Connect with us

ರಾಜಕೀಯ

ದಾದಾಸಾಹೇಬ್ ಕಾನ್ಷೀರಾಮ್ : ಕೆಲವು ವಿಚಾರಗಳು | ಅಂಬೇಡ್ಕರ್ ಜಯಂತಿಗೆ ರಜೆ ಕ್ಯಾನ್ಸಲ್ ಮಾಡಿದ್ದಕ್ಕೆ ಬಿಎಸ್‍ಪಿ ಹುಟ್ಟಿಕೊಂಡಿತು..!

Published

on

  • ಆರ್ ಹೆಚ್ ಬಿ

ಅಂಬೇಡ್ಕರ್ ಜಯಂತಿ ದಲಿತರಿಗೆ ಅದೆಷ್ಟು ಮಹತ್ವದ್ದು? ಬಹುಶಃ ಅದು ವರ್ಣಿಸಲಸದಳ. ಅದಕ್ಕೆ ರಜೆ ನೀಡದ್ದಕ್ಕೆ, ನೀಡಿದ್ದ ರಜೆಯನ್ನು ರದ್ದುಮಾಡಿದ್ದಕ್ಕೆ ಒಂದು ಬೃಹತ್ ರಾಜಕೀಯ ಪಕ್ಷವೇ ಹುಟ್ಟಿಕೊಂಡಿತೆಂದರೆ…! ಹೌದು, ಇದು ಸತ್ಯ. ಇತಿಹಾಸಕಾರರು ಗುರುತಿಸಿರುವಂತೆ 1964ರಲ್ಲಿ ಕಾನ್ಷೀರಾಮ್ ರವರು ಅಧಿಕಾರಿಯಾಗಿದ್ದ DRDO ಕಚೇರಿಯಲ್ಲಿ ಆ ವರ್ಷ ಇದ್ದಕ್ಕಿದ್ದಂತೆ ಅಂಬೇಡ್ಕರ್ ಜಯಂತಿ, ಬುದ್ಧ ಜಯಂತಿ ಮತ್ತು ವಾಲ್ಮೀಕಿ ಜಯಂತಿಗಳಿಗೆ ರಜೆ ಕ್ಯಾನ್ಸಲ್ ಮಾಡಲಾಗಿತ್ತು. ಅದರ ಬದಲು ಬೇರೆ ಹಿಂದೂ ಹಬ್ಬಗಳಿಗೆ ರಜೆ ನೀಡಲಾಗಿತ್ತು. ಇದರ ವಿರುದ್ಧ ಸಿಡಿದು ನಿಂತ ಕಾನ್ಷೀರಾಮ್‍ರವರು ‘ತಮ್ಮ ಕಚೇರಿಯಲ್ಲೇ ಅಂಬೇಡ್ಕರ್ ಜಯಂತಿ ರಜೆ ರದ್ದು ಮಾಡಿದರೆ?’ ಎಂದು ನೌಕರರ ಮುಂದಾಳತ್ವ ವಹಿಸಿ ದೊಡ್ಡ ಹೋರಾಟ ರೂಪಿಸಿದರು. ಪರಿಣಾಮ BAMCEF ನಂತಹ ಬೃಹತ್ ನೌಕರರ ಸಂಘಟನೆ, DS4 ನಂತಹ ಬೃಹತ್ ಹೋರಾಟದ ಹಾದಿ, ಬಿಎಸ್‍ಪಿಯಂತಹ ರಾಜಕೀಯ ಪಕ್ಷ ಹುಟ್ಟಿಕೊಂಡಿತು. ಈ ನಿಟ್ಟಿನಲ್ಲಿ 1964ರಲ್ಲಿ ಅಂಬೇಡ್ಕರ್ ಜಯಂತಿಗೆ ರಜೆ ರದ್ದುಗೊಳಿಸಿಲ್ಲದಿದ್ದರೆ ಕಾನ್ಷೀರಾಮ್ ರವರು ಮದುವೆಯಾಗಿ, ಡಿಆರ್‍ಡಿಒದಲ್ಲಿ ಓರ್ವ ಸಾಮಾನ್ಯ ಸಂಶೋಧಕನಾಗಿ ಸಾಮಾನ್ಯ ಜೀವನ ನಡೆಸುತ್ತ ಇದ್ದುಬಿಡುತ್ತಿದ್ದರು! ಆದರೆ ಅಂಬೇಡ್ಕರ್ ಜಯಂತಿಗೆ ರಜೆ ರದ್ದುಮಾಡಿದ್ದರಿಂದ ಕಾನ್ಷೀರಾಮ್‍ರೊಳಗೊಬ್ಬ ಹೋರಾಟಗಾರ, ಅಪ್ರತಿಮ ನಾಯಕ ಎದ್ದು ನಿಂತಿದ್ದ. So, that is the power of  Ambedkar Jayanthi and power of Kanshiram!

ಪ್ರವಾದಿ ಮಾದರಿಯ ಹುರುಪು

ಕಾನ್ಷೀರಾಮ್‍ರವರು BAMCEF ಹೆಸರಿನಲ್ಲಿ ನೌಕರರನ್ನು ಸಂಘಟಿಸಿದ್ದು ಎಲ್ಲರಿಗೂ ತಿಳಿದಿದೆ. ತಮ್ಮ ಕನಸನ್ನು ನನಸುಗೊಳಿಸಲು ಸರ್ಕಾರಿ ನೌಕರರನ್ನು ಬಳಸಿಕೊಳ್ಳಬೇಕು ಎಂಬ ಐಡಿಯಾ ಸಾಹೇಬರಿಗೆ ಬಂದದ್ದು 1973ರಲ್ಲಿ. ಆದರೆ ಅದು ಸಾಕಾರಗೊಳ್ಳಲು ಸುಮಾರು ಐದು ವರ್ಷಗಳು ಬೇಕಾಯಿತು. ಈ ಸಂದರ್ಭದಲ್ಲಿ ಸಾಹೇಬರು ನೌಕರರನ್ನು ಸಂಘಟಿಸುವ ಪರಿ ಹೇಗಿತ್ತು? ದಾದಾಸಾಹೇಬರೇ ನೆನೆಪಿಸಿಕೊಳ್ಳುವಂತೆ “ಆಗಾಗ ನಾನು ಸರ್ಕಾರಿ ಕಚೇರಿಗಳಿಗೆ ಭೇಟಿಕೊಡಲು ಹೋದಾಗ ಜನ ನನ್ನನ್ನು ನೋಡಿ ಓ! ಹುಚ್ಚ ಬಂದ ಎಂದು ಓಡಿಹೋಗುತ್ತಿದ್ದರು!” (Views and Interviews of Kanshiram by N.Manohara Prasad, Pp.126) ಆದರೆ ದಾದಾಸಾಹೇಬರ ಪ್ರವಾದಿ ಮಾದರಿಯ ಹುರುಪು ಅವರ ಅನುಯಾಯಿಗಳನ್ನು ಅವರತ್ತ ಸೆಳೆಯಲು ಪ್ರಾರಂಭಿಸಿತು!

ನೌಕರರು ಮೆದುಳಿನ ಬ್ಯಾಂಕುಗಳು!

ಕಾನ್ಷೀರಾಮ್ ರವರು ನೌಕರರಲ್ಲಿ ತಪ್ಪಿತಸ್ಥ ಭಾವನೆಯನ್ನು ತುಂಬಿದರು. ತಾನೆಲ್ಲ ಪಡೆದೆ ತಾನು ಸಮಾಜಕ್ಕೆ ಏನು ಕೊಟ್ಟೆ? ಎಂಬ ಭಾವವದು.  ನೌಕರರು ಬರೇ ಹಣಕಾಸು ನೀಡುವುದಷ್ಟೆ ಅಲ್ಲ, ಮುಖ್ಯವಾಗಿ ಕಾನ್ಷೀರಾಮ್‍ರವರು ನೌಕರರ talent(ಪ್ರತಿಭೆ)ಗಳನ್ನು ಬಳಸಿದರು. ಈ ಬಗ್ಗೆ ಸ್ವತಃ ಕಾನ್ಷೀರಾಮ್‍ರವರು ಒಂದೆಡೆ “we use them as brain banks”  ಎನ್ನುತ್ತಾರೆ. ಅಂದರೆ “ನಾನು ಅವರನ್ನು ಮೆದುಳಿನ ಬ್ಯಾಂಕ್ ಥರ ಬಳಸಿದೆ” ಎಂದರ್ಥ! ಇದಕ್ಕೆ ಅವರು ಕೊಡುವ ವಿವರಣೆ “ಅವರು (ನೌಕರರು) ದೇಶಾದ್ಯಂತ ಹರಡಿದ್ದಾರೆ. ಅವರ ಹಣಕಾಸು ಶಕ್ತಿ ಮತ್ತು ಬುಧ್ಧಿಶಕ್ತಿ ಎರಡೂ ಬೆಲೆಕಟ್ಟಲಾಗದ್ದು”. ಹೌದು, ಕಾನ್ಷೀರಾಮ್‍ರವರು ಹೇಳಿದ ಮೆದುಳಿನ ಬ್ಯಾಂಕ್; ಶೋಷಿತ ಸಮುದಾಯದ ನೌಕರರ ಬಳಿ ದುಡ್ಡಿದೆ, ಹಾಗೆ ಮೆದುಳಿನಲ್ಲಿ ಅಪಾರ ಬುದ್ಧಿಶಕ್ತಿ ಇದೆ. ಆ ಬುದ್ದಿಶಕ್ತಿಯ ಕಾರಣಕ್ಕೆ ಅವರು ಸರ್ಕಾರಿ ಕಚೇರಿಗಳಿಗೆ ನೌಕರರಾಗಿ ಬಂದಿರುವುದು. ಅಂದಹಾಗೆ ಬುದ್ಧಿಶಕ್ತಿ, ಅದು ಮಾತನಾಡುವ ಶಕ್ತಿ ಇರಬಹುದು, ಸಂಘಟನಾ ಶಕ್ತಿ ಇರಬಹುದು, ಬರೆಯುವ ಶಕ್ತಿ ಇರಬಹುದು, ಇದನ್ನೆಲ್ಲ ಸಮುದಾಯಕ್ಕೆ ವಾಪಸ್ ಕೊಡುವಂತೆ ಸಾಹೇಬರು ಹೇಳಿದರು. ಅದನ್ನೆ pay back to society ಎಂದರು.

ಶಿಕ್ಷಕನ ಕೈಕೆಳಗೆ ಐಎಎಸ್ ಅಧಿಕಾರಿಗಳು!

BAMCEF ಸಂಘಟನೆಯಲ್ಲಿದ್ದಾಗ ಅಲ್ಲಿ ನೌಕರರ ಕೇಡರ್ ಬಗ್ಗೆ ಅಂದರೆ ದರ್ಜೆಯ ಬಗ್ಗೆ ಯಾವುದೇ ತಾರತಮ್ಯವಿರಲಿಲ್ಲ. ಲಕ್ನೋದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹೇಳುವಂತೆ “ಕಾನ್ಷೀರಾಮ್ ರವರು ವಿವಿಧ ದರ್ಜೆಯ ನೌಕರರ ನಡುವೆ ಇದ್ದ ಸೇವಾ ಅಂದರೆ ನಾನು ಮೇಲ್ಮಟ್ಟದ ನೌಕರ ಅವನು ತಳಮಟ್ಟದ ನೌಕರ ಎಂಬ ಬೇಲಿಯನ್ನು ಮುರಿದರು. ಹೇಗೆಂದರೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹೇಳುವಂತೆ “BAMCEF ನ ಸ್ಥಳೀಯ ಸಂಯೋಜಕನಾದ ಓರ್ವ ಶಿಕ್ಷಕನ ಮನೆಯಲ್ಲಿ ಐಎಎಸ್ ಅಧಿಕಾರಿಗಳೂ ಸೇರಿದಂತೆ ಕಚೇರಿಯ ಹಿರಿಯ ಅಧಿಕಾರಿಗಳೆಲ್ಲ ಆತ್ಮೀಯತೆಯಿಂದ ಸಭೆ ಸೇರುತ್ತಿದ್ದೆವು”.

ಭಾಷಣ ಕೇಳಲೂ ಹಣ ಕೊಡಬೇಕು!

ಕಾನ್ಷೀರಾಮ್‍ವರಿಗೆ ಪಕ್ಷ ಕಟ್ಟಲು ಇಷ್ಟೊಂದು ದುಡ್ಡು ಎಲ್ಲಿ ಬರುತ್ತದೆ? ಎಂಬುದು ಅಂದಿನ ಪತ್ರಕರ್ತರ ಸಂದೇಹವಾಗಿತ್ತು. ಆಗ ಕೆಲವು ಪತ್ರಕರ್ತರು ಕಾನ್ಷೀರಾಮ್ ರವರು ಅಂದಿನ ಉತ್ತರಪ್ರದೇಶದ ದೊಡ್ಡ ಬಿಸಿನೆಸ್‍ಮನ್ ಹಾಜಿ ಮಸ್ತಾನ್ ಮಿರ್ಝಿಯವರ ಜೊತೆ ಸಂಪರ್ಕದಲ್ಲಿದ್ದಾರೆ. ಅವರೇ ಇವರಿಗೆ ಹಣ ಕೊಡುವುದು ಎಂದು ಗುಲ್ಲೆಬ್ಬಿಸಿದರು. (ಯಾಕೆಂದರೆ 90ರ ದಶಕದಲ್ಲೇ ಲಕ್ನೋದಲ್ಲಿ ನಡೆದ ರ್ಯಾಲಿಯೊಂದರಲ್ಲಿ ದಾದಾಸಾಹೇಬರು ಜನರನ್ನು ಕರೆತರಲು ಬರೇ ಬಸ್ಸುಗಳಿಗೆ ಖರ್ಚು ಮಾಡಿದ್ದ ಹಣವೇ 22 ಲಕ್ಷ!) ಆಗ ಈ ಹಾಜಿ ಮಸ್ತಾನ್ ಮಿರ್ಝಿಯ ಕಥೆಗೆ ಸಾಹೇಬರು ಹೇಳಿದ್ದು “ಹಾಜಿ ಮಸ್ತಾನ್ ಸಣ್ಣ ವ್ಯಾಪಾರಿ. ಆತ ನನಗೆ ಎಷ್ಟು ಅಂತ ಕೊಡಲಿಕ್ಕೆ ಸಾಧ್ಯ? ನಿಜ ಹೇಳಬೇಕೆಂದರೆ ಭಾರತದ ಯಾವುದೇ ರಾಜಕೀಯ ಪಕ್ಷವೂ ಇಷ್ಟು ಹಣ ಖರ್ಚು ಮಾಡಿಲ್ಲ. ಅಷ್ಟು ಹಣವನ್ನು ನಾನು ಖರ್ಚು ಮಾಡಿದ್ದೇನೆ”. ಹಾಗಿದ್ದರೆ ಇದಕ್ಕೆಲ್ಲ ಹಣ? ಅದಕ್ಕೆ ದಾದಾಸಾಹೇಬರು ಹೇಳುವುದು “ನನಗೆ ವಿವಿಧ ಮೂಲಗಳಿಂದ ಹಣ ಬರುತ್ತದೆ. ಅಂದಹಾಗೆ ಆ ಮೂಲಗಳು ಎಂದೂ ಬತ್ತುವುದೇ ಇಲ್ಲ. ಮುಖ್ಯವಾಗಿ ಸದಸ್ಯತ್ವ ಶುಲ್ಕ ಮತ್ತು ಕಾಲಕಾಲಕ್ಕೆ ಕಾರ್ಯಕರ್ತರು ನೀಡುವ ದೇಣಿಗೆಯಿಂದ ಹಣ ಬರುತ್ತದೆ”. ಇದಲ್ಲದೆ ತಮ್ಮ ಭಾಷಣಗಳಿಗೆ ಕಡೇ ಪಕ್ಷ 52000 ಜನ ಸೇರಲೇಬೇಕು ಎಂದು ತಾಕೀತು ಮಾಡುತ್ತಿದ್ದ ಕಾನ್ಷೀರಾಮ್‍ರವರು ಕಡ್ಡಾಯವಾಗಿ ತಲಾ ಒಬ್ಬೊಬ್ಬರಿಂದ 1 ರೂನಂತೆ 52000 ಶುಲ್ಕ ವಸೂಲಿ ಮಾಡಿಸುತ್ತಿದ್ದರು! ಇದರ ಬಗ್ಗೆ ಜೋಕ್ ಕಟ್ ಮಾಡುತ್ತಿದ್ದ ಅವರು “ಈ ಮೊತ್ತವನ್ನು ಶೀಘ್ರದಲ್ಲೇ 1 ಲಕ್ಷಕ್ಕೆ ಏರಿಸಬೇಕೆಂದಿದ್ದೇನೆ” ಎನ್ನುತ್ತಿದ್ದರು. ಅಂದರೆ ಅವರು ಏರಿಸುತ್ತಿದ್ದದ್ದು ಬರೇ ಹಣವನ್ನಷ್ಟೆ ಅಲ್ಲ, ಜನರನ್ನೂ ಕೂಡ ಎಂಬುದು ಅಲ್ಲಿ ತಿಳಿಯಬೇಕಾದ ಅಂಶ!

ದಾದಾಸಾಹೇಬರನ್ನು ಸಿಐಎ ಏಜೆಂಟ್ ಎಂದ ಅಂದಿನ ಸರ್ಕಾರ!

ಅಬ್ಬಾ, 1987ರಲ್ಲಿ ಕಾನ್ಷೀರಾಮ್‍ರವರು ಉತ್ತರಪ್ರದೇಶದ ಬಿಜ್ನೋರ್ ನಿಂದ ಲೋಕಸಭೆಗೆ ಸ್ಪರ್ಧಿಸಿದರು. ಆ ಚುನಾವಣೆಯಲ್ಲಿ ಬಿಜ್ನೋರ್ ಜಿಲ್ಲೆ ಪೂರ್ತಿ ಒಂದು ಕರಪತ್ರ ಹಂಚಲಾಗಿತ್ತು ಮತ್ತು ಆ ಕರಪತ್ರದಲ್ಲಿದ್ದದ್ದು ಏನು ಗೊತ್ತೆ? ಕಾನ್ಷೀರಾಮ್ ಸಿಐಎ ಏಜೆಂಟ್ ಎಂದು! ಸಿಐಎ(ಸೆಂಟ್ರಲ್ ಇಂಟೆಲ್ಲೆಜೆನ್ಸಿ ಆಫ್ ಅಮೆರಿಕಾ) ಅದು ಭಾರತದ ‘ರಾ’ ಮತ್ತು ಪಾಕಿಸ್ತಾನದ ಐಎಎಸ್‍ಐ ನಂತೆ ಅಮೆರಿಕಾದ ಗುಪ್ತಚರ ಇಲಾಖೆ. ಅಂದರೆ ಭಾರತವನ್ನು ದುರ್ಬಲಗೊಳಿಸಲು ಅಮೆರಿಕಾ ಕಳುಹಿಸಿರುವ ಗುಪ್ತಚರ ಇಲಾಖೆಯ ಏಜೆಂಟ್ ಕಾನ್ಷೀರಾಮ್ ಎಂದು ಆ ಕರಪತ್ರದಲ್ಲಿ ಮುದ್ರಿಸಲಾಗಿತ್ತು! ಮತ್ತು ಚುನಾವಣಾ ಆ ಸಮಯದಲ್ಲಿ ಅದನ್ನು ಹಂಚಲಾಗಿತ್ತು. ಈ ಬಗ್ಗೆ ಆಕ್ರೋಶಭರಿತರಾಗಿ ಕಾನ್ಷೀರಾಮ್‍ರವರು ಹೇಳಿದ್ದು “ನಾನು ಸಿಐಎ ಏಜೆಂಟ್ ಆಗಿದ್ದರೆ ಈ ಸರ್ಕಾರವೇಕೆ ನನ್ನ ವಿರುದ್ಧ ಕ್ರಮ ಜರುಗಿಸಿಲ್ಲ? ಇದು ತೋರಿಸುವುದೇನೆಂದರೆ ಇದು ಹಿಜಡಾಗಳ ಸರ್ಕಾರ!” ಎಂದು.

ಜಾತಿಗಳನ್ನು ಒಗ್ಗೂಡಿಸುವವರು ಜಾತಿವಾದಿಯಾಗಲು ಹೇಗೆ ಸಾಧ್ಯ?

ಒಮ್ಮೆ ಪತ್ರಕರ್ತರು ದಾದಾಸಾಹೇಬರನ್ನು ಕೇಳಿದ್ದು “ಜಾತಿವಾದಿ ಪಕ್ಷವೊಂದನ್ನು ಕಟ್ಟಿರುವ ನಿಮ್ಮಿಂದ ಜಾತಿ ನಿರ್ಮೂಲನೆ ಹೇಗೆ ಸಾಧ್ಯ?” ಎಂದು. ಅದಕ್ಕೆ ಸಾಹೇಬರು ಕೊಟ್ಟ ಉತ್ತರ “ಬಿಎಸ್‍ಪಿ ಜಾತಿವಾದಿ ಪಕ್ಷವಲ್ಲ. ನಾವು ಈ ದೇಶದ 6000 ಜಾತಿಗಳನ್ನು ಒಗ್ಗೂಡಿಸುತ್ತಿದ್ದೇವೆ ಮತ್ತು ಹೀಗಿರುವಾಗ ನಮ್ಮನ್ನು ನೀವು ಯಾವ ಅರ್ಥದಲ್ಲಿ ಜಾತಿವಾದಿ ಎನ್ನುವಿರಿ?”. ಹೌದು, ದಾದಾಸಾಹೇಬರ ಮಾತಿನಂತೆ ಈ ದೇಶದ ಎಲ್ಲ ಜಾತಿಗಳೂ ಒಗ್ಗೂಡದೆ ಭವ್ಯ ಭಾರತ ನಿರ್ಮಾಣ ಸಾಧ್ಯವಿಲ್ಲ.

ಯತಾಸ್ಥಿತಿವಾದಿ ಗಾಂಧಿ

ಒಮ್ಮೆ ಪತ್ರಕರ್ತರು ಸಾಹೇಬರಿಗೆ “ನಿಮ್ಮ ಕಾರ್ಯಕರ್ತರು ಗಾಂಧಿ ಬಗ್ಗೆ ಇಷ್ಟೊಂದು ಹಗೆತನ ಸಾಧಿಸಲು ಏನು ಕಾರಣ?” ಎಂದರು. ಅದಕ್ಕೆ ದಾದಾಸಾಹೇಬರು ಹೇಳುತ್ತಾರೆ “ಗಾಂಧಿ ಈ ದೇಶದ ಪ್ರತಿಯೊಂದರ ಮೂಲ! ನನಗೆ ಬದಲಾವಣೆ ಬೇಕು, ಡಾ.ಅಂಬೇಡ್ಕರ್‍ರವರು ಕೂಡ ಬದಲಾವಣೆ ಬಯಸಿದ್ದರು. ಆದರೆ ಗಾಂಧಿ ಯತಾಸ್ಥಿತಿವಾದದ ವಾರಸುದಾರರು. ಅವರಿಗೆ ಶೂದ್ರ ಶೂದ್ರನಾಗೇ ಉಳಿಯಬೇಕು. ಅಂದಹಾಗೆ ಗಾಂಧಿ ಈ ದೇಶವನ್ನು ಇಬ್ಬಾಗಗೊಳಿಸಲು ಏನೇನುಮಾಡಬೇಕೋ ಅದೆಲ್ಲವನ್ನೂ ಮಾಡಿದರು. ಈ ನಿಟ್ಟಿನಲ್ಲಿ ಹೇಳುವುದಾದರೆ ನಾವು ಈ ದೇಶವನ್ನು ಒಗ್ಗೂಡಿಸುವ ದಿಸೆಯಲ್ಲಿ ಕೆಲಸಮಾಡುತ್ತಿದ್ದೇವೆ ಮತ್ತು ಎಲ್ಲ ರೀತಿಯ ಮಾನವ ನಿರ್ಮಿತ ವಿಭಜನೆಗಳನ್ನು ತೊಲಗಿಸುತ್ತೇವೆ”!

ಬಹುಜನ ಸಮಾಜ ಪಕ್ಷವೇ ಯಾಕೆ?

ಈ ಪ್ರಶ್ನೆಗೆ ಕಾನ್ಷೀರಾಮ್ ರವರು ಬರೆಯುತ್ತಾರೆ “ಇಂದು ಭಾರತದಲ್ಲಿ ಏಳು ರಾಷ್ಟ್ರೀಯ ಪಕ್ಷಗಳಿವೆ. ಈ ಎಲ್ಲ ಏಳು ರಾಷ್ಟ್ರೀಯ ಪಕ್ಷಗಳು ಪ್ರಬಲ ಹಿಂದೂ ಜಾತಿಗಳ ಕೈಯಲ್ಲಿವೆ. ಆ ಪ್ರಬಲ ಜಾತಿಗಳವರು ತಮ್ಮ ಆಳ್ವಿಕೆ ಮುಂದುವರೆಸಲು ಮತ್ತು ಹಿತಾಸಕ್ತಿ ಕಾಪಾಡಿಕೊಳ್ಳಲು ಈ ಏಳೂ ಪಕ್ಷಗಳನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ. ಈ ಕಾರಣಕ್ಕೆ ದಲಿತ-ಶೋಷಿತ ಸಮಾಜ ತನ್ನ ಬಳಿ ಶೇ.85 ಮತ ಬ್ಯಾಂಕ್ ಇದ್ದರೂ ಕೂಡ ಅಸಹಾಯಕ ಪರಿಸ್ಥಿತಿಯಲ್ಲಿದೆ. ಇದಕ್ಕಾಗಿ ನನಗೆ ಅನಿಸಿದ್ದೆಂದರೆ ನಾವು ನಮ್ಮದೇ ಆದ ಸ್ವಂತ ರಾಜಕೀಯ ಪಕ್ಷ ಹೊಂದಬೇಕು” ಎಂಬುದು.

ತ್ಯಾಗಕ್ಕೆ ಮತ್ತೊಂದು ಹೆಸರೇ ಕಾನ್ಷೀರಾಮ್

ತ್ಯಾಗ; ಬಹುಶಃ ಈ ಪದ ಕಾನ್ಷೀರಾಮ್ ರವರಿಗೆ ಅನ್ವರ್ಥವಾಗುತ್ತದೆ. ಮಹಾಭಾರತದಲ್ಲಿ ಕರ್ಣ ತನ್ನ ಕಲಶ ಕುಂಡಲಿಗಳನ್ನು ಕೊಟ್ಟು ತನ್ನ ಪ್ರಾಣ ತ್ಯಾಗ ಮಾಡಿದ. ಆದರೆ ದಾದಾಸಾಹೇಬರು? ತಮ್ಮ ನೌಕರಿ, ತಮ್ಮ ಕುಟುಂಬ, ತಮ್ಮ ಬಳಿಯಿದ್ದ ನೌಕರಿಯಿಂದ ಸಂಪಾದಿಸಿದ್ದ ಆ ಹಣ ಮತ್ತು ಆ ನೌಕರಿಯಿಂದ ಮಜಾ ಮಾಡಬಹುದಾಗಿದ್ದ ಆ ಅಮೂಲ್ಯ ಸಮಯ ಎಲ್ಲವನ್ನೂ ತ್ಯಾಗಮಾಡಿದರು. ಸರ್ಕಾರಿ ನೌಕರರಾಗಲು ಎಲ್ಲರೂ ಹಪಹಪಿಸುವುದನ್ನು ನೋಡುತ್ತೇವೆ. ಅದೂ ದಾದಾಸಾಹೇಬರು ಆ ಕಾಲದಲ್ಲೇ ಬಿಎಸ್ಸಿ ಮಾಡಿ ಡಿಆರ್‍ಡಿಒದಂಥ ಉನ್ನತ ಸಂಸ್ಥೆ ಸೇರಿದ್ದರು. ನಿವೃತ್ತಿಯಾಗುವ ಹೊತ್ತಿಗೆ ಅವರು ಈ ದೇಶದ ದೊಡ್ಡ ವಿಜ್ಞಾನಿಯಾಗಿ ಲಕ್ಷ ಲಕ್ಷ ಗಳಿಸಿ ವೈಭವೋಪೇತ ಜೀವನ ನಡೆಸಬಹುದಿತ್ತು. ಆದರೆ ಶೋಷಿತ ಸಮುದಾಯಕ್ಕೋಸ್ಕರ ಅದನ್ನು ಬಿಟ್ಟದ್ದು, ಶೋಷಿತ ಬಹುಜನರ ಏಳಿಗೆಗಾಗಿ ತಾನು ಮದುವೆ ಮಾಡಿಕೊಳ್ಳುವುದಿಲ್ಲ ಎಂದು ಶಪಥಗೈದದ್ದು, ಅಂತೆಯೇ ನುಡಿದಂತೆ ನಡೆದದ್ದು, ಅಗಾಧವನ್ನು ಸಾಧಿಸಿದ್ದು, ಬಹುಶಃ ಆ ತ್ಯಾಗಕ್ಕೆ ಎಣೆಯಿಲ್ಲ. ವರ್ಣಿಸಲು ಪದಗಳಿಲ್ಲ. ತನ್ನ ಪರಿಮಳವನ್ನು ಪ್ರಪಂಚಕ್ಕೆ ನೀಡಿ ತಾನು ಬಾಡುವ ಸುಂದರ ಹೂವು ಕಾನ್ಷೀರಾಮ್‍ರವರು. ನಿಂತುಹೋಗಿದ್ದ ಅಂಬೇಡ್ಕರ್ ರಥವನ್ನು 40 ವರ್ಷಗಳ ಕಾಲ ಮುನ್ನಡೆಸಿದರು. ಮರೆತುಹೋಗಬಹುದಾಗಿದ್ದ ಜೈಭೀಮ್ ಅನ್ನು ಬಾನೆತ್ತರಕೆ ಮೊಳಗಿಸಿದರು. ಅವರು ಇಂದು ನಮ್ಮ ನಡುವೆ ಇಲ್ಲದಿರಬಹುದು (ನಿಧನ; ಅಕ್ಟೋಬರ್ 9, 2006). ಆದರೆ ಅವರ ಅಮರ ತ್ಯಾಗ ನಮ್ಮ ನಡುವೆ ಉಳಿಯುತ್ತದೆ… ನಮ್ಮನ್ನು ಸದಾ ಕಾಡುತ್ತದೆ… ಅಶ್ರುತರ್ಪಣದೊಂದಿಗೆ…
ಜೈಭೀಮ್… ಜೈಭಾರತ್… ಜೈಕಾನ್ಷೀರಾಮ್…

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

Published

on

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ.

ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending