ದಿನದ ಸುದ್ದಿ
ಕ್ಯಾನ್ಸರ್ ಪೀಡಿತನಿಗೆ ಔಷಧಿ ತಲುಪಿಸಿ ಮಾನವೀಯತೆ ಮೆರೆದ ಸಿಬ್ಬಂದಿ

ಸುದ್ದಿದಿನ,ಧಾರವಾಡ : ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಅವಧಿಯಲ್ಲಿ ಬಿಡುವಿಲ್ಲದ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ದೀಪಾಚೋಳನ್ ಹಾಗೂ ಅವರ ಸಿಬ್ಬಂದಿ ತಮ್ಮ ಕಾರ್ಯದೊತ್ತಡದ ಮಧ್ಯೆಯೂ ಮಾನವೀಯತೆಯಿಂದ ವೃದ್ಧೆಯೊಬ್ಬರ ಸಂಕಷ್ಟಕ್ಕೆ ಸ್ಪಂದಿಸಿ, ಕ್ಯಾನ್ಸರ್ ಪೀಡಿತ ವ್ಯಕ್ತಿಗೆ ಬೆಂಗಳೂರಿನಿಂದ ಔಷಧಿ ತರಿಸಿ ಕೊಟ್ಟಿದ್ದಾರೆ.
ನಗರದ ಚರಂತಿಮಠ ಗಾರ್ಡನ್ನಿನ ಜೈ ಜಿನೇಂದ್ರ ಕಾಲನಿಯ ನಿವಾಸಿ ಶಕುಂತಲಾ ಎಂಬ ವಯೋವೃದ್ಧ ಮಹಿಳೆಯೊಬ್ಬರು ಕಳೆದ ನಾಲ್ಕೈದು ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಕ್ಯಾನ್ಸರ್ ಪೀಡಿತನಾಗಿರುವ ತನ್ನ 27 ವರ್ಷದ ಮೊಮ್ಮಗ ಸುನೀಲ ಅವಾರಿಗೆ ಔಷಧಿ ತೆಗೆದುಕೊಂಡು ಬರಲು ವಾಹನ ಪಾಸ್ ಪಡೆಯಲು ಬಂದಾಗ, ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ತನ್ನ ಸಮಸ್ಯೆಗಳನ್ನು ನಿವೇದಿಸಿಕೊಂಡಿದ್ದರು. ಆಗ ಜಿಲ್ಲಾಧಿಕಾರಿಗಳು ಪಾಸ್ ವಿತರಣೆ ವಿಭಾಗದ ಸಿಬ್ಬಂದಿಯನ್ನು ಕರೆದು ಈ ಅಜ್ಜಿಗೆ ಸಹಾಯ ಮಾಡಲು ಸೂಚಿಸಿದರು.
ಕ್ಯಾನ್ಸರ್ ಪೀಡಿತನಾಗಿರುವ ಮೊಮ್ಮಗನಿಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತಿ ತಿಂಗಳು ಸುಮಾರು 30 ಸಾವಿರ ರೂ.ಮೌಲ್ಯದ ಔಷಧಿ,ಮಾತ್ರೆಗಳು ಬೇಕಾಗುತ್ತದೆ.ಕಿದ್ವಾಯಿಯಲ್ಲಿ ಈ ಮಾತ್ರೆಗಳು ಅಲ್ಲಿನ ವೈದ್ಯರಾದ ಡಾ.ಶ್ಯಾಮಸುಂದರ ಅವರ ಸಹಾಯದಿಂದ ತಮಗೆ ಉಚಿತವಾಗಿ ಸಿಗುತ್ತಿವೆ.ಪ್ರತಿ ತಿಂಗಳು ಆ ವೈದ್ಯರೇ ಬಸ್ ಚಾರ್ಜ್ ಸಹ ನೀಡಿ ಉಪಕರಿಸುತ್ತಿರುವುದನ್ಮು ವಿವರಿಸಿದ್ದಾಳೆ.
ಈಗ ತನಗೆ ಬಾಡಿಗೆ ಕಾರು ತೆಗೆದುಕೊಂಡು ಬೆಂಗಳೂರಿಗೆ ಹೋಗಿ ಔಷಧಿ ತರುವ ಸಾಮರ್ಥ್ಯವೂ ಇಲ್ಲ ಎಂಬುದನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗೆ ಹೇಳಿದ್ದಾಳೆ. ಮಾನವೀಯತೆಯಿಂದ ಈ ಪ್ರಕರಣದಲ್ಲಿ ಸಹಾಯ ಮಾಡಲು ನಿರ್ಧರಿಸಿದ ಸಿಬ್ಬಂದಿ, ಅನಿವಾರ್ಯ ಕಾರಣದಿಂದ ಬೆಂಗಳೂರಿಗೆ ಹೋಗಲು ಪಾಸ್ ಕೇಳಲು ಬಂದ ಜಿಲ್ಲಾ ಖಜಾನೆಯ ಸಿಬ್ಬಂದಿಯೊಬ್ಬರ ಮೂಲಕ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಿಂದ ಔಷಧಿ ತೋರಿಸಿಕೊಟ್ಟಿದ್ದಾರೆ.
ಉಚಿತ ಪರೀಕ್ಷೆ
ಔಷಧಿ ಬಂದ ನಂತರ ಅದನ್ನು ನೇರವಾಗಿ ರೋಗಿಗೆ ಕೊಡುವ ಮೊದಲು ರಕ್ತ ಪರೀಕ್ಷೆಯೊಂದು ಕಡ್ಡಾಯವಾಗಿತ್ತು. ಆಗ ನವನಗರದ ಕ್ಯಾನ್ಸರ್ ಆಸ್ಪತ್ರೆಯ ಡಾ.ಉಮೇಶ ಹಳ್ಳಿಕೇರಿಯವರನ್ನು ಸಂಪರ್ಕಿಸಿದಾಗ ಅವರೂ ಕೂಡ ಉಚಿತವಾಗಿ ಪರೀಕ್ಷೆ ಮಾಡಿ ವರದಿ ನೀಡಿದ ನಂತರ , ಆ ವರದಿಯನ್ನು ಬೆಂಗಳೂರಿನ ತಜ್ಞ ವೈದ್ಯರಾದ ಡಾ.ಶಾಮಸುಂದರ್ ಅವರಿಗೆ ವಾಟ್ಸಪ್ ಮೂಲಕ ಕಳುಹಿಸಿ, ಅವರ ಸಲಹೆ ಪಡೆದ ನಂತರ ರೋಗಿಗೆ ಔಷಧಿ ತೆಗೆದುಕೊಳ್ಳಲು ಸಾಧ್ಯವಾಗಿದೆ.
ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅವರ ಕಚೇರಿಯ ಪಾಸ್ ವಿತರಣಾ ವಿಭಾಗದ ನೋಡಲ್ ಅಧಿಕಾರಿ ದೀಪಕ ಮಡಿವಾಳರ, ತಹಸೀಲ್ದಾರ ಪ್ರವೀಣ ಹುಚ್ಚಣ್ಣವರ, ಕೆ.ಎ.ಜಂಗೂರ, ಧರಣೇಂದ್ರ ಕಸಮಾಳಗಿ, ಇಸ್ಮಾಯಿಲ್ ಮಳಲಿ, ಜಿ.ಬಿ.ಪಾಟೀಲ, ಅರವಿಂದ, ಸುನೀಲ ,ಅಶೋಕ ನಿಂಗೋಳಿ ಮತ್ತಿತರರು ಮುತುವರ್ಜಿ ವಹಿಸಿ ತನ್ನ ಮೊಮ್ಮಗನ ಚಿಕಿತ್ಸೆಗೆ ನೆರವಾಗಿದ್ದನ್ನು ಇಂದು ವಯೋವೃದ್ಧ ಅಜ್ಜಿ ಶಕುಂತಲಾ ಸ್ವತಃ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನದುಂಬಿ ಸ್ಮರಿಸಿ,ಕೃತಜ್ಞತೆ ಸಲ್ಲಿಸಿದಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
