ದಿನದ ಸುದ್ದಿ
ದಾವಣಗೆರೆ | ಈರುಳ್ಳಿ ಲಾರಿಯಲ್ಲಿ ಹೋಗಿ ಬಂದವರಿಗೆ ಸೋಂಕಿನ ಲಕ್ಷಣಗಳಿವೆ : ಎಸ್ಪಿ ಹನುಮಂತರಾಯ

ಸುದ್ದಿದಿನ, ದಾವಣಗೆರೆ : ಸೊಂಕಿನ ಮೂಲದ ಕುರಿತು ಮುಖ್ಯವಾಗಿ ಹಾಸನ, ಚಿತ್ರದುರ್ಗ, ಬಳ್ಳಾರಿ ಹಾಗೂ ಬಾಗಲಕೋಟೆಗೆ ಗೂಡ್ಸ್ ವಾಹನದಲ್ಲಿ ಹೋಗಿ ಬಂದಂತಹವರ ಮಾಹಿತಿ ಸಿಕ್ಕಿದೆ. ಈರುಳ್ಳಿ ತುಂಬಿದ ಲಾರಿಗಳಲ್ಲಿ ಹೋಗಿ ಬಂದವರಿಗೆ ಲಕ್ಷಣ ಕಂಡುಬಂದಿದೆ. ಅದನ್ನು ಕೂಲಂಕಂಷವಾಗಿ ಪರಿಶೀಲಿಸಲಾಗುತ್ತಿದೆ. ಇನ್ನೂ ಸ್ಪಲ್ಪ ಸಮಯ ಬೇಕಾಗಿದೆ. ವೈದ್ಯಾಧಿಕಾರಿಗಳ ಸಹಾಯದಿಂದ ವಿಚಾರಣೆ ಮಾಡಿ ಕೂಡಲೇ ಪತ್ತೆ ಹಚ್ಚಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ತಿಳಿಸಿದರು.
ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ತಂಡದೊಂದಿಗೆ ಸೀಲ್ಡೌನ್ ಪ್ರದೇಶವಾದ ಜಾಲಿನಗರದಲ್ಲಿ ಡ್ರೋನ್ ಪರಿವೀಕ್ಷಣೆ ಮತ್ತು ಸರ್ವೇಕ್ಷಣಾ ತಂಡದ ತಪಾಸಣೆ ಕಾರ್ಯ ಪರಿಶೀಲಿಸಲು ಭೇಟಿ ನೀಡಿ ಬಳಿಕ ಅವರು ಮಾತನಾಡಿದರು.
ಈಗಾಗಲೇ 5 ಕಂಟೈನ್ಮೆಂಟ್ ಜೋನ್ಗಳನ್ನು ಸೀಲ್ಡೌನ್ ಮಾಡಲಾಗಿದೆ. ಎಲ್ಲ ಕಡೆಯಲ್ಲಿಯೂ ಸ್ಟೀಲ್ ಬ್ಯಾರಿಕೇಡ್ ಬಳಸಿ ನಿಯಂತ್ರಣ ಮಾಡಲಾಗಿದೆ. ಈ ಕಂಟೈನ್ಮೆಂಟ್ ಜೋನ್ಗೆ ಸಂಬಂಧಿಸಿದಂತೆ ತಲಾ ಐವರು ಕಮಾಂಡರ್ ಮತ್ತು ಇನ್ಸ್ಪೆಕ್ಟರ್ ನೇಮಕ ಮಾಡಲಾಗಿದೆ. ಈ ಐವರು ಇನ್ಸ್ಪೆಕ್ಟರ್ಗಳು ಆ ಏರಿಯಾದಲ್ಲಿ ಬಿಗಿ ಬಂದೊಬಸ್ತ್ ಮಾಡಿಕೊಳ್ಳುತ್ತಾರೆ.
ಆ ಏರಿಯಾಕ್ಕೆ ಹೋಗಲು ಮತ್ತು ಬರಲು ಒಂದೇ ಗೇಟ್ ತೆರೆಯಲಾಗಿದ್ದು, ಅಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಜೊತೆಗೆ ಜನರಿಗೆ ಬೇಕಾದಂತಹ ಎಲ್ಲಾ ಅಗತ್ಯ ವಸ್ತು ಹಾಗೂ ಔಷಧಗಳನ್ನು ಅಲ್ಲಿಯೇ ಸರಬರಾಜು ಮಾಡುವಂತೆ ನೋಡಿಕೊಳ್ಳಲಾಗಿದೆ ಎಂದರು.
ಜ್ವರ ಇದ್ದವರು ಮನೆಯಲ್ಲಿಯೇ ಇರುವ ಹಿನ್ನೆಲೆ ಕಾರ್ಯಾಚರಣೆ
ಈ 5 ಕಂಟೈನ್ಮೆಂಟ್ ಜೋನ್ಗಳಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಸರ್ವೇಕ್ಷಣಾಧಿಕಾರಿಗಳು ಮನೆ ಮನೆಗೆ ಹೋಗಿ ಸಾರಿ ಹಾಗೂ ಐಎಲ್ಐ ಲಕ್ಷಣ ಇರುವವರನ್ನು ಪತ್ತೆ ಮಾಡಿ ಅವರ ಗಂಟಲು ದ್ರವ ಸಂಗ್ರಹಿಸಿ ಚಿಕಿತ್ಸೆ ಹಾಗೂ ಐಸೋಲೇಟ್ ಮಾಡುವುದು ಬಹಳ ಮುಖ್ಯವಾದ ಕೆಲಸವಾಗಿದೆ.
ಜೊತೆಗೆ ಕೆಲವರು ಜ್ವರ ಇದ್ದವರು ಮಾತ್ರೆ ತೆಗೆದುಕೊಂಡು ಮನೆಯಲ್ಲಿಯೇ ಇರುವ ಬಗ್ಗೆ ಮಾಹಿತಿ ಬಂದಿದೆ.ಅದರ ಆಧಾರದ ಮೇಲೆ ಈ ಕಾರ್ಯಚರಣೆ ಮಾಡಲಾಗಿದ್ದು, ಆ ಮೂಲಕ ಲಕ್ಷಣ ಇರುವವರನ್ನು ನಾವು ಚಿಕಿತ್ಸೆಗೆ ಒಳಪಡಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ನಾಗರಿಕರ ಸಲಹೆ ಮೇರೆಗೆ ಸಮಯ ಜಾರಿ
ಜನರು ಅನಾವಶ್ಯಕ ಸಂಚರಿಸದೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆವರೆಗಿನ ಅವಧಿಯಲ್ಲಿ ತಮಗೆ ಏನು ಬೇಕು ಅದನ್ನು ತೆಗೆದುಕೊಂಡು ಮನೆಯಲ್ಲಿಯೇ ಇರಬೇಕು. ಇಡೀ ದಿನ ಸಮ್ಮನೆ ಸುತ್ತಾಡುವುದನ್ನು ನಿಯಂತ್ರಿಸಲು ಬಹಳ ಅಚ್ಚುಕಟ್ಟಾಗಿ ಜಿಲ್ಲೆಯ ನಾಗರಿಕರ ಸಲಹೆ ಮೇರೆಗೆ ಈ ಸಮಯ ಜಾರಿ ಮಾಡಲಾಗಿದೆ. ಸೋಂಕು ಹರಡವುದನ್ನು ನಿಯಂತ್ರಿಸುವ ವಿಶ್ವಾಸವಿದೆ. ಈ ಹಿನ್ನೆಲೆಯಲ್ಲಿ ಗಂಭೀರ ಪರಿಸ್ಥಿತಿ ಆಗಿರುವುದರಿಂದ ಇನ್ನೂ 20 ದಿನ ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
