ಭಾವ ಭೈರಾಗಿ
ಮನುಷ್ಯ ಏಕಾಂಗಿಯಾಗುತ್ತಿದ್ದಾನೆಯೇ?
ಮನುಷ್ಯನು ಸಹ ಜೀವಿ ಹಾಗೂ ಸಂಘ ಜೀವಿಯೂ ಎಂದು, ಮೊದಲಿನಿಂದಲೂ ಸಹ ಜೀವನ ನಡೆಸಲು ಇಷ್ಟಪಡುತ್ತಾನೆ ಒಬ್ಬಂಟಿಯಾಗಿರಲು ಅವನ ಮನಸ್ಸು ಒಪ್ಪುವುದಿಲ್ಲ. ಎಂದು ಹಿಂದಿನ ಕಾಲದಲ್ಲಿ ಹೇಳಬಹುದಿತ್ತು. ಆದರೆ ಇಂದಿನ ದಿನಗಳಲ್ಲಿ ಎಲ್ಲವೂ ತಲೆಕೆಳಗಾಗಿ ಸಂಘಜೀವಿಯಾದ ಮನುಷ್ಯನು ಏಕಾಂಗಿಯಾಗಿ ತನ್ನ ಪಾಡಿಗೆ ತಾನು ಜೀವನ ನಡೆಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ತನ್ನ ಕೆಲಸಗಳಿಗೆ ಅಥವಾ ಅನಿವಾರ್ಯ ಸನ್ನಿವೇಶ ಬಂದೊದಗಿದ್ದಲ್ಲಿ ಮಾತ್ರ ಎಲ್ಲರನ್ನು ಆಮಂತ್ರಿಸಿ, ಬೆರೆತು ನಂತರ ಮರೆತು ಪುನಃ ಏಕಾಂಗಿಯಾಗಿ ಜೀವಿಸುತ್ತಿರುವುದು ಸಾಮಾನ್ಯವಾಗಿದೆ.
ಹಿಂದಿನ ಕಾಲದಲ್ಲಿ ಎಳೆಯರಾಗಿದ್ದಾಗ ಮಕ್ಕಳು ತಮ್ಮ ಅಕ್ಕಪಕ್ಕದ ಮನೆಯಲ್ಲಿರುವ ಮಕ್ಕಳನ್ನು ಸ್ನೇಹ ಮಾಡಿಕೊಂಡು ಗೋಲಿ, ಲಗೋರಿ, ಚಿನ್ನಿ ದಾಂಡ್ಲು, ಕಬ್ಬಡಿ, ಹೀಗೆ ನಾನಾ ತರಹದ ಆಟವನ್ನು ಆಡುತ್ತಾ ಗೆಳೆಯರೊಂದಿಗೆ ಕಾಲ ಕಳೆದು ಅಕಸ್ಮಾತ್ ಯಾರೂ ಇಲ್ಲದಿದ್ದ ಪಕ್ಷದಲ್ಲಿ ಅಪ್ಪ ಅಮ್ಮನ ಜೊತೆಯಲ್ಲಿ, ಅಣ್ಣ, ತಮ್ಮ ಮತ್ತು ತಂಗಿ, ಇವರೊಂದಿಗೆ ಆಟವಾಡಿ ನಲಿಯುತ್ತಾ ಆಟದ ಜೊತೆಗೆ ಪಾಠವನ್ನು ಕಲಿಯುತ್ತಾ ತನ್ನ ಬಾಲ್ಯದ ದಿನಗಳನ್ನು ಕಳೆಯುತ್ತಿದ್ದುದ್ದನ್ನು ನೋಡಿದ್ದೇವೆ. ದೊಡ್ಡವರಾದಂತೆ ಶಾಲೆ ಕಾಲೇಜಿಗೆ ಸೇರಿ ಅಲ್ಲಿಯ ಸಹಪಾಠಿಗಳ ಜೊತೆಗೆ ಆಟವಾಡಿ ಸಿನಿಮಾ ನಾಟಕದಂತಹ ಮನೋರಂಜನೆ ಪಡೆದು, ಓದು ಮುಗಿದ ನಂತರ ಕಾಲೇಜಿನ ಸಹಪಾಠಿಗಳು ಬೇರೆ ಬೇರೆ ಕೆಲಸಕ್ಕೆ ಸೇರಿದಾಗ ಯಾವ ಸ್ನೇಹಿತರೂ ಇಲ್ಲದೆ ಸ್ವಲ್ಪ ಸಮಯ ಬೇಸರವಾಗುವುದೆಂದು, ಹಳೆಯ ಸಹಪಾಠಿಗಳ ಒಡನಾಟವನ್ನು ಮರೆಯಲಾಗದೆ ತನ್ನ ಹಳೆಯ ಸ್ನೇಹಿತರಿಗೆ ದೂರವಾಣಿ ಮೂಲಕ ಸಂಪರ್ಕವನ್ನು ಇಟ್ಟುಕೊಳ್ಳಬಯಸುವವರು ಇರುವುದರಿಂದ ಕಾಲೇಜಿನ ಶಿಕ್ಷಣ ಮುಗಿಯುವವರೆಗೂ ಏಕಾಂಗಿಯಾಗಿರುವ ಅನುಭವವೇ ಇಲ್ಲದಂತೆ ಆಗಿರುತ್ತದೆ. ಆದರೆ ಈಗ ಕಾಲವು ಸಂಪೂರ್ಣ ಬದಲಾಗಿದೆ. ಶಾಲೆಯಲ್ಲಿರುವ ತನಕ ಆಟ ಪಾಠಗಳು, ಮನೆಗೆ ಬಂದ ತಕ್ಷಣ ಇದೆಲ್ಲವೂ ಮಾಯವಾಗುತ್ತದೆ. ತಂದೆ ತಾಯಿ ಕೆಲಸಕ್ಕೆ ಹೋದಲ್ಲಿ ಮಕ್ಕಳು ಪಕ್ಕದ ಮನೆಯಲ್ಲಿ ಇರುವ ಸನ್ನಿವೇಶ ಸೃಷ್ಠಿಯಾಗಿದೆ. ಆದರೆ ಇತ್ತೀಚೆಗೆ ಎಲ್ಲವೂ ತಲೆಕೆಳಗಾಗಿ, ಅನೇಕ ಕಡೆ ಕೆಲವು ಹುಡುಗರು ಮೂರು ಕಡ್ಡಿಗಳನ್ನು ಅಥವಾ ಕಲ್ಲುಗಳನ್ನು ತಮ್ಮ ಮನೆಯ ಮುಂದೆ ಇಟ್ಟುಕೊಂಡು ಕ್ರಿಕೆಟ್ ಆಟವನ್ನು ಮಾತ್ರ ಆಡುತ್ತಿದ್ದು, ಬೇಸರವಾದರೆ ಅದನ್ನು ಬಿಟ್ಟು ಮೊಬೈಲ್ಗಳಲ್ಲಿ ಆಟವಾಡುವುದು ಇತ್ತೀಚಿನ ಹವ್ಯಾಸವಾಗಿದೆ.
ಬೆಂಗಳೂರು ಮತ್ತು ಇತರೆ ನಗರಗಳಲ್ಲಿ ಅನೇಕ ಬಡಾವಣೆಗಳು ತಲೆ ಎತ್ತಿದ್ದು, ಎಲ್ಲಿಂದಲೋ ಜನಗಳು ಬಂದು ವಾಸಮಾಡುತ್ತಿರುವುದರಿಂದ ಇವರಿಗೆ ಪಕ್ಕದ ಮನೆಯ ಸಂಪರ್ಕ ಕೂಡ ಇರುವುದಿಲ್ಲ. ಹೊಸ ಜನಗಳು ಹೊಸ ಪ್ರದೇಶ ಯಾರು? ಹೇಗೋ? ಎಂಬ ಆತಂಕವು ಮನೆ ಮಾಡಿ ಯಾರ ಸಂಪರ್ಕವನ್ನು ಬೆಳೆಸಿಕೊಳ್ಳಲು ಹೋಗುವುದಿಲ್ಲ. ತಾವಾಯಿತು ತಮ್ಮ ಉದ್ಯೋಗವಾಯಿತು ಎಂಬಂತೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಒಬ್ಬರ ಸಂಪರ್ಕ ಇನ್ನೊಬ್ಬರಿಗೆ ಇಲ್ಲದಂತಾಗಿ ಎಲ್ಲರೂ ಏಕಾಂಗಿ ಬದುಕನ್ನು ಸಾಗಿಸುವಂತಹ ಸನ್ನಿವೇಶ ಬಲವಂತವಾಗಿ ಮನುಷ್ಯನ ಮೇಲೆ ಹೇರಿದಂತಾಗಿರುವುದು ಕಟು ಸತ್ಯ. ಹೊಸ ಬಡಾವಣೆಗಳಲ್ಲಿ ಪಕ್ಕದ ಮನೆಗಳಲ್ಲಿ ಏನಾದರೂ ಸಾವು ಸಂಭವಿಸಿದರೂ ಹೋಗಿ ನೋಡವುದೇ ಇಲ್ಲದಂತಾಗಿದ್ದು, ತಮ್ಮ ಮನೆಯ ಮಹಡಿ ಮೇಲೆ ನಿಂತು ಕಾರ್ಯಗಳನ್ನು ನೋಡುತ್ತಿರುವುದು ಕಂಡು ಬಂದಿರುವ ದೃಶ್ಯಗಳು. ದೂರದ ಊರಿನಿಂದ ಬಂದಿರುವ ನೆಂಟರು ಅಥವಾ ಸ್ನೇಹಿತರು ಬಂದು ಎಲ್ಲಾ ಕಾರ್ಯಕ್ರಮಗಳನ್ನು ಮುಗಿಸುವಂತ ಪರಿಸ್ಥಿತಿ ಬಂದೊದಗಿರುವುದು ಮನುಷ್ಯನು ಏಕಾಂಗಿಯಾಗುತ್ತಿರುವುದಕ್ಕೆ ನಿದರ್ಶನವಾಗಿದೆ.
ಹಳೆಯ ಪಟ್ಟಣ ಹಳ್ಳಿಗಳಲ್ಲಿ ವಾಸಿಸುವವರು ಮಾತ್ರ ಇನ್ನೂ ಸ್ವಲ್ಪ ಭಿನ್ನವಾದ ರೀತಿಯ ಜೀವನ ಸಾಗಿಸುತ್ತಿರುವುದು ಕಂಡು ಬಂದಿದ್ದು, ಆದರೂ ಹಳ್ಳಿ ಹಾಗೂ ಸಣ್ಣ ಸಣ್ಣ ಪಟ್ಟಣದಲ್ಲಿರುವ ಯುವಕರು ಯುವತಿಯರು ಜೀವನೋಪಾಯಕ್ಕೆ ದೊಡ್ಡ ನಗರಗಳಲ್ಲಿ ಕೆಲಸಕ್ಕೆ ಸೇರಿಕೊಂಡು ಬೆಳಿಗ್ಗೆ ಪಟ್ಟಣಕ್ಕೆ ಬಂದರೆ ಮನೆಗೆ ವಾಪಸಾಗುವುದು ಸೂರ್ಯ ಮುಳುಗಿ ದೀಪ ಬೆಳಗಿದ ನಂತರವಷ್ಟೇ. ಹೀಗಿದ್ದಾಗ ಯಾರನ್ನೂ ಮಾತನಾಡಿಸದ ಸನ್ನಿವೇಶ ಬಂದಿದೆ. ಹಾಗಾಗಿ ಪರಿಚಯವಿದ್ದರೂ ಕೆಲಸದ ಒತ್ತಡದಿಂದ ಹೆಚ್ಚಿಗೆ ಒಟ್ಟಾಗಿ ಕಾಲ ಕಳೆಯಲು ಆಗುವುದಿಲ್ಲ. ಎಲ್ಲರಿಗೂ ಅವರದೇ ಆದ ಸಂಸಾರ ತಾಪತ್ರಯ, ವೈಯುಕ್ತಿಕ ದ್ವೇಷ ಹೀಗೆ ಹಲವಾರು ಕಾರಣಗಳಿಂದ ಒಬ್ಬರೊನ್ನೊಬ್ಬರು ಬೆರೆತು ಮಾತಾಡಿ ಕಾಲ ಕಳೆಯುವಂತಹ ದಿನಗಳು ನೋಡಲು ಎಲ್ಲೂ ಕಾಣ ಸಿಗುವುದಿಲ್ಲ. ಹಳ್ಳಿಗಳಲ್ಲಿ ಬೇಸಾಯದ ಕೆಲಸ ಮುಗಿದಿದ್ದರೆ ಬಿಡುವಿನ ವೇಳೆಯಲ್ಲಿ ಕೆಲವು ಸ್ನೇಹಿತರುಗಳು ಒಂದುಗೂಡಿ ಮಾತಾಡುತ್ತಾ ಕಾಲ ಕಳೆಯಬಹುದು.
ಕಾಲೇಜು ಓದು ಮುಗಿಸಿ ಕೆಲಸಕ್ಕೆ ಸೇರಿದ ನಂತರ ವಾತಾವರಣವೇ ಸಂಪೂರ್ಣ ಬದಲಾವಣೆಯಾಗಿದ್ದು, ಕೆಲಸ ಮಾಡುವ ಸ್ಥಳಗಳಲ್ಲಿ ದೊರೆಯುವ ಸ್ನೇಹಿತರ ಮನೋಭಾವವೇ ಬೇರೆ ರೀತಿಯದ್ದಾಗಿರುತ್ತದೆ. ಕಾಲೇಜಿನಲ್ಲಿ ಸ್ನೇಹಿತರೊಡನೆ ಆಟವಾಡಿದ್ದಂತೆ ಕೆಲಸದ ಜೊತೆಗಾರರೊಡನೆ ಆಟ ಆಡುವುದಕ್ಕೆ ಆಗುವುದಿಲ್ಲ. ಕಾಲೇಜಿನ ದಿನಗಳಲ್ಲಿ ಯಾವ ರೀತಿಯ ಯೋಚನೆ ಇಲ್ಲದೆ ಬಹಳ ಖುಷಿಯಿಂದ “ವಿದ್ಯಾರ್ಥಿ ಜೀವನವೇ ಚಿನ್ನದ ಜೀವನ ಇದ್ದಂತೆ” ಎಂದು ಎಲ್ಲರೊಡನೆ ಬೆರೆತು ಹಾಡಿ ಕುಣಿದು ಕುಪ್ಪಳಿಸಿ ಆಟವಾಡುವಂತಹ ಸನ್ನಿವೇಶ ಇಲ್ಲಿ ಬರುವುದೇ ಇಲ್ಲ. ಎಲ್ಲರಿಗೂ ಅವರದ್ದೇ ಆದ ಸಂಸಾರದ ಜವಾಬ್ದಾರಿಯು ಹೆಗಲೇರಿರುತ್ತದೆ. ಇದರ ಜೊತೆಗೆ ಕೆಲಸದ ಒತ್ತಡ, ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುವ ತವಕ, ವಾಹನದ ದಟ್ಟಣೆ ಪ್ರದೇಶಗಳಲ್ಲಿ ಸರಿಯಾದ ಸಮಯಕ್ಕೆ ಕೆಲಸಕ್ಕೆ ಹೋಗುವುದೇ ಒಂದು ದೊಡ್ಡ ಸಾಧನೆಯಾಗಿರುತ್ತದೆ. ಕೆಲಸದ ಸಮಯದಲ್ಲಿ ಸಿಗುವ ಬಿಡುವಿನ ವೇಳೆ ಎಂದರೆ ಊಟದ ಸಮಯ ಕೇವಲ 30 ರಿಂದ 45 ನಿಮಿಷಗಳು ಇರಬಹುದು. ಆದರೆ ಇಷ್ಟು ಕ್ಲುಪ್ತ ಸಮಯದಲ್ಲಿ ಊಟ ಮಾಡಿ ಹೋಗುವುದಕ್ಕೆ ಸಾಲುವುದಿಲ್ಲ. ಮನೆಯಿಂದ ಊಟದ ಡಬ್ಬಿ ತೆಗೆದುಕೊಂಡು ಹೋಗಿದ್ದರೆ ಮಾತ್ರ ಎಲ್ಲರ ಜೊತೆ ಬೆರೆತು ಮಾತಾಡುತ್ತಾ ಊಟ ಮಾಡಿ ಇರುವ ಸ್ವಲ್ಪ ಸಮಯದಲ್ಲಿ ವಿರಮಿಸಬಹುದು. ಊಟ ಮಾಡಲು ಹೋಟೆಲನ್ನು ಅವಲಂಬಿಸಿದ್ದರೆ ಸ್ವಲ್ಪ ವಿರಾಮವೂ ಸಿಗುವುದಿಲ್ಲ. ಬೆಳಿಗ್ಗೆ ಹೋದರೆ ವಾಪಸ್ ಬರುವುದೇ ರಾತ್ರಿಯಾಗಿರುತ್ತದೆ. ಇಂತಹ ಸನ್ನಿವೇಶಗಳಲ್ಲಿ ಆಟ ಹಾಡು ಎಲ್ಲವೂ ಮರೆತಂತೆ ಆಗಿರುತ್ತದೆ. ವಾರಕ್ಕೊಂದು ರಜೆ ಸಿಕ್ಕಿದರೆ ಅದನ್ನು ಮನೆಯಲ್ಲಿರುವ ಬೇರೆ ಕೆಲಸ ನಿರ್ವಹಿಸುವುದಕ್ಕೆ ಸಾಲುವುದಿಲ್ಲ.
ವಿವಾಹವಾಗಿದ್ದರೆ ಮಾತ್ರ ತನ್ನ ಪತ್ನಿಯೇ ಸ್ನೇಹಿತೆ ಅಥವಾ ಸಂಗಾತಿ ಎಂಬುದಾಗಿ ಜೊತೆಯಲ್ಲಿ ಕಾಲ ಕಳೆಯಬಹುದು. ಒಳ್ಳೆಯ ಮಡದಿ ದೊರೆತು ಎಲ್ಲರಲ್ಲೂ ಹೊಂದಿಕೊಂಡು ಹೋಗುವಂತಹ ಮನಸ್ಸುಳ್ಳವಳಾದರೆ ಮಾತ್ರ ತಾನು ಏಕಾಂಗಿ ಎಂಬುದನ್ನು ಮರೆತು ಸಂತೋಷದಿಂದ ಕಾಲ ಕಳೆಯಬಹುದು. ಇಲ್ಲದಿದ್ದರೆ ಮದುವೆಯಾದರೂ ಏಕಾಂಗಿಯಂತೆ ಬದುಕನ್ನು ಸಾಗಿಸಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಕಛೇರಿಯಲ್ಲಿ ಒಂದು ರೀತಿಯ ಕೆಲಸದ ಕಿರಿ ಕಿರಿಯಾಗಿ, ಮನೆಯಲ್ಲಿ ಮಡದಿಯ ಕಿರಿಕಿರಿ ಉಂಟಾದರೆ ಎಲ್ಲಿ ಹೋಗಿ ಬದುಕುವುದು ಎಂಬ ಆಲೋಚನೆ ಹಾಗೂ ಜೀವನದಲ್ಲಿಯೇ ಜಿಗುಪ್ಸೆ ಉಂಟಾಗುತ್ತದೆ. ಮಕ್ಕಳಿಗಾಗಿ ಎಲ್ಲವನ್ನೂ ಸಹಿಸಿಕೊಂಡು ಜೀವನವನ್ನು ದೂಡುವಂತ ಸನ್ನಿವೇಶ ನಿರ್ಮಾಣವಾದರೂ ಆಶ್ಚರ್ಯವಿಲ್ಲ. ಇದರ ಜೊತೆಗೆ ಹೆತ್ತವರ ಯೋಗಕ್ಷೇಮ, ಮಡದಿ ಮಕ್ಕಳ ಯೋಗಕ್ಷೇಮ ಇವೆಲ್ಲವನ್ನೂ ನೋಡಿ ಕೊಳ್ಳುವುದೇ ಒಂದು ಸಾಹಸದಂತೆ ಆಗಿರುತ್ತದೆ. ಕಛೇರಿಯಿಂದ ಬಂದೊಡನೇ ಶಾಪಿಂಗ್ಗೆ ಮಕ್ಕಳಿಗೆ ಮೈಯಲ್ಲಿ ಹುಷಾರಿಲ್ಲದಿದ್ದರೆ ವೈದ್ಯರನ್ನು ನೋಡಲು ಹೋಗಬೇಕಾದ ಪ್ರಸಂಗ ಬರಬಹುದು. ಇವೆಲ್ಲ ಕಾರ್ಯಗಳು ಮುಗಿಯುವ ಹೊತ್ತಿಗೆ ಸುಸ್ತಾಗಿ ಹಾಸಿಗೆ ಕಂಡರೆ ಸಾಕು ಎಂಬಂತೆ ಆಗಿದ್ದರೆ ಏನೂ ಕೇಳದೆ ಸೇರಿದ್ದನ್ನು ತಿಂದು ಹೋಗಿ ಮಲಗಿಬಿಡಬಹುದು. ಏನೂ ಕೆಲಸವಿಲ್ಲದಿದ್ದರೆ ಮನೋರಂಜನೆಗಾಗಿ ದೂರದರ್ಶನವನ್ನು ವೀಕ್ಷಿಸುತ್ತಾ ಕಾಲ ಕಳೆಯಬಹುದು. ಹೀಗಾಗಿ ಯಾರೊಬ್ಬರ ಒಡನಾಟವೂ ಸಿಗುವುದಿಲ್ಲ. ಸಿಕ್ಕಿದರೂ ಅಪರೂಪವಾಗಿರುತ್ತದೆ. ಸಾಲು ಸಾಲು ರಜೆ ಸಿಕ್ಕಿದರೆ ತನ್ನ ಸಂಸಾರದವರೊಡನೆ ದೂರ ಪ್ರವಾಸ ಕೈಗೊಂಡು, ತನ್ನ ಸಂಸಾರದ ಸದಸ್ಯರ ಜೊತೆ ಮಾತ್ರ ಸುತ್ತಾಡಿ ಬರಬಹುದು. ಆರ್ಥಿಕವಾಗಿ ಸದೃಡನಾಗಿದ್ದರೆ ರಜಾ ದಿನಗಳಲ್ಲಿ ಪ್ರವಾಸ ಕೈಗೊಳ್ಳ ಬಹುದು. ಬರುವ ಸಂಬಳದಲ್ಲಿ ಸಂಸಾರ ನಿರ್ವಹಣೆ ಮಾಡಬೇಕು, ಇದರ ಜೊತೆಗೆ ಮಕ್ಕಳ ವಿದ್ಯಾಭ್ಯಾಸದ ಖರ್ಚು, ಹಬ್ಬಗಳಲ್ಲಿ ಮಕ್ಕಳಿಗೆ ಹೊಸ ಬಟ್ಟೆ ಖರೀದಿಸಲು ಆಗುವ ಖರ್ಚು, ಮನೆಯವರಿಗೆ ಆರೋಗ್ಯ ಎರುಪೇರಾದರೆ ವೈದ್ಯಕೀಯ ವೆಚ್ಚ ಇವೆಲ್ಲವನ್ನೂ ಸರಿದೂಗಿಸಬೇಕಾದ ಪ್ರಸಂಗ ಇರುತ್ತದೆ. ಇವೆಲ್ಲದರ ನಡುವೆ ಪ್ರವಾಸದ ಖರ್ಚುನ್ನು ಹೊಂದಿಸಲು ಬಹಳ ಕಷ್ಟವಾಗಿ ಮನೆಯ ಸಂಸಾರದ ಖರ್ಚು ಸರಿದೂಗಿದರೆ ಸಾಕು ಎಂದು ಯಾವ ಪ್ರವಾಸವೂ ಬೇಡ ಎಂದು ಕೈಚೆಲ್ಲಬಹುದು.
ಈಗಿನ ಕಾಲದಲ್ಲಿ ವಿಜ್ಞಾನ ಮುಂದುವರೆದು ಮನೆ ಮನೆಯಲ್ಲಿಯೂ ಟಿ.ವಿ. ನೂರಾರು ಚಾನಲ್ ಗಳು ವಿಧ ವಿಧವಾದ ಕಾರ್ಯಕ್ರಮಗಳು ಪ್ರಸಾರವಾಗುತ್ತಿರುವುದರಿಂದ ಎಲ್ಲರೂ ಟಿ.ವಿಗೆ ದಾಸರಾಗಿರುವ ಸನ್ನಿವೇಶ ಸೃಷ್ಠಿಯಾಗಿದೆ. ಒಳ್ಳೆಯ ಕಾರ್ಯಕ್ರಮ ಪ್ರಸಾರವಾಗುತ್ತಾ ಇರುವ ಸಮಯದಲ್ಲಿ ಅಪರೂಪಕ್ಕೆ ಯಾರಾದರೂ ಸ್ನೇಹಿತರು ಅಥವಾ ನೆಂಟರೋ ಬಂದರೆ ಈ ಕಡೆ ಕಾರ್ಯಕ್ರಮ ನೋಡಲು ಆಸೆ ಸ್ನೇಹಿತರನ್ನು ಮಾತಾಡಿಸಬೇಕಾಗಿರುವ ಅನಿವಾರ್ಯ ಸನ್ನಿವೇಶ ಬಂದು ಏಕಪ್ಪಾ ಇವರು ಈ ಹೊತ್ತಿನಲ್ಲಿ ಬಂದರೂ ಎಂದು ಪಶ್ಚಾತ್ತಾಪ ಪಟ್ಟರೂ ಆಶ್ಚರ್ಯವಿಲ್ಲ. ಟಿ.ವಿಯ ಮುಂದೆ ಕುಳಿತರೆ ಯಾರೂ ಬೇಡ ಎಂಬ ಮನೋಭಾವ ಬಂದು ಬಿಟ್ಟಿರುತ್ತದೆ. ಪ್ರಪಂಚದ ಆಗುಹೋಗುಗಳು ಜೊತೆಗೆ ಮನರಂಜನೆ ಕಾರ್ಯಕ್ರಮಗಳು ಒಂದೇ ಸಮನೆ ಬಿತ್ತರವಾಗುತ್ತಿರುವಾಗ ಬೇರೆ ಜನಗಳ ಒಡನಾಟವೇಕೆ ಎಂಬ ಮನೋಭಾವ ಬಂದಿದೆ. ಇದೂ ಸಾಲದೆಂಬಂತೆ ಪ್ರತಿಯೊಬ್ಬರ ಬಳಿಯಲ್ಲೂ ಮೊಬೈಲ್ ಬಂದಿರುವುದರಿಂದ ಎಲ್ಲರೂ ತಮ್ಮದೇ ಆದ ಲೋಕದಲ್ಲಿ ಮೈಮರೆತಿರುತ್ತಾರೆ. ಬೆಳಿಗಿನಿಂದ ದಿನಪೂರ್ತಿ ದೂರದರ್ಶನದ ಕಾರ್ಯಕ್ರಮಗಳು, ಫೇಸ್ ಬುಕ್, ವಾಟ್ಸಾಪ್ ಹಾಗೂ ಇನ್ನಿತರೆ ಸಂದೇಶ ರವಾನಿಸುವ ಮಾದ್ಯಮಗಳು ಹಾಡು, ನೃತ್ಯ ಸಿನಿಮಾ ಕ್ರೀಡೆ ಹೀಗೆ ಅನೇಕ ಮನರಂಜನೆ ಕೈಯಲ್ಲೇ ನೋಡಬೇಕಾದರೆ ಬೇರೆಯವರ ಸಹವಾಸ ನಮಗೇಕೆ ಬೇಕು ಎನ್ನುವ ಮನೋಭಾವನೆ ಮನೆ ಮಾಡಿರುತ್ತದೆ. ಏಕಾಂಗಿ ಯಾಗಿ ಕಾರ್ಯಕ್ರಮ ವೀಕ್ಷಿಸುತ್ತಾ ಕುಳಿತು ಹೊತ್ತಿಗೆ ಸರಿಯಾಗಿ ಊಟ ತಿಂಡಿ ಕುಳಿತಲ್ಲಿಗೆ ಬರುವುದರಿಂದ ಬೇರೆ ಯೋಚನೆಯನ್ನು ಕನಸು ಮನಸ್ಸಿನಲ್ಲಿಯೂ ಮಾಡದಂತ ಸನ್ನಿವೇಶ ಬಂದಿದ್ದು, ಮನುಷ್ಯನು ಏಕಾಂಗಿಯಾಗಿ ತನ್ನದೇ ಆದ ಲೋಕದಲ್ಲಿ ವಿಹರಿಸುವಂತೆ ಆಗಿದೆ. ವಿದ್ಯಾರ್ಥಿಯ ರಾದಿಯಾಗಿ ಎಲ್ಲರೂ ಇದಕ್ಕೆ ಮಾರುಹೋಗಿದ್ದು, ಬೇರೆಯವರೊಡನೆ ಕಲೆತು ಆಟ ಆಡುವುದು ಅಪರೂಪವಾಗಿದೆ. ಮೊಬೈಲ್ನಲ್ಲಿಯೇ ಅಥವಾ ಕಂಪ್ಯೂಟರ್ನಲ್ಲಿ ಯಾವುದಾದರೂ ಗೇಮನ್ನು ಆಡುತ್ತಾ ಕಾಲ ಕಳೆಯುವ ಅದೆಷ್ಟೋ ಮಂದಿಗೆ ಏಕಾಂಗಿ ಬದುಕೇ ಹಿತವಾಗಿರುವಂತೆ ಗೋಚರಿಸುತ್ತಿದೆ.
ಒಟ್ಟಿನಲ್ಲಿ ಹೇಳುವುದಾದರೆ ವಿಜ್ಞಾನದ ಅವಿಷ್ಕಾರದಿಂದ ಪ್ರಪಂಚದ ಆಗುಹೋಗುಗಳನ್ನು ಎಲ್ಲರೂ ತಮ್ಮ ತಮ್ಮ ಅಂಗೈಯಲ್ಲಿರುವ ಮೊಬೈಲ್ನಲ್ಲಿ ನೋಡುವಂತಹ ಅವಕಾಶ ಒದಗಿಬಂದಿರುವುದರಿಂದ ಪ್ರಪಂಚವೇ ಕಿರಿದಾಗುತ್ತಾ ಇದೆಯೇನೋ ಎಂಬಂತೆ ಭಾಸವಾಗಿದ್ದು, ಅದಕ್ಕೆ ತಕ್ಕಂತೆ ಸಂಘ ಜೀವಿಯಾಗಿದ್ದ ಮನುಷ್ಯನು ಇತ್ತೀಚಿನ ದಿನಗಳಲ್ಲಿ ಏಕಾಂಗಿಯಾಗುತ್ತಿರುವುದು ನಿಜಕ್ಕೂ ವಿಷಾದನೀಯ ವಾದ ಸಂಗತಿಯಾಗಿದೆ.
ಲೇಖಕರು: ಎನ್.ಮುರಳೀಧರ್
ಕಾವ್ಯನಾಮ: ಮುರಳಿಮಂಗಲಧರೆ
ವಕೀಲರು
ನೆಲಮಂಗಲ

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ8 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

