ದಿನದ ಸುದ್ದಿ
ದಾವಣಗೆರೆ | ಪ್ರತಿ ತಾಲೂಕಿನಲ್ಲಿ ಗೋಶಾಲೆ ತೆರೆಯಿರಿ : ಎಸ್.ಆರ್. ಉಮಾಶಂಕರ್
ಸುದ್ದಿದಿನ,ದಾವಣಗೆರೆ : ಬರಪೀಡಿತ ತಾಲೂಕುಗಳೆಂದು ಗುರುತಿಸಿರುವ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರೆಯಲು ಹೈಕೋರ್ಟ್ ಆದೇಶಿಸಿದ್ದು, ಅದರಂತೆ ಜಿಲ್ಲೆಯ ಜಗಳೂರು ತಾಲೂಕು ಹೊರತುಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಿ ಒಂದೊಂದು ಗೋಶಾಲೆ ತೆರೆಯುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಆಯೋಜಿಸಿಲಾಗಿದ್ದ ಬರ ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಗಳೂರು ತಾಲ್ಲೂಕಿನಲ್ಲಿ ಈಗಾಗಲೇ ಗೋಶಾಲೆ ತೆರೆಯಲಾಗಿದೆ. ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗದೆ, ಇತರೆ ತಾಲೂಕಗಳಲ್ಲಿ ಮೇವಿನ ಕೊರತೆಯಾಗಿರಬಹುದು. ಅಧಿಕಾರಿಗಳು ನೇರವಾಗಿ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಮೇವಿನ ಕೊರೆತಯ ಬಗ್ಗೆ ಮಾಹಿತಿ ಪಡೆದು ಮೇವು ಒದಗಿಸುವ ಕಾರ್ಯ ಮಾಡಬೇಕು ಎಂದರು.
ಹೈಕೋರ್ಟ್ ಆದೇಶದಂತೆ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆಗಳನ್ನು ತೆರೆದು, ಎರಡು ಲೋಡ್ಗಳಷ್ಟು ಮೇವು ಸ್ಟಾಕ್ ಮಾಡಬೇಕು. ಎರಡು ವಾರಗಳ ಕಾಲ ಕಾಯಿರಿ. ರೈತರು ಗೋಶಾಲೆಗೆ ಬಂದು ಮೇವು ತೆಗೆದುಕೊಂಡು ಹೋದರೆ ಸರಿ ಇಲ್ಲವಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ. ಗೋಶಾಲೆ ಅವಶ್ಯಕತೆ ಇಲ್ಲದಿದ್ದಲ್ಲಿ ಮುಚ್ಚುವ ಕೆಲಸ ಮಾಡಬೇಕು ಎಂದರು.
ಜಗಳೂರು ತಾಲೂಕಿನ ತಹಶೀಲ್ದಾರ್ ತಿಮ್ಮಣ್ಣ ಮಾತನಾಡಿ, ತಾಲೂಕಿನಲ್ಲಿ ಮೇವಿನ ಕೊರತೆ ಹೆಚ್ಚಿರುವ ಮೂರು ಪ್ರದೇಶಗಳಲ್ಲಿ ಗೋಶಾಲೆ ತೆರೆಯಲಾಗಿದೆ. ಇನ್ನುಳಿದ ಎರಡು ಕಡೆಗಳಲ್ಲಿ ಮೇವಿನಬ್ಯಾಂಕ್ ತೆರೆದು ಮೇವಿನ ಕೊರತೆಯನ್ನು ನೀಗಿಸಲಾಗುತ್ತಿದೆ. ಬಳ್ಳಾರಿ, ಕೊಪ್ಪಳ, ರಾಯದುರ್ಗ ಪ್ರದೇಶಗಳಿಂದ ಸಜ್ಜೆ, ಮೆಕ್ಕೆಜೋಳ ಸಪ್ಪೆಯ ಹಸಿ ಮೇವನ್ನು ಪೂರೈಸಲಾಗುತ್ತಿದೆ. ತಾಲೂಕಿನಲ್ಲಿ ಮುಂದಿನ 08 ವಾರಗಳಿಗೆ ಆಗುವಷ್ಟು ಮೇವಿದ್ದು, ಮಳೆ ಬಂದು ಅಲ್ಲಲ್ಲಿ ಮೇವು ಚಿಗುರುತ್ತಿರುವ ಪರಿಣಾಮ ಮುಂದಿನ ದಿನಗಳಲ್ಲಿ ಮೇವಿನ ಕೊರತೆ ಆಗುವ ಸಂಭವವಿಲ್ಲ ಎಂದರು.
ಅಗತ್ಯವಿದ್ದರೆ ಜಗಳೂರು ತಾಲೂಕಿನಲ್ಲಿ ಇನ್ನೊಂದು ಮೇವಿನ ಬ್ಯಾಂಕ್ ತೆರೆದು ರೈತರಿಗೆ ಮೇವು ನೀಡಿ. ಅನುದಾನಕ್ಕಂತೂ ಕೊರತೆಯಿಲ್ಲ. ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರಯಲು ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು. ಮುಂಜಾಗ್ರತ ಕ್ರಮವಾಗಿ ಒಂದು ಅಥವಾ ಎರಡು ಟನ್ಗಳಷ್ಟು ಮೇವು ಸಂಗ್ರಹಿಸಿ ಎರಡು ಸಿಬ್ಬಂದಿಗಳನ್ನು ನಿಯೋಜಿಸಿ ರೈತರು ಬಂದರೆ ಮೇವು ನೀಡಿ. ರೈತರು ಬಾರದಿದ್ದಲ್ಲಿ ಜಿಲ್ಲಾಡಳಿತ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದರು.
ಪ್ರತಿ ತಾಲೂಕಿನ ಇಓ ಮತ್ತು ತಹಶೀಲ್ದಾರ್ಗಳು ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಮೇವಿನ ಕೊರೆತೆ-ಲಭ್ಯತೆ ಕುರಿತು ಪರಿಶೀಲಿಸಿ. ಮೇವು ಬೇಕು ಎನ್ನುವ ರೈತರ ಹೆಸರು ನೊಂದಾಯಿಸಿಕೊಂಡು ಮೊಬೈಲ್ಬ್ಯಾಂಕ್ ಮೂಲಕ ಮೇವು ಒದಗಿಸಿ. ಅಲ್ಲದೇ ಅಲ್ಲಿಯ ರೈತರೊಂದಿಗೆ ಮಿನಿಕಿಟ್ನ ಮಾಹಿತಿ ನೀಡಿ, ಮಿನಿಕಿಟ್ಗಳನ್ನು ವಿತರಿಸಿ. ಮುಂದಿನ ದಿನಗಳಲ್ಲಿ ಅಲ್ಲಿನ ರೈತರಿಂದಲೇ ಮೇವು ಖರೀದಿಸುವ ವ್ಯವಸ್ಥೆ ಮಾಡಿಕೊಳ್ಳಿ. ಇದರಿಂದ ಹಣವು ಉಳಿತಾಯವಾಗಲಿದೆ ಎಂದು ಉಮಾಶಂಕರ್ ಸಲಹೆ ನೀಡಿದರು.
ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಬಿ ಮುದುಗಲ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಯ ಮಳೆಗಿಂತ ಶೇ.34 ರಷ್ಟು ಮಳೆ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ನೀರಾವರಿ ಪ್ರದೇಶದಲ್ಲಿ ಶೇ.5 ಹಾಗೂ ಬೆದ್ದಲು ಪ್ರದೇಶದಲ್ಲಿ ಶೇ.86 ರಷ್ಟು ಬಿತ್ತನೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯು ಮುಸುಕಿನ ಜೋಳ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಯಾಗಿದೆ ನಂತರ ಭತ್ತ, ತೋಟಗಾರಿಕೆಯಲ್ಲಿ ತೆಂಗು ಮತ್ತು ಅಡಿಕೆ ಹೆಚ್ಚಿನ ಬಿತ್ತನೆಯಾಗಿದೆ. ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
ಬೆಳೆವಿಮೆ ಯೋಜನೆಯಡಿ ಈ ಬಾರಿ ಜಿಲ್ಲೆಯಲ್ಲಿ 28 ಸಾವಿರ ರೈತರು ನೊಂದಾಯಿಸಿದ್ದಾರೆ. ಹಿಂದಿನ ವರ್ಷಗಳ ಬೆಳೆವಿಮೆಯ ಮಾಹಿತಿ ಹಾಗೂ ಬಾಕಿ ಹಣದ ಮಾಹಿತಿ ಮತ್ತು ಕಿಸಾನ್ ಸಮ್ಮಾನ್ ಯೋಜನೆ ಕುರಿತು ಮಾಹಿತಿಯನ್ನು ಸಭೆಯಲ್ಲಿ ತಿಳಿಸಿದರು.
ನಗರ ಪ್ರದೇಶಗಳ ಕುಡಿಯುವ ನೀರು ಸರಬರಾಜು ಕುರಿತು ಮಾಹಿತಿ ನೀಡಿದ ಡಿ.ಯು.ಡಿ.ಸಿಯ ಯೋಜನಾ ನಿರ್ದೇಶಕಿ ನಜ್ಮಾ, ನಗರ ಪ್ರದೇಶಗಳಲ್ಲಿ ಎಲ್ಲಿಯೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿಲ್ಲ. ಸದ್ಯಕ್ಕೆ ದಾವಣಗೆರೆ ನಗರದಲ್ಲಿ 41 ವಾರ್ಡ್ಗಳಿಗೆ ವಾರಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನುಳಿದ ಪ್ರದೇಶಗಳಲ್ಲಿ 5 ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ನೀರಿನ ಹಾಹಾಕಾರವಂತೂ ಇಲ್ಲ ಎಂದರು.
ಜಗಳೂರು ತಾಲೂಕಿನಲ್ಲಿ ಇಂದಿಗೂ 77 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕವೇ ನೀರು ಸರಬರಾಜು ಮಾಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಪ್ರದೇಶಗಳಲ್ಲಿ ಚಾನೆಲ್ಗಳಿಗೆ ಭದ್ರಾ ಜಲಾಶಯದ ನೀರು ಬಿಡದ ಪರಿಣಾಮ 27 ಪ್ರದೇಶಗಳಲ್ಲಿ (ಅಣಜಿ, ಆನಗೋಡು, ಮಾಯಕೊಂಡ ಇತರೆ ಪ್ರದೇಶಗಳಲ್ಲಿ) ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತಿತ್ತು. ಕೆಲವು ಪ್ರದೇಶಗಳಲ್ಲಿ ಬೋರ್ವೆಲ್ ಕೊರಸಲಾಗಿದ್ದು, ನೀರು ಸಿಕ್ಕಿದ ತಕ್ಷಣ ಪೈಪ್ಲೈನ್ ಮೂಲಕ ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದರು.
ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದ ಬಿಲ್ ಪಾವತಿಯಾಗಿದೆ. ಕೆಲವು ಜಿ.ಪಿ.ಎಸ್ ಸರಿಯಾಗಿ ಇಲ್ಲದಿರುವ ಕಡೆ ಹಣ ಮಂಜೂರು ಮಾಡಿಲ್ಲ. ಈಗಾಗಲೇ ಜಿಲ್ಲಾಡಳಿತ ತಂಡದಿಂದ ಪರಿಶೀಲನೆ ನಡೆಸಿದ್ದು ಮತ್ತೋಮ್ಮೆ ಪುನಃ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ತಿಮ್ಮಣ್ಣ ತಿಳಿಸಿದರು.
ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ಕೇಳಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಂಚಣಿ ಅದಾಲತ್ ನಡೆಸಿ ಸರ್ಕಾರಿ ಯೋಜನೆಗಳ ಮಾಹಿತಿ ಮತ್ತು ಸೌಲಭ್ಯವನ್ನು ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಜಗಳೂರು ತಾಲೂಕಿನಲ್ಲಿ ಗ್ರಾಮಭೇಟಿ ಕಾರ್ಯಕ್ರಮದ ಮೂಲಕ ಅಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಮೂಲಕ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಅವಹಾಲು ಸ್ವೀಕರಿಸಿ ಅವುಗಳಿಗೆ ಪರಿಹಾರವನ್ನು ವಾರದಲ್ಲಿಯೇ ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಅಂದಿನ ದಿನಕ್ಕೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ಹೆಚ್ಚಿನ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲಾಯಿತು. ಮುಂದಿನ ದಿನಗಳಲ್ಲಿ ಇನ್ನುಳಿದ ತಾಲೂಕುಗಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಜಲಶಕ್ತಿ ಮತ್ತು ಜಲಾಮೃತ ಕಾರ್ಯಕ್ರಮಗಳಡಿಯಲ್ಲಿ ಶಾಲೆ, ಹಾಸ್ಟೆಲ್ ಹಾಗೂ ಸಾರ್ವಜನಿಕರಿಗೆ ಹೆಚ್ಚು ಅರಿವು ಮೂಡಿಸಿ ಜಿಲ್ಲೆಯ ಹಸಿರೀಕರಣಕ್ಕೆ ಒತ್ತು ನೀಡಿ. ಜಲಾಮೃತ ಕಾರ್ಯಕ್ರಮದಡಿಯಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಶಾಲೆಗೆ 5000 ಅನುದಾನ ನೀಡಲಿದ್ದು, ಈ ಅನುದಾನದಲ್ಲಿ ಕಿಚನ್ಗಾರ್ಡ್ನ್ನು ನಿರ್ಮಿಸಿ ಅಲ್ಲಿನ ಮಕ್ಕಳಿಗೆ ಅನುಕೂಲವಾಗುವಂತೆ ಪಪ್ಪಾಯ, ನುಗ್ಗೆಕಾಯಿ, ಸಫೋಟ, ಮಾವು, ಹುಣಸೆ, ನೇರಳೆ ಮರಗಳನ್ನು ಬೆಳೆಯಬೇಕು. ಈ ಕುರಿತು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು ಎಂದು ಡಿ.ಡಿ.ಪಿ.ಐ ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಹಿಂದಿನ ದಿನಗಳಲ್ಲಿ ಬರ ನಿರ್ವಹಣೆಯನ್ನು ನಿರ್ವಹಿಸಿದ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಇನ್ನು ಉತ್ತಮವಾಗಿ ಮತ್ತು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸಭೆಯಲಿದ್ದ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ಸ್ಮಾರ್ಟ್ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ಷರೀಫ್, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಜಿಲ್ಲಾ ಸಂಖ್ಯಾಧಿಕಾರಿ ರಾಜೇಶ್ವರಿ ಸೇರಿದಂತೆ ವಿವಿಧ ತಾಲೂಕಿನ ತಹಶೀಲ್ದಾರ್ಗಳು ಇತರೆ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Bigg Boss Kannada 13: ಹೊಸ ಥೀಮ್, ಹೊಸ ಸ್ಪರ್ಧಿಗಳು, 24×7 ಲೈವ್; ಕಿಚ್ಚ ಸುದೀಪ್ ಸಾರಥ್ಯದ ಬಿಗ್ಬಾಸ್ ಕನ್ನಡ 13ರ ವಿಶೇಷತೆಗಳೇನು?
ಸುದ್ದಿದಿನ,ಬೆಂಗಳೂರು: ಅಂತೂ ಇಂತೂ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ **‘ಬಿಗ್ಬಾಸ್ ಕನ್ನಡ ಸೀಸನ್ 13’**ಗೆ ಅಧಿಕೃತ ಚಾಲನೆ ಸಿಗುವ ಸಮಯ ಬಂದಿದೆ. ಈಗಾಗಲೇ ‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಕುತೂಹಲ ಹೆಚ್ಚಿಸಿರುವ ಕಾರ್ಯಕ್ರಮದ ಟಿವಿ ಸೀಸನ್ ಸೆಪ್ಟೆಂಬರ್ 6ರಿಂದ ಆರಂಭವಾಗಲಿದೆ. ಹೊಸ ಸೀಸನ್ನಲ್ಲಿ ಮನೆ, ಥೀಮ್, ಸ್ಪರ್ಧಿಗಳ ಆಯ್ಕೆ ಹಾಗೂ ವೀಕ್ಷಣಾ ಅನುಭವದಲ್ಲೂ ಹಲವು ವಿಶೇಷತೆಗಳನ್ನು ಪರಿಚಯಿಸಲಾಗುತ್ತಿದೆ.
ಕಳೆದ 12 ಸೀಸನ್ಗಳಂತೆ ಈ ಬಾರಿಯೂ ಕಿಚ್ಚ ಸುದೀಪ್ ಕಾರ್ಯಕ್ರಮದ ನಿರೂಪಕರಾಗಿ ಮುಂದುವರಿಯಲಿದ್ದಾರೆ. ಸತತ 13 ಸೀಸನ್ಗಳನ್ನು ನಿರೂಪಣೆ ಮಾಡುತ್ತಿರುವುದು ಬಿಗ್ಬಾಸ್ ಇತಿಹಾಸದಲ್ಲೇ ಗಮನಾರ್ಹ ದಾಖಲೆಯಾಗಿದೆ.
ಹೈಲೈಟ್ಸ್: ಸೆಪ್ಟೆಂಬರ್ 6ರಿಂದ ಬಿಗ್ಬಾಸ್ ಹವಾ |
|
http://Visit : www.suddidina.com
ಈ ಬಾರಿ ‘Flight’ ಥೀಮ್ ಏಕೆ ವಿಶೇಷ?
ಕಳೆದ ಸೀಸನ್ನಲ್ಲಿ ವೀಕ್ಷಕರು ಅರಮನೆ ಮಾದರಿಯ ಬಿಗ್ಬಾಸ್ ಮನೆಯನ್ನು ಕಂಡಿದ್ದರು. ಆದರೆ ಈ ಬಾರಿ ಇಡೀ ಕಾರ್ಯಕ್ರಮದ ಕಲ್ಪನೆಯೇ ಬದಲಾಗಿದೆ. ‘Flight’ ಥೀಮ್ ಆಧಾರಿತವಾಗಿ ಸೀಸನ್ 13 ರೂಪಿಸಲಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋದಲ್ಲೂ ಇದರ ಝಲಕ್ ಕಾಣಿಸಿಕೊಂಡಿದೆ.
ವಿಶೇಷವೆಂದರೆ ಫ್ಲೈಟ್ ಥೀಮ್ ಕೇವಲ ಪ್ರೋಮೋಗೆ ಸೀಮಿತವಾಗಿಲ್ಲ. ಬಿಗ್ಬಾಸ್ ಮನೆಯ ವಿನ್ಯಾಸದಲ್ಲೂ ಇದೇ ಪರಿಕಲ್ಪನೆಯನ್ನು ಬಳಸಲಾಗಿದೆ. ಹೀಗಾಗಿ ಈ ಬಾರಿ ಮನೆ ಹೇಗೆ ಕಾಣಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಸೆಲೆಬ್ರಿಟಿಗಳ ಜತೆಗೆ ಕಾಮನ್ ಮ್ಯಾನ್ ಎಂಟ್ರಿ
ಬಿಗ್ಬಾಸ್ ಕನ್ನಡದ ಪ್ರತಿ ಸೀಸನ್ನಲ್ಲೂ ಸ್ಪರ್ಧಿಗಳ ಆಯ್ಕೆ ಪ್ರಮುಖ ಆಕರ್ಷಣೆಯಾಗಿರುತ್ತದೆ. ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಜನರಿಗೂ ಅವಕಾಶ ಕಲ್ಪಿಸಲಾಗುತ್ತಿದೆ.
‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಆಯ್ಕೆಯಾಗುವ ಮೂವರು ಸಾಮಾನ್ಯ ಸ್ಪರ್ಧಿಗಳು ಸೀಸನ್ 13ರ ಮನೆಗೆ ಪ್ರವೇಶಿಸಲಿದ್ದಾರೆ. ಇದರಿಂದ ಮನೆಯಲ್ಲಿ ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳ ನಡುವಿನ ಸಂವಹನ, ಅಭಿಪ್ರಾಯ ಭೇದ ಹಾಗೂ ಹೊಸ ರೀತಿಯ ಸ್ಪರ್ಧೆ ಮೂಡುವ ನಿರೀಕ್ಷೆಯಿದೆ.
ಮನೆಯ ಪ್ರತಿಕ್ಷಣವೂ 24×7 ಲೈವ್
ಈ ಬಾರಿ ವೀಕ್ಷಕರಿಗೆ ಮತ್ತೊಂದು ದೊಡ್ಡ ಸೌಲಭ್ಯ ಸಿಗಲಿದೆ. ಟಿವಿ ಎಪಿಸೋಡ್ಗಳಿಗೆ ಮಾತ್ರ ಸೀಮಿತವಾಗದೆ, ಜಿಯೋಹಾಟ್ಸ್ಟಾರ್ನಲ್ಲಿ ಬಿಗ್ಬಾಸ್ ಮನೆಯ 24×7 ಲೈವ್ ವೀಕ್ಷಣೆ ಲಭ್ಯವಿರಲಿದೆ.
ಅಂದರೆ ದಿನದ ಎಪಿಸೋಡ್ನಲ್ಲಿ ಪ್ರಸಾರವಾಗದ ಮನೆಯೊಳಗಿನ ಹಲವು ಬೆಳವಣಿಗೆಗಳನ್ನೂ ವೀಕ್ಷಕರು ಗಮನಿಸಬಹುದು. ಸ್ಪರ್ಧಿಗಳ ನಡುವಿನ ಮಾತುಕತೆ, ಚಟುವಟಿಕೆಗಳು ಹಾಗೂ ಅನಿರೀಕ್ಷಿತ ಘಟನೆಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶ ಸಿಗಲಿದೆ.
ಪ್ರಸಾರದ ಸಮಯವೂ ಫಿಕ್ಸ್
ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಪ್ರಸಾರವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಹೊಸ ಸಂಚಿಕೆಗಳು ಪ್ರಸಾರವಾಗಲಿವೆ.
ಇನ್ನು ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ನಡೆಸಿಕೊಡುವ ಶನಿವಾರ ಮತ್ತು ಭಾನುವಾರದ ವಿಶೇಷ ಸಂಚಿಕೆಗಳು ರಾತ್ರಿ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿವೆ.
ಬಿಗ್ಬಾಸ್ ಪ್ರಯಾಣ ಯಾವ ದಿಕ್ಕಿಗೆ?
ಫ್ಲೈಟ್ ಥೀಮ್, ಹೊಸ ಮುಖಗಳು, ಸಾಮಾನ್ಯ ಸ್ಪರ್ಧಿಗಳ ಪ್ರವೇಶ ಮತ್ತು 24×7 ಲೈವ್ ವೀಕ್ಷಣೆಯೊಂದಿಗೆ ಸೀಸನ್ 13 ಕುತೂಹಲ ಮೂಡಿಸಿದೆ. ಈ ‘ಫ್ಲೈಟ್’ನಲ್ಲಿ ಯಾರು ಟೇಕಾಫ್ ಆಗುತ್ತಾರೆ, ಯಾರು ಮಧ್ಯದಲ್ಲೇ ಎಲಿಮಿನೇಟ್ ಆಗುತ್ತಾರೆ ಮತ್ತು ಕೊನೆಯವರೆಗೂ ಯಾರು ಪ್ರಯಾಣ ಮುಂದುವರಿಸುತ್ತಾರೆ ಎಂಬುದೇ ಮುಂದಿನ ದಿನಗಳ ಪ್ರಮುಖ ಪ್ರಶ್ನೆ.

ದಿನದ ಸುದ್ದಿ
ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ
ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.
ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.
ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ |
|
http://Visit : www.suddidina.com
ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ
ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.
ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.
ಗ್ರಾಮ ಒನ್ನಲ್ಲೇ ಅರ್ಜಿ ಸಲ್ಲಿಕೆ
ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.
ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.
ಬುಧವಾರ ಮೂರು ಹಂತದ ಪರಿಶೀಲನೆ
ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.
ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.
ಸ್ಥಳದಲ್ಲೇ ಮಂಜೂರಾತಿ, ಆನ್ಲೈನ್ನಲ್ಲಿ ಸ್ಥಿತಿ
ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.
ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.
ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ
ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

ದಿನದ ಸುದ್ದಿ
Fake Doctors in Karnataka: ಜೀವದ ಜೊತೆ ಚೆಲ್ಲಾಟವಾಡುವ ನಕಲಿ ವೈದ್ಯರು; ದಾಳಿ, ದಂಡ, ಕೇಸ್ಗಳ ನಡುವೆಯೂ ಮುಂದುವರಿದ ಜಾಲ
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕಳಪೆ ಔಷಧ ಪ್ರಕರಣಗಳು ಚರ್ಚೆಯಲ್ಲಿರುವ ನಡುವೆಯೇ, ವೈದ್ಯಕೀಯ ಕ್ಷೇತ್ರದ ಮತ್ತೊಂದು ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಕರ್ನಾಟಕದಲ್ಲಿ ಅನಧಿಕೃತವಾಗಿ ವೈದ್ಯಕೀಯ ಸೇವೆ ನೀಡುತ್ತಿರುವ ನಕಲಿ ವೈದ್ಯರ ಹಾವಳಿ ಮುಂದುವರಿದಿದ್ದು, ಕಳೆದ ಮೂರು ವರ್ಷಗಳಲ್ಲಿ ಆರೋಗ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 582 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿವೆ. ಇವರಿಗೆ ಸೇರಿದ ಅನಧಿಕೃತ ಕ್ಲಿನಿಕ್ಗಳನ್ನು ಮುಚ್ಚಿಸಲಾಗಿದ್ದು, ಹಲವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚೆಗೆ ಕೋನಸಾಗರದಲ್ಲಿ ನಕಲಿ ವೈದ್ಯೆಯೊಬ್ಬರು ನೀಡಿದ ಚುಚ್ಚುಮದ್ದಿನ ಬಳಿಕ ರೈತರೊಬ್ಬರು ಮೃತಪಟ್ಟಿರುವ ಆರೋಪದ ಪ್ರಕರಣ ನಕಲಿ ವೈದ್ಯರ ಜಾಲದ ಅಪಾಯಕಾರಿ ಮುಖವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. ಅನಧಿಕೃತವಾಗಿ ಚಿಕಿತ್ಸೆ ನೀಡುವುದು ಮಾತ್ರವಲ್ಲದೆ, ಕೆಲವರು ಮನೆಯಲ್ಲೇ ಕ್ಲಿನಿಕ್ಗಳನ್ನು ನಡೆಸುತ್ತಿರುವುದು ಹಾಗೂ ಪ್ರಯೋಗಾಲಯಗಳನ್ನೂ ನಿರ್ವಹಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
ಹೈಲೈಟ್ಸ್: ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ತೀವ್ರ |
|
http://Visit : www.suddidina.com
582 ಪ್ರಕರಣ, 87 ಮಂದಿಗೆ ದಂಡ
ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಮೂರು ವರ್ಷಗಳ ಅವಧಿಯಲ್ಲಿ 582 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿವೆ. ಇವರ ಕ್ಲಿನಿಕ್ಗಳನ್ನು ಮುಚ್ಚುವ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 87 ನಕಲಿ ವೈದ್ಯರಿಗೆ ದಂಡ ವಿಧಿಸಲಾಗಿದ್ದು, 128 ಮಂದಿ ಇನ್ನೂ ದಂಡ ಪಾವತಿಸಿಲ್ಲ. ಇದೇ ಅವಧಿಯಲ್ಲಿ 29 ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಯ ಹಂತದಲ್ಲಿವೆ.
ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯ ವ್ಯಾಪ್ತಿಯಲ್ಲಿಯೂ ನೋಂದಣಿ ಅಥವಾ ಅಗತ್ಯ ಪರವಾನಗಿ ಇಲ್ಲದೆ ವೈದ್ಯಕೀಯ ವೃತ್ತಿ ನಡೆಸುತ್ತಿರುವವರ ವಿರುದ್ಧ ದಾಳಿ ನಡೆಸಲಾಗಿದೆ.
ಜಿಲ್ಲೆಗಳಲ್ಲಿ ಸಕ್ರಿಯವಾಗಿರುವ ಜಾಲ
ನಕಲಿ ವೈದ್ಯರನ್ನು ಪತ್ತೆಹಚ್ಚಲು ರಾಜ್ಯ ಸರಕಾರ 2017ರಲ್ಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ವಿಶೇಷ ಪಡೆ ರಚಿಸಿತ್ತು. ಇದರಲ್ಲಿ ಪೊಲೀಸ್ ಇಲಾಖೆ, ಆಯುಷ್ ಅಧಿಕಾರಿಗಳು ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದಾರೆ.
ನಿರಂತರ ದಾಳಿಗಳ ನಡುವೆಯೂ ನಕಲಿ ವೈದ್ಯರ ಜಾಲ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ವಿಶೇಷವಾಗಿ ಸಣ್ಣಪುಟ್ಟ ಗಲ್ಲಿ, ಕೊಳೆಗೇರಿ ಪ್ರದೇಶಗಳಲ್ಲಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಹೆಸರಿನಲ್ಲಿ ಇಂತಹವರು ಕಾರ್ಯನಿರ್ವಹಿಸುತ್ತಿರುವ ಆರೋಪಗಳಿವೆ. ನಗರ ಪ್ರದೇಶಗಳಲ್ಲೂ ಇಂತಹ ಅನಧಿಕೃತ ಕ್ಲಿನಿಕ್ಗಳು ಪತ್ತೆಯಾಗುತ್ತಿವೆ.
ಉತ್ತರ ಕರ್ನಾಟಕದಲ್ಲಿ ಹೆಚ್ಚು ಪ್ರಕರಣ
ಕಾರ್ಯಾಚರಣೆಯಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಕಲಿ ವೈದ್ಯರು ಪತ್ತೆಯಾಗುತ್ತಿದ್ದಾರೆ. ಕಲಬುರಗಿ, ರಾಯಚೂರು, ಧಾರವಾಡ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಡಿಮೆ ಹಣದಲ್ಲಿ ಚಿಕಿತ್ಸೆ ಸಿಗುತ್ತದೆ ಎಂಬ ಕಾರಣಕ್ಕೆ ಸಾರ್ವಜನಿಕರು ಅರ್ಹತೆ ಮತ್ತು ನೋಂದಣಿ ಪರಿಶೀಲಿಸದೆ ಇಂತಹವರನ್ನು ಸಂಪರ್ಕಿಸುವುದು ಸಮಸ್ಯೆಗೆ ಕಾರಣವಾಗುತ್ತಿದೆ.
ಕಾನೂನು ಉಲ್ಲಂಘಿಸಿದರೆ ಜೈಲು, ದಂಡ
ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವುದು ಪತ್ತೆಯಾದರೆ ಕೆಪಿಎಂಇ ತಿದ್ದುಪಡಿ ಅಧಿನಿಯಮ 2017ರ ಸೆಕ್ಷನ್ 19ರ ಅಡಿಯಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹1 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ನೋಂದಣಿ ಇಲ್ಲದೆ ಖಾಸಗಿ ವೈದ್ಯಕೀಯ ಸಂಸ್ಥೆ ನಡೆಸಿದರೆ ಅದನ್ನು ಮುಚ್ಚಿಸುವ ಕ್ರಮ ಕೈಗೊಳ್ಳಲಾಗುತ್ತದೆ. ನಿಯಮಗಳನ್ನು ಉಲ್ಲಂಘಿಸಿದ ಸಂಸ್ಥೆಗಳ ವಿರುದ್ಧ ದಂಡ ಹಾಗೂ ನೋಂದಣಿ ರದ್ದತಿಯಂತಹ ಕ್ರಮಗಳಿಗೂ ಅವಕಾಶವಿದೆ.
ನಕಲಿ ವೈದ್ಯರ ವಿರುದ್ಧದ ಕಾನೂನು ಕ್ರಮದ ಜತೆಗೆ ಸಾರ್ವಜನಿಕರ ಜಾಗೃತಿಯೂ ಅತ್ಯಂತ ಮುಖ್ಯ. ವೈದ್ಯರನ್ನು ಸಂಪರ್ಕಿಸುವ ಮುನ್ನ ಅವರ ವೈದ್ಯಕೀಯ ನೋಂದಣಿ, ಅರ್ಹತೆ ಮತ್ತು ಕ್ಲಿನಿಕ್ನ ಕಾನೂನುಬದ್ಧ ನೋಂದಣಿ ಪರಿಶೀಲಿಸುವುದು ಜೀವ ರಕ್ಷಣೆಯ ಮೊದಲ ಹೆಜ್ಜೆಯಾಗಬಹುದು.
ಸಿಕ್ಕಿಬಿದ್ದ ನಕಲಿ ವೈದ್ಯರು ಅಂಕಿ-ಅಂಶ (2024-2026) |
|
“ನಕಲಿ ಔಷಧಿ ಜಾಲದಂತೆ ನಕಲಿ ವೈದ್ಯರಿಗೂ ಕಡಿವಾಣ ಹಾಕಲಾಗುವುದು. ಅಂಥವರ ಪತ್ತೆಗೆ ಯೋಜನೆ ರೂಪಿಸುತ್ತೇವೆ. ಸಿಕ್ಕಿಬಿದ್ದಲ್ಲಿ ವಿಳಂಬವಿಲ್ಲದೆ ಕಟ್ಟುನಿಟ್ಟಿನ ಕ್ರಮ ವಹಿಸುತ್ತೇವೆ. ಜನರು ಮಾಹಿತಿ ಕೊಟ್ಟರೂ ಕ್ರಮ ವಹಿಸುತ್ತೇವೆ.”
– ಯು.ಟಿ.ಖಾದರ್ ಆರೋಗ್ಯ ಸಚಿವ

-
ದಿನದ ಸುದ್ದಿ5 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ6 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ5 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ6 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ6 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ5 days agoಡಾಲಿಯ ಕನಸು ಒಂದೇ ಹೀರೋ ಆಗೋದು
-
ದಿನದ ಸುದ್ದಿ6 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ


