ದಿನದ ಸುದ್ದಿ
‘ಎತ್ತಿನಹೊಳೆ ಯೋಜನೆ ಕೈಬಿಡಿ’ ಎಂದು ಬರಪೀಡಿತ ಜಿಲ್ಲೆಗಳವರು ಆಗ್ರಹಿಸಲಿ
ನಿನ್ನೆ ಎತ್ತಿನಹೊಳೆ ಯೋಜನೆಯ ಬಗ್ಗೆ ನಾನೊಂದು ಪೋಸ್ಟ್ ಹಾಕಿದ್ದೇ. ನನ್ನ ಗೆಳೆಯರೊಬ್ಬರಿಂದ ಈ ರೀತಿಯ ಪ್ರಕ್ರಿಯೆ ಬಂದಿದೆ. “ಬರಪೀಡಿತ ಜಿಲ್ಲೆಯ ಜನರನ್ನು ವ್ಯಂಗ್ಯ ಮಾಡುವ ಅವಶ್ಯಕತೆ ಇರಲಿಲ್ಲವೇನೋ. ಅಲ್ಲಿನ ನೀರಿನ ಸಮಸ್ಯೆ ಅಪಾಯಮಟ್ಟದಲ್ಲಿದೆ.
ಹಾಗಾಗಿ ಈ ಯೋಜನೆಯ ಬಗ್ಗೆ ಅವರು ಆಸೆ ಪಡುವುದರಲ್ಲಿ ಯಾವ ತಪ್ಪೂ ಇಲ್ಲಾ. ಅವರಲ್ಲಿ ಈ ಯೋಜನೆಯ ಹೆಸರಲ್ಲಿ ಕನಸು ಬಿತ್ತಿದ ರಾಜಕಾರಣಿಗಳನ್ನು ಗುರಿಯಾಗಿಸಬೇಕೆ ಹೊರತು ಈಗಾಗಲೇ ನೊಂದು ಬೇಯುತ್ತಿರುವ ಜನರನ್ನಲ್ಲಾ.”ಈ ಪ್ರತಿಕ್ರಿಯೆಯನ್ನು ನಾನು ಸಂಪೂರ್ಣ ಇತ್ಯಾತ್ಮಕವಾಗಿ ತೆಗೆದುಕೊಂಡು ಮುಂದುವರೆಸುತ್ತೇನೆ.
ಬರಪೀಡಿತ ಜಿಲ್ಲೆಗಳೂ ಸೇರಿದಂತೆ ಕರ್ನಾಟಕದ ಜಲಮೂಲಗಳು ಮತ್ತು ಜಲಸೌಲಭ್ಯಗಳ ಬಗ್ಗೆ ನನಗೆ ಸ್ವಲ್ಪ ಅರಿವಿದೆ. ಆದರೆ ನಾನು ತಜ್ಞನಂತೂ ಅಲ್ಲ. ಬರಪೀಡಿತ ಜಿಲ್ಲೆಗಳಲ್ಲಿ ಈ ಪರಿಸ್ಥಿತಿ ಉಂಟಾಗುವುದಕ್ಕೆ ಅಲ್ಲಿ ಎರಡು ಮೂರು ದಶಕಗಳಿಂದ ಭೂಮಿಯ ಮೇಲೆ, ಜಲಮೂಲಗಳ ಮೇಲೆ ನಡೆದ ತಪ್ಪುನಡೆಗಳ ಬಗ್ಗೆಯೂ ತುಸು ಅರಿವಿದೆ. ಇಲ್ಲಿ ಆ ಜಿಲ್ಲೆಗಳ ಜನರನ್ನು, ರೈತರನ್ನು ವ್ಯಂಗ್ಯದಿಂದ ಕಾಣುವ ಪ್ರಶ್ನೆಯೇ ಇಲ್ಲ. ಹಾಗೆ ಭಾವಿಸಿದ್ದರೆ ಅದು ಸಂಪೂರ್ಣ ತಪ್ಪು ಗ್ರಹಿಕೆ.
ನೀರು ಸಿಕ್ಕರೆ ಯಾವುದೇ ರೈತನ ಮನೋಭಾವ ಹೇಗೆ ಬದಲಾಗುತ್ತದೆ ಎನ್ನುವುದನ್ನೂ ನೋಡುತ್ತಲೇ ಬಂದವನಾಗಿ ನಾನು ಹಾಗೆ ಹೇಳಿದ್ದೇನೆ ಅಷ್ಟೇ. ಅಲ್ಲದೇ ನಮ್ಮ ಜಾಗತೀಕೃತ ಬಂಡವಾಳಶಾಹೀ ಲೋಕ ರೈತನಿಗೆ ಎಂಥಾ ಅಮಿಷಗಳನ್ನು ಒಡ್ಡುತ್ತದೆ ಎನ್ನುವುದೂ ಇಲ್ಲಿ ಸೂಚ್ಯವಾಗಿದೆ.
ಹಾಗೆಂದು ಈ ಯೋಜನೆಗೆ ಮುಂದಡಿ ಇಡುವುದಕ್ಕೆ ಮುಂಚೆ ಬರಪೀಡಿತ ಜಿಲ್ಲೆಯವರಿಗೆ ಮುಂದಾಗುವ ಪರಿಣಾಮಗಳ ಬಗ್ಗೆಯಾಗಲೀ, ತಮ್ಮ ಜಿಲ್ಲೆಗಳಿಗೆ ಇದು ನಿಜಕ್ಕೂ ಪರಿಹಾರವಲ್ಲ ಎನ್ನುವುದಾಗಲೀ ಅರಿವಿರಲಿಲ್ಲ ಮತ್ತು ಅರಿವಿಲ್ಲ ಎನ್ನುವುದನ್ನು ನಾನು ಪೂರ್ತಿಯಾಗಿ ಒಪ್ಪಲಾರೆ. ಮಾನವಸಹಜ ಆಸೆಯೊಂದಿಗೆ ಅವರು ಯೋಜನೆಗೆ ಆಗ್ರಹಿಸಿ ಹೋರಾಟವನ್ನೂ ಮಾಡಿದ್ದಾರೆ, ವಿರೋಧಿಸುವ ಸಮಯಗಳಲ್ಲಿ ಮೌನವನ್ನೂ ವಹಿಸಿದ್ದಾರೆ.
ಈಗ ಈ ಯೋಜನೆಯಿಂದ ಯಾರಿಗೂ ಪ್ರಯೋಜನವಿಲ್ಲ ಎನ್ನುವುದು ಬಹುತೇಕ ಎಲ್ಲರಿಗೂ ಮನಗಂಡಿದೆ, ಅಲ್ಲವೇ?
ಈಗಲಾದರೂ ಈ ಯೋಜನೆಯನ್ನು ಕೈಬಿಡಿ, ನಮಗೆ ನಮ್ಮ ಸಂಪನ್ಮೂಲಗಳಿಂದಲೇ ದೀರ್ಘಕಾಲೀನ ಜಲಸುಸ್ಥಿರತೆಯ ಕಾರ್ಯಕ್ರಮಗಳನ್ನು ಆರಂಭಿಸಿ ಎಂದು ಸರ್ಕಾರವನ್ನು ಆಗ್ರಹಿಸಿ ಹೋರಾಟ ಆರಂಭಿಸಲಿ. ಅವರೊಂದಿಗೆ ನಾನೂ ಒಬ್ಬ ಕಾಲಾಳಾಗಿ ಬರುತ್ತೇನೆ. ಪಶ್ಚಿಮಘಟ್ಟ ತೀರ ಸಂಕಷ್ಟದ ಸ್ಥಿತಿಯಲ್ಲಿದೆ. ಅದನ್ನು ಉಳಿಸಿದರೆ ಇಡೀ ನಾಡಿಗೇ ಹಿತ. ಆ ಹೋರಾಟಕ್ಕೆ ಬರಪೀಡಿತ ಜಿಲ್ಲೆಗಳೂ ಸೇರಿದಂತೆ ಕರ್ನಾಟಕದ ಎಲ್ಲ ಭಾಗದ ಜನರು ಮುಂದಾಗಲಿ.
–ಕೇಸರಿ ಹರವೂ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’
ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.
ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.
ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ1 day agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ2 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ2 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ6 hours agoಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

