ದಿನದ ಸುದ್ದಿ
26ರ ಕಾರ್ಮಿಕರ ಮುಷ್ಕರ ಏಕೆ ನಿರ್ಣಾಯಕ..?
- ನಾ ದಿವಾಕರ
ಕೋವಿದ್ 19ರ ಬಿಕ್ಕಟ್ಟಿನಿಂದ ಭಾರತ ಪಾರಾಗುವುದೆಂದು ? ಈ ಪ್ರಶ್ನೆ ಪ್ರತಿಯೊಬ್ಬರ ಮನಸಿನಲ್ಲೂ ಕಾಡುತ್ತಿದೆ. ಕೋವಿದ್ 19 ಭಾರತದ ದುಡಿಯುವ ವರ್ಗಗಳಿಗೆ ಶಾಪವಾಗಿ ಪರಿಣಮಿಸಿದ್ದರೆ ಆಳುವ ವರ್ಗಗಳಿಗೆ ವರದಾನ ಆದಂತಿದೆ. ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಮನೆಗಳಿಗೆ ಹಿಂದಿರುಗಲು, ಸಾವಿರಾರು ಕಿಲೋಮೀಟರ್ ನಡೆದು, ಬಿರುಬಿಸಿಲಿನಲ್ಲಿ ನಿತ್ರಾಣರಾಗಿ, ಅಸುನೀಗಿದ ನೂರಾರು ವಲಸೆ ಕಾರ್ಮಿಕರು ಸರ್ಕಾರದ ಗಣನೆಗೇ ಬರಲಿಲ್ಲ ಎನ್ನುವುದನ್ನು ಗಮನಿಸಿದರೆ ನಾವು ಎಂತಹ ಅಮಾನುಷ ಆಡಳಿತ ವ್ಯವಸ್ಥೆಯಲ್ಲಿದ್ದೇವೆ ಎಂದು ತಿಳಿಯುತ್ತದೆ.
ಹೊರದೇಶಗಳಿಂದ ಬಂದಿರುವ ಲಕ್ಷಾಂತರ ಅಕ್ರಮ(?) ವಲಸೆ ಕಾರ್ಮಿಕರ ಬಗ್ಗೆ ಕರಾರುವಾಕ್ಕಾಗಿ ಮಾಹಿತಿ ಲಭ್ಯವಿದೆ ಎಂದು ಎಲ್ಲರನ್ನೂ ಹೊರಹಾಕಲು ಸಿದ್ಧತೆ ನಡೆಸಿದ್ದ ಸರ್ಕಾರವೊಂದಕ್ಕೆ, ತನ್ನ ನೆಲದಲ್ಲೇ ವಲಸೆ ಕಾರ್ಮಿಕರು ಎಷ್ಟಿದ್ದಾರೆ ಎನ್ನುವ ಸ್ಪಷ್ಟ ಮಾಹಿತಿ ಇಲ್ಲ ಎಂದರೆ ನಾವು ಇನ್ನೆಂತಹ ನಿಷ್ಕ್ರಿಯ ಆಡಳಿತ ವ್ಯವಸ್ಥೆಯಲ್ಲಿದ್ದೇವೆ ಎಂದು ಅರಿವಾಗುತ್ತದೆ.
ದೇಶದ ಸಂಪತ್ತಿನ ಉತ್ಪಾದನೆಗೆ ಅನಿವಾರ್ಯವಾಗಿ ಬೇಕಾಗುವ ಜೀವಗಳು ಬದುಕಿದ್ದಾಗ ಶೋಷಣೆಗೊಳಗಾದರೆ ಅಳಿದ ಮೇಲೆ ಅನಾಥವಾಗುವ ಒಂದು ವಿಕೃತ ಪರಿಸ್ಥಿತಿಯಲ್ಲಿ ಈ ದೇಶದ ಶ್ರಮಜೀವಿಗಳು ತಮ್ಮ ಬೆವರು ಹರಿಸಿ ದುಡಿಯುತ್ತಿದ್ದಾರೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಬಳಕೆಯಾಗುವ ಶ್ರಮ ಶಕ್ತಿ ಮತ್ತು ಈ ಶ್ರಮ ಶಕ್ತಿಯ ವಾರಸುದಾರರಾದ ಶ್ರಮಿಕರು ಯಾವುದೇ ಒಂದು ದೇಶದ ತಳಪಾಯ.
ಅರ್ಥಶಾಸ್ತ್ರಜ್ಞರು, ಮಾರುಕಟ್ಟೆ ತಜ್ಞರು ಮತ್ತು ತಮ್ಮ ಹವಾನಿಯಂತ್ರಿತ ಕೋಣೆಗಳಲ್ಲಿ ಕುಳಿತು ಅಭಿವೃದ್ಧಿಯ ನೀಲನಕ್ಷೆಯನ್ನು ಸಿದ್ಧಪಡಿಸುವ ಹಿತವಲಯದ ಅಧಿಕಾರಶಾಹಿ ವರ್ಗ ದೇಶದ ಜಿಡಿಪಿ , ಅಂದರೆ ನಿವ್ವಳ ದೇಶೀಯ ಉತ್ಪನ್ನದ ಏರಿಳಿತಗಳನ್ನು ಗಮನಿಸುತ್ತಲೇ ಇರುತ್ತಾರೆ.
ಆದರೆ ಈ ಸೂಚ್ಯಂಕದ ಏರಿಳಿತದ ಹಿಂದೆ ಇರುವ ಉತ್ಪನ್ನಗಳ ಉತ್ಪಾದನಾ ಪ್ರಕ್ರಿಯೆಗೆ ಲಕ್ಷಾಂತರ ಕೈಗಳು ದುಡಿದಿರುತ್ತವೆ, ಲಕ್ಷಾಂತರ ಕುಟುಂಬಗಳು ಹಸಿವನ್ನೂ ಲೆಕ್ಕಿಸದೆ ಶ್ರಮ ವಹಿಸಿರುತ್ತವೆ. ಗ್ರಾಮೀಣ ಕೃಷಿ ಮತ್ತು ಕೂಲಿ ಕಾರ್ಮಿಕರಿಂದ ಹಿಡಿದು ದೇಶದ ಬೃಹತ್ ಕೈಗಾರಿಕೆಗಳ ಕಾರ್ಮಿಕರವರೆಗೂ ಶ್ರಮಶಕ್ತಿ ಬಳಕೆಯಾಗಿರುತ್ತದೆ.
ಈ ಶ್ರಮಶಕ್ತಿಯನ್ನು ತನ್ನಿಚ್ಚೆಯಂತೆ, ಅಗ್ಗದ ಕೂಲಿ ನೀಡಿ, ಬಳಸಿಕೊಳ್ಳಲು ಬಂಡವಾಳಿಗರು ಮತ್ತು ಬಂಡವಾಳ ವ್ಯವಸ್ಥೆ ಸದಾ ಸಿದ್ಧವಾಗಿರುತ್ತದೆ. ಇಂದು ಈ ಬೃಹತ್ ಸಮುದಾಯ ಅಪಾಯದ ಅಂಚಿನಲ್ಲಿದೆ. ಭಾರತದ ಬಂಡವಾಳ ವ್ಯವಸ್ಥೆ ತನ್ನ ಕ್ರೌರ್ಯದ ಪರಾಕಾಷ್ಠೆ ತಲುಪಿರುವುದನ್ನು ವಲಸೆ ಕಾರ್ಮಿಕರ ಬವಣೆಯಲ್ಲಿ ಕಾಣದೆ ಹೋದರೆ ಬಹುಶಃ ನಾವು ದೃಷ್ಟಿಹೀನರು ಎಂದೇ ಭಾವಿಸಬೇಕಾಗುತ್ತದೆ. ಭಾರತದ ಶ್ರಮಜೀವಿಗಳು ಕಳೆದ ಮೂರು ದಶಕಗಳಿಂದಲೂ ಕವಲು ಹಾದಿಯಲ್ಲೇ ನಡೆದುಬಂದಿದ್ದಾರೆ. ಇದೀಗ ತಮ್ಮ ಭವಿಷ್ಯದ ಹಾದಿಯನ್ನೇ ಕಳೆದುಕೊಳ್ಳುವ ಸ್ಥಿತಿ ತಲುಪಿದ್ದಾರೆ.
ಕೃಷಿ, ಗುಡಿ ಕೈಗಾರಿಕೆಗಳಿಂದ ಹಿಡಿದು ಬ್ಯಾಂಕ್ ಮತ್ತು ವಿಮಾ ಕ್ಷೇತ್ರದವರೆಗಿನ ಸಮಸ್ತ ಕಾರ್ಮಿಕ ವರ್ಗ ಇಂದು-ನಾಳಿನ ಚಿಂತೆಯಲ್ಲಿದ್ದರೆ ಅದಕ್ಕೆ ಮೂಲ ಕಾರಣ ಈ ದೇಶದ ಆಳುವ ವರ್ಗಗಳು ಅನುಸರಿಸುತ್ತಿರುವ ನವ ಉದಾರವಾದಿ ಆರ್ಥಿಕ ನೀತಿ ಎನ್ನುವುದು ವಾಸ್ತವ.
ಆದರೆ ಈ ಅಮಾನುಷ ನೀತಿಗಳ ವಿರುದ್ಧ ಒಂದು ಸಮಗ್ರ ಹೋರಾಟ ರೂಪಿಸುವಲ್ಲಿ ನಾವು ಎಡವಿದ್ದೆಲ್ಲಿ ಎಂಬ ಪ್ರಶ್ನೆ ಎದುರಾದಾಗ ಕಾರ್ಮಿಕ ಚಳುವಳಿಯ ಮುಂಚೂಣಿಯಲ್ಲಿರುವ ಎಲ್ಲ ಸುಶಿಕ್ಷಿತರೂ ಮತ್ತೊಂದು ಮಾಸ್ಕ್ ಧರಿಸಬೇಕಾಗುತ್ತದೆ. ಇದು ಕಟು ವಾಸ್ತವ. ಈ ಲೋಪವನ್ನು ಒಪ್ಪಿಕೊಳ್ಳದೆ, ಆತ್ಮರತಿಯಲ್ಲೇ ಬದುಕುವುದಾದರೆ ನಮಗೆ, ಅಂದರೆ ಶ್ರಮಜೀವಿ ವರ್ಗಕ್ಕೆ, ನಾಳಿನ ನಕ್ಷತ್ರಗಳನ್ನೂ ಎಣಿಸಲಾಗುವುದಿಲ್ಲ.
ಏಕೆಂದರೆ ಇಂದು ಕಾರ್ಮಿಕ ವರ್ಗ ಎರಡು ನೆಲೆಯಲ್ಲಿ ಸಂಘರ್ಷ ನಡೆಸಬೇಕಿದೆ. ಮೊದಲನೆಯದು ನೂರಾರು ವರ್ಷಗಳ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ಪಡೆದಿರುವ ದುಡಿಮೆಯ ಹಕ್ಕುಗಳನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಆತಂಕ. ದುಡಿಮೆಯ ಅವಧಿ ವಿಸ್ತರಣೆ, ಮುಷ್ಕರದ ಹಕ್ಕು ನಿರಾಕರಣೆ, ಸಂಘಟನೆಯ ಹಕ್ಕುಗಳ ಮೇಲಿನ ನಿರ್ಬಂಧ, ಕಾರ್ಮಿಕರನ್ನು ತಮ್ಮ ಇಚ್ಚೆಗನುಸಾರ ನೇಮಿಸಿ ವಜಾ ಮಾಡಲು ಮಾಲಿಕರಿಗೆ ನೀಡಿರುವ ಹಕ್ಕುಗಳು ಮತ್ತು ಶಾಸನಗಳ ಮೂಲಕ ಸುಶಿಕ್ಷಿತ ಕಾರ್ಮಿಕ ವರ್ಗದ ಅಭಿವ್ಯಕ್ತಿ ಸ್ವಾತಂತ್ರ್ಯದ ನಿಯಂತ್ರಣ ಹೀಗೆ ದುಡಿಮೆಗಾರರು ಒಂದು ಶತಮಾನದ ಹಿಂದಿನ ವ್ಯವಸ್ಥೆಗೆ ಜಾರು ಅಪಾಯವನ್ನು ಎದುರಿಸುತ್ತಿದ್ದಾರೆ.
ಎರಡನೆಯದು, ದುಡಿಮೆಯ ಕ್ಷೇತ್ರದ ಹೊರಗೆ ಇನ್ನೂ ಹೆಚ್ಚಿನ ಅಪಾಯಗಳನ್ನು ಎದುರಿಸಬೇಕಿದೆ. 70 ವರ್ಷಗಳ ಅವಧಿಯಲ್ಲಿ ಸಂವಿಧಾನದ ಕರ್ತೃಗಳು ಮತ್ತು ಸ್ವತಂತ್ರ ಭಾರತದ ನಿರ್ಮಾತೃಗಳು ರೂಪಿಸಿ ಪೋಷಿಸಿಕೊಂಡು ಬಂದಿದ್ದ “ ಸ್ವಾವಲಂಬಿ ” ಭಾರತದ ಕನಸನ್ನು ನುಚ್ಚು ನೂರು ಮಾಡಲು ನಾವು “ ಆತ್ಮನಿರ್ಭರ ” ಭಾರತವನ್ನು ನಿರ್ಮಿಸಬೇಕಿದೆ. ನೆಹರೂ ಯುಗದ ಸ್ವಾವಲಂಬನೆಗೂ ಮೋದಿ ಯುಗದ ಆತ್ಮನಿರ್ಭರತೆಗೂ ನಿಘಂಟಿನಲ್ಲಿ ಒಂದೇ ಅರ್ಥ ಕಂಡುಬರುತ್ತದೆ. ಆದರೆ ವಾಸ್ತವ ಭಿನ್ನ. ಸ್ವಾತಂತ್ರ್ಯ ಪೂರ್ವ ದಾರ್ಶನಿಕರು ಕಂಡ ಸ್ವಾವಲಂಬಿ ಭಾರತದಲ್ಲಿ ಈ ದೇಶದ ಸಂಪತ್ತು ಸಮಸ್ತ ಭಾರತೀಯರಿಗೆ ಸೇರಬೇಕು ಎನ್ನುವ ಉದಾತ್ತ ಚಿಂತನೆ ಇತ್ತು. ಇಂದಿನ ಆತ್ಮನಿರ್ಭರತೆ ಈ ಸಂಪತ್ತು ಮತ್ತು ಸಂಪನ್ಮೂಲಗಳನ್ನು ವಸಾಹತುಶಾಹಿಯ ಆಧುನಿಕ ಅವತಾರ ಎನ್ನಬಹುದಾದ ಕಾರ್ಪೋರೇಟ್ ಔದ್ಯಮಿಕ ವಲಯಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ.
ಬ್ರಿಟೀಷ್ ಸಾಮ್ರಾಜ್ಯ ಭಾರತವನ್ನು ಎರಡು ಶತಮಾನಗಳ ದಾಸ್ಯಕ್ಕೆ ಒಳಪಡಿಸಲು ಕಾರಣ ಇಲ್ಲಿನ ರಾಜ ಮಹಾರಾಜರು, ಮೇಲ್ವರ್ಗದ ಶ್ರೀಮಂತ ವ್ಯಾಪಾರಿಗಳು ಈಸ್ಟ್ ಇಂಡಿಯಾ ಕಂಪನಿಗೆ ರತ್ನಗಂಬಳಿ ಹಾಕಿ ಸ್ವಾಗತಿಸಿದ್ದು ಎನ್ನುವುದು ಅಳಿಸಲಾಗದ ಇತಿಹಾಸ. ಈ ದಾಸ್ಯದಿಂದ ವಿಮೋಚನೆ ಹೊಂದಿದ ಭಾರತ ತಾನು ಕಳೆದುಕೊಂಡ ಸಂಪನ್ಮೂಲಗಳನ್ನು ಮತ್ತು ನೈಸರ್ಗಿಕ ಆಸ್ತಿಯನ್ನು ಮರಳಿ ಗಳಿಸಲು ಐದಾರು ದಶಕಗಳೇ ಬೇಕಾದವು ಎನ್ನುವುದು ವಾಸ್ತವ.
ಈ ಮರಳಿ ಪಡೆಯುವ ಪ್ರಕ್ರಿಯೆಯಲ್ಲೇ ದೇಶದ ಕೋಟ್ಯಂತರ ಜನತೆಗೆ ಬದುಕು ಕಟ್ಟಿಕೊಳ್ಳಲು ಸೂರು ಒದಗಿಸಿದ ಸಾರ್ವಜನಿಕ ಉದ್ದಿಮೆಗಳು ಸ್ಥಾಪನೆಯಾಗಿದ್ದು ಸಮಕಾಲೀನ ಇತಿಹಾಸ. ಈಗ ಈ ಸಾರ್ವಜನಿಕ ಉದ್ದಿಮೆಗಳು ಒಂದೊಂದಾಗಿ ಕೈಜಾರುತ್ತಿವೆ. ಕರ್ನಾಟಕದ ಪ್ರತಿಷ್ಠಿತ ಸಾರ್ವಜನಿಕ ಉದ್ದಿಮೆಗಳು ಮತ್ತು ಬ್ಯಾಂಕುಗಳು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿರುವುದನ್ನು ಗಮನಿಸುತ್ತಲೇ ಇದ್ದೇವೆ.
ಸಾರಿಗೆ, ಸಂಪರ್ಕ, ಇಂಧನ, ಹಣಕಾಸು, ಸರಕು ಉತ್ಪಾದನೆ, ಕೃಷಿ ಉತ್ಪಾದನೆ, ಹೈನುಗಾರಿಕೆ ಈ ಎಲ್ಲ ಕ್ಷೇತ್ರಗಳಲ್ಲಿ ದುಡಿದ ಕೋಟ್ಯಂತರ ಜೀವಗಳ ಬೆವರಿನ ಹನಿಗಳನ್ನು ನಾವು ಚಲಿಸುವ ರೈಲುಗಳಲ್ಲಿ, ಸಾರ್ವಜನಿಕ ಉದ್ದಿಮೆಗಳ ಬೃಹತ್ ಕಟ್ಟಡಗಳಲ್ಲಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ, ಬ್ಯಾಂಕು ಮತ್ತು ವಿಮಾ ವಲಯದ ಫಲಕಗಳಲ್ಲಿ, ದೂರ ಸಂಪರ್ಕದ ತಂತುಗಳಲ್ಲಿ ಕಾಣದೆ ಹೋದರೆ ನಮ್ಮಷ್ಟು ಕೃತಘ್ಞರು ಮತ್ತಾರೂ ಇರಲಾರರು. ಹೌದು ನಾವು ಇದನ್ನು ಮಾನ್ಯ ಮಾಡುತ್ತಿದ್ದೇವೆ.
ಆದರೆ ಈ ಪ್ರತಿಯೊಂದು ಕ್ಷೇತ್ರದ, ವಲಯದ ಉದ್ದಿಮೆಗಳು ಒಂದೊಂದಾಗಿ ನಮ್ಮ ಕೈಜಾರಿ ಮತ್ತದೇ ಉದ್ಯಮಿಗಳ ಪಾಲಾಗುತ್ತಿರುವುದನ್ನು ಕಂಡೂ ಕಾಣದಂತೆ ನಮ್ಮ ಹಿತವಲಯಗಳಲ್ಲಿ ವಿರಮಿಸುತ್ತಿದ್ದೇವೆ. ಇಂದಿನ ಭಾರತದ ಯುವ ಪೀಳಿಗೆಯಲ್ಲಿ ಹರಿಯುತ್ತಿರುವುದೇ ಈ ಸಾರ್ವಜನಿಕ ಉದ್ದಿಮೆಗಳ ಮತ್ತು ಈ ಉದ್ದಿಮೆಗಳನ್ನು ಕಟ್ಟಿ ಬೆಳೆಸಿದ ಕೋಟ್ಯಂತರ ಕಾರ್ಮಿಕರ ನೆತ್ತರು ಮತ್ತು ಬೆವರು ಎನ್ನುವುದನ್ನು ಡಿಜಿಟಲ್ ಯುಗದ “ ಶತಮಾನದ ಮಕ್ಕಳು ” ಅರ್ಥಮಾಡಿಕೊಳ್ಳಬೇಕಿದೆ. ಅವರಿಗೆ ಅರ್ಥಮಾಡಿಸುವ ಜವಾಬ್ದಾರಿ ಇದರ ಮೂಲ ಫಲಾನುಭವಿಗಳ ಮೇಲಿದೆ.
ದುರಂತ ಎಂದರೆ ಈ ಫಲಾನುಭವಿಗಳು ತಮಗೆ ಅನ್ನ ನೀಡಿದ ನೆಲೆಯನ್ನೇ ಮರೆತು ನವ ಉದಾರವಾದದ ಕರಾಳ ಬಾಹುಗಳಲ್ಲಿ ವಿರಮಿಸುತ್ತಿದ್ದಾರೆ. ಕೋವಿದ್ 19 ಸಂದರ್ಭದ ವಲಸೆ ಕಾರ್ಮಿಕರ ಬವಣೆಯೂ ಹಿತವಲಯದ ಮಧ್ಯಮ ವರ್ಗಗಳ ಕಣ್ತೆರೆಸಿಲ್ಲ ಎನ್ನುವುದು ದುರಂತ.
ಇದು ಒಂದು ಸಹಜ ಪ್ರಕ್ರಿಯೆ ಎನ್ನುವಂತೆ ಆಳುವ ವರ್ಗಗಳ ಎಲ್ಲ ನೀತಿಗಳನ್ನೂ ಅಪ್ಪಿಕೊಳ್ಳಲು ಸಿದ್ದರಾಗುತ್ತಿದ್ದಾರೆ. ಈ ನಡುವೆ ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳು, ಕೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಮತ್ತು “ ಪ್ರಜ್ಞಾವಂತ ” ನಾಗರಿಕರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ಕಾರ್ಮಿಕ ನೀತಿಗಳ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಇದರ ಒಂದು ಹೆಜ್ಜೆ ನವಂಬರ್ 26ರ ಸಾರ್ವತ್ರಿಕ ಮುಷ್ಕರ.
ಕಾಕತಾಳಿಯವೇನೋ ಎನ್ನುವಂತೆ ಈ ದಿನ ಎರಡು ಕಾರಣಗಳಿಗಾಗಿ ಮಹತ್ವ ಪಡೆಯುತ್ತದೆ. ಮೊದಲನೆಯದು ಇದು ಸಂವಿಧಾನ ದಿನ. ಅಂದರೆ ರಾಜಕೀಯ ಸ್ವಾತಂತ್ರ್ಯ, ಸಾಮಾಜಿಕ ಸ್ವಾತಂತ್ರ್ಯ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸುವ ಮೂಲಕ ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ದತೆಯ ಮೂಲಕ ಸಮ ಸಮಾಜವನ್ನು ಕಟ್ಟುವ ಕನಸು ಸಾಕಾರಗೊಳಿಸಲು ಭಾರತದ ಸಂವಿಧಾನವನ್ನು ಅಂಗೀಕರಿಸಲಾದ ದಿನ.
ಈ ಮೂರು ಸ್ವಾತಂತ್ರ್ಯಗಳಲ್ಲಿ ಒಂದು ಇಲ್ಲದೆ ಹೋದರೂ ನಮ್ಮ ಕನಸು ನನಸಾಗುವುದಿಲ್ಲ ಎಂಬ ಅಂಬೇಡ್ಕರ್ ಅವರ ಮಾತುಗಳು ಈಗ ನಮಗೆ ಇನ್ನೂ ಹೆಚ್ಚು ಪ್ರಸ್ತುತ ಎನಿಸಬೇಕಲ್ಲವೇ ? ಏಕೆಂದರೆ ಈ ಮೂರೂ ಸ್ವಾತಂತ್ರ್ಯಗಳ ಪರಿಕಲ್ಪನೆಯನ್ನೇ ಅಳಿಸಹಾಕುವಂತಹ ಕರಾಳ ಶಾಸನಗಳ ಪರ್ವ ನಮ್ಮೆದುರು ಬೃಹತ್ ಬಂಡೆಯಂತೆ ನಿಂತಿದೆ.
ಎರಡನೆಯ ಕಾರಣ ಭಾರತದ ಅಖಂಡತೆ ಮತ್ತು ಏಕತೆಗೆ ಧಕ್ಕೆ ಉಂಟುಮಾಡುವಂತಹ ಮುಂಬೈ ಭಯೋತ್ಪಾದಕ ದಾಳಿ ನಡೆದದ್ದು ಇದೇ ದಿನ, 2008ರಲ್ಲಿ. ನಮಗೆ ನಾವೇ ಅರ್ಪಿಸಿಕೊಂಡ ಸಂವಿಧಾನವನ್ನು ಸ್ವತಃ ನಾವೇ ಅಲಕ್ಷಿಸಿದ್ದರಿಂದಲೇ 26/11 ನಡೆಯಲು ಸಾಧ್ಯವಾಯಿತು ಎನ್ನುವ ಪ್ರಜ್ಞೆ ನಮ್ಮಲ್ಲಿರಬೇಕು.
ಕಳೆದ ಮೂರು ದಶಕಗಳ ಸಾಂಸ್ಕೃತಿಕ ರಾಜಕಾರಣ, ಮತಾಂಧತೆ ಮತ್ತು ಮತೀಯ ಉಗ್ರವಾದದ ಬೆಳವಣಿಗೆಯನ್ನು ನೋಡಿದರೆ ಸಂವಿಧಾನ ಕರ್ತೃಗಳ ಮೂಲ ಆಶಯಗಳನ್ನು ನಾವು ಎಷ್ಟು ವ್ಯವಸ್ಥಿತವಾಗಿ ಮಣ್ಣುಪಾಲು ಮಾಡಿದ್ದೇವೆ ಎನ್ನುವುದನ್ನೂ ಗ್ರಹಿಸಬಹುದು. ನಮ್ಮ “ ಆತ್ಮ ನಿರ್ಭರತೆ ” ವ್ಯಕ್ತವಾಗಬೇಕಿರುವುದು ಇಲ್ಲಿ. ಭಾರತದ ಬಹುಸಂಸ್ಕೃತಿಯ ಚೌಕಟ್ಟಿನಲ್ಲಿ ಶತಮಾನಗಳಿಂದ ಇದ್ದ ಸೌಹಾರ್ದತೆಯನ್ನು ಅಡ್ಡಡ್ಡಲಾಗಿ ಸೀಳುವುದರಲ್ಲಿ ಈ ಸಮಾಜೋ ಸಾಂಸ್ಕೃತಿಕ ರಾಜಕೀಯ ಬೆಳವಣಿಗೆಗಳು ಯಶಸ್ವಿಯಾಗಿವೆ.
ಹಾಗೆಯೇ ಮೇಲ್ನೋಟಕ್ಕೆ ಕಾಣಬಹುದಾಗಿದ್ದ ಸೌಹಾರ್ದತೆಯ ನಡುವೆಯೇ ನಮ್ಮ ನಡುವೆ ಇದ್ದ ಜಾತಿ ಶ್ರೇಷ್ಠತೆಯ ವ್ಯಸನ ಮತ್ತು ಜಾತಿ ತಾರತಮ್ಯ, ದೌರ್ಜನ್ಯ ಮತ್ತು ಮೇಲ್ಜಾತಿಯ ಕ್ರೌರ್ಯವನ್ನು ಅಳಿಸಿ ಹಾಕುವ ಬದಲು ಮತ್ತಷ್ಟು ಗಟ್ಟಿಗೊಳಿಸುತ್ತಿರುವುದನ್ನೂ ಗಮನಿಸಬೇಕಿದೆ. 21ನೆಯ ಶತಮಾನದ ಮೂರನೆಯ ದಶಕವನ್ನು ಪ್ರವೇಶಿಸುತ್ತಿರುವ ಸಂದರ್ಭದಲ್ಲೂ ನಾವು ಅತ್ಯಾಚಾರಕ್ಕೊಳಗಾದ ಹೆಣ್ಣುಮಗುವಿನ ಶವದ ಮೇಲೆ ದೌರ್ಜನ್ಯ ಎಸಗುತ್ತಿರುವುದನ್ನು ನೋಡಿದರೆ ನಮ್ಮೊಳಗಿನ ಕ್ರೌರ್ಯದ ಫಸಲು ಇನ್ನೂ ಹಸನಾಗಿದೆ ಎನಿಸುವುದಿಲ್ಲವೇ ?
ಅನ್ನ ಬೆಳೆಯುವ ರೈತನ ಆಕ್ರಂದನವನ್ನು ಗ್ರಾಂಥಿಕ ಕ್ರೌರ್ಯದ ಮೂಲಕ (ಕರಾಳಶಾಸನಗಳನ್ನು ಹೀಗೆ ಕರೆಯಬಹುದು) ಎದುರಿಸುವ ಒಂದು ವಿಕೃತ ವ್ಯವಸ್ಥೆಯಲ್ಲಿ ನಾವು ನಾಳಿನ ಯೋಚನೆ ಮಾಡುತ್ತಿದ್ದೇವೆ. ಇಲ್ಲಿಯೇ ನಾವು ಮನುಸ್ಮೃತಿಯ ಮರುಹುಟ್ಟನ್ನು ಗುರುತಿಸಬೇಕಿದೆ. ಮನು ಎಂಬ ಹೆಸರಿನ ಋಷಿ ತನ್ನ ಕಾಲಘಟ್ಟದಲ್ಲಿದ್ದ ಉತ್ಪಾದನಾ ಸಂಬಂಧಗಳಿಗೆ ಅನುಗುಣವಾಗಿ ಸಮಾಜದ ನಿರ್ವಹಣೆಗೆ ಸಂಹಿತೆಗಳನ್ನು ರಚಿಸಿದ್ದ. ಆಧುನಿಕ ಭಾರತಕ್ಕೆ ಇದರ ಅವಶ್ಯಕತೆ ಇಲ್ಲ ಎನ್ನುವ ಕಾರಣಕ್ಕಾಗಿಯೇ ಅಂಬೇಡ್ಕರ್ ಅದನ್ನು ಸಾಂಕೇತಿಕವಾಗಿ ಸುಟ್ಟುಹಾಕಿದ್ದರು.
ಇಂದು ಮನುಸ್ಮೃತಿಯ ಅತ್ಯಾಧುನಿಕ ಅವತಾರವನ್ನು ಹಥ್ರಾಸ್ ಘಟನೆಯಲ್ಲಿ, ವಿದ್ಯುನ್ಮಾನ ಸುದ್ದಿಮನೆಗಳಲ್ಲಿ, ಶಾಸಕಾಂಗ ಸಭೆಗಳಲ್ಲಿ, ಸಂಸತ್ ಭವನದಲ್ಲಿ, ಆಡಳಿತ ವ್ಯವಸ್ಥೆಯಲ್ಲಿ ಮತ್ತು ಕೆಲವು ಸಂದರ್ಭಗಳಲ್ಲಿ ನ್ಯಾಯ ವ್ಯವಸ್ಥೆಯ ಅಂಗಳದಲ್ಲೂ ಕಾಣುತ್ತಿದ್ದೇವೆ. ಶೋಷಿತ ಸಮುದಾಯಗಳು ಮತ್ತು ಶ್ರಮಜೀವಿ ವರ್ಗಗಳು, ಈ ಎರಡರ ನಡುವೆ ಇರುವ ರೇಖೆ ಬರಿಗಣ್ಣಿಗೆ ಕಾಣಿಸದಷ್ಟು ತೆಳುವಾಗಿದೆ.
26/11ರಂದು ನಡೆದ ದಾಳಿ ದೇಶದ ಜನತೆಯನ್ನು ಕೆಲವು ವರ್ಷಗಳ ಕಾಲ ತಲ್ಲಣಗೊಳಿಸಿತ್ತು. ಆದರೆ ಇಂದು ನವ ಉದಾರವಾದದ ದಾಳಿ ದೇಶದ ಬಹುಸಂಖ್ಯೆಯ ಜನತೆಯನ್ನು ತಲ್ಲಣಗೊಳಿಸುತ್ತಿದೆ. ಈ ಗ್ರಾಂಥಿಕ ದಾಳಿಗೆ ಕೋಟ್ಯಂತರ ಶ್ರಮಜೀವಿಗಳು ತತ್ತರಿಸಿಹೋಗಲಿದ್ದಾರೆ, ಬೀದಿ ಪಾಲಾಗಲಿದ್ದಾರೆ. ನವ ಭಾರತದ ನಿರ್ಮಾಣಕ್ಕೆ ಇದು ಅತ್ಯವಶ್ಯ ಎನ್ನುವುದಾರೆ ಆ ನವಭಾರತದ ನವ ಸ್ವರೂಪವನ್ನು ನಾವು ತಿರಸ್ಕರಿಸಬೇಕಾಗುತ್ತದೆ.
ಕಾರ್ಮಿಕ ಕಾನೂನುಗಳನ್ನು ಸಂಕುಚಿತಗೊಳಿಸುವ ಮೂಲಕ ದುಡಿಮೆಯ ಕೈಗಳನ್ನು ಮತ್ತೊಮ್ಮೆ ಔದ್ಯಮಿಕ ಸಂಕೋಲೆಗಳಲ್ಲಿ ಬಂಧಿಸಲು ಹೊರಟಿರುವ ಭಾರತದ ಆಳುವ ವರ್ಗಗಳು, ಭಾರತದ ಬೆನ್ನೆಲುಬು ಎಂದೇ ಹೇಳಲಾಗುವ ಕೃಷಿ ಕ್ಷೇತ್ರವನ್ನೂ ಉದ್ಯಮಪತಿಗಳಿಗೆ ಪರಭಾರೆ ಮಾಡುವ ಮೂಲಕ ಶೇ 60ರಷ್ಟು ಜನಸಂಖ್ಯೆಯ ಮೇಲೆ ದಾಳಿ ನಡೆಸುತ್ತಿದೆ.
ದೇಶದ ಶೈಕ್ಷಣಿಕ ಸಂಪತ್ತನ್ನೂ ಸಹ ಬಹುತ್ವದ ನೆಲೆಗಳಿಂದ ದೂರ ಮಾಡಿ, ವರ್ಣಾಶ್ರಮ ಧರ್ಮವನ್ನು ಪುನರ್ ಸ್ಥಾಪಿಸಿ, ಇಡೀ ಶಿಕ್ಷಣ ವ್ಯವಸ್ಥೆಯನ್ನು ಕಾರ್ಪೋರೇಟ್ ಉದ್ಯಮಿಗಳಿಗೆ ವಹಿಸುವ ಸೂಚನೆಯನ್ನು ಹೊಸ ಶಿಕ್ಷಣ ನೀತಿಯಲ್ಲಿ ಕಾಣಬಹುದಾಗಿದೆ. ಸಂಸತ್ತಿನಲ್ಲಿ ಚರ್ಚೆಯಿಲ್ಲದೆ ಅನುಮೋದನೆಯಾಗಿರುವ ಈ ಕರಾಳ (!) ಶಾಸನಗಳಿಗೂ, ಎಲ್ಲ ರಾಜಕೀಯ ಪಕ್ಷಗಳೂ ಅನುಮೋದಿಸುವ ಯುಎಪಿಎ ಮುಂತಾದ ಕರಾಳ ಶಾಸನಗಳಿಗೆ ವ್ಯತ್ಯಾಸವೇನಾದರೂ ಇದ್ದರೆ ಅದು ಗ್ರಾಂಥಿಕ ಮಾತ್ರ. ಎರಡೂ ಸಹ ಬದುಕುವ ಹಕ್ಕನ್ನು ಕಸಿದುಕೊಳ್ಳುವ ಅಸ್ತ್ರಗಳೇ ಆಗಿವೆ.
ಈ ಎರಡು ಅಸ್ತ್ರಗಳ ವಿರುದ್ಧ ಸ್ವಾವಲಂಬಿ ಭಾರತಕ್ಕೆ ಬದ್ಧರಾಗಿರುವ ಪ್ರತಿಯೊಬ್ಬ ನಾಗರಿಕನೂ ದನಿ ಎತ್ತಬೇಕಿದೆ. ದೇಶದ ಬಹುಸಂಖ್ಯೆಯ ಜನರ ಬದುಕಿಗೆ ಅವಶ್ಯವಾದ ಸ್ವಾವಲಂಬನೆಯನ್ನು ಬಲಿಕೊಟ್ಟು, ಬೆರಳೆಣಿಕೆಯಷ್ಟು ಶ್ರೀಮಂತರ ಸ್ವಾವಲಂಬನೆಗೆ ಅವಕಾಶ ಮಾಡಿಕೊಡುವ “ ಆತ್ಮನಿರ್ಭರ ” ಭಾರತ ಭಾರತವನ್ನು ಮತ್ತೊಂದು ರೀತಿಯ ದಾಸ್ಯಕ್ಕೆ ದೂಡುತ್ತದೆ.
ಭೌಗೋಳಿಕವಾಗಿ ಭಾರತ ಸಂಕೋಲೆಗಳಿಂದ ಮುಕ್ತವಾಗಿಯೇ ಇದ್ದರೂ, ಬೌದ್ಧಿಕವಾಗಿ ಈ ದೇಶದ ಕೋಟ್ಯಂತರ ಶೋಷಿತರು, ಅವಕಾಶವಂಚಿತರು, ಅಂಚಿಗೆ ತಳ್ಳಲ್ಪಟ್ಟಿರುವವರು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಇಂದಿಗೂ ಹೋರಾಡುತ್ತಿರುವ ದಮನಿತರು ಕಾರ್ಪೋರೇಟ್ ದಾಸ್ಯಕ್ಕೆ ಒಳಗಾಗಲಿದ್ದಾರೆ. ಇದು ನಮ್ಮ ಮುಂದಿರುವ ಅಪಾಯ.
ಒಂದು ಸುಂದರ ಸೌಧ ನಿರ್ಮಾಣವಾಗುತ್ತಿದೆ ಒಂದು ಅಂಗುಲ ಭೂಮಿ ಕೊಟ್ಟರೆ ತಪ್ಪೇನಿಲ್ಲ ಎಂದು ಹೇಳುವ ಕಾಲ ಇದಲ್ಲ. ಈ ಸೌಧದ ಅಡಿಪಾಯಕ್ಕೆ ಭೂಮಿ ಕೊಟ್ಟವರ ಎಲುಬುಗಳನ್ನೇ ಅಸ್ತಿಭಾರದಂತೆ ಬಳಸಲಾಗುತ್ತದೆ. ಇದು ನವ ಉದಾರವಾದದ ನೀತಿ. ಮೂರು ದಶಕಗಳ ನವ ಉದಾರವಾದಿ ನೀತಿಯ ಪರಿಣಾಮ ಈಗಾಗಲೇ ನಾವು ನೆಲೆ ಕಳೆದುಕೊಂಡಿದ್ದೇವೆ.
ಈಗ ಸಮಾಜೋ ಸಾಂಸ್ಕೃತಿಕ ನೆಲೆಗಳೂ ಧ್ವಂಸವಾಗುತ್ತಿವೆ. ಮತಾಂಧತೆ, ಜಾತಿ ಪ್ರಜ್ಞೆ ಮತ್ತು ಬಂಡವಾಳದ ಮೈತ್ರಿಯ ಎದುರು ಈ ದೇಶದ ದುಡಿಯುವ ವರ್ಗಗಳು ಹೋರಾಡಬೇಕಿದೆ. ಹಾಗಾಗಿಯೇ ನವಂಬರ್ 26ರ ಸಾರ್ವತ್ರಿಕ ಮುಷ್ಕರ ನಿರ್ಣಾಯಕವಾಗಲಿದೆ.
ಕೊನೆಯ ಹನಿ : ಬ್ರಿಟೀಷರು, ಫ್ರೆಂಚರು, ಡಚ್ಚರು ಮತ್ತು ಪೋರ್ಚುಗೀಸರು ಭಾರತದ ಸಂಪತ್ತನ್ನು ಕೊಳ್ಳೆಹೊಡೆಯಲು ಪ್ರವೇಶಿಸಿದಾಗ ಪ್ರತಿಯೊಂದು ಸಂಸ್ಥಾನದ ರಾಜ/ಸಾಮಂತರೂ ಯೋಚಿಸಿದ್ದು “ ಪಕ್ಕದ ಸಂಸ್ಥಾನ ಅವರ ಪಾಲಾಗಿದೆ ನಾನು ಸುರಕ್ಷಿತ ” ಎಂದು. ನಂತರ ನಡೆದದ್ದು ಇತಿಹಾಸ. ಈಗ ಭಾರತದ ದುಡಿಯುವ ವರ್ಗಗಳಲ್ಲೂ ಇದೇ ರೀತಿಯ “ ನಮ್ಮ ದುಡಿಮೆಯ ವಲಯ/ಕ್ಷೇತ್ರ/ಸಂಸ್ಥೆ ಸುರಕ್ಷಿತವಾಗಿದೆ ” ಎನ್ನುವ ಮನೋಭಾವ ಇದೆ. ಮತ್ತೊಮ್ಮೆ ದಾಸ್ಯಕ್ಕೊಳಗಾಗುವ ಮುನ್ನ,,,,,,,,,ಎಚ್ಚೆತ್ತುಕೊಳ್ಳಲು ನವಂಬರ್ 26ರ ದನಿಗೆ ದನಿಗೂಡಿಸೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
-
ದಿನದ ಸುದ್ದಿ1 day agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ1 day agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ9 hours agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

