Connect with us

ದಿನದ ಸುದ್ದಿ

ಮಾ.24 ರಂದು ದಾವಣಗೆರೆ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ; 11,336 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ : ಕುಲಪತಿ ಎಸ್.ವಿ.ಹಲಸೆ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ 9ನೇ ಘಟಿಕೋತ್ಸವ ಮಾ.24 ರ ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 11,336 ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುವುದು, ಅಲ್ಲದೆ 44 ವಿದ್ಯಾರ್ಥಿಗಳು 79 ಚಿನ್ನದ ಪದಕಗಳನ್ನು ಪಡೆಯಲಿದ್ದಾರೆ ಎಂದು ವಿವಿ ಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ ತಿಳಿಸಿದರು.

ಬುಧವಾರ ವಿಶ್ವವಿದ್ಯಾನಿಲಯದ ಎಂ.ಬಿ.ಎ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2020-21 ನೇ ಸಾಲಿನ ಚಿನ್ನದ ಪದಕ ಗಳಿಕೆಯಲ್ಲಿ ಮಹಿಳಾ ವಿದ್ಯಾರ್ಥಿಗಳು ಮುನ್ನಡೆ ಸಾಧಿಸಿದ್ದು, 32 ವಿದ್ಯಾರ್ಥಿನಿಯರು ಪದಕಗಳನ್ನು ಪಡೆದಿದ್ದಾರೆ. ಆಡಳಿತ ನಿರ್ವಹಣಾ ಶಾಸ್ತ್ರ (ಎಂ.ಬಿ.ಎ) ವಿಭಾಗದ ವಿದ್ಯಾರ್ಥಿನಿ ಸ್ವಪ್ನ ಎಸ್.ಎನ್. 5 ಪದಕಗಳೊಂದಿಗೆ ಚಿನ್ನದ ಹುಡುಗಿ ಗೌರವಕ್ಕೆ ಪಾತ್ರರಾಗಿದ್ದಾರೆ. ಹಾಗೂ ಈ ಬಾರಿ ವಿವಿಧ ವಿಭಾಗಗಳಲ್ಲಿ 6 ಜನರಿಗೆ ಪಿಎಚ್.ಡಿ ಹಾಗೂ 05 ಎಂ.ಫಿಲ್ ಪದವಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದರು.

ಈ ಬಾರಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಒಟ್ಟು 79 ಸ್ವರ್ಣ ಪದಕಗಳನ್ನು 44 ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ. ಸ್ನಾತಕ ವಿಭಾಗದಲ್ಲಿ 21 ಸ್ವರ್ಣ ಪದಕಗಳನ್ನು 13 ವಿದ್ಯಾರ್ಥಿಗಳು ಪಡೆಯಲಿದ್ದಾರೆ. ಅವರಲ್ಲಿ 06 ಪುರುಷ ಮತ್ತು 07 ಮಹಿಳಾ ವಿದ್ಯಾರ್ಥಿಗಳಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ 31 ವಿದ್ಯಾರ್ಥಿಗಳು 58 ಪದಕಗಳನ್ನು ಗಳಿಸಿದ್ದಾರೆ. ಇವರಲ್ಲಿ 06 ಪುರುಷ ಹಾಗೂ 25 ಮಹಿಳಾ ವಿದ್ಯಾರ್ಥಿಗಳು ಇದ್ದಾರೆ. ಸ್ನಾತಕ ಪದವಿಯ 10 ಹಾಗೂ ಸ್ನಾತಕೋತ್ತರ ಪದವಿಯ 28 ಸೇರಿ ಒಟ್ಟು 38 ವಿದ್ಯಾರ್ಥಿಗಳು ಪ್ರಥಮ ರ್ಯಾಂಕ್ ಗಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ವಿಶ್ವವಿದ್ಯಾನಿಲಯವು 2020-21ರ ಅವಧಿಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆಯಾದ 9724 ಸ್ನಾತಕ ಪದವಿ ಹಾಗೂ 1612 ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ಈ ಬಾರಿ ಪದವಿಯಲ್ಲಿ 5854 ಮಹಿಳೆಯರು ಹಾಗೂ 3870 ಪುರುಷ ವಿದ್ಯಾರ್ಥಿಗಳು ಬಿಎ, ಬಿಕಾಂ, ಬಿಬಿಎಂ, ಬಿಎಸ್ಸಿ, ಬಿಸಿಎ, ಬಿಎಸ್‍ಡಬ್ಲ್ಯೂ, ಬಿವಿಎ, ಬಿ.ಇಡಿ ಹಾಗೂ ಬಿಬಿಇಡಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪದವಿ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ. ಸ್ನಾತಕೋತ್ತರ ವಿಭಾಗದಲ್ಲಿ 1025 ಮಹಿಳಾ ಮತ್ತು 589 ಪುರುಷ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯುವರು ಎಂದು ತಿಳಿಸಿದರು.

ಮೂವರಿಗೆ ಗೌರವ ಡಾಕ್ಟರೇಟ್

ಆಯರ್ವೇದ ಮತ್ತು ಯೋಗ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಶಶಿಕುಮಾರ್ ವಿ.ಎಂ, ನಿವೃತ್ತ ಪ್ರಾಧ್ಯಾಪಕರು., ಜನಪದ ತಜ್ಞರಾದ ಡಾ. ಮೀರಾ ಸಾಬಿಹಳ್ಳಿ ಶಿವಣ್ಣ ಮತ್ತು ಇತಿಹಾಸಕಾರರಾದ ಲಕ್ಷ್ಮಣ ಎಸ್ ತೆಲಗಾವಿ ಅವರಿಗೆ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಲಾಗುವುದು ಎಂದರು.

ಡಾ. ಪಿ.ವಿ ಕೃಷ್ಣ ಭಟ್ ಅವರಿಂದ ಘಟೀಕೋತ್ಸವ ಭಾಷಣ : ಈ ಬಾರಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಒರಿಸ್ಸಾ ಕೇಂದ್ರೀಯ ವಿಶ್ವವಿದ್ಯಾನಿಲಯದ ಮಾಜಿ ಕುಲಾಧಿಪತಿಗಳಾದ ಡಾ. ಪಿ. ವಿ. ಕೃಷ್ಣ ಭಟ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಈ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಸ್ನಾತಕ ಪದವಿಯಲ್ಲಿ ಶೇ.65.09 ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ.96.41 ರಷ್ಟು ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ವಿವಿಯ ಎಲ್ಲಾ ಪ್ರಾಧ್ಯಾಪಕ ವೃಂದದವರು ಶ್ರಮಿಸಿದ್ದು, ಪಠ್ಯ ಮತ್ತು ಪ್ರಾಯೋಗಿಕ ತರಗತಿಗಳನ್ನು ಮುಗಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜು ಮಾಡಿರುವುದು ವಿಶೇಷ ಎಂದರು.

ಶಿಕ್ಷಣದ ಗುಣಮಟ್ಟಕ್ಕೆ ಆದ್ಯತೆ

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವುದರೊಂದಿಗೆ ಕೊರೋನಾ ಪಿಡುಗಿನ ನಡುವೆಯೂ ವಿಶ್ವವಿದ್ಯಾಲಯದಲ್ಲಿ ಉತ್ತಮ ಕೆಲಸಗಳಾಗಿವೆ. ಗ್ರಾಮೀಣ ಪ್ರದೇಶದ ವಿಧ್ಯಾರ್ಥಿಗಳಿಗೆ ಅನುಕೂಲವಾಗಲು ವಿವಿಯಲ್ಲಿ ಭಾಷೆ ಮತ್ತು ಕಂಪ್ಯೂಟರ್ ಲ್ಯಾಬ್‍ಗಳನ್ನು ಆರಂಭಿಸಲಾಗಿದ್ದು ಇದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯೋಜನವಾಗಿದೆ. ನಾನು ಹಳ್ಳಿಗಾಡಿನಿಂದ ಬಂದವನಾದ್ದರಿಂದ ಆ ಕಷ್ಟ ತಿಳಿದು ಈ ಲ್ಯಾಬ್‍ಗಳ ಆರಂಭಕ್ಕೆ ಒತ್ತು ನೀಡಿದೆ, ಹುಳುಪಿನಕಟ್ಟೆ ಹಾಗೂ ಹಾಲುವರ್ತಿ ಗ್ರಾಮಗಳ ವ್ಯಾಪ್ತಿಯಲ್ಲಿ 78 ಎಕರೆ ಭೂಮಿಯನ್ನು ವಿವಿ ವ್ಯಾಪ್ತಿಗೆ ಪಡೆಯಲಾಗಿದ್ದು ಮುಂದಿನ ದಿನಗಳಲ್ಲಿ ಆಹಾರ ಸಂಸ್ಕರಣಾ ಘಟಕ ತರಬೇತಿ ನೀಡಲು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಪ್ರೊ. ಎಸ್.ವಿ. ಹಲಸೆ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಅನಿತಾ ಹೆಚ್.ಎಸ್, ಕುಲಸಚಿವರಾದ ಪ್ರೊ. ಗಾಯತ್ರಿ ದೇವರಾಜ, ಹಣಕಾಸು ಅಧಿಕಾರಿ ಪ್ರಿಯಾಂಕ.ಡಿ, ಸಿಂಡಿಕೇಟ್ ಸದಸ್ಯರಾದ ವಿಜಯಲಕ್ಷ್ಮೀ, ಇನಾಯತ್ ವುಲ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending