ದಿನದ ಸುದ್ದಿ
‘ಶರಾವತಿ ಉಳಿಸಿ’ ಸಮಾಲೋಚನಾ ಸಭೆಯ ಮುಖ್ಯಾಂಶಗಳು ಹಾಗೂ ನಿರ್ಣಯಗಳು
ಸುದ್ದಿದಿನ, ಸಾಗರ : ಜೂನ್ 22 ರಂದು ಸಾಗರದ ನೌಕರರ ಭವನದಲ್ಲಿ ನಡೆದ “ಶರಾವತಿ ಉಳಿಸಿ” ಸಮಾಲೋಚನಾ ಸಭೆಯಲ್ಲಿ ಹಿರಿಯ ಸಾಹಿತಿಗಳಾದ ನಾ ಡಿಸೋಜಾ, ಹಿರಿಯ ಚಿಂತಕ ಪ್ರಸನ್ನ ಹೆಗ್ಗೋಡು, ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ, ಲೇಖಕ ವಿಲಿಂ, ಕಲಾವಿದ ಪರಿಸರವಾದಿ ಅರುಣ್ ಕುಮಾರ್ ಸಾರಾ, ಕೆ ಜಿ ಕೃಷ್ಣ ಮೂರ್ತಿ, ತುಮರಿ, ರಾಜಕೀಯ ಮುಖಂಡರಾದ ಬಿ ಆರ್ ಜಯಂತ್, ಕಲಗೋಡು ರತ್ನಾಕರ, ಮೇಘರಾಜ್ ಟಿಡಿ, ಮಲ್ಲಿಕಾರ್ಜುನ ಹಕ್ರೆ, ರವಿ ಕುಗ್ವೆ, ಪ್ರಭಾವತಿ ಚಂದ್ರಕಾಂತ್, ಸಾಮಾಜಿಕ ಕಾರ್ಯಕರ್ತರಾದ ಶಿವಾನಂದ ಕುಗ್ವೆ, ಬಿ ಎಚ್ ರಾಘವೇಂದ್ರ, ವಾಮದೇವ ಗೌಡ್ರು, ಹುಚ್ರಾಯಪ್ಪ ಶಿಕಾರಿಪುರ ಸೇರಿದಂತೆ ಸುಮಾರು 150 ಪ್ರತಿನಿಧಿಗಳು ಭಾಗವಹಿಸಿದ್ದರು.
ಕರೂರು ಗ್ರಾಮ ಪಂಚಾಯತಿ ಸತ್ಯನಾರಾಯಣ ಜಿ ಟಿ ಎಲ್ಲರನ್ನೂ ಸ್ವಾಗತಿಸಿದರು.ಪ್ರಾಸ್ತಸವಿಕವಾಗಿ ಮಾತನಾಡಿದ ಎಚ್ ಬಿ ರಾಘವೇಂದ್ರ ಸಭೆಯ ಉದ್ದೇಶವನ್ನು ಸಂಕ್ಷಿಪ್ತವಾಗಿ ತಿಳಿಸಿದರು.
ಶರಾವತಿ ನದಿಯಿಂದ ಬೆಂಗಳೂರಿಗೆ ನೀರೆತ್ತುವ ಯೋಜನೆಯ ಹಿನ್ನೆಲೆ, ಸಮಸ್ಯೆ ಗಳನ್ನು ಪತ್ರಕರ್ತ ಶಶಿ ಸಂಪಳ್ಳಿ ವಿವರಿಸಿದರು. ಈ ಯೋಜನೆಯ ಪರಿಸರದ ಆಯಾಮವನ್ನು ಪರಿಸರ ಹೋರಾಟಗಾರ ಅಖಿಲೇಶ್ ಚಿಪ್ಳಿ ತಿಳಿಸಿದರು. ಕೈಗೊಳ್ಳಬೇಕಾದ ಹೋರಾಟದ ಸ್ವರೂಪ, ಎಲ್ಲರನ್ನೂ ಒಳಗೊಂಡು ಜನಾಂದೋಲನ ನಡೆಸಬೇಕಾಗಿರುವ ಕುರಿತು ಸಾಮಾಜಿಕ ಕಾರ್ಯಕರ್ತ, ಪತ್ರಕರ್ತ ಹರ್ಷಕುಮಾರ್ ಕುಗ್ವೆ ವಿವರಿಸಿದರು.
ಸಾಹಿತಿ ನಾ ಡಿಸೋಜಾ ಅವರು ಮಾತನಾಡಿ, ಬೆಂಗಳೂರಿಗೆ ಲಿಂಗನಮಕ್ಕಿಯಿಂದ ನೀರನ್ನ ಸಾಗಿಸಲು ಏನೆಲ್ಲಾ ಕೆಲಸ ಆಗಬೇಕು, ಎಷ್ಟೊಂದು ಖರ್ಚು ತಗುಲುತ್ತೆ, ಆ ಹಣ ನಮ್ಮೆಲ್ಲರ ಮೇಲೂ ಹೊರೆ, ನೀರನ್ನ ಸಾಗಿಸಲು ಇಲ್ಲಿ ಎಷ್ಟು ನೀರಿದೆ ಎಂಬುದನ್ನು ನಾವು ಪರಿಶೀಲನೆ ಮಾಡಬೇಕು, ಲಿಂಗನಮಕ್ಕೆ ಜಲಾಶಯದಲ್ಲಿ ಶೇ.೪೦ರಷ್ಟು ಹೂಳೇ ತುಂಬಿದೆ, ಇದರ ಬಗ್ಗೆ ಸರ್ಕಾರಕ್ಕೆ ಆಲೋಚನೆಯೇ ಇಲ್ಲ, ಈ ಸಣ್ಣ ನದಿಗೆ ಚಿಕ್ಕಪುಟ್ಟ ಹತ್ತು ಅಣೆಕಟ್ಟುಗಳಿವೆ. ನ್ಯಾಯಾಲಯಗಳು ಕುಡಿಯುವ ನೀರಿನ ಪರವಾಗಿ ಇರುತ್ವೆ, ಇಲ್ಲಿಂದ ಬೆಂಗಳೂರಿಗೆ ನೀರು ಸರಬರಾಜಾಗಲು ಇರುವ ಆಘಾತಗಳ ಬಗ್ಗೆ ನಿಮ್ಮ ಕಳಕಳಿಗೆ ಧನ್ಯವಾದಗಳು. ಎಲ್ಲರೂ ಸೇರಿ ಈ ಯೋಜನೆ ತಡೆಯಲು ಮುಂದಾಗೋಣ ಎಂದರು.
ಚಿಂತಕ ಪ್ರಸನ್ನ ಅವರು ವಿಶ್ವದ ಎಲ್ಲಾ ರಾಷ್ಟ್ರ ಗಳು ನಗರವನ್ನ ಮಿತಿಗೊಳಿಸುವ ಕೆಲಸ ಮಾಡುತ್ತವೆ ಆದರೆ ನಮ್ಮಲ್ಲಿ ಇಲ್ಲ, ಬೆಂಗಳೂರಿನ ದಾಹಕ್ಕೆ ಕಾವೇರಿ ಹೇಮಾವತಿ ಆಯ್ತು ಈಗ ಶರಾವತಿ, ಐವತ್ತು ವರ್ಷ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವುದೇ ಆದರೆ ಬೆಂಗಳೂರನ್ನ ಮಿತಿಗೊಳಿಸಿ. ಉತ್ತರದ ಭಾರತದಲ್ಲಿ ತಿಂಗಳಿಗೊಮ್ಮೆ ನೀರು ಬಿಡಲಾಗುತ್ತಿದೆ, ಈ ಮಾತನ್ನ ನಾವು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕಿದೆ. ಬೆಂಗಳೂರು ಎಷ್ಟು ಎತ್ತರವಿದೆ, ಗುಡ್ಡಕ್ಕೆ ನೀರು ಹೊಡೆಯುತ್ತೇವೆ ಎಂಬುದನ್ನ ಯಾವ ನ್ಯಾಯಾಲಯವೂ ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದರು.
ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಆರ್ ಜಯಂತ್ ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆ ಅತ್ಯಂತ ಮೂರ್ಖ ಯೋಜನೆ. ಇದಕ್ಕೆ ನಮ್ಮೆಲ್ಲರ ವಿರೋಧವಿದೆ. ಇದನ್ನು ತಡೆಯಲೇಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್ ಅವರು ಮಾತನಾಡಿ, ಶರಾವತಿ ನದಿ ನೀರನ್ನ ತೆಗೆದುಕೊಂಡು ಹೋಗುವ ಹುನ್ನಾರ ಮೊದಲಿಂದಲೂ ಇತ್ತು..ಈಗ ಮುನ್ನೆಲೆಗೆ ಬಂದಿದೆ. ಹೋರಾಟಕ್ಕೆ ನನ್ನ ಬೆಂಬಲ ಇದೆ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ನಮ್ಮ ಭಾಗದ ಜನರಿಗೆ ಕುಡಿಯುವ ನೀರಿನ ಅವಶ್ಯಕತೆ ಇದೆ. ಮೊದಲು ಇಲ್ಲಿನ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಗಾಗಿ ಒತ್ತಾಯಿಸಬೇಕು ಎಂದರು. ಈ ವ್ಯಾಪ್ತಿಯ ಎಲ್ಲಾ ಗ್ರಾಮಪಂಚಾಯಿತಿಗಳನ್ನ ಕರೆದು ಸಭೆ ಮಾಡೋಣ, ಇಡೀ ಶಿವಮೊಗ್ಗ ಬಂದ್ ಮಾಡಿಸೋಣ ಎಂದರು.
ಶಂಕರಶರ್ಮಾ ಅವರು ಮಾತನಾಡಿ, ತಾಂತ್ರಿಕವಾಗಿ ಯೋಜನೆಯ ಬಗ್ಗೆ ಚರ್ಚೆ ಮಾಡಿ, ಮೂರು ಸಾವಿರ ಮೆಗಾವ್ಯಾಟ್ ಅಂದರೆ ಈ ನೀರೆತ್ತಲು ಇಲ್ಲಿ ತಯಾರಾಗುವ ಅರ್ಧದಷ್ಟು ವಿದ್ಯುತ್ ಬೇಕು, ಈ ಕುರಿತು ನಾವು ವರದಿ ತಯಾರು ಮಾಡೋಣ, ಯಾವ ಭಾಗದಲ್ಲೂ ನಾಲ್ಕು ನೂರು ಕಿಲೋಮೀಟರ್ ಉದ್ದ ಸಾವಿರ ಅಡಿ ಎತ್ತರಕ್ಕೆ ನೀರು ತೆಗೆದುಕೊಂಡು ಹೋಗುವ ಯೋಜನೆ ಇಲ್ಲ. ನಾವು ಬರೀ ಬೆಂಗಳೂರಿನ ಬೆಳವಣಿಗೆ ನೋಡಿ ಕೂರಬೇಕಾ, ಕಾಳಿ ನದಿ ಪಾತ್ರದ ಜನರು ಹಾಗೂ ಹೊಸಪೇಟೆ ಭಾಗದ ಜನರನ್ನೂ ಹೋರಾಟಕ್ಕೆ ಸೇರಿಸಿಕೊಳ್ಳಬೇಕು. ಬೆಂಗಳೂರಿನಲ್ಲಿ ಶೇ ನಲವತ್ತರಷ್ಟು ನೀರು ಪೋಲಾಗುತ್ತೆ ಇದು ಅಧಿಕೃತ ಮಾಹಿತಿ. ಬೆಂಗಳೂರಿಗೆ ಹದಿನೆಂಟು ಟಿಎಂಸಿಯಷ್ಟೇ ಸಾಕು ಮೂವತ್ತು ಟಿಎಂಸಿ ಯಾಕೆ.. ಎಂದು ಕೇಳಿದರು.
ಪರಿಸರವಾದಿ ಅಜಯ್ ಶರ್ಮಾ ಮಾತನಾಡಿ, ಮಲೆನಾಡಿಗೆ ಮೊದಲು ನೀರು ಕೊಡಿ ನಮಗಾಗಿ ಉಳಿದರೆ ಅದನ್ನ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ಎಂಬುದನ್ನ ನಾವು ವಿವರಿಸುವ ಅಗತ್ಯ ಇದೆ ಎಂದರು.
ಬಿಜೆಪಿ ಮುಖಂಡ ಮೇಘರಾಜ್ ಟಿ ಡಿ ಅವರು ಮಾತನಾಡಿ, ಈ ವಿಷಯದಲ್ಲಿ ಸರ್ಕಾರ ಹೊಣೆಗೇಡಿಯಾಗಿ ವರ್ತಿಸುತ್ತಿದೆ, ಬೃಹತ್ ಹೋರಾಟವನ್ನು ಎಲ್ಲರೂ ಸೇರಿ ನಡೆಸೋಣ ಎಂದರು.
ಹುಚ್ರಾಯಪ್ಪ ಅವರು ಮಾತನಾಡಿ, ನಾವು ಶಿಕಾರಿಪುರದವರು ಸಾಗರದ ನೀರು ಬಳಸುತ್ತೇವೆ, ಉದಾಹರಣೆಗೆ ಡ್ಯಾಂ ಹೊಸೂರ್, ನಮಗೂ ಇಲ್ಲಿನ ಋಣ ಬಹಳಷ್ಟು ಇದೆ, ಈಗ ಕುಡಿಯಲೂ ನೀರಿಲ್ಲ. ನಾವೂ ಹೋರಾಟಕ್ಕೆ ಸಿದ್ದ ಎಂದರು.
ನಮ್ಮ ನಾಡನ್ನ ಪ್ರತ್ಯೇಕ ರಾಜ್ಯ ಮಾಡಿ ಎಂದಾಗ ಮಾತ್ರ ನಮಗೆ ನ್ಯಾಯ ಸಿಗುತ್ತೆ ಅಂತಹ ಹೋರಾಟ ಆಗಬೇಕು, ಎಚ್ಚರವಿಡಿ ನಾವು ಇಂತಹ ಹೋರಾಟವೇ ಸರ್ಕಾರಕ್ಕೆ ಚಾಟಿ
ನಿತಿನ್ ಹಿರಳೆ ಮಾತನಾಡಿ, ಶರಾವತಿಯನ್ನ ಉಳಿಸಲು, ನಾವು ವರದಿ ಸಿದ್ಧಪಡಿಸಬೇಕು, ಈ ಮೂಲಕ ಇಲ್ಲಿನ ಸಮಸ್ಯೆಗಳನ್ನ ಮನವರಿಕೆ ಮಾಡಿಕೊಡಬೇಕು
ದಂಡಾವತಿ ಹೋರಾಟದ ವಾಮದೇವ ಗೌಡ ಅವರು ಈ ಹೋರಾಟದಲ್ಲಿ ರಾಜಕೀಯ ಮುಖಂಡರ ನಾಯಕತ್ವ ಕೊಡದೇ ಅವರ ಬೆಂಬಲ ಮಾತ್ರ ಪಡೆದು ಎಲ್ಲರ ಹೋರಾಟವಾಗಿ ನಡೆಸಬೇಕು ಎಂದರು.
ಸಾಕಷ್ಟು ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇನ್ನೂ ಹಲವರು ಮಾತಾಡುವುದಿದ್ದರೂ ಸಮಯದ ಅಭಾವದಿಂದ ಅವಕಾಶ ಆಗಲಿಲ್ಲ.
ನಿರ್ಣಯಗಳು
- ‘ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ’ ವನ್ನು ಸಭೆ ಅಸ್ತಿತ್ವಕ್ಕೆ ತಂದಿತು.
- ಒಕ್ಕೂಟದ ಹೋರಾಟ ಗೌರವಾಧ್ಯಕ್ಷರಾಗಿ ಕನ್ನಡದ ನಾಡಿ ಎಂದೇ ಖ್ಯಾತರಾದ ಲೇಖಕರು ನಾ ಡಿಸೋಜ ಅವರನ್ನು ಆಯ್ಕೆ ಮಾಡಲಾಯಿತು.
- 30 ಜನರ ಸಂಘಟನಾ ಸಮಿತಿ ರಚಿಸಿಲಾಯಿತು.
– ಶಂಕರ್ ಶರ್ಮಾ ಅವರನ್ನೊಳಗೊಂಡ ತಜ್ಞರ ಸಮಿತಿಯಲ್ಲಿ ರಾಜ್ಯ ಮಟ್ಟದ ನೀರಾವರಿ ತಜ್ಞರು, ಪರಿಸರ ತಜ್ಞರನ್ನೊಳಗೊಂಡ ಈ ಸಮಿತಿ ಶೀಘ್ರದಲ್ಲೇ ಸರ್ಕಾರದ ಯೋಜನೆಯ ಅನಾಹುತಗಳ ಕುರಿತು ಒಂದು ವರದಿ ಸಲ್ಲಿಸಬೇಕು. - ಕಾನೂನು ಸಮಿತಿ- ಈ ವಿಷಯದಲ್ಲಿ ಕಾನೂನು ಹೋರಾಟ ನಡೆಸುವ ಕುರಿತು ಅಧ್ಯಯನ ನಡೆಸಿ ತೀರ್ಮಾನ ಕೈಗೊಳ್ಳಲು ವಕೀಲ ಪ್ರವೀಣ್ ಕೆ ವಿ ನೇತೃತ್ವದಲ್ಲಿ ಕಾನೂನು ಸಮಿತಿ ರಚಿಸಲಾಯಿತು
- ಮಾಧ್ಯಮ/ ಸಾಮಾಜಿಕ ಮಾಧ್ಯಮ ಸಮಿತಿ
- ಶರಾವತಿ ಉಳಿಸುವ ಈ ಹೋರಾಟವನ್ನು ಮಾಧ್ಯಮಗಳ ಮೂಲ ಪರಿಣಾಮಕಾರಿಯಾಗಿ ಪ್ರಚಾರ ಮಾಡಲು ಹರ್ಷಕುಮಾರ್ ಕುಗ್ವೆ ಉಸ್ತುವಾರಿಯ ತಂಡವೊಂದನ್ನು ರಚಿಸಲಾಯಿತು.
- ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆ ಕುರಿತು ವರದಿಯೊಂದನ್ನು ಸಿದ್ಧಪಡಿಸುವ ಅಗತ್ಯವಿದ್ದು ಈ ಹೊಣೆಯನ್ನು ಮಲ್ಲಿಕಾರ್ಜುನ ಹಕ್ರೆ ಅವರಿಗೆ ವಹಿಸಲಾಯಿತು.
- ವಾಮದೇವ ಗೌಡ ಅವರ ನೇತೃತ್ವದಲ್ಲಿ ಹಣಕಾಸು ಸಮಿತಿ ರಚಿಸಲಾಯಿತು. ಯಾವುದೇ ರಾಜಕೀಯ ಪಕ್ಷದಿಂದ ಹಣ ತೆಗೆದುಕೊಳ್ಳುವಂತಿಲ್ಲ ಹಾಗೂ 5000 ರೂಪಾಯಿಗಿಂತ ಹೆಚ್ಚಿನ ದೇಣಿಗೆ ಪಡೆಯುವಂತಿಲ್ಲ ಎಂಬ ತೀರ್ಮಾನ ತೆಗೆದುಕೊಳ್ಳಲಾಯಿತು. ಜನರಿಂದಲೇ ಹಣ ಸಂಗ್ರಹಿಸಿ ಹೋರಾಟ ರೂಪಿಸಲು ನಿರ್ಧರಿಸಲಾಯಿತು.
- ಜುಲೈ 10 ನೇ ತಾರೀಖಿನಂದು ಶಿವಮೊಗ್ಗ ಜಿಲ್ಲೆ ಬಂದ್ ಕರೆ ನೀಡುವುದು ಎಂದು ಸರ್ವಾನುಮತದಿಂದ ತೀರ್ಮಾನಿಸಲಾಯಿತು.
- ಕೂಡಲೇ ಶಿವಮೊಗ್ಗದಲ್ಲಿ ಒಂದು ಪತ್ರಿಕಾ ಗೋಷ್ಟಿ ನಡೆಸುವುದು,
ಹೊಸನಗರ, ನಗರ, ಶಿವಮೊಗ್ಗ, ತೀರ್ಥಹಳ್ಳಿ, ಸೊರಬಗಳಲ್ಲಿ ಪೂರಕ ಸಭೆಗಳನ್ನು ಶೀಘ್ರದಲ್ಲೇ ಆಯೋಜಿಸಲು ತೀರ್ಮಾನ ಮಾಡಲಾಯಿತು. - ಶರಾವತಿ ನದಿ ಉಳಿಸಿಕೊಳ್ಳುವ ಹೋರಾಟಕ್ಕೆ ನಾಡಿನಾದ್ಯಂತ ಬೆಂಬಲ ಕೋರಲು ನಿರ್ಧರಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್ ಖರೀದಿಗೂ ಎದುರಾಗುತ್ತಿದೆ ಒತ್ತಡ
ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ ಟಿಕೆಟ್ಗಳ ಮೊತ್ತದಲ್ಲಿ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ₹5,651.24 ಕೋಟಿ ಬಾಕಿ ಉಳಿಸಿಕೊಂಡಿರುವುದು ನಿಗಮಗಳ ಆರ್ಥಿಕ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ. ಬಾಕಿ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ವೇತನ, ಡೀಸೆಲ್, ಬಿಡಿಭಾಗಗಳ ಖರೀದಿ ಸೇರಿದಂತೆ ದೈನಂದಿನ ವೆಚ್ಚಗಳನ್ನು ನಿರ್ವಹಿಸುವ ಒತ್ತಡ ಹೆಚ್ಚಾಗಿದೆ.
ಶಕ್ತಿ ಯೋಜನೆಗೆ ಮೂರು ವರ್ಷಗಳ ಪಯಣ
ಕಾಂಗ್ರೆಸ್ ಸರ್ಕಾರ 2023ರ ಜೂನ್ 11ರಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತ್ತು. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಾರಿಗೆ ನಿಗಮಗಳ ಮೇಲೆ ಸೇವಾ ಹೊರೆ ಕೂಡ ವಿಸ್ತರಿಸಿದೆ.
2023-24ರಿಂದ 2026ರ ಜುಲೈ ಅಂತ್ಯದವರೆಗೆ ನಾಲ್ಕು ಸಾರಿಗೆ ನಿಗಮಗಳ ಬಸ್ಗಳಲ್ಲಿ ಮಹಿಳೆಯರು 797.16 ಕೋಟಿ ಪ್ರಯಾಣ ಕೈಗೊಂಡಿದ್ದಾರೆ. ಈ ಪ್ರಯಾಣಗಳಿಗೆ ನೀಡಲಾದ ಉಚಿತ ಟಿಕೆಟ್ಗಳ ಒಟ್ಟು ಮೌಲ್ಯ ₹20,955.99 ಕೋಟಿ ಎಂದು ಅಂಕಿ-ಅಂಶಗಳು ತಿಳಿಸುತ್ತವೆ.
₹15,304 ಕೋಟಿ ಪಾವತಿ, ಇನ್ನೂ ₹5,651 ಕೋಟಿ ಬಾಕಿ
ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೊತ್ತವನ್ನು ಸರ್ಕಾರ ಸಾರಿಗೆ ನಿಗಮಗಳಿಗೆ ಮರುಪಾವತಿ ಮಾಡಬೇಕಿದೆ. ಇದುವರೆಗೆ ₹15,304.76 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ₹5,651.24 ಕೋಟಿ ಪಾವತಿಯಾಗಬೇಕಿದೆ.
ಈ ಬಾಕಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಪಾಲುದಾರರಾಗಿವೆ.
ನಿಗಮಗಳಿಗೆ ಆರ್ಥಿಕ ಒತ್ತಡ ಏಕೆ?
ಈಗಾಗಲೇ ಹಲವು ವರ್ಷಗಳಿಂದ ಸಾರಿಗೆ ನಿಗಮಗಳು ನಷ್ಟದ ಒತ್ತಡದಲ್ಲಿವೆ. ಶಕ್ತಿ ಯೋಜನೆಯ ಟಿಕೆಟ್ ಮೊತ್ತ ಸಕಾಲದಲ್ಲಿ ಪಾವತಿಯಾಗದಿರುವುದು ನಗದು ಹರಿವಿನ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿಯ ವೇತನ, ಡೀಸೆಲ್ ಖರೀದಿ, ಬಸ್ಗಳ ನಿರ್ವಹಣೆ, ಬಿಡಿಭಾಗಗಳ ಪೂರೈಕೆ ಹಾಗೂ ನಿವೃತ್ತ ನೌಕರರ ಬಾಕಿ ಪಾವತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿಗಮಗಳು ನಿರ್ವಹಿಸಬೇಕಿದೆ.
₹18,459 ಕೋಟಿ ನೆರವು ನೀಡಿದರೂ ನಷ್ಟದ ಹೊರೆ
ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಕಾರಣಗಳಿಗಾಗಿ ಸಾರಿಗೆ ನಿಗಮಗಳಿಗೆ ₹18,459.37 ಕೋಟಿ ನೆರವು ನೀಡಿದೆ. ಶಕ್ತಿ ಯೋಜನೆ, ವಿದ್ಯಾರ್ಥಿ ಪಾಸ್ಗಳ ಸಹಾಯಧನ, ಸಾಲ ಮತ್ತು ಬಡ್ಡಿ ಮರುಪಾವತಿ, ಬಸ್ ಖರೀದಿ, ವೇತನ, ಡೀಸೆಲ್, ಪಿಎಫ್ ಹಾಗೂ ರಜೆ ನಗದೀಕರಣ ಸೇರಿದಂತೆ ಹಲವು ವೆಚ್ಚಗಳಿಗೆ ಈ ನೆರವು ಬಳಕೆಯಾಗಿದೆ.
ಆದರೂ ನಿಗಮಗಳ ಆರ್ಥಿಕ ಸಂಕಷ್ಟ ಸಂಪೂರ್ಣವಾಗಿ ದೂರವಾಗಿಲ್ಲ. ಡೀಸೆಲ್ ಬಸ್ಗಳ ಜತೆಗೆ ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆಯಿಂದಲೂ ನಿರೀಕ್ಷಿತ ಮಟ್ಟದ ಆದಾಯ ಬರುತ್ತಿಲ್ಲ ಎಂಬುದು ಮತ್ತೊಂದು ಸವಾಲಾಗಿದೆ.
ಸಕಾಲಿಕ ಪಾವತಿಯೇ ಪರಿಹಾರವೇ?
ಶಕ್ತಿ ಯೋಜನೆಯ ಸಾಮಾಜಿಕ ಮಹತ್ವವನ್ನು ಪ್ರಶ್ನಿಸುವುದಕ್ಕಿಂತ, ಅದರ ಆರ್ಥಿಕ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಮುಖ್ಯವಾಗಿದೆ. ಸರ್ಕಾರದಿಂದ ಬಾಕಿ ಮೊತ್ತ ಸಕಾಲದಲ್ಲಿ ಬಿಡುಗಡೆಯಾದರೆ ನಿಗಮಗಳ ನಗದು ಹರಿವು ಸುಧಾರಿಸಿ, ವೇತನ, ಇಂಧನ ಮತ್ತು ನಿರ್ವಹಣಾ ವೆಚ್ಚಗಳನ್ನು ನಿರ್ವಹಿಸಲು ಹೆಚ್ಚಿನ ಬಲ ದೊರೆಯಬಹುದು.

ದಿನದ ಸುದ್ದಿ
ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!
ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ ಪಯಣವು ರೈತರ ಕೃಷಿ, ಜನರ ಕುಡಿಯುವ ನೀರು, ಸ್ಥಳೀಯ ಆರ್ಥಿಕತೆ, ವಿದ್ಯುತ್ ಉತ್ಪಾದನೆ ಹಾಗೂ ಪರಿಸರದೊಂದಿಗೆ ನೇರ ಸಂಬಂಧ ಹೊಂದಿದೆ. ಜಲಾಶಯ ತುಂಬಿದರೆ ಹಲವು ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿದರೆ, ನೀರಿನ ಕೊರತೆ ಎದುರಾದಾಗ ಇದೇ ಪ್ರದೇಶಗಳಲ್ಲಿ ಆತಂಕ ಹೆಚ್ಚುತ್ತದೆ.
http://Visit : www.suddidina.com
ಪಶ್ಚಿಮಘಟ್ಟದಿಂದ ಬಯಲುಸೀಮೆಯವರೆಗೆ ಭದ್ರೆಯ ಪಯಣ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ–ವರಾಹ ಪರ್ವತ ಶ್ರೇಣಿಗಳ ಗಂಗಾಮೂಲದಲ್ಲಿ ಹುಟ್ಟುವ ಭದ್ರಾ ನದಿ ಕಳಸ, ಕೊಪ್ಪ, ನರಸಿಂಹರಾಜಪುರ, ತರೀಕೆರೆ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಹರಿದು ಕೂಡಲಿ ಬಳಿ ತುಂಗಾ ನದಿಯನ್ನು ಸೇರುತ್ತದೆ. ಬಳಿಕ ತುಂಗಾಭದ್ರೆಯಾಗಿ ಮುಂದುವರಿದು ಕೃಷ್ಣಾ ನದಿಯನ್ನು ಸೇರುತ್ತದೆ.
ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿ ನಿರ್ಮಿಸಲಾಗಿರುವ ಭದ್ರಾ ಜಲಾಶಯ 1,708 ಮೀಟರ್ ಉದ್ದ ಹಾಗೂ 59.14 ಮೀಟರ್ ಎತ್ತರ ಹೊಂದಿದೆ. ಇದರ ಒಟ್ಟು ಸಂಗ್ರಹ ಸಾಮರ್ಥ್ಯ 71.50 ಟಿಎಂಸಿ. 1,968.40 ಚದರ ಕಿಲೋಮೀಟರ್ ಜಲಾನಯನ ಪ್ರದೇಶ ಹೊಂದಿರುವ ಈ ಯೋಜನೆಗೆ ಸ್ವಾತಂತ್ರ್ಯಾನಂತರ 1947ರಲ್ಲಿ ಚಾಲನೆ ದೊರೆತಿದ್ದು, ಅಣೆಕಟ್ಟು ಕಾಮಗಾರಿ 1959ರಲ್ಲಿ ಹಾಗೂ ನಾಲೆಗಳ ಕಾಮಗಾರಿ 1966ರಲ್ಲಿ ಪೂರ್ಣಗೊಂಡಿತು.
ಒಣಭೂಮಿಗೆ ಹಸಿರು ಹೊದಿಸಿದ ನೀರು
ಭದ್ರಾ ನೀರಾವರಿ ಯೋಜನೆಯು ಮಧ್ಯ ಕರ್ನಾಟಕದ ಕೃಷಿಯ ಚಿತ್ರಣವನ್ನೇ ಬದಲಿಸಿದೆ. ಎಡದಂಡೆ ನಾಲೆ 77.24 ಕಿ.ಮೀ. ಹರಿದು ಸುಮಾರು 8,300 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಿದರೆ, ಬಲದಂಡೆ ನಾಲೆ 366.90 ಕಿ.ಮೀ. ಉದ್ದಕ್ಕೆ ಹರಿದು ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತದೆ.
ಒಂದು ಕಾಲದಲ್ಲಿ ಭತ್ತ ಮತ್ತು ಕಬ್ಬು ಪ್ರಧಾನವಾಗಿದ್ದ ಪ್ರದೇಶಗಳಲ್ಲಿ ಇದೀಗ ಅಡಕೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳ ವಿಸ್ತರಣೆ ಕಂಡುಬಂದಿದೆ. ಹೀಗಾಗಿ ಭದ್ರಾ ನೀರು ಕೃಷಿ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ.
ಕುಡಿಯುವ ನೀರಿಗೂ ಭದ್ರೆಯೇ ಆಸರೆ
ಮಧ್ಯ ಕರ್ನಾಟಕದ ಹಲವು ನಗರಗಳು, ಪಟ್ಟಣಗಳು ಹಾಗೂ ಸಾವಿರಾರು ಹಳ್ಳಿಗಳ ಕುಡಿಯುವ ನೀರಿನ ವ್ಯವಸ್ಥೆಯಲ್ಲೂ ಭದ್ರಾ ಜಲಾಶಯ ಪ್ರಮುಖ ಪಾತ್ರ ವಹಿಸುತ್ತದೆ. ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 8.50 ಟಿಎಂಸಿ ನೀರನ್ನು ಮೀಸಲಿಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಪ್ರದೇಶಗಳ ಜನಜೀವನಕ್ಕೆ ಈ ನೀರು ಆಸರೆಯಾಗಿದೆ.
ಹೂಳು, ಮೇಲ್ದಂಡೆ ಯೋಜನೆ: ಭವಿಷ್ಯದ ಸವಾಲು
ಜಲಾಶಯದ ಸಂಗ್ರಹ ಸಾಮರ್ಥ್ಯದ ಮೇಲೆ ಹೂಳು ಕೂಡ ಪರಿಣಾಮ ಬೀರುತ್ತಿದೆ. ಮೂಲ ಸಂಗ್ರಹಕ್ಕೆ ಹೋಲಿಸಿದರೆ ಸುಮಾರು 95.74 ಮಿಲಿಯನ್ ಘನ ಮೀಟರ್ ಹೂಳು ಸೇರಿಕೊಂಡಿದೆ ಎನ್ನಲಾಗುತ್ತದೆ. ಸದ್ಯ ಡೆಡ್ ಸ್ಟೋರೇಜ್ ಇರುವುದರಿಂದ ತಕ್ಷಣದ ಬಳಕೆಗೆ ದೊಡ್ಡ ತೊಂದರೆ ಇಲ್ಲವಾದರೂ, ಭವಿಷ್ಯದ ಜಲಭದ್ರತೆ ದೃಷ್ಟಿಯಿಂದ ಹೂಳು ನಿರ್ವಹಣೆ ಮಹತ್ವದ್ದಾಗಿದೆ.
ಇದರ ನಡುವೆ ಭದ್ರಾ ಮೇಲ್ದಂಡೆ ಯೋಜನೆ ಬರಪೀಡಿತ ಪ್ರದೇಶಗಳಿಗೆ ನೀರೊದಗಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಸೂಕ್ಷ್ಮ ನೀರಾವರಿ ಹಾಗೂ ಕೆರೆಗಳ ಭರ್ತಿಗೆ ಯೋಜನೆ ರೂಪಿಸಲಾಗಿದೆ. ಜತೆಗೆ ನಾಲೆಗಳ ಮೂಲಕ 37.2 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯೂ ನಡೆಯುತ್ತಿದೆ. ಮೀನು ಮರಿ ಸಾಕಣೆ ಕೇಂದ್ರವೂ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆ.
ಭದ್ರೆಯ ಅಂಕಿ-ಅಂಶಗಳು
- ಜಲಾನಯನ ಪ್ರದೇಶ: 1,968.40 ಚ.ಕಿ.ಮೀ.
- ಅಣೆಕಟ್ಟು ಎತ್ತರ: 59.14 ಮೀಟರ್
- ಅಣೆಕಟ್ಟು ಉದ್ದ: 1,708 ಮೀಟರ್
- ನೀರು ಸಂಗ್ರಹ ಸಾಮರ್ಥ್ಯ: 71.50 ಟಿಎಂಸಿ
- ಅಚ್ಚುಕಟ್ಟು ಪ್ರದೇಶ: 1,05,570 ಹೆಕ್ಟೇರ್
- ನಾಲೆಗಳ ಒಟ್ಟು ಉದ್ದ: 444.14 ಕಿ.ಮೀ.

ದಿನದ ಸುದ್ದಿ
ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ
ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.
| ಹೈಲೈಟ್ಸ್: |
|
http://Visit : www.suddidina.com
ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?
ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.
ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.
ಹೊಸ ಸಾಲಿನಲ್ಲೂ ಅದೇ ಕಥೆ
2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.
ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ
ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.
2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.
2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ
- 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
- ಮೊದಲ ಕಂತಿಗೆ ಅನುಮೋದನೆ: 61
- ಪ್ರೋತ್ಸಾಹ ಧನ ಪಾವತಿ: 00
- ಅಪೂರ್ಣ ಅರ್ಜಿಗಳು: 392
- ತಿರಸ್ಕಾರಗೊಂಡ ಅರ್ಜಿಗಳು: 02
ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ
ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.
ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ6 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ4 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ4 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ4 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ


