ದಿನದ ಸುದ್ದಿ
ದಾವಣಗೆರೆ | ಸಂವಿಧಾನವನ್ನು ಅರ್ಥೈಸಿಕೊಳ್ಳುವುದು ಕಥೆ ಕಾದಂಬರಿ ಓದಿದಂತಲ್ಲ : ನ್ಯಾ.ನಾಗಮೋಹನ ದಾಸ್
ಸುದ್ದಿದಿನ,ದಾವಣಗೆರೆ : ದೇಶದ ಬಹುತ್ವವನ್ನು ರಕ್ಷಿಸಿಕೊಂಡು ಬರುತ್ತಿರುವ ನಮ್ಮ ಸಂವಿಧಾನವನ್ನು ಪ್ರತಿಯೊಬ್ಬರೂ ಓದಿ, ಅರ್ಥೈಸಿಕೊಂಡು ಅದರಂತೆ ನಡೆಯಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಕರೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ, ಸಹಯಾನ ಮತ್ತು ಸಮುದಾಯ ಕರ್ನಾಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಜು. 19 ರ ರಂದು ನಗರದ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ಸಂವಿಧಾನ ಓದು ಕಾರ್ಯಗಾರ’ ಉದ್ಘಾಟಿಸಿ ಮಾತನಾಡಿ, ಪಿಪಿಟಿ ಪ್ರದರ್ಶನದ ಮೂಲಕ ಭಾರತ ಸಂವಿಧಾನ ರಚನೆ, ಮೂಲತತ್ವಗಳು-ಸವಾಲುಗಳು ಕುರಿತು ವಿವರಣೆ ನೀಡಿದರು.
ರಾಜಕೀಯ ಅಧಿಕಾರ ಎಂದರೇನು ಎಂಬುದನ್ನು ತಿಳಿಯಬೇಕು. ಕಾನೂನು ಮಾಡುವುದು ಶಾಸಕಾಂಗ, ಇದನ್ನು ಜಾರಿಗೆ ತರುವುದು ಕಾರ್ಯಾಂಗ ಮತ್ತು ಈ ಕಾನೂನುಗಳನ್ನು ಉಲ್ಲಂಘನೆ ಮಾಡಿದರೆ ಶಿಕ್ಷಿಸುವುದು ನ್ಯಾಯಾಂಗ. ಈ ಅಂಗಗಳ ಕಾರ್ಯವೈಖರಿ ನಿಯಂತ್ರಿಸುವುದು ಸಂವಿಧಾನ. ಹಿಂದೆ ರಾಜರುಗಳ ಕೈಯಲ್ಲಿ ಈ ಎಲ್ಲ ಅಧಿಕಾರಿಗಳಿದ್ದವು. ಕ್ರಮೇಣ ಪ್ರಜಾಪ್ರಭುತ್ವ ವ್ಯವಸ್ಥೆ ಬಂತು. ಇಂದು 199 ರಾಷ್ಟ್ರಗಳ ಪೈಕಿ 190 ರಾಷ್ಟ್ರಗಳು ತಮ್ಮದೇ ಆದ ಸಂವಿಧಾನವನ್ನು ಹೊಂದಿವೆ.
ನಾವು ನಮ್ಮ ಸಂವಿಧಾನವನ್ನು ಓದಿ ಅರ್ಥೈಸಿಕೊಂಡು ಅದರಂತೆ ನಡೆಯಬೇಕು. ಈ ನಿಟ್ಟಿನಲ್ಲಿ ಕಳೆದ 10 ವರ್ಷಗಳಲ್ಲಿ ಪಠ್ಯದಲ್ಲಿ ಅಳವಡಿಸಿರುವ ಸಂವಿಧಾನವನ್ನು ವಿದ್ಯಾರ್ಥಿಗಳು ಕೇವಲ 35 ಅಂಕ ಪಡೆಯುವ ಉದ್ದೇಶದಿಂದ ಓದುತ್ತಿದ್ದಾರೆ. ಹೀಗಾದರೆ ಇದನ್ನು ಅರ್ಥೈಸಿಕೊಂಡು ಇದರ ಆಶಯಗಳನ್ನು ಮೈಗೂಡಿಸಿಕೊಳ್ಳಲು ಹೇಗೆ ಸಾಧ್ಯ. ಸಂವಿಧಾನವನ್ನು ಎಲ್ಲರೂ ತಿಳಿಯಬೇಕೆಂಬ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂವಿಧಾನ ಓದು ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದರು.
ಭಾರತ 1947 ರಲ್ಲಿ ಸ್ವಾತಂತ್ರ್ಯ ಪಡೆದ ದೇಶ. 1950 ರಲ್ಲಿ ವಿಶ್ವದಲ್ಲೇ ಅತಿದೊಡ್ಡ ಮತ್ತು ಮಹತ್ತರವಾದ ಸಂವಿಧಾನವನ್ನು ರಚಿಸಿತು. ಸಂವಿಧಾನ ಜಾರಿಯಾದ ಈ 70 ವರ್ಷಗಳಲ್ಲಿ ನಾವು ಸಾಧಿಸಿದ್ದೇನು ಎಂಬ ಪ್ರಶ್ನೆಗೆ ಉತ್ತರ ಹಿಂದೆ ಸುಮಾರು 600 ರಾಜರು ನಮ್ಮನ್ನು ಆಳುತ್ತಿದ್ದರು. ಅದು ಬದಲಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದು, ದೇಶಕ್ಕೆ ಗಡಿ ನಿಗದಿಯಾಗಿ, ಸಂವಿಧಾನ ಬಂದ ನಂತರ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಕಟ್ಟಲಾಯಿತು. ರಾಜಕೀಯ, ಸಾಮಾಜಿಕ, ಆರ್ಥಿಕ, ಸಾಂಸ್ಕøತಿಕ, ಶೈಕ್ಷಣಿಕ ಹೀಗೆ ಅನೇಕ ವಲಯಗಳಲ್ಲಿ ಉತ್ತಮ ಬದಲಾವಣೆಗಳನ್ನು ಕಂಡಿದ್ದೇವೆ. ಬಡತನ ಕಡಿಮೆಯಾಗಿದೆ, ಶಿಕ್ಷಣ ಮಟ್ಟ ಹೆಚ್ಚಿದೆ, ಮಹಿಳೆ, ದಲಿತರು, ಬುಡಕಟ್ಟು ಜನಾಂಗ, ಅಲ್ಪಸಂಖ್ಯಾತರು ಅಭಿವೃದ್ದಿ ಹೊಂದುತ್ತಿದ್ದಾರೆ. ಇಂದು ಎಲ್ಲ ಕ್ಷೇತ್ರದಲ್ಲಿ ಮಹಿಳೆ ಇದ್ದಾಳೆ. ಹಿಂದುಳಿದ, ಕೆಳಜಾತಿಯವರು ಉನ್ನತ ಸ್ಥಾನಲ್ಲಿದ್ದಾರೆ ಎಂದರೆ ಇದಕ್ಕೆ ಸಂವಿಧಾನ ಕೊಟ್ಟ ಅವಕಾಶಗಳೇ ಕಾರಣ. ಆದರೆ ಇಂತಹ ಸಂವಿಧಾನದ ಮಹತ್ವ ಅರಿಯಬೇಕಿದೆ. ಇದನ್ನು ಓದಿ ಅದರಂತೆ ನಡೆಯುವ ತುರ್ತು ಇದೆ.
ಸಂವಿಧಾನವನ್ನು ಅರ್ಥೈಸಿಕೊಳ್ಳುವುದು ಕಥೆ ಕಾದಂಬರಿ ಓದಿದಂತಲ್ಲ. ಭಾರತ ದೇಶವನ್ನು ತಿಳಿಯದೇ ಭಾರತದ ಸಂವಿಧಾನವನ್ನು ತಿಳಿಯಲು ಸಾಧ್ಯವಿಲ್ಲ. ದೇಶದ ಜನರು ಇಲ್ಲಿಯ ಇತಿಹಾಸ, ಧರ್ಮ, ಜಾತಿ, ಸಾಮಾಜಿಕ ಸಂಬಂಧಗಳು, ಆರ್ಥಿಕ ಸಂಬಂಧಗಳು, ಮೌಲ್ಯ, ಸಂಸ್ಕøತಿ ತಿಳಿಯದೇ ಸಂವಿಧಾನ ತಿಳಿಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ದೇಶವನ್ನು ತಿಳಿಯಬೇಕೆಂದರು.
ದೇಶದ ಬಹುತ್ವವನ್ನು ರಕ್ಷಿಸುತ್ತಿರುವ ನಮ್ಮ ಸಂವಿಧಾನವನ್ನು ತಿಳಿಯಬೇಕಾದರೆ ಮೊದಲು ನಮ್ಮ ದೇಶವನ್ನು ತಿಳಿಯಬೇಕು. ಸುಮಾರು 4635 ಜನಾಂಗಗಳು, 325 ಭಾಷೆಗಳು, 25 ಲಿಪಿಗಳೊಂದಿಗೆ ಸಹಜೀವನ ನಡೆಸುತ್ತಿರುವ ಬಹುತ್ವದ ದೇಶ ನಮ್ಮದು. ಈ ಬಹುತ್ವ ಅರ್ಥವಾಗಬೇಕಾದರೆ ನಮ್ಮ ಮೂಲ ನಮಗೆ ತಿಳಿಯಬೇಕು. ನಮ್ಮ ಸಾಮಾಜಿಕ, ಆರ್ಥಿಕ ಸಂಬಂಧಗಳು ಅರ್ಥವಾಗದೇ ಹೋದರೆ ಕಲ್ಯಾಣ ರಾಜ್ಯದ ಅರ್ಥ ಆಗುವುದಿಲ್ಲ. ನಮ್ಮದು ಹಳ್ಳಿಗಳ ದೇಶ. ಸುಮಾರು 6.50 ಲಕ್ಷ ಹಳ್ಳಿಗಳಿವೆ. ದೇಶದಲ್ಲಿ ಮಿಶ್ರ ಆರ್ಥಿಕತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಮಲ್ಟಿ ನ್ಯಾಷನಲ್, ಟ್ರಾನ್ಸ್ನ್ಯಾಷನಲ್ ಕಂಪೆನಿಗಳು ಕೇವಲ ಮಾರುಕಟ್ಟೆಯನ್ನಲ್ಲ ಬದಲಾಗಿ ಮನಸ್ಸುಗಳನ್ನು ನಿಯಂತ್ರಿಸುತ್ತಿರುವುದನ್ನು ಅರ್ಥ ಮಾಡಿಕೊಳ್ಳಬೇಕಿದೆ.
ಸಮಾನತೆ, ಧರ್ಮ, ಅಹಿಂಸೆ, ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಧಾರವಾಗಿದ್ದು, ಸಂವಿಧಾನ ಬಂದ ನಂತರ ಅನೇಕ ಉತ್ತಮ ಬದಲಾವಣೆಗಳು ಆಗಿವೆ. ಆದರೂ ನಮ್ಮ ಮುಂದೆ ಇಂದಿಗೂ ಅನೇಕ ಸವಾಲುಗಳು ಮತ್ತು ಸಮಸ್ಯೆಗಳಿವೆ. ಅನೇಕರು ಸಂವಿಧಾನವನ್ನೇ ದೂಷಿಸುತ್ತಿದ್ದಾರೆ. ದೋಷ ಇರುವುದು ಸಂವಿಧಾನದಲ್ಲಲ್ಲ. ಬದಲಾಗಿ ಇದನ್ನು ಅನುಷ್ಟಾನಗೊಳಿಸುವವರಲ್ಲಿದೆ.
ಎಲ್ಲರೂ ಸಂವಿಧಾನ ಅರ್ಥೈಸಿಕೊಂಡು ಅದರಂತೆ ನಡೆಯುವಲ್ಲಿ ಹೆಜ್ಜೆ ಇಡಬೇಕಿದೆ. ಈ ಸಂವಿಧಾನವನ್ನು ಉಳಿಸಿಕೊಂಡರೆ ಮಾತ್ರ ಸವಾಲು ಮತ್ತು ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕುಲಕರ್ಣಿ ಅಂಬಾದಾಸ್ ಜಿ, ದೇಶದಲ್ಲಿ ಪ್ರತಿ ಧರ್ಮಗಳಿಗೆ ಇರುವ ಒಂದೊಂದು ಪವಿತ್ರ ಗ್ರಂಥಗಳಂತೆ ಇಡೀ ಭಾರತ ದೇಶಕ್ಕೆ ಸಂವಿಧಾನ ಒಂದು ಪವಿತ್ರ ಗ್ರಂಥವಾಗಿದೆ. ಸಂವಿಧಾನವನ್ನು ಪ್ರತಿಯೊಬ್ಬರು ಓದಿ, ಅರ್ಥೈಸಿಕೊಂಡು ಮತ್ತೊಬ್ಬರಿಗೆ ಓದುವ ಹಾಗೆ ಉತ್ತೇಜಿಸಬೇಕು. ಸಂವಿಧಾನವನ್ನು ಓದಿ ತಿಳಿದುಕೊಂಡಲ್ಲಿ ಅಪರಾಧಗಳು ನಡೆಯುವುದು ಕಡಿಮೆಯಾಗುತ್ತವೆ ಎಂದರು.
ಸಂವಿಧಾನ ಮೂಲಭೂತ ಹಕ್ಕುಗಳೊಂದಿಗೆ ಮೂಲಭೂತ ಕರ್ತವ್ಯಗಳನ್ನು ನೀಡಿದ್ದು, ಅವುಗಳನ್ನು ನಿರ್ವಹಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಪ್ರಮುಖ ಜವಾಬ್ದಾರಿಯಾಗಿದೆ. ಕಾರ್ಯಾಗಾರದಲ್ಲಿ ಭಾಗವಹಿಸಿರುವ ಶಿಕ್ಷಕರು ಸಂವಿಧಾನವನ್ನು ಓದಿಕೊಂಡು ವಿದ್ಯಾರ್ಥಿಗಳು ಸಂವಿಧಾನ ಓದಿ ತಿಳಿಯುವಂತೆ ಪ್ರೇರೇಪಿಸಬೇಕು. ಆಗ ಈ ಕಾರ್ಯಕ್ರಮ ಆಯೋಜಿಸಿದಕ್ಕೂ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಮಾತನಾಡಿ, ಇಂದು ಸಂವಿಧಾನ ಓದು ಅಭಿಯಾನ ಕೈಗೊಳ್ಳುವ ಮೂಲಕ ಸಾಮಾನ್ಯರ ಕೈಗೆ ಸಂವಿಧಾನ ಓದು ಪುಸ್ತಕ ದೊರಕುವಂತೆ ಮಾಡಿರುವ ನ್ಯಾಯಾಮೂರ್ತಿ ನಾಗಮೋಹನ್ ದಾಸ್ರವರ ಕಾರ್ಯ ಶ್ಲಾಘನೀಯ. ಇವರು ನಮ್ಮ ಸಂವಿಧಾನದ ಕುರಿತು ಅತ್ಯಂತ ಸರಳವಾಗಿ ಬರೆದು ಎಲ್ಲರಿಗೂ ದೊರಕುವಂತೆ ಮಾಡಿದ್ದಾರೆ. ಈ ಪುಸ್ತಕ ಭಾರತದ ಇತಿಹಾಸದೊಂದಿಗೆ ತುಲನಾತ್ಮಕವಾಗಿ ರಚಿತವಾಗಿದ್ದು ಕಥಾ ಪುಸ್ತಕದಂತೆ ಓದಿಸಿಕೊಂಡು ಹೋಗುತ್ತದೆ. ಇಂತಹ ಪುಸ್ತಕಗಳು ಎಲ್ಲಾ ಶಾಲಾ ಮಕ್ಕಳ ಕೈಯಲ್ಲಿದ್ದರೆ ಮಕ್ಕಳಿಗೆ ಪ್ರಾರಂಭದಿಂದಲೇ ಸಂವಿಧಾನದ ಕುರಿತು ಪ್ರಜ್ಞೆ ಬೆಳೆಯುತ್ತದೆ. ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಒಬ್ಬರು ಇಂದು ಸಾಮಾನ್ಯರ ನಡುವೆ ಬಂದು ಸಂವಿಧಾನ ಓದು ಎನ್ನುವ ಅಭಿಯಾನಕ್ಕೆ ಕೈಜೋಡಿಸುತ್ತಿರುವುದಕ್ಕೆ ಅಭಿನಂದನೀಯವಾಗಿದ್ದು ಅವರ ಈ ಸಾಮಾಜಿಕ ಕಾಳಜಿಗೆ ಯಶಸ್ಸು ಸಿಗಲೆಂದು ಆಶಿಸಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಹೆಚ್.ಅರುಣಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಕಾನೂನುಗಳ ತಾಯಿಯಾಗಿರುವ ನಮ್ಮ ಸಂವಿಧಾನವನ್ನು ಅತ್ಯಂತ ಸರಳವಾಗಿ, ಅರ್ಥವಾಗುವ ರೀತಿಯಲ್ಲಿ ಪುಸ್ತಕ ಬರೆದು, ಅದರ ಕುರಿತು ರಾಜ್ಯಾದ್ಯಂತ ಅಭಿಯಾನದ ಮೂಲಕ ತಿಳಿಸುತ್ತಿರುವ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ರವರು ಉತ್ತಮ ವಾಗ್ಮಿ ಮತ್ತು ಸಾಹಿತಿ ಆಗಿದ್ದು, ನ್ಯಾಯಾಮೂರ್ತಿ ನಾಗಮೋಹನ್ದಾಸ್ ಇವರು ಹುಟ್ಟಿದ್ದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಹೆಬ್ಬಣ್ಣಿ ಗ್ರಾಮದಲ್ಲಿ 1952 ಫೆ. 12 ರಂದು. ತಂದೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎನ್.ನಾಗಪ್ಪ, ತಾಯಿ ಪಾರ್ವತಮ್ಮ. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ, ಅಖಿಲ ಭಾರತ ವಕೀಲರ ಸಂಘಟನೆ, ಯಂಗ್ ಅಡ್ವೊಕೇಟ್ಸ್ ಫೋರಂ ಮತ್ತು ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯಲ್ಲಿ ಸದಸ್ಯರಾಗಿ, ಕಾರ್ಯದರ್ಶಿಯವಾಗಿ ಸಕ್ರಿಯ ಪಾತ್ರವಹಿಸಿದ್ದಾರೆ ಎಂದರು.
ಜಿ.ಪಂನ ಸಿಇಓ ಹೆಚ್.ಬಸವರಾಜೇಂದ್ರ, ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು.ಎನ್.ಬಡೀಗೇರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಟಿ. ಮಂಜುನಾಥ್, ಹಿರಿಯ ಸಿವಿಲ್ ನ್ಯಾಯಾಧೀಶ ಕೆಂಗಬಾಲಯ್ಯ, ಸರ್ಕಾರಿ ಅಭಿಯೋಜಕ ವಿ.ಎಸ್.ಪಾಟೀಲ್, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಡಿಎಚ್ಓ ಡಾ.ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿಜಯ್ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ಶಾಲೆಗಳ ಶಿಕ್ಷಕರು, ಆಶಾಕಾರ್ಯಕರ್ತೆರು, ವಕೀಲರು ಸೇರಿದಂತೆ ಇತರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.
ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.
ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.
ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ22 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

