ದಿನದ ಸುದ್ದಿ
ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ನಿಷೇಧ

ಸುದ್ದಿದಿನ,ಶಿವಮೊಗ್ಗ : ಕಳೆದ ಏಪ್ರಿಲ್ 23ರಂದು ನಡೆದ ಶಿವಮೊಗ್ಗ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 23ರಂದು ಬೆಳಿಗ್ಗೆ 8ಗಂಟೆಯಿಂದ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದ್ದು, ಮತಎಣಿಕೆ ಕಾರ್ಯವು ವ್ಯವಸ್ಥಿತವಾಗಿ ನಡೆಯಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಮಾತನಾಡುತ್ತಿದ್ದರು. ರಾಜ್ಯದ ಕೆಲವು ಮತಕ್ಷೇತ್ರಗಳಲ್ಲಿ ಶಿವಮೊಗ್ಗ ಕ್ಷೇತ್ರವೂ ಕೂಡ ಸೂಕ್ಷ್ಮ ಪ್ರದೇಶವೆಂದು ಚುನಾವಣಾ ಆಯೋಗ ಗುರುತಿಸಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿದೆ ಎಂದರು.
ಮತಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗುವ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾ ಚುನಾವಣಾ ಶಾಖೆಯಿಂದ ಗುರುತಿನ ಪತ್ರ ನೀಡಲಾಗುವುದು. ಗುರುತಿನ ಚೀಟಿ ಹೊಂದಿರದ ಯಾವುದೇ ವ್ಯಕ್ತಿಗೆ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದವರು ತಿಳಿಸಿದರು.
ಮತಎಣಿಕೆ ಕಾರ್ಯಕ್ಕೆ ಆಗಮಿಸಲಿರುವ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಪಾವತಿಸಿ ಪಡೆಯಬಹುದಾದ ಉಪಹಾರ ಗೃಹ ವ್ಯವಸ್ಥೆ, ವಾಹನ ನಿಲುಗಡೆಗೆ ಕಲ್ಪಿಸಲಾಗಿದೆ. ಅಲ್ಲದೆ ಗುರುತಿನ ಚೀಟಿ ಹೊಂದಿದ ಯಾವುದೇ ರಾಜಕೀಯ ಪಕ್ಷಗಳ ಮುಖಂಡರು ಮೊಬೈಲ್ ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಾಧ್ಯಮ ಪ್ರತಿನಿಧಿಗಳು ತಮ್ಮ ಮಾಧ್ಯಮ ಕೇಂದ್ರದಲ್ಲಿದ್ದು ಮೊಬೈಲ್ ಬಳಸಲು ಯಾವುದೇ ಆಕ್ಷೇಪಣೆ ಇರುವುದಿಲ್ಲ ಎಂದವರು ನುಡಿದರು.
ಮತ ಎಣಿಕೆಗೆ ಮುನ್ನ ಅಂದು ಬೆಳಿಗ್ಗೆ 7ಗಂಟೆಯಿಂದ ಸ್ಟ್ರಾಂಗ್ ರೂಂಗಳ ಬಾಗಿಲುಗಳನ್ನು ತೆರೆಯಲಾಗುವುದು. ಎಂಟು ಗಂಟೆಗೆ ಸರಿಯಾಗಿ ಸರ್ವೀಸ್ ಓಟ್ಸ್ ಹಾಗೂ ಪೋಸ್ಟಲ್ ಓಟುಗಳನ್ನು ಹಾಗೂ ಮತಯಂತ್ರಗಳ ಎಣಿಕೆಯನ್ನು ಏಕಕಾಲಕ್ಕೆ ಆರಂಭಿಸಲಾಗುವುದು ಎಂದರು.
ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೂ ಅನ್ವಯವಾಗುವಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಆಯ್ದ ಕೆಲವು ವಿವಿ ಪ್ಯಾಟ್ಗಳ ಮತಗಳನ್ನು ರಾeಕೀಯ ಪಕ್ಷಗಳ ನಿಯೋಜಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಚುನಾವಣಾಧಿಕಾರಿಗಳು ಎಣಿಸುವರು. ಪ್ರತಿ ಸುತ್ತಿನ ಮತಎಣಿಕೆ ಪೂರ್ಣಗೊಂಡಾಗ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಹಿ ಮಾಡಬೇಕಾಗುವುದು. ಆಕ್ಷೇಪಣೆಗಳಿದ್ದಲ್ಲಿ ತಕ್ಷಣ ಮತಎಣಿಕೆ ಸಿಬ್ಬಂಧಿಗಳಿಗೆ ತಮ್ಮ ಅಸಮ್ಮತಿ ಸೂಚಿಸಿ ಪುನರ್ ಎಣಿಕೆಗೆ ಬೇಡಿಕೆ ಸಲ್ಲಿಸಬಹುದಾಗಿದೆ. ಸಹಿ ಹಾಕಿದ ನಂತರ ಪುನರ್ ಎಣಿಕೆಗೆ ಅವಕಾಶವಿರುವುದಿಲ್ಲ ಎಂದವರು ತಿಳಿಸಿದರು.
ಮತಎಣಿಕೆಯ ಈ ಎಲ್ಲಾ ಪ್ರಕ್ರಿಯೆಗಳಲ್ಲಿ ರಾಜಕೀಯ ಪಕ್ಷಗಳ ನಿಯೋಜಿತ ಪ್ರತಿನಿಧಿಗಳು ಸಿಬ್ಬಂಧಿಗಳೊಂದಿಗೆ ಸಮಾಧಾನವಾಗಿ ವ್ಯವಹರಿಸಬೇಕು. ಮತ ಎಣಿಕೆ ಕಾರ್ಯ ಮುಕ್ತಾಯಗೊಳ್ಳುವವರೆಗೆ ಯಾವುದೇ ಒತ್ತಡಕ್ಕೆ ಒಳಗಾಗದೇ ಅಧಿಕಾರಿಗಳೊಂದಿಗೆ ಸಂಯಮದಿಂದ ಸಹಕರಿಸುವಂತೆ ಅವರು ಸೂಚಿಸಿದರು.
ಚುನಾವಣೆಗೆ ಸ್ಪರ್ಧಿಸಿರುವ ಪ್ರತಿ ಅಭ್ಯರ್ಥಿಯು ತಮ್ಮ ಚುನಾವಣಾ ವೆಚ್ಚದ ಲೆಖ್ಖಪತ್ರಗಳನ್ನು ಜೂನ್ 22ರೊಳಗಾಗಿ ಜಿಲ್ಲಾ ಚುನಾವಣೆ ಶಾಖೆಯ ಲೆಖ್ಖ ಪರಿವೀಕ್ಷಕರಿಗೆ ಒಪ್ಪಿಸುವಂತೆ ಅವರು ಇದೇ ಸಂದರ್ಭದಲ್ಲಿ ನುಡಿದರು. ಸಭೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
