ದಿನದ ಸುದ್ದಿ
ಸಾಹಿತ್ಯ ಸಮ್ಮೇಳನ | ಡಾ.ಕಂಬಾರ ವಿರಚಿತ ‘ಶಿವರಾತ್ರಿ’ ನಾಟಕ ಯಶಸ್ವಿ ಪ್ರಯೋಗ
ಸುದ್ದಿದಿನ,ಧಾರವಾಡ,ರಂಗಾಯಣ ನಾಟಕ ವೇದಿಕೆ :84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ ಚಂದ್ರಶೇಖರ ಕಂಬಾರ ರಚಿತ ಶಿವರಾತ್ರಿ ನಾಟಕವನ್ನು, ಧಾರವಾಡದ ರಂಗಾಯಣ ಬಯಲು ರಂಗ ಮಂದಿರದಲ್ಲಿ ಕೊಪ್ಪಳದ ಶಿಕ್ಷಕರ ಕಲಾ ಸಂಘದ ಕಲಾವಿದರಿಂದ ಪ್ರದರ್ಶನಗೊಂಡು ರಂಗಾಸಕ್ತರ ಮನತಣಿಸುವಲ್ಲಿ ಯಶಸ್ವಿಯಾಯಿತು.
ದೇಶಿ ಭಾಷೆಯ ಸೊಗಡುಳ್ಳ ಈ ನಾಟಕದಲ್ಲಿ ಕಲ್ಯಾಣ ಕ್ರಾಂತಿಯ ವಿವಿಧ ಆಯಾಮಗಳನ್ನು ರಂಗನಟರು ಮನೋಜ್ಙವಾಗಿ ನಿರೂಪಿಸಿದರು. ಬಿಜ್ಜಳ ಮತ್ತು ಬಸವಣ್ಣನ ನಡುವೆ ಮನಸ್ತಾಪ ಉಂಟಾಗಿ ಸೂಳೆ ಸಾವಂತ್ರಿ ಮನೆಯಲ್ಲಿ ಚರ್ಚೆ ಸಾಗುತ್ತ, ಸೂಳೆ ಸಾವಂತ್ರಿಗೆ ಬಸವಣ್ಣನೆಂದರೆ ಭಕ್ತಿ. ಸೂಳೆ ಸಾವಂತ್ರಿಯು ತನ್ನ ವೇಶ್ಯೆ ಕಾಯಕದಿಂದ ಬಂದ ಹಣದಿಂದ ಪ್ರಾಮಾಣಿಕವಾಗಿ ತೆರಿಗೆ ಕಟ್ಟುತ್ತಾಳೆ. ಇದನ್ನು ಬಸವಣ್ಣನವರು ಮೆಚ್ಚಿ ಆಕೆಯನ್ನು ತಾಯಿ ಎಂದು ಕರೆದು ನಮಸ್ಕರಿಸುತ್ತಾರೆ. ಕೊನೆಗೆ ಬಿಜ್ಜಳನ ಆಜ್ಙೆಯಂತೆ ಬಸವಣ್ಣನವರು ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಕೂಡಲಸಂಗಮಕ್ಕೆ ಹೋಗುತ್ತಾರೆ. ಬಿಜ್ಜಳನು ಪಾಶ್ಚಾತಾಪದಿಂದ ಬಳಲುತ್ತ, ವೈರಿಗಳಿಂದ ಹತ್ಯೆಗೊಳಗಾಗುತ್ತಾನೆ.
ಬಸವಣ್ಣನವರ ಪಾತ್ರದಲ್ಲಿ ರಾಮಣ್ಣ ಶ್ಯಾವಿ, ಬಿಜ್ಜಳನ ಪಾತ್ರದಲ್ಲಿ ಮಂಜುನಾಥ ಪೂಜಾರ, ಜಗದೇವವಾಗಿ ನಾಗರಾಜನಾಯಕ ಡಿ.ಡೊಳ್ಳಿನ, ಹರಿಹರನಾಗಿ ಪ್ರಾಣೇಶ ಪೂಜಾರ, ಮಲ್ಲಿಬೊಮ್ಮಣ್ಣನಾಗಿ ಗುರುರಾಜ, ಸೂಳೆ ಸಾವಂತ್ರಿಯ ಪಾತ್ರದಲ್ಲಿ ಜಯಶ್ರೀ ಸಿಂಧನೂರ, ಹುಚ್ಚಿಯಾಗಿ ವಿಜಯಲಕ್ಷ್ಮೀ ಕೂಟಗಿ, ನಟಿಯಾಗಿ ಸುಮಾ ವೈಶಂಪಾಯನ, ಮುಗ್ಧ ಸಂಗಯ್ಯನಾಗಿ ದಯಾನಂದ ಸಾಗರ, ಕಲ್ಲಪ್ಪನ ಪಾತ್ರದಲ್ಲಿ ಮುಕುಂದ, ಮುದುಕಪ್ಪನಾಗಿ ಯೋಗಾನರಸಿಂಹ, ದಾಮೋದರನಾಗಿ ರಮೇಶ ಪೂಜಾರ, ಕಾಶವ್ವನ ಪಾತ್ರದಲ್ಲಿ ಅಂಜನಾದೇವಿ, ಕಾಮಾಕ್ಷಿಯಾಗಿ ಜ್ಯೋತಿ, ನಂದೀಶ ಮತ್ತು ಅಳ್ಳೂರಪ್ಪ ಕೋಟೆ ಅವರು ರಾಜಭಟರ ಪಾತ್ರವರ್ಗದಲ್ಲಿ ಅಭಿನಯಿಸಿ ತಮ್ಮ ತಮ್ಮ ಪಾತ್ರಗಳಿಗೆ ಜೀವ ತುಂಬಿದರು.
ಫಕೀರಪ್ಪ ಗುಳದಳ್ಳಿ ಅವರು ಸಂಗೀತ ಸಂಯೋಜನೆ ಮಾಡಿದರು. ಉಪೇಂದ್ರ ಅವರು ನಿರ್ದೇಶಿಸಿದರು. ವಸ್ತ್ರ ವಿನ್ಯಾಸ, ಪ್ರಸಾದನವನ್ನು ರಮೇಶ ಬಾನವಳ್ಳಿ ನೆರವೇರಿಸಿದರು.

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ13 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ1 day agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ9 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ1 day agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

