ಬಹಿರಂಗ
ಚುನಾವಣಾ ಅಕ್ರಮದ ಮೂಲಕ ಸೋಲಿಸಲ್ಪಟ್ಟ ‘ಪ್ರಜಾಪ್ರಭುತ್ವದ ಪಿತ’

1951-52 ಡಿಸೆಂಬರ್-ಜನವರಿ ತಿಂಗಳಲ್ಲಿ ಈ ದೇಶದಲ್ಲಿ ಫ್ರಥಮ ಲೋಕಸಭಾ ಚುನಾವಣೆ ನಡೆಯಿತು. 1952ರ ಜನವರಿ 3 ರಂದು ಮತದಾನ ನಡೆದ ಆ ಚುನಾವಣೆಯಲ್ಲಿ ಅಂಬೇಡ್ಕರರು ಬಾಂಬೆ(ಇಂದಿನ ಮುಂಬೈ) ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಾಂಬೆ ನಗರ ಉತ್ತರ ಕ್ಷೇತ್ರ, ಅಂದಿನ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ದ್ವಿಸದಸ್ಯ ಕ್ಷೇತ್ರವಾಗಿತ್ತು. ಅಂದರೆ ಆ ಕ್ಷೇತ್ರದಿಂದ ಓರ್ವ ಸಾಮಾನ್ಯ ವರ್ಗದ ಸದಸ್ಯ ಮತÀ್ತು ಓರ್ವ ಪರಿಶಿಷ್ಟಜಾತಿಯ ಸದಸ್ಯ ಹೀಗೆ ಇಬ್ಬರೂ ಆಯ್ಕೆಯಾಗಬೇಕಿತ್ತು.
ಈ ಪ್ರಕಾರ ಅಲ್ಲಿ ಚುನಾವಣೆ ಘೋಷಣೆಯಾಗಿ 11ಜನ ನಾಮಪತ್ರ ಸಲ್ಲಿಸಿ ಮೂವರು ನಾಮಪತ್ರ ವಾಪಸ್ ಪಡೆದು ಕಣದಲ್ಲಿ 8ಜನ ಅಭ್ಯರ್ಥಿಗಳು ಉಳಿದರು. ಅಂದಹಾಗೆ ಆ 8ಜನ ಅಭ್ಯರ್ಥಿಗಳಲ್ಲಿ ಪರಿಶಿಷ್ಟಜಾತಿಯ ಅಭ್ಯರ್ಥಿಗಳೂ ಇದ್ದರು ಮತ್ತು ಸಾಮಾನ್ಯ ಅಭ್ಯರ್ಥಿಗಳೂ ಇದ್ದರು ಮತ್ತು ಯಾಕೆ ಹೀಗೆ ಇಬ್ಬರನ್ನೂ ಒಟ್ಟಿಗೆ ಮಾಡಲಾಗಿತ್ತೆಂದರೆ ಪರಿಶಿಷ್ಟರು, ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧಿಸಲು ಅವರೂ ಅರ್ಹರಾದುದರಿಂದ ಸಾಮಾನ್ಯ ಕ್ಷೇತ್ರ ಮತ್ತು ಪರಿಶಿಷ್ಟರ ಕ್ಷೇತ್ರ ಹೀಗೆ ಎರಡನ್ನೂ ಒಟ್ಟಿಗೆ ಮಿಶ್ರ ಮಾಡಲಾಗಿತ್ತು. ಅಂದಹಾಗೆ ಈ ಮಿಶ್ರ ದ್ವಿಸದಸ್ಯ ಕ್ಷೇತ್ರದಲ್ಲಿ ಮೊದಲ ಸ್ಥಾನವನ್ನು ಪರಿಶಿಷ್ಟ ಅಭ್ಯರ್ಥಿಯೇ ಪಡೆದಿದ್ದರೆ ಸಾಮಾನ್ಯ ಅಭ್ಯರ್ಥಿಯಾಗಿ ಪರಿಶಿಷ್ಟಜಾತಿಯ ಅಭ್ಯರ್ಥಿಯೇ ಆಯ್ಕೆಯಾಗಬಹುದಿತ್ತು ಮತ್ತು ಯಥಾಪ್ರಕಾರ ಮೀಸಲು ಕ್ಷೇತ್ರದಿಂದಲೂ ಮತ್ತೋರ್ವ ಪರಿಶಿಷ್ಟ ಆಯ್ಕೆಯಾಗುತ್ತಿದ್ದ. ಅಕಸ್ಮಾತ್ ಮೊದಲ ಸ್ಥಾನದಲ್ಲಿ ಸಾಮಾನ್ಯ ಅಭ್ಯರ್ಥಿಯೇ ಇದ್ದರೆ ಸಹಜವಾಗಿ ಆತ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗುತ್ತಿದ್ದ ಮತ್ತು ಉಳಿದ ಪರಿಶಿಷ್ಟಜಾತಿಯ ಸ್ಥಾನಕ್ಕೆ ಪರಿಶಿಷ್ಟ ಅಭ್ಯರ್ಥಿಗಳಲ್ಲಿ ಯಾರು ಹೆಚ್ಚು ಮತ ಪಡೆದಿರುತ್ತಾರೋ ಅವರು ಆಯ್ಕೆಯಾಗುತ್ತಿದ್ದರು. ಒಟ್ಟಾರೆ ದ್ವಿಸದಸ್ಯ ಸ್ಥಾನದ ಆಯ್ಕೆಯ ಈ ಪ್ರಕ್ರಿಯೆ ಗೊಂದಲಮಯವಾಗೇನು ಇರಲಿಲ್ಲ.
ದ್ವಿಸದಸ್ಯ ಈ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ಹೇಗಿತ್ತೆಂದರೆ ಕಣದಲ್ಲಿ ಅಭ್ಯರ್ಥಿಗಳು 8 ಮಂದಿ ಇದ್ದುದರಿಂದ ಪ್ರತೀ ಮತದಾನ ಕೇಂದ್ರದಲ್ಲಿಯೂ ಪ್ರತೀ ಅಭ್ಯರ್ಥಿಗೆ ಒಂದರಂತೆ 8 ಮತ ಪಟ್ಟಿಗೆಗಳನ್ನು(ಬೂತ್ಗಳನ್ನು) ಇಡಲಾಗಿತ್ತು. ಮತದಾರನಿಗೆ ಸಾಮಾನ್ಯ ಕ್ಷೇತ್ರಕ್ಕೊಂದು ಮತ್ತು ಮೀಸಲು ಕ್ಷೇತ್ರಕ್ಕೊಂದು ಹೀಗೆ ಎರಡು ಬೇರೆ ಬೇರೆ ಬಣ್ಣದ ಮತ ಪತ್ರಗಳನ್ನು ನೀಡಲಾಗಿತ್ತು. ಸಾಮಾನ್ಯ ಕ್ಷೇತ್ರದ ಮತಪತ್ರದಲ್ಲಿ ಪರಿಶಿಷ್ಟ ಅಭ್ಯರ್ಥಿಗಳನ್ನೂ ಒಳಗೊಂಡಂತೆ ಎಲ್ಲಾ ಎಂಟು ಅಭ್ಯರ್ಥಿಗಳ ಹೆಸರು ಮತ್ತು ಚಿಹ್ನೆಗಳಿದ್ದವು. ಪರಿಶಿಷ್ಟರ ಮೀಸಲಿನ ಮತಪತ್ರದಲ್ಲಿ ಕೇವಲ ಪರಿಶಿಷ್ಟ ಅಭ್ಯರ್ಥಿಗಳ ಹೆಸರು ಮತ್ತು ಚಿಹ್ನೆಗಳು ಮಾತ್ರ ಇದ್ದವು. ಮತದಾರ ಆ ಎರಡೂ ಮತಪತ್ರಗಳನ್ನು ಪಡೆದು ಎರಡರಲ್ಲೂ ತನಗೆ ಇಷ್ಟವಾದ ಅಭ್ಯರ್ಥಿಗಳ ಚಿಹ್ನೆಗಳಿಗೆ ಮುದ್ರೆಯೊತ್ತಿ ಸಹಿ ಮಾಡಿ ಸಂಬಂಧಿಸಿದ ಆ ಅಭ್ಯರ್ಥಿಗಳ ಮತಪೆಟ್ಟಿಗೆಗಳಲ್ಲಿ ಮಾತ್ರ ಹಾಕಬೇಕಿತ್ತು.
ಈ ಹಿನ್ನೆಲೆಯಲ್ಲಿ ಮತದಾರನೋರ್ವ ಅಭ್ಯರ್ಥಿಯೊಬ್ಬರಿಗೆ ತಾನು ನೀಡಿದ ಮತವನ್ನು, ಸಂಬಂಧಿತ ಮತಪತ್ರವನ್ನು ಅದೇ ಅಭ್ಯರ್ಥಿಯ ಮತಪೆಟ್ಟಿಗೆಯಲ್ಲಿ ಹಾಕದೆ ಬೇರೆ ಅಭ್ಯರ್ಥಿಯ ಮತಪೆಟ್ಟಿಗೆಗೆ ಹಾಕಿದರೆ ಅದು ಕುಲಗೆಟ್ಟ ಮತವಾಗುತ್ತಿತ್ತು. ಗಮನಾರ್ಹವೆಂದರೆ ಮತದಾರ ತನಗೆ ನೀಡಲಾದ ಎರಡೂ ಮತಪತ್ರಗಳನ್ನು ತನ್ನಿಷ್ಟದ ಒಂದೇ ಅಭ್ಯರ್ಥಿಯ ಮತಪೆಟ್ಟಿಗೆಗೆ ಹಾಕಿದರೂ ಅದರಲ್ಲಿ ಒಂದು ಮತ ಕುಲಗೆಡುತ್ತಿತ್ತು ಈ ನಿಟ್ಟಿನಲ್ಲಿ ಇದನ್ನು ‘ಹಾಗೆ ಮಾಡುವುದು ಅಕ್ರಮ’ ಎಂದು ಅಂದಿನ ಜನಪ್ರತಿನಿಧಿ ಕಾಯಿದೆ ಸ್ಪಷ್ಟವಾಗೇ ಘೋಷಿಸಿತ್ತು. ಇದಲ್ಲದೆ ಮತದಾರ ತನಗೆ ಕೇವಲ ಒಂದು ಓಟು ಹಾಕುವ ಮಾತ್ರ ಇಚ್ಚೆ ಇದೆ, ಇನ್ನೊಂದು ಓಟು ಹಾಕುವ ಇಚ್ಚೆ ಇಲ್ಲ ಎಂದರೆ ಆತ ತನ್ನಿಷ್ಟದ ಆ ಒಂದು ಓಟನ್ನು ಮಾತ್ರ ಹಾಕಿ ಉಳಿದ ಒಂದು ಮತಪತ್ರವನ್ನು ವಾಪಸ್ ಮತಗಟ್ಟೆಯ ಅಧಿಕಾರಿಗೆ ನೀಡುವ ಅವಕಾಶವೂ ದ್ವಿಸದಸ್ಯ ಆ ಕ್ಷೇತ್ರದಲ್ಲಿ ಇತ್ತು.
ಈ ಪ್ರಕಾರ ಅಂಬೇಡ್ಕರರು ಸ್ಪರ್ಧಿಸಿದ್ದ ಬಾಂಬೆ ನಗರ ಉತ್ತರ ಆ ಕ್ಷೇತ್ರಕ್ಕೆ 1952 ಜನವರಿ 3 ರಂದು ಚುನಾವಣೆ ನಡೆದು ಜನವರಿ 7ರಂದು ಮತಎಣಿಕೆ ಪ್ರಾರಂಭವಾಗಿ ಜನವರಿ 11ಕ್ಕೆ ಎಣಿಕೆ ಮುಕ್ತಾಯವಾಯಿತು. ಫಲಿತಾಂಶವನ್ನು ಕ್ರಮಸಂಖ್ಯೆ, ಪಡೆದ ಮತಗಳು ಮತ್ತು ಆ ಅಭ್ಯರ್ಥಿಗಳ ಮತಪೆಟ್ಟಿಗೆಗಳಲ್ಲಿ ಬಿದ್ದ ಬೇರೆ ಅಭ್ಯರ್ಥಿಗಳ ಮತಗಳು ಅರ್ಥಾತ್ ಕುಲಗೆಟ್ಟ ಮತಗಳ ಪ್ರಕಾರ ಪಟ್ಟಿಮಾಡಿ ದಾಖಲಿಸುವುದಾದರೆ..
ಅಭ್ಯರ್ಥಿ ಪಡೆದ ಮತ @ ಕುಲಗೆಟ್ಟ ಮತ
1. ಡಾ.ಅಂಬೇಡ್ಕರ್ * 1,23,576 @ 2921
2. ಅಶೋಕ್ ಆರ್.ಮೆಹ್ತಾ * 1,39,741 @ 5,597
3. ಎಸ್.ಎ.ಡಾಂಗೆ * 96,755 @ 39,165
4. ಗೋಪಾಲ್ ವಿ.ದೇಶ್ಮುಖ್ * 40,786 @ 6,634
5. ವಿಠಲ್ ಬಿ.ಗಾಂಧಿ * 1,49,138 @ 10,881
6. ಕೇಶವ ಬಿ.ಜೋಶಿ * 15,195 @ 1,168
7. ನಾರಾಯಣ್ ಎಸ್.ಕಜ್ರೋಳ್ಕರ್ * 1,38,137 @ 6,892
8. ನೀಲಕಾಂತ್ ಬಿ.ಪಾರುಯೇಕರ್ * 12,560 @ 1,025
ಈ ಪಟ್ಟಿಯ ಪ್ರಕಾರ ಎರಡು ಸ್ಥಾನ ಇದ್ದ ಈ ಕ್ಷೇತ್ರದಲ್ಲಿ ಸಾಮಾನ್ಯ ಕ್ಷೇತ್ರದಿಂದ ಸಾಮಾನ್ಯ ಅಭ್ಯರ್ಥಿಯಾಗಿ ಅತಿ ಹೆಚ್ಚು ಮತ ಪಡೆದ(1,49,138) ವಿಠಲ್ ಬಿ.ಗಾಂಧಿ ಆಯ್ಕೆಯಾದರೆ ಪರಿಶಿಷ್ಟ ಮೀಸಲು ಕ್ಷೇತ್ರದಿಂದ ನಾರಾಯಣ್ ಎಸ್.ಕಜ್ರೋಳ್ಕರ್ 1,38,137 ಮತ ಪಡೆದು ಆಯ್ಕೆಯಾದರು. 1,23,576 ಮತ ಪಡೆದ ಅಂಬೇಡ್ಕರರು ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಜ್ರೋಳ್ಕರ್ ವಿರುದ್ಧ 14,561 ಮತಗಳ ಅಂತರದಿಂದ ಸೋತರೆ ಸಾಮಾನ್ಯ ಕ್ಷೇತ್ರದಲ್ಲಿ ಅಂಬೇಡ್ಕರರ ಎಸ್ಸಿಎಫ್(ಷೆಡ್ಯೂಲ್ಡ್ ಕ್ಯಾಸ್ಟ್ ಫೆಡರೇಷನ್) ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದ ಸೋಷಿಯಲಿಸ್ಟ್ ಪಾರ್ಟಿಯ ಅಶೋಕ್ ಆರ್.ಮೆಹ್ತಾ 1,39,741 ಮತ ಪಡೆದು ಅದೇ ಕಾಂಗ್ರೆಸ್ನ ವಿಠಲ್ ಬಿ.ಗಾಂಧಿಯವರ ಎದುರು 9,397 ಮತಗಳ ಅಂತರದಿಂದ ಪರಾಭವಗೊಂಡಿದ್ದರು.
ಅಂದಹಾಗೆ ಇಲ್ಲಿ ವ್ಯಾಪಕವಾಗಿ ದಾಖಲಿಸಲ್ಪಟ್ಟ ಕುಲಗೆಟ್ಟ ಮತಗಳು? ಅಂಬೇಡ್ಕರರು ಸೋತಿದ್ದೇ ಅಥವಾ ಸೋಲಿಸಲ್ಪಟ್ಟಿದ್ದೇ ಕುಲಗೆಡಿಸಲ್ಪಟ್ಟ ಈ ಮತಗಳ ಕಾರಣಕ್ಕಾಗಿ! ಸೋತ ನಂತರ ಸ್ವತಃ ಅಂಬೇಡ್ಕರರು ಈ ಸಂಬಂಧ 1952 ಏಪ್ರಿಲ್ 21ರಂದು ಅಂದಿನ ಚುನಾವಣಾ ಆಯೋಗಕ್ಕೆ ದೂರು ದಾಖಲಿಸುತ್ತಾರೆ ಮತ್ತು ತಮ್ಮ ಆ ದೂರಿನಲ್ಲಿ ಬಾಬಾಸಾಹೇಬರು ಅತಿ ಹೆಚ್ಚು ಕುಲಗೆಟ್ಟ ಮತಗಳನ್ನು ‘ಪಡೆದ’ ಕಮ್ಯೂನಿಸ್ಟ್ ಪಕ್ಷದ ನಾಯಕ ಶ್ರೀಪಾದ ಅಮೃತ ಡಾಂಗೆ ಮತ್ತು ಪಕ್ಷೇತರ ಅಭ್ಯರ್ಥಿ ಗೋಪಾಲ್ ವಿ.ದೇಶ್ಮುಖ್, ಈ ಇಬ್ಬರೂ ಅಭ್ಯರ್ಥಿಗಳು ನಡೆಸಿದ ಅಕ್ರಮಗಳನ್ನು ಹೂಡಿದ ವಾಮಮಾರ್ಗಗಳನ್ನು ಹೇಳುತ್ತಾ ಹೋಗುತ್ತಾರೆ. (ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.17, ಭಾಗ.1, ಪು.411).
ಅಂಬೇಡ್ಕರರ ಆ ದೂರಿನ ಮುಖ್ಯಾಂಶಗಳನ್ನು ಪ್ರಸ್ತಾಪಿಸುವುದಾದರೆ, ಮೊದಲೇ ಹೇಳಿದ ಹಾಗೆ ಒಬ್ಬ ಮತದಾರ ತನ್ನ ಎರಡೂ ಓಟುಗಳನ್ನು ಒಬ್ಬನೇ ಅಭ್ಯರ್ಥಿಯ ಮತಪೆಟ್ಟಿಗೆಗೆ ಹಾಕುವುದು ತಪ್ಪು, ಅದು ಕುಲಗೆಡುತ್ತದೆ. ಆದರೆ ಆಶ್ಚರ್ಯವೆಂದರೆ ಹಾಗೆ ಮತಗಳನ್ನು ಕುಲಗೆಡಿಸಲೆಂದೇ ಮೇಲ್ಕಂಡ ಈ ಇಬ್ಬರು ಅಭ್ಯರ್ಥಿಗಳು ಚುನಾವಣೆಯಲ್ಲಿ ಭರಪೂರ ಪ್ರಚಾರ ನಡೆಸಿದ್ದರು. ಹೀಗೆ ಮತಗಳನ್ನು ಕುಲಗೆಡಿಸುವುದರಿಂದ ತಾವು ಗೆಲ್ಲಲಾಗುವುದಿಲ್ಲ ಎಂದು ಈ ಇಬ್ಬರೂ ಅಭ್ಯರ್ಥಿಗಳಿಗೂ ಗೊತ್ತಿತ್ತು. ಆದರೆ ಅವರ ಅಂತಹ ನಡೆಯ ಒಟ್ಟಾರೆ ಉದ್ದೇಶ? ಅಂಬೇಡ್ಕರರನ್ನು ಸೋಲಿಸುವುದಾಗಿತ್ತು!
ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ಅಂದರೆ 39,165 ಕುಲಗೆಟ್ಟ ಮತಗಳನ್ನು ಪಡೆದ ಕಮ್ಯೂನಿಸ್ಟ್ ನಾಯಕ ಎಸ್.ಎ.ಡಾಂಗೆ ಪ್ರಚಾರದ ಸಮಯದಲ್ಲಿ ಹೊರಡಿಸಿದ್ದ ಒಂದು ಕರಪತ್ರದಲ್ಲಿ ಕಣದಲ್ಲಿರುವ ಪ್ರಚಂಡ ಅಭ್ಯರ್ಥಿ ತಾನಾಗಿದ್ದು ಮತದಾರರು ‘ತಮ್ಮೆರಡು ಓಟುಗಳನ್ನು’ ನನಗೇ ನೀಡಬೇಕು ಎಂದು ಆಗ್ರಹಿಸಿದ್ದರು! ಅಲ್ಲದೆ ಅದೇ ಡಾಂಗೆಯವರು ತಮ್ಮ ಪಕ್ಷ ಕಮ್ಯೂನಿಸ್ಟ್ ಪಕ್ಷದ ಮುಖವಾಣಿ ‘ಯುಗಾಂತರ’ ಎಂಬ ಮರಾಠಿ ವಾರಪತ್ರಿಕೆಯಲ್ಲಿ ಹೊರಡಿಸಿದ್ದ ಜಾಹೀರಾತಿನಲ್ಲಿ ‘ಮತದಾರರು ತಮ್ಮ ಎರಡೂ ಓಟುಗಳನ್ನು’ ತಮ್ಮ ಒಂದೇ ಡಬ್ಬಕ್ಕೆ ಹಾಕಬೇಕು ಎಂದು ತಮ್ಮ ಗುರುತಾದ ‘ಇಂಜಿನ್’ ಚಿತ್ರ ಸಮೇತ ಕೋರಿದ್ದರು! ಡಾಂಗೆಯವರ ಒಟ್ಟಾರೆ ಉದ್ದೇಶ ಸ್ಪಷ್ಟ ಇತ್ತು ಅಂದರೆ ಅದು ತನಗೆ ಲಾಭವಾಗಬೇಕು ಎಂದಲ್ಲ, ಬದಲಿಗೆ ಅಂಬೇಡ್ಕರರಿಗೆ ನಷ್ಟವಾಗಬೇಕು ಎಂದು!
ಈ ಸಂಬಂಧ ಕರಪತ್ರವೊಂದರಲ್ಲಿ ಕುದ್ದು ಅಂಬೇಡ್ಕರರ ಹೆಸರನ್ನೇ ಉಲ್ಲೇಖಿಸಿದ್ದ ಸದರಿ ಡಾಂಗೆ “ಪರಿಶಿಷ್ಟ ಜಾತಿಗೆ ಸೇರಿದ್ದ ಅಂಬೇಡ್ಕರರು ದ್ವಿಸದಸ್ಯ ಈ ಕ್ಷೇತ್ರದಲ್ಲಿ ಸಾಮಾನ್ಯ ಅಭ್ಯರ್ಥಿ ಮತ್ತು ಪರಿಶಿಷ್ಟ ಜಾತಿಯ ಅಭ್ಯರ್ಥಿ ಹೀಗೆ ಎರಡೂ ಸ್ಥಾನಗಳ ಅಭ್ಯರ್ಥಿಯಾಗುವ ಅವಕಾಶ ಹೊಂದಿದ್ದಾರೆ. ಆದುದರಿಂದ ಪರಿಶಿಷ್ಟಜಾತಿಗೆ ಸೇರಿಲ್ಲದ ಮತದಾರರು ಪರಿಶಿಷ್ಟಜಾತಿಯ ಅಂಬೇಡ್ಕರರಿಗೆ ಓಟು ಕೊಟ್ಟರೆ ಅದು ಪರಿಶಿಷ್ಟರ ಮತ ಹಕ್ಕನ್ನು ಕಸಿದುಕೊಂಡಂತೆ ಆಗುತ್ತದೆ. ಆದ್ದರಿಂದ ಮತದಾರರು ತಮ್ಮ ಎರಡೂ ಮತಗಳನ್ನು ನನ್ನ ‘ಇಂಜಿನ್’ ಗುರುತಿಗೇ ನೀಡಿ”!
ಅಬ್ಬಾ! ಎಂತಹ ತಂತ್ರ! ಸಾಮಾನ್ಯ ಕ್ಷೇತ್ರ ಆಗಿದ್ದ ಆ ಬಾಂಬೆ ಉತ್ತರ ಕ್ಷೇತ್ರದಿಂದ ಅಂಬೇಡ್ಕರ್ ಕೇವಲ ಪರಿಶಿಷ್ಟರ ಓಟುಗಳಿಂದ ಮಾತ್ರ ಗೆಲ್ಲಬೇಕಂತೆ, ಪರಿಶಿಷ್ಟಜಾತಿಗೆ ಸೇರಿಲ್ಲದ ಮತದಾರರು ಅಂಬೇಡ್ಕರರಿಗೆ ಮತ ಹಾಕಿದರೆ ಅದು ಪರಿಶಿಷ್ಟರ ಹಕ್ಕನ್ನು ಕಸಿದುಕೊಂಡಂತೆಯಂತೆ. ಆ ಕಾರಣಕ್ಕಾಗಿ ಮತದಾರ ಎರಡೂ ಓಟುಗಳನ್ನು ಒಬ್ಬ ವ್ಯಕ್ತಿಯ ಡಬ್ಬಕ್ಕೇ ಹಾಕಿ ತನ್ನ ಮತವನ್ನು ಕುಲಗೆಡಿಸಿಕೊಳ್ಳಬೇಕಂತೆ! ಈ ನಿಟ್ಟಿನಲ್ಲಿ ಈ ಚುನಾವಣೆಯಲ್ಲಿ ಡಾಂಗೆಯವರು ತಮ್ಮ ಕುಯುಕ್ತಿಯ ಇಂಥ ನಡೆಯಿಂದ ಮತದಾರರನ್ನು ಎಷ್ಟು ದಿಕ್ಕುತಪ್ಪಿಸುವುದು ಸಾಧ್ಯವೋ ಅಷ್ಟೂ ದಿಕ್ಕುತಪ್ಪಿಸಿದರು ತನ್ಮೂಲಕ ಅಂಬೇಡ್ಕರರು ಚುನಾವಣೆಯಲ್ಲಿ ಸೋಲುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು! ಹೇಗೆಂದರೆ ಕುಲಗೆಟ್ಟ ಒಟ್ಟು ಮತಗಳು 74,333. ಅದರಲ್ಲಿ ಡಾಂಗೆಯವರ ಇಂತಹ ಅಪಪ್ರಚಾರದಿಂದ ಬರೋಬ್ಬರಿ ಅವರೊಬ್ಬರಿಗೇ ಬಿದ್ದ ಕುಲಗೆಟ್ಟ ಮತಗಳೇ 39,165! ಅಂದಹಾಗೆ ಅಂಬೇಡ್ಕರ್ ಸೋತದ್ದು? 14,561 ಮತಗಳಿಂದ! ಈ ಹಿನ್ನೆಲೆಯಲ್ಲಿ ಅಂಬೇಡ್ಕರರ ಸೋಲಿನ ಅಂತರಕ್ಕಿಂತ ಮೂರು ಪಟ್ಟು ಹೆಚ್ಚು ಮತ ಕುಲಗೆಡಿಸುವಲ್ಲಿ ಡಾಂಗೆ ಯಶಸ್ವಿಯಾಗಿದ್ದರು. ಡಾಂಗೆಯವರ ಇಂತಹ ಹೀನ ತಂತ್ರವನ್ನು ತಮ್ಮ ಆ ಚುನಾವಣಾ ದೂರಿನಲ್ಲಿ ಅಂಬೇಡ್ಕರರು ಸಾಕ್ಷಿ ಸಮೇತ, ಅಂದರೆ ಕರಪತ್ರ ಪ್ರತಿ, ಪೇಪರ್ ಕಟಿಂಗ್ಗಳನ್ನು ಲಗತ್ತಿಸುವುದರ ಜೊತೆ ಕ್ರಮ ಕೈಗೊಳ್ಳಬೇಕೆಂದು ಆಯೋಗಕ್ಕೆ ಅರುಹಿದ್ದರು.
ಮುಂದುವರಿದು ಅಂಬೇಡ್ಕರರು ಮತ್ತೋರ್ವ ಅಭ್ಯರ್ಥಿಯ ಅಪಪ್ರಚಾರವನ್ನು ಸಾಕ್ಷಿ ಸಮೇತ ದಾಖಲಿಸಿದ್ದರು. ಅದು ಪಕ್ಷೇತರ ಅಭ್ಯರ್ಥಿ ಹಿಂದುತ್ವವಾದಿ ಗೋಪಾಲ್ ವಿ.ದೇಶ್ಮುಖ್ರವರಿಗೆ ಸಂಬಂಧಿಸಿದ್ದು. ಸದರಿ ದೇಶ್ಮುಖ್ ‘ವಿವಿಧ ವೃತ್ತಾ’ ಎಂಬ ಪತ್ರಿಕೆಯಲ್ಲಿ ಡಿಸೆಂಬರ್ 31, 1951ರಲ್ಲಿ ಹೊರಡಿಸಿದ್ದ ಪತ್ರಿಕಾ ಹೇಳಿಕೆಯಲ್ಲಿ “ಬಾಂಬೆ ಉತ್ತರ ಕ್ಷೇತ್ರವು ದ್ವಿಸದಸ್ಯ ಸಾಮಾನ್ಯ ಕ್ಷೇತ್ರವಾಗಿದ್ದು ಇಲ್ಲಿ ಎರಡೂ ಸ್ಥಾನಗಳನ್ನು ಪರಿಶಿಷ್ಟರೇ ಗೆಲ್ಲುವಂತಹ ತಂತ್ರವನ್ನು ಅಂಬೇಡ್ಕರರು ರೂಪಿಸಿದ್ದಾರೆ. ಆ ಕಾರಣದಿಂದ ಮತದಾರರು ಅಂಬೇಡ್ಕರರ ಇಂತಹ ತಂತ್ರವನ್ನು ಸೋಲಿಸಲು ತಮ್ಮ ಎರಡೂ ಓಟುಗಳನ್ನು ಅಂಬೇಡ್ಕರರನ್ನು ಹೊರತು ಪಡಿಸಿ ಇತರರಿಗೆ ನೀಡಿ. ಆ ಮೂಲಕ ಪರಿಶಿಷ್ಟೇತರರೂ ಆಯ್ಕೆಯಾಗುವಂತೆ ಮಾಡಿ” ಎಂದಿದ್ದರು. ಮುಂದುವರಿದು ಅದೇ ದೇಶ್ಮುಖ್ ಅದೇ ‘ವಿವಿಧ ವೃತ್ತಾ’ ಪತ್ರಿಕೆಯಲ್ಲಿ “ಮತದಾರನೋರ್ವ ಹಿಂದೂ ಅಭ್ಯರ್ಥಿಯ ಪೆಟ್ಟಿಗೆಯಲ್ಲಿ ಮಾತ್ರ ತನ್ನ ಎರಡೂ ಮತಗಳನ್ನು ಹಾಕಬೇಕು ಮತ್ತು ಅದು ಯಾವುದೇ ರೀತಿಯಲ್ಲೂ ಕಾನೂನಿಗೆ ವಿರುದ್ಧವಲ್ಲ” ಎಂಬ ಹೇಳಿಕೆ ನೀಡಿ ಕೋಮುಭಾವವನ್ನು ಬಹಿರಂಗವಾಗೇ ಬಡಿದೆಬ್ಬಿಸಿದ್ದರು! (ಇಲ್ಲಿ ದೇಶ್ಮುಖ್ರ ‘ಹಿಂದೂ ಅಭ್ಯರ್ಥಿಗೆ ಮಾತ್ರ’ ಎಂಬ ಪದವನ್ನು ಗಮನಿಸಬೇಕು! ಅಂದರೆ ಅಂಬೇಡ್ಕರರು ಒಟ್ಟಾರೆ ಪರಿಶಿಷ್ಟರು ಹಿಂದೂಗಳಲ್ಲ ಎಂಬುದು ಆ ಕಾಲದಲ್ಲೇ 1952ರಲ್ಲೇ ಸ್ಪಷ್ಟ.) ಈ ಸಂಬಂಧ ದೇಶ್ಮುಖ್ರ ಇಂತಹ ಕೋಮುಭಾವದ ಪತ್ರಿಕಾ ಹೇಳಿಕೆಯ ವರದಿಯ ತುಣುಕನ್ನೂ ಸಹ ಅಂಬೇಡ್ಕರರು ತಮ್ಮ ಆ ಚುನಾವಣಾ ತಕರಾರು ಅರ್ಜಿಯ ಜೊತೆ ಲಗತ್ತಿಸಿದ್ದರು.
ಒಟ್ಟಾರೆ ಹೇಳುವುದಾದರೆ ಕಮ್ಯೂನಿಸ್ಟ್ ನಾಯಕ ಶ್ರೀಪಾದ ಅಮೃತ ಡಾಂಗೆ, ಹಿಂದುತ್ವವಾದಿ ನಾಯಕ ಗೋಪಾಲ್ .ವಿ.ದೇಶ್ಮುಖ್ ಇಬ್ಬರೂ “ವಯಕ್ತಿಕವಾಗಿ ಅವರಿಬ್ಬರಿಗು ಯಾವುದೇ ಲಾಭವಾಗದಿದ್ದರೂ ಅಂಬೇಡ್ಕರರ ಗೆಲುವಿನ ಸಂಭವವನ್ನು ತಪ್ಪಿಸುವ ಏಕೈಕ ಉದ್ದೇಶ ಇಟ್ಟುಕೊಂಡು ಎರಡೂ ಓಟುಗಳನ್ನು ತಮಗೆ ಹಾಕಿ” ಎಂಬ ಚುನಾವಣಾ ಹೀನ ತಂತ್ರ ಹೆಣೆದು, ಮತದಾರರನ್ನು ಗೊಂದಲಗೊಳಿಸುವಲ್ಲಿ ಯಶಸ್ವಿಯಾದರು. ಇದನ್ನು ಉಲ್ಲೇಖಿಸುತ್ತಾ ಅಂಬೇಡ್ಕರರು ತಮ್ಮ ಆ ಚುನಾವಣಾ ದೂರಿನಲ್ಲಿ ಸದರಿ ಬಾಂಬೆ ಸಿಟಿ ಉತ್ತರ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಈ ಇಬ್ಬರು ಅಭ್ಯರ್ಥಿಗಳ ಇಂತಹ ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ಅನೂರ್ಜಿತಗೊಳಿಸಿ ಮರುಚುನಾವಣೆ ನಡೆಸಬೇಕು ಎಂದು ಕೋರಿದರು.
ಅಂತೆಯೇ ಅಂಬೇಡ್ಕರರು ಸಲ್ಲಿಸಿದ ಆ ಚುನಾವಣಾ ದೂರಿನ ವಿಚಾರಣೆ ಶ್ರೀ ಎನ್.ಜೆ.ವಾಡಿಯಾ, ಶ್ರೀ ಎಂ.ಕೆ.ಲಲ್ಕಾಕ, ಶ್ರೀ ಜಿ.ಪಿ.ಮುರುಡೇಶ್ವರ್ ರವರನ್ನೊಳಗೊಂಡ ಚುನಾವಣಾ ಟ್ರಿಬ್ಯೂನಲ್ನಲ್ಲಿ ನಡೆಯುತ್ತದೆ ಮತ್ತು ಸ್ವತಃ ಅಂಬೇಡ್ಕರರೇ ಆ ಟ್ರಿಬ್ಯೂನಲ್ ಮುಂದೆ ವಿಚಾರಣೆಗೆ ಹಾಜರಾಗಿ ಜನಪ್ರತಿನಿಧಿಗಳ ಕಾಯ್ದೆ ಸೆಕ್ಷನ್ 123(2)ರ ಅಡಿಯಲ್ಲಿ ಚುನಾವಣೆಯಲ್ಲಿ ಮತದಾರರ ಮೇಲೆ ‘ಅಕ್ರಮ ಪ್ರಭಾವ’ ಬೀರಿದ ಆ ಇಬ್ಬರು ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ, ಸೆಕ್ಷನ್ 100ರ ಪ್ರಕಾರ “ಭಾರಿ ಅಕ್ರಮದ ಆಧಾರದಲ್ಲಿ ಸದರಿ ಚುನಾವಣೆಯನ್ನು ರದ್ದುಪಡಿಸುವಂತೆ””ಪ್ರಬಲ ವಾದ ಮಂಡಿಸುತ್ತಾರೆ. ಅಂದಹಾಗೆ ಜನಪ್ರತಿನಿಧಿ ಕಾಯ್ದೆ ಅಂದಿನ ನಿಯಮ 25(1)ರ ಪ್ರಕಾರವೇ ‘ಮತದಾರನೊಬ್ಬ ತನ್ನ ಎರಡೂ ಮತವನ್ನೂ ಒಂದೇ ಬ್ಯಾಲಟ್ ಬಾಕ್ಸ್ನಲ್ಲಿ ಹಾಕುವುದು ಕಾನೂನಿಗೆ ವಿರುದ್ಧ’.
ಹೀಗಿರುವಾಗ ಸ್ಪರ್ಧಿಸಿದ್ದ ಅಭ್ಯರ್ಥಿಗಳೇ ಕಾನೂನಿಗೆ ವಿರುದ್ಧವಾದ ಇಂತಹ ಕ್ರಿಯೆ ನಡೆಸಿ ಎಂದು ಮತದಾರರಿಗೆ ಬಹಿರಂಗವಾಗಿ ಪತ್ರಿಕಾ ಪ್ರಕಟಣೆಗಳ ಮೂಲಕ ಆಗ್ರಹಿಸುತ್ತಾರೆ ಎಂದರೆ ಇದು ಚುನಾವಣಾ ಅಕ್ರಮದ ಉದ್ದೇಶಪೂರ್ವಕ ಆಚರಣೆಯಲ್ಲದೆ ಮತ್ತೇನು? ಮತ್ತು ಅದು ನ್ಯಾಯಬದ್ಧ ಚುನಾವಣೆ ಹೇಗಾಗುತ್ತದೆ? ಮುಂದುವರಿದು ಅಂಬೇಡ್ಕರರು “ನಾನು ನನ್ನ ಸ್ಥಾನವನ್ನು 13000 ಓಟುಗಳಿಂದ ಕಳೆದುಕೊಂಡೆ. ಡಾ.ದೇಶ್ಮುಖ್ ಮತ್ತು ಶ್ರೀ ಡಾಂಗೆ ಇಂತಹ ನೀಚ ತಂತ್ರಗೈಯದಿದ್ದರೆ ಕೇವಲ ಶ್ರೀ ಡಾಂಗೆಯವರು ಕುಲಗೆಡಿಸಿದ ಆ 39000 ಓಟುಗಳಲ್ಲೇ ಖಂಡಿತ ನಾನು ಬಹುಸಂಖ್ಯೆಯ ಓಟುಗಳನ್ನು ಪಡೆಯುತ್ತಿದ್ದೆ. (ಆ ಮೂಲಕ ಆಯ್ಕೆಯಾಗುತ್ತಿದ್ದೆ). ಈ ನಿಟ್ಟಿನಲ್ಲಿ ಮತದಾರರ ಮೇಲೆ ಹೀಗೆ ಶ್ರೀ ಡಾಂಗೆ ಮತ್ತು ಶ್ರೀ ದೇಶ್ಮುಖ್ ಅಕ್ರಮ ಪ್ರಭಾವ ಬೀರಿದ್ದಕ್ಕೆ ಸಾಕ್ಷಿಯಾಗಿ ಭಾರೀ ಸಂಖ್ಯೆಯ ಕುಲಗೆಟ್ಟ ಮತಗಳು(73,333) ನ್ಯಾಯಾಲಯದ ಮುಂದಿದೆ.
ನ್ಯಾಯಾಲಯ ಈ ವ್ಯಾಪಕ ಅಕ್ರಮವನ್ನು ಗಣನೆಗೆ ತೆಗೆದುಕೊಳ್ಳಬೇಕು. ಇದರ ಆಧಾರದ ಮೇಲೆ ಬಾಂಬೆ ನಗರ ಉತ್ತರ ಆ ಕ್ಷೇತ್ರದಲ್ಲಿ ವ್ಯಾಪಕ ಪ್ರಮಾಣದ ಚುನಾವಣಾ ಭ್ರಷ್ಟ ಆಚರಣೆಗಳು ನಡೆದಿರುವುದರಿಂದ ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 100ರ ಅಡಿಯಲ್ಲಿ ಆ ಚುನಾವಣೆಯನ್ನು ಅನೂರ್ಜಿತಗೊಳಿಸಬೇಕು” ಎಂದು ವಿಚಾರಣಾ ನ್ಯಾಯಾಲಯದ ಮುಂದೆ ತಮ್ಮ ನಿಖರ ವಾದ ಮಂಡಿಸುತ್ತಾರೆ.
ಅಂಬೇಡ್ಕರರ ಈ ವಾದಕ್ಕೇ ಜಯ ಸಿಕ್ಕಿತೆ? ಖಂಡಿತ ಇಲ್ಲ. ಎಲ್ಲ ಚುನಾವಣಾ ವಿಚಾರಣೆಗಳಂತೆ ಇದೂ ಕೂಡ ‘ಹಿಯರಿಂಗ್ ಮುಂದಕ್ಕೆ’ ಎಂಬಂತೆ ಮುಂದೆ ಹೋಯಿತು. ಅಂಬೇಡ್ಕರರಿಗೆ ನ್ಯಾಯ ಧಕ್ಕಲಿಲ್ಲ. ಆದರೆ ಸತ್ಯ? ಅಂದರೆ ಅಂಬೇಡ್ಕರರನ್ನು ಈ ದೇಶದ ಪ್ರಥಮ ಲೋಕಸಭಾ ಚುನಾವಣೆಯಲ್ಲಿ ತಂತ್ರಗೈದು ಸೋಲಿಸಿದ ಸತ್ಯ? ಅವರೇ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ರೂಪದಲ್ಲಿ ಸದ್ಯ ನಮ್ಮ ಮುಂದೆ ಇದೆ. ಖಂಡಿತ, ಹೆಂಡ, ಬಾಡು, ದುಡ್ಡಿಗೆ ಚುನಾವಣೆ ಗೆಲ್ಲುತ್ತಿರುವ ಈ ಕಾಲದಲ್ಲಿ, ಹಾಗೆಯೇ ವಿವಿಧ ಜಾತಿಗಳನ್ನು ಎತ್ತಿಕಟ್ಟಿ, ಅಭ್ಯರ್ಥಿಗಳ ಮೂಲಕ ನಾನಾ ಅಪಪ್ರಚಾರ ನಡೆಸುವ ಈ ಕಾಲದಲ್ಲಿ ಅಂಬೇಡ್ಕರರ ಅಂದಿನ ಸೋಲು ಕೂಡ ಅಂತಹ ‘ಕಾಲದ’ ಕಹಿ ವಾಸ್ತವವಾಗುತ್ತದೆ.
ಯಾಕೆಂದರೆ ‘ವಿಕಿಪಿಡಿಯಾ ಅಂತರ್ಜಾಲ’ ತಾಣದಲ್ಲಿ ದಾಖಲಾಗಿರುವಂತೆ 1952ರ ಭಾರತದ ಪ್ರಥಮ ಲೋಕಸಭಾ ಚುನಾವಣೆಯ ಅತಿ ಪ್ರಮುಖ ಸೋಲು ಡಾ.ಅಂಬೇಡ್ಕರರದ್ದು! ಇಲ್ಲಿ ಪ್ರತ್ಯೇಕ ಮತದಾನ ಪದ್ಧತಿಯ ಅನಿವಾರ್ಯತೆಯನ್ನು ಕೂಡ ದಾಖಲಿಸಬೇಕಾಗುತ್ತದೆ. 1932ರಲ್ಲಿ ಅಂಬೇಡ್ಕರರು ಒತ್ತಾಯಿಸಿದ ಈ ಮತದಾನ ಪದ್ಧತಿ ಜಾರಿಯಾಗಿದಿದ್ದರೆ 1952ರಲ್ಲಿ ಅವರು ಖಂಡಿತ ಸೋಲುತ್ತಿರಲಿಲ್ಲ. ಜಿ.ವಿ.ದೇಶ್ಮುಖ್ರಂಥ ಹಿಂದೂ ಕೋಮುವಾದಿ ಅದೆಷ್ಟೇ ಕೋಮು ಪ್ರಚೋದನೆ ನಡೆಸಿದ್ದರೂ ‘ಪ್ರತ್ಯೇಕ ಮತದಾನ’ದ ಪರಿಶಿಷ್ಟರೇ ಪರಿಶಿಷ್ಟರಿಗೆ ಮಾತ್ರ ಮತ ಹಾಕುವ ಆ ಪದ್ಧತಿಯಲ್ಲಿ ಬಾಬಾಸಾಹೇಬರು ಸ್ಪಷ್ಟವಾಗಿ ಆಯ್ಕೆಯಾಗಿರುತ್ತಿದ್ದರು. ಆದರೆ ಅಂಬೇಡ್ಕರರ ಆ ಮಹತ್ವದ ಬೇಡಿಕೆಯನ್ನು ಮಹಾತ್ಮ ಗಾಂಧಿ ‘ಅರ್ಥಮಾಡಿಕೊಂಡು’ ಜಾರಿಯಾಗದಂತೆ ತಡೆದರು. ಆ ಮೂಲಕ ಅಂಬೇಡ್ಕರರ ಸೋಲಿಗೆ 1932ರಲ್ಲೇ ಗಾಂಧಿ ಮುನ್ನುಡಿ ಬರೆದಿದ್ದರು.
ಒಟ್ಟಾರೆ ಗಾಂಧಿಯವರ ಮುನ್ನುಡಿ ಮತ್ತು ಅದಕ್ಕೆ ಪೂರಕವಾಗಿ ಡಾಂಗೆ ಮತ್ತು ದೇಶ್ಮುಖ್ರ ಇಂತಹ ಚುನಾವಣಾ ಅಕ್ರಮದ ಬೆನ್ನುಡಿ ಈ ದೇಶದ ಜನರಿಗೆ ಓಟುಹಾಕುವ ಹಕ್ಕುಗಳಿಸಿಕೊಟ್ಟ ‘ಭಾರತದ ಪ್ರಜಾಪ್ರಭುತ್ವದ ಪಿತ’ ಅಂಬೇಡ್ಕರರ ಸೋಲಿಗೆ ಕಾರಣವಾದವು ಎಂಬುದು ಪ್ರಜಾಪ್ರಭುತ್ವದ ವ್ಯಂಗ್ಯವೆನಿಸಿದರೂ ಘಟಿಸಿರುವುದಂತೂ ಸತ್ಯ.
–ರಘೋತ್ತಮ ಹೊ.ಬ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಲಿತ ರಾಜಕೀಯ – ದಲಿತ ಚಳವಳಿಯ ಚಿಲ್ಲರೆ ಅಂಗಡಿಗಳ ಜೋರು ವ್ಯಾಪಾರದ ಈ ಕಾಲದಲ್ಲಿ

- ಬಿ.ಎಲ್.ರಾಜು, ಪ್ರಾಧ್ಯಾಪಕರು, ಸಾಗರ
ನಾವು ನಮಗೆ ಕೇಳಿಕೊಳ್ಳಲೇಬೇಕಾದ ಕೆಲವು ಪ್ರಶ್ನೆಗಳು ನನ್ನನ್ನು ಕಾಡುತ್ತಿವೆ. ಭೂಮಿ, ಬಂಡವಾಳ ಮತ್ತು ರಾಜಕೀಯಾಧಿಕಾರಗಳನ್ನು ಮೇಲ್ಜಾತಿಗಳ ಶಾಶ್ವತ ಕಬ್ಜಾದಲ್ಲಿರಿಸಿ ಸೃಷ್ಟಿಸಲಾಗಿರುವಂತದ್ದು ಜಾತಿವ್ಯವಸ್ಥೆ. ಇದೊಂದು ಶುದ್ದ ರಾಜಕೀಯ- ಆರ್ಥಿಕ ಸಂಚು. ಆದರೆ ಅದು ಕಾರ್ಯಾಚರಣೆ ಮಾಡುವುದು ಸಮಾಜದಲ್ಲಿ. ಸಾಮಾಜಿಕ ಕ್ರಿಯೆಗಳ ಮೂಲಕ ಆ ರಾಜಕೀಯ ಆರ್ಥಿಕ ವ್ಯವಸ್ಥೆಗಳು ತಮ್ಮ ಶಕ್ತಿ- ಸಂಪನ್ಮೂಲಗಳನ್ನು ಕೆಳಜಾತಿಗಳಿಗೆ ನಿರಾಕರಿಸುತ್ತವೆ. ಅದರ ಭಾಗವಾಗಿ ಮಡಿ, ಮೈಲಿಗೆ, ಮೇಲು ಕೀಳು, ಶುದ್ಧ ಅಶುದ್ದ ಪರಿಕಲ್ಪನೆಗಳನ್ನು ಗ್ರಹಿಸಬೇಕು.
ಆ ರಾಜಕೀಯ ಆರ್ಥಿಕ ಶಕ್ತಿ ಸಂಪನ್ಮೂಲಗಳ ಮೇಲೆ ದಲಿತರು ಹಿಡಿತ ಸಾಧಿಸಲು ಎಲ್ಲಿಯವರೆಗೆ ಸಾಧ್ಯವಿಲ್ಲವೊ ಅಲ್ಲಿಯವರೆಗೆ ಜಾತಿ ತಾರತಮ್ಯಗಳು ಸಾಯುವುದಿಲ್ಲ. ಜಾತಿ ವ್ಯವಸ್ಥೆ ನಿರಂತರವಾಗಿ ಮುಂದುವರೆಯುತ್ತದೆ.
ಭೂಮಿ ಬಂಡವಾಳ ರಾಜಕೀಯಾಧಿಕಾರಗಳ ನಿರಂತರ ನಿರಾಕರಣೆಗೆ ಒಳಗಾದ ಈ ದೇಶದ ಸಾವಿರಾರು ತಬ್ಬಲಿ ಕೆಳಜಾತಿ ಸಮುದಾಯಗಳಿಗೆ ಬಿಡುಗಡೆಯ ದಾರಿಯನ್ನು ತೋರಿದ್ದು ಬಾಬಾಸಾಹೇಬರು. ಅವರು ತಮ್ಮ ಚಿಂತನೆ, ಕ್ರಿಯೆ ಮತ್ತು ಹೋರಾಟಗಳ ಮೂಲಕ ರೂಢಿಸಿಕೊಟ್ಟ ಜ್ಞಾನಮಾರ್ಗವೇ ದಲಿತರ ಬಿಡುಗಡೆಯ ದಾರಿ. ಇದೇ ದಾರಿಯಲ್ಲಿ ಹೋಗಿದ್ದರೆ ತಳಸಮುದಾಯಗಳು 21 ನೇ ಶತಮಾನದ ಸವಾಲುಗಳನ್ನೆದುರಿಸಲು ಸಜ್ಜಾದ ಜ್ಞಾನಸಮುದಾಯಗಳಾಗಿ ಮೇಲೇಳುವ ಎಲ್ಲಾ ಅವಕಾಶಗಳಿದ್ದವು.
ಆದರೆ ಜ್ಞಾನ ಮಾರ್ಗವನ್ನು ಬಲವಾಗಿ ಅಪ್ಪಿಕೊಂಡು ಮುನ್ನಡೆಯಬೇಕಿದ್ದ ದಲಿತ ಸಮುದಾಯಗಳು ಆತ್ಮವಂಚನೆಯ ವಿರಾಟ್ ಕಾಲಘಟ್ಟದಲ್ಲಿವೆ. ಸವಲತ್ತುಗಳನ್ನ ಪಡೆದುಕೊಂಡ ದಲಿತರಲ್ಲಿನ ಮಧ್ಯಮ ಮತ್ತು ಮೇಲ್ವರ್ಗಗಳು, ಜಾತಿವ್ಯವಸ್ಥೆಯಲ್ಲಿರುವ ಮೇಲ್ಜಾತಿಗಳ ಎಲ್ಲಾ ವ್ಯಸನಗಳನ್ನು ತಮ್ಮದನ್ನಾಗಿಸಿಕೊಂಡಿವೆ. ಆ ವ್ಯಸನಗಳನ್ನೇ ತಮ್ಮ ಶ್ರೇಷ್ಟತೆಯ ಗುರುತುಗಳನ್ನಾಗಿ ಮಾಡಿಕೊಂಡಿವೆ. ಈ ಎರಡೂ ವರ್ಗಗಳಿಗೆ ಬಾಬಾಸಾಹೇಬರು ಕಟ್ಟಿಕೊಟ್ಟ ಮೌಲ್ಯಗಳಾಗಲಿ, ತೋರಿದ ಜ್ಞಾನಮಾರ್ಗವಾಗಲಿ, ಆಧ್ಯಾತ್ಮದ ದಾರಿಯಾಗಲಿ ಬೇಕಿಲ್ಲದ ಸ್ಥಿತಿಗೆ ಬಂದು ನಿಂತಿವೆ. ತಮ್ಮ ಶೋಷಕ ವ್ಯವಸ್ಥೆಯು ಕಟ್ಟಿಕೊಟ್ಟ ಮನುಪ್ರಣೀತ ಆಚರಣೆ, ಸಂಪ್ರದಾಯಗಳಲ್ಲೆ ಸುಖಿಸುತ್ತಿವೆ. ಇದೊಂತರ ಸ್ಟಾಕ್ ಹೋಂ ಸಿಂಡ್ರೋಪಮ್. ಶೋಷಕನನ್ನೆ ಮೆಚ್ಚಿ ಅನುಕರಿಸುವುದು.
ಇದೇ ದಲಿತ ಮಧ್ಯಮ, ಮೇಲ್ವರ್ಗಗಳು ತಮ್ಮ ಅಹಮ್ಮಿಗೆ, ಅನುಕೂಲಕ್ಕೆ, ಸವಲತ್ತುಗಳಿಗೆ ಏಟುಬಿದ್ದಾಗ ಮಾತ್ರ ಅಂಬೇಡ್ಕರರ ಸಂವಿಧಾನದ ಆಸರೆ ಪಡೆಯುತ್ತವೆ.
ಸಂಖ್ಯೆಯಲ್ಲಿ ಬಹುಸಂಖ್ಯಾತರಾದ ದಲಿತರ ಕೆಳ/ಬಡವರ್ಗ ತನ್ನ ಅಸ್ಥಿತ್ವಕ್ಕಾಗಿ ಅನ್ನ, ಸೂರು, ಬಟ್ಟೆಗಳಂತ ಪ್ರಾಥಮಿಕ ಅವಶ್ಯಕತೆಗಳಿಗಾಗಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳ ನಂತರವೂ ಹೆಣಗಾಡುತ್ತಲೇ ಇವೆ. ಈಗಲೂ ಅವು ಅತ್ಯಂತ ಹೀನಾಯ & ಅನಾಥ ಸ್ಥಿತಿಯಲ್ಲಿವೆ.
ಭಾರತದ ಮಟ್ಟಿಗೆ ತುಂಬಾ ಅತ್ಯಂತ ವೈಚಾರಿಕ ಮಾನವೀಯತೆಯ ನೆಲೆಗಟ್ಟನ್ನ ಪ್ರತಿಪಾದಿಸಿ, ಪ್ರಜಾಪ್ರಭುತ್ವದ ಆತ್ಯಂತಿಕ ಆದರ್ಶಗಳನ್ನು ಸಂವಿಧಾನಕ್ಕೆ ಅಳವಡಿಸಿದ ಬಾಬಾಸಾಹೇಬರ ಚಿಂತನಾಧಾರೆ ಭಾರತೀಯರಿಗೆ ಧಾರಾಳವಾಗಿ ಹರಿದುಬಂದದ್ದು ಅವರ ಮಹಾಪರಿನಿಬ್ಬಾಣದ ನಂತರವೆ.. ಅದರಲ್ಲೂ ಎಪ್ಪತ್ತರ ದಶಕದಲ್ಲಿ.
ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಪ್ರೊ. ಬಿ. ಕೃಷ್ಣಪ್ಪನವರು ದಲಿತ ಸಂಘರ್ಷ ಸಮಿತಿಯನ್ನು ಹುಟ್ಟುಹಾಕಿದ ನಂತರ.
ಪ್ರೊ. ಬಿ.ಕೆ.ಯವರು ಬಾಬಾಸಾಹೇಬರ ಚಿಂತನೆಯನ್ನು ತನ್ನ ಭಾಷಣ, ಹಾಡು, ಹೋರಾಟ, ಪ್ರತಿಭಟನೆಗಳ ಭಾಗವಾಗಿಸಿಕೊಂಡು ರಾಜ್ಯದ ಪ್ರತಿ ದಲಿತರ ಕೇರಿಗೆ ಕೊಂಡೊಯ್ದರು. ಸಾವಿರಾರು ವರ್ಷ ಅಸ್ಪೃಶ್ಯತೆಯ ಕಳಂಕ ಹೊತ್ತು ಗುಲಾಮಗಿರಿಯಲ್ಲೇ ಉಸಿರಾಡಿಕೊಂಡಿದ್ದ ಜನರ ನರನಾಡಿಗಳಿಗೆ ಬಾಬಾಸಾಹೇಬರ ಚಿಂತನೆಯನ್ನು ತುಂಬಿದರು, ಆ ಮೂಲಕ ರಾಜಕೀಯ ಪ್ರಜ್ಞೆ ಮತ್ತು ಪ್ರತಿಭಟನೆಯ ಕೆಚ್ಚನ್ನು ಜಾಗೃತಗೊಳಿಸಿದರು.
ದಲಿತರ ನೋವಿಗಷ್ಟೇ ಅಲ್ಲ, ಹಿಂದುಳಿದ ವರ್ಗಗಳ ಪಾಲಿಗೂ ಭರವಸೆ ತುಂಬಿದವರು ಪ್ರೊ. ಬಿ.ಕೆ.
ಆ ಹೊತ್ತಿಗೆ ಎಚ್ಚೆತ್ತ ದಲಿತ ಅಕ್ಷರಸ್ಥ ತಲೆಮಾರು ಪ್ರೊ. ಬಿ. ಕೃಷ್ಣಪ್ಪನವರ ಹೋರಾಟದ ಸಾಗರಕ್ಕೆ ಹರಿದು ಬಂತು. ಅವರ ಅದಮ್ಯ ಹೋರಾಟದ ಕುಲುಮೆಯಲ್ಲಿ ಕವಿಗಳಾಗಿ, ಹೋರಾಟಗಾರರಾಗಿ, ಸಾಹಿತಿಗಳಾಗಿ, ಯುವ ಮುಂದಾಳುಗಳಾಗಿ ಮೇಲೆದ್ದರು. ಅಷ್ಟರಮಟ್ಟಿಗೆ ಸ್ಥಗಿತಕೊಂಡಿದ್ದ ರಾಜ್ಯದ ರಾಜಕಾರಣವನ್ನು ಬೆಚ್ಚಿಬೀಳಿಸಿದ್ದು, ಫ್ಯೂಡಲ್ ಶಕ್ತಿಗಳನ್ನು ಬಗ್ಗಿಸಿದ್ದ ಪ್ರೊ. ಬಿ. ಕೃಷ್ಣಪ್ಪ ದಲಿತ ಚಳವಳಿ ಕರ್ನಾಟಕದ ಚೆರಿತ್ರೆಯನ್ನು ಇನ್ನೊಂದು ಮಗ್ಗುಲಿಗೆ ಹೊರಳಿಸಿದರು.
ಬಿ. ಕೆ. ಯವರ ನಂತರ ಬಂದ ದಲಿತ ರಾಜಕಾರಣಿಗಳು ಮತ್ತು ಹೋರಾಟದ ದಾರಿಗೆ ನುಸುಳಿದ ಅವಕಾಶವಾದಿಗಳಿಬ್ಬರೂ ಸೇರಿ ಪ್ರೊ. ಬಿ.ಕೆ.ಕಟ್ಟಿದ ದಲಿತ ಚಳವಳಿಯನ್ನು ಒಳಜಾತಿಗಳ ಆಧಾರದ ಮೇಲೆ ಹತ್ತಾರು ಬಣಗಳಾಗಿ ಒಡೆದರು. ಅವರ ವಯಕ್ತಿಕ ದರ್ದುಗಳ ನಿವಾರಣೆಗೆ ಚಳವಳಿಯನ್ನು ಬಲಿಕೊಟ್ಟರು. ದಲಿತರ ಮೇಲಿ ದೌರ್ಜನ್ಯಗಳು ಮಿತಿಮೀರಿದ ಹೊತ್ತಲ್ಲೆ ಈ ದಲಿತ ರಾಜಕಾರಣ-ಚಳವಳಿಯ (ನ)ಕಲಿಗಳು ತಮ್ಮ ಹೊಟ್ಟೆ ತುಂಬಿಸಿಕೊಂಡರು.
ಪ್ರೊ. ಬಿ. ಕೆ. ಯವರೇ ಕೊನೆ..
ಆನಂತರ ರಾಜ್ಯದ ಯಾವ ಮೂಲೆಯಿಂದಲಾದರೂ ಸರಿ, ಅಖಂಡ ದಲಿತ ಸಮುದಾಯದ ಏಳಿಗೆಗೆ ಬದ್ಧನಾದ ಒಬ್ಬನೇ ಒಬ್ಬ ರಾಜಕೀಯ ನಾಯಕನಾಗಲಿ, ಅಖಂಡ ದಲಿತ ಚಳವಳಿಗೆ ಕಟಿಬದ್ಧನಾದ ಒಬ್ಬ ಚಳವಳಿಗಾರನಾಗಲಿ ಈ ಹೊತ್ತಿಗೂ ಹುಟ್ಟಿಬರಲಿಲ್ಲ. ದಲಿತ ರಾಜಕಾರಣ ಮತ್ತು ದಲಿತ ಚಳವಳಿಗಳು ಈಗ ಕೇವಲ ಒಳಜಾತಿಗಳ ಮೇಲಾಟಗಳು ಮಾತ್ರ. ಅಂಬೇಡ್ಕರರು ಕೇವಲ ಒಂದು ಫೋಟೊ ಆಗುವುದು ಮತ್ತು ಬಿ.ಕೆ.ಯವರನ್ನು ಒಂದು ಹೆಸರನ್ನಾಗಿಸಿ ಮರೆವಿಗೆ ಸರಿಸುವುದು ಅವರ ಹಿಡನ್ ಅಜೆಂಡಾ.
ಇದನ್ನು ಸರಳವಾಗಿ ರೂಪಕಾತ್ಮಕವಾಗಿ ಹೇಳುವುದಾದರೆ ದಲಿತರ ಬೀದಿಗಳಲ್ಲಿ ರಾಜಕೀಯ ಮತ್ತು ಚಳವಳಿಗಳ ಚಿಲ್ಲರೆ ಅಂಗಡಿಗಳು ತಲೆ ಎತ್ತಿವೆ. ಒಂದೊಂದು ಅಂಗಡಿಯಲ್ಲಿ ಒಂದೊಂದು ವ್ಯಾಪಾರ. ಲಾಭವೇ ವ್ಯಾಪಾರದ ಅಂತಿಮ ಗುರಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಂಗಳೂರಿನ ಚರ್ಚ್ ಗಳನ್ನು ದ್ವಂಸ ಮಾಡಿದ್ದನೇ ಟಿಪ್ಪು? ಇತಿಹಾಸ ಏನು ಹೇಳುತ್ತೆ?

- ನವೀನ್ ಸೂರಿಂಜೆ
ಟಿಪ್ಪು ಕೊಡವರ ಹತ್ಯಾಕಾಂಡ ನಡೆಸಿರುವುದು ಸುಳ್ಳು ಎಂದು ಇತಿಹಾಸಕಾರರು ಹೇಳಿದ ನಂತರ ಇದೀಗ ಕರಾವಳಿ ಭಾಗದಲ್ಲಿ ಟಿಪ್ಪು ಕ್ರಿಶ್ಚಿಯನ್ನರ ಮರಣಹೋಮ ನಡೆಸಿದ್ದ ಎಂದು ಸುದ್ದಿ ಹರಿಬಿಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 27 ಚರ್ಚುಗಳನ್ನು ಕೆಡವಿದ್ದ ಎಂದು ಸುದ್ದಿ ಹಬ್ಬಿಸಲಾಗ್ತಿದೆ. 1750 ರಲ್ಲಿ ಜನಿಸಿದ ಟಿಪ್ಪು ಸುಲ್ತಾನ್ ಕರಾವಳಿಯಲ್ಲಿ 1784 ರಿಂದ 1799 ರವರೆಗೆ ಅಧಿಪತ್ಯವನ್ನು ಸ್ಥಾಪಿಸಿದ್ದ.
ಈ ಸಂಧರ್ಭದಲ್ಲಿ ಕರಾವಳಿಯಲ್ಲಿ ಬ್ರಿಟೀಷರು ಹೆಚ್ಚು ಸಕ್ರೀಯಗೊಂಡಿದ್ದನ್ನು ಅರಿತಿದ್ದ. ಆ ಕಾರಣಕ್ಕಾಗಿ ಬ್ರಿಟೀಷರ ಪ್ರಾರ್ಥನಾ ಮಂದಿರಗಳ ಬಗ್ಗೆ ಒಂದು ರೀತಿಯ ಸಂಶಯದ ಗಮನವನ್ನು ಇಡುವುದು ಆಗಿನ ರಾಜನೀತಿಯಾಗಿತ್ತು. ಆದರೆ 27 ಚರ್ಚುಗಳನ್ನು ಕೆಡವಿದ್ದ ಎಂಬುದು ಸುಳ್ಳು ಇತಿಹಾಸ. ಅದಕ್ಕಾಗಿ 1784 ರಿಂದ ಟಿಪ್ಪು ಮರಣದವರೆಗೆ ಕರಾವಳಿಯಲ್ಲಿ ಇದ್ದ ಚರ್ಚುಗಳು ಯಾವುದು ಮತ್ತು ಅದರ ಇತಿಹಾಸ ಏನು ಹೇಳುತ್ತದೆ ಎಂಬುದನ್ನು ನೋಡಬೇಕು.
ಕರಾವಳಿಯ ಅತೀ ಪುರಾತನ ಚರ್ಚುಗಳಲ್ಲಿ ಮೊದಲನೆಯದಾಗಿ ಕಾಣುವುದು 1680 ರಲ್ಲಿ ಕಟ್ಟಲ್ಪಟ್ಟ ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಚರ್ಚ್. ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚನ್ನು ಟಿಪ್ಪು ಒಡೆದು ಹಾಕಿರೋ ಬಗ್ಗೆ ಎಲ್ಲೂ ಇತಿಹಾಸ ಹೇಳುವುದಿಲ್ಲ. ಟಿಪ್ಪು ಮರಣದ ನಂತರ ಬ್ರಿಟೀಷರು ಮಿಲಾಗ್ರಿಸ್ ಚರ್ಚನ್ನು ಹೆಚ್ಚು ದೊಡ್ಡದಾಗಿ ಕಟ್ಟಿದರು ಎಂದಷ್ಟೇ ಹೇಳುತ್ತದೆ.
ಅದಕ್ಕಿಂತಲೂ ಹೆಚ್ಚು ಕುತೂಹಲಕರವಾಗಿರೋದು ಮಿಲಾಗ್ರಿಸ್ ವ್ಯಾಪ್ತಿಯ ಸಾಲ್ವಡಾರ್ ಪಿಂಟೋ ಎಂಬ ಅಧಿಕಾರಿಯೇ ಟಿಪ್ಪುವಿನ ಕಾರ್ಯದರ್ಶಿ ಆಗಿದ್ದರು. ಟಿಪ್ಪು ಮರಣದ ನಂತರ ಫಾದರ್ ಮೆಂಡೇಝ್ ಮತ್ತು ಟಿಪ್ಪುವಿನ ಮಾಜಿ ಮುನ್ಶಿ(ಕಾರ್ಯದರ್ಶಿ) ಸಾಲ್ವಡಾರ್ ಪಿಂಟೋ ಜೊತೆ ಸೇರಿ 600 ರೂಪಾಯಿಗಳನ್ನು ಸಂಗ್ರಹಿಸಿ 1811 ರಲ್ಲಿ ವಿಶಾಲ ಮಿಲಾಗ್ರಿಸ್ ಚರ್ಚನ್ನು ಪುನರ್ ನಿರ್ಮಾಣ ಮಾಡಿದರು ಎಂದು ಇತಿಹಾಸ ಹೇಳುತ್ತದೆ. ಇಲ್ಲಿ ಮುಖ್ಯವಾದುದು ಟಿಪ್ಪುವಿನ ಕಾರ್ಯದರ್ಶಿ ಒಬ್ಬ ಕ್ರಿಶ್ಚಿಯನ್ ಆಗಿದ್ದರು ಮತ್ತು ಅವರು ಧರ್ಮಾಭಿಮಾನಿಯಾಗಿದ್ದರು ಎನ್ನುವುದು.
ಇನ್ನು ಉಡುಪಿಯ ಕಲ್ಯಾಣಪುರ ಚರ್ಚ್ ಕೂಡಾ 1680 ರಲ್ಲಿ ಪ್ರಾರಂಭವಾದರೂ ಟಿಪ್ಪುನಿಂದ ಕೆಡವಲ್ಪಟ್ಟಿಲ್ಲ. 1784 ರ ಅವಧಿಯಲ್ಲಿ ಟಿಪ್ಪು ಕರಾವಳಿಯ ಬ್ರಿಟೀಷರ ಆಶ್ರಯತಾಣವನ್ನು ಹುಡುಕಿಕೊಂಡು ಚರ್ಚುಗಳಿಗೆ ಬಂದಾಗ ಕಲ್ಯಾಣಪುರ ಚರ್ಚನ್ನು ಕೆಡವಿದ ಬಗ್ಗೆ ದಾಖಲೆಗಳು ಇಲ್ಲ.
ಇತಿಹಾಸ ಬದಿಗಿಟ್ಟು ಪವಾಡವನ್ನು ಗಮನಿಸಿದರೂ ಕಲ್ಯಾಣಪುರ ಮಿಲಾಗ್ರಿಸ್ ಚರ್ಚಿನ ಪವಾಡದ ಕತೆ ಹೀಗೆ ಹೇಳುತ್ತದೆ : ಟಿಪ್ಪು ಸುಲ್ತಾನ್ ಎಂಬ ರಾಜ ಬ್ರಿಟೀಷರನ್ನು ಹುಡುಕಿಕೊಂಡು ಕಲ್ಯಾಣಪುರ ಪವಾಡ ಮಾತೆಯ ಮಿಲಾಗ್ರಿಸ್ ಚರ್ಚಿಗೆ ದಾಳಿ ಮಾಡಲು ಬಂದ. ಆಗ ಎಲ್ಲೋ ಇದ್ದ ಜೇನು ನೊಣಗಳು ಟಿಪ್ಪುವಿನ ಸೈನ್ಯದ ಮೇಲೆ ಮುತ್ತಿಗೆ ಹಾಕಿದವು. ಸೈನಿಕರು ಓಡಿ ನದಿಯಲ್ಲಿ ಮುಳುಗಿದರೂ ಜೇನುನೊಣಗಳು ಬಿಡಲಿಲ್ಲ. ಕೊನೆಗೂ ಕಲ್ಯಾಣಪುರ ಪವಾಡ ಮಾತೆಯ ಚರ್ಚನ್ನು ಕೆಡವಲಾಗಲಿಲ್ಲ. ಇದು ಊರಿಡೀ ಪ್ರತೀತಿಯಾಗಿ ಹಿಂದೂಗಳು ಕೂಡಾ ಈ ಚರ್ಚನ್ನು ಮಿಲಾಗ್ರಿಯಮ್ಮನ ದೇವಸ್ಥಾನ ಎನ್ನಲಾರಂಬಿಸಿದ್ರು ಎಂಬುದು ಜನಪದೀಯ ಕತೆಯಾಗಿದೆ.
ಇದರ ಬಳಿಕ ಅತ್ಯಂತ ಪುರಾತನ ಚರ್ಚುಗಳ ಪೈಕಿ ನಮಗೆ ಕಾಣಸಿಗುವುದು ಮೂಡಬಿದ್ರೆಯ ಹೊಸಬೆಟ್ಟು ಚರ್ಚ್. 1761 ರಲ್ಲಿ ನಿರ್ಮಾಣಗೊಂಡ ಚರ್ಚಿನ ಇತಿಹಾಸವನ್ನು ಓದಿದಾಗ ಟಿಪ್ಪುವಿನ ಉಲ್ಲೇಖಗಳು ಬರುತ್ತದೆ. ಮೂಡಬಿದ್ರೆಯ ಜೈನ ಅರಸನ ವ್ಯಾಪ್ತಿಗೂ ಬರುತ್ತಿದ್ದ ಈ ಚರ್ಚು ಸ್ಥಳೀಯ ಅರಸನ ಕೆಂಗಣ್ಣಿಗೆ ಗುರಿಯಾಗಿತ್ತು. ಟಿಪ್ಪು ಹಲವು ಚರ್ಚುಗಳ ಬಗ್ಗೆ ಅಸಮಾದಾನ ಹೊಂದಿದ್ದರೂ ಈ ಚರ್ಚಿನ ಉಸಾಬರಿಗೆ ಬಂದಿಲ್ಲ ಎಂದು ಚರ್ಚ್ ಇತಿಹಾಸ ಸ್ಪಷ್ಟವಾಗಿ ಹೇಳುತ್ತದೆ.
1784 ಎಂಬುದು ಟಿಪ್ಪು ಇತಿಹಾಸದಲ್ಲಿ ಅತ್ಯಂತ ಪ್ರಮುಖ ಸಂಧರ್ಭ. ಇದೇ ಇಸವಿಯಲ್ಲಿ ಆತ ಬ್ರಿಟೀಷರನ್ನು ಹತ್ತಿಕ್ಕುವುದಕ್ಕಾಗಿ ಚರ್ಚ್ ಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿರ್ಧಾರ ಮಾಡಿ ಕರಾವಳಿಯಾದ್ಯಂತ ಸೈನಿಕರ ಜೊತೆ ಪರ್ಯಟಣೆ ಮಾಡುತ್ತಾನೆ. ಇದೇ ಸಮಯದಲ್ಲಿ ಅಂದರೆ 1784 ರಲ್ಲಿಯೇ ಕಿನ್ನಿಗೋಳಿ ಸಮೀಪ ಐಕಳದಲ್ಲಿ ಕಿರೆಂ ಚರ್ಚ್ ಅನ್ನು ಕಟ್ಟಲಾಗುತ್ತದೆ. ಚರ್ಚ್ ಕಟ್ಟುತ್ತಿರೋ ಬಗ್ಗೆ ಟಿಪ್ಪು ಗಮನಕ್ಕೆ ಬಂದು ಚರ್ಚ್ ಸ್ಥಳಕ್ಕೆ ಟಿಪ್ಪು ಸೈನಿಕರ ಜೊತೆ ಬರುತ್ತಾನೆ.
ನೇರವಾಗಿ ಚರ್ಚಿಗೆ ದಾಳಿ ಮಾಡುವ ಎಲ್ಲಾ ಅವಕಾಶಗಳು ಟಿಪ್ಪುವಿನಂತಹ ರಾಜನಿದ್ದರೂ ಆತ ಅದನ್ನು ಮಾಡದೇ ಸ್ಥಳೀಯ ಆಡಳಿತವನ್ನು ನೋಡಿಕೊಳ್ಳುತ್ತಿದ್ದ ಐಕಳಬಾವ, ತಾಳಿಪಾಡಿ ಗುತ್ತು, ಏಳಿಂಜೆ ಗುತ್ತಿನ ಬಂಟ ಮನೆತನದವರನ್ನು ಕರೆಸಿ ಮಾತನಾಡುತ್ತಾನೆ. ಬಂಟ ಮನೆತನಗಳವರು ಚರ್ಚಿನ ಬಗ್ಗೆ ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸುವುದಲ್ಲದೆ, ಈ ಚರ್ಚಿಗೆ ನಡೆದುಕೊಳ್ಳುವ ಕ್ರಿಶ್ಚಿಯನ್ನರು ಯಾರೂ ಕೂಡಾ ಬ್ರಿಟೀಷರ ಜೊತೆ ಕೈ ಜೋಡಿಸಿಲ್ಲ ಮತ್ತು ಇವರೂ ನಮ್ಮಂತೆ ಕೃಷಿಕರು ಎಂಬುದನ್ನು ಮನವರಿಕೆ ಮಾಡಿಕೊಡುತ್ತಾರೆ. ತನ್ನ ರಾಜ್ಯದ ಹಿತದೃಷ್ಟಿಯಿಂದ ತನಿಖೆ ನಡೆಸಿದ ಟಿಪ್ಪು, ಆ ಚರ್ಚಿಗೆ ಯಾವ ತೊಂದರೆಯನ್ನೂ ಮಾಡದೇ ಮರಳುತ್ತಾನೆ. ಅದರ ನೆನಪಿಗಾಗಿ ಈಗಲೂ ಪ್ರತೀ ವರ್ಷ ನವೆಂಬರ್ 25 ರಂದು ಈ ಗುತ್ತಿನ ಮನೆತನಗಳಿಗೆ ಬಾಳೆಗೊನೆಯನ್ನು ಇಲ್ಲಿನ ಧರ್ಮಗುರುಗಳು ನೀಡುತ್ತಾ ಬಂದಿದ್ದಾರೆ.
ಟಿಪ್ಪು ಕ್ರಿಶ್ಚಿಯನ್ ವಿರೋಧಿಯಾಗಿರಲಿಲ್ಲ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಜಮಲಾಬಾದ್ ಕೋಟೆ
ಮತ್ತು ಅದರ ಸನಿಹದಲ್ಲಿರುವ ಚರ್ಚ್. 1682 ರಲ್ಲಿ ಹಿಂದೂ ಮರಾಠ ರಾಜ ಸಾಂಭಾಜಿ ಗೋವಾವನ್ನು ಆಕ್ರಮಿಸಿದಾಗ ಕ್ರಿಶ್ಚಿಯನ್ನರು ನಿರಾಶ್ರಿತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಗಡಾಯ್ ಕಲ್ಲು ಎಂಬಲ್ಲಿ ಆಶ್ರಯ ಪಡೆಯುತ್ತಾರೆ. ಅದೇ ಗಡಾಯಿಕಲ್ ಪ್ರದೇಶದಲ್ಲಿ ಟಿಪ್ಪು ಜಮಲಾಬಾದ್ ಕೋಟೆಯನ್ನು ಕಟ್ಟುತ್ತಾನೆ. ಆ ಕೋಟೆಯ ಸುತ್ತಮುತ್ತ ಹಳ್ಳಿಗಳಲ್ಲಿ ಕ್ರಿಶ್ಚಿಯನ್ನು ಇರುತ್ತಾರೆ. ಟಿಪ್ಪು ಕ್ರಿಶ್ಚಿಯನ್ ವಿರೋಧಿ ಆಗಿದ್ದಿದ್ರೆ ಜಮಲಾಬಾದ್ ಕೋಟೆಯ ಸುತ್ತಾಮುತ್ತ ಕ್ರಿಶ್ಚಿಯನ್ನರು ಯಾಕೆ ವಾಸವಾಗ್ತಿದ್ರು ಎಂಬ ಪ್ರಶ್ನೆ ಬರುತ್ತದೆ.
ಅಲ್ಲೇ ಸಣ್ಣ ಗುಡಿಸಲು ರೀತಿಯಲ್ಲಿ ಚರ್ಚ್ ಕೂಡಾ ನಿರ್ಮಿಸಿ ಪ್ರಾರ್ಥನೆ ನಡೆಸುತ್ತಿರುತ್ತಾರೆ. ಯಾವ ಯುದ್ದವೂ ಕ್ರಿಶ್ಚಿಯನ್ನರ ಮೇಲಾಗಲೀ, ಗುಡಿಸಲಿನ ಚರ್ಚಿನ ಮೇಲಾಗಲೀ ಪರಿಣಾಮ ಬೀರದಂತೆ ಟಿಪ್ಪು ನೋಡಿಕೊಳ್ಳುತ್ತಾನೆ. ಟಿಪ್ಪು 1799 ರಲ್ಲಿ ಮರಣ ಹೊಂದಿದ ಬಳಿಕವೂ ಚರ್ಚ್ ಅಲ್ಲೇ ಇರುತ್ತದೆ. 1885 ರ ವೇಳೆಗೆ ಜಮಲಾಬಾದ್ ಕೋಟೆಯ ಸುತ್ತ ಇದ್ದ ಪ್ರದೇಶದಲ್ಲಿ ಕಾಯಿಲೆ ವ್ಯಾಪಿಸಿದ್ದರಿಂದ ಚರ್ಚ್ ಅನ್ನು ಸ್ವಲ್ಪ ದೂರಕ್ಕೆ ಸ್ಥಳಾಂತರಿಸಲಾಯ್ತು.
1784 ರಿಂದ 1799 ರವರೆಗೆ ಕರಾವಳಿಯಲ್ಲಿದ್ದ ಚರ್ಚ್ ಗಳು ಮೂರ್ನಾಲ್ಕು ಮಾತ್ರ. ಉಳಿದಂತೆ ಹಳ್ಳಿಗಳಲ್ಲಿ ಇದ್ದ ಕ್ರಿಶ್ಚಿಯನ್ನರು ದೊಡ್ಡ ಮನೆಯನ್ನು ಆಯ್ಕೆಮಾಡಿಕೊಂಡು ಸಾಮೂಹಿಕ ಪ್ರಾರ್ಥನೆಗೆ ಒಂದೆಡೆ ಸೇರುತ್ತಿದ್ದರು. ಉದಾಹರಣೆಗೆ ಎಸ್ ಇ ಝಡ್ ವಿರೋಧಿ ಹೋರಾಟಗಾರ ಕಳವಾರಿನ ಗ್ರೆಗೋರಿ ಪತ್ರಾವೋ ಮನೆ.
ನಂತರದ ಚರ್ಚುಗಳಿಗೂ ಟಿಪ್ಪುವಿಗೂ ಸಂಬಂಧವೇ ಇಲ್ಲ. ಕಿನ್ನಿಗೋಳಿ ಚರ್ಚ್ 1804 ರಲ್ಲೂ, ಕುಲಶೇಖರ ಕೋರ್ಡೆಲ್ ಚರ್ಚ್ ಮತ್ತು ಬೋಂದೆಲ್ ಚರ್ಚ್ 1873 ರಲ್ಲೂ, ಬೆಳ್ಮನ್ ಚರ್ಚ್ 1894, ಪಾಲಡ್ಕ ಚರ್ಚ್ 1913, ಬಳ್ಕುಂಜೆ ಚರ್ಚ್ 1915, ನಿಡ್ಡೋಡಿ ಚರ್ಚ್ 1937, ನೀರುಡೆ ಚರ್ಚ್ 1945, ಬೋಳ ಚರ್ಚ್ 1964, ಕಟೀಲು ಚರ್ಚ್ 1971, ಮುಂಡ್ಕೂರು ಚರ್ಚ್ 1998 ರಲ್ಲೂ ಪ್ರಾರಂಭವಾಯ್ತು.
ಇದ್ಯಾವುದೂ ಟಿಪ್ಪು ಕಾಲಮಾನದಲ್ಲಿ ಸ್ಥಾಪನೆಯಾದ ಚರ್ಚುಗಳು ಅಲ್ಲ. ಟಿಪ್ಪು ಕಾಲಮಾನದ ಯಾವ ಚರ್ಚಿನ ಇತಿಹಾಸವೂ ಚರ್ಚು ಕೆಡವಿದ ಕತೆಯನ್ನು ಹೇಳುವುದಿಲ್ಲ. ಬದಲಾಗಿ ಬ್ರಿಟೀಷರ ಕಾರಣಕ್ಕಾಗಿ ಚರ್ಚುಗಳ ಪರಿಶೀಲನೆ ನಡೆಸಿದ್ದ ಮತ್ತು ಮನವರಿಕೆಯಾದ ನಂತರ ರಕ್ಷಣೆ ಮಾಡಿದ್ದ ಎಂದಷ್ಟೇ ಇತಿಹಾಸ ಮತ್ತು ಕ್ರಿಶ್ಚಿಯನ್ ಪ್ರಚಲಿತ ಪವಾಡದ ಕತೆಗಳು ಹೇಳುತ್ತದೆ. ಟಿಪ್ಪು ಚರ್ಚ್ ಗಳನ್ನು ಕೆಡವಿದ್ದ ಎನ್ನುವುದು ಇತಿಹಾಸಕ್ಕೂ, ಚರ್ಚಿನ ಪವಾಡಕ್ಕೂ ಮಾಡುವ ಅಪಚಾರವಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
