ರಾಜಕೀಯ
ಬಿಜೆಪಿ ಅಭ್ಯರ್ಥಿಯಾಗಿ ಭಯೋತ್ಪಾದನಾ ಆರೋಪಿ-ಒಂದು ಕೇಡಿನ ಪ್ರತೀಕ
- ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತು ಹಾಕಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?
ಭೋಪಾಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಜ್ಞಾ ಸಿಂಗ್ ಠಾಕುರ್ ನಾಮಕರಣ 17ನೇ ಲೋಕಸಭಾ ಚುನಾವಣೆಗಳಲ್ಲಿ ಒಂದು ಮಹತ್ವದ, ಅಶುಭಕಾರೀ ಕ್ಷಣ. ಬಿಜೆಪಿಯ ಈ ನಿರ್ಧಾರ ಈ ಚುನಾವಣೆಯಲ್ಲಿ ಅದರ ನಿಜವಾದ ವೇದಿಕೆ ಏನೆಂಬುದರ ಒಂದು ಘೋಷಣೆಯಾಗಿದೆ. ಯಾವುದೇ ಮುಲಾಜಿಲ್ಲದ ಉಗ್ರ ಹಿಂದುತ್ವ, ಮತ್ತು ಅದರೊಂದಿಗೆ ಅದರ ಎಲ್ಲ ನಕಾರಾತ್ಮಕ ತೊಡಕುಗಳು-ಇದೇ ಆ ವೇದಿಕೆ.
ಪ್ರಜ್ಞಾ ಠಾಕುರ್ 2008ರ ಮಾಲೆಗಾಂವ್ ಸ್ಫೋಟದ ಒಬ್ಬ ಆರೋಪಿ. ಈ ಸ್ಫೊಟವನ್ನು ಸಂಘಟಿಸಿದ ಗುಂಪಿನ ಸೂತ್ರಧಾರಳು ಎಂಬ ಆಪಾದನೆ ಆಕೆಯ ಮೇಲಿದೆ. ಈ ಮೊಕದ್ದಮೆಯ ಆರೋಪ ಪತ್ರ ಆರು ಜನಗಳನ್ನು ಸಾಯಿಸಿದ ಈ ಸ್ಫೋಟವನ್ನು ಉಂಟು ಮಾಡುವಲ್ಲಿ ಬಳಸಿದ ಸ್ಫೋಟಕಗಳಿಂದ ತುಂಬಿದ್ದ ಮೋಟಾರ್ ಸೈಕಲ್ ಆಕೆಯದ್ದು ಎಂದು ಹೊರಗೆಡಹಿದೆ.
ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ, ಆಕೆಯ ವಿರುದ್ಧ ಇದ್ದ ಮೊಕದ್ದಮೆಯನ್ನು ವಿಫಲಗೊಳಿಸಲು ಸಕಲ ಪ್ರಯತ್ನಗಳೂ ನಡೆದವು. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಆಕೆಯ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿತು. ಆದರೆ ನ್ಯಾಯಾಲಯ ಅದನ್ನು ಒಪ್ಪದೆ ಆಕೆಯನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಆರೋಪಿಯಾಗಿಸಿದೆ. ಈಗ ಆಕೆ ವಿಚಾರಣೆಯ ನಡುವೆ ಜಾಮೀನಿನಲ್ಲಿ ಹೊರಗಿದ್ದಾರೆ.
ಇಂತಹ ಒಬ್ಬ ಭಯೋತ್ಪಾದನಾ ಆರೋಪಿಯನ್ನು ಭೋಪಾಲದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಮಾಡಿದೆ. ಈ ಎಲ್ಲ ವರ್ಷಗಳಲ್ಲಿ ಆಕೆ ತನ್ನ ಉನ್ಮತ್ತ ಹಿಂದುತ್ವ ಮತ್ತು ಮುಸ್ಲಿಂ-ದ್ವೇಷಿ ಅಭಿಪ್ರಾಯಗಳನ್ನು ಎಂದೂ ಗುಟ್ಟಾಗಿ ಇಟ್ಟಿಲ್ಲ.
ನಾಮಪತ್ರ ಸಲ್ಲಿಸಿದ ಕೂಡಲೇ ಆಕೆ ಮಹಾರಾಷ್ಟ್ರ ಪೋಲೀಸ್ ಪಡೆಯ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ದ ಮುಖ್ಯಸ್ಥರಾಗಿದ್ದ ದಿವಂಗತ ಹೇಮಂತ ಕರ್ಕರೆ ಮೇಲೆ ಎರಗಿದರು. ಕರ್ಕರೆ ಮಾಲೆಗಾಂವ್ ಸ್ಫೋಟದ ತನಿಖೆ ಮಾಡಿದ್ದ, ಮತ್ತು ಪ್ರಜ್ಞಾ ಠಾಕುರ್ ಮತ್ತು ಆಕೆಯ ಸಹಯೋಗಿಗಳನ್ನು ಬಂಧಿಸಿದ್ದ ಪೋಲೀಸ್ ಅಧಿಕಾರಿ. ತಾನು ಕರ್ಕರೆಗೆ ಶಾಪ ಹಾಕಿದ್ದೆ, ಅದರಿಂದಾಗಿ ೪೫ ದಿನಗಳೊಳಗೆ ಆತ ಭಯೋತ್ಪಾದಕ ಗುಂಡಿಗೆ ಬಲಿಯಾಗಿ ಸತ್ತರು ಎಂದು ಆಕೆ ಹೇಳಿದಳು. ಹೇಮಂತ ಕರ್ಕರೆ ಒಬ್ಬ ಧೀರ ಪೋಲೀಸ್ ಅಧಿಕಾರಿಯಾಗಿದ್ದು, ನವಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರು. ಇಂತಹ ಒಂದು ಆಘಾತಕಾರಿ ಹೇಳಿಕೆಯ ನಂತರವೂ, ಬಿಜೆಪಿ ಅದನ್ನು ಖಂಡಿಸುವ ಆಶಯವನ್ನು ತೋರಲಿಲ್ಲ, ಅದು ಆಕೆಯ ವೈಯಕ್ತಿಕ ಅಭಿಪ್ರಾಯವಷ್ಟೇ, ಬಹುಶಃ ಪೋಲೀಸರಿಂದ ಆಕೆ ಅನುಭವಿಸಿದ ಚಿತ್ರಹಿಂಸೆಯಿಂದಾಗಿ ಇರಬಹುದು ಎಂದಷ್ಟೇ ಹೇಳಿತು.
ಈ ಬಗ್ಗೆ ಬಂದ ಟೀಕೆಯಿಂದ ವಿಚಲಿತಳಾಗದ ಪ್ರಜ್ಞಾ ಠಾಕುರ್ ಇನ್ನೂ ಮುಂದೆ ಹೋಗಿ ಬಾಬ್ರಿ ಮಸೀದಿಯ ಧ್ವಂಸ ನಡೆಯುತ್ತಿದ್ದಾಗ ತಾನು ಗುಮ್ಮಟದ ತುದಿಯಲ್ಲಿದ್ದೆ, ಆ ಸ್ಥಳದಲ್ಲಿ ರಾಮ ದೇವಸ್ಥಾನ ಕಟ್ಟುವಾಗಲೂ ಆ ಸ್ಥಳದಲ್ಲಿ ಇರುತ್ತೇನೆ ಎಂದರು.
ಪ್ರಜ್ಞಾ ಠಾಕುರ್ನ್ನು ಅಭ್ಯರ್ಥಿಯಾಗಿ ನಿಲ್ಲಿಸಿದ್ದು ಒಂದು ಬಹಳ ಯೋಚನೆ ಮಾಡಿ ನಿರ್ಧರಿಸಿದ್ದ ನಡೆ ಎಂಬುದು ನರೇಂದ್ರ ಮೋದಿ ಅದನ್ನು ಸಮರ್ಥಿಸಿಕೊಂಡ ರೀತಿಯಲ್ಲೇ ಕಾಣುತ್ತದೆ. ಆಕೆ ಅಭ್ಯರ್ಥಿಯಾಗಿರುವುದು ವಸುಧೈವ ಕುಟುಂಬಕಮ್ ನಲ್ಲಿ ನಂಬಿಕೆಯಿರುವ 5000 ವರ್ಷಗಳಷ್ಟು ಹಳೆಯ ನಾಗರಿಕತೆಯ ಹೆಸರುಗೆಡಿಸುವವರಿಗೆ, ಭಯೋತ್ಪಾದಕರು ಎಂದು ಕರೆದವರಿಗೆ ನೀಡಿರುವ ಒಂದು ಉತ್ತರ ಎಂದು ಅವರು ಹೇಳಿದ್ದಾರೆ. ಇದಕ್ಕೆ ಮೊದಲು ಎಪ್ರಿಲ್ 1 ರಂದು ವರ್ಧಾದಲ್ಲಿ ಮಾತಾಡುತ್ತ ಮೋದಿ, ಹಿಂದು ಭಯೋತ್ಪಾದನೆಯ ಮಾತಾಡುವವರು ಇಡೀ ಹಿಂದೂ ಸಮುದಾಯವನ್ನು ಅವಮಾನ ಮಾಡುತ್ತಾರೆ ಎಂದು ಹೇಳಿದ್ದರು.
ಸಾವಿರ ವರ್ಷಗಳ ಇತಿಹಾಸದಲ್ಲಿ ಹಿಂದೂ ಭಯೋತ್ಪಾದನೆಯ ಕೃತ್ಯವನ್ನು ತೋರಿಸುವ ಒಂದೇ ಒಂದು ಘಟನೆ ನಡೆದಿಲ್ಲ ಎಂದು ಅವರು ಸಾರಿದರು. ಇದು ಎಲ್ಲ ತರ್ಕಗಳನ್ನೂ ಹುಸಿಯಾಗಿಸಿರುವ ಅಸಂಬದ್ಧ ಹೇಳಿಕೆ. ನಾಥುರಾಂ ಗೋಡ್ಸೆಯಿಂದ ಹಿಡಿದು 2002ರ ಗುಜರಾತ್ ಹತ್ಯಾಕಾಂಡದ ವರೆಗೆ, ನಂತರ ದಭೋಲ್ಕರ್, ಪನ್ಸರೆ, ಕಲ್ಬುರ್ಗಿ, ಗೌರಿ ಹತ್ಯೆಗಳ ವರೆಗೆ ಹಿಂದುತ್ವ ಭಯೋತ್ಪಾದನೆಯ ಒಂದು ದೊಡ್ಡ ಸಾಲೇ ಇದೆ. ಈ ಎಲ್ಲ ಹೇಳಿಕೆಗಳ ಹಿಂದೆ ಇರುವ ತಿಳುವಳಿಕೆಯೆಂದರೆ, ಹಿಂದೂಗಳು ಭಯೋತ್ಪಾದಕರಾಗಲು ಸಾಧ್ಯವಿಲ್ಲ, ಕೇವಲ ಮುಸ್ಲಿಮರು ಮಾತ್ರವೇ ಹಾಗಾಗಲು ಸಾಧ್ಯ.
ಪ್ರಜ್ಞಾ ಠಾಕುರ್ ಒಬ್ಬ ಅಮಾಯಕ ಸಾಧ್ವಿ, ಆಕೆಯನ್ನು ಒಂದು ಸುಳ್ಳು ಕೇಸಿನಲ್ಲಿ ಸಿಗಿಸಲಾಗಿದೆ ಎಂಬುದು ಅಮಿತ್ ಷಾ ಮತ್ತು ಬಿಜೆಪಿಯ ನಿಲುವು. ಆದರೆ, ಅದೇ ವೇಳೆಗೆ, ಸಂಘ ಪಡೆಗಳು ಆಕೆ ಹಿಂದೂಗಳನ್ನು ಸಾಯಿಸಿದ್ದಕ್ಕೆ ಪ್ರತೀಕಾರ ತೀರಿಸಿರುವ ಧೀರೆ ಎಂದು ವೈಭವೀಕರಿಸುತ್ತಿವೆ.
ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತಾಗಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ರಿಂದ ಹಿಡಿದು ಎಲ್ಲ ಬಿಜೆಪಿ ಮುಖಂಡರುಗಳ ಭಾಷಣಗಳು ದಿನಗಳೆದಂತೆ ಹೆಚ್ಚೆಚ್ಚು ಕರ್ಕಶಗೊಳ್ಳುತ್ತಿವೆ. ಹಿಂದೂಗಳಿಗೆ ಹೊರಗಿನ ಮತ್ತು ಒಳಗಿನ ಶತ್ರುಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕೆಂಬ ಕರೆ ನೀಡಲಾಗುತ್ತಿದೆ; ಅಲ್ಪಸಂಖ್ಯಾತರು ಬುಡಮೇಲು ಪಾತ್ರ ವಹಿಸುತ್ತಿದ್ದಾರೆ ಎಂದು ಸಾಕಷ್ಟು ಬಹಿರಂಗವಾಗಿಯೇ ಬೆದರಿಕೆ ಹಾಕಲಾಗುತ್ತಿದೆ; ತಮ್ಮ ರಾಷ್ಟ್ರೋನ್ಮಾದದ ಅಪಪ್ರಚಾರಕ್ಕೆ ಸಶಸ್ತ್ರ ಪಡೆಗಳ ಹೆಸರನ್ನು ಬಳಸಲಾಗುತ್ತಿದೆ; ಮತ್ತು ನಾಗರಿಕತ್ವ(ತಿದ್ದುಪಡಿ) ಮಸೂದೆ ಹಾಗೂ ರಾಷ್ಟ್ರೀಯ ನಾಗರಿಕರ ದಾಖಲೆ(ಎನ್ಆರ್ಸಿ) ಹೊರಗಿನವರನ್ನು ಹೊರಹಾಕುವ ಸಾಧನಗಳು ಎಂದು ಬಿಂಬಿಸಲಾಗುತ್ತಿದೆ.
ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯನ್ನು ನಿಜವಾಗಿಯೂ ಬಿಟ್ಟೇ ಬಿಡಲಾಗಿದೆ. ಅದರ ಜಾಗದಲ್ಲಿ ಒಂದು ಬಹಿರಂಗ ಹಿಂದುತ್ವ ಕೋಮುವಾದಿ-ಮಿಲಿಟರಿಶಾಹಿಮಾದರಿ-ಸಂಕುಚಿತವಾದೀ ಮನವಿ ಬಂದಿದೆ. ಇದು, ಮೋದಿ ವಿಕಾಸದ ಮಾತಾಡುವವರು ಎಂಬ ನಂಬಿಕೆಗೆ ಜೋತು ಬಿದ್ದಿರುವವರನ್ನೂ ಬೆಚ್ಚಿ ಬೀಳಿಸುವಂತದ್ದು. ಇಂತಹ ಭ್ರಮೆಗಳಿಗೆ ಈಗ ಯಾವ ಅವಕಾಶವೂ ಉಳಿದಿಲ್ಲ. ದೇಶವನ್ನು ಉಳಿಸುವ ಏಕೈಕ ದಾರಿಯೆಂದರೆ, ಬಿಜೆಪಿ ಮತ್ತು ಮೋದಿ ಸೋಲುವಂತೆ ಮಾಡುವುದು.
( ಈ ವಾರದ ಜನಶಕ್ತಿವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
–ಪ್ರಕಾಶ ಕಾರಟ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಶುಕ್ರವಾರದಂದು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛ ಸಂಕೀರ್ಣ ಘಟಕ, ಕೂಸಿನ ಮನೆ ಹಾಗೂ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ 39 ಕಸ ವಿಲೇವಾರಿ ಘಟಕಗಳ ಪೈಕಿ, ಕನಗೊಂಡನಹಳ್ಳಿಯಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ನೂತನ ಘಟಕ ನಿರ್ಮಿಸಲಾಗಿದೆ. ಇದರ ನಿರ್ವಹಣೆಗಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಸಾರ್ವಜನಿಕರು ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಗ್ರಾಮಸ್ಥರೇ ಘಟಕಗಳನ್ನು ನಿರ್ವಹಿಸಿದರೆ ಗ್ರಾಮದ ಆರ್ಥಿಕತೆಗೆ ಬಲ ಬರುತ್ತದೆ. ಇದರ ಜೊತೆಗೆ ಚರಂಡಿ ಸ್ವಚ್ಛತೆಯಲ್ಲೂ ಗ್ರಾಮಸ್ಥರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ತಕ್ಷಣವೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತರ ಉದ್ಘಾಟನೆಗಳು
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂಸದರು ಹೊಸಕೊಳೇನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ‘ಕೂಸಿನ ಮನೆ’ ಮತ್ತು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ತದನಂತರ ಹಳೆಕೊಳೇನಹಳ್ಳಿಯಲ್ಲಿ ಮೂರು ಹೊಸ ಶಾಲಾ ಕೊಠಡಿಗಳು ಹಾಗೂ ಅಡುಗೆ ಕೊಠಡಿಯನ್ನು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿತ್ತೆ ಮಾಧವ ವಿಠಲರಾವ್, ತಾಲ್ಲೂಕು ಪಂಚಾಯಿತಿ ಇಓ ರಾಮ್ ಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ
ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪ್ರಾಂಶುಪಾಲರು, ಮೇಲ್ವಿಚಾರಕರು, ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು .ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯಲ್ಲಿ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್ಲೈನ್ನಲ್ಲಿ ಅಪ್ಡೇಟ್ ಮಾಡಿಸಬೇಕು. ಕೊಠಡಿಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಬೇಕು ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿವಿಲೋ ದೊರೆಸ್ವಾಮಿ ಮಾತನಾಡಿ, ಜ.25 ರಂದು ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರದ 18 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.
ಬೆಳಿಗ್ಗೆ 10.30 ರಿಂದ 12.30 ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಪತ್ರಿಕೆ-2 ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಎಲ್ಲ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರನ್ನೆ ಸಂಪರ್ಕಿಸಿ, ಪ್ರತಿ 24 ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಜಾಮರ್ (Jamar) ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ನೀಡಲಾಗಿದ್ದು, ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಪ್ರತಿ ಕೇಂದ್ರಕ್ಕೆ ಅಗತ್ಯವಿರುವಷ್ಟು ಹೋಮ್ಗಾರ್ಡ್ಗಳನ್ನು ನಿಯೋಜಿಸಬೇಕು. ತಪಾಸಣೆ ಮಾಡುವ ಸಿಬ್ಬಂದಿಗಳಿಗೆ ಸಹಾಯವಾಗುವಂತೆ ಪ್ರತಿ ಕೇಂದ್ರಕ್ಕೆ ಎರಡು ಹ್ಯಾಂಡ್ ಮೆಟಲ್ ಡಿಟೆಕ್ಟರ್ಗಳನ್ನು ಒದಗಿಸಲಾಗುವುದು.
ಕಾಲೇಜಿನ ಪ್ರಾಂಶುಪಾಲರನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ 18 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ20 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ20 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

