ದಿನದ ಸುದ್ದಿ
ಅರಣ್ಯ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು : ಅರಣ್ಯ ಮಂತ್ರಿಗಳಿಗೆ ಬೃಂದಾ ಕಾರಟ್ ಪತ್ರ
ಇದು ಕೇಂದ್ರೀಕರಣ, ವ್ಯಾಪಾರೀಕರಣ, ಖಾಸಗೀಕರಣ ಮತ್ತು ಅಪರಾಧೀಕರಣದ ನೀಲನಕ್ಷೆ
ಅರಣ್ಯ ಕಾಯ್ದೆ, 1927ಕ್ಕೆ ಸರಕಾರ ಸೂಚಿಸಿರುವ ಕರಡು ತಿದ್ದುಪಡಿಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅವನ್ನು ಹಿಂತೆದುಕೊಳ್ಳಬೇಕು. ಅದರ ಬದಲಿಗೆ, ಈ ಕಾಯ್ದೆಯನ್ನು ಅರಣ್ಯ ಹಕ್ಕುಗಳ ಕಾಯ್ದೆ ಮತ್ತು ಬುಡಕಟ್ಟು ಸಮುದಾಯಗಳು ಎದುರಿಸುತ್ತಿರುವ ಚಾರಿತ್ರಿಕ ಅನ್ಯಾಯಗಳನ್ನು, ಈಗ ಒಂದೆಡೆಯಲ್ಲಿ ಅಭಿವೃದ್ಧಿಯ ಹೆಸರಲ್ಲಿ, ಮತ್ತೊಂದೆಡೆಯಲ್ಲಿ ಸಂರಕ್ಷಣೆಯ ಹೆಸರಲ್ಲಿ ಆಧುನಿಕ ಸ್ವರೂಪಗಳಲ್ಲಿ ಎಸಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಲು ಯತ್ನಿಸಿರುವ ಇತರ ಕಾಯ್ದೆಗಳಿಗೆ ಸರಿಹೊಂದುವ ರೀತಿಯಲ್ಲಿ ತರುವುದೇ ಅರಣ್ಯ ಸಂರಕ್ಷಣೆಯ ಹಿತರಕ್ಷಣೆಯ ದೃಷ್ಟಿಯಿಂದ ಉತ್ತಮ ಎಂದು ಸಿಪಿಐ(ಎಂ) ಪೊಲಿಟ್ಬ್ಯುರೊ ಸದಸ್ಯರಾದ ಬೃಂದಾ ಕಾರಟ್ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಿ ಪ್ರಕಾಶ ಜಾವ್ಡೇಕರ್ ಅವರಿಗೆ ಜುಲೈ 9 ರಂದು ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಮಂತ್ರಾಲಯ ಚರ್ಚೆಗೆ ಬಿಡುಗಡೆ ಮಾಡಿರುವುದು ಅರಣ್ಯ ಕಾಯ್ದೆ, 1927ಕ್ಕೆ ತಿದ್ದುಪಡಿಗಳ ಮೊದಲ ಕರಡನ್ನು ಮಾತ್ರವಾದರೂ, ಲೋಕಸಭೆಯಲ್ಲಿ ಜೂನ್ 28ರಂದು ಪ್ರಕಾಶ್ ಜಾವ್ಡೇಕರ್ ಈ ಕುರಿತು ಸಲ್ಲಿಸಿರುವ ಲಿಖಿತ ಹೇಳಿಕೆ ಬಹಳಷ್ಟು ದಾರಿ ತಪ್ಪಿಸುವಂತದ್ದು. “ನೀವು ತಿದ್ದುಪಡಿಗಳನ್ನು ಸಮರ್ಥಿಸಿ ಕೊಂಡಿದ್ದೀರಿ. ಈ ಕಾಯ್ದೆಯಲ್ಲಿರುವ ಅತ್ಯಂತ ದಮನಕಾರಿ ಕ್ರಮಗಳನ್ನು ಅಷ್ಟೇನೂ ಮುಖ್ಯವಲ್ಲ ಎಂದು ಬದಿಗೆ ಸರಿಸುವ ಪ್ರಯತ್ನ ಮಾಡಿದ್ದೀರಿ, ಅದರಲ್ಲೂ ಬುಡಕಟ್ಟು ಸಮುದಾಯಗಳ ಹಕ್ಕುಗಳನ್ನು ದಮನಮಾಡುತ್ತಿರುವುದನ್ನು ಉಪೇಕ್ಷಿಸಿದ್ದೀರಿ. ಆದ್ದರಿಂದ ಈ ತಿದ್ದುಪಡಿಗಳ ಬಗ್ಗೆ ಹೆಚ್ಚು ವಿವರವಾದ ವಿಮರ್ಶೆಯನ್ನು ತಮಗೆ ಕೊಡುವುದು ಅಗತ್ಯ ಎಂದು ನನಗನಿಸಿದೆ. ಇದು ಸಂಸತ್ತಿಗೆ ಒಂದು ಹೆಚ್ಚು ಸರಿಯಾದ ಚಿತ್ರವನ್ನು ಕೊಡಲು ನೆರವಾಗಬಹುದು” ಎಂದು ಈ ಪತ್ರವನ್ನು ಬರೆದಿರುವುದಕ್ಕೆ ಕಾರಣವನ್ನು ತಿಳಿಸುತ್ತ ಬೃಂದಾ ಕಾರಟ್ ಹೇಳಿದ್ದಾರೆ.
1927ರ ಅರಣ್ಯ ಕಾಯ್ದೆ ಬ್ರಿಟಿಶ್ ವಸಾಹತುಶಾಹಿಗಳಿಗೆ ಭಾರತದ ಅರಣ್ಯಗಳ ಮೇಲೆ ಅವರ ಸರಕಾರದ ಒಡೆತನವನ್ನು ಸ್ಥಾಪಿಸುವ ಒಂದು ಸಾಧನವಾಗಿತ್ತು. ಈ ಕಾಯ್ದೆಯ ಮೂಲಕ ಅವರು ಬುಡಕಟ್ಟು ಸಮುದಾಯಗಳು ಅತಿಕ್ರಮಣಕಾರರು ಎಂದು ಸಾರಿದರು. ಈ ಸಮುದಾಯಗಳ ವಿರುದ್ಧ ಚಾರಿತ್ರಿಕ ಅನ್ಯಾಯಗಳಿಗೆ ಈ ಮೂಲಕ ಕಾನೂನಿನ ಮಂಜೂರಾತಿಯನ್ನು ಪಡೆಯಲಾಯಿತು. ಈಗ ಸೂಚಿಸಿರುವ ತಿದ್ದುಪಡಿಗಳು, ಕೆಲವು ಸಂಪೂರ್ಣ ಹೊಸದಾದ ವಿಭಾಗಗಳನ್ನೂ ಹೊಂದಿದ್ದು, ಈ 91 ಅಂಶಗಳು ಅರಣ್ಯ ಸಂರಕ್ಷಣೆಯನ್ನು ಮಿಲಿಟರೀಕರಿಸಿ ಬ್ರಿಟಿಶರನ್ನೂ ಮೀರಿಸಿವೆ, ಅವರು ಧೈರ್ಯಸಾಲದೆ ಮಾಡದಿರುವುದನ್ನೂ ಮಾಡ ಹೊರಟಿದೆ.
ಈ ತಿದ್ದುಪಡಿಗಳು ಬುಡಕಟ್ಟು ಬದುಕಿನ ಪ್ರತಿಯೊಂದು ಆಯಾಮವನ್ನೂ ಅಪರಾಧೀಕರಿಸಿವೆ, ಅರಣ್ಯ ಅಧಿಕಾರಶಾಹಿಗೆ ವಾರಂಟ್ ನೀಡದೆಯೇ ಬಂಧಿಸುವ, ಕಾನೂನು ಜಾರಿಗೊಳಿಸಲು ಶಸ್ತ್ರಾಸ್ತ್ರಗಳ ಬಳಕೆಗೂ ಲಂಗುಲಗಾಮಿಲ್ಲದ ಅಧಿಕಾರಗಳನ್ನು ಕೊಟ್ಟಿದೆ. ಪ್ರಸ್ತಾವಿತ ರಾಷ್ಟ್ರೀಯ ಅರಣ್ಯ ಮಂಡಳಿಯಲ್ಲಿ ಸೇನಾಪಡೆಗಳ ಮುಖ್ಯಸ್ಥರನ್ನು ಒಬ್ಬ ಸದಸ್ಯರಾಗಿ ಸೂಚಿಸಿರುವುದು ಈ ದಮನಕಾರೀ ನಿಲುವಿನ ಸಂಕೇತವಾಗಿದೆ. ಬಹುಶಃ ಭಾರತದ ಸೇನಾಧಿಪತಿಗಳು ಈಗ ದೇಶದ ಗಡಿಗಳ ಬದಲು ಅರಣ್ಯಗಳನ್ನು ರಕ್ಷಿಸುವುದು ಹೇಗೆ ಎಂಬ ಚರ್ಚೆಗೆ ಸಮಯ ಕೊಡಬೇಕಾಗಿದೆ ಎಂದು ಈ ಬಗ್ಗೆ ಬರೆಯುತ್ತ ಬೃಂದಾ ಅವರು ಗೇಲಿ ಮಾಡಿದ್ದಾರೆ.
ಇನ್ನೊಂದೆಡೆಯಲ್ಲಿ, ಅರಣ್ಯಗಳ ನಿರ್ವಹಣೆಗೆ, ಸಂರಕ್ಷಣೆಗೆ, ಕಾಯ್ದುಕೊಳ್ಳಲಿಕ್ಕೆ ಮತ್ತು ಬುಡಕಟ್ಟು ಹಕ್ಕುಗಳಿಗೆ ಎಷ್ಟೊಂದು ಅನಿವಾರ್ಯವಾದ ಗ್ರಾಮಸಭೆಗಳ, ಅದರಲ್ಲೂ ಬುಡಕಟ್ಟು ಪ್ರದೇಶಗಳಲ್ಲಿನ ಗ್ರಾಮಸಭೆಗಳ ಪಾತ್ರವನ್ನು ಅಳಿಸಿ ಬಿಡಲಾಗಿದೆ ಎಂಬುದನ್ನು ಎತ್ತಿ ತೋರುತ್ತ ಬೃಂದಾ ಕಾರಟ್ ಈ ತಿದ್ದುಪಡಿಗಳು ಕೇಂದ್ರೀಕರಣ, ವ್ಯಾಪಾರೀಕರಣ ಮತ್ತು ಅಪರಾಧೀಕರಣದ ಒಂದು ನೀಲನಕ್ಷೆ ಎಂದು ಟೀಕಿಸಿದ್ದಾರೆ. ಅರಣ್ಯ ಸಂರಕ್ಷಣೆ ಈ ತಿದ್ದುಪಡಿಗಳ ಘೋಷಿತ ಗುರಿ.
ಆದರೆ ಇವು ಆ ಗುರಿಸಾಧನೆಗೆ ನೆರವಾಗುವುದಿಲ್ಲ. ತದ್ವಿರುದ್ಧವಾಗಿ, ಇವು ಅರಣ್ಯ ಹಕ್ಕುಗಳ ಕಾಯ್ದೆಯಲ್ಲಿ, 2006ರಲ್ಲಿ ತಿದ್ದುಪಡಿಗೊಂಡ ವನ್ಯ ಪ್ರಾಣಿಗಳ ರಕ್ಷಣಾ ಕಾಯ್ದೆಯಲ್ಲಿ, ಪರಿಶಿಷ್ಟ ಪ್ರದೇಶಗಳಿಗೆ ಪಂಚಾಯತ್ ವಿಸ್ತರಣೆ ಕಾಯ್ದೆ(ಪಿಎಇಎಸ್ಎಎ), ಭೂಸ್ವಾಧೀನ ಮತ್ತು ಮರುವಸತಿ ಕಾಯ್ದೆ,2013ರಲ್ಲಿ ಮಾತ್ರವಲ್ಲ, ಸಂವಿಧಾನದ ಶೆಡ್ಯೂಲ್ 5 ಮತ್ತು 6ರಲ್ಲಿ ಮಾನ್ಯ ಮಾಡಿರುವ ಬುಡಕಟ್ಟುಗಳು ಮತ್ತು ಇತರ ಪಾರಂಪರಿಕ ಅರಣ್ಯವಾಸಿಗಳ ಈಗಿರುವ ಹಕ್ಕುಗಳನ್ನು ಅಳಿಸಿ ಹಾಕುತ್ತವೆ.
ಮೇಲೆ ಹೇಳಿದಂತೆ, ಈ ತಿದ್ದುಪಡಿಗಳು ಹೇಗೆ ಕೇಂದ್ರೀಕರಣ, ವ್ಯಾಪಾರೀಕರಣ ಮತ್ತು ಅಪರಾಧೀಕರಣದ ನೀಲನಕ್ಷೆ ಎಂಬುದಕ್ಕೆ ವಿವರಗಳನ್ನೂ ಈ ಪತ್ರ ಒಳಗೊಂಡಿದೆ. ಇನ್ನೂ ಗಮನಾರ್ಹ ಸಂಗತಿಯೆಂದರೆ, ಬುಡಕಟ್ಟು ಜನಗಳ ಹಕ್ಕುಗಳ ಪ್ರಶ್ನೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ ಎಂಬುದನ್ನು ಪ್ರಕಾಶ ಜಾವ್ಡೇಕರ್ ಅವರಿಗೆ ಬೃಂದಾ ಕಾರಟ್ ಈ ಪತ್ರದಲ್ಲಿ ನೆನಪಿಸಬೇಕಾಗಿ ಬಂದಿದೆ.
“ಆದ್ದರಿಂದ ಈ ತಿದ್ದುಪಡಿಗಳು, ಒಟ್ಟಿನಲ್ಲಿ, ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ ಮತ್ತು ನಿರ್ದಿಷ್ಟವಾಗಿ ಬುಡಕಟ್ಟು ಜನಗಳ ಹಕ್ಕುಗಳನ್ನು, ಒಟ್ಟಾರೆಯಾಗಿ ಪಾರಂಪರಿಕ ಅರಣ್ಯವಾಸಿಗಳ ಹಕ್ಕುಗಳನ್ನು ರಕ್ಷಿಸುವ ಕಾನೂನು ಚೌಕಟ್ಟಿಗೆ ವ್ಯತಿರಿಕ್ತವಾಗಿವೆ. ಅಲ್ಲದೆ, ಬುಡಕಟ್ಟು ಹಕ್ಕುಗಳು ತಮ್ಮ ಮಂತ್ರಾಲಯದ ಕಾರ್ಯವ್ಯಾಪ್ತಿಗೆ ಸೇರಿದ್ದಲ್ಲ, ಅವು ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವ್ಯಾಪ್ತಿಗೆ ಸೇರಿದವುಗಳು. ಆದರೂ ಈ ತಿದ್ದುಪಡಿಗಳ ಮೂಲಕ ತಮ್ಮ ಮಂತ್ರಾಲಯ ಬುಡಕಟ್ಟು ಹಕ್ಕುಗಳಿಗೆ ಸಂಬಂಧಪಟ್ಟ ಎಲ್ಲ ಶಾಸನಗಳನ್ನು ಮೀರಿ ನಿಲ್ಲಲು, ಅವನ್ನೆಲ್ಲ ಈ ಪ್ರಸ್ತಾವಿತ ಕಾಯ್ದೆಗೆ ಅಧೀನಗೊಳಿಸಲು ಪ್ರಯತ್ನಿಸುತ್ತಿದೆ. ಇದು ಯಾವುದೇ ರೀತಿಯಲ್ಲಿ ಒಪ್ಪತಕ್ಕಂತದ್ದಲ್ಲ” ಎಂದು ಬೃಂದಾ ಕಾರಟ್ ಪ್ರಕಾಶ ಜಾವ್ಡೇಕರ್ ಅವರಿಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.
( ಈ ವಾರದ ಜನಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ4 hours agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ26 minutes agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ

