ದಿನದ ಸುದ್ದಿ
20 ಲಕ್ಷ ಕೋಟಿ ಕೊರೊನಾ ಪ್ಯಾಕೇಜ್ ‘ಕನ್ನಡಿಯೊಳಗಿನ ಗಂಟು’; ‘ಹಳೆಯ ಸರಕಿಗೆ ಹೊಸ ಹೊದಿಕೆ’ : ಸಿದ್ದರಾಮಯ್ಯ ಟೀಕೆ
ಸುದ್ದಿದಿನ, ಬೆಂಗಳೂರು : ಬಹುಪ್ರಚಾರದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿದ ರೂ.20 ಲಕ್ಷ ಕೋಟಿ ಕೊರೊನಾ ಪ್ಯಾಕೇಜ್ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಟಿವಿ ಪರದೆಯಲ್ಲಿ, ಪತ್ರಿಕೆಯ ಪುಟದಲ್ಲಿ ಕಾಣುತ್ತಿದೆ, ಜನರ ಕೈಗೆ ಸಿಗುತ್ತಿಲ್ಲ. ನಿರ್ಮಲಾ ಸೀತರಾಮನ್ ಅವರು 5 ಕಂತುಗಳಲ್ಲಿ ಬಿಚ್ಚಿಟ್ಟ ಪ್ಯಾಕೇಜ್ ಅಂಕಿ ಅಂಶಗಳ ಕಸರತ್ತು ‘ಹಳೆಯ ಸರಕಿಗೆ ಹೊಸ ಹೊದಿಕೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಹಾವಳಿಯಿಂದ ದೇಶ ಅತ್ಯಂತ ದೊಡ್ಡ ಮಾನವೀಯತೆಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಲಕ್ಷಾಂತರ ವಲಸೆ ಕಾರ್ಮಿಕರು, ಮಹಿಳೆಯರು, ಮಕ್ಕಳು ಊರು ಸೇರಲು ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಜನರ ಪ್ರಸ್ತಾವವೇ ಇಲ್ಲದ ಪ್ಯಾಕೇಜ್ ‘ಬೆತ್ತಲೆ ಮನುಷ್ಯನ ಮುಂದೆ ಅರಸನ ಬಟ್ಟೆಗಳ ಮೆರವಣಿಗೆ’ ಅಷ್ಟೆ. ಜನರ ಜೇಬಿಗೆ ದುಡ್ಡು ಹಾಕಿ ಎಂದು ನೊಬೆಲ್ ಪ್ರಶಸ್ತಿ ವಿಜೇತ ವಿದ್ವಾಂಸರು, ಪ್ರಖ್ಯಾತ ಆರ್ಥಿಕ ತಜ್ಞರು ಹೇಳುತ್ತಿದ್ದರೆ, ನರೇಂದ್ರ ಮೋದಿ ಅವರು ಖಾಲಿಯಾಗಿರುವ ಸರ್ಕಾರದ ಜೇಬು ತುಂಬಲು ಹೊರಟಿದ್ದಾರೆ. ಇದರಿಂದ ಬಡವರಿಗೆ, ಹಸಿದ ಹೊಟ್ಟೆಗಳಿಗೆ, ಕಾರ್ಮಿಕರಿಗೆ, ರೈತರಿಗೆ, ಸಣ್ಣ ವ್ಯಾಪಾರಿಗಳಿಗೆ ಸಿಕ್ಕಿದೆಷ್ಟು? ಎಂದು ಪ್ರಶ್ನಿಸಿದರು.
ದೇಶದಲ್ಲಿ ಗುರುತಿಸಲಾದ 13 ಕೋಟಿ ಬಡವರಿಗೆ ಮಾಸಿಕ ರೂ.5000 ನೀಡಿದರೆ ಆಗುವ ವೆಚ್ಚ ರೂ.65,000 ಕೋಟಿ. ರೂ.7000 ನೀಡಿದರೆ ಆಗುವ ವೆಚ್ಚ 97,500 ಕೋಟಿ. ಇಷ್ಟು ಕೊಟ್ಟು ಪುಣ್ಯ ಕಟ್ಕೊಳ್ಳಿ ಎಂದು ನಮ್ಮ ಪಕ್ಷ ಹೇಳುತ್ತಲೇ ಇದೆ. ಇಷ್ಟನ್ನೂ ನೀಡಲು ಸಾಧ್ಯ ಇಲ್ಲದಷ್ಟು ಸರ್ಕಾರ ದಿವಾಳಿ ಆಗಿದೆಯೇ? ನರೇಗಾ ಯೋಜನೆಯ ಕೆಲಸದ ದಿನಗಳನ್ನು 200ಕ್ಕೆ ಹೆಚ್ಚಿಸಿ ಮತ್ತು ಈ ಯೋಜನೆಯನ್ನು ನಗರ ಪ್ರದೇಶದ ಬಡವರಿಗೂ ವಿಸ್ತರಿಸಿ ಎಂದು ಪ್ರಾರಂಭದಿಂದಲೇ ನಮ್ಮ ಪಕ್ಷ ಹೇಳುತ್ತಲೇ ಬಂದಿದೆ. ಲಕ್ಷ ಕೋಟಿಗಳ ಪ್ಯಾಕೇಜ್ ನಲ್ಲಿ ಇದರ ಪ್ರಸ್ತಾವವೇ ಇಲ್ಲ ಎಂದು ಹೇಳಿದರು.
ಮುಂಗಾರು ಬೆಳೆಯ ಸಿದ್ದತೆಯಲ್ಲಿರುವ ರೈತರು ಈಗಾಗಲೇ ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ ದಿವಾಳಿಯಾಗಿದ್ದಾರೆ. ಅವರ ಹಳೆ ಸಾಲ ಮನ್ನಾ ಮಾಡಿ, ರಸಗೊಬ್ಬರ, ಕ್ರಿಮಿನಾಶಕ ಮತ್ತು ಕೃಷಿ ಸಲಕರಣೆಗಳ ಮೇಲಿನ ಜಿಎಸ್ ಟಿ ರದ್ದುಪಡಿಸಿ ಎಂಬ ಬೇಡಿಕೆ ಬಗ್ಗೆ ಪ್ರಧಾನಿಗಳು ಮೌನವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಆರ್ಥಿಕ ನೆರವಿನ ಪ್ಯಾಕೇಜ್ ಮೇಲ್ನೋಟಕ್ಕೆ ಬಂಪರ್ ಕೊಡುಗೆ ಎಂದು ಅನಿಸಿದರೂ ಒಳಗಿನ ಗುಟ್ಟು ಬೇರೆ ಇದೆ. ದೇಶದಲ್ಲಿರುವ 6.2 ಲಕ್ಷ ಕೋಟಿ ಕಿರುಉದ್ದಿಮೆಗಳಲ್ಲಿ 45 ಲಕ್ಷ ದೊಡ್ಡಗಾತ್ರದ ಕಿರುಉದ್ದಿಮೆಗಳಿಗೆ ಮಾತ್ರ ಈ ನೆರವು ಲಭ್ಯ. ಉಳಿದವರ ಗತಿ ಏನು? ಸಣ್ಣ ಕೈಗಾರಿಕೆಗಳಿಗೆ ಸಾಲ, ಸಾಲಕ್ಕೆ ಖಾತರಿ ನೀಡಿಕೆಯ ಬಗ್ಗೆ ಪ್ಯಾಕೇಜ್ ಹೇಳಿದೆ. ಉತ್ಪಾದನೆ ಇಲ್ಲದೆ ಖಾಲಿ ಬಿದ್ದಿರುವ ಕೈಗಾರಿಕೆಗಳಿಗೆ ಸಾಲಮಾಡುವ ಶಕ್ತಿ ಎಲ್ಲಿದೆ? ಕಾರ್ಮಿಕರ ಸಂಬಳ ನೀಡಿಕೆಗೆ ನೆರವು, ಹಳೆ ಸಾಲದ ಮೇಲಿನ ಬಡ್ಡಿ ಮನ್ನಾ ಮೊದಲಾದ ನೆರವಿನಿಂದ ಮಾತ್ರ ಸಣ್ಣ ಕೈಗಾರಿಕೆಗಳ ರಕ್ಷಣೆ ಸಾಧ್ಯ ಎಂದು ಸಲಹೆ ನೀಡಿದರು.
ದೇಶದಲ್ಲಿ ಜನ ರಾಜ್ಯದಿಂದ ರಾಜ್ಯಕ್ಕೆ, ಜಿಲ್ಲೆಯಿಂದ ಜಿಲ್ಲೆಗೆ ಹೋಗಲು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಆಕಾಶದಲ್ಲಿ ವಿಮಾನ ಸಂಚಾರ ವ್ಯವಸ್ಥೆಯನ್ನು ಸುಲಭ ಮಾಡಿ ದುಡ್ಡು ಮಾಡುವ ಯೋಚನೆಯಲ್ಲಿದೆ. ಇದು ಹಸಿದ ಹೊಟ್ಟೆಗಳ ಅಪಹಾಸ್ಯವಲ್ಲದೆ ಇನ್ನೇನು?
ದೇಶಪ್ರೇಮದ ವಾರಸುದಾರರು ತಾವೆಂದು ಸಾರಿಸಾರಿ ಹೇಳುತ್ತಿರುವ ನರೇಂದ್ರ ಮೋದಿ ಅವರು ಈಗ ರಕ್ಷಣಾ ಇಲಾಖೆಯ FDI ಮಿತಿಯನ್ನು ಶೇ 74ಕ್ಕೆ ಹೆಚ್ಚಿಸುವ ಮೂಲಕ ದೇಶದ ಭದ್ರತೆಯ ಜೊತೆ ರಾಜಿ ಮಾಡಲು ಹೊರಟಿದ್ದಾರೆ. ಇದೇನಾ ದೇಶ ಪ್ರೇಮ? ಎಂದು ಮತ್ತೊಮ್ಮೆ ಪ್ರಶ್ನಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು