Connect with us

ನೆಲದನಿ

ನೆಲದ ನೋವಿಗೆ ಮಿಡಿವ ಬೌದ್ಧ ಚಿಂತಕ ‘ಡಾ.ಮೂಡ್ನಾಕೂಡು ಚಿನ್ನಸ್ವಾಮಿ’

Published

on

  • ಡಾ.ಕೆ.ಎ.ಓಬಳೇಶ್

ಭಾರತದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ತೋರಿದ ಬೌದ್ಧದರ್ಶನದ ಜಾಡುಹಿಡಿದು ವೈಚಾರಿಕ ಮಾರ್ಗವನ್ನು ಕಂಡುಕೊಳ್ಳುವ ನೆಲೆಯಲ್ಲಿ ಹಲವರು ಬೌದ್ಧ ಚಿಂತನೆಗಳನ್ನು ಪ್ರತಿಪಾದಿಸುತ್ತ ಬಂದಿದ್ದಾರೆ. ಬಾಬಾಸಾಹೇಬರ ಬೌದ್ಧದರ್ಶನದ ಪ್ರಭಾವವು ಕನ್ನಡದ ಹಲವಾರು ವಿಚಾರವಾದಿಗಳ ಸೈದ್ಧಾಂತಿಕ ನೆಲೆಗೆ ವೇದಿಕೆಯನ್ನು ರೂಪಿಸಿದೆ.

ಹೀಗೆ ಬಾಬಾಸಾಹೇಬರು ತೋರಿದ ಬೌದ್ಧ ಚಿಂತನೆಗಳನ್ನು ಮೈಗೂಡಿಸಿಕೊಂಡು ಸಮಕಾಲೀನ ಸಮಾಜದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುತ್ತಿರುವ ಬೌದ್ಧ ಚಿಂತಕರಲ್ಲಿ ಮೂಡ್ನಾಕೂಡು ಚಿನ್ನಸ್ವಾಮಿಯವರು ಪ್ರಮುಖರಾಗಿದ್ದಾರೆ. ಮೂಡ್ನಾಕೂಡು ಚಿನ್ನಸ್ವಾಮಿಯವರು ಬುದ್ಧ ಹಾಗೂ ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಸಾಹಿತ್ಯದ ವಿವಿಧ ಪ್ರಕಾರಗಳ ಮೂಲಕ ಸಮಾಜದ ಮುಂದಿಡುತ್ತ ಬಂದಿದ್ದಾರೆ. ಶೋಷಿತ ಸಮುದಾಯದ ದನಿಯಾಗಿ ನಿಂತು ಹಲವಾರು ಸಂಘಟನೆ ಮತ್ತು ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಆ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ತೊಡೆದು ಹಾಕುವುದಕ್ಕೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುತ್ತ ತಮ್ಮ ಚಿಂತನಧಾರೆಗಳನ್ನು ವ್ಯಕ್ತಪಡಿಸುತ್ತ ಬಂದಿದ್ದಾರೆ. ಸಮಕಾಲೀನ ಸಮಾಜದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವುದಕ್ಕಾಗಿ ಬುದ್ಧನ ಜೀವಪರ ನಿಲುವುಗಳೊಂದಿಗೆ ಅನುಸಂಧಾನಕ್ಕೆ ಮುಂದಾಗಿದ್ದಾರೆ. ಇಂತಹ ವೈಚಾರಿಕ ಅನುಸಂಧಾನದ ನೆಲೆಗಳು ಇವರ ಬಹುತೇಕ ಸಾಹಿತ್ಯ ಕೃತಿಗಳಲ್ಲಿ ಪ್ರತಿಪಾದಿತವಾಗಿವೆ. ಇಂತಹ ನೆಲಮೂಲ ಚಿಂತನೆಯ ಪ್ರತೀಕವಾದ ಮೂಡ್ನಾಕೂಡು ಚಿನ್ನಸ್ವಾಮಿಯರನ್ನು ಪರಿಚಯಿಸುವುದು ಪ್ರಸ್ತುತ ಲೇಖನದ ಆಶಯವಾಗಿದೆ.

ಶ್ರೀಯುತರು 22 ಸೆಪ್ಟಂಬರ್ 1954ರಂದು ಚಾಮನಗರ ಜಿಲ್ಲೆಯ ಮೂಡ್ನಾಕೂಡು ಗ್ರಾಮದಲ್ಲಿ ಬಸವರಾಜಯ್ಯ ಹಾಗೂ ಗೌರಮ್ಮ ದಂಪತಿಗಳ ಮಗನಾಗಿ ಜನಿಸಿದರು. ಬಾಲ್ಯದ ದಿನಗಳಿಂದಲೂ ಬಡತನ ಹಾಗೂ ಅಸ್ಪೃಶ್ಯತೆಯ ಕರಾಳತೆಯನ್ನು ಕಂಡುಂಡು ಬೆಳೆದ ಇವರು, ಇಂತಹ ಅಮಾನವೀಯ ಅಂಶಗಳನ್ನು ತಮ್ಮ ಚಿಂತನೆಗಳ ಮೂಲಕ ಪ್ರತಿರೋಧಿಸುತ್ತ ಬಂದವರು.

ಉದ್ಯೋಗದ ತುಡಿತದಿಂದಾಗಿ ಎಂ.ಕಾಂ ಪದವಿಯನ್ನು ಪಡೆದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿ ಸೇವೆಯನ್ನು ಸಲ್ಲಿಸುತ್ತಲೇ ಸಾಹಿತ್ಯದಲ್ಲಿ ವಿಶೇಷವಾದ ಆಸಕ್ತಿಯನ್ನು ರೂಡಿಸಿಕೊಂಡರು. ತನ್ನ ಬದುಕಿನ ನಿರ್ವಹಣೆಗಾಗಿ ಎಂ.ಕಾಂ ಪದವಿಯ ವೃತ್ತಿಯನ್ನು ಆಸರೆಯಾಗಿಟ್ಟುಕೊಂಡು, ಸಾಮಾಜಿಕ ತುಡಿತದ ಭಾಗವಾಗಿ ಸಾಹಿತ್ಯವನ್ನು ಪ್ರವೃತ್ತಿಯಾಗಿ ಮುನ್ನೆಡಿಸಿಕೊಂಡು ಬಂದರು.

ಶ್ರೀಯುತರು ತಮ್ಮ ವೃತ್ತಿ ಬದುಕಿಗಿಂತ ಸಮಸಮಾಜ ನಿರ್ಮಾಣಕ್ಕಾಗಿ ತುಡಿತ ಸಾಹಿತ್ಯದ ಪ್ರವೃತ್ತಿಯ ಮೂಲಕವೇ ಹೆಚ್ಚು ಗುರುತಿಸಿಕೊಂಡವರು. ಬಾಲ್ಯದ ದಿನಗಳಿಂದಲೂ ಅನುಭವಿಸಿಕೊಂಡು ಬಂದ ಅಸ್ಪøಶ್ಯತೆಯ ಕರಾಳತೆಯೇ ಇವರ ಜೀವಪರ ಚಿಂತನೆಗಳಿಗೆ ಹೆಚ್ಚು ಪ್ರೇರಣೆಯನ್ನು ನೀಡಿತು. ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಬುದ್ಧನತ್ತ ಮುಖ ಮಾಡಿದವರು. ಬುದ್ಧನ ಮಾರ್ಗವೇ ಸ್ವಾಭಿಮಾನಕ್ಕೆ ದಾರಿ ಎಂಬುದನ್ನು ಅಂಬೇಡ್ಕರ್ ಚಿಂತನೆಗಳಿಂದ ಅರಿತವರು.

ಆ ಮೂಲಕ ಶೋಷಿತ ಸಮುದಾಯಗಳಲ್ಲಿ ಮನೆ ಮಾಡಿಕೊಂಡಿರುವ ಬಡತನ, ಜಾತಿಯತೆ, ಅಸ್ಪೃಶ್ಯತೆ, ಮೂಢನಂಬಿಕೆಗಳ ವಿಮೋಚನೆಗೆ ಬಿಡುಗಡೆಯ ಭಾಗವಾಗಿ ಬುದ್ಧ ಮತ್ತು ಅಂಬೇಡ್ಕರ್ ಅವರನ್ನು ಅಪ್ಪಿಕೊಂಡವರು. ತಾವು ಕಂಡುಕೊಂಡ ವೈಚಾರಿಕ ಅಂಶಗಳನ್ನು ಸಾಹಿತ್ಯದ ಮೂಲಕ ಜನತೆಗೆ ತಲುಪಿಸುವ ಮಹತ್ತರ ಕಾರ್ಯವನ್ನು ಇವರು ನಿರಂತರವಾಗಿ ಮುಂದುವರೆಸಿಕೊಂಡು ಬಂದಿದ್ದಾರೆ.

ಸಾಹಿತ್ಯದ ಮೇಲಿನ ಆಸಕ್ತಿಯಿಂದಾಗಿ ಎಂ.ಎ. ಕನ್ನಡ ಸ್ನಾತಕೋತ್ತರ ಪದವಿ ಹಾಗೂ ಸಾಹಿತ್ಯ ಸೇವೆಗೆ ಡಿ.ಲಿಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ, ‘ಕೆಂಡ ಮಂಡಲ’ ‘ಬಹುರೂಪಿ’ ಇವು ನಾಟಕ ಕೃತಿಗಳು, ‘ಕೊಂಡಿಗಳು ಮತ್ತು ಮುಳ್ಳುಬೇಲಿಗಳು’, ‘ಗೋಧೂಳಿ’, ‘ಮತ್ತೆ ಮಳೆ ಬರುವ ಮುನ್ನ’, ‘ನಾನೊಂದು ಮರವಾಗಿದ್ದರೆ’, ‘ಚಪ್ಪಲಿಗಳು ಮತ್ತು ನಾನು’ ಹಾಗೂ ‘ಚಂದಿರನ ಕಣ್ಣು ಇಂಗಲಾರದ ಹುಣ್ಣು’ ಇವು ಕವನ ಸಂಕಲನಗಳು. ‘ಮೋಹದ ದೀಪ’ ಇವರ ಕಥಾ ಸಂಕಲನ. ‘ನೊಂದವರ ನೋವು’, ‘ಮಾತು-ಮಂಥನ’ ಮತ್ತು ‘ಬಹುತ್ವತೆ ಮತ್ತು ಬೌದ್ಧ ತಾತ್ವಿಕತೆ’ ಇವು ಇವರ ವೈಚಾರಿಕ ಕೃತಿಗಳು. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಇದು ಇವರ ಆತ್ಮಕಥೆಯಾಗಿದೆ.

ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳ ಮೂಲಕ ಹಲವಾರು ಜೀವಪರ ತುಡಿತ ಹೊಂದಿರುವ ವೈಚಾರಿಕ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಸಮರ್ಪಿಸಿದ್ದಾರೆ. ಇವರ ಸಾಹಿತ್ಯ ಕೃತಿಗಳು ಇತರ ಭಾಷೆಗಳಿಗೂ ಅನುವಾದಗೊಂಡಿವೆ. ಶ್ರೀಯುತರ ಕವನ ಸಂಕಲನಗಳು ವೆನಿಜುಲಾ ದೇಶದ ಸ್ಪ್ವಾನಿಷ್ ಭಾಷೆಗೂ ಅನುವಾದಗೊಂಡಿವೆ. ಹಿಂದಿಯಲ್ಲಿ ಇವರ ಕವಿತೆಗಳು ‘ಅಂಗಾರ್ ಕೀ ಚೋಟಿಪರ್’ ಎಂಬ ಹೆಸರಿನಲ್ಲಿ ಕವನ ಸಂಕಲನ ಪ್ರಕಟವಾಗಿರುವುದು ಇವರ ಸಾಹಿತ್ಯದ ವಿಶೇಷವಾಗಿದೆ.

ಮೂಡ್ನಾಕೂಡು ಚಿನ್ನಸ್ವಾಮಿಯವರು ಕೇವಲ ಬೌದ್ಧ ಚಿಂತಕರು ಮಾತ್ರವಲ್ಲದೆ, ಬೌದ್ಧ ಅನುಯಾಯಿಗಳು. ಇವರು ಬೌದ್ಧಧಮ್ಮ ದೀಕ್ಷೆಯನ್ನು ಸ್ವೀಕರಿಸು ಮೂಲಕ ಹಿಂದುತ್ವದ ಕಟ್ಟುಪಾಡುಗಳಿಂದ ಬಿಡುಗಡೆಯನ್ನು ಪಡೆದುಕೊಂಡಿದ್ದಾರೆ. ಬುದ್ಧನ ಧಮ್ಮದ ಮಾರ್ಗವನ್ನು ಅನುಸರಿಸುವ ಮೂಲಕ ವಿಮೋಚನಾ ಮಾರ್ಗವನ್ನು ಕಂಡುಕೊಂಡಿರುವ ಇವರು, ತನ್ನಂತೆ ಶೋಷಣೆಯನ್ನು ಅನುಭವಿಸುತ್ತಿರುವ ಶೋಷಿತ ಸಮುದಾಯವನ್ನು ಎಚ್ಚರಿಸುವ ಭಾಗವಾಗಿ ತಮ್ಮ ಚಿಂತನೆಗಳನ್ನು ಬಿತ್ತರಿಸಿದ್ದಾರೆ. ಇವರು ಅಸ್ಪೃಶ್ಯತೆ ಹಾಗೂ ಸಾಮಾಜಿಕ ಅಸಮಾನತೆಯಿಂದ ಬಳಲುತ್ತಿರುವ ಶೋಷಿತ ಸಮುದಾಯಗಳನ್ನು ಜಾಗೃತ ನೆಲೆಯಲ್ಲಿ ಮುನ್ನಡೆಸುವುದಕ್ಕಾಗಿ ಬೌದ್ಧ ಚಿಂತನಧಾರೆಗಳ ಮೂಲಕ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದಾರೆ.

ಮೂಡ್ನಾಕೂಡು ಚಿನ್ನಸ್ವಾಮಿಯವರು ಭಾರತೀಯ ಸಮಾಜದಲ್ಲಿ ಆಳವಾಗಿ ಬೇರು ಬಿಟ್ಟುಕೊಂಡಿರುವ ಅಸ್ಪೃಶ್ಯತೆ ಯಂತಹ ಭೀಕರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಾಬಾಸಾಹೇಬರ ‘ಶಿಕ್ಷಣ- ಸಂಘಟನೆ- ಹೋರಾಟ’ ಎಂಬ ತ್ರಿವಳಿ ಸೂತ್ರಗಳನ್ನು ಪ್ರತಿಪಾದಿಸುತ್ತ ಬಂದಿದ್ದಾರೆ. ಅಸ್ಪøಶ್ಯತೆಯ ಸೊಂಕಿಗೆ ಬಲಿಯಾದ ತನ್ನ ಪೂರ್ವಜರ ಅಸಹಾಯಕತೆಯನ್ನು ಅನಾವರಣಗೊಳಿಸುವ ನೆಲೆಯಲ್ಲಿ ರಚನೆಯಾದ ‘ಬೂದಿ ಮಾತ್ರ ಬಲ್ಲುದು ಬೇಯುವ ಬಗೆಯನ್ನು’ ಎಂಬ ಕವಿತೆಯಲ್ಲಿ ತನ್ನ ಮುಂದಿರುವ ಶಿಕ್ಷಣದ ಶಕ್ತಿಯನ್ನು ಎತ್ತಿಹಿಡಿದಿದ್ದಾರೆ.

ಈಗ ನನ್ನನ್ನವರು ಸುಡಲಾರರು
ನನ್ನ ಹಿಡಿಯಲು ಬಂದು ತಾವೇ ಸುಟ್ಟುಕೊಳ್ಳುವರು
ಯಾಕೆಂದರೆ ನಾನು
ಅಜ್ಞಾನವನ್ನು ಸುಡುವ ಅಕ್ಷರವಾಗಿದ್ದೇನೆ
ಸಾವಿಲ್ಲದ ಸತ್ಯಕ್ಕೆ ಸಾಕ್ಷಿಯಾಗಿದ್ದೇನೆ”

– ಎಂಬ ಇವರ ವೈಚಾರಿಕ ಧೋರಣೆಯ ಹಿಂದೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ತ್ರಿವಳಿ ಸೂತ್ರದ ಶಕ್ತಿ ಅಂತರ್ಗತವಾಗಿದೆ. ಹೀಗಾಗಿ ಸಮಕಾಲೀನ ಸಮಾಜದಲ್ಲಿ ಇಂದಿಗೂ ಜೀವಂತವಾಗಿರುವ ಜಾತಿಯತೆ ಹಾಗೂ ಅಸ್ಪøಶ್ಯತೆಯಂತಹ ನೀಚ ಪ್ರವೃತ್ತಿಗಳನ್ನು ತೊಡೆದುಹಾಕಲು ಬುದ್ಧ ಹಾಗೂ ಬಾಬಾಸಾಹೇಬರ ಸೈದ್ಧಾಂತಿಕ ನಿಲುವುಗಳೊಂದಿಗೆ ಅನುಸಂಧಾನಕ್ಕೆ ಮುಂದಾಗಿದ್ದಾರೆ.

ಸದಾ ಜೀವಪರವಾದ ತುಡಿತ ಹೊಂದಿರುವ ಮೂಡ್ನಾಕೂಡು ಚಿನ್ನಸ್ವಾಮಿಯವರು ಶೋಷಿತ ಸಮುದಾಯಗಳ ಜಾಗೃತಿಗಾಗಿ ಮಿಡಿಯುತ್ತ ಬಂದಿದ್ದಾರೆ. ಇವರ ಸಾಹಿತ್ಯದಲ್ಲಿ ದಲಿತ ಬಂಡಾಯದ ತುಡಿತವಿದೆ. ಶತ ಶತಮಾನಗಳ ಕಾಲ ಶೋಷಿತ ಸಮುದಾಯಗಳು ಅನುಭವಿಸಿಕೊಂಡು ಬಂದ ನೋವಿನ ಜ್ವಾಲೆ ಇದೆ. ಶ್ರೀಯುತರ ಬರಹಗಳ ಹಿಂದೆ ಬಾಬಾಸಾಹೇಬರ ಕನಸಿನ ಪ್ರಬುದ್ಧ ಭಾರತದ ಹಂಬಲವಿದೆ.

ಇಂತಹ ನೆಲಮೂಲ ಬದುಕಿನ ಅಸ್ಮಿತೆಯ ಭಾಗವಾಗಿ ಮೂಡಿಬಂದಿರುವ ಇವರ ಸಾಹಿತ್ಯ ಸೇವೆಯನ್ನು ಮನಗಂಡು ‘ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಹಾಗೂ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ಗಳು ಇವರ ಮುಡಿಗೇರಿವೆ. ಹಲವಾರು ಸಂಘ- ಸಂಸ್ಥೆಗಳು ಗೌರವ, ಪ್ರಶಸ್ತಿ, ಪುರಸ್ಕಾರ ನೀಡಿ ಗೌರವಿಸಿವೆ. ಸದಾ ನೆಲದ ನೋವಿಗೆ ಮಿಡಿಯುವ ಇಂತಹ ವಿಶಿಷ್ಟ ಚೇತನಕ್ಕೆ ಸುದ್ಧಿದಿನ ಪತ್ರಿಕಾ ಬಳಗದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.

(-ಡಾ.ಕೆ.ಎ.ಓಬಳೇಶ್:9591420216)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕವಿತೆ | ನೆನಪು

Published

on

ಕವಿ | ರುದ್ರಪ್ಪ ಹನಗವಾಡಿ
  • ರುದ್ರಪ್ಪ ಹನಗವಾಡಿ

ಅಪ್ಪನನ್ನು ಒಪ್ಪ ಮಾಡಿ
ವರ್ಷಗಳೇ ಕಳೆದವು ಮುವ್ವತ್ತೇಳು
ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ
ಅರಸರ ಮೀಸಲಾತಿ
ಬಸವಲಿಂಗಪ್ಪನವರ ಬೂಸಾ ಖ್ಯಾತಿ
ಮಲ ಹೊತ್ತು
ಮಲಗಿದ್ದ ಕಾಲಕ್ಕೆ
ಚುರುಕು ಮುಟ್ಟಿಸಿದ ಕಾಲ

ಹರೆಯದ ನನಗೆ
ಕಾಲೇಜ ಮೇಷ್ಟರ ಕೆಲಸ
ಸೂಟು ಬೂಟಿನ ವೇಷ
ಆ ಮೇಲೆ ಅಮಲದಾರಿಕೆ
ಎಲ್ಲ ನಡೆದಾಗಲೇ ಅವ್ವನನ್ನು
ಆಸ್ಪತ್ರೆಗೆ ಸೇರಿಸಿದ್ದು
ಕಾಲ ಕಳೆದು ಕೊಂಡು
ಕೋಲ ಹಿಡಿದದ್ದು
ನಿನ್ನೆ ಮೊನ್ನೆಯಂತೆ
ಬಾಲ್ಯವಿನ್ನು ಉಂಟೆಂಬಂತೆ
ಭಾವಿಸುವಾಗಲೇ ಅವ್ವನ ಸಾವು

ಅದರೊಟ್ಟಿಗೆ ಕಾಯದಾಯಾಸ ತೀರಿಸಲು
ಬಂದರೆ ಬೆಂಗಳೂರಿಗೆ
ರೌಡಿಗಳ ಕಾಟ
ಅಂಬೇಡ್ಕರ್ ಪಟದ ಕೆಳಗೆ
ದೌರ್ಜನ್ಯದ ದಂಡು

ಅಮಾಯಕರಿಗೆ ಗುಂಡು
ಕಂಡುಂಡ ಹಾದಿಯ ಗುಡಿಸಲುಗಳಲ್ಲೀಗ
ಮುಗಿಲು ಮುಟ್ಟೋ ಮಹಲುಗಳು
ಅಂತಲ್ಲಿ
ದೇಶ ವಿದೇಶಗಳ
ಅಹವಾಲುಗಳು
ಅವಿವೇಕಗಳು
ನೋಡ ನೋಡುತ್ತಿದ್ದಂತೆ
ಉಸಿರು ಬಿಗಿಹಿಡಿದ ಜನರ ಒಳಗೆ
ಒಳಪದರಗಳೊಳಗೆ ಕನಸ ಬಿತ್ತಿ
ಹಸಿರ ಹೊನ್ನು ಬಾಚಲು ಹವಣಿಸಿದ
ಬಿಳಿ ಜನರ ಆಟ
ಅರ್ಥವಾಗುವುದೇ ಎಲ್ಲ
ಗೋಣ ನೀಡುವರೆ
ಹೂತಿಟ್ಟ ಗೂಟಕ್ಕೆ ?

( ಚಿಂತಕ ರುದ್ರಪ್ಪ ಹನಗವಾಡಿ ಅವರ ‘ಊರು – ಬಳಗ’ ಕವನ ಸಂಕಲನದಿಂದ ‘ ನೆನಪು ‘ ಕವಿತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕೃತಿಯನ್ನು ಫ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ 2013 ರಲ್ಲಿ ಪ್ರಕಿಸಿದೆ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ; ಒಂದು ಚಿಂತನೆ

Published

on

  • ಮಹಾಂತೇಶ್.ಬಿ.ನಿಟ್ಟೂರು, ದಾವಣಗೆರೆ

ನಿಜ ಶರಣ ಶ್ರೀ ಅಂಬಿಗರ ಚೌಡಯ್ಯನವರ ಜೀವಿತ ಕಾಲ 12 ನೇ ಶತಮಾನದ ಬಸವಾದಿ ಶರಣರ ಕಾಲದಲ್ಲೇ ಇತ್ತು ಎಂಬುದು ಇತಿಹಾಸಕಾರರ ಸಂಶೋಧನೆಯಿಂದ ತಿಳಿದು ಬರುತ್ತದೆ. ಅವರ ಹುಟ್ಟೂರು ಹಾವೇರಿ ಜಿಲ್ಲೆಯ ಆಗಿನ ಶಿವಪುರ, ಈಗಿನ ಚೌಡಯ್ಯದಾನಪುರ. ಅವರ ತಂದೆಯ ಹೆಸರು ಶ್ರೀ ವಿರೂಪಾಕ್ಷ, ತಾಯಿಯ ಹೆಸರು ಪಂಪಾಂಭಿಕೆ, ಹೆಂಡತಿಯ ಹೆಸರು ಸುಲೋಚನಾ ಹಾಗೂ ಮಗನ ಹೆಸರು ಪುರವಂತ.

ಅಂಬಿಗ ವೃತ್ತಿಯ ಚೌಡಯ್ಯನವರು ಅಲ್ಲಮ ಪ್ರಭು ಮತ್ತು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಇದ್ದ ಒಬ್ಬ ಕ್ರಾಂತಿಕಾರಿ, ದಿಟ್ಟ, ನೇರ, ನಿಷ್ಠುರ ನುಡಿಯ ವಚನಕಾರ. ಕಲ್ಯಾಣ ಕ್ರಾಂತಿಯ ನಂತರ ಇವರು ತಮ್ಮ ವಚನಗಳ ಗಂಟನ್ನು ಹೊತ್ತು ಉಳವಿಗೆ ನಂತರ ತಮ್ಮ ಗ್ರಾಮವಾದ ತುಂಗಭದ್ರಾ ನದಿಯ ದಡದ ಮೇಲಿರುವ ಶಿವಪುರಕ್ಕೆ ಬಂದು ದೋಣಿ ನಡೆಸುವ ವೃತ್ತಿಯಲ್ಲಿ ನಿರತರಾಗಿ ವಚನ ರಚನೆ ಮಾಡಿರುವುದು ತಿಳಿದು ಬರುತ್ತದೆ.

ಚೌಡಯ್ಯನವರು ತಮ್ಮ ಜೀವಿತಾವಧಿಯಲ್ಲಿ ಅನೇಕ ಪವಾಡಗಳನ್ನು ಮಾಡಿರುತ್ತಾರೆ. ಗಿಡಮೂಲಿಕೆ ಔಷಧಿಗಳಿಂದ ಕ್ಷಯ ರೋಗ, ಕುಷ್ಠರೋಗ ಗುಣಪಡಿಸುವುದು, ಹಾವು ಕಚ್ಚಿದವರನ್ನು

ಬದುಕಿಸುವುದು ಇತ್ಯಾದಿ..

ಒಮ್ಮೆ ಗುತ್ತಲದ ಅರಸನು ಬೇಟೆಗಾಗಿ ಈ ಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ, ಆತನ ಸೇನಾಧಿಪತಿಯು ಹಾವು ಕಚ್ಚಿ ಮೃತಪಟ್ಟನು. ಇದರಿಂದಾಗಿ ಅರಸನಿಗೆ ಅತೀವ ದುಃಖವುಂಟಾಗಿ ರೋಧಿಸತೊಡಗಿದನು. ಆಗ ಆತನ ಸೈನಿಕನೊಬ್ಬನು ಶ್ರೀ ಚೌಡಯ್ಯನವರ ಪವಾಡಗಳ ಬಗ್ಗೆ ವಿವರಿಸಿ ಹೇಳಲಾಗಿ, ಅರಸನು ತನ್ನ ಮೃತ ಸೇನಾಧಿಪತಿಯ ಶರೀರವನ್ನು ಚೌಡಯ್ಯನವರಲ್ಲಿಗೆ ತಂದು ಆತನನ್ನು ಬದುಕಿಸುವಂತೆ ಕೇಳಿಕೊಂಡರು, ಆಗ ಚೌಡಯ್ಯನವರು ಸೇನಾಧಿಪತಿಯನ್ನು ಬದುಕಿಸುತ್ತಾರೆ. ಇದರಿಂದ ಸಂತುಷ್ಟನಾದ ಅರಸನು ಶಿವಪುರದ ಸುತ್ತಲಿನ ಪೂರ್ವ – ಪಶ್ಚಿಮಕ್ಕೆ 14 ಮೈಲು ಹಾಗೂ ಉತ್ತರ – ದಕ್ಷಿಣಕ್ಕೆ 7 ಮೈಲು ಸುತ್ತಳತೆಯ ಭೂಮಿಯನ್ನು ಚೌಡಯ್ಯನವರಿಗೆ ದಾನವಾಗಿ ನೀಡಿದನು.

ಆದರೆ ಚೌಡಯ್ಯನರು ವೈರಾಗ್ಯಶಾಲಿಯು, ಲೌಕಿಕದಲ್ಲಿ ನಿರಾಸಕ್ತಿ ಹೊಂದಿದವರು ಆಗಿದ್ದರಿಂದ, ಅರಸನು ಕೊಡಮಾಡಿದ್ದ ಸಂಪೂರ್ಣ ಜಮೀನನ್ನು ತನ್ನ ಗುರುಗಳಾದ ಶ್ರೀ ಶಿವದೇವರಿಗೆ ದಾನವಾಗಿ ನೀಡಿದರು ಎಂಬ ಉಲ್ಲೇಖವಿದೆ. ಅಂದಿನಿಂದ ಶಿವಪುರ ಗ್ರಾಮಕ್ಕೆ ‘ಚೌಡಯ್ಯದಾನಪುರ’ ಎಂದು ಹೆಸರು ಬರುತ್ತದೆ. ಮುಂದೆ ಚೌಡಯ್ಯನರು ಅಲ್ಲಿ ದೇಹ ತ್ಯಾಗ ಮಾಡಿದ್ದರಿಂದ ತುಂಗಭದ್ರಾ ನದಿಯ ದಡದಲ್ಲಿ ಈಗಲೂ ಚೌಡಯ್ಯನವರ ಸಮಾಧಿ ಗದ್ದುಗೆ ಇದೆ.

ಭ್ರಮಾಲೋಕದಲ್ಲಿ ವಿಹರಿಸುತ್ತಾ ಕುಳಿತ, ಆಡಂಬರದಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಮಂದಿಯ ಕಪಾಳಕ್ಕೆ ಹೊಡೆದು ಎಚ್ಚರಿಸುವಂತಿವೆ ಚೌಡಯ್ಯನವರ ವಚನಗಳು. ಧಾರ್ಮಿಕ ಮೂಢನಂಬಿಕೆ ಬಿತ್ತುವವರಿಗೆ, ಸ್ವಾರ್ಥಿಗಳಾಗಿ ಬದುಕುವವರಿಗೆ, ಮುಖವಾಡ ಹಾಕಿ ಮಂಕು ಬೂದಿ ಎರಚುವವರಿಗೆ ಸಿಂಹ ಸ್ವಪ್ನದಂತೆ ಬೆಚ್ಚಿ ಬೀಳಿಸುತ್ತವೆ ನಿಜ ಶರಣ ಅಂಬಿಗರ ಚೌಡಯ್ಯನವರ ವಚನಗಳು. ಇದಕ್ಕೆ ತಾತ್ಪೂರ್ತಿಕವಾಗಿ ಕೆಲವು ವಚನಗಳು ಈ ಕೆಳಗಿನಂತಿವೆ;

“ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು/ನಂಬಿದರೆ ಒಂದೇ ಹುಟ್ಟಲಿ/ಕಡೆಯ ಹಾಯಿಸುವೆನೆಂದಾತನಂಬಿಗರ/ಚೌಡಯ್ಯ ನಿಜಶರಣನು”

ಈ ಮೇಲಿನ ವಚನ ಶ್ರೀ ಅಂಬಿಗರ ಚೌಡಯ್ಯನವರ ಸ್ವಾಭಿಮಾನ, ಧೈರ್ಯ, ನೇರ, ನಿರ್ಭಿಡೆಯ ವ್ಯಕ್ತಿತ್ವದ ಪ್ರತೀಕವಾಗಿದೆ.

ಹನ್ನೆರಡನೇ ಶತಮಾನದ ಸಂದರ್ಭದಲ್ಲಿ ಜಾತಿ ಮತ್ತು ವರ್ಗ ವ್ಯವಸ್ಥೆ ಎಷ್ಟರಮಟ್ಟಿಗಿತ್ತು ಎಂಬುದನ್ನು ಈ ವಚನ ಸೂಚಿಸುತ್ತದೆ. ಅಂತಹ ವಿಚಿತ್ರ, ವಿಕ್ಷಿಪ್ತ ಸನ್ನಿವೇಶದಲ್ಲಿ ಬಸವಾದಿ ಶರಣರು ಜಾತೀಯತೆ, ವರ್ಗ – ವರ್ಣ ವ್ಯವಸ್ಥೆಯ ವಿರುದ್ಧ ಬೃಹತ್ ಚಳುವಳಿಯನ್ನು ಕೈಗೊಂಡಾಗ ಅಂಬಿಗರ ಚೌಡಯ್ಯನವರ ಸತ್ಯನಿಷ್ಠೆ, ಪ್ರಾಮಾಣಿಕತೆಯ ವಚನಗಳು ಪ್ರಖರವಾಗಿ ಕಾಣಿಸುತ್ತವೆ. ಕೆಲವು ಢೋಂಗಿ ಭಕ್ತರಿಗೆ, ಕಪಟ ಸನ್ಯಾಸಿಗಳಿಗೆ ತನ್ನ ಖಾರವಾದ ವಚನಗಳ ಮೂಲಕ ಚುರುಕು ಮುಟ್ಟಿಸುತ್ತಾರೆ.

ಆಡಂಬರ ಮತ್ತು ದುರಾಸೆಯ ಜನರ ಮನಸ್ಥಿತಿ ಕಂಡು ಕೆಂಡಾಮಂಡಲವಾಗಿ ಪ್ರಸ್ತುತ ಪಡಿಸಿದ ಒಂದು ವಚನ ಇಂತಿದೆ;

“ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಕಾಳೋಗರನ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹಾರುವ ಪಕ್ಷಿಯನು/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೆಬ್ಬುಲಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೊಯ್ವ ಹೆಮ್ಮಾರಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಬರುವ ಉರಿ ಬಾಣವನು/ಇಂತೆಲ್ಲವನು ಒಂದೇ ಮಂತ್ರದಲ್ಲಿ ನಿಲ್ಲಿಸಬಹುದು;/ಲೋಭವೆಂಬ ಗ್ರಹಣ ಹಿಡಿದವರ ಏತರಿಂದಲೂ/ನಿಲ್ಲಿಸಲಾಗದು/ಈ ಲೋಭಕ್ಕೆ ದಾರಿದ್ರ್ಯವೇ ಔಷಧವು;/ಹೇಳಿದರೆ ಕೇಳರು, ತಾವು ತಿಳಿಯರು/ಶಾಸ್ತ್ರವ ನೋಡರು, ಭಕ್ತಿಯ ಹಿಡಿಯರು/ಇಂತಹ ಗೊಡ್ಡು ಮೂಳ ಹೊಲೆಯರಿಗೆ/ಕರ್ಮವೆಂಬ ಶರದ್ಧಿಯಲ್ಲಿ ಬಿದ್ದು ಹೊರಳಾಡುವುದೇ/ಸತ್ಯವೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು”

ಸಂಸಾರದ ಜಂಜಾಟದಲ್ಲಿ ಬಿದ್ದು ಒದ್ದಾಡುತ್ತಾ ಶಿವನನ್ನು ಮರೆತು ಹತ್ತು ಹಲವು ಚಿಂತೆಯಲ್ಲಿ ಮುಳುಗಿರುವ ಶವ ಮುಖದ ಜನರ ಸ್ಥಿತಿ-ಗತಿಯನ್ನು ಅರ್ಥಗರ್ಭಿತವಾಗಿ ಸಾದರಪಡಿಸುವ ಒಂದು ವಚನ ಇಂತಿದೆ;

“ಬಡತನಕೆ ಉಂಬುವ ಚಿಂತೆ/ಉಣಲಾದಡೆ ಉಡುವ ಚಿಂತೆ/ಉಡಲಾದಡೆ ಇಡುವ ಚಿಂತೆ/ಇಡಲಾದಡೆ ಹೆಂಡಿರ ಚಿಂತೆ/ಹೆಂಡಿರಾದರೆ ಮಕ್ಕಳ ಚಿಂತೆ/ಮಕ್ಕಳಾದಡೆ ಬದುಕಿನ ಚಿಂತೆ/ಬದುಕಾದಡೆ ಕೇಡಿನ ಚಿಂತೆ/ಕೇಡಾದಡೆ ಮರಣದ ಚಿಂತೆ/ಇಂತೀ ಹಲವು ಚಿಂತೆಯಲ್ಲಿಪ್ಪವರ ಕಂಡೆನು/ಶಿವನ ಚಿಂತೆಯಲ್ಲಿದ್ದಾತರೊಬ್ಬರನೂ ಕಾಣೆನೆಂದಾತ/ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು!”

ಸಮಯದ ಸದ್ಬಳಕೆ ಮಾಡಿಕೊಂಡು ಕಾಯಕ ಮಾಡುತ್ತಾ ಶಿವಭಕ್ತರಾಗಿ, ಜೀವನ ಪಾವನವಾಗಿಸುವಂತೆ ಕರೆ ನೀಡುವ ಒಂದು ವಚನ ಇಂತಿದೆ;

“ಗಾಳಿ ಬಿಟ್ಟಾಗ ತೂರಿಕೊಳ್ಳಿರಯ್ಯ/ಗಾಳಿ ನಿಮ್ಮ ಅಧೀನವಲ್ಲ ಕಂಡಯ್ಯ/ನಾಳೆ ತೂರಿಹೆನೆಂದಡಿಲ್ಲ ಕಂಡಯ್ಯ/ಶಿವಶರಣೆ ಎಂಬುದೊಂದು ಗಾಳಿ ಬಿಟ್ಟಲ್ಲಿ/ಬೇಗ ತೂರೆಂದನಂಬಿಗರ ಚೌಡಯ್ಯ”

ಕಾವಿ ಬಟ್ಟೆ ತೊಟ್ಟು, ಭಿಕ್ಷೆಗಾಗಿ ಜೋಳಿಗೆ ಹಾಕಿದವರೆಲ್ಲರೂ ಜಂಗಮರು, ಗುರುಗಳಾಗಲಾರರು ಎಂಬುದನ್ನು ವಿಡಂಬಿಸುವ ಒಂದು ವಚನ ಇಂತಿದೆ;

“ಕಂಥೆ ತೊಟ್ಟವ ಗುರುವಲ್ಲ/ಕಾವಿ ಹೊದ್ದವ ಜಂಗಮನಲ್ಲ/ಶೀಲ ಕಟ್ಟಿದವ ಶಿವಭಕ್ತನಲ್ಲ/ನೀರು ತೀರ್ಥವಲ್ಲ/ಕೂಳು ಪ್ರಸಾದವಲ್ಲ/ಹೌದೆಂಬವನ ಬಾಯ ಮೇಲೆ/ಅರ್ಧ ಮಣದ ಪಾದರಕ್ಷೆಯ ತೆಗೆದುಕೊಂಡು/ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ/ಟೊಕ ಟೊಕನೆ ಹೊಡೆ ಎಂದಾತ/ನಮ್ಮ ಅಂಬಿಗರ ಚೌಡಯ್ಯ”

ಹೀಗೆ ಬಸವಾದಿ ಶರಣರ ಸಮಾಜ ಸುಧಾರಣಾ ಚಳವಳಿಯಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಮುಡುಪಾಗಿಟ್ಟ ಶ್ರೀ ಅಂಬಿಗರ ಚೌಡಯ್ಯನವರು ತಮ್ಮ ಬದುಕಿನ ನೀತಿಯಿಂದ, ನಿಷ್ಠೆಯಿಂದ, ತೀಕ್ಷ್ಣ ಖಂಡನೆಯ ಬಂಡಾಯ ವಚನಗಳಿಂದ ಗಮನ ಸೆಳೆದು, ಅವರು ರಚಿಸಿದ ವಚನಗಳಿಗೆ ತಮ್ಮ ಹೆಸರನ್ನೇ ಅಂಕಿತವನ್ನಾಗಿಟ್ಟಿರುವದು ವಿಶೇಷವಾಗಿದೆ. ಸಮಾಜದ ಕೊಳೆಯನ್ನು ತೊಳೆಯುವ ನಿಟ್ಟಿನಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ಎದ್ದು ಕಾಣುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

Published

on

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.

ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.

ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.

ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.

ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.

ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.

ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.

ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.

ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending