ದಿನದ ಸುದ್ದಿ
ಫೆ.2ರಂದು ಕೆ ಎಸ್ ಆರ್ ಟಿ ಸಿ ತಾಂತ್ರಿಕ ಸಹಾಯಕ ಮತ್ತು ಭದ್ರತಾರಕ್ಷಕರ ಹುದ್ದೆ ಪರೀಕ್ಷೆ : ಸಕಲ ಸಿದ್ದತೆ

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಸ್ತೆ ಸಾರಿಗೆ ನಿಗಮದ ತಾಂತ್ರಿಕ ಸಹಾಯಕ ಮತ್ತು ಭದ್ರತಾರಕ್ಷಕ ದರ್ಜೆ-3 ರ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಫೆ.02 ರಂದು ನಡೆಸಲಾಗುತ್ತಿರುವ ಸಾಮಾನ್ಯ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾನ್ಯ ಸಾಮಥ್ರ್ಯ ಸಭಾಂಗಣದಲ್ಲಿ ಪರೀಕ್ಷೆ ಕುರಿತು ಪ್ರಿನ್ಸಿಪಾಲರು/ಮೇಲ್ವಿಚಾರಕರು/ಮಾರ್ಗಾಧಿಕಾರಿಗಳು/ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಿರಂಜನ್. ಜಿ.ಸಿ ಮಾತನಾಡಿ, ಫೆ.02 ರಂದು ನಡೆಯುತ್ತಿರುವ ತಾಂತ್ರಿಕ ಸಹಾಯಕ ಮತ್ತು ಭದ್ರತಾರಕ್ಷಕ ದರ್ಜೆ-3 ರ ಹುದ್ದೆಗಳ ನೇಮಕಾತಿಯ ಸಾಮಾನ್ಯ ಸಾಮಥ್ರ್ಯದ ಪರೀಕ್ಷೆಯು ನಗರದ 05 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.
ನಗರದ ಮೋತಿ ವೀರಪ್ಪ ಪದವಿಪೂರ್ವ ಕಾಲೇಜು, ಸೀತಮ್ಮ ಬಾಲಕಿಯರ ಪದವಿಪೂರ್ವ ಕಾಲೇಜು, ಎಕ್ಸ್ ಮುನ್ಸಿಪಾಲ್ ಕಾಲೇಜು ಮತ್ತು ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಹಾಗೂ ಎ.ವಿ.ಕೆ ಮಹಿಳಾ ಕಾಲೇಜುಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. ಬೆಳಿಗ್ಗೆ 9.30 ರಿಂದ 12.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್ಲೈನ್ನಲ್ಲಿ ಅಪ್ಡೇಟ್ ಮಾಡಿಸಬೇಕು ಎಂದರು.
ಕಾಲೇಜಿನ ಪ್ರಿನ್ಸಿಪಾಲರುಗಳನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಮಾತನಾಡಿ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಯಾವುದೇ ಅವಘಡಗಳು ಸಂಭವಿಸದಂತೆ ಜಾಗರೂಕರಾಗಿ ಕರ್ತವ್ಯ ನಿರ್ವಹಿಸಬೇಕು. ದಾವಣಗೆರೆ ತಾಲ್ಲೂಕು ತಹಶೀಲ್ದಾರು ಮತ್ತು ಉಪವಿಭಾಗಾಧಿಕಾರಿಯವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಬೇಕು ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ದಾವಣಗೆರೆ ತಾಲ್ಲೂಕು ತಹಶೀಲ್ದಾರ ಸಂತೋಷ್ಕುಮಾರ್ ಹಾಗೂ ಜಿಲ್ಲಾ ಖಜಾನೆ ಆಧಿಕಾರಿ ರಾಜಣ್ಣ ಹಾಗೂ 5 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
