ದಿನದ ಸುದ್ದಿ
ಮಂಗನಕಾಯಿಲೆ : ಮಂಕುಬೂದಿ ಎರಚುವ ತಂತ್ರ ಯಾರ ರಕ್ಷಣೆಗಾಗಿ?

ಮಂಗನಕಾಯಿಲೆ ಇದೀಗ ಜಿಲ್ಲೆಯಾದ್ಯಂತ ವ್ಯಾಪಿಸಿರುವುದು ಅಧಿಕೃತವಾಗಿದೆ.ಈ ಹಿಂದೆ ಯಾವುದೋ ಒಂದು ಗ್ರಾಮ, ಪಂಚಾಯ್ತಿ ವ್ಯಾಪ್ತಿಯಲ್ಲಿ ರೋಗ ಕಾಣಿಸಿಕೊಳ್ಳುತ್ತಲೇ ಆರೋಗ್ಯ, ಅರಣ್ಯ ಮುಂತಾದ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ರೋಗ ತಡೆಯಲಾಗುತ್ತಿತ್ತು. ಅಂತಹ ಹೊಣೆಗಾರಿಕೆಯನ್ನು ಜಿಲ್ಲಾಡಳಿತ ಸಕಾಲದಲ್ಲಿ ನಿರ್ವಹಿಸುವ ಮೂಲಕ ಜೀವಹಾನಿ ತಡೆಯಲಾಗುತ್ತಿತ್ತು.
ಆದರೆ ಈ ಬಾರಿ ಕಳೆದ ಸರಿಸುಮಾರು ಮೂರು ತಿಂಗಳಿನಿಂದ ರೋಗ ತಡೆರಹಿತವಾಗಿ ಹಬ್ಬುತ್ತಲೇ ಇದೆ. ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ಪ್ರಮಾಣದಲ್ಲಿ ಸಾವು ಸಂಭವಿಸಿವೆ. ಈಗಲೂ ದಿನಂಪ್ರತಿ ಹತ್ತಾರು ಜನರು ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ನೂರಾರು ಮಂದಿ ವಿವಿಧ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂದರೆ ರೋಗ ತಡೆ ಮತ್ತು ಮುಂಜಾಗ್ರತಾ ಕ್ರಮಗಳಲ್ಲಿ ಗಂಭೀರ ಲೋಪಗಳಾಗಿವೆ. ಆರಂಭದಲ್ಲಿ ಎಲ್ಲಾ ಇಲಾಖೆಗಳೂ ರೋಗವನ್ನು ನಿರ್ಲಕ್ಷಿಸಿದ್ದರೂ ಆರು ಸಾವುಗಳ ಬಳಿಕ ಸಾರ್ವಜನಿಕ ಒತ್ತಡದ ಹಿನ್ನೆಲೆಯಲ್ಲಿ ಸ್ಥಳೀಯ ಪಂಚಾಯ್ತಿಗಳ ಕಾಳಜಿಯ ಕಾರಣದಿಂದ ಇದೀಗ ಸ್ಥಳೀಯ ಸಿಬ್ಬಂದಿ ಸಾಕಷ್ಟು ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ.
ಆದರೆ ಆರಂಭದಲ್ಲಿ ಪದ್ಮಾ ಕೋಮರಾಜ್(ಮೊದಲ ಪ್ರಕರಣ) ಸೇರಿದಂತೆ ಶ್ವೇತಾ ಜೈನ್ ಅವರ ಪ್ರಕರಣಗಳಲ್ಲಿ ಸಂಪೂರ್ಣ ಲೋಪ ಅಗಿರುವುದು ತಾಲೂಕು ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗಳಲ್ಲಿ. ಆಸ್ಪತ್ರೆಗಳಲ್ಲಿ ಅದು ಮಂಗನಕಾಯಿಲೆ ಎಂಬುದು ದೃಢಪಟ್ಟ ಬಳಿಕ ಕೂಡ ಅಗತ್ಯ ಚಿಕಿತ್ಸೆ ಮತ್ತು ಕಾಳಜಿ ತೋರುವಲ್ಲಿ ಗಂಭೀರ ಲೋಪವಾಗಿ ಅಮೂಲ್ಯ ಜೀವಗಳು ಬಲಿಯಾದವು.
ಈ ಆಸ್ಪತ್ರೆಗಳಲ್ಲಿ; ಸಾಗರ ಸಾರ್ವಜನಿಕ ಆಸ್ಪತ್ರೆ ಆಡಳಿತ ಹೊಣೆಗಾರಿಕೆ ಅಲ್ಲಿನ ವೈದ್ಯಾಧಿಕಾರಿ ಡಾ ಬೋಸ್ಲೆ ಅವರದ್ದಾದರೆ, ಮೆಗ್ಗಾನ್ ಆಸ್ಪತ್ರೆಯ ಹೊಣೆಗಾರಿಕೆ ನೇರವಾಗಿ ಅದರ ನಿರ್ದೇಶಕ ಡಾ ಲೇಪಾಕ್ಷಿ ಅವರದ್ದು. ಅಂತಿಮವಾಗಿ ಈ ಎರಡೂ ಆಸ್ಪತ್ರೆಗಳು ಜಿಲ್ಲಾಧಿಕಾರಿಗಳ ಅಧಿಕಾರ ವ್ಯಾಪ್ತಿಯಲ್ಲೇ ಇವೆ.
ಅಲ್ಲದೆ ಶ್ವೇತಾ ಜೈನ್ ಸಾವು ಸಂಭವಿಸುವವರೆಗೂ, ಅರಳಗೋಡು ಜನ ಆಕೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುವವರೆಗೂ ಸ್ವತಃ ಜಿಲ್ಲಾಧಿಕಾರಿಗಳೇ, ಮಂಗನಕಾಯಿಲೆ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಹೋಗದಂತೆ ಮತ್ತು ಮೆಗ್ಗಾನ್ ಸೇರಿದಂತೆ ಸರ್ಕಾರಿ ಅಸ್ಪತ್ರೆಗಳಲ್ಲೇ ದಾಖಲಾಗುವಂತೆ ಬಹಿರಂಗ ಸೂಚನೆ ನೀಡಿದ್ದರು.
ಹಾಗಾದರೆ, ನಿರ್ಲಕ್ಷ್ಯ, ಹೊಣೆಗೇಡಿತನದಿಂದಾಗಿ ಸಂಭವಿಸಿರುವ ಸರಣಿ ಸಾವುಗಳ ಹೊಣೆಗಾರಿಕೆ ಹೊರಬೇಕಾದವರು ಸಾಗರದ ತಾಲೂಕು, ಮೆಗ್ಗಾನ್ ಆಸ್ಪತ್ರೆಗಳ ಆಡಳಿತಾಧಿಕಾರಿಗಳು ಮತ್ತು ಅಂತಿಮವಾಗಿ ಜಿಲ್ಲಾಧಿಕಾರಿಗಳೇ ಅಲ್ಲವಾ?
ಆದರೆ ಆರೋಗ್ಯ ಇಲಾಖೆ ಡಿಎಚ್ಒ ಮತ್ತು ಕೆಎಫ್ಡಿ ವಿಭಾಗದ ವೈದ್ಯರ ತಲೆದಂಡ ನೀಡಿ ತಿಪ್ಪೆಸಾರಿಸುವ ಪ್ರಯತ್ನ ಮಾಡಿದೆ. ನಿಜವಾದ ತಪ್ಪಿತಸ್ಥರನ್ನು ರಕ್ಷಿಸುವ ಮತ್ತು ಅದೇ ಹೊತ್ತಿಗೆ ಜನರಕಣ್ಣಿಗೆ ಮಂಕುಬೂದಿ ಎರಚಿ ಜನರನ್ನು ಮಂಗಮಾಡುವ ಪ್ರಯತ್ನಗಳನ್ನು ಅರ್ಥಮಾಡಿಕೊಳ್ಳಬೇಕಿದೆ.
–ಶಶಿ ಸಂಪಳ್ಳಿ
(ಇವರ ಗಮನಕ್ಕೆ : ಕೆಎಫ್ ಡಿ ಜನಜಾಗೃತಿ ಒಕ್ಕೂಟ,Chief Minister of Karnataka chief secretary of Karnataka, NHRCB, Bjp Shivamogga KPCCPresident, Kpcc Dinesh Gundu Rao)
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
