ದಿನದ ಸುದ್ದಿ
ಬಿ.ಆರ್. ಜೋಯಪ್ಪ ಅವರ ‘ಕಾಟಿಬೆಟ್ಟದ ಕಥೆಗಳು’ ಪುಸ್ತಕ ಲೋಕಾರ್ಪಣೆ
ಸುದ್ದಿದಿನ, ಮಡಿಕೇರಿ : ಕೊಡಗು ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ಬಿ.ಆರ್.ಜೋಯಪ್ಪ ಅವರು ಬರೆದ ‘ಕಾಟಿಬೆಟ್ಟದ ಕಥೆಗಳು’ ಪುಸ್ತಕ ಲೋಕಾರ್ಪಣೆ ಸಮಾರಂಭವು ಶನಿವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.
ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ರಂಗಕರ್ಮಿ ಶಿವಮೊಗ್ಗದ ಕವಿ ಕಾವ್ಯ ಟ್ರಸ್ಟ್ನ ಪ್ರಸನ್ನ ಅವರು ಸಣ್ಣ ಊರಿನಲ್ಲಿದ್ದು, ಸಣ್ಣ ಸಣ್ಣ ವಿಚಾರಗಳನ್ನು ಅದ್ಭುತ ಸಾಹಿತ್ಯ ರೂಪದಲ್ಲಿ ಪುಸ್ತಕದಲ್ಲಿ ಅನಾವರಣ ಮಾಡಿದ್ದಾರೆ ಎಂದರು. ಬಿ.ಆರ್.ಜೋಯಪ್ಪ ಅವರ ಬಾಲ್ಯದಲ್ಲಿ ಕಂಡಂತಹ ಅನುಭವವು ಕಥೆ ರೂಪದಲ್ಲಿ ಮೂಡಿ ಬಂದಿರುವುದು ಸಂತಸದ ವಿಷಯವಾಗಿದೆ ಎಂದರು.
ಮನುಷ್ಯನ ಜೀವನದಲ್ಲಿ ಪ್ರಕೃತಿ ಮತ್ತು ಪುರುಷ ಸಂಬಂಧದ ಬಾಂಧವ್ಯವನ್ನು ಈ ಪುಸ್ತಕವು ತೋರಿಸಿಕೊಡುತ್ತದೆ. ಸಭ್ಯತೆಯ ಬಾಲ್ಯ ಕಾಲದಲ್ಲಿ ಪ್ರಕೃತಿ ಮತ್ತು ಮನುಷ್ಯನ ಒಡನಾಟ ಮತ್ತು ಮನುಷ್ಯ ಬೆಳೆದಂತೆ ಪ್ರಕೃತಿಯ ಮೇಲೆ ಅತಿಕ್ರಮಣವಾಗುತ್ತ ಪ್ರಕೃತಿಯನ್ನು ವಿಕಾರಗೊಳಿಸುವ ಘಟನೆಗಳು ಈ ಪುಸ್ತಕದಲ್ಲಿ ಮೂಡಿಬಂದಿದೆ ಎಂದು ಅವರು ನುಡಿದರು.
ಶಿಕ್ಷಣ ಬೌದ್ಧಿಕ ಜ್ಞಾನವೂ ಹೌದು ಹಾಗೂ ಹೃದಯದ ಅನುಭವವು ಹೌದು. ಇಂದಿನ ವಿದ್ಯಾರ್ಥಿಗಳು ಅವಸರದ ಬದುಕಿನಿಂದ ಹೊರಬಂದು ತಮ್ಮ ಪರಿಸರವನ್ನು ಗಮನಿಸಿ ನೆರೆ ಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಹೊಂದಿ ನಮ್ಮ ಭಾಷೆ, ನಮ್ಮ ಪರಿಸರದ ಬಗ್ಗೆ ಕೆಲಸ ಮಾಡಬೇಕು. ಬೇಕಾದದ್ದನ್ನು ಇಟ್ಟುಕೊಂಡು ಬೇಡವಾದದನ್ನು ಬಿಟ್ಟು ಸಮೃದ್ಧ ನಾಡನ್ನು ಕಟ್ಟುವಂತಹ ಕೆಲಸಗಳು ಮುಂದುವರೆಯಬೇಕು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.
ಹೆಸರಾಂತ ಕಥೆಗಾರರು ಹಾಗೂ ಮೈಸೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾದ ಅಬ್ದುಲ್ ರಶೀದ್ ಅವರು ಮಾತನಾಡಿ ಕಾಟಿಬೆಟ್ಟದ ಕಥೆಗಳು ಪುಸ್ತಕದಲ್ಲಿ ಬಿ.ಆರ್.ಜೋಯಪ್ಪ ಅವರು ತಮ್ಮ ಬಾಲ್ಯದ ತಮ್ಮ ಮನೆಯ ಪರಿಸರದ ಸುತ್ತಮುತ್ತಲಿನ ಆಗು ಹೋಗುಗಳು ಕಥೆಯ ರೂಪದಲ್ಲಿ ಅನಾವರಣಗೊಳಿಸಿದ್ದಾರೆ. ಕೊಡಗಿನ ಜೀವನ ಶೈಲಿ, ತಮ್ಮ ಸುತ್ತಮುತ್ತಲಿನ ಅನುಭವ, ಜೀವನ ಶಿಕ್ಷಣವನ್ನು ಕೃತಿಯಲ್ಲಿ ತೋರಿಸಿಕೊಟ್ಟಿದ್ದಾರೆ.
ವಿದ್ಯಾರ್ಥಿ ದಿನದಲ್ಲಿ ಸಾಹಿತ್ಯದ ಪ್ರಭಾವದಿಂದ ತಮಗಾದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುತ್ತ ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿ ಇರುವ ಸಾಹಿತ್ಯದ ಅಭಿರುಚಿಯನ್ನು ವೃದ್ಧಿಪಡಿಸಿಕೊಂಡು ತಂತ್ರಜ್ಞಾನವನ್ನು ತಮ್ಮ ಬೆಳವಣಿಗೆಗೆ ಉಪಯುಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಪ್ರಯತ್ನಶೀಲ ಬದುಕಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ ಎಂಬುದನ್ನು ಕಾಟಿಬೆಟ್ಟದ ಕಥೆಗಳು ಪುಸ್ತಕದಲ್ಲಿ ಅಡಕವಾಗಿದೆ. ಬಿ.ಆರ್.ಜೋಯಪ್ಪ ಅವರು ಶಿಕ್ಷಕರಾಗಿ, ಲೇಖಕರಾಗಿ, ಅವರ ಪರಿಶ್ರಮದ ಅನಾವರಣ, ಗ್ರಾಮೀಣ ಪರಿಸರ, ಬಡತನದ ಅನಾವರಣ, ನಾಟಿ ಔಷಧಿಯ ಮಹತ್ವ, ಅವರ ಕಾಲಘಟ್ಟದ ಬದುಕಿನ ಚಿತ್ರಣವನ್ನು ಸೊಗಸಾಗಿ ಈ ಪುಸ್ತಕದಲ್ಲಿ ಅನಾವರಣಗೊಳಿಸಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಕಥೆಗಳ ಲೇಖಕರಾದ ಬಿ.ಆರ್.ಜೋಯಪ್ಪ ಅವರುಕಾಟಿಬೆಟ್ಟದ ಈ ಪುಸ್ತಕ ರಚಿಸಲು ತಮಗೆ ಪ್ರೇರಣೆ ನೀಡಿದ ಮಹನೀಯರಿಗೆ ಕೃತಜ್ಞತೆ ಸಲ್ಲಿಸುತ್ತಾ ಕಥೆ ಬರೆಯುವ ಸಂದರ್ಭವನ್ನು ಹಂಚಿಕೊಳ್ಳುತ್ತಾ ತಮ್ಮ ಕುಟುಂಬ ಸದಸ್ಯರ ಸಹಕಾರ ಈ ಮುಂಚೆ ತಾವು ಬರೆದ ಪುಸ್ತಕಗಳ ಮಾಹಿತಿಗಳನ್ನು ನೀಡಿ ಪುಸ್ತಕವು ಉತ್ತಮ ರೀತಿಯಲ್ಲಿ ಮೂಡಿಬರಲು ಸಹಕಾರ ನೀಡಿದ ಎಲ್ಲಾ ಮಾರ್ಗದರ್ಶಕರಿಗೆ ವಿಮರ್ಶಕರಿಗೆ ಧನ್ಯವಾದ ತಿಳಿಸಿದರು.
ಕೊಡಗು ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ ಶಾಲಾ ಕಾಲೇಜುಗಳಲ್ಲಿ ಸಾಹಿತ್ಯದ ಬೆಳವಣಿಗೆ ಆಗಬೇಕೆಂಬ ಉದ್ದೇಶದಿಂದ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ಚಿಂತನ-ಚಿತ್ತಾರ ಪ್ರಕಾಶನದ ಡಿ.ನಿಂಗರಾಜು ಚಿತ್ತಣ್ಣನವರ್, ಲೇಖಕರ ಕುಟುಂಬಸ್ಥರು ಇತರರು ಇದ್ದರು. ಕೊಡಗು ಲೇಖಕ ಮತ್ತು ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿ ವಿಲ್ಪರ್ಡ್ ಕ್ರಾಸ್ತಾ ನಿರೂಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


