ರಾಜಕೀಯ
ದೇವೇಗೌಡರ ಅರೋಪ , “ಐ ಡೋಂಟ್ ಕೇರ್” ಅಂದ್ರು ಸಿದ್ದರಾಮಯ್ಯ : ಸುದ್ದಿಗೋಷ್ಠಿಯ ಡೀಟೇಲ್ಸ್ ಇಲ್ಲಿದೆ ಓದಿ..!
- ಹೆಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಆರೋಪಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಇಂದು) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಿದ್ದರಾಮಯ್ಯರ ಮಾತುಗಳು ಈ ಕೆಳಗಿನಂತಿವೆ.
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಚ್.ಡಿ.ದೇವೇಗೌಡರು ಇತ್ತೀಚೆಗೆ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿ ನನ್ನ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆ ಪ್ರತಿಕ್ರಿಯಿಸುವುದು ಬೇಡ ಎಂದು ಸುಮ್ಮನಿದ್ದೆ. ಆದರೆ ಇದು ಗಂಭೀರ ಸ್ವರೂಪದ ಆರೋಪಗಳಾಗಿರುವುದರಿಂದ ಮೌನಕ್ಕೆ ಬೇರೆ ಅರ್ಥ ಬರಬಹುದೆಂಬ ಕಾರಣಕ್ಕೆ ಕೆಲವು ವಿಷಯಗಳನ್ನು ಸಾರ್ವಜನಿಕರ ಗಮನಕ್ಕೆ ತರುವುದು ಅನಿವಾರ್ಯವಾಗಿದೆ.
ವರ್ತಮಾನದಲ್ಲಿ ನಮ್ಮ ದೊಡ್ಡ ಶತ್ರು ಕೋಮುವಾದಿ ಬಿಜೆಪಿ. ಅದು ಅಧಿಕಾರದ ಸೊಕ್ಕಿನಿಂದ ಜಾತ್ಯತೀತ ಶಕ್ತಿಗಳನ್ನು ನಾಶ ಮಾಡಲು ಹೊರಟಿರುವ ಈ ಹೊತ್ತಿನಲ್ಲಿ ಜಾತ್ಯತೀತ ಶಕ್ತಿಗಳೆಲ್ಲ ಒಗ್ಗಟ್ಟಿನಿಂದ ಎದುರಿಸಬೇಕು ಎನ್ನುವುದು ನನ್ನ ನಿಲುವು ಕೂಡಾ. ಆದರೆ ಜಾತ್ಯತೀತರೆಂದು ಹೇಳಿಕೊಳ್ಳುವವರು ಪರೋಕ್ಷವಾಗಿ ಕೋಮುವಾದಿ ಶಕ್ತಿಗಳಿಗೆ ನೆರವಾಗುತ್ತಿರುವ ಪ್ರಯತ್ನ ಮಾಡುತ್ತಿರುವಾಗ ಅದನ್ನು ಕೂಡಾ ನಾವು ಖಂಡಿಸಬೇಕಾಗುತ್ತದೆ, ಅವರ ಸಂಚುಗಳನ್ನು ಬಯಲುಮಾಡಬೇಕಾಗುತ್ತದೆ.
ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾನು ಕಾರಣ ಎಂದು ದೇವೇಗೌಡರು ಆರೋಪಿಸಿದ್ದಾರೆ. ಈ ರೀತಿಯ ಆರೋಪಗಳಿಂದ ಯಾರಿಗೆ, ಯಾವ ಪಕ್ಷಕ್ಕೆ ಖುಷಿಯಾಗುತ್ತದೆ ಎನ್ನುವುದು ಸಾಮಾನ್ಯ ಮನುಷ್ಯರಿಗೂ ತಿಳಿಯುತ್ತದೆ. ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ತನ್ನ ವಿರೋಧಿಗಳನ್ನು ಹತ್ತಿಕ್ಕಲು ಮಾಡುತ್ತಿರುವ ಪ್ರಯತ್ನಗಳನ್ನು ಕಂಡು ದೇವೇಗೌಡರು ಹೆದರಿರುವಂತೆ ಕಾಣಿಸುತ್ತಿದೆ. ಇದಕ್ಕಾಗಿ ಅವರನ್ನು ಖುಷಿಪಡಿಸಲು ನನ್ನ ಮೇಲೆ ಈ ರೀತಿಯ ಆಧಾರರಹಿತ ಆರೋಪ ಮಾಡಿದ್ದಾರೆ ಎನ್ನುವುದು ಸ್ಪಷ್ಷವಾಗುತ್ತದೆ.
ಕಳೆದ ಐದು ವರ್ಷಗಳಲ್ಲಿ ಬಿಜೆಪಿ ತನ್ನ ನಿಯಂತ್ರಣದಲ್ಲಿರುವ ಸಿಬಿಐ,ಇಡಿ ಮತ್ತು ಐಟಿ ಇಲಾಖೆಗಳನ್ನು ಛೂಬಿಟ್ಟು ವಿರೋಧ ಪಕ್ಷಗಳ ನಾಯಕರನ್ನು ಬೆದರಿಸುವ ಪ್ರಯತ್ನ ಮಾಡುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇತ್ತೀಚೆಗೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಕಾಲದ ಪೋನ್ ಕದ್ದಾಲಿಕೆಯನ್ನು ಸಿಬಿಐಗೆ ಒಪ್ಪಿಸುವ ನಿರ್ಧಾರ ಪ್ರಕಟಿಸಿದ ಕೂಡಲೇ ಗೌಡರು ಯಾಕೋ ಚಿಂತಾಕ್ರಾಂತರಾದಂತೆ ಕಾಣಿಸುತ್ತಿದೆ. ಯಡಿಯೂರಪ್ಪನವರು ದೆಹಲಿಗೆ ಹೋಗಿ ಬಂದಮರುದಿನವೇ ಪೋನ್ ಕದ್ದಾಲಿಕೆಯನ್ನು ಸಿಬಿಐಗೆ ಒಪ್ಪಿಸುತ್ತಿದ್ದೇವೆ ಎಂದು ಪ್ರಕಟಿಸಿದ ನಂತರವೂ, ಗೌಡರಿಗೆ ಮಾತ್ರ ಈ ನಿರ್ಧಾರದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೈವಾಡ ಕಾಣಿಸುತ್ತಿಲ್ಲವಂತೆ. ಗೌಡರು ಯಾರನ್ನು ಖುಷಿಪಡಿಸಲು ಈ ರೀತಿ ಅಮಾಯಕರಂತೆ ಮಾತನಾಡುತ್ತಿದ್ದಾರೆ?
ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿ ನಾನು ವಿರೋಧಪಕ್ಷ ನಾಯಕರಾಗುವ ಉದ್ದೇಶದಿಂದ ಸಮ್ಮಿಶ್ರ ಸರ್ಕಾರವನ್ನು ನಾನು ಉರುಳಿಸಿದೆ ಎಂದು ಗೌಡರು ಆರೋಪಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಲು ಒಂದು ಸರ್ಕಾರವನ್ನು ಉರುಳಿಸುವುದನ್ನು ನಾವು-ನೀವೆಲ್ಲ ಕೇಳಿದ್ದೇವೆ. ಆದರೆ ವಿರೋಧ ಪಕ್ಷದ ನಾಯಕನಾಗಲು ಸರ್ಕಾರವನ್ನು ಉರುಳಿಸುವುದನ್ನು ನಾನೆಂದೂ ಕೇಳಿಲ್ಲ. ಇಂತಹದ್ದೊಂದು ಕಲ್ಪನಾ ವಿಲಾಸದಲ್ಲಿ ತೇಲಾಡುವಂತೆ ಮಾಡಲು ದೇವೇಗೌಡರಿಂದ ಮಾತ್ರ ಸಾಧ್ಯ. ಗೌಡರ ಎಲ್ಲ ಆರೋಪಗಳಿಗೆ ಉತ್ತರಿಸಲು ನಾನು ಹೋಗುವುದಿಲ್ಲ. ಆದರೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡುವುದು ನನ್ನ ಉದ್ದೇಶವಾಗಿತ್ತು ಎಂಬ ಕಪೋಲಕಲ್ಪಿತ, ನಿರಾಧಾರವಾದ ಆರೋಪದ ಬಗ್ಗೆ ಪ್ರತಿಕ್ರಿಯಿಸಲೇಬೇಕಾಗಿದೆ.
ಸಮ್ಮಿಶ್ರ ಸರ್ಕಾರದ ಪತನಕ್ಕೆ ಎಚ್.ಡಿ.ದೇವೇಗೌಡರು ಮತ್ತು ಅವರ ಆದೇಶದಂತೆಯೇ ಕೆಲಸ ಮಾಡುತ್ತಿದ್ದ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಕಾರಣ. ಜೆಡಿಎಸ್ ಜೊತೆ ಮೈತ್ರಿಗೆ ನನ್ನ ಸಹಮತ ಇರಲಿಲ್ಲ ಎನ್ನುವುದನ್ನು ಒಪ್ಪಿಕೊಳ್ಳಲು ನನಗೆ ಯಾವ ಹಿಂಜರಿಕೆಯೂ ಇಲ್ಲ. ಯಾಕೆಂದರೆ ದೇವೇಗೌಡರ ರಾಜಕೀಯದ ಆಟಗಳನ್ನೆಲ್ಲ ನೋಡಿ ಅನುಭವಿಸಿದವನು ನಾನು. ನನ್ನಂತೆಯೇ ಬಹುತೇಕ ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ಜೊತೆ ಮೈತ್ರಿ ಅಷ್ಟೊಂದು ಇಷ್ಟ ಇರಲಿಲ್ಲ. ಆದರೆ ಪಕ್ಷದ ಹೈಕಮಾಂಡ್ ಆದೇಶಕ್ಕೆ ಶಿರಬಾಗಿ ನಾವು ಒಪ್ಪಿಕೊಂಡೆವು. ಕುಮಾರಸ್ವಾಮಿ ಸರ್ಕಾರಕ್ಕೆ ಸಂಪೂರ್ಣ ಸಹಕಾರವನ್ನೂ ನೀಡಿದೆವು. ಸರ್ಕಾರಕ್ಕೆ ಯಾವುದಾದರೂ ರೀತಿಯ ಕಿರುಕುಳ ನೀಡಿದ್ದಕ್ಕೆ ಒಂದೇ ಒಂದು ಉದಾಹರಣೆ ಅವರು ಕೊಡಲಿ. ಆದರೆ ಕುಮಾರಸ್ವಾಮಿಯವರು ನಮ್ಮೆಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದರು. ಸಮನ್ವಯ ಸಮಿತಿಯಲ್ಲಿ ಕೈಗೊಂಡ ನಿರ್ಧಾರಗಳನ್ನು ಕೂಡಾ ಕುಮಾರಸ್ವಾಮಿ ಜಾರಿ ಮಾಡಲಿಲ್ಲ. ಮೈತ್ರಿ ಧರ್ಮಕ್ಕೆ ಕಟ್ಟುಬಿದ್ದು ನಾವು ಬಹಿರಂಗವಾಗಿ ಪ್ರತಿಕ್ರಿಯಿಸಲು ಹೋಗಲಿಲ್ಲ. ನಮ್ಮದೇ ಪಕ್ಷದಲ್ಲಿದ್ದ ಎಚ್.ವಿಶ್ವನಾಥ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಅವರ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿಸಿದರು. ಈಗ ಅದೇ ವಿಶ್ವನಾಥ್ ಅಪ್ಪ ಮತ್ತು ಮಕ್ಕಳ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ.
ಇವತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಅದಕ್ಕೆ ದೇವೇಗೌಡ ಮತ್ತು ಅವರ ಮಗ ಕುಮಾರಸ್ವಾಮಿಯವರು ಕೂಡಿ ಮಾಡಿದ್ದ ಕಪಟನಾಟಕವೇ ಮೂಲ ಕಾರಣ. ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ದ್ರೋಹ ಬಗೆದು ರಾತೋರಾತ್ರಿ ಜೆಡಿಎಸ್ ಶಾಸಕರ ಜೊತೆಗೂಡಿ ಹೋಗಿ ಬಿಜೆಪಿಗೆ ಶರಣಾದರಲ್ಲಾ, ಅದೇ ದಿನ ರಾಜ್ಯದಲ್ಲಿ ಬಿಜೆಪಿ ಒಂದು ಕಾಲು ಊರಿತ್ತು. ಆಗಲೂ ದೇವೇಗೌಡರು ತಮ್ಮ ಮಗನ ನಡವಳಿಕೆಯನ್ನು ದೂರಲಿಲ್ಲ, ಬದಲಿಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪ ಮಾಡಿದ್ದರು. ಆಗಲೂ ಮಾಧ್ಯಮದವರ ಮುಂದೆ ಬಂದು ಮಗ ನನ್ನ ಮಾತು ಕೇಳಲಿಲ್ಲ ಎಂದು ಬಹಿರಂಗವಾಗಿ ಕಣ್ಣೀರು ಹಾಕಿದ್ದರು. ಒಳಗಿಂದೊಳಗೆ ಕುಮಾರಸ್ವಾಮಿಯವರಿಗೆ ಎಲ್ಲ ರೀತಿಯ ಬೆಂಬಲ ನೀಡಿದ್ದರು.
ಬೆಂಬಲಿಸಿದ ಪಕ್ಷಕ್ಕೆ ದ್ರೋಹ ಬಗೆಯುವುದು ದೇವೇಗೌಡ ಮತ್ತು ಕುಮಾರಸ್ವಾಮಿಯವರ ಹುಟ್ಟುಗುಣ. ರಾಮಕೃಷ್ಣ ಹೆಗಡೆಯವರನ್ನು ಹಣಿಯಲು ಯತ್ನಿಸಿದವರು ಯಾರು? ತಾನೇ ಮುಖ್ಯಮಂತ್ರಿ ಮಾಡಿದ ಜೆ.ಎಚ್.ಪಟೇಲ್ ಅವರಿಗೆ ಕಿರುಕುಳ ಕೊಟ್ಟವರು ಯಾರು? ಎಸ್.ಆರ್.ಬೊಮ್ಮಾಯಿ ಸರ್ಕಾರವನ್ನು ಉರುಳಿಸಿದವರು ಯಾರು? 20-20 ತಿಂಗಳ ಅಧಿಕಾರ ಹಂಚಿಕೆಯ ಒಪ್ಪಂದ ಮಾಡಿಕೊಂಡ ಎಚ್ .ಡಿ. ಕುಮಾರಸ್ವಾಮಿ, ತನ್ನ ಅಧಿಕಾರವಧಿ ಮುಗಿದ ನಂತರ ವಚನ ಪಾಲನೆ ಮಾಡದೆ ದ್ರೋಹ ಬಗೆದರು. ಆಗ ಮಗನನ್ನು ವಚನಭ್ರಷ್ಟರಾಗಿ ಮಾಡಿದವರು ಇದೇ ದೇವೇಗೌಡರು. ಆ ವಚನಭ್ರಷ್ಟತೆಯ ಒಂದೇ ಕಾರಣಕ್ಕಾಗಿ ಸಿಡಿದೆದ್ದ ರಾಜ್ಯದ ಜನ ಯಡಿಯೂರಪ್ಪನವರನ್ನು ಬೆಂಬಲಿಸಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದರು. ರಾಜ್ಯದಲ್ಲಿ ಮೊದಲ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲು ಮತ್ತು ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಲು ಕಾರಣಕರ್ತರಾದ ದೇವೇಗೌಡರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ, ನರೇಂದ್ರಮೋದಿಯವರು ಮತ್ತೆ ಪ್ರಧಾನಿಯಾಗಿದ್ದಾರೆ, ಕೋಮುವಾದಿ ಪಕ್ಷ ಮತ್ತೆ ಅಧಿಕಾರ ಹಿಡಿದಿದೆ ಎನ್ನುವುದಕ್ಕೆ ದೇವೇಗೌಡರಿಗೆ ಬೇಸರ ಇಲ್ಲ. ಅವರ ಚಿಂತೆ ತಮ್ಮ ಮತ್ತು ತಮ್ಮ ಮೊಮ್ಮಗನ ಸೋಲು ಮಾತ್ರ. ಸೋತಿರುವುದು ದೇವೇಗೌಡ ಮತ್ತು ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ. ರಾಜ್ಯದ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಸೋತಿದ್ದಾರೆ. ಆ ಎಲ್ಲ ಅಭ್ಯರ್ಥಿಗಳ ಸೋಲು ಗೌಡರನ್ನು ಕಾಡುವುದಿಲ್ಲ. ಜೆಡಿಎಸ್ ಪಕ್ಷದ ಮತದಾರರಿರುವ ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಯಾರು ಕಾರಣ? ಅಲ್ಲಿನ ಜೆಡಿಎಸ್ ಮತದಾರರೆಲ್ಲ ಈ ಬಾರಿ ಯಾರಿಗೆ ಮತ ಹಾಕಿದ್ದಾರೆ? ಅವರೆಲ್ಲ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಹೇಳಿದವರು ಯಾರು? ಈ ಪ್ರಶ್ನೆಗಳಿಗೂ ಗೌಡರು ಉತ್ತರ ನೀಡಬೇಕಲ್ಲಾ?
ಮೊದಲ ಒಪ್ಪಂದದ ಪ್ರಕಾರ ದೇವೇಗೌಡರು ಬೆಂಗಳೂರು ಉತ್ತರದಿಂದ ಸ್ಪರ್ಧಿಸಬೇಕಿತ್ತು. ಯಾಕೆ ಅಲ್ಲಿಂದ ಹೋಗಿ ತುಮಕೂರಿನಲ್ಲಿ ಸ್ಪರ್ಧಿಸಿದರು? ತಮ್ಮ ಪಕ್ಷಕ್ಕೆ ಎಂಟು ಕ್ಷೇತ್ರಗಳು ಬೇಕೇಬೇಕು ಎಂದು ಹಠ ಹಿಡಿದಿದ್ದು ತಾವು ಗೆಲ್ಲಲ್ಲಿಕ್ಕೋ? ಇಲ್ಲವೇ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿಕ್ಕೋ? ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಗೆ ನೆಟ್ಟಗೆ ಪಕ್ಷದ ಕಚೇರಿ ಇಲ್ಲ, ಅಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಪಕ್ಷಾಂತರ ಮಾಡಿಸಿ ಟಿಕೆಟ್ ಕೊಟ್ಟದ್ದು ತಮ್ಮ ಪಕ್ಷ ಗೆಲ್ಲಲ್ಲಿಕ್ಕೋ? ಇಲ್ಲವೇ ಶೋಭಾ ಕರಂದ್ಲಾಜೆಯವರನ್ನು ಗೆಲ್ಲಿಸಲಿಕ್ಕೋ? ಕಾರವಾರ, ವಿಜಯಪುರ ಕ್ಷೇತ್ರಗಳಲ್ಲಿ ತಮ್ಮ ಪಕ್ಷಕ್ಕೆ ಯಾವುದೇ ನೆಲೆ ಇಲ್ಲದೆ ಇದ್ದರೂ ದುರ್ಬಲ ಅಭ್ಯರ್ಥಿಗಳನ್ನು ಹಾಕಿ ಬಿಜೆಪಿ ಗೆಲುವಿಗೆ ದಾರಿ ಮಾಡಿಕೊಟ್ಟಿದ್ದು ಯಾರು?
ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆಂದು ತಮ್ಮ ಆತ್ಮ ಮುಟ್ಟಿಕೊಂಡು ಹೇಳಲಿ. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತದಾರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿಲ್ಲ ಎಂದು ಜಿ.ಟಿ.ದೇವೇಗೌಡರು ಬಹಿರಂಗವಾಗಿ ಹೇಳಿದ್ದಾರಲ್ಲಾ? ದೇವೇಗೌಡರು ಯಾರ ವಿರುದ್ಧ ಕ್ರಮ ಕೈಗೊಂಡಿದ್ದಾರೆ?
ನಾನು ಜೆಡಿಎಸ್ ಪಕ್ಷದಲ್ಲಿದ್ದವನು, ದೇವೇಗೌಡರ ರಾಜಕೀಯವನ್ನು ಹತ್ತಿರದಿಂದ ನೋಡಿದವನು. ಅವರ ನಡೆ-ನುಡಿಗಳನ್ನು, ಸಂಚು-ಹುನ್ನಾರಗಳನ್ನು ನನಗಿಂತ ಚೆನ್ನಾಗಿ ಉಳಿದವರು ಅರ್ಥಮಾಡಿಕೊಳ್ಳಲಾರರು. ಲೋಕಸಭಾ ಚುನಾವಣೆಯಲ್ಲಿ ಹೀಗೆಯೇ ಆಗುತ್ತೆ ಎಂದು ನನಗೆ ಗೊತ್ತಿತ್ತು. ಆದರೆ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಬೇಕಾಯಿತು. ಈ ಫಲಿತಾಂಶದ ನಿರೀಕ್ಷೆ ಇತ್ತು.
ಕಳೆದ ವಿಧಾನಸಭಾ ಚುನಾವಣೆಯ ಕಾಲದಲ್ಲಿ ನಾನು ಜೆಡಿಎಸ್ ವಿರುದ್ಧ ದೇವೇಗೌಡರ ವಿರುದ್ಧ ಮಾತನಾಡಿದ್ದೇನೆ, ರಾಹುಲ್ ಗಾಂಧಿಯವರಿಂದಲೂ ಮಾತನಾಡಿಸಿದ್ದೇನೆ ಎಂದು ದೇವೇಗೌಡರು ಆರೋಪ ಮಾಡಿದ್ದಾರೆ. ಆ ಚುನಾವಣೆಯಲ್ಲಿ ದೇವೇಗೌಡರು, ಕುಮಾರಸ್ವಾಮಿಯವರು ಕಾಂಗ್ರೆಸ್ ಪರವಾಗಿ ಮಾತನಾಡಿದ್ದಾರೆಯೇ? ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಎದುರಾಳಿಯೇ ಜೆಡಿಎಸ್. ಚುನಾವಣಾ ಪ್ರಚಾರದ ಕಾಲದಲ್ಲಿ ಜೆಡಿಎಸ್ ವಿರುದ್ದ ಮಾತನಾಡದೆ ಮತ್ತೆ ಯಾರ ವಿರುದ್ಧ ಮಾತನಾಡಬೇಕು?
ನಾನು ಒಕ್ಕಲಿಗ ವಿರೋಧಿ ಎಂಬಂತೆ ದೇವೇಗೌಡರು ಮತ್ತು ಅವರ ಕುಟುಂಬ ಅಪಪ್ರಚಾರ ಮಾಡುತ್ತಾ ಬಂದಿದೆ. ನಾನು ಒಕ್ಕಲಿಗ ಸಮುದಾಯದ ವಿರೋಧಿ ಅಲ್ಲ. ಜೆಡಿಎಸ್ ನಲ್ಲಿ ಒಕ್ಕಲಿಗ ನಾಯಕರ ಜೊತೆಯಲ್ಲಿಯೇ ರಾಜಕೀಯ ಮಾಡುತ್ತಾ ಬಂದವನು. ಈಗಲೂ ನನ್ನ ಬಹಳಷ್ಟು ಸ್ನೇಹಿತರು ಒಕ್ಕಲಿಗ ಸಮುದಾಯವರೇ ಆಗಿದ್ದಾರೆ. ದೇವೇಗೌಡರು ನನ್ನನ್ನು ಜೆಡಿಎಸ್ ನಿಂದ ಉಚ್ಚಾಟನೆ ಮಾಡಿದ ನಂತರ ಆ ಪಕ್ಷವನ್ನು ವಿರೋಧಿಸುತ್ತಾ ಬಂದಿದ್ದೇನೆ. ಜೆಡಿಎಸ್ ಎನ್ನುವುದು ಒಕ್ಕಲಿಗರ ಪಕ್ಷವೇ? ಜೆಡಿಎಸ್ ವಿರೋಧಿಸಿದರೆ, ದೇವೇಗೌಡರನ್ನು ವಿರೋಧಿಸಿದರೆ ನಾನು ಹೇಗೆ ಒಕ್ಕಲಿಗ ವಿರೋಧಿಯಾಗುತ್ತೇನೆ?
ತಮ್ಮ ವಿರೋಧಿಗಳನ್ನು ಒಕ್ಕಲಿಗ ವಿರೋಧಿ ಎಂದು ಸುಳ್ಳು ಆರೋಪ ಮಾಡುವ ದೇವೇಗೌಡರು ತಮ್ಮ ಮಕ್ಕಳನ್ನು ಹೊರತುಪಡಿಸಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಬೆಳೆಸಿದ್ದಾರೆ? ದೇವೇಗೌಡರು ರಾಜಕೀಯವಾಗಿ ನಾಶಮಾಡಿದವರ ಪಟ್ಟಿಯಲ್ಲಿ ಶೇಕಡಾ 90ರಷ್ಟು ಮಂದಿ ಒಕ್ಕಲಿಗರೇ ಆಗಿದ್ದಾರೆ. ಇದಕ್ಕೆಲ್ಲ ಗೌಡರು ಉತ್ತರ ಕೊಡುವುದಿಲ್ಲ. ಹೆಚ್ಚಿನ ಮಾಹಿತಿಬೇಕಾದರೆ ಈಗ ಬಿಜೆಪಿಯಲ್ಲಿರುವ ಬಚ್ಚೇಗೌಡರನ್ನು ಕೇಳಿ, ಅವರು ವಿವರವಾಗಿ ಹೇಳ್ತಾರೆ.
ಒಕ್ಕಲಿಗರಲ್ಲಿ ಯಾರಾದರೂ ಮುಖ್ಯಮಂತ್ರಿಯಾಗಿದ್ದರೆ ಅದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ಕೆಂಗಲ್ ಹನುಮಂತಯ್ಯ, ಎಸ್.ಎಂ.ಕೃಷ್ಣ ಅವರಿಂದ ಹಿಡಿದು ಈಗಿನ ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡರ ವರೆಗೆ ಒಕ್ಕಲಿಗ ನಾಯಕರಿಗೆ ಅವಕಾಶ ನೀಡಿ ಬೆಳೆಸಿದ್ದು ಕಾಂಗ್ರೆಸ್ ಪಕ್ಷ. ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಹೊರತುಪಡಿಸಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಬೆಳೆಸಿದ್ದಾರೆ?
1996ರಲ್ಲಿ, 2004ರಲ್ಲಿ ಏನಾಯಿತು ಎನ್ನುವುದನ್ನು ಹಿಂದೆ ಬಹಳಷ್ಟು ಬಾರಿ ಹೇಳಿದ್ದೇನೆ. ನಾನು ಮುಖ್ಯಮಂತ್ರಿಯಾಗದಂತೆ ಮಾಡಲು ದೇವೇಗೌಡರು ಮತ್ತು ಕುಮಾರ ಸ್ವಾಮಿಯವರು ಏನೆಲ್ಲಾ ಮಾಡಿದರು ಎನ್ನುವುದು ರಾಜ್ಯದ ಜನರಿಗೆ ತಿಳಿದಿದೆ. ವಿಧಾನಸಭೆಯಲ್ಲಿಯೇ ಈ ಬಗ್ಗೆ ಮಾತನಾಡಿದ್ದೇನೆ, ಕುಮಾರಸ್ವಾಮಿವಯರೇ ಇದನ್ನೆಲ್ಲ ಒಪ್ಪಿಕೊಂಡಿದ್ದಾರೆ. ಇದು ವಿಧಾನಸಭೆಯ ದಾಖಲೆಯಲ್ಲಿಯೇ ಇದೆ. ಈಗ ದೇವೇಗೌಡರು ಇದ್ದಕ್ಕಿದ್ದ ಹಾಗೆ ನನ್ನ ಮೇಲೆ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡಲು ಕಾರಣಗಳೇನು ಎನ್ನುವುದು ತಿಳಿಯದಷ್ಟು ನಾನು ದಡ್ಡನಲ್ಲ. ಇದರ ಹಿಂದೆ ಗೌಡರ ಜೊತೆ ಯಾರೆಲ್ಲ ಷಾಮೀಲಾಗಿದ್ದಾರೆ ಎನ್ನುವುದು ತಿಳಿದಿದೆ. ಅದಕ್ಕೆಲ್ಲ ಮುಂದೆ ಉತ್ತರ ಕೊಡ್ತೇನೆ.
ನಾನೇನಾದರೂ ವಿರೋಧಪಕ್ಷದ ನಾಯಕನಾಗಿಬಿಟ್ಟರೆ ಹೇಗೆ ಎಂಬ ಚಿಂತೆ ಕಾಡುತ್ತಿರುವ ಕಾರಣಕ್ಕಾಗಿಯೇ ದೇವೇಗೌಡರು ಈಗ ಹೊಸ ನಾಟಕ ಶುರು ಮಾಡಿದ್ದಾರೆ. ಈ ಹೊಸ ನಾಟಕದ ಮೂಲ ಉದ್ದೇಶವೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ನಾಶಮಾಡಿ, ಆ ಸ್ಥಾನದಲ್ಲಿ ತಮ್ಮ ಪಕ್ಷವನ್ನು ಬೆಳೆಸುವುದು. ಇದೆಲ್ಲ ದೇವೇಗೌಡರಿಗೆ ಹೊಸದೇನಲ್ಲ. ಪ್ರಧಾನಿ ಮಾಡಲು ಬೆಂಬಲಿಸಿದ ಪಕ್ಷಕ್ಕೆ ದ್ರೋಹ ಬಗೆದವರು ದೇವೇಗೌಡರು. ಆಗಿನ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಸೀತಾರಾಮ್ ಕೇಸರಿಯವರ ವಿರುದ್ಧದ ಹಳೆಪ್ರಕರಣವನ್ನು ಹುಡುಕಿ ಅವರನ್ನೇ ಜೈಲಿಗೆ ಕಳುಹಿಸುವ ಸಂಚು ಮಾಡಿದವರು ದೇವೇಗೌಡರು. ಆದ್ದರಿಂದ ನಂಬಿದವರಿಗೆ ಕೈಕೊಡುವುದು, ವಿರೋಧಿಗಳ ಮೇಲೆ ಸುಳ್ಳು ಆರೋಪ ಮಾಡುವುದು, ರಾಜಕೀಯ ಲಾಭಕ್ಕಾಗಿ, ಅನುಕಂಪ ಗಿಟ್ಟಿಸಿಕೊಳ್ಳಲು ಅಳುವುದು, ಕೊರಗುವುದು ಇವೆಲ್ಲ ದೇವೇಗೌಡರ ಹಳೆ ಗಿಮಿಕ್ ಗಳು. ಇದನ್ನೆಲ್ಲ ರಾಜ್ಯದ ಜನ ನೋಡುತ್ತಾ ಬಂದಿದ್ದಾರೆ.
ಹಿಂದೆ – ಮುಂದೆ ರಾಜಕೀಯ ಮಾಡುವ ಅಭ್ಯಾಸ ನನಗಿಲ್ಲ. ನೇರ ರಾಜಕಾರಣ ಮಾಡುತ್ತೇನೆ. ತಾತ, ಮೊಮ್ಮಕ್ಕಳು ಸೇರಿ ಇಡೀ ಕುಟುಂಬವೇ ಚುನಾವಣೆಗೆ ನಿಂತಿದ್ದರಿಂದ ಅವರು ಸೋತಿದ್ದು. ಈಗ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಿದ್ದಾರೆ. ಲಿಂಗಾಯತ ವಿರೋಧಿ, ಅಲ್ಪಸಂಖ್ಯಾತರ ವಿರೋಧಿ ಹೀಗೆ ನನ್ನನ್ನು ತಪ್ಪಾಗಿ ಬಿಂಬಿಸಿದ್ದೆ ಹೆಚ್ಚು. 5 ವರ್ಷದ ನನ್ನ ಕಾರ್ಯಕ್ರಮ ಎಲ್ಲ ಜಾತಿ, ಧರ್ಮಗಳನ್ನು ಮೀರಿ ವಿಸ್ತರಿಸಿದೆ. ನನಗೆ ಸರ್ಟಿಫಿಕೇಟ್ ಕೊಡುವುದು ಜನರೇ ಹೊರತು, ದೇವೇಗೌಡರಲ್ಲ.
ಬಿಜೆಪಿಯನ್ನು ಮೆಚ್ಚಿಸಲು ದೇವೇಗೌಡರು ನನ್ನ ಮೇಲೆ ಸುಳ್ಳು ಆರೋಪ ಮಾಡಿರಬಹುದು.
ಐ ಡೋಂಟ್ ಕೇರ್!!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ
ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.
ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.
ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ |
|
http://Visit : www.suddidina.com
ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ
ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.
ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.
ಗ್ರಾಮ ಒನ್ನಲ್ಲೇ ಅರ್ಜಿ ಸಲ್ಲಿಕೆ
ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.
ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.
ಬುಧವಾರ ಮೂರು ಹಂತದ ಪರಿಶೀಲನೆ
ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.
ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.
ಸ್ಥಳದಲ್ಲೇ ಮಂಜೂರಾತಿ, ಆನ್ಲೈನ್ನಲ್ಲಿ ಸ್ಥಿತಿ
ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.
ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.
ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ
ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

ದಿನದ ಸುದ್ದಿ
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.
ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.
ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ
ಈ ಚುನಾವಣೆಯಲ್ಲಿ 21ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.
ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.
ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು
20ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.
ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ
ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.
ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.
ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

ದಿನದ ಸುದ್ದಿ
ವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
ಸುದ್ದಿದಿನ, ಬಳ್ಳಾರಿ: ಬಳ್ಳಾರಿಯಲ್ಲಿ ರಾಜಕೀಯ ವಾಕ್ಸಮರ ಮತ್ತೊಮ್ಮೆ ತೀವ್ರಗೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಮಾಜಿ ಸಚಿವ ಜನಾರ್ಧನ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಿಗಮದ ಹಣ ದುರ್ಬಳಕೆ ಹಾಗೂ ಚಂದ್ರಶೇಖರ್ ಸಾವಿನ ವಿಚಾರವನ್ನು ಪ್ರಸ್ತಾಪಿಸಿ ನಾಗೇಂದ್ರ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಹೈಲೈಟ್ಸ್ |
|
ನಾಗೇಂದ್ರ ಅವರು ಕಣ್ಣೀರು ಹಾಕುವ ಮೂಲಕ ತಮ್ಮ ಮೇಲಿನ ಆರೋಪಗಳನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ರೆಡ್ಡಿ ಟೀಕಿಸಿದ್ದಾರೆ. ಚಂದ್ರಶೇಖರ್ ಸಾವಿಗೆ ಸಂಬಂಧಿಸಿದಂತೆ ನಾಗೇಂದ್ರ ಅವರ ವಿರುದ್ಧ ನೇರ ಆರೋಪದ ಧಾಟಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕಿದೆ ಎಂದು ಹೇಳಿದ್ದಾರೆ.

http://Visit : www.suddidina.com
₹187 ಕೋಟಿ ಹಗರಣದ ಆರೋಪ ಮತ್ತೆ ಮುನ್ನೆಲೆಗೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಜನಾರ್ಧನ ರೆಡ್ಡಿ, ಪ್ರಕರಣದಲ್ಲಿ ಹಲವು ವ್ಯಕ್ತಿಗಳು ಮತ್ತು ನೂರಾರು ಬ್ಯಾಂಕ್ ಖಾತೆಗಳ ಬಳಕೆಯಾಗಿದೆ ಎಂದು ಹೇಳಿದ್ದಾರೆ. ತಮ್ಮ ಹೇಳಿಕೆಯಲ್ಲಿ ಕೆಲವರ ಖಾತೆಗಳಿಗೆ ₹6.50 ಕೋಟಿ ವರ್ಗಾವಣೆಯಾಗಿದೆ ಎಂದು ಉಲ್ಲೇಖಿಸಿದ ಅವರು, ನಗದು ಹಾಗೂ ಚಿನ್ನಾಭರಣ ಖರೀದಿಯ ಬಗ್ಗೆಯೂ ಆರೋಪ ಮಾಡಿದ್ದಾರೆ.
ಹಗರಣದಲ್ಲಿ ನಾಗೇಂದ್ರ ಅವರ ಪಾತ್ರವಿದೆ ಎಂಬುದು ಸ್ಪಷ್ಟ ಎಂದು ರೆಡ್ಡಿ ಆರೋಪಿಸಿದ್ದು, ತಪ್ಪು ಮಾಡಿಲ್ಲ ಎನ್ನುವ ನಾಗೇಂದ್ರ ಅವರಿಗೆ ಕಾಂಗ್ರೆಸ್ ಪಕ್ಷ ಏಕೆ ಸಚಿವ ಸ್ಥಾನದಿಂದ ರಾಜೀನಾಮೆ ಪಡೆಯಿತು ಎಂಬ ಪ್ರಶ್ನೆಯನ್ನೂ ಮುಂದಿಟ್ಟಿದ್ದಾರೆ.
ರಾಜಕೀಯ ಹಿನ್ನೆಲೆ ಕೆದಕಿದ ರೆಡ್ಡಿ
ನಾಗೇಂದ್ರ ಅವರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ಪಾತ್ರವಿತ್ತು ಎಂದು ಹೇಳಿದ ರೆಡ್ಡಿ, ಬಿಜೆಪಿ ವಿರುದ್ಧ ಮಾತನಾಡುವ ಮೊದಲು ತಮ್ಮ ರಾಜಕೀಯ ಆರಂಭವನ್ನು ನೆನಪಿಸಿಕೊಳ್ಳಬೇಕು ಎಂದು ಟಾಂಗ್ ನೀಡಿದ್ದಾರೆ. ಮನुस್ಮೃತಿ, ಬಿಜೆಪಿ ಹಾಗೂ ವಾಲ್ಮೀಕಿ ಸಮುದಾಯದ ವಿಚಾರದಲ್ಲಿ ನಾಗೇಂದ್ರ ನೀಡಿರುವ ಹೇಳಿಕೆಗಳಿಗೂ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸೋಲು-ಗೆಲುವು ಕಂಡಿರುವುದನ್ನು ಉಲ್ಲೇಖಿಸಿದ ರೆಡ್ಡಿ, ಶ್ರೀರಾಮುಲು ಅವರನ್ನು ‘ರಿಜೆಕ್ಟೆಡ್ ಪೀಸ್’ ಎಂದು ಟೀಕಿಸಿದ್ದ ನಾಗೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
10 ಕ್ಷೇತ್ರಗಳಿಗೆ ರಾಜೀನಾಮೆ ನೀಡಿ ಚುನಾವಣೆ ಎದುರಿಸುವಂತೆ ಸವಾಲು
ಅಖಂಡ ಬಳ್ಳಾರಿ ಜಿಲ್ಲೆಯ 10 ವಿಧಾನಸಭಾ ಕ್ಷೇತ್ರಗಳ ಶಾಸಕರು ಹಾಗೂ ಸಂಸದರು ರಾಜೀನಾಮೆ ನೀಡಿ ಮತ್ತೆ ಚುನಾವಣೆಗೆ ಬಂದರೆ ಬಿಜೆಪಿ ಸಿದ್ಧವಿದೆ ಎಂದು ಜನಾರ್ಧನ ರೆಡ್ಡಿ ಸವಾಲು ಹಾಕಿದ್ದಾರೆ. ಹತ್ತು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸುವ ಮೂಲಕ ತಮ್ಮ ರಾಜಕೀಯ ಶಕ್ತಿ ಪ್ರದರ್ಶಿಸುವುದಾಗಿ ಅವರು ಹೇಳಿದ್ದಾರೆ.
ನಾಗೇಂದ್ರ ರಾಜೀನಾಮೆ ನೀಡಿದ್ದರೂ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ತುಕಾರಾಂ ರಾಜೀನಾಮೆಗೂ ಆಗ್ರಹ
ವಾಲ್ಮೀಕಿ ಹಗರಣದ ಹಣದ ಪ್ರಭಾವದಿಂದಲೇ ತುಕಾರಾಂ ಸಂಸದರಾಗಿದ್ದಾರೆ ಎಂದು ಆರೋಪಿಸಿದ ಜನಾರ್ಧನ ರೆಡ್ಡಿ, ಮೊದಲು ಕಾಂಗ್ರೆಸ್ ತುಕಾರಾಂ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಆರೋಪಗಳು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

-
ದಿನದ ಸುದ್ದಿ5 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ6 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ5 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ6 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ6 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ5 days agoಡಾಲಿಯ ಕನಸು ಒಂದೇ ಹೀರೋ ಆಗೋದು
-
ದಿನದ ಸುದ್ದಿ6 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

