ರಾಜಕೀಯ
ಭಾಷೆ, ರಾಜಕಾರಣ ಮತ್ತು ವ್ಯಾಕರಣ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/01/Politics-sudddidina688.jpg&description=ಭಾಷೆ, ರಾಜಕಾರಣ ಮತ್ತು ವ್ಯಾಕರಣ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/01/Politics-sudddidina688.jpg&description=ಭಾಷೆ, ರಾಜಕಾರಣ ಮತ್ತು ವ್ಯಾಕರಣ', 'pinterestShare', 'width=750,height=350'); return false;" title="Pin This Post">
ಭಾಷೆಯೊಂದರ ಉಳಿವಿನ ಪ್ರಶ್ನೆ ಚಾಲ್ತಿಗೆ ಬಂದಾಗಲೆಲ್ಲ ಅಧಿಕಾರ ಕೇಂದ್ರವು ಪ್ರತಿಕ್ರಿಯಿಸುವ ಉತ್ಸಾಹವನ್ನೇನೋ ತೋರುತ್ತದೆ. ತಾನು ಈ ವಿಷಯದಲ್ಲಿ ಗಂಭೀರವಾಗಿರುವುದಾಗಿ ಸಂದೇಶ ರವಾನಿಸುತ್ತದೆ. ಭವಿಷ್ಯದಲ್ಲಿ ಭಾಷೆಯ ಬಳಕೆಗಳ ಬಗ್ಗೆ ಎಚ್ಚರ ಇರುವುದಾಗಿಯೂ ಸ್ಪಷ್ಟಪಡಿಸುತ್ತದೆ. ಎಲ್ಲ ಸಮುದಾಯಗಳ ಜನರೂ ಜಾಗತಿಕ ಮನ್ನಣೆ ಪಡೆದ ಪರಭಾಷೆಯ ಮೇಲೆ ಹಿಡಿತ ಸಾಧಿಸಿ ಸಾಮಾಜಿಕ ಪ್ರತಿಷ್ಠೆಯನ್ನು ಗಳಿಸಿಕೊಳ್ಳುವಂತಾಗಲಿ ಎಂಬ ಸದುದ್ದೇಶದೊಂದಿಗೆ ಹೆಜ್ಜೆಯಿರಿಸುತ್ತಿರುವುದಾಗಿ ಸಮಜಾಯಿಷಿ ನೀಡುತ್ತದೆ. ಆದರೆ, ನಮ್ಮದಲ್ಲದ ಭಾಷೆಯ ಮೇಲೆ ಹಿಡಿತ ಸಾಧಿಸಿ ಪ್ರತಿಷ್ಠೆ ಗಳಿಸಿಕೊಳ್ಳುವ ಉಮೇದು ಅತ್ಯಂತ ಸಂಕುಚಿತವಾದದ್ದು ಎಂಬುದು ಅದಕ್ಕೆ ಅರ್ಥವಾಗುವುದಿಲ್ಲ. ಇನ್ನೊಂದು ಭಾಷೆಯ ಮೇಲೆ ಹಿಡಿತ ಸಾಧಿಸುವುದಷ್ಟೇ ಮುಖ್ಯ ಎಂಬ ಸಾರ್ವತ್ರಿಕ ಭಾವನೆಯನ್ನೇ ಆಧರಿಸಿಕೊಂಡು ನಿರ್ಧಾರ ಕೈಗೊಳ್ಳುವುದರಲ್ಲಿಯೇ ಆಸಕ್ತಿ ತೋರುತ್ತದೆ.
ಪ್ರಾಯೋಗಿಕವಾಗಿ 1000 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಸರ್ಕಾರಿ ಪ್ರಸ್ತಾವವು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಆಯೋಜಿತವಾದ 84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ತಾರ್ಕಿಕ ಚರ್ಚೆಯನ್ನೂ ಹುಟ್ಟುಹಾಕಿದೆ. ಈ ವೇದಿಕೆಯ ಮೂಲಕ ವ್ಯಕ್ತವಾದ ತಾರ್ಕಿಕ ಪ್ರಶ್ನೆಗಳು ಅಧಿಕಾರ ಕೇಂದ್ರದ ಪ್ರತಿನಿಧಿಗಳೊಳಗೆ ನಿಜವಾದ ಭಾಷಾ ಪ್ರಜ್ಞೆಯನ್ನು ಬಿತ್ತುವ ರೀತಿಯಲ್ಲಿಯೇ ಇವೆ. ಆದರೆ, ಇವು ಮುನ್ನೆಲೆಗೆ ತಂದ ಚರ್ಚೆಯು ಸಂವಾದವನ್ನು ಹುಟ್ಟುಹಾಕುವ ಬದಲು ವಿವಾದವನ್ನೇ ಸೃಷ್ಟಿಸಿದೆ. ಇದಕ್ಕೆ ಕಾರಣ ಚರ್ಚೆಯ ವೇಳೆ ವ್ಯಕ್ತವಾದ ಅಭಿಪ್ರಾಯಗಳನ್ನು ವಿಶಾಲವಾಗಿ ಗ್ರಹಿಸದೇ ಇರುವುದು.
ರಾಜಕೀಯ ಚಾಣಾಕ್ಷತೆ
ಈ ಬಗೆಯ ವಿವಾದ ಇದೇ ಮೊದಲೇನಲ್ಲ. ಭಾಷೆ ಕುರಿತಾದ ಸರ್ಕಾರಿ ನಿರ್ಧಾರ ವ್ಯಕ್ತವಾದಾಗ ಸಹಜವಾಗಿಯೇ ಗೊಂದಲಗಳು ಏರ್ಪಡುತ್ತವೆ. ಅಂಥದ್ದೊಂದು ಗೊಂದಲದ ವಾತಾವರಣ ಸೃಷ್ಟಿಯಾಗುವಂತೆ ಅಧಿಕಾರ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ನೋಡಿಕೊಳ್ಳುತ್ತದೆ. ಭಾಷಾ ಸಂಬಂಧಿ ಚರ್ಚೆಯನ್ನು ಸಂವಾದಕ್ಕೆ ತಿರುಗಿಸಿ ಮಹತ್ವಪೂರ್ಣ ಭಾಷಾ ಆಂದೋಲನಕ್ಕೆ ಪ್ರೇರಣೆ ನೀಡುವ ಬದಲು ವಿವಾದದ ಸೀಮಿತ ಚೌಕಟ್ಟಿನೊಳಗೆ ಕಟ್ಟಿಹಾಕುವ ವೈಚಿತ್ರ್ಯವನ್ನು ಸೃಷ್ಟಿಸುತ್ತದೆ. ಇಂಥ ಸಂದರ್ಭದಲ್ಲೆಲ್ಲಾ ಭಾಷೆಯ ಉಳಿವಿನ ಕುರಿತು ಧ್ವನಿಯೆತ್ತುವ ನಾಟಕವಾಡುವ ಸಂಘಟನೆಗಳ ಪ್ರತಿನಿಧಿಗಳು ಮೌನಪ್ರೇಕ್ಷಕರಾಗಿಯೇ ಉಳಿದುಬಿಡುತ್ತಾರೆ. ನಿಜವಾದ ಕಾಳಜಿಯೊಂದಿಗೆ ಧ್ವನಿಯೆತ್ತುವ ಬೆರಳೆಣಿಕೆಯ ಹೋರಾಟಗಾರರು, ಚಿಂತಕರು ಮತ್ತು ರಾಜಕೀಯ ವಲಯದ ಪ್ರತಿನಿಧಿಗಳ ನಡುವೆ ಮಾತಿನ ಸಮರವೇ ನಿರ್ಮಾಣವಾಗಿಬಿಡುತ್ತದೆ. ಇಂಥ ವೇಳೆ ಸಾಹಿತ್ಯ ಸಮ್ಮೇಳನಗಳಂಥ ವೇದಿಕೆಗಳು ಜನಸಮೂಹದಲ್ಲಿ ಸರಿಯಾಗಿ ಆಲೋಚಿಸುವ ಒತ್ತಡವನ್ನುಂಟುಮಾಡುತ್ತವೆ. ಈ ವಿಷಯದಲ್ಲಿ ಧಾರವಾಡದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ನಿಜವಾದ ಕಾಳಜಿಯನ್ನು ವ್ಯಕ್ತಪಡಿಸಿದೆ.
ತೀಕ್ಷ್ಣ ಪ್ರತಿಕ್ರಿಯೆ
ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ನಿರ್ಧಾರ ಪ್ರಚುರಪಡಿಸಿ ಸಾರ್ವಜನಿಕ ಶಿಕ್ಷಣ ವಲಯವನ್ನು ಪ್ರತಿಷ್ಠಿತವಾಗಿಸುವ ಯೋಚನೆಗೆ ಪ್ರತಿಯಾಗಿ ಸಮ್ಮೇಳನವು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಉದ್ಘಾಟನೆಯ ದಿನದಿಂದಲೇ ಸ್ಪಷ್ಟ ಸಂದೇಶ ರವಾನಿಸಿದ ಸಮ್ಮೇಳನವು ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ನಿರ್ಧಾರವನ್ನು ಅನುಷ್ಠಾನಗೊಳಿಸಬಾರದು ಎಂಬ ಬಹುಮುಖ್ಯ ಆಗ್ರಹವನ್ನು ನಿರ್ಣಯದ ರೂಪದಲ್ಲಿ ಮುಂದಿಟ್ಟಿತು.
ಉದ್ಘಾಟನೆಯ ದಿನದಂದು ಸಾಹಿತಿ ಡಾ.ಚಂದ್ರಶೇಖರ ಪಾಟೀಲ್ ಅವರು ತಮ್ಮ ಎಂದಿನ ವ್ಯಂಗ್ಯದ ಧಾಟಿಯಲ್ಲಿ ಆಂಗ್ಲಮಾಧ್ಯಮ ಶಾಲೆಗಳ ಪರವಾದ ಪ್ರಸ್ತಾಪವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇಂಗ್ಲಿಷ್ ಪರವಾದ ನಿರ್ಧಾರಗಳನ್ನು ಅನುಷ್ಠಾನಗೊಳಿಸುವ ಉತ್ಸಾಹವು ಕನ್ನಡದ ಮೇಲೆ ಬಹುದೊಡ್ಡ ಪ್ರಹಾರದ ಮುನ್ಸೂಚನೆ ಎಂಬರ್ಥದ ವಿಶ್ಲೇಷಣೆಯನ್ನು ನೀಡಿದ್ದರು. ಆದರೆ, ಅವರ ಮಾತುಗಳಲ್ಲಿನ ತಾರ್ಕಿಕತೆಯು ಹಿನ್ನೆಲೆಗೆ ಸರಿದು ವ್ಯಕ್ತಿಗತ ದೃಷ್ಟಿಕೋನಗಳು ಆದ್ಯತೆ ಪಡೆದು ಚರ್ಚೆಗೊಳಪಟ್ಟವು.
ಭಾಷೆಯ ಬಗ್ಗೆ ಚರ್ಚಿಸುವಾಗಲೆಲ್ಲಾ ವ್ಯಕ್ತಿಗತ ಬದ್ಧತೆಯ ಪ್ರಶ್ನೆಗಳು ನುಸುಳಿಕೊಂಡು ಸಂವಾದದ ಸಾಧ್ಯತೆಯನ್ನು ಮೊಟಕುಗೊಳಿಸುತ್ತವೆ. ನಿಮ್ಮ ಮಕ್ಕಳು, ಮೊಮ್ಮಕ್ಕಳನ್ನು ಇಂಗ್ಲಿಷ್ ಶಾಲೆಗಳಿಗೆ ಕಳುಹಿಸಿ ಉಳಿದವರ ಮಕ್ಕಳು ಕನ್ನಡವನ್ನು ಕಲಿಯಬೇಕು ಎಂಬ ವಾದವನ್ನು ಮಂಡಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ವಾದವನ್ನು ಮುಂದಿಡಲಾಗುತ್ತದೆ. ಈ ಚಿಂತಕರು, ಬುದ್ಧಿಜೀವಿಗಳ ಜಾಯಮಾನವೇ ಹಾಗೆ ಎಂಬ ಉಡಾಫೆ ದೃಷ್ಟಿಕೋನದಲ್ಲಿ ಮಾತೃಭಾಷೆಯಲ್ಲಿನ ಪ್ರಾಥಮಿಕ ಶಿಕ್ಷಣದ ವ್ಯಾಪಕ ಪ್ರಯೋಜನಗಳ ಸಾಧ್ಯತೆಯನ್ನು ಅವಸರವಸರದಲ್ಲಿ ಅಲ್ಲಗಳೆಯಲಾಗುತ್ತದೆ.
ಗಟ್ಟಿತನದ ಅಡಿಪಾಯ
ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವುದನ್ನು ವ್ಯಕ್ತಿತ್ವವೊಂದು ಗಟ್ಟಿತನದ ಬೌದ್ಧಿಕ ಅಡಿಪಾಯ ರೂಪಿಸಿಕೊಳ್ಳುವ ಕ್ರಮ ಎಂದೇ ಪರಿಭಾವಿಸಿಕೊಳ್ಳಬೇಕು. ಪ್ರಾಥಮಿಕ ಸರ್ಕಾರಿ ಶಾಲೆಗಳನ್ನು ಈ ನೆಲೆಯಲ್ಲಿಯೇ ಬಲಪಡಿಸಬೇಕು. ಇಂಗ್ಲಿಷ್, ಹಿಂದಿ ಸೇರಿದಂತೆ ಇತರೆ ಭಾಷೆಗಳನ್ನು ಗ್ರಹಿಸಿಕೊಳ್ಳುವ ಶೈಕ್ಷಣಿಕ ಮಾದರಿಗಳನ್ನು ರೂಪಿಸಬೇಕು. ಅದಕ್ಕಾಗಿ ಶಿಕ್ಷಕ ಸಮುದಾಯವನ್ನು ಸಿದ್ಧಗೊಳಿಸಬೇಕು. ನೇಮಕಾತಿಯ ನಂತರ ಆಯಾ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಆದ್ಯತೆ ಪಡೆಯುವ ಭಾಷಾ ಶಿಕ್ಷಣದ ಹೊಸ ಆಯಾಮಗಳನ್ನು ಪರಿಚಯಿಸಿ ಕನ್ನಡವೂ ಸೇರಿದಂತೆ ವಿವಿಧ ಭಾಷೆಗಳ ಮೇಲೆ ಹಿಡಿತ ಸಾಧಿಸುವ ಸರಳ ಕ್ರಮಗಳ ಕಲಿಕೆಯ ಕಡೆಗೆ ಗಮನವೀಯುವ ಸಮಗ್ರ ನೀತಿಯನ್ನು ವಿನ್ಯಾಸಗೊಳಿಸಿ ಜಾರಿಗೆ ತರುವ ಬದ್ಧತೆಯನ್ನು ಸರ್ಕಾರದ ಶೈಕ್ಷಣಿಕ ಸಚಿವಾಲಯ ತೋರ್ಪಡಿಸಬೇಕು.
ಬದ್ಧತೆಯ ಕೊರತೆ
ಇಂಥ ಬದ್ಧತೆಯ ಕೊರತೆಯ ಕಾರಣಕ್ಕಾಗಿಯೇ ಪ್ರಾಥಮಿಕ ಹಂತದಿಂದಲೇ ಸರ್ಕಾರಿ ಶಾಲೆಯ ಮಕ್ಕಳು ಭಾಷೆಗೆ ಸಂಬಂಧಿಸಿದಂತೆ ಹಲವಾರು ಸಂಕೀರ್ಣ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇಂಗ್ಲಿಷ್ ಕಲಿಯಲೇಬೇಕು, ಕಲಿಯದಿದ್ದರೆ, ಆ ವಿಷಯದಲ್ಲಿ ಅನುತ್ತೀರ್ಣರಾದರೆ ಟೀಕೆಗೆ ಗುರಿಯಾಗಬೇಕಾಗುತ್ತದೆ ಎಂಬ ಸಾಮಾಜಿಕ ಅಂಜಿಕೆಯು ಅವರೊಳಗೆ ಕೀಳರಿಮೆಯನ್ನು ಮೂಡಿಸುತ್ತದೆ. ಕಾನ್ವೆಂಟ್ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳನ್ನು ಉದಾಹರಿಸಿ ಅವರೊಂದಿಗೆ ಹೋಲಿಸಿ ‘ಅವರ ಮುಂದೆ ನೀವೇನೂ ಅಲ್ಲ’ ಎಂಬ ತಿವಿತದೊಂದಿಗಿನ ಸಂಬಂಧಿಕರು ಮತ್ತು ಹಿರಿಯರ ಮಾತುಗಳು ಅವರೊಳಗಿನ ಸಕಾರಾತ್ಮಕ ದೃಷ್ಟಿಕೋನಗಳನ್ನೇ ಕೊಂದುಬಿಡುತ್ತವೆ.
ಇಂಗ್ಲಿಷ್ ಭಾಷೆಯ ವ್ಯಾಮೋಹದ ಗುಂಗಿನಲ್ಲಿ ಕನ್ನಡವನ್ನು ತುಚ್ಛವಾಗಿ ನೋಡುವ ಈ ಮನುಷ್ಯಮಿತಿಯು ಕೌಟುಂಬಿಕ ಆದ್ಯತೆಯನ್ನು ಪಡೆಯಬಾರದು. ಅಷ್ಟೇ ಅಲ್ಲ, ಆ ಆದ್ಯತೆಯು ಸರ್ಕಾರಿ ವಲಯದ ಪ್ರಾಶಸ್ತ್ಯವನ್ನೂ ಪಡೆಯಬಾರದು. ಹಾಗಾದರೆ, ಒಂದು ಪೀಳಿಗೆಯ ಭಾಷಿಕ ಸಾಮಥ್ರ್ಯ ಮತ್ತು ವೈಚಾರಿಕ ವಿವೇಚನೆಯ ಬೆಳವಣಿಗೆಯ ತೀವ್ರತೆಗೆ ಕುಂದುಂಟಾಗುತ್ತದೆ.
ಕನ್ನಡ ಶೈಕ್ಷಣಿಕ ಸಂಸ್ಕಾರದ ಶ್ರೇಷ್ಠತೆ
ಪ್ರಾಥಮಿಕ ಶಾಲಾಹಂತದ ಮಕ್ಕಳಿಗೆ ಕನ್ನಡದಿಂದಲೇ ಶಿಕ್ಷಣದ ಸಂಸ್ಕಾರ ಪ್ರಾಪ್ತವಾಗಬೇಕು ಎಂಬ ಪ್ರತಿಪಾದನೆಯು ಕೇವಲ ಭಾವುಕ ಲೇಪವನ್ನಷ್ಟೇ ಹೊಂದಿಲ್ಲ. ಅದು ಮಕ್ಕಳ ಕಲಿಕೆಯ ಸಾಮಥ್ರ್ಯಕ್ಕೆ ಬೇಕಾದ ಆಶಾವಾದವನ್ನು ನೆಲೆಗೊಳಿಸುವ ವೈಜ್ಞಾನಿಕ ಮಾರ್ಗೋಪಾಯದ ಆಧಾರವನ್ನೂ ಹೊಂದಿರುವುದನ್ನು ಗಮನಿಸಲೇಬೇಕು.
ಮಗುವೊಂದು ಮತ್ತೊಂದು ಭಾಷೆಯೊಂದಿಗೆ ಸಂಪರ್ಕ ಸಾಧಿಸುವುದಕ್ಕೆ ಮುನ್ನ ತಾನಿರುವ ಕೌಟುಂಬಿಕ ಪರಿಸರದ ಭಾಷಿಕ ಸಂವಹನದ ಕ್ರಮಗಳ ಅರಿವು ಹೊಂದಿರಬೇಕಾಗುತ್ತದೆ. ನೇರವಾಗಿ ಅದು ಬೇರೊಂದು ಭಾಷೆಯ ಸಂಪರ್ಕ ಸಾಧಿಸಲು ಸಾಧ್ಯವಾಗುವುದಿಲ್ಲ. ಉದಾಹರಣೆ ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳನ್ನು ಕನ್ನಡದ ಪರಿಸರದಲ್ಲಿ ಬೆಳೆದ ಮಕ್ಕಳು ಕನ್ನಡದ ಮೂಲಕವೇ ಕಂಡುಕೊಳ್ಳಬೇಕಾಗುತ್ತದೆ. ನೇರವಾಗಿ ಇಂಗ್ಲಿಷ್ ಪದಗಳನ್ನು ಹೇಳಿ ಅದೇ ಭಾಷೆಯ ವಾಕ್ಯಗಳನ್ನು ಉಲ್ಲೇಖಿಸಿ ಆ ಭಾಷೆಯನ್ನು ಕಲಿಸಲಾಗದು. ಮಾತೃಭಾಷೆಯ ನೆರವಿನೊಂದಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳ ವ್ಯಾಕರಣ ಮತ್ತು ಅಭಿವ್ಯಕ್ತಿ ವಿಧಾನಗಳನ್ನು ಗೊತ್ತುಮಾಡಿಕೊಂಡರೆ ಮಕ್ಕಳೊಳಗೆ ಭಾಷಿಕ ಪ್ರಬುದ್ಧತೆ ಭಿನ್ನವಾಗಿ ನೆಲೆಯೂರುತ್ತದೆ. ಮಾತೃಭಾಷೆಯಲ್ಲಿ ಮಾತನಾಡುವ, ಮಾತನಾಡಿದ್ದನ್ನು ಸ್ಪಷ್ಟವಾಗಿ ಗ್ರಹಿಸುವ, ಗ್ರಹಿಸಿಕೊಂಡಿದ್ದನ್ನು ವಿವೇಚಿಸಿ ಅಭಿವ್ಯಕ್ತಿಸುವ ಕ್ರಮಗಳೊಂದಿಗೆ ಗುರುತಿಸಿಕೊಳ್ಳಲು ಅನುವಾಗುತ್ತದೆ. ಇದು ಪರಭಾಷೆಗಳ ಕಲಿಕೆಯಲ್ಲಿ ಗಮನಾರ್ಹ ಪಾತ್ರವಹಿಸುತ್ತದೆ.
ಭಾಷಾ ಸಂಕೀರ್ಣತೆಯ ಸವಾಲು
ಈ ಸೂಕ್ಷ್ಮವನ್ನು ಅರಿಯದೇ ಇದ್ದರೆ ಹೊಸ ಪೀಳಿಗೆಯ ಮಕ್ಕಳು ಭಾಷಾ ಸಂಕೀರ್ಣತೆಯನ್ನು ಎದುರಿಸುತ್ತಾರೆ. ಮುಂದಾಗುವ ಅಪಾಯವನ್ನು ಈಗಲೇ ಗ್ರಹಿಸಿರುವ ಕಾರಣಕ್ಕಾಗಿಯೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ಉಳಿದೆಲ್ಲ ಪ್ರಚಲಿತ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಳ್ಳದೇ ಕೇವಲ ಭಾಷಿಕ ಸಮಸ್ಯೆಯನ್ನಷ್ಟೇ ಕಾಡಿಸಿಕೊಂಡು ಮಹತ್ವದ ಸಂದೇಶವನ್ನು ಸಾರುವಲ್ಲಿ ಯಶಸ್ವಿಯಾಗಿದೆ. ಸಾವಿರ ಆಂಗ್ಲಮಾಧ್ಯಮ ಶಾಲೆಗಳನ್ನು ಆರಂಭಿಸುವ ಯೋಚನೆಯನ್ನು ಅನುಷ್ಠಾನಗೊಳಿಸಬಾರದು ಎಂಬ ಸಮ್ಮೇಳನದ ಆಗ್ರಹ, ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುವಂತೆ ಮುಂದಿಟ್ಟಿರುವ ಅದರ ಸಲಹಾತ್ಮಕ ನಿರ್ಣಯ ಮಹತ್ವಪೂರ್ಣ. ಆ ಮೂಲಕ ಸಮ್ಮೇಳನವು ಭಾಷೆಯ ಉಳಿವಿನ ಕುರಿತಾದ ತನ್ನ ಕಾಳಜಿ ಮತ್ತು ಬದ್ಧತೆಯನ್ನು ಸಾಬೀತುಪಡಿಸಿದೆ.
ಇಡೀ ಜಗತ್ತು ವಾಣಿಜ್ಯಿಕ ಲಾಭದ ಗುಂಗಿನೊಂದಿಗಿದ್ದಾಗ ಭಾಷೆ, ಸಂಸ್ಕøತಿ ಉಳಿವಿನ ಪ್ರಶ್ನೆಗಳು ಹಿನ್ನೆಲೆಗೆ ಸರಿಯುತ್ತವೆ. ಹಾಗೆ ಹಿನ್ನೆಲೆಗೆ ಸರಿಸುವ ಉದ್ದೇಶಪೂರ್ವಕ ಹುನ್ನಾರಗಳು ನಡೆದುಬಿಡುತ್ತವೆ. ವಾಣಿಜ್ಯಿಕ ಹಿತಾಸಕ್ತಿ ಮತ್ತು ಸಂಕುಚಿತ ರಾಜಕಾರಣದ ವಿಕಾರಗಳ ವಿಜೃಂಭಣೆಯ ಕಾರಣಕ್ಕಾಗಿಯೇ ಕನ್ನಡವು ಆಡಳಿತಾತ್ಮಕ ಆದ್ಯತೆಯ ಆವರಣದಿಂದ ಕ್ರಮೇಣ ಮರೆಯಾಗುವ ಮುನ್ಸೂಚನೆಗಳು ದೊರಕುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಸಮ್ಮೇಳನದ ಭಾಷಿಕ ನಿರ್ಣಯಗಳನ್ನು ಸಕಾಲಿಕ ಎಂದೇ ಪರಿಗಣಿಸಬೇಕಾಗುತ್ತದೆ.
ಮಾತೃಭಾಷೆಯೊಂದಿಗಿನ ಕಲಿಕಾನಂಟು
ಕಲಿಕೆಯು ಅತ್ಯಂತ ಸಹಜ ಪ್ರಕ್ರಿಯೆ. ಮಗುವಿನ ಬೆಳವಣಿಗೆಯ ವೇಳೆ ಕ್ರಮಾನಗುತವಾಗಿ ಆಂತರ್ಯದಲ್ಲಿ ಅಂತಸ್ಥಗೊಳ್ಳುವ ಪರಿಕಲ್ಪನೆ. ಇದನ್ನು ಒಳಗೊಳ್ಳುವ ಹಂಬಲದೊಂದಿಗೆ ಹೆಜ್ಜೆಯಿರಿಸುವ ಮಗು ಹಂತಹಂತವಾಗಿ ಪ್ರಬುದ್ಧತೆಯ ಹಾದಿಯನ್ನು ಕ್ರಮಿಸಲು ಸಾಧ್ಯವಾಗುತ್ತದೆ. ಈ ಹಾದಿಯಲ್ಲಿ ಮಾತೃಭಾಷೆಯದ್ದು ಅತ್ಯಂತ ಪ್ರಭಾವೀ ಪಾತ್ರ. ಆದರೆ, ಇದನ್ನು ನಿರ್ಲಕ್ಷಿಸಿ ಬೇರೊಂದು ಭಾಷೆಯನ್ನು ಮಕ್ಕಳ ಮನೋಲೋಕದಲ್ಲಿ ಒತ್ತಾಯಪೂರ್ವಕವಾಗಿ ಸೇರ್ಪಡೆಗೊಳಿಸುವ ಪ್ರಯತ್ನವು ಆಘಾತಕಾರಿ ಪರಿಣಾಮಗಳನ್ನು ಉಂಟುಮಾಡುತ್ತದೆ. ಸಮಗ್ರ ತಿಳುವಳಿಕೆಯನ್ನು ದಾಟಿಸುವುದಕ್ಕೆ ದಾರಿಮಾಡಿಕೊಡುವ ಕಲಿಕೆಯು ಭಾಷೆಯ ಪ್ರಸ್ತುತಿಯ ನೆರವಿನೊಂದಿಗೇ ಏರ್ಪಡಬೇಕಾಗುತ್ತದೆ.
ಮಗು ತನ್ನದಲ್ಲದ ಬೇರೊಂದು ಭಾಷೆಗೆ ಆರಂಭದಲ್ಲಿಯೇ ಒಗ್ಗಿಕೊಳ್ಳುವುದಿಲ್ಲ. ಅಪರಿಚಿತರನ್ನು ಕಂಡಾಕ್ಷಣ ಆತಂಕಗೊಳ್ಳುವ ಮನಸ್ಥಿತಿಯೇ ಬೇರೊಂದು ಭಾಷೆಯ ಅಭಿವ್ಯಕ್ತಿ ಎದುರುಗೊಂಡಾಗ ಪುನರಾವರ್ತಿತವಾಗುತ್ತದೆ. ಆಗ ಭಯ, ಆತಂಕ, ಅರ್ಥಕ್ಕೆಟುಕ್ಕುತ್ತಿಲ್ಲ ಎಂಬ ಕೊರಗುಗಳೆಲ್ಲವೂ ಒಟ್ಟಿಗೇ ದಾಳಿಗೈದು ಉದ್ದೇಶಿತ ಕಲಿಕೆ ಸಾಧ್ಯವಾಗುವುದೇ ಇಲ್ಲ. ಈ ಸೂಕ್ಷ್ಮತೆ ಅರಿತುಕೊಳ್ಳಲು ಭಾರೀ ಸಂಶೋಧನೆಯನ್ನೇನೋ ಕೈಗೊಳ್ಳಬೇಕಿಲ್ಲ. ಇಂಗ್ಲಿಷ್ನಿಂದಲೇ ಮಗುವಿನ ಕಲಿಕೆ ಆರಂಭವಾಗಬೇಕು ಎಂದು ವಾದಿಸುವ ಕನ್ನಡಿಗರು ತಮ್ಮ ತಮ್ಮ ಪ್ರಾಥಮಿಕ ಶಾಲಾ ದಿನಗಳನ್ನು ನೆನಪಿಸಿಕೊಂಡರೆ ಈ ಸೂಕ್ಷ್ಮ ಗಮನಕ್ಕೆ ಬರುತ್ತದೆ.
ಅಪಾಯದ ಮುನ್ಸೂಚನೆ
ಇಂಥ ಯಾವ ಸೂಕ್ಷ್ಮತೆಗಳನ್ನು ಪರಿಗಣಿಸದೇ ಪ್ರತಿಷ್ಠೆಯನ್ನಷ್ಟೇ ಕಾಡಿಸಿಕೊಂಡು ಮಕ್ಕಳ ಉದ್ಧಾರಕ್ಕೆ ಇಂಗ್ಲಿಷ್ ಮೂಲಕವೇ ಕಲಿಕೆಯ ಯಾನ ಶುರುವಾಗಬೇಕು ಎಂದು ಪ್ರತಿಪಾದಿಸುವುದು ತಾರ್ಕಿಕವೆನ್ನಿಸಿಕೊಳ್ಳುವುದಿಲ್ಲ. ಸಾಹಿತ್ಯ ಸಮ್ಮೇಳನಗಳಂಥ ವೇದಿಕೆಯ ಮೂಲಕ ಹೊರಹೊಮ್ಮುವ ಅಮೂಲ್ಯ ಚಿಂತನೆಗಳನ್ನು ಪರಿಗಣಿಸುವ ಆಡಳಿತಾತ್ಮಕ ಬದ್ಧತೆಯ ಕೊರತೆ ಎದ್ದುಕಾಣುತ್ತಿರುವಾಗ ಇಂಥ ವಿತಂಡವಾದಿ ದೃಷ್ಟಿಕೋನಗಳು ಕನ್ನಡದ ಮಕ್ಕಳ ಕಲಿಕಾ ಸಾಮಥ್ರ್ಯವನ್ನು ಮೊಟಕುಗೊಳಿಸುತ್ತವೆ. ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾಗ ನಮಗೆ ನಾಡಿನ ಕುರಿತಾದ ಹೆಮ್ಮೆಯ ಭಾವ ಮೂಡಿಸುವಂಥ ಗೀತೆಗಳನ್ನು ಶಿಕ್ಷಕರು ರಾಜ್ಯೋತ್ಸವದ ಸಂದರ್ಭದಲ್ಲಿ ಪರಿಚಯಿಸುತ್ತಿದ್ದರು.
ಕನ್ನಡದ ಕಲಿಕೆಯ ಜೊತೆಜೊತೆಗೇ ಇಂಥ ಪರಿಚಯಾತ್ಮಕ ಪ್ರಯತ್ನಗಳು ನಾಡಿನ ಕುರಿತಾದ ಹೆಮ್ಮೆಯನ್ನೂ ಹೆಚ್ಚಿಸುತ್ತಿದ್ದವು. ‘ಜಯ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ’ ಕವಿತೆಯು ನಾಡಗೀತೆಯ ಆಡಳಿತಾತ್ಮಕ ಮನ್ನಣೆ ಪಡೆದು ಕಡ್ಡಾಯ ನಿಯಮಾವಳಿಯ ವ್ಯಾಪ್ತಿಗೆ ಬರುವುದಕ್ಕಿಂತ ಮುಂಚೆಯೇ ಕರ್ನಾಟಕದ ಶಾಲೆಗಳಲ್ಲಿ ಕನ್ನಡದ ವೈವಿಧ್ಯಮಯ ಜಗತ್ತು ಅದರ ಭಾಷಿಕ ಸೊಗಡಿನೊಂದಿಗೇ ಪರಿಚಿತವಾಗುತ್ತಿತ್ತು. ಈಗ ಪ್ರಾಥಮಿಕ ಶಿಕ್ಷಣ ಹಂತದಿಂದಲೇ ಇಂಗ್ಲಿಷ್ ಮಾಧ್ಯಮದ ಆವರಣದ ಕೂಪಕ್ಕೆ ಮಕ್ಕಳನ್ನು ತಳ್ಳುವ ಪ್ರಯೋಗಾರ್ಥ ಪ್ರಯತ್ನದ ಹೆಜ್ಜೆಗಳು ಅಂಥ ವಾತಾವರಣವನ್ನು ಇಲ್ಲವಾಗಿಸುವ ಆತಂಕವನ್ನು ಮೂಡಿಸಿವೆ. ಮಕ್ಕಳ ಭಾಷಿಕ ಸಾಮಥ್ರ್ಯಕ್ಕೆ ಕೊಡಲಿಪೆಟ್ಟು ನೀಡುವ ಸುಳಿವು ನೀಡಿವೆ.
ಕಂಬಾರರ ಮೌಲಿಕ ಚಿಂತನೆ
ಸಮ್ಮೇಳನದ ಅಧ್ಯಕ್ಷರಾದ ಡಾ.ಚಂದ್ರಶೇಖರ ಕಂಬಾರ ಅವರ ನುಡಿಗಳಲ್ಲಿಯೇ ಆಡಳಿತವು ಕನ್ನಡ ಭಾಷೆಯ ಕುರಿತು ಯಾವ ನಿಲುವುಗಳನ್ನು ತಳೆಯಬೇಕು ಎಂಬ ಸ್ಪಷ್ಟ ಮಾರ್ಗದರ್ಶನವಿದೆ.“ಮಾತೃಭಾಷೆಯು ಬದುಕನ್ನು ಅಥಪೂರ್ಣಗೊಳಿಸುತ್ತದೆ. ಸಾಂಸ್ಕøತಿಕ ನಂಬಿಕೆ ಮತ್ತು ಮೌಲ್ಯಗಳು ಮಾತೃಭಾಷೆಯೊಂದಿಗೆ ತಳುಕುಹಾಕಿಕೊಂಡಿರುತ್ತವೆ. ಕನ್ನಡವನ್ನು ಸರಿಯಾಗಿ ಕಲಿಯುವುದರಿಂದ ಇಂಗ್ಲಿಷ್ ಸೇರಿದಂತೆ ಉಳಿದ ಭಾಷೆಗಳನ್ನು ಕಲಿಯುವುದಕ್ಕೂ ಸಹಾಯಕವಾಗುತ್ತದೆ” ಎಂಬ ಅವರ ನಿಲುವುಗಳು ಕೇವಲ ತಾತ್ವಿಕ ಚೌಕಟ್ಟನ್ನಷ್ಟೇ ಹೊಂದಿಲ್ಲ. ಸಮಸ್ತ ಕನ್ನಡಿಗರ ಅನುಭವಕ್ಕೆ ಬಂದ ಮೌಲಿಕ ಅಂಶಗಳನ್ನಾಗಿಯೂ ನಾವು ಅವುಗಳನ್ನು ಗ್ರಹಿಸಬೇಕು.
ಈ ರೀತಿಯಾಗಿ ಗ್ರಹಿಸುವ ಸಂಯಮ ಆಡಳಿತಾತ್ಮಕ ವಲಯದಿಂದ ವ್ಯಕ್ತವಾದರೆ ಕನ್ನಡ ಭಾಷೆಯು ಭವಿಷ್ಯದಲ್ಲಿ ಆತಂಕ ಎದುರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ವಾಣಿಜ್ಯಿಕ ಹಿತಾಸಕ್ತಿಯ ಪ್ರಲೋಭನೆಗೆ ಒಳಗಾಗಿ ಭಾಷೆಗೆ ಸಂಬಂಧಿಸಿದಂತೆ ಅತಾರ್ಕಿಕವಾದ, ಪ್ರಾಯೋಗಿಕವಲ್ಲದ ತೀರ್ಮಾನಗಳು ಪ್ರಕಟವಾಗುವುದಿಲ್ಲ.
ಇಂಗ್ಲಿಷ್ ಗುಂಗಿನ ಕೃತಕತೆ
ಇಂಗ್ಲಿಷ್ ಪ್ರತಿಷ್ಠೆಯನ್ನು ಹೆಚ್ಚಿಸಿಕೊಳ್ಳುವ ಭಾಷೆಯಾಗಿ ನಮ್ಮೊಳಗೆ ಬೆರೆತುಹೋಗಬೇಕಿಲ್ಲ. ಆ ಭಾಷೆಯನ್ನು ಬಲವಂತವಾಗಿ ಪ್ರಾಥಮಿಕ ಹಂತದಿಂದಲೇ ಮಕ್ಕಳೊಳಗೆ ಬೆರೆಸುವ ಪ್ರಯತ್ನವು ಅವರ ಬೆಳವಣಿಗೆಯ ಸಹಜತೆಗೆ ಕಡಿವಾಣ ಬಿಗಿಯುತ್ತದೆ. ಆ ಸಹಜತೆಯ ಜಾಗವನ್ನು ಕೃತಕತೆ ಆವರಿಸಿಕೊಂಡುಬಿಡುತ್ತದೆ.
ಇಂಗ್ಲಿಷ್ ಗುಂಗಿನ ಕೃತಕ ಚೌಕಟ್ಟಿನೊಳಗೆ ಬಂಧಿಯಾಗಿ ಕನ್ನಡದ ಬಗ್ಗೆ ಕೀಳರಿಮೆ ರೂಪುಗೊಳ್ಳುತ್ತದೆ. ಇಂಗ್ಲಿಷ್ ಶ್ರೇಷ್ಠ ಎಂಬ ತಪ್ಪುಕಲ್ಪನೆಯನ್ನೇ ಮಕ್ಕಳು ಪರಮ ಆದರ್ಶವನ್ನಾಗಿ ಸ್ವೀಕರಿಸುತ್ತಾರೆ. ಹಾಗಾದಾಗ ಮಾತೃಭಾಷೆ, ಅದರೊಂದಿಗಿನ ಕರಳುಬಳ್ಳಿಯ ಸಂಬಂಧ, ಸಂಸ್ಕøತಿಯ ವೈವಿಧ್ಯಮಯ ಸ್ವರೂಪ ಅವರಿಂದ ಕ್ರಮೇಣ ದೂರವಾಗುತ್ತಾ ಹೋಗುತ್ತದೆ. ಅವರನ್ನು ಹೀಗೆ ಉದ್ದೇಶಪೂರ್ವಕವಾಗಿ ಕನ್ನಡದ್ದೇ ಪರಂಪರೆಯ ಬೇರುಗಳಿಂದ ಬೇರ್ಪಡಿಸುವಂಥ ಹೆಜ್ಜೆಗಳು ಭಾಷಿಕ ಸಂದಿಗ್ಧತೆಯನ್ನೇ ಸೃಷ್ಟಿಸುತ್ತವೆ.
ಕರುಳುಬಳ್ಳಿಯ ಸಂಬಂಧ
ಮಕ್ಕಳು ಕನ್ನಡದೊಂದಿಗಿನ ಕರುಳುಬಳ್ಳಿಯ ಸಂಬಂಧ ಕಡಿದುಕೊಂಡರೆ ಏನಾಗುತ್ತದೆ? ಬೆಳೆದು ದೊಡ್ಡವರಾದಾಗ ಕನ್ನಡದ ಭಾಷಿಕ ಸೊಗಡನ್ನೇ ವ್ಯಂಗ್ಯಕ್ಕೀಡುಮಾಡುತ್ತಾರೆ. ಕನ್ನಡದ ಉಳಿವಿನ ಕುರಿತು ಜನಪ್ರಿಯ ಶೈಲಿಯಲ್ಲಿ ಸಿನಿಮಾ ಹೀರೋಗಳು ಹೇಳುವ ಡೈಲಾಗ್ಗಳನ್ನಷ್ಟೇ ಕೇಳಿ ಚಪ್ಪಾಳೆ ಹೊಡೆದು ಆ ಕ್ಷಣಕ್ಕೇ ಮರೆತುಬಿಡುವ ಮನಃಸ್ಥಿತಿಗೆ ಪಕ್ಕಾಗಿಬಿಡುತ್ತಾರೆ. ಇಂಗ್ಲಿಷ್ ಮಾತನಾಡಿದರಷ್ಟೇ ಮರ್ಯಾದೆ ಎಂದುಕೊಂಡು ಪ್ರತಿಷ್ಠೆ ಮೆರೆಯುವ ಕೃತಕತೆಯನ್ನೇ ಗುಣಸ್ವಭಾವವನ್ನಾಗಿಸಿಕೊಳ್ಳುತ್ತಾರೆ.
ಕನ್ನಡದಲ್ಲೇ ಲಭ್ಯವಾಗುವ ಅದೆಷ್ಟೋ ಜ್ಞಾನ ಮಾದರಿಗಳ ಸಂಪರ್ಕದಿಂದ ದೂರವೇ ಉಳಿದುಬಿಡುತ್ತಾರೆ. ಎಲ್ಲದಕ್ಕೂ ಇಂಗ್ಲಿಷ್ನ್ನೇ ನೆಚ್ಚಿಕೊಂಡು ಅದರ ಮೂಲಕ ಹರಿದುಬರುವ ಮಾಹಿತಿಗಳನ್ನು ಮೇಲ್ನೋಟಕ್ಕಷ್ಟೇ ಗ್ರಹಿಸುವ ಅವಸರದ ಮಾದರಿಯನ್ನೇ ಅನುಸರಿಸುತ್ತಾರೆ. ವಿವಿಧ ಭಾಷೆಗಳಲ್ಲಿ ಲಭ್ಯವಾಗುವ ಮಾಹಿತಿಗಳನ್ನುಜ್ಞಾನಸಂಪನ್ಮೂಲವಾಗಿಸಿಕೊಳ್ಳುವ ಸಂಯಮ ರೂಢಿಸಿದ ಕನ್ನಡ ಓದಿನ ಸೊಗಡು ಸವಿಯುವ ಅಪೂರ್ವ ಅವಕಾಶದಿಂದ ಅವರು ವಂಚಿತರಾಗುತ್ತಾರೆ.ಮುಂದೆ ಎದುರಾಗಲಿರುವ ಅಂಥದ್ದೊಂದು ಸನ್ನಿವೇಶದಿಂದ ಕನ್ನಡದ ಮಕ್ಕಳನ್ನು ಪಾರುಮಾಡಬೇಕಿದೆ. ಸಮ್ಮೇಳನದ ನಿರ್ಣಯಗಳನ್ನು ಗಂಭೀರವಾಗಿ ಪರಿಗಣಿಸಿ ಕನ್ನಡಕ್ಕಿರುವ ಉಜ್ವಲ ಭವಿಷ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ಯೋಚಿಸಬೇಕಾಗಿದೆ. ಭಾಷೆಗೆ ಸಂಬಂಧಿಸಿದಂತೆ ಕವಲು ಹಾದಿ ತುಳಿಯುವ ರಾಜಕಾರಣದ ಸಂಕುಚಿತ ವ್ಯಾಕರಣವನ್ನುಭಗ್ನಗೊಳಿಸಬೇಕಿದೆ.
-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ6 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ9 hours agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ3 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ2 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ


