Connect with us

ಅಂತರಂಗ

ಪರೀಕ್ಷೆಗೆ ಪರಿಣಾಮಕಾರಿ ಓದು

Published

on

 

ವಿದ್ಯಾ ನಾಮನರಸ್ಯ ರೂಪಮಧಿಕಂ ಪ್ರಚ್ಛನ್ನ ಗುಪ್ತ ಧನಂ
ವಿದ್ಯಾಭೋಗಕರೀ ಯಶಃ ಸುಖಕರೀ ವಿದ್ಯಾ ಗುರುಣಾಂ ಗುರುಃ ||
ವಿದ್ಯಾಬಂಧು ಜನೋ ವಿದೇಶಗಮತೀ ವಿದ್ಯಾಪರಂ ದೈವತಂ |
ವಿದ್ಯಾ ರಾಜಸು ಪೂಜ್ಯತೀ ನಹಿ ಧನಂ ವಿದ್ಯಾವಿಹೀನಃ ಪಶುಃ ||

ವಿದ್ಯೆಯು ಮನುಷ್ಯನಿಗೆ, ಸ್ತ್ರೀಗೆ ಸೌಂದರ್ಯವಾಗಿದೆ. ಅದೊಂದು ದೊಡ್ಡ ಸಂಪತ್ತು, ಆದರೆ ಅದು ಹೊರಗೆ ಕಾಣಿಸದು. ವಿದ್ಯೆಯ ಬಲದಿಂದ ನಾವು ನಾನಾ ಬಗೆಯ ಸುಖ ಅನುಭವಿಸಬಹುದು. ಅದು ಯಶಸ್ವಿಗೆ ಮೂಲ ಕಾರಣವು. ಗುರುಗಳಲ್ಲಿ ಅದು ಶ್ರೇಷ್ಠ ಗುರು ಎನಿಸಿರುವುದು. ಪರ ನಾಡಿನಲ್ಲಿ ವಿದ್ಯೆಯೇ ಶ್ರೇಷ್ಠ ಗೆಳೆಯ. ವಿದ್ಯೆಯು ಶ್ರೇಷ್ಠ ದೇವತೆ. ರಾಜ ಮಹಾರಾಜರ ಸನ್ನಿಧಾನದಲ್ಲಿ ಸಂಪತ್ತಿಗೆ ಬೆಲೆಯಿಲ್ಲ. ಆದರೆ ಅದೇ ವಿದ್ಯೆ ದೊಡ್ಡ ಗುಣವಾಗಿ ಪರಿಣಮಿಸುವುದು.

ಹೀಗೆ ಪರಿಣಾಮಕಾರಿಯಾಗಿ ರೂಪಿಸಿಕೊಳ್ಳಬೇಕು.‌ಅತೀ ಹೆಚ್ಚು ಅಂಕ ಪಡೆಯುವ ದಿಸೆಯಲ್ಲಿ ಪರಿಣಾಮಕಾರಿ ಓದುವುದು ಬಹಳ ಮುಖ್ಯವಾದುದು. ಓದು ಶಿಕ್ಷಣದ ಹಾಗೂ ವ್ಯಕ್ತಿತ್ವ ರೂಪಿಸುವ ಅವಿಭಾಜ್ಯ ಅಂಗ. ವಿದ್ಯಾರ್ಥಿಯಾದವನು/ಆದವಳು ಸದಾ ಪುಸ್ತಕವನ್ನು ಓದುವ ಹವ್ಯಾಸ ಬೆಳೆಸಿಕೊಂಡಿರಬೇಕು. ಬಲವಂತ, ಕಷ್ಟಪಟ್ಟು ಹಾಗೂ ಒತ್ತಾಯಕ್ಕೆ ಓದುವುದು ಸಮಂಜಸವಲ್ಲ. ಇಷ್ಟಪಟ್ಟು ಓದಿದಾಗ ವಿಷಯವನ್ನು ಬೇಗ ಅರ್ಥಮಾಡಿಕೊಳ್ಳಬಹುದು.ಓದಿನಲ್ಲೂ ಸಂಪೂರ್ಣ ಮನಸ್ಸಿಟ್ಟು ಹೆಚ್ಚಿನ ಏಕಾಗ್ರತೆಯಿಂದ ಓದುವ ಅಭ್ಯಾಸವನ್ನು ಚಿಕ್ಕ ವಯೋಮಾನದಿಂದಲೇ ಬೆಳೆಸಿಕೊಳ್ಳಬೇಕು.

ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

  1. ನೀವು ಓದುವ ಕೊಠಡಿ ಸಾಕಷ್ಟು ಗಾಳಿ, ಬೆಳಕಿನಿಂದ ಕೂಡಿರಲಿ. ಬಿಳಿಯ ಬೆಳಕು ಅವಶ್ಯಕ.
  2. ಮನಸ್ಸನ್ನು ಉದ್ರೇಕಿಸುವ ಭಾವಚಿತ್ರಗಳು ಬೇಡ.
  3. ವಿವಿಧ ವಿಷಯಕ್ಕೆ ಸಂಬಂಧಿಸಿದ ಚಾರ್ಟ್‍ಗಳಿರಲಿ. ಮನೆಯಲ್ಲಿ ಹಾಗೂ ಶಾಲೆಯಲ್ಲಿ ಅನುಸರಿಸಬೇಕಾದ ನಿರ್ವಹಣೆ ಪಟ್ಟಿ, ವೇಳಾ ಪಟ್ಟಿ ಇರಲಿ.
  4. ಪುಸ್ತಕಗಳನ್ನು ಕ್ರಮಬದ್ಧವಾಗಿ ಜೋಡಿಸಿಡಬೇಕು. ಎಲ್ಲಾ ಪುಸ್ತಕಗಳನ್ನು ಹರಡಿಕೊಂಡು ಓದುವುದು ಸೂಕ್ತವಲ್ಲ.
  5. ಓದಲು ಕುಳಿತುಕೊಳ್ಳುವ ಜಾಗ ಸ್ಥಿರವಾಗಿರಲಿ, ಪದೇ ಪದೇ ಬದಲಾಯಿಸುವುದು ಬೇಡ.
  6. ಓದುವ ಕೊಠಡಿಯಲ್ಲಿ ಟಿ.ವಿ., ರೇಡಿಯೋ, ಮೊಬೈಲ್, ಟೇಪ್‍ರೆಕಾರ್ಡರ್, ಫೋನ್ ಇವುಗಳಿಂದ ದೂರವಿರಿ.
  7. ನೀವು ಓದುವಾಗ ಬೇರೆ ಕೊಠಡಿಯಲ್ಲಿರುವ ಟಿ.ವಿ. ಅಥವಾ ರೇಡಿಯೋ, ಮೊಬೈಲ್ ಶಬ್ದ ಕೇಳದಂತೆ ಎಚ್ಚರವಹಿಸಿರಿ.
  8. ಕುಳಿತುಕೊಂಡು ಓದುವುದು ಸೂಕ್ತ. ಮಲಗಿ ಓದುವುದರಿಂದ ಬಹುಬೇಗ ನಿದ್ರೆಗೆ ಜಾರುತ್ತೀರಿ.
  9. ಬೆಳಗಿನ ಜಾವದ ಸಮಯದಲ್ಲಿ ಹೆಚ್ಚು ಓದುವುದು ಒಳ್ಳೆಯ ಅಭ್ಯಾಸ ಹಾಗೂ ವಿಷಯವನ್ನು ಬಹುಬೇಗ ಗ್ರಹಿಸಬಹುದು.
  10. ಒಮ್ಮೆ ಓದುವುದಕ್ಕೆ ಕುಳಿತರೆ ಕನಿಷ್ಠ ಅರ್ಧ ಗಂಟೆ/ ಒಂದು ಗಂಟೆ ಏಳದಂತೆ ಓದುವ ಅಭ್ಯಾಸ ಬೆಳೆಸಿಕೊಳ್ಳುವುದು ಸೂಕ್ತ.
  11. ತರಗತಿಯಲ್ಲಿ ಆದ ಪಾಠಗಳನ್ನು ಅಂದಿನ ದಿನದಂದೆ ಓದಿ ಬರೆಯಿರಿ.
  12. ಅರ್ಥವಾಗದೇ ಇರುವ ವಿಷಯಗಳನ್ನು ನಿಮ್ಮ ಗೆಳೆಯರ ಅಥವಾ ಶಿಕ್ಷಕರ ಜೊತೆ ಚರ್ಚಿಸಿ ತಿಳಿದುಕೊಳ್ಳಿ.
  13. ಯಾವ ವಿಷಯವೂ ಕಠಿಣವಲ್ಲ ಎಂಬುದಕ್ಕೆ ಮನವರಿಕೆ ಮಾಡಿಕೊಳ್ಳಿ.
  14. ಕಡಿಮೆ ಅಂಕ ಬಂದಿರುವ ವಿಷಯಗಳ ಮೇಲೆ ಹೆಚ್ಚು ಹೆಚ್ಚು ಏಕಾಗ್ರತೆಯಿಂದ ಓದಿ ಬರೆದು ಅಭ್ಯಾಸ ಮಾಡಿ.
  15. ಓದುವಾಗ ಆ ವಿಷಯಕ್ಕೆ ಸಂಬಂಧಿಸಿದಂತೆ ಸಣ್ಣ ಸಣ್ಣ ಟಿಪ್ಪಣಿ ಮಾಡಿಕೊಳ್ಳಿ.
  16. ಓದಬೇಕಾದ ದಿನಚರಿ, ಕಾಲ ನಿರ್ವಹಣಾ ಪಟ್ಟಿ ಹಬ್ಬ, ರಜಾ ದಿನವೂ ಅನುಸರಿಸಲ್ಪಡುವಂತೆ ಎಚ್ಚರಿಕೆ ವಹಿಸಿ. ಆ ದಿನ ಹಿಂದಿನ ವಾರದಲ್ಲಿ ಕಲಿಯುವಿಕೆಯಲ್ಲಿ ಆಗಿರಬಹುದಾದ ಕೊರತೆಯನ್ನು ಭರಿಸುವ ದಿನ ಎಂಬುದಾಗಿ ಭಾವಿಸುತ್ತ ಓದಿ ಬರೆಯುವ ಪರಿಪಾಠ ಬೆಳೆಸಿಕೊಳ್ಳಿ.
  17. ಕೀಳು ಅಭಿರುಚಿ, ಕಾಡು ಹರಟೆಯಲ್ಲಿ ತೊಡಗಬೇಡಿ
  18. ಪದ್ಯ, ಸೂತ್ರ, ಸಮೀಕರಣ ಇತ್ಯಾದಿಗಳನ್ನು ಬಾಯಿಪಾಠ ಅಥವಾ ಕಂಠಪಾಠ ಮಾಡಿ.

ಪರೀಕ್ಷೆ

ಪರೀಕ್ಷೆಗಳು ವಿದ್ಯಾಭ್ಯಾಸದ ಒಂದು ಭಾಗವೇ ಆಗಿದೆ. ಟೆಸ್ಟುಗಳು, ಚಿಕ್ಕ ಪರೀಕ್ಷೆಗಳು, ಅರ್ಧವಾರ್ಷಿಕ ಪರೀಕ್ಷೆಗಳು ಅಣಕು ಪರೀಕ್ಷೆಗಳು,ಫೈನಲ್ ಪರೀಕ್ಷೆಗಳು ಹೀಗೆ.. ವಿದ್ಯಾರ್ಥಿ ಅನೇಕ ಪರೀಕ್ಷೆಗಳನ್ನು ಎದುರಿಸಬೇಕು.

ಪಬ್ಲಿಕ್ ಪರೀಕ್ಷೆಯಿರುವ 10ನೇ ತರಗತಿ, ಪಿಯುಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಅತೀ ಹೆಚ್ಚು ಕಾಳಜಿ ವಹಿಸುವ ಪ್ರಯತ್ನದಲ್ಲಿರುತ್ತಾರೆ. ಏಕೆಂದರೆ ಇದು ವಿದ್ಯಾರ್ಥಿಯ ದೆಶೆಯಲ್ಲಿ

ನೂರಕ್ಕೊಬ್ಬರು ವಿದ್ಯಾರ್ಥಿಗಳು ಪರೀಕ್ಷೆಗೆ ಒಂದೆರಡು ತಿಂಗಳು ಅಧ್ಯಯನ ಮಾಡಿ ಒಳ್ಳೆಯ ಅಂಕಗಳನ್ನು ಗಳಿಸಬಲ್ಲರು. ಆದರೆ ಉಳಿದ 98 ಸ್ಲೋ ಅಂಡ್ ಸ್ಟಡಿ, ವಿನ್ ದಿ ರೇಸ್ ನಿಧಾನವಾಗಿ ಅವಸರ ಮಾಡಿಕೊಳ್ಳದೆ, ಕ್ರಮಬದ್ಧವಾಗಿ ಅಧ್ಯಯನ ಮಾಡಿ, ಯಶಸ್ಸನ್ನು ಸಾಧಿಸಬಹುದು ಪ್ರಾರಂಭದಿಂದಲೇ ಓದಿದರೆ ಸಿದ್ಧತೆ ಮಾಡಿದರೆ, ಸಾಕಷ್ಟು ಸಮಯ ಸಿಗುತ್ತದೆ. ರಿಕಾಲ್ ಮತ್ತು ರಿಹರ್ಸಲ್ ಮಾಡಲು ಕಾಲಾವಕಾಶವಿರುತ್ತದೆ. ಮಾನಸಿಕ ಒತ್ತಡ ಕಂಡುಬರುವುದಿಲ್ಲ. ಮಧ್ಯೆ ಮಧ್ಯೆ ವಿಶ್ರಾಂತಿ ಮಾಡಲು ಸಮಯ ಸಿಗುತ್ತದೆ. ತಮ್ಮ ನಿರೀಕ್ಷಿತ ಗುರಿ ತಲುಪಲು ಸಹಾಯಕವಾಗುತ್ತದೆ. ಇಂತಹ ವಿಚಾರಗಳನ್ನು ಶಿಕ್ಷಕರು ಪಾಲಕರಿಗೆ ಪೋಷಕರು ವರ್ಗದವರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ತಿಳಿಸಬೇಕು. ಪ್ರತಿ ತಿಂಗಳಿಗೊಮ್ಮೆ ಶಿಕ್ಷಕರು ಪೋಷಕರ ಸಭೆ ಕರೆದು ತಮ್ಮ ಯೋಜನೆ, ಗುರಿ ಉದ್ದೇಶವನ್ನು ತಿಳಿಸುವುದು ಸೂಕ್ತ.

ಆಸಕ್ತಿಯಿಂದ ಪಾಠ ಕೇಳುವುದು

ವಿದ್ಯಾರ್ಥಿಗಳು ಒತ್ತಾಯಕ್ಕೆ ತರಗತಿಗಳಿಗೆ ಹೋಗಬಾರದು. ಶಿಕ್ಷಕರು ಹೇಳುವಂತಹ ಪಾಠವನ್ನು ಶ್ರದ್ಧೆಯಿಂದ ಆಲಿಸಿಕೊಳ್ಳಬೇಕು. ಅಲ್ಲದೆ ಅನುಮಾನದ ಅರ್ಥವಾಗದಂತಹ ವಿಷಯಗಳನ್ನು ಮುಕ್ತವಾಗಿ ಚರ್ಚಿಸಿ ಪರಿಹಾರವನ್ನು ಕಂಡುಕೊಳ್ಳಬೇಕು.ನುರಿತ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಭಿನ್ನ ಆಯಾಮಗಳಿಂದ, ಸರಳವಾಗಿ, ಆಕರ್ಷಕವಾಗಿ ಭೋದನೆ ಮಾಡಿ ಆಸಕ್ತಿಯನ್ನು ಕೆರಳಿಸುವಂತಿದ್ದರೆ. ಆದ್ದರಿಂದ ವಿದ್ಯಾರ್ಥಿಗಳು ಕಡ್ಡಾಯವಾಗಿ ತರಗತಿಗಳಿಗೆ ಹಾಜರಾಗುವುದರಿಂದ ಧನಾತ್ಮಕವಾದ ಅಂಶಗಳು ಹೆಚ್ಚುತ್ತವೆ.

ತರಗತಿಯಲ್ಲಿರುವಾಗ ನಮ್ಮ ಮನಸ್ಸು ಹಿಡಿದು ಏಕಾಗ್ರತೆಯಿಂದ ಪಾಠ, ಪ್ರವಚನದ ಕಡೆ ಸಾಗಬೇಕು. ಹಸಿವಿನಿಂದ ಪಾಠ ಕೇಳುವುದು ಕಲಿಕೆಗೆ ಭಂಗ ತರುತ್ತವೆ. ಅಲ್ಲದೆ ಅತೀ ಹೆಚ್ಚು ಊಟ ಮಾಡಿದರೆ ನಿದ್ರೆಗೆ ಜಾರುತ್ತಾರೆ. ಊಟ, ತಿಂಡಿ ಸಮ ಪ್ರಮಾಣದಲ್ಲಿ ಸೇವಿಸಿದಾಗ ಮನಸ್ಸು ಹತೋಟಿಯಲ್ಲಿದ್ದು ಕಲಿಕೆಗೆ ಪೂರಕವಾದ ಅಂಶಗಳನ್ನು ಒದಗಿಸುತ್ತದೆ. ಶಾಲಾ ಅಥವಾ ಕಾಲೇಜಿನಿಂದ ಮನೆಗೆ ಬಂದ ಮೇಲೆ ಮುಖ ತೊಳಿದು ದೈಹಿಕ ಶ್ರಮವಾಗುವಂತಹ ಆಟಗಳನ್ನು ಆಟವಾಡಿದಾಗ ಮನಸ್ಸು ಹಗುರವಾಗುತ್ತದೆ.

ನಂತರ ದೈನಂದಿನ ಪಾಠ ಪ್ರವಚನಗಳನ್ನು ನೆನಪು ಮಾಡಿಕೊಳ್ಳಿ. ಇಲ್ಲಿ ನೆನಪಾಗುವ ವಿಷಯವನ್ನು ಒಂದು ಕಡೆ ಬರೆಯಿರಿ. ಅಲ್ಲದೆ ನೆನಪಾಗದ ವಿಷಯವನ್ನು ಪಟ್ಟಿ ಮಾಡಿಕೊಂಡು ಅದಕ್ಕೆ ಸಂಬಂಧಿಸಿದ ನೋಟ್ಸ್ ಮತ್ತು ಪುಸ್ತಕಗಳಿಂದ ನೋಡಿ, ಪುನಃ ನೆನಪು ಮಾಡಿಕೊಳ್ಳಿ. ಅರ್ಥವಾಗದ ವಿಷಯವನ್ನು ಗುರುತು ಮಾಡಿಕೊಂಡು ನಿಮ್ಮ ಮಿತ್ರರು ಅಥವಾ ಶಿಕ್ಷಕರಿಂದ ಪರಿಹಾರ ಕಂಡುಕೊಂಡರೆ ಶಾಶ್ವತವಾಗಿ ಸ್ಮೃತಿಪಟಲದಲ್ಲಿ ಉಳಿಯುತ್ತದೆ. ಇದನ್ನು ದಿನನಿತ್ಯವೂ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.

ಮನೆಯ ಅಭ್ಯಾಸ

ಗೇಮ್ಸ್, ರೇಡಿಯೋ, ಟಿ.ವಿ.,ಮೊಬೈಲ್, ವೀಡಿಯೋ ಇವುಗಳಲ್ಲಿ ಹೆಚ್ಚು ಸಮಯವನ್ನು ವ್ಯರ್ಥ ಮಾಡದೆ ಇವುಗಳಿಂದ ದೂರವಿರುವುದು ಸೂಕ್ತ.

ಮನೆಯಲ್ಲಿ ಸೂಕ್ತವಾದ ಸ್ಥಳವನ್ನು ಆಯ್ಕೆ ಮಾಡಿಕೊಂಡು ಓದಿಗೆ ಭಂಗತರದಂತಹ ಸ್ಥಳದಲ್ಲ್ಲಿ ಕುಳಿತುಕೊಳ್ಳುವುದು ಸಹಾಯವಾಗುತ್ತದೆ. ಪದೇ ಪದೇ ಓದುವ ಸ್ಥಳವನ್ನು ಬದಲಾವಣೆ ಮಾಡಬಾರದು. ಆದರೆ ಓದುವ ಸಮಯ ಯಾವುದು ಪರಿಣಾಮಕಾರಿ, ಯಾವುದು ಅತ್ಯುತ್ತಮವೆಂದು ತುಂಬಾ ಪೋಷಕರು ಶಿಕ್ಷಕರನ್ನು ಕೇಳುವ ಪ್ರಶ್ನೆಯಾಗಿದೆ. ಆದರೆ ಯಾವುದು ಪರಿಣಾಮಕಾರಿ ಎಂದು ಯಾವಾಗ ಏಕಾಗ್ರತೆಯಿಂದ ಓದುತ್ತಾರೆಯೋ ಅದೇ ಸೂಕ್ತ ಸಮಯ. ನೀವು ಕುಳಿತುಕೊಳ್ಳುವ ಸಮಯ. ನಿತ್ಯ ಕುಳಿತುಕೊಳ್ಳುವ ಜಾಗ, ಪ್ರಶಾಂತವಾದ ಸ್ಥಳ, ಆಕರ್ಷಣೆಗೊಳ್ಳುವ ಮುಕ್ತವಾದ ಪ್ರದೇಶ, ಸಾಕಷ್ಟು ಗಾಳಿ, ಬೆಳಕು ಇರುವ ಪ್ರದೇಶವನ್ನು ಆಯ್ಕೆ ಮಾಡಿಕೊಂಡು ಅಭ್ಯಾಸ ಮಾಡಿ.

ಓದಿನ ವಿಧಾನ

ಏಕಾಗ್ರತೆಯಿಂದ ಓದಿ ಅರ್ಥವಾಗುವಂತೆ ಓದಿ, ಮನನ ಮಾಡಿಕೊಳ್ಳಿ. ಗಟ್ಟಿಯಾಗಿ ಅಥವಾ ಮನಸ್ಸಿನಲ್ಲಿಯೋ ಓದುತ್ತೀರೋ ಅದು ಓದುಗರಿಗೆ ಬಿಟ್ಟ ವಿಚಾರ. ಆದರೆ ಗಟ್ಟಿಯಾಗಿ ಓದಿದರೆ ಬಹು ಬೇಗ ಆಯಾಸವಾಗುವುದು ಸಹಜ. ಆದರೆ ಬಾಯಿಪಾಠ ಕಲಿಯುವುದರಿಂದ ಅಲ್ಪಾವಧಿ ನೆನಪಿನಲ್ಲಿ ಅದು ಉಳಿದು ಒಂದೆರಡು ದಿನಗಳಲ್ಲಿ ಮರೆಯುವುದು ಸಾಧ್ಯವಾಗುತ್ತದೆ. ಅರ್ಥ ಮಾಡಿಕೊಂಡು ಓದಿದಾಗ ದೀರ್ಘಾವಧಿ ನೆನಪಿನ ಸಂಗ್ರಹಕ್ಕೆ ಸೇರುತ್ತದೆ.

ಗುಂಪು ಅಧ್ಯಯನ

ಕೆಲವು ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಅಧ್ಯಯನ ಮಾಡಲು ಇಷ್ಟಪಡುತ್ತಾರೆ. ಇಬ್ಬರು, ಮೂವರು ಅಥವಾ ನಾಲ್ಕೈದು ಜನ ಸೇರಿ ಶಾಲೆ, ಮನೆ,ಟೆರಸ್‍ನಲ್ಲಿ ಅಧ್ಯಯನ ಮಾಡುತ್ತಾರೆ. ಒಬ್ಬರು ಗಟ್ಟಿಯಾಗಿ ಓದುವುದು, ಉಳಿದವರು ಕೇಳಿಸಿಕೊಳ್ಳುವುದು, ಒಬ್ಬರು ಅಧ್ಯಯನ ಮಾಡಿ ಭೋದಿಸುವುದು, ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳುವುದು, ಅರ್ಥವಾಗದ ವಿಷಯ ಚರ್ಚೆ ಮಾಡುವುದು.

ಅನುಕೂಲಗಳು

  • ಒಬ್ಬರು ಇನ್ನೊಬ್ಬರಿಗೆ ಪ್ರೇರಣೆಯಾಗುತ್ತಾರೆ.
  • ಕ್ರಮಬದ್ಧ ಅಧ್ಯಯನಕ್ಕೆ ಸಹಾಯಕಾರಿ
  • ಏಕಾಗ್ರತೆ ಹೆಚ್ಚಿಸುವುದು.
  • ಉತ್ಸಾಹದ ವಾತಾವರಣ ನಿರ್ಮಿಸುತ್ತದೆ.
  • ಕಲಿಕೆ ಮತ್ತು ನೆನಪು ಉತ್ತಮಗೊಳ್ಳುತ್ತವೆ.
  • ಪರಿಣಾಮಕಾರಿ ಕಲಿಕೆಗೆ ಈ ವಿಧಾನ ಅನುಸರಿಸಿ ಅನುಷ್ಠಾನಗೊಳಿಸಿ.
  • ಓದಲು ಸೂಕ್ತ ಸಮಯ ಮತ್ತು ಸ್ಥಳ ಆಯ್ಕೆ ಮಾಡಿ
  • ಏಕಾಗ್ರತೆಯಿಂದ 30 ನಿಮಿಷ ಓದಿ, ಓದಿದ್ದನ್ನು ಅರ್ಥ ಮಾಡಿಕೊಳ್ಳಿ.
  • ಏನನ್ನು ಓದಿದ್ದೇನೆ ಎಂಬುದರ ಸಾರಾಂಶವನ್ನು ಬರೆದುಕೊಳ್ಳಿ.
  • ಓದಿದ್ದನ್ನು ಮನಸ್ಸಿನಲ್ಲಿ ಮನನ ಮಾಡಿಕೊಳ್ಳಿ. ಓದಿದ ವಿಷಯವನ್ನು ಪ್ರತಿದಿನ, ಒಂದು ವಾರ ನಂತರ ತಿಂಗಳ ನಂತರ ಯಾವುದು ಮನಸ್ಸಿಗೆ ಬರುತ್ತಿದೆ ಹಾಗೂ ಯಾವುದೂ ಮನಸ್ಸಿನಲ್ಲಿ ಬರುವುದಿಲ್ಲವೆಂದು ಪಟ್ಟಿ ಮಾಡಿಕೊಂಡು ಪುನಃ ಅಧ್ಯಯನ ಮಾಡುವುದು.
  • ಪ್ರಶ್ನೆಗೆ ಸಂಬಂಧಿಸಿದಂತೆ ಮನೆಯಲ್ಲಿ ಕಾಲಮಿತಿಯಲ್ಲಿ ಉತ್ತರಿಸುವ ಅಭ್ಯಾಸ ಮಾಡಿ. ಇದರಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸಿಕೊಂಡರೆ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು.
  • ಶ್ರದ್ಧೆ, ಶ್ರಮ, ಕ್ರಮಬದ್ಧ ಅಧ್ಯಯನ ನಿರಂತರವಾಗಿರಲಿ.
  • ಆರೋಗ್ಯದ ಸುಧಾರಣೆ ಸಮಯಕ್ಕೆ ಸರಿಯಾಗಿ ಆಹಾರ, ನಿದ್ರೆ, ಯೋಗ, ಧ್ಯಾನದ ಅಭ್ಯಾಸವಿಟ್ಟುಕೊಳ್ಳುವುದು.

ಪರೀಕ್ಷಾ ಭಯ

  • ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ಅನೇಕ ವಿದ್ಯಾರ್ಥಿಗಳಲ್ಲಿ ಆತಂಕ, ಭಯ ಪ್ರಾರಂಭವಾಗುತ್ತಿದೆ.
  • ನನ್ನ ಪರೀಕ್ಷಾ ಸಿದ್ಧತೆಗಳು ಕಡಿಮೆಯಾದವು ಎಂಬುದರ ಚಿಂತೆ
  • ನನ್ನಿಂದ ಬೇಗ ಕಲಿಯುವುದಕ್ಕೆ ಸಾಧ್ಯವಾಗುತ್ತಿಲ್ಲ. ಪರೀಕ್ಷಾ ಸಂದರ್ಭದಲ್ಲೂ ಎಲ್ಲಾ ವಿಷಯಗಳನ್ನು ಅಥವಾ ಪಾಠಗಳನ್ನು ಮುಗಿಸಲಿಕ್ಕೆ ಆಗುತ್ತೋ ಇಲ್ಲವೋ ಎಂಬುದರ ಭಯ.
  • ನನಗೆ ಪರೀಕ್ಷೆಗೆ ಪ್ರಶ್ನೆಗಳಿಗೆ ಪೂರ್ಣ ಉತ್ತರವನ್ನು ಬರೆಯಲಿಕ್ಕೆ ಆಗುತ್ತೋ ಅಥವಾ ಇಲ್ಲವೋ ಎನ್ನುವ ಆತಂಕ ಅಲ್ಲದೇ ಮೌಲ್ಯಮಾಪಕರು ಪೂರ್ತಿ ಅಂಕ ಕೊಡುತ್ತಾರೋ ಇಲ್ಲವೋ ಎಂಬುದು.
  • ನಾನು ಫೇಲಾದರೆ ಎಷ್ಟು ಅವಮಾನ ಅಲ್ಲದೆ ನನಗೆ ಯಾರೂ ಗೌರವ ಕೊಡುವುದಿಲ್ಲವೆಂಬುದು.
  • ನನ್ನ ಸ್ನೇಹಿತರು ಒಳ್ಳೆಯ ಕೋರ್ಸಿಗೆ ಸೀಟು ಪಡೆಯುತ್ತಾರೆ. ನನ್ನಿಂದ ಇದು ಸಾಧ್ಯನಾ ನಾನು ಹಿಂದೆ ಬೀಳುತ್ತೇನಾ ಎಂಬುದು.
  • ನನಗೆ ಭವಿಷ್ಯವಿಲ್ಲ ನನ್ನ ಪಾಲಕರಿಗೆ ನೋವು- ನಿರಾಶೆ ಇಂತಹ ನಕಾರಾತ್ಮಕ ಚಿಂತನೆಗಳು ಸದಾ ಕಿವಿಯಲ್ಲಿ ಗುನುಗುಡುತ್ತಿರುತ್ತವೆ. ಆಗ ಭಯ ಶುರುವಾಗುತ್ತವೆ.
  • ಮನಸ್ಸು ಸ್ಥಿರವಾಗಿರುವುದಿಲ್ಲ. ಹೃದಯದ ಬಡಿತ ಶುರುವಾಗುತ್ತದೆ.
  • ಹಸಿವು ಹೆಚ್ಚಾಗುವುದಿಲ್ಲ. ಆಹಾರವು ರುಚಿಕರ ಅನ್ನಿಸುವುದಿಲ್ಲ.
  • ನಿದ್ರೆಯಲ್ಲೂ ವ್ಯತ್ಯಾಸ ಕಂಡು ಬರುವುದು ಅಲ್ಲದೇ ಮಂಕು ಆವರಿಸುವುದು.
  • ಆತ್ಮವಿಶ್ವಾಸ ಕಡಿಮೆಯಾಗುತ್ತದೆ.
  • ಪದೇ ಪದೇ ಬಾತ್‍ರೂಂಗೆ ಹೋಗುವ ಮನಸ್ಸು.
  • ಜ್ವರ ಆವರಿಸಬಹುದು.
  • ಕೋಪ, ಸಿಟ್ಟು, ಜಗಳ ಪ್ರಾರಂಭವಾಗಬಹುದು.
  • ಹತಾಶ ಮನಸ್ಥಿತಿ ತಲುಪಬಹುದು.
  • ಒಂಟಿತನ ಇರಲು ಇಷ್ಟಪಡುವುದು.

ಇಂತಹ ಸಂಗತಿಗಳನ್ನು ಪರೀಕ್ಷೆಯ ಹಿಂದಿನ ದಿನದಲ್ಲೂ ಅತಿ ಹೆಚ್ಚು ಕಾಣಬಹುದು.ಆದ್ದರಿಂದ ಪೋಷಕರು, ಶಿಕ್ಷಕರು ಮಾರ್ಗದರ್ಶನ ಹಾಗೂ ಧೈರ್ಯ ತುಂಬಬೇಕಾಗುತ್ತದೆ.

  • ಪ್ರೇರೇಪಣೆ ನೀಡುವುದು

    ನೀನೊಬ್ಬ ಉತ್ತಮ ವಿದ್ಯಾರ್ಥಿ ಹಾಗೂ ನಿರಂತರ ಓದಿ ಅಭ್ಯಾಸ ಮಾಡಿದ್ದೀಯಾ ವರ್ಷಪೂರ್ತಿ ಓದಿದ್ದೀಯಾ ಅದ್ದರಿಂದ ಓದಿದಂತಹ ಪ್ರಶ್ನೆಗಳೇ ಪರೀಕ್ಷೆಯಲ್ಲಿ ಬರುತ್ತವೆಂಬುದನ್ನು ತಿಳಿಸುವುದು.

  • ಪರೀಕ್ಷೆ ಬರೆಯುವ ಮುನ್ನ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಸಮಾಧಾನ ಚಿತ್ತದಿಂದ ಪರೀಕ್ಷೆ ಎದುರಿಸು. ನಿನಗೆ ಯಶಸ್ಸು ಸಿಗುತ್ತದೆ.
  • ಕನಿಷ್ಠ ಆರು ತಾಸು ನಿದ್ರೆ
  • ಕರಿದ ಪದಾರ್ಥಗಳಿಂದ ದೂರವಿರುವುದು, ಮಾಂಸಹಾರ ಬೇಡ.
  • ಹಸಿ ತರಕಾರಿಗಳನ್ನು ಸೇವಿಸುವುದು.
  • ಪಾಯಸ, ಗಂಜಿ,ಖೀರು ಉತ್ತಮ
  • ಓದುವಾಗ ಆಗಾಗ್ಗೆ ತಣ್ಣೀರು / ಬಿಸಿನೀರು ಮುಖ ತೊಳೆದುಕೊಳ್ಳಿ.

ಪರೀಕ್ಷಾ ದಿನ

  • ಕನಿಷ್ಠ ಆರು ಗಂಟೆ ನಿದ್ರೆಯ ನಂತರ ಎದ್ದುಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸುವುದು. ತಂದೆ-ತಾಯಿಗಳ ಆಶೀರ್ವಾದ ಪಡೆದುಕೊಳ್ಳಿ.

    ಪರೀಕ್ಷೆ ಸಲಕರಣೆಗಳನ್ನು ಜೋಡಿಸಿಕೊಳ್ಳಿ.

  • ಹಾಲ್‍ಟಿಕೆಟ್, ಒಳ್ಳೆಯ ಗುಣಮಟ್ಟದ ಎರಡು ಹಗುರವಾದ ಉಪಹಾರ ಇತ್ಯಾದಿ ಮಾಡುವುದು
  • ಪರೀಕ್ಷಾ ಹಾಲ್‍ನಲ್ಲಿ ಅರ್ಧಗಂಟೆ ಮುಂಚಿತವಾಗಿ ಕುಳಿತುಕೊಳ್ಳುವುದು.
  • ಪರೀಕ್ಷಾ ಕೇಂದ್ರಕ್ಕೆ ಹೋಗಿ ಸ್ಥಳವನ್ನು ಗುರುತು ಮಾಡಿಕೊಳ್ಳುವುದು.
  • ವಿಷಯದ ಬಗ್ಗೆ ಚರ್ಚೆ ಬೇಡ ಮನಸ್ಸು ಪ್ರಶಾಂತವಾಗಿರಲಿ.
  • ಪರೀಕ್ಷಾ ಕೇಂದ್ರದಲ್ಲಿ ಅಭ್ಯಾಸ ಬೇಡ
  • ತಮ್ಮ ಜೇಬುಗಳಲ್ಲಿ ಯಾವುದೇ ಚೀಟಿ, ಮೊಬೈಲ್ ಇರಬಾರದು.
  • ಪರೀಕ್ಷೆಗೆ ಹೋಗುವ ಮುನ್ನ ಮೂತ್ರ ವಿಸರ್ಜನೆ ಮಾಡುವುದು.
  • ನಿಮ್ಮ ಸೀಟಿನಲ್ಲಿ ಕುಳಿತುಕೊಳ್ಳಿ. ಉಸಿರಾಟ ನಿಧಾನಗತಿಯಿರಲಿ.
  • ಪ್ರಶ್ನೆ ಪತ್ರಿಕೆ ಬಂದಾಗ ನಿಧಾನವಾಗಿ ಎಲ್ಲಾ ಪ್ರಶ್ನೆಗಳನ್ನು ನಿಧಾನವಾಗಿ ಒಂದೊಂದೇ ಅರ್ಥ ಮಾಡಿಕೊಳ್ಳುತ್ತಾ ಹೋಗಿ.
  • ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಪ್ರಯತ್ನಿಸಿ.
  • ಪ್ರಶ್ನೆ ಪತ್ರಿಕೆ ಕೊಟ್ಟಾಗ ಕೆಲವು ಪ್ರಶ್ನೆಗಳನ್ನು ನಿರೀಕ್ಷೆಯಿರುವುದಿಲ್ಲ ಅಂತಹ ಸಂದರ್ಭದಲ್ಲಿ ಗಾಬರಿ ಪಡಬೇಡಿ.
  • ಮೊದಲು ಸಂಪೂರ್ಣವಾಗಿ ಉತ್ತರ ಗೊತ್ತಿರುವ ಪ್ರಶ್ನೆಗಳಿಗೆ ಉತ್ತರ ಬರೆಯಿರಿ.
  • ಒಂದು ಪ್ರಶ್ನೆಗೆ ಉತ್ತರ ಬರೆದ ನಂತರ ಪೆನ್ಸಿಲ್‍ನಲ್ಲಿ ಒಂದು ಅಡ್ಡಲಾಗಿ ಗೆರೆ ಹಾಕುವುದು.
  • ಅಕ್ಷರ ಸ್ಫುಟವಾಗಿರಲಿ, ಯೋಚಿಸಿ ಬರೆಯಿರಿ.
  • ಒಂದು ಸಾಲಿಗೂ ಇನ್ನೊಂದು ಸಾಲಿಗೂ ಅಂತರವಿರಲಿ.
  • ಅಲ್ಪ ಸ್ವಲ್ಪ ಉತ್ತರ ಗೊತ್ತಿರುವ ಪ್ರಶ್ನೆಗಳನ್ನು ಕೊನೆಗೆ ಪ್ರಯತ್ನಿಸಿ, ಗೊತ್ತಿರುವ ಅಲ್ಪಸ್ವಲ್ಪ ಉತ್ತರ ಬರೆಯಿರಿ.

ಸಮಯ ಪಾಲನೆ ಮಾಡುವುದು

  • ಯಾವುದೇ ಪ್ರಶ್ನೆಗೆ ಉತ್ತರ ಬರೆಯಲು ಅವಶ್ಯಕತೆಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳಬಾರದು.
  • ಕಡೆಯ ಹತ್ತು ನಿಮಿಷಯದಲ್ಲಿ ಪುನರಾವಲೋಕನ ಮಾಡುವುದು.
  • ಪ್ರಶ್ನೆಗಳ ಸಂಖ್ಯೆಯನ್ನು ಸರಿಯಾಗಿ ನಮೂದಿಸುವುದು.
  • ರಿಜಿಸ್ಟರ್ ನಂಬರ್ ಉತ್ತರ ಪತ್ರಿಕೆಗಳ ಕ್ರಮ ಸಂಖ್ಯೆಯನ್ನು ಹಾಕುವುದು.
  • ಇತರರು ಏನು ಮಾಡುತ್ತಿದ್ದಾರೆಂಬುದನ್ನು ಗಮನವಿರಬಾರದು.
  • ಪೂರ್ಣ ಬರೆಯುವವರಿಗೂ ಮುಗಿಯುವವರೆಗೂ ಏಕಾಗ್ರತೆಯಿಂದ ಉತ್ತರಿಸಬೇಕು.
  • ಹೊರ ಬಂದ ನಂತರ ಚರ್ಚೆ ಬೇಡ
  • ಮನೆಗೆ ಹೋಗಿ ವಿರಾಮವನ್ನು ತೆಗೆದುಕೊಳ್ಳುವುದು.

ಲೇಖಕರು : ಹಾಲೇಶ್ ಹೆಚ್.ಎಸ್., ಎಂ.ಎ., ಎಂ.ಇಡಿ, ಎಂ.ಸಿ.ಜೆ. ಡಿ.ಆರ್.ಆರ್. ಹೆಚ್.ಎಸ್., ಪಿ.ಬಿ. ರಸ್ತೆ, ದಾವಣಗೆರೆ 

 

 

 

 

 

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading
Advertisement

Title

ದಿನದ ಸುದ್ದಿ8 hours ago

ದಾವಣಗೆರೆ | ಇಂದು ಕರೆಂಟ್ ಇರಲ್ಲ

ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00...

ದಿನದ ಸುದ್ದಿ3 days ago

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ...

ದಿನದ ಸುದ್ದಿ4 days ago

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

ಗಿರೀಶ್ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ...

ದಿನದ ಸುದ್ದಿ4 days ago

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

~ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ...

ಅಂಕಣ4 days ago

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ....

ದಿನದ ಸುದ್ದಿ5 days ago

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ...

ದಿನದ ಸುದ್ದಿ5 days ago

ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು...

ದಿನದ ಸುದ್ದಿ7 days ago

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ...

ದಿನದ ಸುದ್ದಿ1 week ago

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ....

ದಿನದ ಸುದ್ದಿ1 week ago

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ...

Trending