Connect with us

ದಿನದ ಸುದ್ದಿ

ದಾವಣಗೆರೆ | ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ 1095 ಸಿಬ್ಬಂದಿಗಳು, 331 ಟೇಬಲ್‍ಗಳು, 06 ಕೇಂದ್ರಗಳಲ್ಲಿ ಮತ ಎಣಿಕೆಗೆ ಸಜ್ಜು : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ 06 ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕಳೆದ ಡಿ. 22 ಹಾಗೂ ಡಿ. 27 ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಶಾಂತಿಯುತವಾಗಿ ಜರುಗಿದೆ.

ದಾವಣಗೆರೆ ತಾಲ್ಲೂಕಿನ ಹೆಬ್ಬಾಳ ಗ್ರಾ.ಪಂ.ನ ಎರಡು ಮತಗಟ್ಟೆಗಳಲ್ಲಿ ಡಿ. 29 ರಂದು ಮರು ಮತದಾನ ನಡೆಸಲಾಗಿದೆ. ಜಿಲ್ಲೆಯ ಒಟ್ಟು 187 ಗ್ರಾಮ ಪಂಚಾಯತಿಗಳಿಗೆ ಜರುಗಿದ ಚುನಾವಣೆಯಲ್ಲಿ ಈ ಬಾರಿ ಒಟ್ಟು 374 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 09 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದ ಕಾರಣ ಖಾಲಿ ಉಳಿದಿವೆ.

ಒಟ್ಟು 2200 ಸದಸ್ಯ ಸ್ಥಾನಗಳಿಗೆ 1158 ಮತಗಟ್ಟೆಗಳಲ್ಲಿ ಜರುಗಿದ ಚುನಾವಣೆಯಲ್ಲಿ ಒಟ್ಟಾರೆ ಶೇ. 85.79 ರಷ್ಟು ಮತದಾನವಾಗಿದ್ದು, ಹೊನ್ನಾಳಿ ತಾಲ್ಲೂಕು- ಶೇ. 86.31, ದಾವಣಗೆರೆ- ಶೇ. 86.23, ಜಗಳೂರು-ಶೇ. 85.08, ಚನ್ನಗಿರಿ- ಶೇ. 84.56, ನ್ಯಾಮತಿ-87.49 ಹಾಗೂ ಹರಿಹರ ತಾಲ್ಲೂಕಿನಲ್ಲಿ ಶೇ. 87.15 ರಷ್ಟು ಮತದಾನವಾಗಿದೆ. ಇದೀಗ ಡಿ. 30 ರಂದು ಮತಗಳ ಎಣಿಕೆ ಕಾರ್ಯ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಮತ ಎಣಿಕೆ ಕೇಂದ್ರಗಳು

ದಾವಣಗೆರೆಯ ಮೋತಿ ವೀರಪ್ಪ ಪ್ರೌಢಶಲೆ ಮತ್ತು ಪ.ಪೂ. ಕಾಲೇಜು. ಜಗಳೂರಿನ ಸರ್ಕಾರಿ ಜೂನಿಯರ್ ಕಾಲೇಜು. ಹೊನ್ನಾಳಿಯ ಗಂಗಮ್ಮ ವೀರಭದ್ರಶಾಸ್ತ್ರಿ ಕೈಗಾರಿಕಾ ತರಬೇತಿ ಕೇಂದ್ರ ಹಿರೇಕಲ್ಮಠ. ನ್ಯಾಮತಿಯ ಕರ್ನಾಟಕ ಪಬ್ಲಿಕ್ ಸ್ಕೂಲ್. ಹರಿಹರದ ಸೇಂಟ್ ಮೇರಿಸ್ ಕಾನ್ವೆಂಟ್ ಶಾಲೆ ಹಾಗೂ ಚನ್ನಗಿರಿಯ ಸರ್ಕಾರಿ ಪ.ಪೂ. ಕಾಲೇಜು ಇಲ್ಲಿ ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

1095 ಸಿಬ್ಬಂದಿ, 331 ಟೇಬಲ್‍ಗಳು

ಮತಗಳ ಎಣಿಕಾ ಕಾರ್ಯ ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಅಗತ್ಯ ಸಿಬ್ಬಂದಿಗಳಿಗೆ ಮಾಸ್ಟರ್ ಟ್ರೇನರ್‍ಗಳ ಮೂಲಕ ಮತ ಎಣಿಕೆ ಸಿಬ್ಬಂದಿಗಳಿಗೆ ಎರಡು ಬಾರಿ ತರಬೇತಿ ನೀಡಿ, ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1158 ಮತಗಟ್ಟೆಗಳಲ್ಲಿ ಚುನಾವಣೆ ನಡೆದಿದ್ದು, ಮತಗಳ ಎಣಿಕೆ ಒಟ್ಟು 06 ತಾಲ್ಲೂಕು ಕೇಂದ್ರಗಳಲ್ಲಿ ಜರುಗಲಿದೆ.

ಒಟ್ಟು 331 ಟೇಬಲ್‍ಗಳನ್ನು ಮತಗಳ ಎಣಿಕೆಗೆ ವ್ಯವಸ್ಥೆಗೊಳಿಸಿದ್ದು, 331 ಎಣಿಕಾ ಮೇಲ್ವಿಚಾರಕರು, ಹೆಚ್ಚುವರಿ 32 ಸೇರಿದಂತೆ ಒಟ್ಟು 363 ಮೇಲ್ವಿಚಾರಕರನ್ನು ನೇಮಿಸಿದೆ. ಅಲ್ಲದೆ 666 ಎಣಿಕಾ ಸಹಾಯಕರು ಹಾಗೂ ಹೆಚ್ಚುವರಿ 66 ಸೇರಿದಂತೆ ಒಟ್ಟು 732 ಎಣಿಕಾ ಸಹಕಾಕರನ್ನು ನಿಯೋಜಿಸಿದ್ದು, ಒಟ್ಟಾರೆ 1095 ಸಿಬ್ಬಂದಿಗಳನ್ನು ಮತ ಎಣಿಕಾ ಕಾರ್ಯಕ್ಕೆ ನೇಮಿಸಲಾಗಿದೆ.

ತಾಲ್ಲೂಕುವಾರು ವಿವರ

ಹೊನ್ನಾಳಿ ತಾಲ್ಲೂಕಿನಲ್ಲಿ 147 ಮತಗಟ್ಟೆಗಳಲ್ಲಿ ಚುನಾವಣೆ ನಡೆದಿದ್ದು, ಮತಗಳ ಎಣಿಕೆಗೆ 41 ಟೇಬಲ್‍ಗಳು, 45 ಮೇಲ್ವಿಚಾರಕರು, 90 ಎಣಿಕಾ ಸಹಾಯಕರು ಸೇರಿದಂತೆ ಒಟ್ಟು 135 ಸಿಬ್ಬಂದಿಗಳನ್ನು ನೇಮಿಸಲಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ 253 ಮತಗಟ್ಟೆಗಳಲ್ಲಿ ಚುನಾವಣೆ ನಡೆದಿದ್ದು, ಮತಗಳ ಎಣಿಕೆಗೆ 73 ಟೇಬಲ್‍ಗಳು, 80 ಮೇಲ್ವಿಚಾರಕರು, 161 ಎಣಿಕಾ ಸಹಾಯಕರು ಸೇರಿದಂತೆ ಒಟ್ಟು 241 ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಜಗಳೂರು ತಾಲ್ಲೂಕಿನಲ್ಲಿ 172 ಮತಗಟ್ಟೆಗಳಲ್ಲಿ ಚುನಾವಣೆ ನಡೆದಿದ್ದು, ಮತಗಳ ಎಣಿಕೆಗೆ 51 ಟೇಬಲ್‍ಗಳು, 56 ಮೇಲ್ವಿಚಾರಕರು, 112 ಎಣಿಕಾ ಸಹಾಯಕರು ಸೇರಿದಂತೆ ಒಟ್ಟು 168 ಸಿಬ್ಬಂದಿಗಳನ್ನು ನೇಮಿಸಲಾಗಿದೆ.

ಚನ್ನಗಿರಿ ತಾಲ್ಲೂಕಿನಲ್ಲಿ 368 ಮತಗಟ್ಟೆಗಳಲ್ಲಿ ಚುನಾವಣೆ ನಡೆದಿದ್ದು, ಮತ ಎಣಿಕೆಗೆ 100 ಟೇಬಲ್‍ಗಳು, 110 ಮೇಲ್ವಿಚಾರಕರು, 220 ಎಣಿಕಾ ಸಹಾಯಕರು ಸೇರಿದಂತೆ ಒಟ್ಟು 330 ಸಿಬ್ಬಂದಿ ನೇಮಿಸಲಾಗಿದೆ. ಹರಿಹರ ತಾಲ್ಲೂಕಿನಲ್ಲಿ 151 ಮತಗಟ್ಟೆಗಳಲ್ಲಿ ಚುನಾವಣೆ ನಡೆದಿದ್ದು, ಮತಗಳ ಎಣಿಕೆಗೆ 42 ಟೇಬಲ್‍ಗಳು, 46 ಮೇಲ್ವಿಚಾರಕರು, 92 ಎಣಿಕಾ ಸಹಾಯಕರು ಸೇರಿದಂತೆ ಒಟ್ಟು 138 ಸಿಬ್ಬಂದಿಗಳನ್ನು ನೇಮಿಸಲಾಗಿದೆ. ನ್ಯಾಮತಿ ತಾಲ್ಲೂಕಿನಲ್ಲಿ 93 ಮತಗಟ್ಟೆಗಳಲ್ಲಿ ಚುನಾವಣೆ ನಡೆದಿದ್ದು, ಮತಗಳ ಎಣಿಕೆಗೆ 24 ಟೇಬಲ್‍ಗಳು, 26 ಮೇಲ್ವಿಚಾರಕರು, 57 ಎಣಿಕಾ ಸಹಾಯಕರು ಸೇರಿದಂತೆ ಒಟ್ಟು 83 ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಮಾನ ಮತಗಳು ಬಂದಲ್ಲಿ ಚೀಟಿ ಮೂಲಕ ಆಯ್ಕೆ

ಮತಗಳ ಎಣಿಕೆ ಮುಕ್ತಾಯ ಬಳಿಕ ಅಭ್ಯರ್ಥಿಗಳ ನಡುವೆ ಸಮಾನ ಮತಗಳು ಇರುವುದು ಕಂಡುಬಂದಲ್ಲಿ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆ) ನಿಯಮ 1993 (73) ಅನ್ವಯ ಚುನಾವಣಾಧಿಕಾರಿಯು ಚೀಟಿ ಎತ್ತುವ ಮೂಲಕ ಅಭ್ಯರ್ಥಿಯ ಆಯ್ಕೆಯನ್ನು ನಿರ್ಣಯಿಸುವರು.

ಒಂದು ವೇಳೆ ಮತಪತ್ರದಲ್ಲಿ ಗುರುತು ಮಾಡದೇ ಇರುವುದು, ಖಾಲಿ ಜಾಗದ ಮೇಲೆ ಗುರುತು ಮಾಡಿದಲ್ಲಿ, ಆಯ್ಕೆ ಮಾಡಬೇಕಾಗಿರುವ ಅಭ್ಯರ್ಥಿಗಳಿಗಿಂತ ಹೆಚ್ಚಿನ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಲ್ಲಿ, ಮತದಾರರನ್ನು ಗುರುತಿಸಿದ್ದಲ್ಲಿ, ಮತಪತ್ರವನ್ನು ವಿರೂಪಗೊಳಿಸಿದ್ದಲ್ಲಿ, ಮತಪತ್ರ ನೈಜವಾದುದಲ್ಲ ಎಂದು ಕಂಡುಬಂದಲ್ಲಿ ಅಂತಹ ಮತಪತ್ರವನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending