ದಿನದ ಸುದ್ದಿ
ಕಲಬುರಗಿಯ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರ ಅವಾಂತರ
- ಸುಮಾರು 50 ವರ್ಷಗಳಿಂದ ಕಸಾಪದ ಆಜೀವ ಸದಸ್ಯರಾಗಿರುವ ಎಲ್.ಎಸ್.ಶಾಸ್ತ್ರಿಯವರು ಕನ್ನಡದ ಹಿರಿಯ ಸಾಹಿತಿಗಳು. ವಾಸ ಬೆಳಗಾವಿ. ಇವರಿಗೆ ಕಲಬುರಗಿಯಲ್ಲಿ ನಡೆಯುತ್ತಿರುವ 85 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಅಹ್ವಾನ ನೀಡದಿರುವ ಕುರಿತು ಕಸಾಪ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ ಪತ್ರವೊಂದನ್ನು ಬರೆದಿದ್ದಾರೆ. ಈ ಕೆಳಗಿನಂತೆ ಆ ಪತ್ರವಿದೆ.
ಕಲಬುರ್ಗಿಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ವಾಟ್ಸಪ್ ನಲ್ಲಿ ನೋಡಿದೆ. ನಮ್ಮಂಥವರಿಗೆ ಅವರು ಆಮಂತ್ರಣ ಕಳಿಸುವದಿಲ್ಲ. ನಾನು 50 ವರ್ಷಗಳಿಂದ ಕಸಾಪ ಆಜೀವ ಸದಸ್ಯ. ಮೂರುಸಲ ಜಿಲ್ಲಾ ಗೌರವ ಕಾರ್ಯದರ್ಶಿಯಾಗಿ ಕೆಲಸ ಮಾಡಿದವ.
ಆ ವಿಷಯ ಹಾಗಿರಲಿ. ಸಮ್ಮೇಳನದ ಆಮಂತ್ರಣ ಪತ್ರಿಕೆ ನೋಡಿದಾಗ ಒಂದೆರಡು ಅಂಶಗಳು ಗಮನ ಸೆಳೆದವು. ಅದರ ಬಗ್ಗೆ ಹೇಳುತ್ತಿದ್ದೇನೆ.
ಉತ್ತರ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ ಶ್ರೀ ಮೋಹನ ಹಬ್ಬು ಅವರನ್ನು ಕವಿ ಗೋಷ್ಠಿಯಲ್ಲಿ ಕವನ ಓದುವವರ ನಡುವೆ ಸೇರಿಸಿದ್ದಾರೆ. ಇದು ಸರಿಯಲ್ಲ ಎಂದು ನನ್ನ ಭಾವನೆ. ಅವರು ಒಂದು ಗೋಷ್ಠಿ ಯ ಅಧ್ಯಕ್ಷ ಸ್ಥಾನ
ವಹಿಸಬೇಕಾದಂಥವರು. ವಯಸ್ಸು ಮತ್ತು ಸಾಧನೆ ಎರಡೂ ದೃಷ್ಟಿಯಿಂದ. ಹತ್ತರ ಕೂಡ ಹನ್ನೊಂದು ಎಂಬಂತೆ ಒಟ್ಟು ಎಲ್ಲೋ ಒಂದು ಕಡೆ ಸೇರಿಸುವದು ಅವರ ಅರ್ಹತೆಗೆ ತಕ್ಕದ್ದಲ್ಲ. ಜಿಲ್ಲಾಧ್ಯಕ್ಷರಿಗೆ ಇದು ತಿಳಿದಿರಬೇಕಿತ್ತು.
ನಾನು ಸಾಮಾನ್ಯವಾಗಿ ಗಮನಿಸಿದಂತೆ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳನ್ನು ಕಸಾಪ ಯಾವ ಲೆಕ್ಕಕ್ಕೂ ಹಿಡಿದಿಲ್ಲ. ಬೆಳಗಾವಿಯಲ್ಲೂ ಒಬ್ಬರನ್ನು ಒಂದು ಗೋಷ್ಠಿಯ ಭಾಷಣಕ್ಕೆ ಹಾಕಿದ್ದು ಬಿಟ್ಟರೆ ಅಧ್ಯಕ್ಷ ಸ್ಥಾನಕ್ಕೆ ಯಾರೂ ಇಲ್ಲಿ ಅರ್ಹರೇ ಇಲ್ಲ ಎಂದು ಕಸಾಪ ಅಧ್ಯಕ್ಷರು ಭಾವಿಸಿಕೊಂಡಂತಿದೆ. ಮೂರು ನಾಲ್ಕು ಜನರನ್ನು ಕವಿಗೋಷ್ಠಿಗಳಲ್ಲಿ ಸೇರಿಸಿ ಸಮಾಧಾನ ಪಡಿಸಲಾಗಿದೆ. ಒಂದಿಬ್ಬರು ಸನ್ಮಾನಿತರ ಯಾದಿಯಲ್ಲಿದ್ದಾರೆ. ಉತ್ತರ ಕನ್ನಡದ ಹಣೆಬರೆಹವೂ ಅಷ್ಟೇ. ಕೇಳುವವರ್ಯಾರು? ಹೇಳಿ ನಾವೆ ಕೆಟ್ಟವರಾಗಬೇಕು ಅಷ್ಟೇ.
ಈಗಿನ ಕಸಾಪದಿಂದ ನಾನು ಅಂತಹ ಯಾವ ಉನ್ನತ ಮಟ್ಟದ ವ್ಯವಹಾರವನ್ನೂ ನಿರೀಕ್ಷಿಸುತ್ತಿಲ್ಲ. ಅಲ್ಲಿರುವವರ ಯೋಗ್ಯತೆ ಎಲ್ಲರಿಗೂ ಗೊತ್ತಿರುವಂತಹದೆ. ಅವರಿಂದ ನನಗೇನೂ ಆಗಬೇಕಾದ್ದೂ ಇಲ್ಲ. ಹಿಂದೆ ಒಮ್ಮೆ ನನ್ನನ್ನೂ ಸನ್ಮಾನಕ್ಕೆ ಕರೆದಿದ್ದರು. ಅದು ಸನ್ಮಾನವೋ ಅವಮಾನವೋ ಒಂದೂ ಗೊತ್ತಾಗಲಿಲ್ಲ. ಅಷ್ಟು ಕೆಟ್ಟದ್ದಾಗಿ ನಡೆಸಿಕೊಂಡರು. ಅವ್ಯವಸ್ಥೆಗೆ ಕುಪ್ರಸಿದ್ಧವಾದದ್ದು ಈಗಿನ ಕಸಾಪ. ಕೋಟಿಗಟ್ಟಲೆ ಹಣದ ವ್ಯವಹಾರ ಅವರಿಗೆ ಮಹತ್ವದ್ದು. ಅಬ್ಬರ, ಆಡಂಬರ, ದುಂದು ವೆಚ್ಚ , ಒಂದಿಷ್ಟು ಸ್ವಾಹಾ ….ಅದೇ ಸಮ್ಮೇಳನ! ಸಾಹಿತ್ಯಕ್ಕೆ ಎರಡನೇ ಸ್ಥಾನ.
– ಎಲ್.ಎಸ್.ಶಾಸ್ತ್ರಿ
94822 51696
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

-
ನಿತ್ಯ ಭವಿಷ್ಯ7 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ5 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ18 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ17 hours ago
ನಟ ಮನದೀಪ್ ರಾಯ್ ನಿಧನ