆಯಲ್ಲಿ ತೊಡಗಿಕೊಂಡಿದ್ದರು. ಅಂದು ರಾತ್ರಿ 8ಕ್ಕೆ, ಜೈನ ಮುನಿಗಳೊಬ್ಬರು ಅಂಬೇಡ್ಕರ್‌ರವರನ್ನು ಭೇಟಿ ಮಾಡಿ ನಾಳಿನ ಒಂದು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ರಾತ್ರಿ 11.15ಕ್ಕೆ ಲೇಖನಿ ಕೆಳಗಿಡುವ ವೇಳೆಗೆ ಬಾಬಾ ಸಾಹೇಬರು ಸಾಕಷ್ಟು ಬಳಲಿದ್ದರು. ನಂತರ ಕೊಂಚ ಊಟ ಮಾಡಿದರು.

ತಮ್ಮ ಆಪ್ತ ಕಾರ್ಯದರ್ಶಿ ನಾನಕ್‌ಚಂದುರತ್ತು ಜೊತೆ ‘ಬುದ್ಧ ಅಂಡ್‌ ಹಿಸ್‌ ಧಮ್ಮ’ ಗ್ರಂಥದ ಬಗ್ಗೆ ಮಾತನಾಡಿದರು ಹಾಗೂ ಈ ಪುಸ್ತಕದ ಅರ್ಪಣೆಯ ಟೈಪ್‌ ಮಾಡಿದ ಪುಟಗಳನ್ನು ಜೊತೆಗೆ ಬರ್ಮಾ ಸರ್ಕಾರಕ್ಕೆ ತಾವು ಬರೆದಿರುವ ಪತ್ರಗಳನ್ನು ತೆಗೆದು ತಮ್ಮ ಟೇಬಲ್‌ ಮೇಲಿಡುವಂತೆ ಸೂಚಿಸಿದರು. ರಾತ್ರಿ ಮತ್ತೊಮ್ಮೆ ಅವುಗಳನ್ನು ಪರಿಶೀಲಿಸುವುದು ಅವರ ಉದ್ದೇಶವಾಗಿತ್ತು. ‘ಬೆಳಿಗ್ಗೆ ಬೇಗನೇ ಬಂದುಬಿಡು. ಅವುಗಳೆಲ್ಲವನ್ನು ನಾಳೆಯೇ ತುರ್ತಾಗಿ ಕಳುಹಿಸಬೇಕು’ ಎಂದು ಹೇಳಿದರು.

ಎಲ್ಲ ಕೆಲಸ ಮುಗಿಸಿ, ‘ಬೆಳಿಗ್ಗೆ ಬೇಗ ಬರುವೆ’ ಎಂದು ಹೇಳಿದ ರತ್ತು ತಮ್ಮ ಸೈಕಲ್‌ ಹತ್ತಿ ಮನೆಗೆ ತೆರಳಿದರು. ನಂತರ ಬಾಬಾ ಸಾಹೇಬರು ಟೇಬಲ್‌ ಮೇಲಿಟ್ಟಿದ್ದ ಎಲ್ಲಾ ಕಾಗದ ಪತ್ರಗಳನ್ನು ಓದಿ ಮುಗಿಸಿ, ತಡರಾತ್ರಿ ಮಲಗಿಕೊಂಡರು. ಡಿಸೆಂಬರ್‌ 6ರ ಮುಂಜಾವು. ಬೆಳಿಗ್ಗೆ 6.30ಕ್ಕೆ ಬಾಬಾ ಸಾಹೇಬರ ಪತ್ನಿ ಸವಿತಾ ಅಂಬೇಡ್ಕರ್‌ ಅವರು ಚಹಾದೊಂದಿಗೆ ಕೊಠಡಿಗೆ ಬಂದರು. ಬಾಬಾ ಸಾಹೇಬರು ನಿದ್ದೆಯಲ್ಲಿದ್ದರು. ಅದು ಚಿರನಿದ್ರೆ.

ತಕ್ಷಣವೇ ರತ್ತು ಅವರಿಗೆ ಕರೆ ಹೋಯಿತು. ಅಂಬೇಡ್ಕರ್‌ ನಿಧನರಾದ ಸುದ್ದಿಯನ್ನು ನಂತರ ಆಕಾಶವಾಣಿಗೆ ತಿಳಿಸಲಾಯಿತು. ಈ ವಾರ್ತೆ ರೇಡಿಯೊದಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಇಡೀ ದೇಶದ ಸೂತಕದ ಸಂಚಲನೆ. ಬಾಬಾ ಸಾಹೇಬರ ಕೋಟಿ ಕೋಟಿ ಅನುಯಾಯಿಗಳು ದಿಗ್ಭ್ರಾಂತರಾದರು. ಲಕ್ಷ ಲಕ್ಷ ಜನರು ಅಂಬೇಡ್ಕರ್‌ರವರು ಕೊನೆಯುಸಿರೆಳೆದ ನವದೆಹಲಿಯ ಅಲಿಪುರ ರಸ್ತೆಯಲ್ಲಿರುವ 26ನೇ ನಂಬರಿನ ಬಂಗಲೆಯತ್ತ ಧಾವಿಸಲಾರಂಭಿಸಿದರು. ಅಂಬೇಡ್ಕರ್‌ರವರ ಪಾರ್ಥಿವ ಶರೀರವನ್ನು ಅವರ ಕರ್ಮಭೂಮಿ ಮುಂಬೈಗೆ ತರುವುದಾಗಿಯೂ, ಮುಂಬೈನಲ್ಲೇ ಅಂತಿಮ ಶವಸಂಸ್ಕಾರ ಮಾಡುವುದಾಗಿಯೂ ಪ್ರಕಟಿಸಲಾಯಿತು.

ದುಡ್ಡಿನ ಕೊರತೆ

1947ರಲ್ಲಿ ಬ್ರಿಟೀಷರು ಭಾರತಕ್ಕೆ ಸ್ವಾತಂತ್ರ್ಯ ನೀಡುವಾಗ ಅಖಂಡ ಭಾರತವನ್ನು ಭಾರತ ಮತ್ತು ಪಾಕಿಸ್ತಾನಗಳೆಂದು ಎರಡು ಪ್ರತ್ಯೇಕ ರಾಷ್ಟ್ರಗಳನ್ನಾಗಿ ವಿಭಜಿಸಿದರು. ಆ ಸಂದರ್ಭದಲ್ಲಿ ಅಂಬೇಡ್ಕರ್‌ ಅವರು ದಲಿತರಿಗಾಗಿಯೂ ಒಂದು ಪ್ರತ್ಯೇಕ ರಾಷ್ಟ್ರ ಕೇಳಿದ್ದರೆ, ಭಾರತ ಮೂರು ಪ್ರತ್ಯೇಕ ದೇಶಗಳನ್ನಾಗಿ ವಿಭಜನೆ ಹೊಂದುತ್ತಿತ್ತೇನೋ? ಆಗ ದಲಿತರಿಗಾಗಿ ರೂಪುಗೊಳ್ಳುವ ದೇಶಕ್ಕೆ ಅಂಬೇಡ್ಕರ್‌ ಅವರು ತಾವು ಬದುಕಿರುವವರೆಗೂ ಪ್ರಧಾನಮಂತ್ರಿ ಆಗಿರಬಹುದಿತ್ತು. ಆದರೆ ಬುದ್ಧನ ತತ್ವಗಳಿಂದ ಪ್ರಭಾವಿತರಾಗಿದ್ದ ಅವರು ಪ್ರಧಾನಿಯಾಗುವ ಆಸೆಯಿಂದ ಅಖಂಡ ಭಾರತವನ್ನು ಹೋಳು ಮಾಡಲು ಇಷ್ಟಪಡಲೂ ಇಲ್ಲ ಮತ್ತು ಅಂತಹ ಪ್ರಯತ್ನಕ್ಕೆ ಕೈ ಹಾಕಲೂ ಇಲ್ಲ.

ಅಧಿಕಾರದ ಮಾತಿರಲಿ, ಅಂಬೇಡ್ಕರ್‌ ತಮ್ಮ ವಿದ್ಯೆ–ತಿಳಿವಳಿಕೆಯನ್ನು ವಾಣಿಜ್ಯೋದ್ಯಮಕ್ಕೆ ಬಳಸಿಕೊಂಡಿದ್ದರೆ ಬಹುದೊಡ್ಡ ವಾಣಿಜ್ಯೋದ್ಯಮಿಯಾಗಿ ರೂಪುಗೊಳ್ಳಲು ಸಾಧ್ಯವಿತ್ತು. ಅವರಿಗಿದ್ದ ಜ್ಞಾನ ಮತ್ತು ಪ್ರತಿಭೆಗೆ ಅವರು ವಿದೇಶದಲ್ಲಿ ಉನ್ನತ ಹುದ್ದೆ ಪಡೆದು ಅಲ್ಲಿಯೇ ನೆಲೆಸಬಹುದಿತ್ತು.

ಆದರೆ, ಅವರದು ಭಾರತದಲ್ಲಿಯೇ ಉಳಿದು ಪ್ರವಾಹದ ವಿರುದ್ಧ ಈಜುವ ಮನೋಭಾವವಾಗಿತ್ತು. ಜ್ಞಾನ–ಶೀಲ–ಸ್ವಾಭಿಮಾನ ಮತ್ತು ಪ್ರಾಮಾಣಿಕತೆಗಳನ್ನೇ ಉಸಿರಾಡುವಂತೆ ಕಾಣಿಸುತ್ತಿದ್ದ ಅವರು ತಮ್ಮ ಬದುಕಿನ ಕೊನೆಯವರೆಗೂ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದರು. ಆ ಮುಗ್ಗಟ್ಟು ಅವರ ಸಾವಿನ ಸಂದರ್ಭದಲ್ಲೂ ಎದುರಾಯಿತು.

ಅಂಬೇಡ್ಕರ್‌ ಅವರ ದೇಹವನ್ನು ದೆಹಲಿಯಿಂದ ಮುಂಬೈಗೆ ಸಾಗಿಸಲು ಇಂಡಿಯನ್‌ ಏರ್‌ಲೈನ್ಸ್‌ನ ಲಘು ವಿಶೇಷ ವಿಮಾನವನ್ನು ಬಾಡಿಗೆಗೆ ಕೇಳಿದಾಗ, 5,000 ರೂಪಾಯಿ ಬಾಡಿಗೆಯಾಗುತ್ತದೆಂದು ತಿಳಿಸಲಾಯಿತು. ‘ಭಾರತದ ಸಂವಿಧಾನ ಶಿಲ್ಪಿ’ ಎನ್ನುವ ಖ್ಯಾತಿಯ ಹಾಗೂ ಕೇಂದ್ರ ಸರ್ಕಾರದ ಮಾಜಿ ಕಾನೂನು ಮಂತ್ರಿಗಳೂ ಆದ ಅಂಬೇಡ್ಕರ್‌ ಅವರ ಅಲ್ಮೇರಾ ತೆರೆದು ನೋಡಿದರೆ ಅಲ್ಲಿದ್ದುದು ಕೇವಲ 300 ರೂಪಾಯಿ! ರತ್ತುರವರು ಶ್ರೀಮತಿ ಸವಿತಾ ಅಂಬೇಡ್ಕರ್‌ರವರಲ್ಲಿ ವಿಚಾರಿಸಿದರೆ, ಅವರು ನನ್ನ ಹತ್ತಿರ ಸ್ವಲ್ಪವೂ ಹಣವಿಲ್ಲವೆಂದರು. 5,000 ರೂಪಾಯಿ ಹಣ ಹೊಂದಿಸಲು ಸಾಧ್ಯವಾಗದ ಪರಿಸ್ಥಿತಿ ಎದುರಾಯಿತು. ಆಗ ಟಿ.ಬಿ. ಬೋನ್‌ಸ್ಲೆ ಎನ್ನುವವರು ತಮ್ಮ ಅಂಬಾಸಿಡರ್‌ ಕಾರನ್ನು ಮಾರಾಟ ಮಾಡಿ ಹಣ ನೀಡಲು ಮುಂದಾದರು.

ಆದರೆ ಆ ಕಾರನ್ನು ತಕ್ಷಣಕ್ಕೆ ಕೊಳ್ಳಲು ಯಾರೂ ಮುಂದಾಗಲಿಲ್ಲ. ಕೊನೆಗೆ ಅಂದಿನ ಸಂಪರ್ಕ ಖಾತೆ (ವಿಮಾನಯಾನವೂ ಸೇರಿದಂತೆ) ಸಚಿವರಾದ ಬಾಬು ಜಗಜೀವನರಾಂ ಅವರನ್ನು ಸಂಪರ್ಕಿಸಲಾಯಿತು. ಅವರು, ‘ವಿಮಾನವನ್ನು ಉಚಿತವಾಗಿ ಬಯಸುತ್ತೀರೋ ಅಥವಾ ಅರ್ಧ ಬೆಲೆಯ (ರೂ. 2,500) ಬಾಡಿಗೆಗೆ ಬಯಸುತ್ತೀರೋ’ ಎಂದು ಅಂಬೇಡ್ಕರ್‌ರವರ ಮತ್ತೊಬ್ಬ ಸಹಾಯಕರಾದ ಡಾ. ಶಂಕರಾನಂದ ಶಾಸ್ತ್ರಿಯವರನ್ನು ಕೇಳಿದರು. ಅಂಬೇಡ್ಕರ್‌ರವರು ತಾವು ಬದುಕಿರುವಷ್ಟು ದಿನ ತನಗಾಗಿ ಯಾರಲ್ಲೂ ಏನನ್ನೂ ಬೇಡಿಕೊಂಡಿರಲಿಲ್ಲ.

ಹಾಗಾಗಿ ಉಚಿತವಾಗಿ ಬೇಡ, ಅರ್ಧ ಬಾಡಿಗೆಯನ್ನು ತಾನು ನೀಡುತ್ತೇನೆ. ಆದರೆ ಈಗ ಹಣ ಇಲ್ಲ. ಬಾಂಬೆಗೆ ಹೋದ ನಂತರ ಅಲ್ಲಿ ಈ ಹಣವನ್ನು ನೀಡುತ್ತೇನೆ, ಸಹಾಯ ಮಾಡಿ’ ಎಂದು ಶಂಕರಾನಂದ ಶಾಸ್ತ್ರಿಯವರು ಕೇಳಿಕೊಂಡರು. ತಕ್ಷಣ ಸ್ಪಂದಿಸಿದ ಜಗಜೀವನರಾಂರವರು– ‘ಸದ್ಯಕ್ಕೆ ನಿಮ್ಮಲ್ಲಿರುವ ಹಣವನ್ನು ಪಾವತಿಸಿ, ಉಳಿಕೆ ಹಣವನ್ನು ನಂತರ ಪಾವತಿಸಿ’ ಎಂದು ಹೇಳಿ ಇಂಡಿಯನ್‌ ಏರ್‌ಲೈನ್ಸನ ಲಘು ವಿಶೇಷ ವಿಮಾನಕ್ಕೆ ವ್ಯವಸ್ಥೆ ಮಾಡಿದರು. ನಂತರ ಈ ಉಳಿಕೆ ಹಣವನ್ನು ಬಾಂಬೆಯಲ್ಲಿ ಅಂಬೇಡ್ಕರ್‌ರವರ ನಿಕಟವರ್ತಿಗಳಾದ ‘ಗಾಯಕ್‌ವಾಡ್‌’ ಅವರು ಪಾವತಿಸಿದರು.

ಅಭಿಮಾನಿಗಳ ಅಶ್ರುತರ್ಪಣ

ದೆಹಲಿಯಲ್ಲಿ ಸಾರ್ವಜನಿಕರ ದರ್ಶನಕ್ಕಿಟ್ಟಿದ್ದ ಬಾಬಾ ಸಾಹೇಬರ ಪಾರ್ಥಿವ ಶರೀರವನ್ನು ಹೂವಿನಿಂದ ಅಲಂಕೃತವಾದ ಟ್ರಕ್‌ ಮೇಲಿಟ್ಟು ನಂ. 26, ಅಲಿಪುರ ರಸ್ತೆಯಲ್ಲಿನ ಮನೆಯಿಂದ ದೆಹಲಿಯ ಸಪ್ಧರ್‌ಜಂಗ್‌ ವಿಮಾನ ನಿಲ್ದಾಣಕ್ಕೆ ಮೆರವಣಿಗೆಯಲ್ಲಿ ತರಲಾಯಿತು. ಮಧ್ಯಾಹ್ನ 3ಕ್ಕೆ ಹೊರಟ ಮೆರವಣಿಗೆ, ಸುಮಾರು 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ದುಃಖತಪ್ತ ಜನರು ಬಾಬಾಸಾಹೇಬರ ಪಾರ್ಥಿವ ಶರೀರದ ಜೊತೆ ಸಾಗಿದ್ದರಿಂದ ವಿಮಾನ ನಿಲ್ದಾಣವನ್ನು ಸೇರಬೇಕಾದರೆ ರಾತ್ರಿ 9 ಗಂಟೆಯಾಗಿತ್ತು.

ರಾತ್ರಿ 9.45ಕ್ಕೆ ಸರಿಯಾಗಿ ಬಾಬಾ ಸಾಹೇಬರ ದೇಹವನ್ನು ಹೊತ್ತ ವಿಶೇಷ ವಿಮಾನವು ಮುಂಬೈನತ್ತ ಪ್ರಯಾಣ ಬೆಳೆಸಿತು. ಈ ವಿಮಾನದಲ್ಲಿ ಸವಿತಾ ಅಂಬೇಡ್ಕರ್‌, ರತ್ತು, ಬಿಕ್ಕು ಆನಂದ ಕೌಸಲಾಯನ್‌, ಡಾ. ಶಂಕರಾನಂದ ಶಾಸ್ತ್ರಿ ಸೇರಿದಂತೆ 11 ಜನರಿದ್ದರು. ವಿಮಾನವು ನಿಲ್ದಾಣ ಬಿಟ್ಟು ಆಕಾಶಕ್ಕೇರಿದ ತಕ್ಷಣ ಆ ಪರಿಸರದಲ್ಲಿ ಜಮಾಯಿಸಿದ್ದ 7 ಲಕ್ಷಕ್ಕೂ ಅಧಿಕ ಜನರು ದುಃಖಪೂರಿತರಾಗಿ ‘ಬಾಬಾ ಸಾಹೇಬ್‌ ಅಂಬೇಡ್ಕರ್‌ ಅಮರ್‌ ರಹೇ’ ಎಂದು ಘೋಷಣೆ ಕೂಗಿದರು.

ಮುಂಬೈನ ಸಾಂತಾಕ್ರೂಜ್‌ ವಿಮಾನ ನಿಲ್ದಾಣಕ್ಕೆ ಬಾಬಾ ಸಾಹೇಬರ ಪಾರ್ಥಿವ ಶರೀರ ತಲುಪಿದಾಗ, ಅಲ್ಲಿ ಸುಮಾರು 5 ಲಕ್ಷ ಮಂದಿ ಡಿಸೆಂಬರ್‌ ಚಳಿಯನ್ನು ಲೆಕ್ಕಿಸದೆ ನೆರೆದಿದ್ದರು. ಸುಮಾರು 25–30 ಮೈಲಿಗಳಿಂದ ಅಂಬೇಡ್ಕರ್‌ರವರ ಅಭಿಮಾನಿಗಳು ನಡೆದುಕೊಂಡೇ ವಿಮಾನ ನಿಲ್ದಾಣ ಬಂದಿದ್ದರು. ವಿಮಾನ ನಿಲ್ದಾಣದಿಂದ ಅಂಬೇಡ್ಕರರ ಪಾರ್ಥಿವ ದೇಹ ಅವರ ಸ್ವಗೃಹ ‘ರಾಜಗೃಹ’ಕ್ಕೆ ಬಂದು ಸೇರುವಷ್ಟೊತ್ತಿಗೆ ಬೆಳಗಿನ ಜಾವ 5.30. ಡಿಸೆಂಬರ್‌ 7ರ ಬೆಳಿಗ್ಗೆ 11 ಗಂಟೆಯ ತನಕ ಬಾಬಾ ಸಾಹೇಬರ ಪಾರ್ಥಿವ ಶರೀರವನ್ನು ‘ರಾಜಗೃಹ’ದ ಪೋರ್ಟಿಕೋದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಬಾಬಾ ಸಾಹೇಬರ ಅಂತಿಮ ದರ್ಶನ ಪಡೆಯಲು ಸುಮಾರು 20 ಕಿ.ಮೀ.ಗಳಷ್ಟು ಉದ್ದದ ಕ್ಯೂ ಇತ್ತು.

ಹೂವಿನಿಂದ ಅಲಂಕೃತಗೊಂಡ ಟ್ರಕ್‌ನ ಮೇಲೆ ಹಾಸಿಗೆಯನ್ನಿಟ್ಟು, ಹಾಸಿಗೆಯ ಮೇಲೆ ಶೋಷಿತರ ವಿಮೋಚಕ ಬಾಬಾಸಾಹೇಬರ ಶವವನ್ನು ಮಲಗಿಸಲಾಯಿತು. ತಲೆಯ ಪಕ್ಕ ಭಗವಾನ್‌ ಬುದ್ಧನ ಪ್ರತಿಮೆ ಇಡಲಾಯಿತು. ನಂತರ ‘ದಾದರ್‌’ ಕಡೆಗೆ ಅಂತಿಮ ಯಾತ್ರೆ ಹೊರಟಿತು. ಬಾಬಾ ಸಾಹೇಬರ ಅಂತಿಮ ಯಾತ್ರೆಯಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇಷ್ಟೊಂದು ಬೃಹತ್‌ ಸಂಖ್ಯೆಯ ಜನರು ಭಾಗವಹಿಸಿದ್ದು ಮುಂಬೈನ ಇತಿಹಾಸದಲ್ಲೇ ಇರಲಿಲ್ಲ.

ಅಂಬೇಡ್ಕರ್‌ರವರು ಪ್ರಶಾಂತವಾಗಿ ಚಿರನಿದ್ರೆಯಲ್ಲಿ ಮಲಗಿರುವುದನ್ನು ನೋಡಲಾಗದೆ ಹೆಂಗಸರು ಸೇರಿದಂತೆ ಲಕ್ಷಾಂತರ ಜನ ಎದೆ ಬಡಿದುಕೊಂಡು ರೋಧಿಸುತ್ತಿದ್ದರು. ಅಂದು ಸಂಜೆ 6 ಗಂಟೆಗೆ ಅಂತಿಮಯಾತ್ರೆಯ ಶವ ಸಂಸ್ಕಾರ ಸ್ಥಳಕ್ಕೆ (ಚೈತ್ಯ ಭೂಮಿ) ಮೆರವಣಿಗೆ ತಲುಪಿತು. ಪಾರ್ಥಿವ ಶರೀರದ ಮುಂದೆ 2 ಲಕ್ಷ ಜನ ಬೌದ್ಧ ಧರ್ಮ ಸ್ವೀಕರಿಸುವ ಮೂಲಕ ಬಾಬಾ ಸಾಹೇಬರಿಗೆ ಗೌರವ ಸಲ್ಲಿಸಿದರು. (ಅದೇ ತಿಂಗಳ 16ರಂದು ಮುಂಬೈನಲ್ಲಿ 10 ಲಕ್ಷ ಜನರು ಅಂಬೇಡ್ಕರ್‌ ನೇತೃತ್ವದಲ್ಲಿ ಬೌದ್ಧ ಧರ್ಮ ಸ್ವೀಕರಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಈ ಕಾರ್ಯಕ್ರಮಕ್ಕೆ ಅಂಬೇಡ್ಕರ್‌ರವರು ಎಲ್ಲಾ ತಯಾರಿ ನಡೆಸಿದ್ದರು).

ಸಾಗರ- ಜನಸಾಗರ:

ಸಮುದ್ರದ ದಡದಲ್ಲಿ ಶವ ಸಂಸ್ಕಾರದ ಸ್ಥಳವಿತ್ತು. ಸಮುದ್ರದ ಒಳಗೆ ಸೊಂಟ ಮಟ್ಟದ ನೀರಿನಲ್ಲೇ ಜನರು ಗಂಟೆಗಟ್ಟಲೆ ನಿಂತಿದ್ದರು. ಜನರಿಗೆ ಬಾಬಾ ಸಾಹೇಬರ ಕಳೆಬರಹ ಕಾಣಲೆಂದು 6 ಅಡಿ ಎತ್ತರದ ಮಣ್ಣಿನ ದಿಬ್ಬ ನಿರ್ಮಿಸಿ, ಆ ದಿಬ್ಬದ ಮೇಲೆ ಗಂಧದ ಕಟ್ಟಿಗೆಗಳನ್ನಿಟ್ಟು ಅದರ ಮೇಲೆ ಬಾಬಾ ಸಾಹೇಬರನ್ನು ಮಲಗಿಸಲಾಗಿತ್ತು. ರಾತ್ರಿ 7.30ಕ್ಕೆ ಸರಿಯಾಗಿ ಅಂಬೇಡ್ಕರ್‌ ಪುತ್ರ ಯಶವಂತರಾವ್‌ ಅಂಬೇಡ್ಕರ್‌ರವರು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಶವಸಂಸ್ಕಾರವು ಬೌದ್ಧಧರ್ಮದ ವಿಧಿವಿಧಾನಗಳಂತೆ ನೆರವೇರಿತು. ವಿಶೇಷವೆಂದರೆ ಆ ಇಡೀ ರಾತ್ರಿ ಲಕ್ಷಾಂತರ ಜನರು ಅಲ್ಲೇ ಉಳಿದುಕೊಂಡಿದ್ದರು. ಬೆಳಿಗ್ಗೆ 6.30ಕ್ಕೆ ಅಲ್ಲಿಂದ ‘ಚಿತಾಭಸ್ಮ’ವನ್ನು ತೆಗೆದ ನಂತರ ಜನರು ಅಲ್ಲಿಂದ ತೆರಳಿದರು. ಚಿತಾಭಸ್ಮವನ್ನು ಒಂದು ಮಣ್ಣಿನ ಕುಡಿಕೆಯಲ್ಲಿಟ್ಟು ತೆರೆದ ವಾಹನದ ಮೂಲಕ ಅವರ ನಿವಾಸ ‘ರಾಜಗೃಹ’ಕ್ಕೆ ತರಲಾಯಿತು. ಚಿತಾಭಸ್ಮವನ್ನು ತರುವಾಗ ಮೆರವಣಿಗೆಯಲ್ಲಿ 5 ಲಕ್ಷ ಜನರು ಸೇರಿದ್ದರು. ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಚಿತಾಭಸ್ಮವನ್ನು ಈಗ ಮುಂಬೈನಲ್ಲಿರುವ ಅವರ ಸಮಾಧಿ ಸ್ಥಳದಲ್ಲಿ ಮತ್ತು ನಾಗಪುರದಲ್ಲಿ ಸಂರಕ್ಷಿಸಿಡಲಾಗಿದೆ.

ಈಗಲೂ ಅಂಬೇಡ್ಕರ್‌ ಅವರ ಪರಿನಿರ್ವಾಣದ ದಿನ ಡಿಸೆಂಬರ್‌ 6ರಂದು, ಮುಂಬೈನ ಚೈತ್ಯಭೂಮಿಯಲ್ಲಿರುವ ಅವರ ಸಮಾಧಿಗೆ ದೇಶದ ಮೂಲೆ ಮೂಲೆಗಳಿಂದ ಜನರು ಬಂದು ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಡಿಸೆಂಬರ್‌ 6 ಅಂಬೇಡ್ಕರ್‌ ಸ್ಮೃತಿ ದಿನ ಮಾತ್ರವಲ್ಲದೆ, ಅದು ಮನುಷ್ಯತ್ವದ ಹೊಳಪನ್ನು ನವೀಕರಿಸುವ ದಿನವೂ ಆಗಿದೆ. ಎಲ್ಲ ಮಹಾತ್ಮರ ನೆನಪುಗಳಿಗೂ ಮಾನಸಿಕ ಕೊಳಕನ್ನು ತೊಳೆದು ಹೊಳಪು ನೀಡುವ ಜೀವಂತಿಕೆಯ ಮಾಂತ್ರಿಕ ಶಕ್ತಿ ಇರುತ್ತದಲ್ಲವೇ?

ಕೃಪೆ:ಪ್ರಜಾವಾಣಿ (0/12/2013)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending