ದಿನದ ಸುದ್ದಿ
ಇದು ಭಂಡಗೆಟ್ಟ ಸರ್ಕಾರ, ಅಧಿಕಾರದ ಹೊರತಾಗಿ ಅವರಿಗೆ ಬೇರೇನೂ ಬೇಡ : ಬಿಜೆಪಿ ವಿರುದ್ಧ ಸಿದ್ದ ರಾಮಯ್ಯ ಕಿಡಿ

ಸುದ್ದಿದಿನ,ಬೆಂಗಳೂರು : ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆಂದು ಹೋದಾಗ ಅಲ್ಲಿನ ಸರ್ಕಾರ ಐದು ವರ್ಷ ಏನು ಅಭಿವೃದ್ಧಿ ಮಾಡಿದೆ ಎಂಬ ಬಗ್ಗೆ ಅನುಮಾನ ಮೂಡಿತು. ಹೈದರಾಬಾದ್- ಪೂನಾ ಹೆದ್ದಾರಿಯಲ್ಲಿ ವಾಹನ ಸಂಚರಿಸಲು ಪರದಾಡಬೇಕಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ತವರು ರಾಜ್ಯದ ಸ್ಥಿತಿಯೇ ಹೀಗೆ. ಆದರೂ ಜನ ಬಿಜೆಪಿಗೆ ಮತ ನೀಡುತ್ತಾರೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಿಜೆಪಿಯವರು ಇವಿಎಂ ದುರುಪಯೋಗ ಮಾಡಿಕೊಂಡು ಚುನಾವಣೆಯಲ್ಲಿ ಗೆಲ್ಲುತ್ತಿರುವ ಸಾಧ್ಯತೆಗಳೂ ಇರಬಹುದು. ಅಭಿವೃದ್ಧಿ ಕಾರ್ಯಗಳನ್ನೇ ಮಾಡದಿದ್ದರೂ ಹೇಗೆ ಚುನಾವಣೆ ಗೆಲ್ಲಲು ಸಾಧ್ಯ? ಅಧಿಕಾರ ಹಿಡಿಯಲು ಚುನಾವಣಾ ಆಯೋಗ ಸೇರಿದಂತೆ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳತ್ತಿದೆ. ಚುನಾವಣೆ ಘೋಷಣೆಯಾದ ದಿನದಿಂದ ನೀತಿಸಂಹಿತೆ ಜಾರಿಯಾಗಬೇಕು. ಆದರೆ ರಾಜ್ಯದಲ್ಲಿ 70 ದಿನ ಮುಂಚಿತವಾಗಿ ಚುನಾವಣೆಯ ದಿನವನ್ನು ಘೋಷಿಸಿದರೂ ಇನ್ನೂ ನೀತಿಸಂಹಿತೆ ಜಾರಿಯಾಗಿಲ್ಲ. ಇವೆಲ್ಲ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿರುವುದಕ್ಕೆ ಸ್ಪಷ್ಟ ನಿದರ್ಶನಗಳು. ಇವಿಎಂ ಯಂತ್ರಗಳು ನಂಬಿಕಾರ್ಹವಲ್ಲ ಎಂಬ ಕಾರಣದಿಂದ ಅಮೆರಿಕಾ, ಜಪಾನ್, ಜರ್ಮನಿಯಂತಹ ಮುಂದುವರೆದ ರಾಷ್ಟ್ರಗಳೇ ಸಾಂಪ್ರದಾಯಿಕ ಮತದಾನದ ಶೈಲಿಯಾದ ಮತಚೀಟಿ ಬಳಕೆಯನ್ನು ಮರು ಅಳವಡಿಕೆ ಮಾಡಿಕೊಂಡಿರುವಾಗ ಭಾರತ ಏಕೆ ಮಾಡಿಕೊಳ್ಳಬಾರದು? ಇಷ್ಟೊಂದು ಜನ ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನಿಸಿದರೂ ಅದರ ಮೇಲೆ ಬಿಜೆಪಿಗರ ಅತಿಯಾದ ಪ್ರೀತಿಗೆ ಕಾರಣವೇನು? ಎಂದಿದ್ದಾರೆ.
ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರಧನ ನೀಡಿಲ್ಲ, ತಾತ್ಕಾಲಿಕ ಶೆಡ್ ಹಾಕಿಕೊಟ್ಟಿಲ್ಲ, ಕೆಲವರಿಗೆ ಹತ್ತು ಸಾವಿರ ಕೊಟ್ಟಿದ್ದು ಬಿಟ್ಟರೆ ಇದುವರೆಗೂ ರಾಜ್ಯ ಸರ್ಕಾರ ಬೇರಾವ ಗಮನಾರ್ಹ ಕೆಲಸವನ್ನು ಮಾಡಿಲ್ಲ. ಈಗ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಹೀಗಾದರೆ ಸಂತ್ರಸ್ತರ ಗತಿಯೇನು? ಯು.ಪಿ.ಎ ಅವಧಿಯಲ್ಲಿ ದೊರೆತ ಪರಿಹಾರಕ್ಕೂ, ಎನ್ಡಿಎ ಅವಧಿಯಲ್ಲಿ ದೊರೆತ ಪರಿಹಾರದ ಮೊತ್ತಕ್ಕು ತಾಳೆ ಹಾಕುವುದು ಮೂರ್ಖತನ. ಹಿಂದೆ ಸಂಭವಿಸಿದ ಪ್ರವಾಹಕ್ಕೂ, ಈ ಬಾರಿಯ ಪ್ರವಾಹಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸಾವು, ನೋವು, ನಷ್ಟದ ಪ್ರಮಾಣ ಈ ಬಾರಿ ಅತಿ ಹೆಚ್ಚಾಗಿದೆ. ನಾನು ಮೊದಲ ಬಜೆಟ್ ಮಂಡಿಸಿದಾಗ ಒಂದು ಲಕ್ಷ ಕೋಟಿಯಿದ್ದ ಬಜೆಟ್ ಗಾತ್ರ, ಕೊನೆಯ ಬಜೆಟ್ಗೆ ರೂ.2 ಲಕ್ಷ ಕೋಟಿ ಮೀರಿತ್ತು. ಅಂದರೆ ಹಣದ ಮೌಲ್ಯ ಒಂದೇ ಪ್ರಕಾರವಾಗಿ ಇಲ್ಲ. ಹಾಗಾಗಿ ಕೇಂದ್ರ ನೀಡಿರುವ ಪರಿಹಾರ ಹಣದ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಿರಬಹುದು. ಹಾಗೆಂದ ಮಾತ್ರಕ್ಕೆ ಅಗತ್ಯ ಪ್ರಮಾಣದ ನೆರವು ದೊರೆತಿದೆ ಎಂದಲ್ಲ ಎಂದು ಹೇಳಿದ್ದಾರೆ.
ನೆರೆ ಪರಿಹಾರ ಕಾರ್ಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷವಾಗಿ ನಾವು ನಿತ್ಯವೂ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡುತ್ತಿದ್ದೇವೆ. ಆದರೆ ಇದು ಭಂಡಗೆಟ್ಟ ಸರ್ಕಾರ, ಅಧಿಕಾರದ ಹೊರತಾಗಿ ಅವರಿಗೆ ಬೇರೇನೂ ಬೇಡ. “ನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯದ ಮಾತು” ಎಂದು ಕೆಂಡಾ ಮಂಡಲವಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
