Connect with us

ಲೈಫ್ ಸ್ಟೈಲ್

ಜಾನುವಾರುಗಳ ಗೆರಸಲು(ಕಾಲು-ಬಾಯಿ ಜ್ವರ) ರೋಗವೂ, ಕರುವುಗಲ್ಲಮ್ಮ ದೇವತೆಯೂ….

Published

on

ಮ್ಮದು ರೈತಾಪಿ ಕುಟುಂಬ. ಕೃಷಿ ಕೆಲಸ ಮತ್ತು ಕರಾವಿಗಾಗಿ ನಮ್ಮ ಮನೆಯಲ್ಲಿ ಸದಾ ಒಂದು ಜೊತೆ ನಾಟಿ ಹಸುಗಳು ಮತ್ತು ಕರುಗಳು ಇರುತ್ತಿದ್ದವು. ಅವುಗಳನ್ನು ನಾವು ಸಾಕುತ್ತಿದ್ದೆವು ಎಂಬುದಕ್ಕಿಂತಲೂ ಆ ‘ಜೀವಧನ’ಗಳು ನಮ್ಮನ್ನು ಸಾಕುತ್ತಿದ್ದವು ಎಂದು ಹೇಳಿದರೆ ಸರಿಯಾದೀತು. ಜಾನುವಾರುಗಳನ್ನು ನಮ್ಮ ಪೂರ್ವಿಕರು ‘ಜೀವಧನ’ ಎಂದು ಕರೆದಿರುವುದು ಅನ್ವರ್ಥಕವಾಗಿದೆ. ಜೀವಧನ ಎಂದರೆ ಜೀವಂತ ಹಣ! ಈ ಜೀವಧನಗಳು ಜೀವಂತ ಹಣ ಮಾತ್ರವಾಗಿರದೆ ಹಣಕ್ಕಿಂತಲೂ ಮಿಗಿಲಾಗಿ ನಮ್ಮ ಜೀವಭಾವದೊಂದಿಗೆ ನಂಟು ಬೆಸೆದುಕೊಂಡಿರುತ್ತಿದ್ದವು. ಜಾನುವಾರುಗಳನ್ನು ನೋಟುಗಳ ರೂಪದ ಆರ್ಥಿಕ ದೃಷ್ಟಿಯಿಂದ ನೋಡುವುದೇ ಅಮಾನವೀಯ ಅನ್ನಿಸುತ್ತದೆ. ಪುರಾತನ ಕಾಲದ ಚೇಗಿದ ಮರವೊಂದನ್ನು ನಾವು ಹಣದ ರೂಪದಲ್ಲಿ ಬೆಲೆಕಟ್ಟಲು ಹೋದರೆ, ಆ ಮರವು ಇಷ್ಟೂ ದೀರ್ಘ ವರ್ಷಗಳ ಕಾಲ ನೀಡಿದ ನೆರಳು, ಒದಗಿಸಿದ ಆಶ್ರಯ, ಕಣ್ಮನಗಳಿಗೆ ತಂಪು ತುಂಬಿದ ಸೌಂದರ್ಯ, ಪಸರಿಸಿದ ಗಾಳಿಗಮಲು, ಕರುಣಿಸಿದ ಹಣ್ಣುಹಂಪಲು ಮುಂತಾದವುಗಳಿಗೆ ಯಾವ ಬೆಲೆ ಕಟ್ಟಲು ಸಾಧ್ಯ?

ದನಕರು ಕುರಿಮೇಕೆ ಕೋಳಿಗಳನ್ನು ಸಾಕುತ್ತಾ ಅವುಗಳೊಂದಿಗೆ ನಾವು ಬದುಕು ಕಟ್ಟಿಕೊಂಡಿದ್ದೆವು. ಅವುಗಳು ಖಾಯಿಲೆ-ಕಸಾಲೆ ಮುಂತಾದ ಕಾರಣಗಳಿಂದ ಅಕಾಲ ಮರಣಕ್ಕೀಡಾದರೆ ನಮ್ಮದೇ ಕಳ್ಳುಬಳ್ಳಿಯನ್ನು ಕಳೆದುಕೊಂಡಂತೆ ತೀವ್ರ ದುಃಖ ನಮ್ಮನ್ನು ಆವರಿಸುತ್ತಿತ್ತು. ಜಾನುವಾರುಗಳಿಗೆ ಬಾಧಿಸುವ ಗೆರಸಲು ರೋಗ (ಕಾಲು – ಬಾಯಿ ಜ್ವರ), ಕುಂದು, ಚಪ್ಪೆರೋಗ ಮುಂತಾದವು ಕಾಣಿಸಿಕೊಂಡರಂತೂ ನಮ್ಮ ಕರುಳು ಬಾಯಿಗೆ ಬಂದಂತೆ ನಡುಗಿಹೋಗುತ್ತಿದ್ದೆವು. ಅವುಗಳ ನರಳಾಟ ನೋಡಿ ಕಣ್ಣೀರಾಕುತ್ತಿದ್ದ ನನ್ನ ಅಪ್ಪ, ಊಟ ನೀರು ನಿದ್ದೆ ಎಲ್ಲವನ್ನೂ ಬಿಟ್ಟು ಒದ್ದಾಡುತ್ತಿದ್ದ. ತನಗೆ ತೋಚಿದ ಗಿಡಮೂಲಿಕೆ ಮುಂತಾದ ಮುದ್ದುಗಳನ್ನು ಬಳಸುವುದರ ಜೊತೆಗೆ, ರೋಗಪೀಡಿತ ದನಗಳಿಗೆ ನಾಟಿ ಔಷಧ ನೀಡುವ ಪಂಡಿತರನ್ನು ಹುಡುಕಾಡಿಕೊಂಡು ಅಲೆದಾಡುತ್ತಿದ್ದ. ತಿಗಳರ ಬೈಲಪ್ಪ, ಬುಡ್ಡೆ ಈರಣ್ಣ, ಮಂತ್ರವಾದಿ ವೆಂಕಟಸ್ವಾಮಯ್ಯ, ಬಡಗಿ ಮುದ್ಧಣ್ಣ ಮುಂತಾದ ಪಂಡಿತರು ನಮ್ಮೂರ ದನಗಳಿಗೆ ನಾಟಿಮದ್ದು ನೀಡುತ್ತಿದ್ದರು. ನಾಟಿಮದ್ದು ಕೊಡಿಸುವುದರ ಜೊತೆಗೆ ಇಂಗ್ಲೀಷ್ ಔಷಧವನ್ನೂ ಕೊಡಿಸಬೇಕೆಂದು ಆಲೋಚಿಸುತ್ತಿದ್ದ ನಾನು, ನಮ್ಮೂರಿನಲ್ಲಿಯೇ ಇದ್ದ ಪಶುಸಂಗೋಪನೆ ಇಲಾಖೆಯ ಸರ್ಕಾರಿ ಪಶು ಚಿಕಿತ್ಸಾಲಯದ ‘ದನಿನ ಡಾಕ್ಟರ್’ ಡಾ.ಹುಲಿಯಪ್ಪನ ಬರುವಿಕೆಗಾಗಿ ದಾರಿ ಕಾಯುತ್ತಾ ಆಸ್ಪತ್ರೆಯ ಬಾಗಿಲಲ್ಲಿ ನಿಲ್ಲುತ್ತಿದ್ದೆ.

ಪುಟಗೋಸಿ ಬಿಗಿಮಾಡಿಕೊಂಡು ಲಾಡಿದಾರದಲ್ಲಿಯೋ ಉಡುದಾರದಲ್ಲಿಯೋ ಕಟ್ಟಿಕೊಂಡಿದ್ದ ಪುಡಿಕಾಸನ್ನು ಔಷಧ ಇಂಜೆಕ್ಷನ್ ಪೌಡರ್ ಮುಂತಾದವುಗಳಿಗಾಗಿ ಅಪ್ಪ ಸುರಿಯುತ್ತಿದ್ದ. ಅಮ್ಮನೂ ತನ್ನ ಕೂಲಿನಾಲಿಯ ದುಡ್ಡನ್ನು ಎಲೆಅಡಕೆಯ ಸಂಚಿಯಿಂದ ತೆಗೆದು ಕೊಡುತ್ತಿದ್ದಳು. ದಿಕ್ಕುದೇವರುಗಳಿಗೆಲ್ಲಾ ಕಾಸಿನ ಮುಡುಪು ಕಟ್ಟಿ ಹರಕೆ ಹೊರುತ್ತಿದ್ದಳು. ವಿಶೇಷವಾಗಿ ಮುದುಗೆರೆ ಸಪ್ಪಲಮ್ಮ ಹಾಗೂ ಮಚ್ಚೇನಹಳ್ಳಿ(ದನಿನ) ಮಾರಮ್ಮ ದೇವರ ಹೆಸರುಗಳಲ್ಲಿ ಹರಿಷಿಣದ ಬಟ್ಟೆಯಲ್ಲಿ ಮುಡುಪು ಕಟ್ಟಿದ ಕಾಸನ್ನು ದೇವರ ಪಟದ ಮುಂದಿನ ಮೊಳೆ ಅಥವಾ ನಿಲದ(ನೆಲುವು) ನೇಕೆಹುರಿಗಳಿಗೆ ಗಂಟು ಹೂಡುತ್ತಿದ್ದಳು.ಸ್ಥಳೀಯ ದೇವರ ಗುಡಿಗಳಿಗೆ ಹೋಗಿ ಪೂಜೆ ಮಾಡಿಸಿ ತೆಂಗಿನಕಾಯಿಯ ತೀರ್ಥವನ್ನು ದನಗಳ ಮೈಮೇಲೆ, ನಮಗೆ ಮತ್ತು ಕೊಟ್ಟಿಗೆಗೆ ಚುಮುಕಿಸಿ ಎಲ್ಲರ ಹಣೆಗಳಿಗೂ ಬೊಟ್ಟಿಕ್ಕುತ್ತಿದ್ದಳು.

ಗೆರಸಲು ರೋಗ ಅಥವಾ ಕಾಲು- ಬಾಯಿ ಜ್ವರ ಎಂಬ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಒಂದು ರೋಗಗ್ರಸ್ತ ರಾಸಿನಿಂದ ಇನ್ನೊಂದು ಆರೋಗ್ಯವಂತ ರಾಸಿಗೆ ನೇರ ಸಂಪರ್ಕದಿಂದಲೂ, ಮೂತ್ರ ಗಂಜಳದ ವಾಸನೆ ತುಂಬಿಕೊಂಡ ಗಾಳಿಯ ಮೂಲಕವೂ ಹರಡಿಕೊಂಡು ಇಡೀ ಊರಿನ ಜಾನುವಾರುಗಳಿಗೆ ಅತೀ ಶೀಘ್ರವಾಗಿ ಹಬ್ಬಿಬಿಡುತ್ತಿತ್ತು. ಕಲುಷಿತಗೊಂಡ ಮೇವು ಮತ್ತು ಮಲೆತ ನೀರನ್ನು ಸೇವಿಸುವುದರ ಮೂಲಕವೂ ಗೆರಸಲು ರೋಗಾಣುಗಳು ಹರಡುತ್ತವೆಂಬ ವೈಜ್ಞಾನಿಕ ತಿಳಿವಳಿಕೆ ಇರದಿದ್ದ ನಮ್ಮ ಪೂರ್ವಿಕರು, ಇವೆಲ್ಲವೂ ದೇವರುಗಳೇ ತಂದೊಡ್ಡುವ ದೊಡ್ಡ ರೋಗಗಳೆಂದು ನಂಬಿದ್ದರು.

ನಮ್ಮದು ಚಿಕ್ಕ ಮನೆ. ದನಗಳ ಗ್ವಾಂದಿಗೆ ಎದುರಿನಲ್ಲಿಯೇ ನಾವು ರಾತ್ರಿ ಹೊತ್ತು ಮಲಗಿರುತ್ತಿದ್ದೆವು. ದನಗಳು ಒಮ್ಮೊಮ್ಮೆ ಹಾಯ್ದಾಡುತ್ತಾ ಕೊಂಬುಗಳಿಂದ ಬಡಿದಾಡಿಕೊಂಡರೆ ಸಾಕು ಅಪ್ಪ ದಡಕ್ಕನೆ ಎದ್ದು ಕೂರುತ್ತಿದ್ದ. ಹಾಯ್ದಾಡುವ ದನಗಳನ್ನು ನಾವು ಸಾಕಿದ್ದೇ ಅಪರೂಪ. ನಮ್ಮ ಮನೆಯಲ್ಲಿದ್ದದ್ದು ಹಸುಮಕ್ಕಳಂತಹ ದನಗಳು. ನಾನು ಒಮ್ಮೊಮ್ಮೆ ನೇರವಾಗಿ ಹಸುವಿನ ಕೆಚ್ಚಲಿಗೆ ಬಾಯಿಹಾಕಿ ಹಾಲು ಕುಡಿಯುತ್ತಿದ್ದೆನು. ನಮ್ಮ ಮನೆಯಲ್ಲಿದ್ದ ದನಗಳು ಅಂತಹ ಸಾಧುಜೀವಿಗಳಾಗಿದ್ದವು. ಇಂಥಾ ಹಸುಗಳಿಗೆ ಗೆರಸಲು ರೋಗ ತಗುಲಿದಾಗ ರೋಗಗ್ರಸ್ತ ರಾಸಿನಲ್ಲಿ ಮೊದಲಿಗೆ ತೀವ್ರ ಜ್ವರ ಕಾಣಿಸುಕೊಂಡು ಮೇವು ತಿನ್ನುವುದನ್ನು ನಿಲ್ಲಿಸಿಬಿಡುತ್ತಿತ್ತು. ಬಾಯಲ್ಲಿ ನೊರೆ ಎಂಜಲು ಸುರಿಸಿಕೊಂಡು ಮೂಗಿನಲ್ಲಿ ಸಿಂಬಳ ಸುರಿಸಿಕೊಂಡು ನೀರನ್ನೂ ಕೂಡಾ ಮುಟ್ಟದೆ ಮೈಕೂದಲು ಮುಳ್ಳೆದ್ದು ನಿಂತುಬಿಡುತ್ತಿತ್ತು.

ನಾವು ಹಾಲಿಂಡುವ ಮಾತಿರಲಿ ಕರುವಿಗೂ ಹಾಲೂಡುವುದನ್ನು ನಿಲ್ಲಿಸುತ್ತಿದ್ದ ಹಸುವಿಗೆ ನೋಡನೋಡುತ್ತಲೇ ಕಾಲು ಕುಂಟು ಬೀಳುತ್ತಿತ್ತು. ಮುಸುಡಿಯ ಮೇಲೆ ಚಿಕ್ಕ ಚಿಕ್ಕ ಗುಳ್ಳೆಗಳೆದ್ದು ಆ ಗುಳ್ಳೆಗಳೊಡೆದು ಬಾಯಿಯ ಜೊಲ್ಲು ವಾಸನೆ ನಮ್ಮ ಮನೆ ತುಂಬಾ ಹರಡಿಕೊಳ್ಳುತ್ತಿತ್ತು. ನನ್ನ ಅಪ್ಪನು ಹಸುವಿನ ಬಾಯಿಯನ್ನು ಭದ್ರವಾಗಿ ಹಿಡಿದು ಕೈಗಳಿಂದ ಮುಸುಡಿಯನ್ನು ವಸಡುಗಳನ್ನೂ ಅಗಲವಾಗಿ ತೆಗೆದು ಬಾಯಿಯ ಮತ್ತು ನಾಲಗೆಯ ಹುಣ್ಣುಗಳನ್ನು ಗಮನಿಸುತ್ತಿದ್ದ. ವಸಡು ನಾಲಗೆ ಮುಸುಡಿಯ ಮೇಲೆಲ್ಲಾ ಅಲ್ಸರ್ ಬೊಬ್ಬೆಗಳೆದ್ದು ಈರುಳ್ಳಿ ಪೊರೆ ತೆಗೆದಂತೆ ಅಲ್ಸರ್ ಪೊರೆಯುದುರಿದ ಜಾಗಗಳೆಲ್ಲಾ ಕೆಂಪಗೆ ಕಾಣಿಸುತ್ತಿದ್ದವು. ಚಿಕ್ಕ ಮಕ್ಕಳಾಗಿದ್ದ ನಾವು, ನಮ್ಮ ಹಸುವಿಗೆ ಒದಗಿದ ಪಾಡನ್ನು ಕಂಡು ಮನೆ ತುಂಬಾ ಅಳುತ್ತಿದ್ದೆವು. ನಾವು ಎಷ್ಟೇ ಪ್ರಯತ್ನಸಿದರೂ ಆ ಹಸು ಮೇವು ತಿನ್ನಲು ನೀರು ಕುಡಿಯಲು ನಿರಾಕರಿಸುತ್ತಿತ್ತು. ಪಾದಗಳ ಗೊರಸಿನ ಸೀಳುಗಳಲ್ಲಿಯೂ ಹುಣ್ಣುಗಳಾಗಿ ನೊಣ ಸೊಳ್ಳೆ ಜೀರುಂಡೆಗಳು ಕುಳಿತು ಹುಣ್ಣುಗಳು ದೊಡ್ಡ ವ್ರಣಗಳಾಗಿ ಹುಳುಗಳು ಬೀಳುತ್ತಿದ್ದವು. ಕೆಲವೊಮ್ಮೆ ಮೊಲೆತೊಟ್ಟು ಮತ್ತು ಕೆಚ್ಚಲಿಗೂ ಗುಳ್ಳೆಗಳು ಹಬ್ಬುತ್ತಿದ್ದವು.

ಅಪ್ಪನು ಬೆಟ್ಟ ಗುಡ್ಡ ಬಯಲು ಅಲೆದಾಡಿ ಲೋಳೆಸರ (ಆಲೋವೆರಾ) ತಂದು ಬೆಂಬೂದಿಯಲ್ಲಿ ಸುಟ್ಟು, ಹಿಂಡಿ ತೆಗೆದ ರಸವನ್ನು ದನಗಳ ಬಾಯಿ ನಾಲಗೆ ವಸಡು ಗೊರಸುಗಳ ಮೇಲೆ ಸವರಿ ಬಿಳಿ ಪಾವುಡದಲ್ಲಿ ಒರೆಸುತ್ತಿದ್ದ. ಗೊರಸಿನ ಗಾಯಗಳನ್ನು ಬಿಸಿನೀರಿನಲ್ಲಿ ತೊಳೆದು, ಸೀಳುಗಳಿಗೆ ಹೊಂಗೆಣ್ಣೆ, ಹಿಪ್ಪೆ ಎಣ್ಣೆ ಅಥವಾ ಬೇವಿನೆಣ್ಣೆ ಸುರಿಯುತ್ತಿದ್ದೆವು ಕೋಳಿಪುಕ್ಕ ಅಥವಾ ಗರಿಕೆ ಎಸಳನ್ನು ಬೇವಿನೆಣ್ಣೆಯಲ್ಲಿ ಅದ್ದಿ ಸೀಳುಸೀಳಿಗೂ ಹಚ್ಚಿದರೆ ನೊಣ ಕೂರುತ್ತಿರಲಿಲ್ಲ. ಗುಡಾಣದಲ್ಲಿ ಬಿಸಿನೀರು ಕಾಯಿಸಿ ಮೈತೊಳೆಯುತ್ತಿದ್ದೆವು. ಬಲು ಎಚ್ಚರದಿಂದ ದನದ ಕೊಟ್ಟಿಗೆಯಲ್ಲಿ ತೆಂಗಿನ ಗರಿಗಳಿಗೆ ಬೆಂಕಿ ಹಚ್ಚಿ ಧಗಧಗಿಸುವ ಜ್ವಾಲೆಯ ಮೇಲೆ ಬೇವಿನಸೊಪ್ಪು ಲಕಲಿಸೊಪ್ಪು ತಂಗಡಿಸೊಪ್ಪು ಕಕ್ಕೆಸೊಪ್ಪು ಮುಂತಾದ ನಾಲ್ಕಾರು ಬಗೆಯ ಹಸಿರು ತೊಪ್ಪಲು ಹಾಕಿ ಉರಿಸಿ ಹೊಗೆ ತುಂಬಿಸಿ, ಹಸಿರೆಲೆ ಹೊಗೆಯ ಕಾವಿನಲ್ಲಿ ದನಗಳನ್ನು ನಿಲ್ಲಿಸುತ್ತಿದ್ದೆವು.

ಗೆರಸಲು ರೋಗದಿಂದ ನಮ್ಮ ಹಸುಗಳು ನರಳುವಾಗ ಅಮ್ಮನು ಮೂರ್ನಾಲ್ಕು ಸೇರಿನಷ್ಟು ಹುರುಳಿಕಾಳನ್ನು ನೀರಿನಲ್ಲಿ ನೆನೆಸಿ, ರುಬ್ಬು ಗುಂಡಿನಿಂದ ರುಬ್ಬಿ ಹುರುಳಿಕಾಳಿನ ಹಾಲನ್ನು ಸೋಸಿಕೊಡುತ್ತಿದ್ದಳು. ಕೆಲವೊಮ್ಮೆ ರಾಗಿ ಅಂಬಲಿಯನ್ನು ಕಾಯಿಸಿ ತಂದುಕೊಡುತ್ತಿದ್ದಳು. ಅಪ್ಪ ಅದೆಲ್ಲವನ್ನೂ ಬಿದಿರಿನ ಗೊಟ್ಟದಿಂದ ದನಗಳಿಗೆ ಕುಡಿಸುತ್ತಿದ್ದ. ಸ್ವಲ್ಪ ಚೇತರಿಕೆ ಕಾಣಿಸಿದಾಗ ಹಸಿ ಹುಲ್ಲು, ಹುರುಳಿ ಹೊಟ್ಟು, ತೊಗರಿ ಹೊಟ್ಟು, ಅವರೆ ಹೊಟ್ಟು, ಸಾವೆ ಹುಲ್ಲು, ಆರಕದ ಹುಲ್ಲು, ಕೊರಲೆ ಹುಲ್ಲು ಮುಂತಾದ ಮೆತ್ತನೆ ಮೇವನ್ನು ತಿನ್ನಿಸುತ್ತಿದ್ದ. ನಾನು ನನ್ನ ಅಕ್ಕ ಮತ್ತು ತಮ್ಮಂದಿರು ಹಸಿ ಹುಲ್ಲನ್ನು ಹೊಲಮಾಳದಲ್ಲಿ ಕಿತ್ತು ತರುತ್ತಿದ್ದೆವು. ಅಂತೂ ಇಂತೂ ನಾಟಿಮದ್ದು, ಇಂಗ್ಲೀಷ್ ಮದ್ದು, ದೇಶಿಜ್ಞಾನದ ಚಿಕಿತ್ಸೆ, ಮೆತ್ತನೆಯ ಮೇವು ಮುಂತಾದ ಆರೈಕೆಗಳು ಫಲಿಸಿ ನಮ್ಮ ದನಗಳು ಮತ್ತೆ ಹೊಸ ಜೀವಕಳೆ ತುಂಬಿಕೊಳ್ಳುತ್ತಿದ್ದವು.ನಮ್ಮ ಮುಖದಲ್ಲೂ ನಗು ತರಿಸಿ ಬದುಕಿಗೆ ಕಳೆ ತುಂಬುತ್ತಿದ್ದವು.

ಇಲ್ಲಿ ನನ್ನದೇ ಅನುಭವಗಳನ್ನು ದಾಖಲಿಸಲು ನನಗೆ ಪ್ರೇರಣೆ ನೀಡಿದ್ದು ನಾನು ಇತ್ತೀಚೆಗೆ ಸಂಶೋಧಿಸಿದ ಒಂದು ಜಾನಪದ ಸ್ಥಳಪುರಾಣ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿ ದೇವರತೋಪು ಎಂಬ ಗ್ರಾಮದಲ್ಲಿರುವ ಕರುವುಗಲ್ಲಮ್ಮ ಎಂಬ ಗೋಕಲ್ಲನ್ನು ಕುರಿತ ಈ ಸ್ಥಳಪುರಾಣವು ಹದಿಮೂರು ಶತಮಾನಗಳಷ್ಟು ಹಿಂದಕ್ಕೆ ಸರಿಯುತ್ತದೆ. ಜಯಮಂಗಲಿ ನದಿಯ ತಟದಲ್ಲಿರುವ ದೇವರತೋಪು ಗ್ರಾಮದ ಪುರಾತನ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಅಂಗಳದಲ್ಲಿರುವ ಕರುವುಗಲ್ಲು ಆ ಊರಿನ ಹುಟ್ಟಿನ ಕಥೆಯನ್ನು ಹೇಳುತ್ತದೆ.

ಸೀಮಾಂಧ್ರದ ರಾಯಲಸೀಮಾ ಕರ್ನೂಲು ಜಿಲ್ಲೆಯ ಆಹೋಬಲಂ ಮೂಲದ ವೈಷ್ಣವ ಪಂಥೀಯ ಕಾಪುರೆಡ್ಡಿ ಸಮುದಾಯದ ಕೆಲವು ಕುಟುಂಬಗಳು ಆರು ಎತ್ತಿನ ಬಂಡಿಗಳನ್ನು ಕಟ್ಟಿಕೊಂಡು ದಕ್ಷಿಣ ಮಾರ್ಗವಾಗಿ ಮಧುಗಿರಿ ಸೀಮೆಗೆ ವಲಸೆ ಬಂದರು. ಕಡಪ – ಕದಿರಿ ಮಾರ್ಗವಾಗಿ ಪಿನಾಕಿನಿ ನದಿಯ ತೋಳುಗಳನ್ನಿಡಿದು ತಮ್ಮ ವಲಸೆ ದಾರಿಯನ್ನು ಮುಂದುವರೆಸಿ ನಡೆಯುತ್ತಿರುವಾಗ ಪಿನಾಕಿನಿಯು ಮೈದುಂಬಿದಳು.ಕುಲದೇವತೆಯಾದ ಆಹೋಬಲ ನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿದ ಅವರು, ಪಿನಾಕಿನಿಯನ್ನು ಪ್ರಾರ್ಥಿಸಲು ಮೈದುಂಬಿ ಹರಿಯುತ್ತಿದ್ದ ಅವಳು ಬಂಡಿಜಾಡಿನಷ್ಟು ಓಣಿಯನ್ನು ಬಿಟ್ಟು ಹರಿದಳು. ಬಂಡಿಗಳು ಸಾಗಲು ಬಂಡಿಜಾಡಿನಷ್ಟು ಅಗಲ ಅವಕಾಶ ನೀಡಿದ ಪಿನಾಕಿನಿಗೆ ಕೈಮುಗಿದು ಪ್ರಯಾಣ ಮುಂದುವರೆಸಿದ ಕಾಪುರೆಡ್ಡಿಗಳು ದೊಡ್ಡದಾಳವಟ್ಟ ಎಂಬ ಊರಿನ ಸಮೀಪಕ್ಕೆ ಬಂದು ತಲುಪಿದಾಗ ಸಂಜೆಯಾಗಿತ್ತು. ಬಂಡಿಗೆ ಹೂಡಿದ್ದ ಬಿಳಿ ಎತ್ತೊಂದು ಸತ್ತ ಕಾರಣ ಬಿಳಿ ಎತ್ತುಗಳ ಬಂಡಿಗಳಲ್ಲಿದ್ದ ಕುಟುಂಬದವರೆಲ್ಲರೂ ಅಲ್ಲಿಯೇ ಹಳ್ಳದ ದಿಡ್ಡೆಯಲ್ಲಿ ನೆಲೆಸಬೇಕೆಂದು ಹಾಗೂ ಕರಿ ಎತ್ತಿನ ಬಂಡಿಗಳ ಕುಟುಂಬಗಳು ತಮ್ಮ ಪ್ರಯಾಣವನ್ನು ಮುಂದಕ್ಕೆ ಬೆಳೆಸಬೇಕೆಂದು ತೀರ್ಮಾನಿಸಲಾಯಿತು. ಬಿಳಿ ಎತ್ತಿನ ಬಂಡಿಯ ಕುಟುಂಬಗಳು ಅಲ್ಲಿಯೇ ನೆಲೆಸಿ ತಮ್ಮ ಕುಲದೇವತೆ ನರಸಿಂಹಸ್ವಾಮಿಯ ಗುಡಿಯನ್ನು ಕಟ್ಟಿಕೊಂಡರು.

ಕರಿ ಎತ್ತಿನ ಬಂಡಿಯಲ್ಲಿದ್ದ ಕಾಪುರೆಡ್ಡಿ ಕುಟುಂಬದವರು ಕೊಡಿಗೇನಹಳ್ಳಿ ಹತ್ತಿರದ ತೋಪಿಗೆ ಬಂದಾಗ ಜಯಮಂಗಲಿಯು ಮೈದುಂಬಿ ಹರಿಯುತ್ತಿದ್ದಳು. ಆ ರಾತ್ರಿ ಅಲ್ಲಿಯೇ ಒಲೆಗುಂಡು ಹೂಡಿ ಅಟ್ಟುಂಡು ಬೆಳಗಾದಾಗ ಪ್ರಯಾಣ ಮುಂದುವರಿಸಲೆಂದು ಬಂಡಿಹೂಡಲು ಹೋದಾಗ ಕರಿ ಎತ್ತೊಂದು ತಾನು ಕಳೆದುಕೊಂಡ ಬಿಳಿ ಎತ್ತನ್ನು ನೆನೆದು ದುಃಖಿಸುತ್ತಾ ಮೇವು ನೀರು ಸೇವಿಸುವುದನ್ನು ನಿರಾಕರಿಸಿತು. ಜ್ವರ ಬಂದು ಬಂಡಿಯ ನೊಗಕ್ಕೆ ಹೆಗಲು ಕೊಡಲೊಪ್ಪದೆ ಪಡಾವು ಮಲಗಿಬಿಟ್ಟಿತು. ಆಗ ಬಿಳಿ ಎತ್ತಿನ ನೆನಪಿಗಾಗಿ ಬೆಣಚುಕಲ್ಲಿನ ಬಿಳಿ ಗೋಕಲ್ಲನ್ನು ತಂದು ನಿಲ್ಲಿಸಲು ದುಃಖ ಮರೆತ ಆ ಎತ್ತು ಲವಲವಿಕೆಯಿಂದ ಮೇವುಕಚ್ಚಿ ನೊಮರು ಹಾಕಿತು. ಮೈದುಂಬಿ ಹರಿಯುತ್ತಿದ್ದ ಜಯಮಂಗಲಿ ನದಿಯ ದಂಡೆಯಲ್ಲಿ ತಮ್ಮ ಕುಲದೇವತೆಯಾದ ಲಕ್ಷ್ಮೀನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿ ಅವನಿಗೊಂದು ಗುಡಿಯನ್ನು ಕಟ್ಟಿ ಅಲ್ಲಿಯೇ ನೆಲೆಸಿದರು.

ಮುಂದೆ ಕರಿ ಎತ್ತು ತೀರಿಕೊಂಡಾಗ ಅದನ್ನು ಅಲ್ಲಿಯೇ ಸಮಾಧಿ ಮಾಡಿದರು. ಅಂದು ಸಮಾಧಿಗುಡ್ಡೆಯ ಗುರುತಿಗೆ ನೆಟ್ಟ ಗೋಕಲ್ಲು ಅಂದಿನಿಂದಲೂ ಕರುವುಗಲ್ಲಮ್ಮ ಎಂಬ ಹೆಸರಿನಲ್ಲಿ ಪೂಜಿಸಲ್ಪಡುತ್ತಿದೆ. ಇಲ್ಲಿನ ಸುತ್ತೇಳು ಊರುಗಳ ರೈತಾಪಿಗಳು ತಮ್ಮ ಜಾನುವಾರುಗಳಿಗೆ ಶ್ರೇಯಸ್ಕರವಾಗಲೆಂದು ಹಾಗೂ ಜಾನುವಾರುಗಳಿಗೆ ರೋಗರುಜಿನಗಳು ಬಂದಾಗ ಈ ಗೋಕಲ್ಲಿಗೆ ಹರಕೆ ಹೊತ್ತು ಪೂಜಿಸುತ್ತಿದ್ದಾರೆ. ಕರಿ ಗೋಕಲ್ಲಿನ ಪಕ್ಕದಲ್ಲಿಯೇ ಬಿಳಿ ಗೋಕಲ್ಲು ಕೂಡಾ ಇದೆ. ಇದು ಸ್ಥಳಪುರಾಣ.

ದಕ್ಷಿಣ ಕರ್ನಾಟಕದ ಬಹುತೇಕ ಊರುಗಳಲ್ಲಿ ಕರುವುಗಲ್ಲಮ್ಮ ಹೆಸರಿನಿಂದ ಪೂಜಿಸುವ ಗೋಕಲ್ಲುಗಳಿವೆ. ಜಾನುವಾರುಗಳಿಗೆ ಗೆರಸು ರೋಗ (ಕಾಲು – ಬಾಯಿ ಜ್ವರ) ಬಂದಾಗ, ಪ್ರತಿ ಕುಟುಂಬದ ರೈತರು ಕರುವುಗಲ್ಲಮ್ಮನ ಮೇಲೆ ಕೊಡಗಟ್ಟಲೆ ನೀರು ಸುರಿದು ಪೂಜಿಸುತ್ತಾರೆ. ನೀರು ಹರಿದ ದಾರಿಗುಂಟ ಬುರುದೆಯಲ್ಲಿ ತಮ್ಮ ಜಾನುವಾರುಗಳನ್ನು ಮೂರು ಸುತ್ತು ಓಡಾಡಿಸುತ್ತಾರೆ. ಆಶ್ಚರ್ಯವೆಂಬಂತೆ ಗೊರಸಿನ ಸಂದಿಯಲ್ಲಿ ಹುಣ್ಣುಗಳಾಗಿ ಹುಳು ತುಂಬಿದ ಗೋಪಾದಗಳು ಬುರುದೆ ತುಂಬಿಕೊಂಡು ಹುಳು-ಹುಣ್ಣು ನೀಗಿಕೊಂಡು ಗೆಲುವಾಗುತ್ತಿದ್ದವು. ಮುಸುಡಿಮೂತಿ ನಾಲಗೆಯ ಹುಣ್ಣುಗಳೂ ವಾಸಿಯಾಗಿ ಮೇವು ತಿಂದು ಲವಲವಿಕೆಯಿಂದ ನೊಮರು ಹಾಕುತ್ತಿದ್ದವು.

ಈಗಿನ ಖಾಯಿಲೆ ಮತ್ತು ದೇವರ ಸ್ವರೂಪ ಬೇರೆ ಬೇರೆಯೇ ಆಗಿದೆ.

-ಡಾ.ವಡ್ಡಗೆರೆ ನಾಗರಾಜಯ್ಯ
8722724174

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ23 hours ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ3 days ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ4 days ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ5 days ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ1 week ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

ದಿನದ ಸುದ್ದಿ1 week ago

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ...

ದಿನದ ಸುದ್ದಿ2 weeks ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 weeks ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ2 weeks ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

Trending