ದಿನದ ಸುದ್ದಿ
ಮಕ್ಕಳಿಗೆ ಶ್ರಮದ ಮಹತ್ವ ಅರಿವಾಗಲು ಬಿಡಿ : ಪೋಷಕರಿಗೆ ದೊಗ್ಗಳ್ಳಿ ಗೌಡ್ರು ಪುಟ್ಟರಾಜು ಕಿವಿಮಾತು

ಸುುದ್ದಿದಿನ, ದಾವಣಗೆರೆ : ಮಕ್ಕಳು ಕೇಳಿದ್ದನ್ನೆಲ್ಲಾ ಕೊಡಿಸಬೇಡಿ. ಅವರಿಗೆ ಕೊರತೆಯ ಮಹತ್ವ ಅರಿವಾಗಲು ಬಿಡಿ ಮತ್ತು ಪ್ರಾಮಾಣಿಕ ಪರಿಶ್ರಮದ ಮೂಲಕವೇ ಬಯಸಿದ್ದನ್ನು ಪಡೆಯುವಂತೆ ಪ್ರೇರೇಪಿಸಿ ಎಂದು ದಾವಣಗೆರೆ ಜೆ.ಎಚ್ ಪಟೇಲ್ ಕಾಲೇಜಿನ ಕಾರ್ಯದರ್ಶಿ ದೊಗ್ಗಳ್ಳಿ ಗೌಡ್ರು ಪುಟ್ಟರಾಜು ಪೋಷಕರಿಗೆ ಕಿವಿಮಾತು ಹೇಳಿದರು.
ತಾಲ್ಲೂಕಿನ ಗೋಪನಾಳು ಗ್ರಾಮದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ವಸತಿ ಶಾಲಾ ಆವರಣದಲ್ಲಿ ದಿನಾಂಕ : 19/01/2019 ರ ಸಂಜೆ 4 ಗಂಟೆಗೆ ಆಯೋಜಿಸಲಾಗಿದ್ದ 2018 – 19 ನೇ ಸಾಲಿನ ಶೈಕ್ಷಣಿಕ ಸಾಲಿನ “ ವರ್ಷೋತ್ಸವ – ಪೋಷಕರ ಹರ್ಷೋತ್ಸವ ” ಕಾರ್ಯಕ್ರಮದಲ್ಲಿ ಅವರು ಸಮಾರೋಪ ನುಡಿಗಳನ್ನಾಡಿದರು.
ಮಕ್ಕಳಿಗೆ ಬೆವರಿನ ಪಾಠ ಅರಿಯಲು ಬಿಡಿ. ಮನಸ್ಸು ಸಮಾಜಕ್ಕೆ ತೆರೆದುಕೊಂಡು ಕಷ್ಟ – ಕಾರ್ಪಣ್ಯಗಳ ತಿಳಿವಳಿಕೆ ಮೂಲಕ ಎಳೆಯರು ತಮ್ಮ ಬದುಕನ್ನು ಸ್ವಾವಲಂಬಿಯಾಗಿಸಿಕೊಳ್ಳುವ ಮುಕ್ತ ವಾತಾವರಣ ಕಲ್ಪಿಸಿಕೊಡಿ ಎಂದು ಕರೆ ನೀಡಿದರು.
ಜಾನಪದ ಪರಿಷತ್ನ ದಾವಣಗೆರೆ ಜಿಲ್ಲಾಧ್ಯಕ್ಷರಾದ ವಿಶ್ವನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳ ಸವಾಂಗೀಣ ವಿಕಾಸದಲ್ಲಿ ಶಿಕ್ಷಕರೊಂದಿಗೆ ಪೋಷಕರು ಮತ್ತು ಸಮಾಜ ಕೈ ಜೋಡಿಸಿದಾಗ ಅವರ ಭವಿಷ್ಯ ಭವ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಸತಿ ಶಾಲೆಯ ಪ್ರಾಚಾರ್ಯರಾದ ವಿ.ಸಿ ಅಂಜಿನಪ್ಪ ವಾರ್ಷಿಕ ವರದಿ ವಾಚಿಸಿ, ತಮ್ಮ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಪೋಷಕರು, ದಾನಿಗಳು ಮತ್ತು ಶಿಕ್ಷಕರಿಗೆ ವಂದಿಸಿದರು.
ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ಐಗೂರು ಸರ್ಕಾರಿ ಶಾಲೆಯ ಬಡ್ತಿ ಮುಖ್ಯ ಶಿಕ್ಷಕಿ ಎಲ್ಲಮ್ಮ ಶಾನವಾಡ ಅವರು ಮಕ್ಕಳ ಪ್ರತಿಭೆ ಮತ್ತು ವ್ಯಕ್ತಿತ್ವ ವಿಕಸನದ ಕುರಿತು ಮಾತನಾಡುವ ಜೊತೆ, ಸ್ಥಳದಲ್ಲಿಯೇ ಒಂದು ಕವನ ರಚಿಸಿ ಹಾಡಿದ್ದು ವಿಶೇಷವೆನಿಸಿತು.
ಕುಬೇಂದ್ರಪ್ಪ, ಶೇಖನಾಯ್ಕ, ವೆಂಕಟೇಶ್ಮೂರ್ತಿ, ವೀರೇಂದ್ರ ಪಟೇಲ್, ಸಿಂದ್ಯಪ್ಪ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಜರುಗಿದ ವಿವಿಧ ಮನಮೋಹಕ ಸಾಂಸ್ಕøತಿಕ ಕಾರ್ಯಕ್ರಮಗಳು ನೆರೆದಿದ್ದ ಸಾವಿರಕ್ಕೂ ಹೆಚ್ಚು ಪೋಷಕರು ಮತ್ತು ಪ್ರೇಕ್ಷಕರ ಮನ ಸೂರೆಗೊಂಡವು.

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
