ದಿನದ ಸುದ್ದಿ
ಸಾಹಿತ್ಯ ಸಮ್ಮೇಳನ | ಡಾ.ಕಂಬಾರ ವಿರಚಿತ ‘ಶಿವರಾತ್ರಿ’ ನಾಟಕ ಯಶಸ್ವಿ ಪ್ರಯೋಗ

ಸುದ್ದಿದಿನ,ಧಾರವಾಡ,ರಂಗಾಯಣ ನಾಟಕ ವೇದಿಕೆ :84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ ಚಂದ್ರಶೇಖರ ಕಂಬಾರ ರಚಿತ ಶಿವರಾತ್ರಿ ನಾಟಕವನ್ನು, ಧಾರವಾಡದ ರಂಗಾಯಣ ಬಯಲು ರಂಗ ಮಂದಿರದಲ್ಲಿ ಕೊಪ್ಪಳದ ಶಿಕ್ಷಕರ ಕಲಾ ಸಂಘದ ಕಲಾವಿದರಿಂದ ಪ್ರದರ್ಶನಗೊಂಡು ರಂಗಾಸಕ್ತರ ಮನತಣಿಸುವಲ್ಲಿ ಯಶಸ್ವಿಯಾಯಿತು.
ದೇಶಿ ಭಾಷೆಯ ಸೊಗಡುಳ್ಳ ಈ ನಾಟಕದಲ್ಲಿ ಕಲ್ಯಾಣ ಕ್ರಾಂತಿಯ ವಿವಿಧ ಆಯಾಮಗಳನ್ನು ರಂಗನಟರು ಮನೋಜ್ಙವಾಗಿ ನಿರೂಪಿಸಿದರು. ಬಿಜ್ಜಳ ಮತ್ತು ಬಸವಣ್ಣನ ನಡುವೆ ಮನಸ್ತಾಪ ಉಂಟಾಗಿ ಸೂಳೆ ಸಾವಂತ್ರಿ ಮನೆಯಲ್ಲಿ ಚರ್ಚೆ ಸಾಗುತ್ತ, ಸೂಳೆ ಸಾವಂತ್ರಿಗೆ ಬಸವಣ್ಣನೆಂದರೆ ಭಕ್ತಿ. ಸೂಳೆ ಸಾವಂತ್ರಿಯು ತನ್ನ ವೇಶ್ಯೆ ಕಾಯಕದಿಂದ ಬಂದ ಹಣದಿಂದ ಪ್ರಾಮಾಣಿಕವಾಗಿ ತೆರಿಗೆ ಕಟ್ಟುತ್ತಾಳೆ. ಇದನ್ನು ಬಸವಣ್ಣನವರು ಮೆಚ್ಚಿ ಆಕೆಯನ್ನು ತಾಯಿ ಎಂದು ಕರೆದು ನಮಸ್ಕರಿಸುತ್ತಾರೆ. ಕೊನೆಗೆ ಬಿಜ್ಜಳನ ಆಜ್ಙೆಯಂತೆ ಬಸವಣ್ಣನವರು ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಕೂಡಲಸಂಗಮಕ್ಕೆ ಹೋಗುತ್ತಾರೆ. ಬಿಜ್ಜಳನು ಪಾಶ್ಚಾತಾಪದಿಂದ ಬಳಲುತ್ತ, ವೈರಿಗಳಿಂದ ಹತ್ಯೆಗೊಳಗಾಗುತ್ತಾನೆ.
ಬಸವಣ್ಣನವರ ಪಾತ್ರದಲ್ಲಿ ರಾಮಣ್ಣ ಶ್ಯಾವಿ, ಬಿಜ್ಜಳನ ಪಾತ್ರದಲ್ಲಿ ಮಂಜುನಾಥ ಪೂಜಾರ, ಜಗದೇವವಾಗಿ ನಾಗರಾಜನಾಯಕ ಡಿ.ಡೊಳ್ಳಿನ, ಹರಿಹರನಾಗಿ ಪ್ರಾಣೇಶ ಪೂಜಾರ, ಮಲ್ಲಿಬೊಮ್ಮಣ್ಣನಾಗಿ ಗುರುರಾಜ, ಸೂಳೆ ಸಾವಂತ್ರಿಯ ಪಾತ್ರದಲ್ಲಿ ಜಯಶ್ರೀ ಸಿಂಧನೂರ, ಹುಚ್ಚಿಯಾಗಿ ವಿಜಯಲಕ್ಷ್ಮೀ ಕೂಟಗಿ, ನಟಿಯಾಗಿ ಸುಮಾ ವೈಶಂಪಾಯನ, ಮುಗ್ಧ ಸಂಗಯ್ಯನಾಗಿ ದಯಾನಂದ ಸಾಗರ, ಕಲ್ಲಪ್ಪನ ಪಾತ್ರದಲ್ಲಿ ಮುಕುಂದ, ಮುದುಕಪ್ಪನಾಗಿ ಯೋಗಾನರಸಿಂಹ, ದಾಮೋದರನಾಗಿ ರಮೇಶ ಪೂಜಾರ, ಕಾಶವ್ವನ ಪಾತ್ರದಲ್ಲಿ ಅಂಜನಾದೇವಿ, ಕಾಮಾಕ್ಷಿಯಾಗಿ ಜ್ಯೋತಿ, ನಂದೀಶ ಮತ್ತು ಅಳ್ಳೂರಪ್ಪ ಕೋಟೆ ಅವರು ರಾಜಭಟರ ಪಾತ್ರವರ್ಗದಲ್ಲಿ ಅಭಿನಯಿಸಿ ತಮ್ಮ ತಮ್ಮ ಪಾತ್ರಗಳಿಗೆ ಜೀವ ತುಂಬಿದರು.
ಫಕೀರಪ್ಪ ಗುಳದಳ್ಳಿ ಅವರು ಸಂಗೀತ ಸಂಯೋಜನೆ ಮಾಡಿದರು. ಉಪೇಂದ್ರ ಅವರು ನಿರ್ದೇಶಿಸಿದರು. ವಸ್ತ್ರ ವಿನ್ಯಾಸ, ಪ್ರಸಾದನವನ್ನು ರಮೇಶ ಬಾನವಳ್ಳಿ ನೆರವೇರಿಸಿದರು.

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
