ದಿನದ ಸುದ್ದಿ
ಜಾಗತಿಕ ಬಂಡವಾಳಶಾಹಿಯ ವ್ಯವಸ್ಥಾಗತ ಬಿಕ್ಕಟ್ಟು
- ನವ ಉದಾರ ಬಂಡವಾಳಶಾಹಿಯು ಈಗ ಆ ಬಿಕ್ಕಟ್ಟುಗಳಿಗಿಂತ ಭಿನ್ನವಾದ ಒಂದು ವ್ಯವಸ್ಥಾಗತ ಬಿಕ್ಕಟ್ಟಿಗೆ ಒಳಗಾಗಿದೆ. ತೇಪೆ ಹಚ್ಚುವ ಕೆಲಸಗಳ ಮೂಲಕ ಈ ಬಿಕ್ಕಟ್ಟನ್ನು ಪರಿಹರಿಸಲು ಸಾಧ್ಯವಿಲ್ಲ; ಎಲ್ಲಿಯವರೆಗೆ ಹಣಕಾಸು ಬಂಡವಾಳದ ಯಜಮಾನಿಕೆ ಮುಂದುವರೆಯುತ್ತದೆಯೋ ಮತ್ತು ಜಾಗತಿಕ ಹಣಕಾಸಿನ ಹರಿವಿನ ಸುಳಿಗೆ ಸಿಕ್ಕಿದ ದೇಶ ದೇಶಗಳು ಆ ಸುಳಿಯಲ್ಲಿಯೇ ಉಳಿಯುತ್ತವೆಯೋ ಅಲ್ಲಿಯವರೆಗೆ ಈ ಬಿಕ್ಕಟ್ಟೂ ಮುಂದುವರೆಯುತ್ತದೆ, ಮತ್ತಷ್ಟು ಹದಗೆಡುತ್ತದೆ. ಇಂತಹ ಅಂತಾರಾಷ್ಟ್ರೀಯ ಹಣಕಾಸು ಬಂಡವಾಳದ ಯಜಮಾನಿಕೆಯಿಂದ ಹೊರ ಬರಲು, ಪ್ರತಿಯೊಂದು ದೇಶದ ಒಳಗೂ, ಒಂದು ಪರ್ಯಾಯ ಅಜೆಂಡಾದೊಂದಿಗೆ ದುಡಿಯುವ ಜನತೆಯನ್ನು ಅಣಿನೆರೆಸಬೇಕಾಗುತ್ತದೆ.
ಬಂಡವಾಳಶಾಹಿ ಅರ್ಥವ್ಯವಸ್ಥೆಯಲ್ಲಿ ಆಗಾಗ ಅಥವಾ ಚಕ್ರೀಯವಾಗಿ ಬಿಕ್ಕಟ್ಟುಗಳು ಉಂಟಾಗುತ್ತವೆ. ಅಂತಹ ಸಂದರ್ಭದಲ್ಲಿ, ವ್ಯವಸ್ಥೆಯ ಚೌಕಟ್ಟಿನೊಳಗೆ, ಅಂದರೆ ವ್ಯವಸ್ಥೆಯ ಪ್ರಚಲಿತ ವರ್ಗಗಳ ರೂಪ ರಚನೆ ಇವುಗಳಿಗೆ ಅನುಗುಣವಾಗಿ ಬಿಕ್ಕಟ್ಟನ್ನು ಪರಿಹರಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗತ್ತದೆ. ಇದರಿಂದ ಬಿಕ್ಕಟ್ಟು ಮತ್ತಷ್ಟು ಹದಗೆಡುತ್ತದಷ್ಟೇ. ಈ ಅರ್ಥದಲ್ಲಿ ನವ ಉದಾರ ಬಂಡವಾಳಶಾಹಿಯು ಈಗ ಆ ಬಿಕ್ಕಟ್ಟುಗಳಿಗಿಂತ ಭಿನ್ನವಾದ ಒಂದು ವ್ಯವಸ್ಥಾಗತ ಬಿಕ್ಕಟ್ಟಿಗೆ ಒಳಗಾಗಿದೆ. ತೇಪೆ ಹಚ್ಚುವ ಕೆಲಸಗಳ ಮೂಲಕ ಈ ಬಿಕ್ಕಟ್ಟನ್ನು ಪರಿಹರಿಸಲು ಸಾಧ್ಯವಿಲ್ಲ; ಈ ತೇಪೆದಾರಿಗಿಂತಲೂ ಹೆಚ್ಚು ಉಪಯುಕ್ತ ಎನ್ನುವ ಕ್ರಮ ಕೈಗೊಂಡರೂ ಬಿಕ್ಕಟ್ಟು ಉಲ್ಬಣಗೊಳ್ಳುತ್ತಲೇ ಹೋಗುತ್ತದೆ. ಈ ಮಾತಿಗೆ ಉದಾಹರಣೆಯಾಗಿ ಅಮೇರಿಕಾದಲ್ಲಿ ಟ್ರಂಪ್, ಚೀನಾ, ಭಾರತ ಮತ್ತು ಇತರ ಕೆಲವು ದೇಶಗಳ ಆಮದುಗಳ ಮೇಲೆ ಅಧಿಕ ಸುಂಕ ಹೇರುವ ಮೂಲಕ ಕೈಗೊಂಡಿರುವ ರಕ್ಷಣಾತ್ಮಕ ಕ್ರಮಗಳನ್ನು ಗಮನಿಸಬಹುದು.
ಆದರೆ, ನವ ಉದಾರವಾದಿ ಜಾಗತೀಕರಣದ ವಿಶಾಲ ಚೌಕಟ್ಟನ್ನು ಮೀರದ ಹೊರತು, ಅಂದರೆ, ಈ ಜಾಗತೀಕರಣದ ಚಾಲಕ ಶಕ್ತಿಯೇ ಆಗಿರುವ ಅಂತಾರಾಷ್ಟ್ರೀಯ ಹಣಕಾಸು ಬಂಡವಾಳದ ಯಜಮಾನಿಕೆಯಿಂದ ಹೊರ ಬರದ ಹೊರತು, ಟ್ರಂಪ್ ಎಷ್ಟೇ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಂಡರೂ ಬಿಕ್ಕಟ್ಟು ಪರಿಹಾರವಾಗುವುದಿಲ್ಲ. ಅದು ಇನ್ನಷ್ಟು ಹದಗೆಡುತ್ತದೆ.
ಈ ಬಿಕ್ಕಟ್ಟಿನ ರೋಗ ಲಕ್ಷಣಗಳು ಸ್ಪಷ್ಟವಾಗಿಯೇ ಪ್ರಕಟಗೊಂಡಿವೆ. 2008ರ ಬಿಕ್ಕಟ್ಟಿನ ನಂತರ, ಬಡ್ಡಿದರಗಳನ್ನು ಹತ್ತಿರ ಹತ್ತಿರ ಸೊನ್ನೆಯ ಮಟ್ಟಕ್ಕೆ ಇಳಿಸುವ ಅಗ್ಗದ ಬಡ್ಡಿ ನೀತಿಯನ್ನು ಅಮೇರಿಕಾ ಮತ್ತು ಹಲವು ದೇಶಗಳು ಅನುಸರಿಸಿದವು. ಈ ಕ್ರಮದಿಂದಾಗಿ ಜಾಗತಿಕ ಬಂಡವಾಳಶಾಹಿಗೆ ಉಸಿರಾಟ ಸರಾಗವಾಯಿತು. ಅಷ್ಟಾಗಿಯೂ, ವಿಶ್ವವು ಈಗ ಮತ್ತೊಮ್ಮೆ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿದೆ. ಅಮೇರಿಕಾದಲ್ಲಿ ವ್ಯವಹಾರ ಮತ್ತು ಉದ್ದಿಮೆಗಳ ಮೇಲಿನ ಹೂಡಿಕೆ ಇಳಿಯುತ್ತಿದೆ. ಈ ವರ್ಷದ ಜುಲೈನಲ್ಲಿ ಅಮೇರಿಕಾದ ಕೈಗಾರಿಕಾ ಉತ್ಪಾದನೆ ಅದರ ಹಿಂದಿನ ತಿಂಗಳಿಗಿಂತ ಶೇ.0.2 ಕಡಿಮೆ ಇತ್ತು. ಈ ವರ್ಷದ ಎರಡನೆಯ ತ್ರೈಮಾಸಿಕದಲ್ಲಿ ಬ್ರಿಟನ್ನಿನ ಮತ್ತು ಜರ್ಮನಿಯ ಅರ್ಥವ್ಯವಸ್ಥೆಗಳೂ ಕುಗ್ಗಿದವು. ಇಟಲಿ, ಬ್ರೆಜಿಲ್, ಮೆಕ್ಸಿಕೊ, ಅರ್ಜೆಂಟೈನಾ ಮತ್ತು ಭಾರತದಂತಹ ದೇಶಗಳಲ್ಲೂ ಅದೇ ಪರಿಸ್ಥಿತಿ ಇದೆ. ಈ ಜಾಗತಿಕ ಹಿಂಜರಿತದ ಪರಿಣಾಮವಾಗಿ ಚೀನಾದಲ್ಲೂ ಬೆಳವಣಿಗೆಯ ದರ ಇಳಿಯುತ್ತಿದೆ.
ಈಗ ತಲೆದೋರುತ್ತಿರುವ ಆರ್ಥಿಕ ಹಿಂಜರಿತಕ್ಕೆ ಎಲ್ಲ ದೇಶಗಳ ನೀತಿ-ನಿರೂಪಕರು ಮತ್ತೊಮ್ಮೆ ಬಡ್ಡಿ ದರಗಳ ಮತ್ತಷ್ಟು ಇಳಿಕೆ ಮಾಡುವ ಮೂಲಕವೇ ಸ್ಪಂದಿಸುತ್ತಿದ್ದಾರೆ. ಈಗಾಗಲೇ ಬಡ್ಡಿ ದರಗಳನ್ನು ಹತ್ತಿರ ಹತ್ತಿರ ಋಣಾತ್ಮಕ ಮಟ್ಟಕ್ಕೆ ಇಳಿಸಿರುವ ಯೂರೋಪಿಯನ್ ಕೇಂದ್ರೀಯ ಬ್ಯಾಂಕ್, ಬಡ್ಡಿ ದರಗಳನ್ನು ಇನ್ನೂ ಕೆಳಗಿಳಿಸುವ ಯೋಜನೆಯಲ್ಲಿದೆ. ಭಾರತದಲ್ಲೂ ಸಹ ಈಗಾಗಲೇ ಬಡ್ಡಿ ದರಗಳ ಇಳಿಕೆಯಾಗಿದೆ. ಈ ರೀತಿಯಲ್ಲಿ ಬಡ್ಡಿ ದರಗಳನ್ನು ಇಳಿಕೆ ಮಾಡುತ್ತಿರುವ ಉದ್ದೇಶ ಏನೆಂದರೆ, ಬಡ್ಡಿ ದರ ಕಡಿಮೆ ಇದ್ದರೆ ಬಂಡವಾಳ ಹೂಡಿಕೆ ವೃದ್ಧಿಸುತ್ತದೆ ಎಂಬುದಕ್ಕಿಂತಲೂ ಹೆಚ್ಚಾಗಿ; ಕಡಿಮೆಯ ಬಡ್ಡಿ ದರಗಳಿಂದಾಗಿ ಆಸ್ತಿಗಳ ಬೆಲೆ ಗುಳ್ಳೆಗಳು ಏಳುತ್ತವೆ ಎಂಬುದು. ಇವರ ಪ್ರಕಾರ, ಆಸ್ತಿಗಳ ಬೆಲೆ ಗುಳ್ಳೆಗಳು ಒಟ್ಟಾರೆ ಬೇಡಿಕೆಯನ್ನು ಹೆಚ್ಚಿಸುತ್ತವೆ. ಹೇಗೆಂದರೆ, ಆಸ್ತಿಗಳ ಬೆಲೆ ಗುಳ್ಳೆಗಳು ತಮ್ಮ ಸಂಪತ್ತನ್ನು ಹೆಚ್ಚಿಸಿವೆ ಆಸ್ತಿಯ ಒಡೆಯರಿಗೆ ಅನಿಸುತ್ತದೆ. ಅನೇಕ ರೀತಿಯಲ್ಲಿ ಹೆಚ್ಚು ಖರ್ಚುಮಾಡುತ್ತಾರೆ, ಅದರಿಂದಾಗಿ ಬೇಡಿಕೆ ವೃದ್ದಿಸುತ್ತದೆ.
ಎಲ್ಲ ದೇಶಗಳ ನೀತಿ-ನಿರೂಪಕರೂ ಇದೇ ಮಾದರಿಯಲ್ಲೇ ಏಕೆ ಸ್ಪಂದಿಸುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಾಗುತ್ತದೆ. ಎರಡನೆಯ ಮಹಾ ಯುದ್ಧದ ನಂತರದ ಅವಧಿಯಲ್ಲಿ-ಅಂದರೆ, ನವ ಉದಾರವಾದಿ ಜಾಗತೀಕರಣವು ಹೆಜ್ಜೆ ಇಡುವ ಮುನ್ನ, ಆರ್ಥಿಕ ಹಿಂಜರಿತದ ಸೂಚನೆ ಇದ್ದಾಗ, ಒಟ್ಟಾರೆ ಬೇಡಿಕೆಯನ್ನು ಹೆಚ್ಚಿಸುವ ಸಲುವಾಗಿ ಸರ್ಕಾರದ ವೆಚ್ಚಗಳನ್ನು ಹೆಚ್ಚಿಸಬಹುದಿತ್ತು. ಸರ್ಕಾರಗಳು, ಅಗತ್ಯವಿದ್ದರೆ, ತಮ್ಮ ವಿತ್ತೀಯ ಕೊರತೆಯ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದಿತ್ತು. ಏಕೆಂದರೆ, ಆ ಸಮಯದಲ್ಲಿ ಬಂಡವಾಳದ ಹರಿದಾಡುವಿಕೆಯ ಮೇಲೆ ನಿಯಂತ್ರಣವಿತ್ತು. ಹಾಗಾಗಿ, ವಿತ್ತೀಯ ಕೊರತೆಯ ಮಟ್ಟ ಏರಿದ ಕಾರಣದಿಂದಲೇ ಬಂಡವಾಳವು ಪಲಾಯನ ಗೈಯ್ಯುವ ಅಪಾಯವಿರಲಿಲ್ಲ.
ಯುದ್ದಾನಂತರದಲ್ಲಿ ಬಂಡವಾಳಶಾಹಿ ಅರ್ಥವ್ಯವಸ್ಥೆಯ ಶಿಲ್ಪಿಗಳಲ್ಲಿ ಒಬ್ಬರಾದ ಪ್ರಸಿದ್ಧ ಅರ್ಥಶಾಸ್ತ್ರಜ್ಞ ಜಾನ್ ಮೇನಾರ್ಡ್ ಕೀನ್ಸ್ ಅವರು ವಿಶ್ವ ಹೀಗಿರಬೇಕು ಎಂದು ಕಲ್ಪಿಸಿಕೊಂಡಿದ್ದ ದೃಶ್ಯ ಇದಾಗಿತ್ತು. ಹಣಕಾಸು ಬಂಡವಾಳದ ಅಂತಾರಾಷ್ಟ್ರೀಕರಣವನ್ನು ಕೀನ್ಸ್ ವಿರೋಧಿಸಿದ್ದರು. (ಹಣಕಾಸು ಬಂಡವಾಳವು ಎಲ್ಲಕ್ಕಿಂತ ಮಿಗಿಲಾಗಿ ರಾಷ್ಟ್ರೀಯವಾಗಿಯೇ ಇರಬೇಕು ಎಂದು ಅವರು ಹೇಳಿದ್ದರು).
ಉದ್ಯೋಗ ಸೃಷ್ಟಿಯ ಉದ್ದೇಶಕ್ಕಾಗಿ ಸರ್ಕಾರವು ಕೈಗೊಳ್ಳುವ ಹೆಚ್ಚು ಹೆಚ್ಚು ಖರ್ಚಿನ ಕ್ರಮಗಳನ್ನು ಯಾವತ್ತೂ ವಿರೋಧಿಸುವ ಹಣಕಾಸು ಬಂಡವಾಳವು ಪ್ರಭುತ್ವವನ್ನು ತನ್ನ ಕೈಗೊಂಬೆಯಾಗಿಸಿಕೊಳ್ಳುವ ಮೂಲಕ, ರಾಷ್ಟ್ರ-ಪ್ರಭುತ್ವದ ಉದ್ಯೋಗ ಸೃಷ್ಟಿಯ ಸಾಮರ್ಥ್ಯವನ್ನು ಒಳಗೊಳಗೇ ನಾಶಪಡಿಸುತ್ತದೆ ಎಂಬ ನೆಲೆಯಲ್ಲಿ ಅವರು ಹಣಕಾಸು ಬಂಡವಾಳವು ಅಂತಾರಾಷ್ಟ್ರೀಕರಣಗೊಳ್ಳುವುದನ್ನು ವಿರೋಧಿಸಿದ್ದರು. ಬಂಡವಾಳಶಾಹಿ ಅರ್ಥವ್ಯವಸ್ಥೆಯ ಸಂರಕ್ಷಕರಾಗಿದ್ದ ಕೀನ್ಸ್, ರಾಷ್ಟ್ರ-ಪ್ರಭುತ್ವವು ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸದ ಹೊರತು, ಸಮಾಜವಾದವು ಒಡ್ಡಿದ ಬೆದರಿಕೆಯಿಂದ ಬಂಡವಾಳಶಾಹಿಗೆ ಉಳಿಗಾಲವಿಲ್ಲ ಎಂದು ಭಯಪಟ್ಟಿದ್ದರು.
ಆದರೆ, ಯುದ್ದಾನಂತರದ ಕೆಲವು ವರ್ಷಗಳ ಕಾಲಾವಧಿಯಲ್ಲಿ, ಅಮೇರಿಕಾದ ಪಾವತಿ ಶೇಷದ ಚಾಲ್ತಿ ಖಾತೆಯಲ್ಲಿ ಸತತವಾಗಿ ಬಹಳ ಕಾಲ ಭಾರಿ ಮೊತ್ತದ ಕೊರತೆಯ ಹಣ (ಇದು ಬೇರೆ ಬೇರೆ ದೇಶಗಳು ತಮ್ಮ ರಫ್ತುಗಳ ಮೂಲಕ ಗಳಿಸಿದ ಹಣ), ಮತ್ತು, ತದನಂತರದ ಅವಧಿಯಲ್ಲಿ, ಅಂದರೆ 197೦ರ ದಶಕದಲ್ಲಿ, ತೈಲ ಬೆಲೆಗಳ ವಿಪರೀತ ಹೆಚ್ಚಳದಿಂದಾಗಿ ತೈಲ ಉತ್ಪಾದಕ ದೇಶಗಳ ಅಪಾರ ಲಾಭದ ಆದಾಯವು ಅಭಿವೃದ್ಧಿ ಹೊಂದಿದ ದೇಶಗಳ ಮಹಾ ನಗರ ಕೇಂದ್ರಿತ ಬ್ಯಾಂಕ್ಗಳಲ್ಲಿ ಶೇಖರಣೆಯಾಗಿತ್ತು. ಅಂತಹ ಪರಿಸ್ಥಿತಿಯಲ್ಲಿ, ಬಂಡವಾಳದ ಹರಿದಾಡುವಿಕೆಯ ಮೇಲಿದ್ದ ನಿಯಂತ್ರಣವನ್ನು ಕಿತ್ತುಹಾಕುವಂತೆ ಹಣಕಾಸು ಬಂಡವಾಳವು ಒತ್ತಡ ಹೇರಿತು. ತನಗೆ ಎಲ್ಲಿಗೆ ಬೇಕೊ ಅಲ್ಲಿಗೆ ಮುಕ್ತವಾಗಿ ಚಲಿಸಲು ಅನುವಾಗುವಂತೆ ಇಡೀ ವಿಶ್ವವನ್ನೇ ತೆರೆದಿಡಬೇಕು ಎಂದು ಹಣಕಾಸು ಬಂಡವಾಳವು ಬಯಸಿತು ಮತ್ತು ಆ ಪ್ರಯತ್ನದಲ್ಲಿ ಕೊನೆಗೆ ಯಶಸ್ವಿಯೂ ಆಯಿತು. ಈ ರೀತಿಯಲ್ಲಿ ಹಣಕಾಸು ಬಂಡವಾಳವು ಜಾಗತಿಕವಾಗಿ ತನ್ನ ಯಜಮಾನಿಕೆಯನ್ನು ಸ್ಥಾಪಿಸಿಕೊಂಡಿತು.
ಈ ವಿದ್ಯಮಾನವು, ಉದ್ಯೋಗ ಸೃಷ್ಟಿಯ ಮಟ್ಟ ಕಾಯ್ದುಕೊಳ್ಳುತ್ತಿದ್ದ ತನ್ನ ಜವಾಬ್ದಾರಿಕೆಯಿಂದ ರಾಷ್ಟ್ರ-ಪ್ರಭುತ್ವವು ಹಿಂದೆ ಸರಿಯಿತು ಎಂಬುದನ್ನು ಸೂಚಿಸುತ್ತದೆ. ಹಾಗಾಗಿ, ಈ ರೀತಿಯಲ್ಲಿ ಅಸ್ತಿತ್ವಕ್ಕೆ ಬಂದ ನವ ಉದಾರ ಹಣಕಾಸು ಬಂಡವಾಳವು ಒಟ್ಟಾರೆ ಬೇಡಿಕೆಯನ್ನು ಉತ್ತೇಜಿಸಲು ಉಳಿಸಿಕೊಂಡಿರುವ ಏಕೈಕ ಮಾರ್ಗವೇ ಆಸ್ತಿಗಳ ಬೆಲೆ ಗುಳ್ಳೆಗಳ ಉದ್ದೀಪನೆ; ಮತ್ತು ಈ ಉದ್ದೇಶಕ್ಕಾಗಿ ಬಡ್ಡಿದರ ನೀತಿಯ ಬಳಕೆ.
ಆದರೆ, ಯಾವಾಗ ಬೇಕಾದರೂ ನಿಯಂತ್ರಿಸಬಹುದಾದ ಸರ್ಕಾರದ ವೆಚ್ಚಗಳಂತಲ್ಲದೆ, ಬೇಕು ಎಂದ ಕೂಡಲೇ ಗುಳ್ಳೆಗಳು ಪ್ರತ್ಯಕ್ಷವಾಗುವುದಿಲ್ಲ. 1990ರ ದಶಕದಲ್ಲಿ (ಅಮೇರಿಕಾದಲ್ಲಿ ಡಾಟ್-ಕಾಂ ಗುಳ್ಳೆಗಳು), ಮತ್ತು ಈ ಶತಮಾನದ ಆರಂಭದ ವರ್ಷಗಳಲ್ಲಿ (ಅಮೇರಿಕಾದಲ್ಲಿ ವಸತಿ ಗುಳ್ಳೆಗಳು) ಈ ಗುಳ್ಳೆಗಳು ಒಟ್ಟಾರೆ ಬೇಡಿಕೆಯನ್ನು ಸ್ವಲ್ಪ ಸಮಯದ ವರೆಗೆ ಉದ್ದೀಪಿಸಿದಂತೆ ಕಂಡಿತು. ಆದರೆ, ವಸತಿ ಗುಳ್ಳೆಗಳು ಒಡೆದ ಕೂಡಲೇ ಜನ ಜಾಗೃತರಾದರು. ಬಡ್ಡಿದರಗಳನ್ನು ಹತ್ತಿರ ಹತ್ತಿರ ಸೊನ್ನೆಯ ಮಟ್ಟಕ್ಕೆ ಇಳಿಸಿದರೂ ಸಹ, ಅಷ್ಟೇ ಪರಿಣಾಮದ ಹೊಸ ಗುಳ್ಳೆಗಳು ಪ್ರತ್ಯಕ್ಷವಾಗಲಿಲ್ಲ.
ಅದೇ ಸಮಯದಲ್ಲಿ, ಪ್ರತಿಯೊಂದು ದೇಶದಲ್ಲೂ ಮತ್ತು ಇಡೀ ವಿಶ್ವದಲ್ಲೇ ಒಟ್ಟಾರೆ ಬೇಡಿಕೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಪ್ರಭಾವಪೂರ್ಣವಾಗಿ ಕಾರ್ಯ ಪ್ರವೃತ್ತವಾಗಿರುವ ಇನ್ನೊಂದು ಅಂಶವೂ ಇದೆ. ಒಟ್ಟು ಉತ್ಪತ್ತಿಯಲ್ಲಿ ಮಿಗುತಾಯದ ಪಾಲು ಹೆಚ್ಚುತ್ತಿರುವ ಅಂಶವೇ ಆ ಇನ್ನೊಂದು ಅಂಶ. ಜಾಗತೀಕರಣವೆಂದರೆ, ಎಲ್ಲಕ್ಕಿಂತ ಮಿಗಿಲಾಗಿ, ಹಣಕಾಸೂ ಸೇರಿದಂತೆ, ಬಂಡವಾಳವು ದೇಶ ದೇಶಗಳ ಗಡಿಯಾಚೆಗೆ ಮುಕ್ತವಾಗಿ ಚಲಿಸುವ ಅವಕಾಶ. ಬಂಡವಾಳದ ಈ ಚಲನೆಯಿಂದಾಗಿ, ಜಾಗತಿಕ ಬೇಡಿಕೆಯನ್ನು ಪೂರೈಸಲು ಹೆಚ್ಚು-ಕೂಲಿಯ ಬೃಹತ್ ನಗರಗಳಲ್ಲಿ ನೆಲೆಸಿದ್ದ ಅನೇಕಾನೇಕ ಚಟುವಟಿಕೆಗಳು ಕಡಿಮೆ-ಕೂಲಿಯ ಮೂರನೆಯ ಜಗತ್ತಿನ ದೇಶಗಳಲ್ಲಿ ಮರು-ನೆಲೆಗೊಂಡವು. ಈ ವಿದ್ಯಮಾನದಿಂದಾಗಿ ಮುಂದುವರೆದ ದೇಶಗಳ ಕಾರ್ಮಿಕರನ್ನು ಮೂರನೆಯ ಜಗತ್ತಿನ ದೇಶಗಳ ಕಾರ್ಮಿಕರೊಂದಿಗೆ ಪೈಪೋಟಿಗೆ ತಳ್ಳಿದ ಕಾರಣದಿಂದಾಗಿ ಮುಂದುವರೆದ ದೇಶಗಳ ಕಾರ್ಮಿಕರ ಕೂಲಿಯು ಕೆಳ ಮಟ್ಟದಲ್ಲೇ ಉಳಿಯುವಂತಾಗಿದೆ.
ಅದೇ ಸಮಯದಲ್ಲಿ, ಮೂರನೆಯ ಜಗತ್ತಿನ ದೇಶಗಳ ಕಾರ್ಮಿಕರ ಕೂಲಿಯು ಬದುಕುಳಿಯುವ ಮಟ್ಟದಲ್ಲೇ ಉಳಿದಿದೆ, ಏಕೆಂದರೆ, ಕೈಗಾರಿಕಾ ಚಟುವಟಿಕೆಗಳು ಮರು-ನೆಲೆಗೊಂಡ ಬಳಿಕವೂ ಬರಿದಾಗದಷ್ಟು ದೊಡ್ಡ ಪ್ರಮಾಣದ ಮೀಸಲು ಶ್ರಮಿಕ ಪಡೆ ಮೂರನೆಯ ಜಗತ್ತಿನ ದೇಶಗಳಲ್ಲಿದೆ. ಆದ್ದರಿಂದ, ಜಗತ್ತಿನಾದ್ಯಂತ ಕಾರ್ಮಿಕರ ಉತ್ಪಾದಕತಾ ಪರಿಮಾಣವು ಹೆಚ್ಚಿದರೂ ಸಹ, ಜಗತ್ತಿನಾದ್ಯಂತ ಕಾರ್ಮಿಕರ ಕೂಲಿಯ ದರದ ಏರಿಕೆಯ ಪರಿಮಾಣವು ಹೆಚ್ಚಾಗುವುದಿಲ್ಲ. ಈ ಕಾರಣದಿಂದಾಗಿಯೇ ಪ್ರತಿಯೊಂದು ದೇಶದಲ್ಲೂ ಮತ್ತು ಇಡೀ ವಿಶ್ವದಲ್ಲೇ ಮಿಗುತಾಯದ ಪಾಲು ಹೆಚ್ಚುತ್ತಿದೆ.
ಮಿಗುತಾಯದ ಪಾಲಿನ ಈ ಪರಿಯ ಹೆಚ್ಚಳವು ಅಗತ್ಯಕ್ಕಿಂತ ಅಧಿಕವಾಗಿ ಉತ್ಪಾದಿಸುವ (Overproduction) ಪ್ರವೃತ್ತಿಯನ್ನು ಬೆಳೆಸುತ್ತದೆ, ಏಕೆಂದರೆ, ತಮ್ಮ ವರಮಾನದ ಪ್ರತಿ ಯೂನಿಟ್ನಲ್ಲಿ ಕೂಲಿಗಾರರ ಬಳಕೆಯ ಭಾಗವು, ಮಿಗುತಾಯ ಸಂಪಾದಿಸುವವರ ವರಮಾನದ ಪ್ರತಿ ಯೂನಿಟ್ನ ಬಳಕೆಯ ಭಾಗಕ್ಕಿಂತ ಬಹಳ ದೊಡ್ಡದಿರುತ್ತದೆ. ಅಗತ್ಯಕ್ಕಿಂತ ಅಧಿಕವಾಗಿ ಉತ್ಪಾದಿಸುವ ಈ ಪ್ರವೃತ್ತಿಯನ್ನು ಪ್ರತಿಯೊಂದು ದೇಶದೊಳಗೂ ಸರ್ಕಾರದ ವೆಚ್ಚಗಳನ್ನು ಏರಿಸುವ ಮೂಲಕ ಸರಿದೂಗಿಸಬಹುದಿತ್ತು. ಆದರೆ ಇದು ಸಾಧ್ಯವೇ ಇಲ್ಲದುದರಿಂದ, ಅಗತ್ಯಕ್ಕಿಂತ ಅಧಿಕವಾಗಿ ಉತ್ಪಾದಿಸುವ ಪ್ರವೃತ್ತಿಯನ್ನು ತಡೆಯುವ ಏಕ ಮಾತ್ರ ಸಾಧ್ಯತೆ ಎಂದರೆ, ಆಸ್ತಿಗಳ ಬೆಲೆ ಗುಳ್ಳೆಗಳನ್ನು ಎಬ್ಬಿಸುವುದು. ಇಂತಹ ಗುಳ್ಳೆಗಳು ಏಳದೆ ಇದ್ದಾಗ ಅಗತ್ಯಕ್ಕಿಂತ ಅಧಿಕವಾಗಿ ಉತ್ಪಾದಿಸುವ ಪ್ರವೃತ್ತಿಯು ಪೂರ್ಣ ಬಲದೊಂದಿಗೆ ಕೆಲಸಮಾಡುತ್ತದೆ. ನಾವೀಗ ನೋಡುತ್ತಿರುವುದು ಈ ವಿದ್ಯಮಾನವನ್ನೇ.
ಇಂತಹ ಪರಿಸ್ಥಿತಿಯಲ್ಲಿ ರೂಢಿಗತವಾಗಿ ಬಳಸುವ ಬಡ್ಡಿ ದರ ಇಳಿಸುವ ಉಪಕರಣವು ಪರಿಣಾಮಕಾರಿಯಾಗಿ ಕೆಲಸ ಮಾಡುವುದಿಲ್ಲ. ಆದ್ದರಿಂದ, ಒಟ್ಟಾರೆ ಬೇಡಿಕೆಯ ಕೊರತೆಯನ್ನು ಸರಿದೂಗಿಕೊಳ್ಳುವ ಪ್ರಯತ್ನವಾಗಿ, ಸರ್ಕಾರದ ವೆಚ್ಚಗಳನ್ನು ಹೆಚ್ಚಿಸಲಾರದ ಪರಿಸ್ಥಿತಿಯಲ್ಲಿ, ಡೊನಾಲ್ಡ್ ಟ್ರಂಪ್ ತಮ್ಮ ದೇಶ ಎದುರಿಸುತ್ತಿರುವ ಬಿಕ್ಕಟ್ಟಿನಿಂದ ಹೊರಬರಲು ರಕ್ಷಣಾತ್ಮಕ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ತಮ್ಮ ಬಿಕ್ಕಟ್ಟನ್ನು ಬೇರೆ ಬೇರೆ ದೇಶಗಳಿಗೆ, ಅದರಲ್ಲೂ ಮುಖ್ಯವಾಗಿ ಚೀನಾ ದೇಶಕ್ಕೆ, ರಫ್ತು ಮಾಡುತ್ತಿದ್ದಾರೆ ಚೀನಾದಿಂದ ಆಮದು ಮಾಡಿಕೊಳ್ಳುವ ಅನೇಕ ವಸ್ತುಗಳ ಮೇಲೆ ಟ್ರಂಪ್ ಶೇ.25ರಷ್ಟು ಸುಂಕ ಹೇರಿದ್ದಾರೆ. ಮುಯ್ಯಿಗೆ ಮುಯ್ಯಿ ಎಂಬಂತೆ ಅಮೇರಿಕಾದಿಂದ ಆಮದು ಮಾಡಿಕೊಳ್ಳುವ ಅನೇಕ ವಸ್ತುಗಳ ಮೇಲೆ ಚೀನಾ ಶೇ.25ರಷ್ಟು ಸುಂಕ ಹೇರಿದೆ.
ಬಿಕ್ಕಟ್ಟಿನಿಂದ ಹೊರಬರುವ ಸಾಧನವಾಗಿ ಅಮೇರಿಕಾ ಆರಂಭಿಸಿದ ಈ ವ್ಯಾಪಾರ ಸಮರವು ಇಡೀ ವಿಶ್ವದ ಅರ್ಥವ್ಯವಸ್ಥೆಯೇ ಬಿಕ್ಕಟ್ಟಿಗೆ ಒಳಗಾಗುವಂತೆ ಮಾಡಿದೆ, ಹೇಗೆಂದರೆ, ವಿಶ್ವದ ಬಂಡವಾಳಗಾರರಲ್ಲಿ ಕೆಲವರಿಗಾದರೂ ಹೂಡಿಕೆ ಮಾಡಲು ಇದ್ದ ಅಲ್ಪ ಸ್ವಲ್ಪ ಪ್ರೇರಣೆಯನ್ನೂ ಈ ವ್ಯಾಪಾರ ಸಮರವು ಒಳಗೊಳಗೇ ಕುಗ್ಗಿಸಿದೆ. ಆಸ್ತಿಗಳ ಬೆಲೆ ಗುಳ್ಳೆಗಳನ್ನು ಎಬ್ಬಿಸುವ ಉದ್ದೇಶದಿಂದ ಕೈಗೊಂಡ ಬಡ್ಡಿ ದರ ಇಳಿಕೆಯ ಕ್ರಮವು ಅಂದುಕೊಂಡದ್ದಕ್ಕಿಂತ ಭಿನ್ನವಾಗಿ ಪರಿಣಮಿಸಿದೆ – ವಿಶ್ವದ ಷೇರು ಮಾರುಕಟ್ಟೆಗಳು ಕುಸಿದು ಬೀಳುತ್ತಿವೆ. ಉದಾಹರಣೆಗೆ, ನ್ಯೂಯಾರ್ಕ್ನ ವಾಲ್ ಸ್ಟ್ರೀಟ್ ಷೇರು ಮಾರುಕಟ್ಟೆಯು ಆಗಸ್ಟ್ 14ರಂದು ಈ ವರ್ಷದ ಅತಿ ದೊಡ್ಡ ಕುಸಿತ ಕಂಡಿದೆ. ಅದನ್ನು ಹಿಂಬಾಲಿಸಿ ವಿಶ್ವದ ಷೇರು ಮಾರುಕಟ್ಟೆಗಳೂ ಕುಸಿದು ಬಿದ್ದಿವೆ.
ಪ್ರತಿಯೊಂದು ದೇಶದೊಳಗೂ ಸರ್ಕಾರದ ವೆಚ್ಚಗಳನ್ನು ಏರಿಸುವುದು ಸಾಧ್ಯವಾದರೆ, ನನ್ನ ನೆರೆಯವನು ಹಾಳಾಗಲಿ ಎನ್ನುವ ನೀತಿಯ ಅಗತ್ಯವಿಲ್ಲ. ಸರ್ಕಾರದ ವೆಚ್ಚಗಳಿಂದ ಉಂಟಾದ ಬೇಡಿಕೆ ಹೊರ ದೇಶಗಳಿಗೆ ಸೋರಿಕೆಯಾಗುವುದನ್ನು ತಡೆಯುವ ಉದ್ದೇಶದಿಂದ ಒಂದು ವೇಳೆ ರಕ್ಷಣಾತ್ಮಕ ಕ್ರಮಗಳನ್ನು ಅಳವಡಿಸಿಕೊಂಡರೂ ಸಹ, ಅದರಿಂದಾಗಿ ಬೇರೇ ದೇಶಗಳಿಂದ ಮಾಡಿಕೊಳ್ಳುವ ಆಮದುಗಳಲ್ಲಿ ಕಡಿತವಾಗುವುದಿಲ್ಲ, ಏಕೆಂದರೆ, ಮಾರುಕಟ್ಟೆಯು ತನ್ನಷ್ಟಕ್ಕೆ ತಾನೇ ಬೆಳೆಯುತ್ತಿರುತ್ತದೆ. ಆದರೆ. ಸರ್ಕಾರದ ವೆಚ್ಚಗಳು ಏರಿಕೆಯಾಗದ ಸಂರ್ಭದಲ್ಲಿ (ಅಂತಾರಾಷ್ಟ್ರೀಯ ಹಣಕಾಸು ಬಂಡವಾಳವು ಸರ್ಕಾರದ ವೆಚ್ಚಗಳ ಏರಿಕೆಯನ್ನು ವಿರೋಧಿಸುತ್ತದೆ; ಈ ಕಾರಣದಿಂದಾಗಿಯೇ ಬಹುತೇಕ ಎಲ್ಲಾ ದೇಶಗಳೂ ತಮ್ಮ ವಿತ್ತೀಯ ಕೊರತೆಗೆ ಮಿತಿಯನ್ನು ವಿಧಿಸುವ ಕಾನೂನು ತಂದಿವೆ), ಒಂದು ದೇಶವು ಅನುಸರಿಸಬಹುದಾದ ನೀತಿಯನ್ನು ಆಯ್ದುಕೊಳ್ಳಲು ಆ ದೇಶಕ್ಕೆ ನನ್ನ ನೆರೆಯವನು ಹಾಳಾಗಲಿ ಎನ್ನುವ ನೀತಿಯನ್ನು ಬಿಟ್ಟರೆ ಬೇರೆ ಆಯ್ಕೆಯೇ ಇಲ್ಲ ಎಂಬಂತಾಗಿದೆ. ಇದರಿಂದಾಗಿ ಎಲ್ಲ ದೇಶಗಳ ಬಿಕ್ಕಟ್ಟಿನ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ.
ನಿಖರವಾಗಿ ಹೇಳುವುದಾದರೆ, ಈ ಪರಿಸ್ಥಿತಿಯೇ ನವ ಉದಾರ ಬಂಡವಾಳಶಾಹಿಯ ವ್ಯವಸ್ಥಾಗತ ಬಿಕ್ಕಟ್ಟಿನ ಹೆಗ್ಗುರುತು. ಎಲ್ಲಿಯವರೆಗೆ ಹಣಕಾಸು ಬಂಡವಾಳದ ಯಜಮಾನಿಕೆ ಮುಂದುವರೆಯುತ್ತದೆಯೋ ಮತ್ತು ಜಾಗತಿಕ ಹಣಕಾಸಿನ ಹರಿವಿನ ಸುಳಿಗೆ ಸಿಕ್ಕಿದ ದೇಶ ದೇಶಗಳು ಆ ಸುಳಿಯಲ್ಲಿಯೇ ಉಳಿಯುತ್ತವೆಯೋ ಅಲ್ಲಿಯವರೆಗೆ ಈ ಬಿಕ್ಕಟ್ಟೂ ಮುಂದುವರೆಯುತ್ತದೆ. ಈ ಬಿಕ್ಕಟ್ಟನ್ನು ಪರಿಹರಿಸಲು ಸಾಧ್ಯವಿರುವ ಎಷ್ಟು ಪ್ರಯತ್ನಗಳನ್ನು ಮಾಡಿದರೂ ಬಿಕ್ಕಟ್ಟು ಮತ್ತಷ್ಟು ಹದಗೆಡುತ್ತದೆ. ಅಂತಾರಾಷ್ಟ್ರೀಯ ಹಣಕಾಸು ಬಂಡವಾಳದ ಯಜಮಾನಿಕೆಯಿಂದ ಹೊರ ಬರಲು, ಪ್ರತಿಯೊಂದು ದೇಶದ ಒಳಗೂ, ಒಂದು ಪರ್ಯಾಯ ಅಜೆಂಡಾದೊಂದಿಗೆ ದುಡಿಯುವ ಜನತೆಯನ್ನು ಅಣಿನೆರೆಸಬೇಕಾಗುತ್ತದೆ.
( ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
-ಪ್ರೊ. ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ.ನಾಗರಾಜ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ3 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ3 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

