ರಾಜಕೀಯ
ಜೆ.ಎನ್.ಯು ಚುನಾಚಣೆ : ಯುನೈಟೆಡ್ ಲೆಫ್ಟ್ ಅಲೈಯನ್ಸ್ ಗೆ ಗೆಲುವು

ಸುದ್ದಿದಿನ ಡೆಸ್ಕ್: ದೇಶದ ಗಮನ ಸೆಳೆದಿರುವ ದೆಹಲಿಯ ಜವಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್.ಯು) ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಡಪಂಥೀಯರು ಮೇಲುಗೈ ಸಾಧಿಸಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಯುನೈಟೆಡ್ ಲೆಫ್ಟ್ ಅಲೈಯನ್ಸ್ ಗೆಲುವು ಸಾಧಿಸಿದೆ.
ಅಧ್ಯಕ್ಷರಾಗಿ ಎನ್. ಸಾಯಿ ಬಾಲಾಜಿ 1,000 ಮತಗಳ ಅಂತರದಲ್ಲಿ ವಿಜಯಭೇರಿ ಬಾರಿಸಿದ್ದಾರೆ. ಉಪಾಧ್ಯಕ್ಷರಾಗಿ ಸಾರಿಕಾ ಚೌಧರಿ ಮತಗಳ ಅಂತರ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಏಜಾಜ್ ಅಹ್ಮದ್ ರಾಥರ್, ಜಂಟಿ ಕಾರ್ಯದರ್ಶಿಯಾಗಿ ಅಮುತ ಜಯದೀಪ್ ಆಯ್ಕೆಯಾಗಿದ್ದಾರೆ.
ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್ಎ), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಷನ್ (ಡಿಎಸ್ಎಫ್) ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಫೆಡರೇಶನ್ (ಎಐಎಸ್ಎಫ್) ಮೈತ್ರಿಯೊಂದಿಗೆ ಎಡಪಂಥೀಯ ಬೆಂಬಲ ಹೊಂದಿದೆ.
ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಎಐಎಸ್ಎ ಸಂಘಟನೆಯ ಎನ್. ಸಾಯಿ ಬಾಲಾಜಿ 2,161 ಮತ ಪಡೆಯುವ ಮೂಲಕ ಎಬಿವಿಪಿಯ ಲಲಿತ್ ಪಾಂಡೆಯನ್ನು 1,179 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಡಿಎಸ್ಎಫ್.ನ ಸಾರಿಕಾ ಚೌಧರಿ 2,692 ಮತ ಪಡೆದು ಎಬಿವಿಪಿಯ ಗೀತಾಸ್ರಿ ಬೊರುವಾ ಅವರನ್ನು 1,680 ಮತಗಳ ಅಂತರದಲ್ಲಿ ಹಿಂದಿಕ್ಕಿದ್ದಾರೆ. ಎಸ್ಎಫ್ಐನ ಏಜಾಜ್ ಅಹಮದ್ ರಾಥರ್ 2,423 ಪಡೆದು ಪ್ರತಿಸ್ಪರ್ಧಿ ಎಬಿವಿಪಿಯ ಗಣೇಶ್ ಗುರ್ಜರನ್ನು 1,300 ಮತಗಳ ಸೋಲಿಸಿದ್ದಾರೆ. ಎಐಎಸ್ಎಫ್.ನ ಅಮುತ 2,047 ಮತಗಳನ್ನು ಪಡೆದು ಎಬಿವಿಪಿಯ ವೆಂಕಟ್ ಚೌಬೆಯನ್ನು 800 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

ದಿನದ ಸುದ್ದಿ
ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ : ಭವ್ಯ ನರಸಿಂಹಮೂರ್ತಿ

ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು ಸ್ವಾಮಿ ವಿವೇಕಾನಂದರ 160ನೇ ಜನ್ಮದಿನದ ಅಂಗವಾಗಿ ಅವರ ತತ್ವ ಆದರ್ಶಗಳು ಹಾಗೂ ಯುವ ಜನತೆಗೆ ನೀಡಿರುವ ಸಂದೇಶಗಳನ್ನು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಎಲ್ಲಾ ಜನತೆಗೆ ತಲುಪುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ ಭವ್ಯ ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕ್ ರ್ಯಾಲಿ ಬೆಳಿಗ್ಗೆ 09-00 ಕ್ಕೆ ರಾಜಾಜಿನಗರ Entrance Bridge ಇಂದ ಪ್ರಾರಂಭವಾಗಿ ನವರಂಗ ಚಿತ್ರಮಂದಿರ – ಶಂಕರ್ ಮಠ – ಹಾವನೂರ್ ಸರ್ಕಲ್ – ಹೌಸಿಂಗ್ ಬೋರ್ಡ್ – ಕಾಮಾಕ್ಷಿಪಾಳ್ಯ ಬಸ್ ಸ್ಟಾಂಡ್ – ಹಾವನೂರ್ – ಅಕ್ಷಯ ಉಪಹಾರ – ಮೋದಿ ಹಾಸ್ಪಿಟಲ್ – ನವರಂಗ ಬ್ರಿಡ್ಜ್ – ಗಿರಿಯಾಸ್ ಸಿಗ್ನಲ್ – 6th ಬ್ಲಾಕ್ – ಕೊನೆಯದಾಗಿ 12 ಗಂಟೆಗೆ ಭಾಷ್ಯಮ್ ಸರ್ಕಲ್ ನಲ್ಲಿ ಕೊನೆಗೊಳ್ಳುತ್ತದೆ.
ದಾರಿಯಲ್ಲಿ 4 ಕಡೆ ಸ್ವಾಮಿ ವಿವೇಕಾನಂದರಿಗೆ ಪೂಜೆ ಹಮ್ಮಿಕೊಳ್ಳಲಾಗಿದೆ. ಪೂಜೆಯ ನಂತರ ವಿವೇಕಾನಂದರ ತತ್ವ ಆದರ್ಶಗಳನ್ನೊಳಗೊಂಡ ಹತ್ತು ಸಾವಿರ ಪುಸ್ತಕಗಳನ್ನು ಕ್ಷೇತ್ರದಾದ್ಯಂತ ಉಚಿತವಾಗಿ ಹಂಚಲಾಗುವುದು ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿರುತ್ತದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
