ದಿನದ ಸುದ್ದಿ
ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಕೃಷಿ ಸಚಿವ ಬಿ.ಸಿ. ಪಾಟೀಲ್

ಸುದ್ದಿದಿನ,ದಾವಣಗೆರೆ : ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಸಮಯದಲ್ಲಿ ಕಳಪೆ ಬೀಜ ವಿತರಿಸಿದರೆ ರೈತರನ್ನು ನೇರವಾಗಿ ಕೊಲೆ ಮಾಡಿದಂತಾಗುತ್ತದೆ. ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ಮೇಲೆ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದರು.
ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಾಗೂ ರೈತರಿಗೆ ಮಾರುಕಟ್ಟೆ ಒದಗಿಸುವ ಕುರಿತು ಕರೆಯಲಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರು ಎಷ್ಟೇ ಪ್ರಭಾವಶಾಲಿಗಳಾಗಿದ್ದರು ಸಹ ಅವರ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್ ಕೇಸ್ ದಾಖಲಿಸಿ, ಅಂಗಡಿ ಪರವಾನಗಿಯನ್ನು ರದ್ದುಪಡಿಸಲಾಗುವದು ಎಂದರು.
ಲಾಕ್ಡೌನ್ ಅವಧಿಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚಿಸಿದಂತೆ ಕೃಷಿ ಮತ್ತು ವೈದ್ಯಕೀಯ ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆ. ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ ಹಿನ್ನೆಲೆಯಲ್ಲಿ ರೈತರ ಬೆಳೆಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸಿ ಪೂರೈಕೆಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಮಾರುಕಟ್ಟೆಗೆ ಬಂದು ಬೆಳೆ ಮಾರಾಟ ಮಾಡಬಹುದಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಲಾಕ್ಡೌನ್ ತೆರವಾಗಿಲ್ಲ. ಮೈಮರೆಯದಂತಹ ಭೀಕರ ಪರಿಸ್ಥಿತಿ ಇದಾಗಿದೆ. ಒಂದು ಸಂತೋಷದ ವಿಷಯವೇನೆಂದರೆ ಇಲ್ಲಿಯವರೆಗೂ ಯಾವೊಬ್ಬ ರೈತರಿಗೂ ಸಹ ಕೊರೊನಾ ವೈರಸ್ ಸೋಂಕು ತಗುಲಿಲ್ಲ. ಅವರು ಕೃಷಿ ಚಟುವಟಿಕೆಗಳಲ್ಲಿ ನಿರಂತರವಾಗಿ ನಿರತರಾಗಿರುವುದರಿಂದ ಅವರಲ್ಲಿ ರೋಗ ನಿರೋಧಕ ಶಕ್ತಿ ಅಧಿಕವಾಗಿರುತ್ತದೆ. ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದಾಗ ಸಾಮಾಜಿಕ ಅಂತರ ಕಾಯ್ದುಕೊಂಡು ಮಾರಾಟ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು. ರೈತರು ಲಾಕ್ಡೌನ್ ಹಿನ್ನೆಲೆಯಲ್ಲಿ ಆತ್ಮಸ್ಥೈರ್ಯ ಕಳೆದುಕೊಳ್ಳದೆ, ಧೃತಿಗೆಡದೆ ಕೃಷಿ ಚಟುವಟಿಕೆ ಕಾರ್ಯದಲ್ಲಿ ತೊಡಗಬೇಕು. ಸರ್ಕಾರವು ಸದಾ ನಿಮ್ಮೊಂದಿಗೆ ಇದೆ ಎಂದು ರೈತರಿಗೆ ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಪ್ರೊ.ಲಿಂಗಣ್ಣ, ಎಸ್.ವಿ.ರಾಮಚಂದ್ರ, ಎಸ್.ಎ.ರವೀಂದ್ರನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಪಾಲಿಕೆ ಮೇಯರ್ ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಪದ್ಮಾ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

-
ನಿತ್ಯ ಭವಿಷ್ಯ7 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ5 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ19 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ18 hours ago
ನಟ ಮನದೀಪ್ ರಾಯ್ ನಿಧನ