ದಿನದ ಸುದ್ದಿ
ದಾವಣಗೆರೆ | ನಿಜಲಿಂಗಪ್ಪ ಬಡಾವಣೆ 100 ಮೀ. ಪರಿಧಿ ನಿಯಂತ್ರಿತ ವಲಯವೆಂದು ಘೋಷಣೆ

ಸುದ್ದಿದಿನ,ದಾವಣಗೆರೆ : ಮಾರ್ಚ್ 26ರಂದು ಪಾಸಿಟಿವ್ ಕೇಸ್ ವರದಿಯಾದ ರೋಗಿ-63ರ ವಾಸಸ್ಥಳ ಅಂದರೆ ಇವರ ಮನೆ (ನಿಜಲಿಂಗಪ್ಪ ಬಡಾವಣೆಯ) ಇರುವ ರಸ್ತೆಯನ್ನು ಒಳಗೊಂಡ ಭೌತಿಕ 100 ಮೀ. ಪರಿಧಿಯ ಇಡೀ ಪ್ರದೇಶವನ್ನು ನಿಯಂತ್ರಿತ ವಲಯವೆಂದು ಹಾಗೂ ಸದರಿ ನಿಯಂತ್ರಿತ ವಲಯದ ಸುತ್ತ ಇರುವ ಪ್ರದೇಶ 5 ಕಿ.ಮೀ. ವ್ಯಾಪ್ತಿ ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ.
ನಿಯಂತ್ರಿತ ವಲಯ (ನಿಜಲಿಂಗಪ್ಪ ಬಡಾವಣೆಯ) ಚೆಕ್ಕುಬಂಧಿ: ಪೂರ್ವ- 2ನೇ ಕ್ರಾಸ್, 1ನೇ ಮೇನ್ ರಿಂದ 2ನೇ ಮೇನ್ವರೆಗೆ, ಪಶ್ಚಿಮ- 6ನೇ ಕ್ರಾಸ್, 1ನೇ ಮೇನ್ ರಿಂದ 2ನೇ ಮೇನ್ವರೆಗೆ, ಉತ್ತರ- ಅಮೃತಾ ವಿದ್ಯಾಲಯ ಶಾಲೆ 1ನೇ ಮುಖ್ಯ ರಸ್ತೆ, ದಕ್ಷಿಣ- 2ನೇ ಮುಖ್ಯ ರಸ್ತೆವರೆಗೆ ಕಾರ್ಯ ವಿಧಾನದ ಅನುಸಾರ ಕಾರ್ಯ ನಿರ್ವಹಿಸಲಾಗುವುದು.
ಕೋವಿಡ್-19 ವೈರಸ್ ನಿಯಂತ್ರಣ ಕಾರ್ಯತಂತ್ರಗಳ ಸುಲಭ ಅನುಷ್ಠಾನಕ್ಕಾಗಿ ನಿಯಂತ್ರಿತ ವಲಯ, ಬಫರ್ ವಲಯಗಳನ್ನಾಗಿ ವಿಭಾಗಿಸಿ ಅವುಗಳ ನಿರ್ವಹಣೆಗಾಗಿ ಕಾರ್ಯತಂತ್ರ ರೂಪಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಮೇರೆಗೆ ಏ.17ರಂದು ನಿಗಧಿಪಡಿಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ ಮೇರೆಗೆ ನಿಯಂತ್ರಿತ ವಲಯ (ನೋವೆಲ್ ಕೊರೊನಾ ವೈಸರ್-ಪಾಸಿಟಿವ್ ವ್ಯಕ್ತಿಯ ನಿವಾಸ ಇರುವ ಸುತ್ತಮುತ್ತಲಿನ ಪ್ರದೇಶ) ಪ್ರದೇಶದಲ್ಲಿ ವೈರಸ್ ಸೋಂಕು ಹರಡದಂತೆ ತೀವ್ರ ತರಹದ ಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕಾದ ಅಗತ್ಯವಿದೆ.
ಈ ಪ್ರದೇಶದಲ್ಲಿ ಹಿಂದಿನ ಬಾರಿ ಪಾಸಿಟಿವ್ ಪ್ರಕರಣ ವರದಿಯಾದ 28 ದಿನಗಳ ಅವಧಿಯಲ್ಲಿ ಯಾವುದೇ ಹೊಸ ಕೋವಿಡ್-19 ಪ್ರಕರಣ ಆ ಪ್ರದೇಶದಲ್ಲಿ ವರದಿಯಾಗಿರಬಾರದು ಅಥವಾ ನಿಯಂತ್ರಿತ ವಲಯದಲ್ಲಿ ಹತ್ತಕ್ಕಿಂತ ಕಡಿಮೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿರುವ ವ್ಯಕ್ತಿಗಳು ಸಕ್ರಿಯ ಗೃಹ ದಿಗ್ಭಂಧನಲ್ಲಿ ಇಡಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಘೋಷಣೆ ಮಾಡಲಾಗಿದೆ.
ಘಟನಾ ಕಮಾಂಡರ್ ನೇಮಕ: ಪ್ರತಿಯೊಂದು ನಿಯಂತ್ರಿತ ವಲಯಕ್ಕೆ ಒಬ್ಬ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಅಥವಾ ಒಂದನೇ ದರ್ಜೆಯ ಅಧಿಕಾರಿಗೆ ದಂಡಾಧಿಕಾರಿಯ ಅಧಿಕಾರಿಗಳನ್ನು ನೀಡಿ ಅವರನ್ನು ಘಟನಾ ನಿಯಂತ್ರಕನನ್ನಾಗಿ ನೇಮಿಸಬೇಕಾದ ಹಿನ್ನೆಲೆಯಲ್ಲಿ ಘಟನಾ ಕಮಾಂಡರ್ ಆಗಿ ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
