ದಿನದ ಸುದ್ದಿ
ದಾವಣಗೆರೆ | ‘ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿ’ ಚುನಾವಣೆ : ವೇಳಾಪಟ್ಟಿ ಪ್ರಕಟ

ಸುದ್ದಿದಿನ,ದಾವಣಗೆರೆ : ಆಯುಕ್ತರು, ಸಹಕಾರ ಚುನಾವಣಾ ಆಯೋಗ ಬೆಂಗಳೂರು ಇವರ ಆದೇಶದನ್ವಯ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ)ನಿಯಮ-2019 ರನ್ವಯ ಪಟ್ಟಣ ವ್ಯಾಪಾರ ಸಮಿತಿ ಮಹಾನಗರ ಪಾಲಿಕೆ ದಾವಣಗೆರೆ ಇವರ ಸರ್ಕಾರೇತರ ಸದಸ್ಯರ ಪ್ರತಿನಿದಿಗಳ ಆಯ್ಕೆಯ ಚುನಾವಣೆಯು ಡಿ.21 ರಂದು ಶ್ರೀಮತಿ ಗೌರಮ್ಮ ಹನಗೋಡಿ ಮಠ ಹಿರಿಯ ಪ್ರಾಥಮಿಕ ಶಾಲೆ, ಕೊಠಡಿ ಸಂಖ್ಯೆ: 4,5,7 ಮತ್ತು 8, ಹದಡಿ ರಸ್ತೆ, ದಾವಣಗೆರೆ ಇಲ್ಲಿ ನಡೆಯಲಿದೆ.
ಈ ಚುನಾವಣೆಯಲ್ಲಿ ಪಟ್ಟಣದ ವ್ಯಾಪಾರ ಸಮಿತಿಯ ಒಟ್ಟು 10 ಜನ ಪ್ರತಿನಿಧಿಗಳು (3ನೇ ಒಂದರಷ್ಟು) ಮಹಿಳಾ ವ್ಯಾಪಾರಿಗಳಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಇತರೆ ಹಿಂದುಳಿದ ವರ್ಗಗಳ, ಅಲ್ಪ ಸಂಖ್ಯಾತರ ಹಾಗೂ ವಿಕಲ ಚೇತನರ ಕನಿಷ್ಠ ಒಬ್ಬ ಪ್ರತಿನಿಧಿಗೆ ಮೀಸರಿಸಿದ ಪಟ್ಟಣ ವ್ಯಾಪಾರ ಸಮಿತಿಗೆ ಚುನಾಯಿಸಲು ಈ ಚುನಾವಣೆಗೆ ನೋಟಿಸ್, ನಾಮಪತ್ರ ಆಹ್ವಾನಿಸಿ ಡಿ. 7 ರಂದು ಅಧಿಸೂಚನೆ ಹೊರಡಿಸಿದೆ.
ದಾವಣಗೆರೆ ಮಹಾನಗರಪಾಲಿಕೆಯ ಎಸ್ಜೆಎಸ್ಆರ್ವೈ ವಿಭಾಗ ಕೆಂಪು ಕಟ್ಟಡ ಕಚೇರಿಯಲ್ಲಿ ಡಿ 9 ರಿಂದ 13 ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ನಾಮ ಪತ್ರಗಳನ್ನು ಚುನಾವಣಾ ಅಧಿಕಾರಿ/ಸಹಾಯಕ ಚುನಾವಣಾ ಅಧಿಕಾರಿಯವರಿಗೆ ನಿಗದಿಪಡಿಸಿದ ಅವಧಿಯಲ್ಲಿ ಸಲ್ಲಿಸುವುದು. ಡಿ. 14 ರಂದು ಬೆಳಿಗ್ಗೆ 11 ಗಂಟೆಗೆ ನಾಮ ಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಡಿ. 14 ರಂದು ಮಧ್ಯಾಹ್ನ 3 ಗಂಟೆಗೆ ಸಿಂಧುವಾದ ನಾಮಪತ್ರಗಳನ್ನು ಪ್ರಕಟಿಸಬೇಕಾದ ದಿನಾಂಕವಾಗಿರುತ್ತದೆ.
ಡಿ. 15 ರಂದು ಸಂಜೆ 5 ಗಂಟೆಗಿಂತ ಮುಂಚೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ದಿನವಾಗಿದೆ. ಹಾಗೂ ಅದೇ ದಿನ ಸಂಜೆ 5.30 ಗಂಟೆಯವರೆಗೆ ನಾಮಪತ್ರಗಳು ಸಿಂಧುವಾಗಿವೆ ಎಂದು ಘೋಷಿಸಲಾಗಿರುವ ಅಭ್ಯರ್ಥಿಗಳ ಸಂಖ್ಯೆಯು ಚುನಾಯಿಸಬೇಕಾದ ಅಭ್ಯರ್ಥಿಗಳ ಸಂಖ್ಯೆಯನ್ನು ಮೀರದಿದ್ದರೆ ಉಮೇದುವಾರಿಕೆಯನ್ನು ಹಿಂಪಡೆಯಲು ನಿಗದಿಪಡಿಸಲಾದ ದಿನ ಮುಕ್ತಾಯಗೊಂಡ ತರುವಾಯ, ಅಂಥ ಎಲ್ಲ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸತಕ್ಕದ್ದು. ಹಾಗೂ ಪಟ್ಟಣ ವ್ಯಾಪಾರ ಸಮಿತಿಗೆ ಅವರು ಯುಕ್ತವಾಗಿ ಚುನಾಯಿತರಾಗಿದ್ದಾರೆಂದು ಘೋಷಿಸತಕ್ಕದ್ದು.
ಡಿ 21 ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶ್ರೀಮತಿ ಗೌರಮ್ಮ ಹನಗೋಡಿ ಮಠ ಹಿರಿಯ ಪ್ರಾಥಮಿಕ ಶಾಲೆ, ಕೊಠಡಿ ಸಂಖ್ಯೆ: 4,5,7 ಮತ್ತು 8, ಹದಡಿ ರಸ್ತೆ, ದಾವಣಗೆರೆ ಇಲ್ಲಿ ಮತದಾನ ನಡೆಯಲಿದೆ. ಹಾಗೂ ಅದೇ ದಿನ ಮತದಾನದ ಅವಧಿ ಮುಗಿದ ನಂತರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಚುನಾವಣಾ ಫಲಿತಾಂಶ ಪ್ರಕಟಿಸಲಾಗುವುದು.
ಉಮೇದುವಾರರು ನಾಮಪತ್ರವನ್ನು ನಮೂನೆ-1 ರಲ್ಲಿ ನಾಮಪತ್ರ ಚುನಾವಣಾಧಿಕಾರಿಗಳಿಗೆ ಸಲ್ಲಿಸುವುದು. ಮತದಾನಕ್ಕೆ ಬರುವ ಬೀದಿ ಬದಿ ವ್ಯಾಪಾರಿಗಳು ಮಹಾನಗರಪಾಲಿಕೆ ದಾವಣಗೆರೆ ಇಂದ ನೀಡಿರುವ ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ಹಾಜರುಪಡಿಸಿ ಮತ ಚಲಾಯಿಸತಕ್ಕದ್ದು, ಮತ್ತು ನಿಗದಿಪಡಿಸಿದ ಪುಸ್ತಕದಲ್ಲಿ ಸಹಿ ಮಾಡಬೇಕು.
ಹೆಚ್ಚಿನ ಮಾಹಿತಿಗಾಗಿ ರಿಟರ್ನಿಂಗ್ ಅಧಿಕಾರಿ/ಸಹಾಯಕ ಚುನಾವಣಾಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಮಾತ್ರ ಸಂಪರ್ಕಿಸುವಂತೆ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ) ಪಟ್ಟಣ ವ್ಯಾಪಾರ ಸಮಿತಿ ಮಹಾನಗರ ಪಾಲಿಕೆ ಚುನಾವಣಾ ಅಧಿಕಾರಿಗಳು ಹಾಗೂ ದಾವಣಗೆರೆ ತಾಲ್ಲೂಕು ತಹಶಿಲ್ದಾರರಾದ ಜಿ. ಸಂತೋಷ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
