ದಿನದ ಸುದ್ದಿ
ಎನ್ ಆರ್ ಸಿ ವಿರುದ್ಧ ಕವಿತೆ ವಾಚಿಸಿದ್ದಕ್ಕೆ ಎಫ್ ಐ ಆರ್ | ಇದು ‘ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ’ ; ನೆಟ್ಟಿಗರ ಆಕ್ರೋಶ

ಸುದ್ದಿದಿನ ಡೆಸ್ಕ್ : ಕೊಪ್ಪಳದ ಪತ್ರಕರ್ತ ಸಿರಾಜ್ ಬಿಸರಳ್ಳಿ ಅವರು ಜನವರಿ 9 ಮತ್ತು 10 ನೇ ತಾರೀಖಿನಂದು ಕೊಪ್ಪಳದಲ್ಲಿ ನಡೆದ ‘ಆನೆಗುಂದಿ ಉತ್ಸವ’ ದಲ್ಲಿ ‘ ನಿನ್ನ ದಾಖಲೆ ಯಾವಾಗ ಕೊಡುತ್ತೀ..? ಎಂಬ ಪೌರತ್ವ ತಿದ್ದುಪಡಿ ಕಾಯ್ದೆ (ಎನ್ ಆರ್ ಸಿ)ವಿರೋಧಿಸಿ ಬರೆದ ಕವಿತೆಯನ್ನು ವಾಚಿಸಿದ್ದರು. ಈ ಕಾರಣವನ್ನಿಟ್ಟುಕೊಂಡು ಗಂಗಾವತಿಯ ಬಿಜೆಪಿ ನಗರ ಘಟಕವು ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿಗೆ ದೂರುನೀಡಿತ್ತು. ಈ ದೂರಿನನ್ವಯ ಪೊಲೀಸರು ಪತ್ರಕರ್ತ ಸಿರಾಜ್ ಬಿಸರಳ್ಳಿಯವರ ಮೇಲೆ ಎಫ್ ಐ ಆರ್ ದಾಖಲಿಸಿದೆ.
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದ ಕಾಯ್ದೆಯೊಂದನ್ನು ವಿರೋಧಿಸಿ ಬರೆದ ಕವಿತೆ ವಾಚಿಸಿದಕ್ಕೆ ಕವಿಯ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ, ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವೆಂದು ನೆಟ್ಟಿಗರು ಬಿಜೆಪಿ ಮತ್ತು ಗಂಗಾವತಿ ಪೋಲಿಸ್ ಇಲಾಖೆಯ ವಿರುದ್ಧ ಆಕ್ರೋಶವ್ಯಕ್ತ ಪಡಿಸಿದ್ದಾರೆ.
ಹಾಗೆಯೇ, ಸಿರಾಜ್ ಬಿಸರಳ್ಳಿ ಅವರಿಗೆ ಬೆಂಬಲ ಸೂಚಿಸಿ ಅವರು ವಾಚಿಸಿದ ಕವಿತೆಯನ್ನು ಪ್ರಗತಿಪರ ಚಿಂತಕರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ. ಆ ಕವಿತೆ ಈ ಕೆಳಗಿನಂತಿದೆ.
ಕವಿತೆ | ನಿನ್ನ ದಾಖಲೆ ಯಾವಾಗ ಕೊಡುತ್ತೀ ?
- ಸಿರಾಜ್ ಬೆಸರಳ್ಳಿ
ಆಧಾರು, ರೇಷನ್ ಕಾರ್ಡಗಳ ಕ್ಯೂನಲ್ಲಿ
ಥಂಬಿನ, ಸರ್ವರಿನ ಮಂಗನಾಟದಲ್ಲಿ
ಬದುಕ ಕಳೆದುಕೊಳ್ಳು ತ್ತಿರುವವರ ದಾಖಲೆ
ಕೇಳುವವನೇ ನಿನ್ನ ದಾಖಲೆ ಯಾವಾಗ ನೀಡುತ್ತಿ?
ನಾಡಿನ ಸ್ವಾತಂತ್ರ್ಯಕ್ಕಾಗಿ ನಗುನಗುತ್ತಲೇ ನೇಣಿಗೇರಿದವರ,
ಹೆಸರೂ ಬೇಡವೆಂದು ಹುತಾತ್ಮರಾದವರ
ಇತಿಹಾಸದ ಹಾಳೆಗಳ ಹರಿಯುತ್ತಿರುವವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ ?
ತಾಜ್ ಮಹಲ್, ಚಾರ್ ಮಿನಾರು ಗುಂಬಜಗಳಿಗೆ
ಕೆಂಪು ಕೋಟೆ ಕುತುಬ್ ಮಿನಾರುಗಳಿಗೆ ಸಾಕ್ಷಿ ಕೇಳುತ್ತಿರುವವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ?
ಬ್ರಿಟಿಷರ ಬೂಟು ನೆಕ್ಕಿದ ತಲೆಹಿಡುಕರ
ಧರ್ಮ ದ್ವೇಷದ ಅಮಲಿನಲ್ಲಿ ರಕ್ತ ಕುಡಿಯುತ್ತಿರುವ
ಗೊಬೆಲ್ ಸಂತತಿಯವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ?
ಪಕೋಡ ಮಾರಿ ಬದುಕಿದವನು
ಚಾ ಮಾರಿ ಬದುಕಿದವನು ನನ್ನೂರಿನಲ್ಲಿ
ಮನುಷ್ಯತ್ವ ಮಾರಿಕೊಂಡಿಲ್ಲ
ಸ್ವಾಭಿಮಾನ ಮಾರಿಕೊಂಡಿಲ್ಲ, ಸುಳ್ಳಿನ ಕಂತೆಗಳ ಕತೆ ಕಟ್ಟಿಲ್ಲ
ಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ?
ಮುಳ್ಳು ಚುಚ್ಚಿ, ಹರಿದು, ಸಿಡಿದು ಹೋದ
ಟ್ಯೂಬುಗಳ, ಟೈಯರುಗಳ ತಿದ್ದಿ ತೀಡಿ ಗಾಳಿ ತುಂಬಿದ
ಪಂಚರ್ ನವನು ತನ್ನತನವನ್ನು ಮಾರಿಕೊಳ್ಳಲಿಲ್ಲ
ನೀನು ದೇಶವನ್ನೇ ಮಾರಿಬಿಟ್ಟೆಯಲ್ಲ
ಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ?
ದೇಶವನ್ನೇ ಯಾಮಾರಿಸಿದ ನಿನಗೆ
ನಕಲಿ ದಾಖಲೆಗಳು ದೊಡ್ಡದಲ್ಲ ಬಿಡು
ಕನಿಷ್ಠ ಮನುಷ್ಯತ್ವವೂ ನಿನಗಿದೆ
ಎನ್ನುವ ದಾಖಲೆ ಯಾವಾಗ ನೀಡುತ್ತಿ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
