ದಿನದ ಸುದ್ದಿ
ದೇಣಿಗೆದಾರ’ರಿಗೆ ಮರುಪಾವತಿ ಮತ್ತು ‘ವೋಟುದಾರ’ರಿಗೆ ಬಲವಂತದ ಲೂಟಿ : ಭಾರಿ ಸದ್ದಿನ ಸುಧಾರಣೆಗಳ ವಿರುದ್ಧ ದುಡಿಮೆಗಾರರ ಐಕ್ಯತೆಯ ಬಲಪ್ರಯೋಗ-ಸಿಐಟಿಯು ಕರೆ

ಮೋದಿ-02 ಸರಕಾರ ಅಧಿಕಾರ ವಹಿಸಿಕೊಳ್ಳುತ್ತಿರುವಂತೆಯೇ ಅದು ಐದು ವರ್ಷಗಳ ಹಿಂದೆ ಸೃಷ್ಟಿಸಿದ ನೀತಿ ಆಯೋಗ ಕಾರ್ಮಿಕ ಕಾನೂನುಗಳ ಬದಲಾವಣೆಗಳಿಂದ ಹಿಡಿದು 46 ಸಾರ್ವಜನಿಕ ವಲಯದ ಘಟಕಗಳ ಖಾಸಗೀಕರಣ ಅಥವ ಮುಚ್ಚುವ ಭಾರೀ ಸದ್ದಿನ ಸುಧಾರಣೆಗಳನ್ನು ತರುವುದಾಗಿ ಪ್ರಕಟಿಸಿದೆ. ಅವರು (ವಿದೇಶಿ ಹೂಡಿಕೆದಾರರು) ಸಂತೋಷ ಪಡುತ್ತಾರೆ. ಸರಕಾರ ವಿದೇಶಿ ಹೂಡಿಕೆದಾರರಿಗೆ ಕೊಡಮಾಡಲು ಸರಕಾರೀ ಜಮೀನಿನ ಒಂದು ದಾಸ್ತಾನು ಪಟ್ಟಿಯನ್ನು ತಯಾರಿಸುತ್ತದೆ ಎಂದು ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
ಅತ್ತ ಅಮೆರಿಕನ್ ಖಾಸಗಿ ಕಾರ್ಪೊರೇಟ್ಗಳು ಭೂಮಿ ಮತ್ತು ಕಾರ್ಮಿಕ ಕಾನೂನುಗಳು ಇ-ವಾಣಿಜ್ಯದಲ್ಲಿ ಬದಲಾವಣೆಗಳು ಸೇರಿದಂತೆ ಧೀರ ಸುಧಾರಣೆಗಳನ್ನು ತರಬೇಕು ಎಂದು ಭಾರತದ ಹೊಸ ಸರಕಾರಕ್ಕೆ ಹೇಳಿರುವ ಹೇಳಿಕೆಯೊಂದಿಗೆ ನೀತಿ ಆಯೋಗದ ಉಪಾಧ್ಯಕ್ಷರ ಹೇಳಿಕೆಯನ್ನು ನೋಡಬೇಕು ಎಂದು ಸಿಐಟಿಯು ಹೇಳಿದೆ.
ದೇಶದ ಕಾರ್ಮಿಕ ವರ್ಗ ಮತ್ತು ರೈತಾಪಿಗಳು ವಿರೋಧಿಸಿರುವ ಧೋರಣೆಗಳನ್ನೇ ಮೋದಿ-02 ಸರಕಾರ ರಭಸದಿಂದ ಅನುಸರಿಸಲಿದೆ ಎಂಬುದರ ಒಂದು ಸ್ಪಷ್ಟ ಸಂಕೇತವನ್ನು ಕಾರ್ಮಿಕ ವರ್ಗಕ್ಕೆ ಮತ್ತು ಭಾರತದ ಶ್ರಮಜೀವಿಗಳಿಗೆ ನೀಡಲಾಗಿದೆ ಎಂದು ಅದು ಹೇಳಿದೆ.
ದುಡಿಮೆಗಾರರ ಮೇಲೆ ಗುಲಾಮಗಿರಿಯ ಪರಿಸ್ಥಿತಿಗಳನ್ನು ಹೇರಲು ಕಾರ್ಮಿಕ ಕಾನೂನುಗಳಲ್ಲಿ ಬದಲಾವಣೆಗಳನ್ನು ನಿಖರವಾಗಿ ರೂಪಿಸಲಾಗುತ್ತಿದೆ. ಅದೇ ರೀತಿ, ಕೇಂದ್ರೀಯ ಸಾರ್ವಜನಿಕ ವಲಯದ ಘಟಕಗಳ ಖಾಸಗೀಕರಣವು ರಾಷ್ಟ್ರೀಯ ಆಸ್ತಿಗಳನ್ನು ಸರಕಾರದ ಅತ್ಯಂತ ಪ್ರೀತಿಯ ಕಾರ್ಪೊರೇಟ್ಗಳ ಲೂಟಿ ಹೊಡೆಯಲು ಅವಕಾಶ ಮಾಡಿಕೊಡುತ್ತದೆ, ಮತ್ತು ರಾಷ್ಟ್ರೀಯ ಆರ್ಥಿಕ ವ್ಯವಸ್ಥೆಯ ದೇಶೀ ತಯಾರಿಕಾ ಸಾಮರ್ಥ್ಯವನ್ನು ನಾಶಮಾಡಲು ಹಾಗೂ ವಿಕೈಗಾರಿಕೀಕರಣಕ್ಕೆ ಹಾದಿ ಮಾಡಿ ಕೊಡುತ್ತದೆ ಎಂದು ಸಿಐಟಿಯು ಹೇಳಿದೆ.
ಮೋದಿ ಸರಕಾರದ ಭಾರೀ ಸದ್ದಿನ ಸುಧಾರಣೆ ಅದಕ್ಕೆ ಒಂದು ನಿರ್ಣಾಯಕ ಆದೇಶದ ನೀಡಿದ ಜನಸಮೂಹಗಳ ಜೀವನ ಮತ್ತು ಜೀವನಾಧಾರಗಳನ್ನೇ ಧ್ವಂಸಗೊಳಿಸುವತ್ತ ಒಯ್ಯುತ್ತದೆ. ದೇಶೀ ಮತ್ತು ವಿದೇಶೀ ದೇಣಿಗೆದಾರರಿಗೆ ಮರುಪಾವತಿ ಮತ್ತು ವೋಟುದಾರರಿಗೆ ಅಂದರೆ ಜನಸಾಮಾನ್ಯರಿಗೆ ಬಲವಂತದ ಲೂಟಿ- ಇದೇ ಮೋದಿ-02 ಸರಕಾರದ ಧ್ಯೇಯವಾಗಿದೆ ಎಂದು ಸಿಐಟಿಯು ಹೇಳಿದೆ.
ಸರಕಾರದ ಈ ವಿನಾಶಕಾರಿ ಜನ-ವಿರೋಧಿ ಮತ್ತು ದೇಶ-ವಿರೋಧಿ ನಡೆಯನ್ನು ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಮತ್ತು ರಾಷ್ಟ್ರೀಯ ಒಕ್ಕೂಟಗಳ ಐಕ್ಯ ವೇದಿಕೆಯ ನೇತೃತ್ವದಲ್ಲಿ ಕಾರ್ಮಿಕ ಜನಸಮೂಹಗಳ ಐಕ್ಯ ಹೋರಾಟದ ಸಂಪೂರ್ಣ ಬಲಪ್ರಯೋಗದಿಂದ ವಿರೋಧಿಸಬೇಕು ಎಂದಿರುವ ಸಿಐಟಿಯು ದೇಶದ ಕಾರ್ಮಿಕ ವರ್ಗ ತಾನು ಶ್ರಮಪಟ್ಟು ಗಳಿಸಿರುವ ಹಕ್ಕುಗಳನ್ನು ಮತ್ತು ದೇಶದ ಸಾರ್ವಭೌಮತೆಯನ್ನು ರಕ್ಷಿಸಲು ದೊಡ್ಡ ಹೋರಾಟಗಳಿಗೆ ಸನ್ನದ್ಧಗೊಳ್ಳಬೇಕು ಎಂದು ಕರೆ ನೀಡಿದೆ.
ಕೃಪೆ : ಜನಶಕ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
