ರಾಜಕೀಯ
ಇದು ರೈತರ, ಯುವಜನರ ಮತ್ತು ಗ್ರಾಮೀಣ ಭಾರತದ ವಿರೋಧಿ ಬಜೆಟ್ : ಸಿದ್ದರಾಮಯ್ಯ ಕಿಡಿ
ಸುದ್ದಿದಿನ,ಬೆಂಗಳೂರು ; 2019-20ರ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಪತ್ರ ಸಂಪೂರ್ಣವಾಗಿ ರೈತರು, ಯುವಜನರು ಮತ್ತು ಗ್ರಾಮೀಣ ಭಾರತದ ವಿರೋಧಿ ಆಯವ್ಯಯ ಪತ್ರ ಎಂದು ಹೇಳಬಹುದಾಗಿದೆ. ರಾಜಕೀಯ ಕಾರಣಕ್ಕೆ ಈ ಟೀಕೆಯನ್ನು ನಾನು ಮಾಡುತ್ತಿಲ್ಲ. ಯಾರಾದರೂ ಆಯವ್ಯಯ ಪತ್ರವನ್ನು ಓದಿದರೆ ಮೇಲ್ನೋಟಕ್ಕೆ ಈ ಮೂರು ಕ್ಷೇತ್ರಗಳನ್ನು ಕಡೆಗಣಿಸಿರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇಂದು ಮಂಡನೆಯಾದ ಕೇಂದ್ರ ಬಜೆಟ್ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರದ ಸಾಧನೆಗಳನ್ನು ಲೆಕ್ಕಕ್ಕೆ ಇಟ್ಟುಕೊಳ್ಳದೆ ಪ್ರಚಾರ ವೈಭವಕ್ಕೆ ಮರುಳಾಗಿ ಮತಚಲಾಯಿಸಿದರೆ ಏನಾಗುತ್ತದೆ ಎನ್ನುವುದಕ್ಕೆ ಕೇಂದ್ರ ಸರ್ಕಾರದ 2019-20 ಸಾಲಿನ ಆಯವ್ಯಯ ಪತ್ರ ಜ್ವಲಂತ ಸಾಕ್ಷಿ. ಇದರ ಜತೆಗೆ ಮಹಿಳೆಯರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಕೂಡಾ ನಿರ್ಲಕ್ಷಿಸಲಾಗಿದೆ. ದೇಶದ ರೈತರು ಸರಿಯಾದ ಮಳೆ ಇಲ್ಲದೆ, ಬೆಳೆದ ಬೆಳೆಗೆ ಯೋಗ್ಯ ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ. ದೇಶದ ಯುವಜನತೆ ನಿರುದ್ಯೋಗದಿಂದಾಗಿ ದಿಕ್ಕೆಟ್ಟು ಕೂತಿದ್ದಾರೆ. ಈ ಎರಡು ಪ್ರಮುಖ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ನರೇಂದ್ರ ಮೋದಿ ಸರ್ಕಾರ ತಮ್ಮದು ಹೇಗೆ ರೈತ ಮತ್ತು ಯುವಜನ ವಿರೋಧಿ ಪಕ್ಷ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.
ದೇಶಾದ್ಯಂತ ರೈತರು ಸಂಕಷ್ಟದಲ್ಲಿದ್ದಾರೆ. ಒಂದೆಡೆ ಬರಗಾಲ, ಇನ್ನೊಂದೆಡೆ ಬೆಳೆದ ಬೆಳೆಗೆ ಬೆಲೆ ಇಲ್ಲ, ಮತ್ತೊಂದೆಡೆ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಬೇಕಾದ ಅಸಹಾಯಕತೆ. ಕಳೆದ ಐದು ವರ್ಷಗಳಲ್ಲಿ ವಂಚಕ ಉದ್ಯಮಿಗಳನ್ನು ಪೋಷಿಸುತ್ತಾ ರೈತ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿರುವ ಮೋದಿ ಸರ್ಕಾರ ತನ್ನ ರೈತ ವಿರೋಧಿ ನೀತಿಯನ್ನು ಮುಂದುವರಿಸಿಕೊಂಡು ಹೋಗುವ ಸೂಚನೆಯನ್ನು ಆಯವ್ಯಯಪತ್ರದಲ್ಲಿ ನೀಡಿದೆ ಎಂದಿದ್ದಾರೆ.
ರೈತರ ಸಾಲ ಮನ್ನಾ ಮಾಡಬೇಕೆಂದು ಇಡೀ ದೇಶದ ರೈತರು ಒಕ್ಕೊರಲಿನಿಂದ ಮೊರೆ ಇಡುತ್ತಿದ್ದಾರೆ. ರಾಜ್ಯದ ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಈಗಿನ ಮೈತ್ರಿ ಸರ್ಕಾರಗಳೆರಡೂ ರೈತರ ಮೊರೆಗೆ ಓಗೊಟ್ಟು ಸಾಲ ಮನ್ನಾ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದೆ. ಆದರೆ ನರೇಂದ್ರ ಮೋದಿ ಸರ್ಕಾರ ರೈತರ ಮೊರೆ ಕೇಳದೆ ಇರುವಷ್ಟು ಕಿವುಡಾಗಿದೆ.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡಬೇಕೆಂದು ನಾನು ಮುಖ್ಯಮಂತ್ರಿಯಾಗಿದ್ದ ದಿನಗಳಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ವಂಚಕ ಉದ್ಯಮಿಗಳಿಗೆ ಬ್ಯಾಂಕುಗಳ ಖಜಾನೆಯನ್ನು ತೆರೆದಿಟ್ಟು, ಅವರನ್ನು ವಿದೇಶಕ್ಕೆ ಹಾರಲು ಬಿಟ್ಟ ಸರ್ಕಾರ ರೈತರನ್ನು ಮಾತ್ರ ಸತತವಾಗಿ ಸಂಪೂರ್ಣವಾಗಿ ಕಡೆಗಣಿಸುತ್ತಾ ಬಂದಿದೆ ಎಂದು ನುಡಿದಿದ್ದಾರೆ.
ಕೃಷಿ ಬೆಳವಣಿಗೆಗೆ ಪೂರಕವಾಗಿರುವ ನೀರಾವರಿ, ತೋಟಗಾರಿಕೆ, ಸಹಕಾರ ಕ್ಷೇತ್ರಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ನಿರುದ್ಯೋಗ ತಾಂಡವವಾಡುತ್ತಿರುವ ಈ ದಿನಗಳಲ್ಲಿ ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿರುವುದರಿಂದ ನಿರುದ್ಯೋಗದ ಪ್ರಮಾಣ ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ವಲಸೆ ಪ್ರಮಾಣ ಹೆಚ್ಚಾಗಲಿದೆ. ರೈತರ ಆದಾಯವನ್ನು ದುಪ್ಪಟ್ಟುಗೊಳಿಸುತ್ತೇವೆ ಎಂದು ಐದು ವರ್ಷಗಳ ಹಿಂದೆ ಆಶ್ವಾಸನೆ ನೀಡಿದ್ದ ಮೋದಿ ಸರ್ಕಾರ ಈ ಆಯವ್ಯಯ ಪತ್ರದಲ್ಲಿಯೂ ಕೂಡಾ ಅದರ ಬಗ್ಗೆ ಉಲ್ಲೇಖ ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿ ಕೇವಲ 0.3 % ನಷ್ಟು ಮಾತ್ರ ಬಜೆಟ್ ಹಣವನ್ನು ಖರ್ಚು ಮಾಡಿರುವುದು ಸರ್ಕಾರದ ದುರಹಂಕಾರ ನೀತಿಗೆ ಸಾಕ್ಷಿ.
ನೀರಾವರಿ ಕ್ಷೇತ್ರಕ್ಕೆ ಕಳೆದ ನಾಲ್ಕು ವರ್ಷಗಳಲ್ಲಿ 433 ಕೋಟಿ ರೂಪಾಯಿಗಳಷ್ಟು ಕಡಿಮೆ ಖರ್ಚು ಮಾಡಲಾಗಿದೆ. ಮನೆಮನೆಗೆ ಕುಡಿಯುವ ನೀರು ಪೂರೈಸುವ ಆಕರ್ಷಕ ಯೋಜನೆಯನ್ನು ಪ್ರಕಟಿಸಿರುವ ಸರ್ಕಾರ ನೀರು ಸಂಗ್ರಹದ ಬಗ್ಗೆ ಮಾತ್ರ ಏನನ್ನೂ ಹೇಳಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಇಲ್ಲಿಯವರೆಗೆ ನಿರುದ್ಯೋಗ ಪ್ರಮಾಣದ ಬಗ್ಗೆ ಕಣ್ಣು ಮುಚ್ಚಾಲೆ ಆಡುತ್ತಾ ಬಂದಿರುವ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ ನಿರುದ್ಯೋಗದ ಪ್ರಮಾಣ 45 ವರ್ಷಗಳಲ್ಲಿ ಗರಿಷ್ಠ ಮಟ್ಟ ತಲುಪಿದೆ ಎಂದು ಒಪ್ಪಿಕೊಂಡಿದೆ. ನೋಟ್ ಬ್ಯಾನ್, ಕೈಗಾರಿಕಾ ಕ್ಷೇತ್ರದ ಹಿನ್ನಡೆ ಮತ್ತು ಅವೈಜ್ಞಾನಿಕ ಜಿಎಸ್ ಟಿಯಿಂದಾಗಿ ನಿರುದ್ಯೋಗ ಹೆಚ್ಚಾಗಲಿದೆ ಎಂದು ನಮ್ಮ ಪಕ್ಷ ಸಾರಿ ಸಾರಿ ಹೇಳಿದರೂ ಪ್ರಧಾನಿ ಮೋದಿಯವರು ಕಿವಿಗೆ ಹಾಕಿಕೊಂಡಿರಲಿಲ್ಲ. ಈಗ ಅನಿವಾರ್ಯವಾಗಿ ಸರ್ಕಾರ ತಪ್ಪೊಪ್ಪಿಕೊಂಡಿದೆ ಎಂದು ಟೀಕಿಸಿದ್ದಾರೆ.
ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ಎನ್ನುವುದು ಹಣಕಾಸ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತಿಳಿದಿರಬೇಕು. ತಂತ್ರ-ಮಂತ್ರದಿಂದ ಚುನಾವಣೆ ಗೆಲ್ಲಬಹುದೇನೋ, ಆದರೆ ಉದ್ಯೋಗವನ್ನು ಸೃಷ್ಟಿಸಲಾಗುವುದಿಲ್ಲ. ಮತ್ತೆ ಮತ್ತೆ ಕೌಶಲಾಭಿವೃದ್ಧಿಯ ಜಪ ಮಾಡುವ ಮೋದಿ ಸರ್ಕಾರ ಉದ್ಯೋಗ ಸೃಷ್ಟಿಗೆ ನಿರ್ದಿಷ್ಟ ಯೋಜನೆಗಳನ್ನು ರೂಪಿಸಲು ಸೋತಿದೆ ಎಂದು ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಆರೋಗ್ಯ ಕ್ಷೇತ್ರ ಕೂಡಾ ನಿರ್ಲಕ್ಷ್ಯಕ್ಕೀಡಾಗಿದೆ. ಬಹುಪ್ರಚಾರದ ರಾಷ್ಟ್ರೀಯ ಆರೋಗ್ಯ ಮಿಷನ್ ಗೆ ಕಳೆದ ಐದು ವರ್ಷಗಳಲ್ಲಿ ಶೇಕಡಾ 13ರಷ್ಟು ಹಣ ಕಡಿತಗೊಳಿಸಲಾಗಿದೆ. ಜಿಡಿಪಿಯ ಶೇಕಡಾ 3ರಷ್ಟು ಹಣವನ್ನು ಆರೋಗ್ಯ ಕ್ಷೇತ್ರಕ್ಕೆ ನೀಡಬೇಕೆಂಬುದು ನಮ್ಮ ಪಕ್ಷದ ಬೇಡಿಕೆಯಾಗಿತ್ತು. ಇದೇ ರೀತಿ ಶಿಕ್ಷಣ ಕ್ಷೇತ್ರ ಕೂಡಾ ಅವಗಣನೆಗೆ ಒಳಗಾಗಿದೆ.
ಜಾಗತಿಕವಾಗಿ ತೈಲಬೆಲೆ ಕಡಿಮೆಯಾಗುತ್ತಿದ್ದರೂ ನರೇಂದ್ರ ಮೋದಿ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಎರಡು ರೂಪಾಯಿಗಳಷ್ಟು ಏರಿಸಿದೆ. ಇದೊಂದು ಅನಗತ್ಯ ಬೆಲೆ ಹೆಚ್ಚಳವಾಗಿದ್ದು ಇದರಿಂದ ಸಹಜವಾಗಿಯೇ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಲಿದೆ, ಸಾರಿಗೆ ದುಬಾರಿಯಾಗಲಿದೆ, ಇದರಿಂದ ಸಾಮಾನ್ಯ ಜನರ ಕಷ್ಟಗಳು ಹೆಚ್ಚಾಗಲಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಓರ್ವ ಮಹಿಳೆಯಾಗಿ ಮಹಿಳಾ ಕಲ್ಯಾಣ ಕ್ಷೇತ್ರವನ್ನೇ ನಿರ್ಲಕ್ಷಿಸಿದ್ದಾರೆ. ಕಳೆದೆರಡು ವರ್ಷಗಳಲ್ಲಿ ಮಹಿಳಾಕಲ್ಯಾಣ ಕಾರ್ಯಕ್ರಮಗಳಿಗೆ ಸುಮಾರು 2000 ಕೋಟಿ ರೂಪಾಯಿ ಅನುದಾನವನ್ನು ಕಡಿತಗೊಳಿಸಲಾಗಿದೆ. ಹೊಸ ಆಯವ್ಯಯ ಪತ್ರದಲ್ಲಿ ಕೂಡಾ ಉತ್ತೇಜನಕಾರಿಯಾಗಿರುವ ಯಾವ ಕಾರ್ಯಕ್ರಮಗಳನ್ನು ನೀಡಲಾಗಿಲ್ಲ ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ.
ತಮಗಿರುವ ಬಹುಮತದ ಬಲದಿಂದ ತಾವು ನಡೆದದ್ದೇ ದಾರಿ ಎಂಬ ದುರಹಂಕಾರ ಸರ್ಕಾರದ ನಡೆಯಲ್ಲಿ ಕಾಣಬಹುದಾಗಿದೆ. ದೇಶದ ಜನತೆಗೆ ತಮ್ಮ ತಪ್ಪಿನ ತಿಳುವಳಿಕೆಯನ್ನು ಸರ್ಕಾರವೇ ಮಾಡಿಕೊಟ್ಟಿದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’
ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.
ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.
ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ2 days agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ3 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ3 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ17 hours agoಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

